Connect with us

ರಾಜಕೀಯ

ದೇವೇಗೌಡರ ಅರೋಪ , “ಐ ಡೋಂಟ್ ಕೇರ್” ಅಂದ್ರು ಸಿದ್ದರಾಮಯ್ಯ : ಸುದ್ದಿಗೋಷ್ಠಿಯ ಡೀಟೇಲ್ಸ್ ಇಲ್ಲಿದೆ ಓದಿ..!

Published

on

  • ಹೆಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಆರೋಪಿಸಿರುವ ಹಿನ್ನೆಲೆಯಲ್ಲಿ ‌ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಶುಕ್ರವಾರ (ಇಂದು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿದ್ದರಾಮಯ್ಯರ ಮಾತುಗಳು ಈ ಕೆಳಗಿನಂತಿವೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರು ಇತ್ತೀಚೆಗೆ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ ನನ್ನ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆ ಪ್ರತಿಕ್ರಿಯಿಸುವುದು ಬೇಡ ಎಂದು ಸುಮ್ಮನಿದ್ದೆ. ಆದರೆ ಇದು ಗಂಭೀರ ಸ್ವರೂಪದ ಆರೋಪಗಳಾಗಿರುವುದರಿಂದ ಮೌನಕ್ಕೆ ಬೇರೆ ಅರ್ಥ ಬರಬಹುದೆಂಬ ಕಾರಣಕ್ಕೆ ಕೆಲವು ವಿಷಯಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅನಿವಾರ್ಯವಾಗಿದೆ.

ವರ್ತಮಾನದಲ್ಲಿ ನಮ್ಮ ದೊಡ್ಡ ಶತ್ರು ಕೋಮುವಾದಿ ಬಿಜೆಪಿ. ಅದು ಅಧಿಕಾರದ ಸೊಕ್ಕಿನಿಂದ ಜಾತ್ಯತೀತ ಶಕ್ತಿಗಳನ್ನು ನಾಶ ಮಾಡಲು ಹೊರಟಿರುವ ಈ ಹೊತ್ತಿನಲ್ಲಿ ಜಾತ್ಯತೀತ ಶಕ್ತಿಗಳೆಲ್ಲ ಒಗ್ಗಟ್ಟಿನಿಂದ ಎದುರಿಸಬೇಕು ಎನ್ನುವುದು ನನ್ನ ನಿಲುವು ಕೂಡಾ. ಆದರೆ ಜಾತ್ಯತೀತರೆಂದು ಹೇಳಿಕೊಳ್ಳುವವರು ಪರೋಕ್ಷವಾಗಿ ಕೋಮುವಾದಿ ಶಕ್ತಿಗಳಿಗೆ ನೆರವಾಗುತ್ತಿರುವ ಪ್ರಯತ್ನ ಮಾಡುತ್ತಿರುವಾಗ ಅದನ್ನು ಕೂಡಾ ನಾವು ಖಂಡಿಸಬೇಕಾಗುತ್ತದೆ, ಅವರ ಸಂಚುಗಳನ್ನು ಬಯಲುಮಾಡಬೇಕಾಗುತ್ತದೆ.

ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾನು ಕಾರಣ ಎಂದು ದೇವೇಗೌಡರು ಆರೋಪಿಸಿದ್ದಾರೆ. ಈ ರೀತಿಯ ಆರೋಪಗಳಿಂದ ಯಾರಿಗೆ, ಯಾವ ಪಕ್ಷಕ್ಕೆ ಖುಷಿಯಾಗುತ್ತದೆ ಎನ್ನುವುದು ಸಾಮಾನ್ಯ ಮನುಷ್ಯರಿಗೂ ತಿಳಿಯುತ್ತದೆ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನ್ನ ವಿರೋಧಿಗಳನ್ನು ಹತ್ತಿಕ್ಕಲು ಮಾಡುತ್ತಿರುವ ಪ್ರಯತ್ನಗಳನ್ನು ಕಂಡು ದೇವೇಗೌಡರು ಹೆದರಿರುವಂತೆ ಕಾಣಿಸುತ್ತಿದೆ. ಇದಕ್ಕಾಗಿ ಅವರನ್ನು ಖುಷಿಪಡಿಸಲು ನನ್ನ ಮೇಲೆ ಈ ರೀತಿಯ ಆಧಾರರಹಿತ ಆರೋಪ ಮಾಡಿದ್ದಾರೆ ಎನ್ನುವುದು ಸ್ಪಷ್ಷವಾಗುತ್ತದೆ.

ಕಳೆದ ಐದು ವರ್ಷಗಳಲ್ಲಿ ಬಿಜೆಪಿ ತನ್ನ ನಿಯಂತ್ರಣದಲ್ಲಿರುವ ಸಿಬಿಐ,ಇಡಿ ಮತ್ತು ಐಟಿ ಇಲಾಖೆಗಳನ್ನು ಛೂಬಿಟ್ಟು ವಿರೋಧ ಪಕ್ಷಗಳ ನಾಯಕರನ್ನು ಬೆದರಿಸುವ ಪ್ರಯತ್ನ ಮಾಡುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇತ್ತೀಚೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲದ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುವ ನಿರ್ಧಾರ ಪ್ರಕಟಿಸಿದ ಕೂಡಲೇ ಗೌಡರು ಯಾಕೋ ಚಿಂತಾಕ್ರಾಂತರಾದಂತೆ ಕಾಣಿಸುತ್ತಿದೆ. ಯಡಿಯೂರಪ್ಪನವರು ದೆಹಲಿಗೆ ಹೋಗಿ ಬಂದಮರುದಿನವೇ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುತ್ತಿದ್ದೇವೆ ಎಂದು ಪ್ರಕಟಿಸಿದ ನಂತರವೂ, ಗೌಡರಿಗೆ ಮಾತ್ರ ಈ ನಿರ್ಧಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೈವಾಡ ಕಾಣಿಸುತ್ತಿಲ್ಲವಂತೆ. ಗೌಡರು ಯಾರನ್ನು ಖುಷಿಪಡಿಸಲು ಈ ರೀತಿ ಅಮಾಯಕರಂತೆ ಮಾತನಾಡುತ್ತಿದ್ದಾರೆ?

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿ ನಾನು ವಿರೋಧಪಕ್ಷ ನಾಯಕರಾಗುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರವನ್ನು ನಾನು ಉರುಳಿಸಿದೆ ಎಂದು ಗೌಡರು ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಲು ಒಂದು ಸರ್ಕಾರವನ್ನು ಉರುಳಿಸುವುದನ್ನು ನಾವು-ನೀವೆಲ್ಲ ಕೇಳಿದ್ದೇವೆ. ಆದರೆ ವಿರೋಧ ಪಕ್ಷದ ನಾಯಕನಾಗಲು ಸರ್ಕಾರವನ್ನು ಉರುಳಿಸುವುದನ್ನು ನಾನೆಂದೂ ಕೇಳಿಲ್ಲ. ಇಂತಹದ್ದೊಂದು ಕಲ್ಪನಾ ವಿಲಾಸದಲ್ಲಿ ತೇಲಾಡುವಂತೆ ಮಾಡಲು ದೇವೇಗೌಡರಿಂದ ಮಾತ್ರ ಸಾಧ್ಯ. ಗೌಡರ ಎಲ್ಲ ಆರೋಪಗಳಿಗೆ ಉತ್ತರಿಸಲು ನಾನು ಹೋಗುವುದಿಲ್ಲ. ಆದರೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುವುದು ನನ್ನ ಉದ್ದೇಶವಾಗಿತ್ತು ಎಂಬ ಕಪೋಲಕಲ್ಪಿತ, ನಿರಾಧಾರವಾದ ಆರೋಪದ ಬಗ್ಗೆ ಪ್ರತಿಕ್ರಿಯಿಸಲೇಬೇಕಾಗಿದೆ.

ಸಮ್ಮಿಶ್ರ ಸರ್ಕಾರದ ಪತನಕ್ಕೆ ಎಚ್.ಡಿ.ದೇವೇಗೌಡರು ಮತ್ತು ಅವರ ಆದೇಶದಂತೆಯೇ ಕೆಲಸ ಮಾಡುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಾರಣ. ಜೆಡಿಎಸ್ ಜೊತೆ ಮೈತ್ರಿಗೆ ನನ್ನ ಸಹಮತ ಇರಲಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. ಯಾಕೆಂದರೆ ದೇವೇಗೌಡರ ರಾಜಕೀಯದ ಆಟಗಳನ್ನೆಲ್ಲ ನೋಡಿ ಅನುಭವಿಸಿದವನು ನಾನು. ನನ್ನಂತೆಯೇ ಬಹುತೇಕ ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಜೊತೆ ಮೈತ್ರಿ ಅಷ್ಟೊಂದು ಇಷ್ಟ ಇರಲಿಲ್ಲ. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ಶಿರಬಾಗಿ ನಾವು ಒಪ್ಪಿಕೊಂಡೆವು. ಕುಮಾರಸ್ವಾಮಿ ಸರ್ಕಾರಕ್ಕೆ ಸಂಪೂರ್ಣ ಸಹಕಾರವನ್ನೂ ನೀಡಿದೆವು. ಸರ್ಕಾರಕ್ಕೆ ಯಾವುದಾದರೂ ರೀತಿಯ ಕಿರುಕುಳ ನೀಡಿದ್ದಕ್ಕೆ ಒಂದೇ ಒಂದು ಉದಾಹರಣೆ ಅವರು ಕೊಡಲಿ. ಆದರೆ ಕುಮಾರಸ್ವಾಮಿಯವರು ನಮ್ಮೆಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಸಮನ್ವಯ ಸಮಿತಿಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೂಡಾ ಕುಮಾರಸ್ವಾಮಿ ಜಾರಿ ಮಾಡಲಿಲ್ಲ. ಮೈತ್ರಿ ಧರ್ಮಕ್ಕೆ ಕಟ್ಟುಬಿದ್ದು ನಾವು ಬಹಿರಂಗವಾಗಿ ಪ್ರತಿಕ್ರಿಯಿಸಲು ಹೋಗಲಿಲ್ಲ. ನಮ್ಮದೇ ಪಕ್ಷದಲ್ಲಿದ್ದ ಎಚ್.ವಿಶ್ವನಾಥ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಅವರ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಸಿದರು. ಈಗ ಅದೇ ವಿಶ್ವನಾಥ್ ಅಪ್ಪ ಮತ್ತು ಮಕ್ಕಳ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ.

ಇವತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಅದಕ್ಕೆ ದೇವೇಗೌಡ ಮತ್ತು ಅವರ ಮಗ ಕುಮಾರಸ್ವಾಮಿಯವರು ಕೂಡಿ ಮಾಡಿದ್ದ ಕಪಟನಾಟಕವೇ ಮೂಲ ಕಾರಣ. ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ದ್ರೋಹ ಬಗೆದು ರಾತೋರಾತ್ರಿ ಜೆಡಿಎಸ್ ಶಾಸಕರ ಜೊತೆಗೂಡಿ ಹೋಗಿ ಬಿಜೆಪಿಗೆ ಶರಣಾದರಲ್ಲಾ, ಅದೇ ದಿನ ರಾಜ್ಯದಲ್ಲಿ ಬಿಜೆಪಿ ಒಂದು ಕಾಲು ಊರಿತ್ತು. ಆಗಲೂ ದೇವೇಗೌಡರು ತಮ್ಮ ಮಗನ ನಡವಳಿಕೆಯನ್ನು ದೂರಲಿಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿದ್ದರು. ಆಗಲೂ ಮಾಧ್ಯಮದವರ ಮುಂದೆ ಬಂದು ಮಗ ನನ್ನ ಮಾತು ಕೇಳಲಿಲ್ಲ ಎಂದು ಬಹಿರಂಗವಾಗಿ ಕಣ್ಣೀರು ಹಾಕಿದ್ದರು. ಒಳಗಿಂದೊಳಗೆ ಕುಮಾರಸ್ವಾಮಿಯವರಿಗೆ ಎಲ್ಲ ರೀತಿಯ ಬೆಂಬಲ ನೀಡಿದ್ದರು.

ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆಯುವುದು ದೇವೇಗೌಡ ಮತ್ತು ಕುಮಾರಸ್ವಾಮಿಯವರ ಹುಟ್ಟುಗುಣ. ರಾಮಕೃಷ್ಣ ಹೆಗಡೆಯವರನ್ನು ಹಣಿಯಲು ಯತ್ನಿಸಿದವರು ಯಾರು? ತಾನೇ ಮುಖ್ಯಮಂತ್ರಿ ಮಾಡಿದ ಜೆ.ಎಚ್.ಪಟೇಲ್ ಅವರಿಗೆ ಕಿರುಕುಳ ಕೊಟ್ಟವರು ಯಾರು? ಎಸ್.ಆರ್.ಬೊಮ್ಮಾಯಿ ಸರ್ಕಾರವನ್ನು ಉರುಳಿಸಿದವರು ಯಾರು? 20-20 ತಿಂಗಳ ಅಧಿಕಾರ ಹಂಚಿಕೆಯ ಒಪ್ಪಂದ ಮಾಡಿಕೊಂಡ ಎಚ್ .ಡಿ. ಕುಮಾರಸ್ವಾಮಿ, ತನ್ನ ಅಧಿಕಾರವಧಿ ಮುಗಿದ ನಂತರ ವಚನ ಪಾಲನೆ ಮಾಡದೆ ದ್ರೋಹ ಬಗೆದರು. ಆಗ ಮಗನನ್ನು ವಚನಭ್ರಷ್ಟರಾಗಿ ಮಾಡಿದವರು ಇದೇ ದೇವೇಗೌಡರು. ಆ ವಚನಭ್ರಷ್ಟತೆಯ ಒಂದೇ ಕಾರಣಕ್ಕಾಗಿ ಸಿಡಿದೆದ್ದ ರಾಜ್ಯದ ಜನ ಯಡಿಯೂರಪ್ಪನವರನ್ನು ಬೆಂಬಲಿಸಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದರು. ರಾಜ್ಯದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಮತ್ತು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಕಾರಣಕರ್ತರಾದ ದೇವೇಗೌಡರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ನರೇಂದ್ರಮೋದಿಯವರು ಮತ್ತೆ ಪ್ರಧಾನಿಯಾಗಿದ್ದಾರೆ, ಕೋಮುವಾದಿ ಪಕ್ಷ ಮತ್ತೆ ಅಧಿಕಾರ ಹಿಡಿದಿದೆ ಎನ್ನುವುದಕ್ಕೆ ದೇವೇಗೌಡರಿಗೆ ಬೇಸರ ಇಲ್ಲ. ಅವರ ಚಿಂತೆ ತಮ್ಮ ಮತ್ತು ತಮ್ಮ ಮೊಮ್ಮಗನ ಸೋಲು ಮಾತ್ರ. ಸೋತಿರುವುದು ದೇವೇಗೌಡ ಮತ್ತು ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ. ರಾಜ್ಯದ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಸೋತಿದ್ದಾರೆ. ಆ ಎಲ್ಲ ಅಭ್ಯರ್ಥಿಗಳ ಸೋಲು ಗೌಡರನ್ನು ಕಾಡುವುದಿಲ್ಲ. ಜೆಡಿಎಸ್ ಪಕ್ಷದ ಮತದಾರರಿರುವ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಯಾರು ಕಾರಣ? ಅಲ್ಲಿನ ಜೆಡಿಎಸ್ ಮತದಾರರೆಲ್ಲ ಈ ಬಾರಿ ಯಾರಿಗೆ ಮತ ಹಾಕಿದ್ದಾರೆ? ಅವರೆಲ್ಲ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಹೇಳಿದವರು ಯಾರು? ಈ ಪ್ರಶ್ನೆಗಳಿಗೂ ಗೌಡರು ಉತ್ತರ ನೀಡಬೇಕಲ್ಲಾ?

ಮೊದಲ ಒಪ್ಪಂದದ ಪ್ರಕಾರ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸಬೇಕಿತ್ತು. ಯಾಕೆ ಅಲ್ಲಿಂದ ಹೋಗಿ ತುಮಕೂರಿನಲ್ಲಿ ಸ್ಪರ್ಧಿಸಿದರು? ತಮ್ಮ ಪಕ್ಷಕ್ಕೆ ಎಂಟು ಕ್ಷೇತ್ರಗಳು ಬೇಕೇಬೇಕು ಎಂದು ಹಠ ಹಿಡಿದಿದ್ದು ತಾವು ಗೆಲ್ಲಲ್ಲಿಕ್ಕೋ? ಇಲ್ಲವೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿಕ್ಕೋ? ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ನೆಟ್ಟಗೆ ಪಕ್ಷದ ಕಚೇರಿ ಇಲ್ಲ, ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಪಕ್ಷಾಂತರ ಮಾಡಿಸಿ ಟಿಕೆಟ್ ಕೊಟ್ಟದ್ದು ತಮ್ಮ ಪಕ್ಷ ಗೆಲ್ಲಲ್ಲಿಕ್ಕೋ? ಇಲ್ಲವೇ ಶೋಭಾ ಕರಂದ್ಲಾಜೆಯವರನ್ನು ಗೆಲ್ಲಿಸಲಿಕ್ಕೋ? ಕಾರವಾರ, ವಿಜಯಪುರ ಕ್ಷೇತ್ರಗಳಲ್ಲಿ ತಮ್ಮ ಪಕ್ಷಕ್ಕೆ ಯಾವುದೇ ನೆಲೆ ಇಲ್ಲದೆ ಇದ್ದರೂ ದುರ್ಬಲ ಅಭ್ಯರ್ಥಿಗಳನ್ನು ಹಾಕಿ ಬಿಜೆಪಿ ಗೆಲುವಿಗೆ ದಾರಿ ಮಾಡಿಕೊಟ್ಟಿದ್ದು ಯಾರು?
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆಂದು ತಮ್ಮ ಆತ್ಮ ಮುಟ್ಟಿಕೊಂಡು ಹೇಳಲಿ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿಲ್ಲ ಎಂದು ಜಿ.ಟಿ.ದೇವೇಗೌಡರು ಬಹಿರಂಗವಾಗಿ ಹೇಳಿದ್ದಾರಲ್ಲಾ? ದೇವೇಗೌಡರು ಯಾರ ವಿರುದ್ಧ ಕ್ರಮ ಕೈಗೊಂಡಿದ್ದಾರೆ?

ನಾನು ಜೆಡಿಎಸ್ ಪಕ್ಷದಲ್ಲಿದ್ದವನು, ದೇವೇಗೌಡರ ರಾಜಕೀಯವನ್ನು ಹತ್ತಿರದಿಂದ ನೋಡಿದವನು. ಅವರ ನಡೆ-ನುಡಿಗಳನ್ನು, ಸಂಚು-ಹುನ್ನಾರಗಳನ್ನು ನನಗಿಂತ ಚೆನ್ನಾಗಿ ಉಳಿದವರು ಅರ್ಥಮಾಡಿಕೊಳ್ಳಲಾರರು. ಲೋಕಸಭಾ ಚುನಾವಣೆಯಲ್ಲಿ ಹೀಗೆಯೇ ಆಗುತ್ತೆ ಎಂದು ನನಗೆ ಗೊತ್ತಿತ್ತು. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬೇಕಾಯಿತು. ಈ ಫಲಿತಾಂಶದ ನಿರೀಕ್ಷೆ ಇತ್ತು.

ಕಳೆದ ವಿಧಾನಸಭಾ ಚುನಾವಣೆಯ ಕಾಲದಲ್ಲಿ ನಾನು ಜೆಡಿಎಸ್ ವಿರುದ್ಧ ದೇವೇಗೌಡರ ವಿರುದ್ಧ ಮಾತನಾಡಿದ್ದೇನೆ, ರಾಹುಲ್ ಗಾಂಧಿಯವರಿಂದಲೂ ಮಾತನಾಡಿಸಿದ್ದೇನೆ ಎಂದು ದೇವೇಗೌಡರು ಆರೋಪ ಮಾಡಿದ್ದಾರೆ. ಆ ಚುನಾವಣೆಯಲ್ಲಿ ದೇವೇಗೌಡರು, ಕುಮಾರಸ್ವಾಮಿಯವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆಯೇ? ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಎದುರಾಳಿಯೇ ಜೆಡಿಎಸ್. ಚುನಾವಣಾ ಪ್ರಚಾರದ ಕಾಲದಲ್ಲಿ ಜೆಡಿಎಸ್ ವಿರುದ್ದ ಮಾತನಾಡದೆ ಮತ್ತೆ ಯಾರ ವಿರುದ್ಧ ಮಾತನಾಡಬೇಕು?

ನಾನು ಒಕ್ಕಲಿಗ ವಿರೋಧಿ ಎಂಬಂತೆ ದೇವೇಗೌಡರು ಮತ್ತು ಅವರ ಕುಟುಂಬ ಅಪಪ್ರಚಾರ ಮಾಡುತ್ತಾ ಬಂದಿದೆ. ನಾನು ಒಕ್ಕಲಿಗ ಸಮುದಾಯದ ವಿರೋಧಿ ಅಲ್ಲ. ಜೆಡಿಎಸ್ ನಲ್ಲಿ ಒಕ್ಕಲಿಗ ನಾಯಕರ ಜೊತೆಯಲ್ಲಿಯೇ ರಾಜಕೀಯ ಮಾಡುತ್ತಾ ಬಂದವನು. ಈಗಲೂ ನನ್ನ ಬಹಳಷ್ಟು ಸ್ನೇಹಿತರು ಒಕ್ಕಲಿಗ ಸಮುದಾಯವರೇ ಆಗಿದ್ದಾರೆ. ದೇವೇಗೌಡರು ನನ್ನನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದ ನಂತರ ಆ ಪಕ್ಷವನ್ನು ವಿರೋಧಿಸುತ್ತಾ ಬಂದಿದ್ದೇನೆ. ಜೆಡಿಎಸ್ ಎನ್ನುವುದು ಒಕ್ಕಲಿಗರ ಪಕ್ಷವೇ? ಜೆಡಿಎಸ್ ವಿರೋಧಿಸಿದರೆ, ದೇವೇಗೌಡರನ್ನು ವಿರೋಧಿಸಿದರೆ ನಾನು ಹೇಗೆ ಒಕ್ಕಲಿಗ ವಿರೋಧಿಯಾಗುತ್ತೇನೆ?
ತಮ್ಮ ವಿರೋಧಿಗಳನ್ನು ಒಕ್ಕಲಿಗ ವಿರೋಧಿ ಎಂದು ಸುಳ್ಳು ಆರೋಪ ಮಾಡುವ ದೇವೇಗೌಡರು ತಮ್ಮ ಮಕ್ಕಳನ್ನು ಹೊರತುಪಡಿಸಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ? ದೇವೇಗೌಡರು ರಾಜಕೀಯವಾಗಿ ನಾಶಮಾಡಿದವರ ಪಟ್ಟಿಯಲ್ಲಿ ಶೇಕಡಾ 90ರಷ್ಟು ಮಂದಿ ಒಕ್ಕಲಿಗರೇ ಆಗಿದ್ದಾರೆ. ಇದಕ್ಕೆಲ್ಲ ಗೌಡರು ಉತ್ತರ ಕೊಡುವುದಿಲ್ಲ. ಹೆಚ್ಚಿನ ಮಾಹಿತಿಬೇಕಾದರೆ ಈಗ ಬಿಜೆಪಿಯಲ್ಲಿರುವ ಬಚ್ಚೇಗೌಡರನ್ನು ಕೇಳಿ, ಅವರು ವಿವರವಾಗಿ ಹೇಳ್ತಾರೆ.
ಒಕ್ಕಲಿಗರಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಿದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಕೆಂಗಲ್ ಹನುಮಂತಯ್ಯ, ಎಸ್.ಎಂ.ಕೃಷ್ಣ ಅವರಿಂದ ಹಿಡಿದು ಈಗಿನ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡರ ವರೆಗೆ ಒಕ್ಕಲಿಗ ನಾಯಕರಿಗೆ ಅವಕಾಶ ನೀಡಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ. ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ?

1996ರಲ್ಲಿ, 2004ರಲ್ಲಿ ಏನಾಯಿತು ಎನ್ನುವುದನ್ನು ಹಿಂದೆ ಬಹಳಷ್ಟು ಬಾರಿ ಹೇಳಿದ್ದೇನೆ. ನಾನು ಮುಖ್ಯಮಂತ್ರಿಯಾಗದಂತೆ ಮಾಡಲು ದೇವೇಗೌಡರು ಮತ್ತು ಕುಮಾರ ಸ್ವಾಮಿಯವರು ಏನೆಲ್ಲಾ ಮಾಡಿದರು ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ. ವಿಧಾನಸಭೆಯಲ್ಲಿಯೇ ಈ ಬಗ್ಗೆ ಮಾತನಾಡಿದ್ದೇನೆ, ಕುಮಾರಸ್ವಾಮಿವಯರೇ ಇದನ್ನೆಲ್ಲ ಒಪ್ಪಿಕೊಂಡಿದ್ದಾರೆ. ಇದು ವಿಧಾನಸಭೆಯ ದಾಖಲೆಯಲ್ಲಿಯೇ ಇದೆ. ಈಗ ದೇವೇಗೌಡರು ಇದ್ದಕ್ಕಿದ್ದ ಹಾಗೆ ನನ್ನ ಮೇಲೆ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಲು ಕಾರಣಗಳೇನು ಎನ್ನುವುದು ತಿಳಿಯದಷ್ಟು ನಾನು ದಡ್ಡನಲ್ಲ. ಇದರ ಹಿಂದೆ ಗೌಡರ ಜೊತೆ ಯಾರೆಲ್ಲ ಷಾಮೀಲಾಗಿದ್ದಾರೆ ಎನ್ನುವುದು ತಿಳಿದಿದೆ. ಅದಕ್ಕೆಲ್ಲ ಮುಂದೆ ಉತ್ತರ ಕೊಡ್ತೇನೆ.

ನಾನೇನಾದರೂ ವಿರೋಧಪಕ್ಷದ ನಾಯಕನಾಗಿಬಿಟ್ಟರೆ ಹೇಗೆ ಎಂಬ ಚಿಂತೆ ಕಾಡುತ್ತಿರುವ ಕಾರಣಕ್ಕಾಗಿಯೇ ದೇವೇಗೌಡರು ಈಗ ಹೊಸ ನಾಟಕ ಶುರು ಮಾಡಿದ್ದಾರೆ. ಈ ಹೊಸ ನಾಟಕದ ಮೂಲ ಉದ್ದೇಶವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಾಶಮಾಡಿ, ಆ ಸ್ಥಾನದಲ್ಲಿ ತಮ್ಮ ಪಕ್ಷವನ್ನು ಬೆಳೆಸುವುದು. ಇದೆಲ್ಲ ದೇವೇಗೌಡರಿಗೆ ಹೊಸದೇನಲ್ಲ. ಪ್ರಧಾನಿ ಮಾಡಲು ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆದವರು ದೇವೇಗೌಡರು. ಆಗಿನ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರ ವಿರುದ್ಧದ ಹಳೆಪ್ರಕರಣವನ್ನು ಹುಡುಕಿ ಅವರನ್ನೇ ಜೈಲಿಗೆ ಕಳುಹಿಸುವ ಸಂಚು ಮಾಡಿದವರು ದೇವೇಗೌಡರು. ಆದ್ದರಿಂದ ನಂಬಿದವರಿಗೆ ಕೈಕೊಡುವುದು, ವಿರೋಧಿಗಳ ಮೇಲೆ ಸುಳ್ಳು ಆರೋಪ ಮಾಡುವುದು, ರಾಜಕೀಯ ಲಾಭಕ್ಕಾಗಿ, ಅನುಕಂಪ ಗಿಟ್ಟಿಸಿಕೊಳ್ಳಲು ಅಳುವುದು, ಕೊರಗುವುದು ಇವೆಲ್ಲ ದೇವೇಗೌಡರ ಹಳೆ ಗಿಮಿಕ್ ಗಳು. ಇದನ್ನೆಲ್ಲ ರಾಜ್ಯದ ಜನ ನೋಡುತ್ತಾ ಬಂದಿದ್ದಾರೆ.

ಹಿಂದೆ – ಮುಂದೆ ರಾಜಕೀಯ ಮಾಡುವ ಅಭ್ಯಾಸ ನನಗಿಲ್ಲ. ನೇರ ರಾಜಕಾರಣ ಮಾಡುತ್ತೇನೆ. ತಾತ, ಮೊಮ್ಮಕ್ಕಳು ಸೇರಿ ಇಡೀ ಕುಟುಂಬವೇ ಚುನಾವಣೆಗೆ ನಿಂತಿದ್ದರಿಂದ ಅವರು ಸೋತಿದ್ದು. ಈಗ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಿದ್ದಾರೆ. ಲಿಂಗಾಯತ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಹೀಗೆ ನನ್ನನ್ನು ತಪ್ಪಾಗಿ ಬಿಂಬಿಸಿದ್ದೆ ಹೆಚ್ಚು. 5 ವರ್ಷದ ನನ್ನ ಕಾರ್ಯಕ್ರಮ ಎಲ್ಲ ಜಾತಿ, ಧರ್ಮಗಳನ್ನು ಮೀರಿ ವಿಸ್ತರಿಸಿದೆ. ನನಗೆ ಸರ್ಟಿಫಿಕೇಟ್ ಕೊಡುವುದು ಜನರೇ ಹೊರತು, ದೇವೇಗೌಡರಲ್ಲ.
ಬಿಜೆಪಿಯನ್ನು ಮೆಚ್ಚಿಸಲು ದೇವೇಗೌಡರು ನನ್ನ ಮೇಲೆ ಸುಳ್ಳು ಆರೋಪ ಮಾಡಿರಬಹುದು.

ಐ ಡೋಂಟ್ ಕೇರ್!!

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇತರ ಉದ್ಘಾಟನೆಗಳು

ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

Published

on

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್‍ಗಾರ್ಡ್‍ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್‍ಗಳನ್ನು ಒದಗಿಸಲಾಗುವುದು.

ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending