ರಾಜಕೀಯ
ದೇವೇಗೌಡರ ಅರೋಪ , “ಐ ಡೋಂಟ್ ಕೇರ್” ಅಂದ್ರು ಸಿದ್ದರಾಮಯ್ಯ : ಸುದ್ದಿಗೋಷ್ಠಿಯ ಡೀಟೇಲ್ಸ್ ಇಲ್ಲಿದೆ ಓದಿ..!
- ಹೆಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಆರೋಪಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಇಂದು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿದ್ದರಾಮಯ್ಯರ ಮಾತುಗಳು ಈ ಕೆಳಗಿನಂತಿವೆ.
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರು ಇತ್ತೀಚೆಗೆ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ ನನ್ನ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆ ಪ್ರತಿಕ್ರಿಯಿಸುವುದು ಬೇಡ ಎಂದು ಸುಮ್ಮನಿದ್ದೆ. ಆದರೆ ಇದು ಗಂಭೀರ ಸ್ವರೂಪದ ಆರೋಪಗಳಾಗಿರುವುದರಿಂದ ಮೌನಕ್ಕೆ ಬೇರೆ ಅರ್ಥ ಬರಬಹುದೆಂಬ ಕಾರಣಕ್ಕೆ ಕೆಲವು ವಿಷಯಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅನಿವಾರ್ಯವಾಗಿದೆ.
ವರ್ತಮಾನದಲ್ಲಿ ನಮ್ಮ ದೊಡ್ಡ ಶತ್ರು ಕೋಮುವಾದಿ ಬಿಜೆಪಿ. ಅದು ಅಧಿಕಾರದ ಸೊಕ್ಕಿನಿಂದ ಜಾತ್ಯತೀತ ಶಕ್ತಿಗಳನ್ನು ನಾಶ ಮಾಡಲು ಹೊರಟಿರುವ ಈ ಹೊತ್ತಿನಲ್ಲಿ ಜಾತ್ಯತೀತ ಶಕ್ತಿಗಳೆಲ್ಲ ಒಗ್ಗಟ್ಟಿನಿಂದ ಎದುರಿಸಬೇಕು ಎನ್ನುವುದು ನನ್ನ ನಿಲುವು ಕೂಡಾ. ಆದರೆ ಜಾತ್ಯತೀತರೆಂದು ಹೇಳಿಕೊಳ್ಳುವವರು ಪರೋಕ್ಷವಾಗಿ ಕೋಮುವಾದಿ ಶಕ್ತಿಗಳಿಗೆ ನೆರವಾಗುತ್ತಿರುವ ಪ್ರಯತ್ನ ಮಾಡುತ್ತಿರುವಾಗ ಅದನ್ನು ಕೂಡಾ ನಾವು ಖಂಡಿಸಬೇಕಾಗುತ್ತದೆ, ಅವರ ಸಂಚುಗಳನ್ನು ಬಯಲುಮಾಡಬೇಕಾಗುತ್ತದೆ.
ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾನು ಕಾರಣ ಎಂದು ದೇವೇಗೌಡರು ಆರೋಪಿಸಿದ್ದಾರೆ. ಈ ರೀತಿಯ ಆರೋಪಗಳಿಂದ ಯಾರಿಗೆ, ಯಾವ ಪಕ್ಷಕ್ಕೆ ಖುಷಿಯಾಗುತ್ತದೆ ಎನ್ನುವುದು ಸಾಮಾನ್ಯ ಮನುಷ್ಯರಿಗೂ ತಿಳಿಯುತ್ತದೆ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನ್ನ ವಿರೋಧಿಗಳನ್ನು ಹತ್ತಿಕ್ಕಲು ಮಾಡುತ್ತಿರುವ ಪ್ರಯತ್ನಗಳನ್ನು ಕಂಡು ದೇವೇಗೌಡರು ಹೆದರಿರುವಂತೆ ಕಾಣಿಸುತ್ತಿದೆ. ಇದಕ್ಕಾಗಿ ಅವರನ್ನು ಖುಷಿಪಡಿಸಲು ನನ್ನ ಮೇಲೆ ಈ ರೀತಿಯ ಆಧಾರರಹಿತ ಆರೋಪ ಮಾಡಿದ್ದಾರೆ ಎನ್ನುವುದು ಸ್ಪಷ್ಷವಾಗುತ್ತದೆ.
ಕಳೆದ ಐದು ವರ್ಷಗಳಲ್ಲಿ ಬಿಜೆಪಿ ತನ್ನ ನಿಯಂತ್ರಣದಲ್ಲಿರುವ ಸಿಬಿಐ,ಇಡಿ ಮತ್ತು ಐಟಿ ಇಲಾಖೆಗಳನ್ನು ಛೂಬಿಟ್ಟು ವಿರೋಧ ಪಕ್ಷಗಳ ನಾಯಕರನ್ನು ಬೆದರಿಸುವ ಪ್ರಯತ್ನ ಮಾಡುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇತ್ತೀಚೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲದ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುವ ನಿರ್ಧಾರ ಪ್ರಕಟಿಸಿದ ಕೂಡಲೇ ಗೌಡರು ಯಾಕೋ ಚಿಂತಾಕ್ರಾಂತರಾದಂತೆ ಕಾಣಿಸುತ್ತಿದೆ. ಯಡಿಯೂರಪ್ಪನವರು ದೆಹಲಿಗೆ ಹೋಗಿ ಬಂದಮರುದಿನವೇ ಪೋನ್ ಕದ್ದಾಲಿಕೆಯನ್ನು ಸಿಬಿಐಗೆ ಒಪ್ಪಿಸುತ್ತಿದ್ದೇವೆ ಎಂದು ಪ್ರಕಟಿಸಿದ ನಂತರವೂ, ಗೌಡರಿಗೆ ಮಾತ್ರ ಈ ನಿರ್ಧಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕೈವಾಡ ಕಾಣಿಸುತ್ತಿಲ್ಲವಂತೆ. ಗೌಡರು ಯಾರನ್ನು ಖುಷಿಪಡಿಸಲು ಈ ರೀತಿ ಅಮಾಯಕರಂತೆ ಮಾತನಾಡುತ್ತಿದ್ದಾರೆ?
ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿ ನಾನು ವಿರೋಧಪಕ್ಷ ನಾಯಕರಾಗುವ ಉದ್ದೇಶದಿಂದ ಸಮ್ಮಿಶ್ರ ಸರ್ಕಾರವನ್ನು ನಾನು ಉರುಳಿಸಿದೆ ಎಂದು ಗೌಡರು ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಲು ಒಂದು ಸರ್ಕಾರವನ್ನು ಉರುಳಿಸುವುದನ್ನು ನಾವು-ನೀವೆಲ್ಲ ಕೇಳಿದ್ದೇವೆ. ಆದರೆ ವಿರೋಧ ಪಕ್ಷದ ನಾಯಕನಾಗಲು ಸರ್ಕಾರವನ್ನು ಉರುಳಿಸುವುದನ್ನು ನಾನೆಂದೂ ಕೇಳಿಲ್ಲ. ಇಂತಹದ್ದೊಂದು ಕಲ್ಪನಾ ವಿಲಾಸದಲ್ಲಿ ತೇಲಾಡುವಂತೆ ಮಾಡಲು ದೇವೇಗೌಡರಿಂದ ಮಾತ್ರ ಸಾಧ್ಯ. ಗೌಡರ ಎಲ್ಲ ಆರೋಪಗಳಿಗೆ ಉತ್ತರಿಸಲು ನಾನು ಹೋಗುವುದಿಲ್ಲ. ಆದರೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡುವುದು ನನ್ನ ಉದ್ದೇಶವಾಗಿತ್ತು ಎಂಬ ಕಪೋಲಕಲ್ಪಿತ, ನಿರಾಧಾರವಾದ ಆರೋಪದ ಬಗ್ಗೆ ಪ್ರತಿಕ್ರಿಯಿಸಲೇಬೇಕಾಗಿದೆ.
ಸಮ್ಮಿಶ್ರ ಸರ್ಕಾರದ ಪತನಕ್ಕೆ ಎಚ್.ಡಿ.ದೇವೇಗೌಡರು ಮತ್ತು ಅವರ ಆದೇಶದಂತೆಯೇ ಕೆಲಸ ಮಾಡುತ್ತಿದ್ದ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಕಾರಣ. ಜೆಡಿಎಸ್ ಜೊತೆ ಮೈತ್ರಿಗೆ ನನ್ನ ಸಹಮತ ಇರಲಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. ಯಾಕೆಂದರೆ ದೇವೇಗೌಡರ ರಾಜಕೀಯದ ಆಟಗಳನ್ನೆಲ್ಲ ನೋಡಿ ಅನುಭವಿಸಿದವನು ನಾನು. ನನ್ನಂತೆಯೇ ಬಹುತೇಕ ಕಾಂಗ್ರೆಸ್ ಶಾಸಕರಿಗೆ ಜೆಡಿಎಸ್ ಜೊತೆ ಮೈತ್ರಿ ಅಷ್ಟೊಂದು ಇಷ್ಟ ಇರಲಿಲ್ಲ. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ಶಿರಬಾಗಿ ನಾವು ಒಪ್ಪಿಕೊಂಡೆವು. ಕುಮಾರಸ್ವಾಮಿ ಸರ್ಕಾರಕ್ಕೆ ಸಂಪೂರ್ಣ ಸಹಕಾರವನ್ನೂ ನೀಡಿದೆವು. ಸರ್ಕಾರಕ್ಕೆ ಯಾವುದಾದರೂ ರೀತಿಯ ಕಿರುಕುಳ ನೀಡಿದ್ದಕ್ಕೆ ಒಂದೇ ಒಂದು ಉದಾಹರಣೆ ಅವರು ಕೊಡಲಿ. ಆದರೆ ಕುಮಾರಸ್ವಾಮಿಯವರು ನಮ್ಮೆಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಸಮನ್ವಯ ಸಮಿತಿಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೂಡಾ ಕುಮಾರಸ್ವಾಮಿ ಜಾರಿ ಮಾಡಲಿಲ್ಲ. ಮೈತ್ರಿ ಧರ್ಮಕ್ಕೆ ಕಟ್ಟುಬಿದ್ದು ನಾವು ಬಹಿರಂಗವಾಗಿ ಪ್ರತಿಕ್ರಿಯಿಸಲು ಹೋಗಲಿಲ್ಲ. ನಮ್ಮದೇ ಪಕ್ಷದಲ್ಲಿದ್ದ ಎಚ್.ವಿಶ್ವನಾಥ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಅವರ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿಸಿದರು. ಈಗ ಅದೇ ವಿಶ್ವನಾಥ್ ಅಪ್ಪ ಮತ್ತು ಮಕ್ಕಳ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ.
ಇವತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಅದಕ್ಕೆ ದೇವೇಗೌಡ ಮತ್ತು ಅವರ ಮಗ ಕುಮಾರಸ್ವಾಮಿಯವರು ಕೂಡಿ ಮಾಡಿದ್ದ ಕಪಟನಾಟಕವೇ ಮೂಲ ಕಾರಣ. ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ದ್ರೋಹ ಬಗೆದು ರಾತೋರಾತ್ರಿ ಜೆಡಿಎಸ್ ಶಾಸಕರ ಜೊತೆಗೂಡಿ ಹೋಗಿ ಬಿಜೆಪಿಗೆ ಶರಣಾದರಲ್ಲಾ, ಅದೇ ದಿನ ರಾಜ್ಯದಲ್ಲಿ ಬಿಜೆಪಿ ಒಂದು ಕಾಲು ಊರಿತ್ತು. ಆಗಲೂ ದೇವೇಗೌಡರು ತಮ್ಮ ಮಗನ ನಡವಳಿಕೆಯನ್ನು ದೂರಲಿಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡಿದ್ದರು. ಆಗಲೂ ಮಾಧ್ಯಮದವರ ಮುಂದೆ ಬಂದು ಮಗ ನನ್ನ ಮಾತು ಕೇಳಲಿಲ್ಲ ಎಂದು ಬಹಿರಂಗವಾಗಿ ಕಣ್ಣೀರು ಹಾಕಿದ್ದರು. ಒಳಗಿಂದೊಳಗೆ ಕುಮಾರಸ್ವಾಮಿಯವರಿಗೆ ಎಲ್ಲ ರೀತಿಯ ಬೆಂಬಲ ನೀಡಿದ್ದರು.
ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆಯುವುದು ದೇವೇಗೌಡ ಮತ್ತು ಕುಮಾರಸ್ವಾಮಿಯವರ ಹುಟ್ಟುಗುಣ. ರಾಮಕೃಷ್ಣ ಹೆಗಡೆಯವರನ್ನು ಹಣಿಯಲು ಯತ್ನಿಸಿದವರು ಯಾರು? ತಾನೇ ಮುಖ್ಯಮಂತ್ರಿ ಮಾಡಿದ ಜೆ.ಎಚ್.ಪಟೇಲ್ ಅವರಿಗೆ ಕಿರುಕುಳ ಕೊಟ್ಟವರು ಯಾರು? ಎಸ್.ಆರ್.ಬೊಮ್ಮಾಯಿ ಸರ್ಕಾರವನ್ನು ಉರುಳಿಸಿದವರು ಯಾರು? 20-20 ತಿಂಗಳ ಅಧಿಕಾರ ಹಂಚಿಕೆಯ ಒಪ್ಪಂದ ಮಾಡಿಕೊಂಡ ಎಚ್ .ಡಿ. ಕುಮಾರಸ್ವಾಮಿ, ತನ್ನ ಅಧಿಕಾರವಧಿ ಮುಗಿದ ನಂತರ ವಚನ ಪಾಲನೆ ಮಾಡದೆ ದ್ರೋಹ ಬಗೆದರು. ಆಗ ಮಗನನ್ನು ವಚನಭ್ರಷ್ಟರಾಗಿ ಮಾಡಿದವರು ಇದೇ ದೇವೇಗೌಡರು. ಆ ವಚನಭ್ರಷ್ಟತೆಯ ಒಂದೇ ಕಾರಣಕ್ಕಾಗಿ ಸಿಡಿದೆದ್ದ ರಾಜ್ಯದ ಜನ ಯಡಿಯೂರಪ್ಪನವರನ್ನು ಬೆಂಬಲಿಸಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದರು. ರಾಜ್ಯದಲ್ಲಿ ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಮತ್ತು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಕಾರಣಕರ್ತರಾದ ದೇವೇಗೌಡರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ನರೇಂದ್ರಮೋದಿಯವರು ಮತ್ತೆ ಪ್ರಧಾನಿಯಾಗಿದ್ದಾರೆ, ಕೋಮುವಾದಿ ಪಕ್ಷ ಮತ್ತೆ ಅಧಿಕಾರ ಹಿಡಿದಿದೆ ಎನ್ನುವುದಕ್ಕೆ ದೇವೇಗೌಡರಿಗೆ ಬೇಸರ ಇಲ್ಲ. ಅವರ ಚಿಂತೆ ತಮ್ಮ ಮತ್ತು ತಮ್ಮ ಮೊಮ್ಮಗನ ಸೋಲು ಮಾತ್ರ. ಸೋತಿರುವುದು ದೇವೇಗೌಡ ಮತ್ತು ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ. ರಾಜ್ಯದ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಸೋತಿದ್ದಾರೆ. ಆ ಎಲ್ಲ ಅಭ್ಯರ್ಥಿಗಳ ಸೋಲು ಗೌಡರನ್ನು ಕಾಡುವುದಿಲ್ಲ. ಜೆಡಿಎಸ್ ಪಕ್ಷದ ಮತದಾರರಿರುವ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಯಾರು ಕಾರಣ? ಅಲ್ಲಿನ ಜೆಡಿಎಸ್ ಮತದಾರರೆಲ್ಲ ಈ ಬಾರಿ ಯಾರಿಗೆ ಮತ ಹಾಕಿದ್ದಾರೆ? ಅವರೆಲ್ಲ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಹೇಳಿದವರು ಯಾರು? ಈ ಪ್ರಶ್ನೆಗಳಿಗೂ ಗೌಡರು ಉತ್ತರ ನೀಡಬೇಕಲ್ಲಾ?
ಮೊದಲ ಒಪ್ಪಂದದ ಪ್ರಕಾರ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸಬೇಕಿತ್ತು. ಯಾಕೆ ಅಲ್ಲಿಂದ ಹೋಗಿ ತುಮಕೂರಿನಲ್ಲಿ ಸ್ಪರ್ಧಿಸಿದರು? ತಮ್ಮ ಪಕ್ಷಕ್ಕೆ ಎಂಟು ಕ್ಷೇತ್ರಗಳು ಬೇಕೇಬೇಕು ಎಂದು ಹಠ ಹಿಡಿದಿದ್ದು ತಾವು ಗೆಲ್ಲಲ್ಲಿಕ್ಕೋ? ಇಲ್ಲವೇ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲಿಕ್ಕೋ? ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ನೆಟ್ಟಗೆ ಪಕ್ಷದ ಕಚೇರಿ ಇಲ್ಲ, ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಪಕ್ಷಾಂತರ ಮಾಡಿಸಿ ಟಿಕೆಟ್ ಕೊಟ್ಟದ್ದು ತಮ್ಮ ಪಕ್ಷ ಗೆಲ್ಲಲ್ಲಿಕ್ಕೋ? ಇಲ್ಲವೇ ಶೋಭಾ ಕರಂದ್ಲಾಜೆಯವರನ್ನು ಗೆಲ್ಲಿಸಲಿಕ್ಕೋ? ಕಾರವಾರ, ವಿಜಯಪುರ ಕ್ಷೇತ್ರಗಳಲ್ಲಿ ತಮ್ಮ ಪಕ್ಷಕ್ಕೆ ಯಾವುದೇ ನೆಲೆ ಇಲ್ಲದೆ ಇದ್ದರೂ ದುರ್ಬಲ ಅಭ್ಯರ್ಥಿಗಳನ್ನು ಹಾಕಿ ಬಿಜೆಪಿ ಗೆಲುವಿಗೆ ದಾರಿ ಮಾಡಿಕೊಟ್ಟಿದ್ದು ಯಾರು?
ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆಂದು ತಮ್ಮ ಆತ್ಮ ಮುಟ್ಟಿಕೊಂಡು ಹೇಳಲಿ. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿಲ್ಲ ಎಂದು ಜಿ.ಟಿ.ದೇವೇಗೌಡರು ಬಹಿರಂಗವಾಗಿ ಹೇಳಿದ್ದಾರಲ್ಲಾ? ದೇವೇಗೌಡರು ಯಾರ ವಿರುದ್ಧ ಕ್ರಮ ಕೈಗೊಂಡಿದ್ದಾರೆ?
ನಾನು ಜೆಡಿಎಸ್ ಪಕ್ಷದಲ್ಲಿದ್ದವನು, ದೇವೇಗೌಡರ ರಾಜಕೀಯವನ್ನು ಹತ್ತಿರದಿಂದ ನೋಡಿದವನು. ಅವರ ನಡೆ-ನುಡಿಗಳನ್ನು, ಸಂಚು-ಹುನ್ನಾರಗಳನ್ನು ನನಗಿಂತ ಚೆನ್ನಾಗಿ ಉಳಿದವರು ಅರ್ಥಮಾಡಿಕೊಳ್ಳಲಾರರು. ಲೋಕಸಭಾ ಚುನಾವಣೆಯಲ್ಲಿ ಹೀಗೆಯೇ ಆಗುತ್ತೆ ಎಂದು ನನಗೆ ಗೊತ್ತಿತ್ತು. ಆದರೆ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬೇಕಾಯಿತು. ಈ ಫಲಿತಾಂಶದ ನಿರೀಕ್ಷೆ ಇತ್ತು.
ಕಳೆದ ವಿಧಾನಸಭಾ ಚುನಾವಣೆಯ ಕಾಲದಲ್ಲಿ ನಾನು ಜೆಡಿಎಸ್ ವಿರುದ್ಧ ದೇವೇಗೌಡರ ವಿರುದ್ಧ ಮಾತನಾಡಿದ್ದೇನೆ, ರಾಹುಲ್ ಗಾಂಧಿಯವರಿಂದಲೂ ಮಾತನಾಡಿಸಿದ್ದೇನೆ ಎಂದು ದೇವೇಗೌಡರು ಆರೋಪ ಮಾಡಿದ್ದಾರೆ. ಆ ಚುನಾವಣೆಯಲ್ಲಿ ದೇವೇಗೌಡರು, ಕುಮಾರಸ್ವಾಮಿಯವರು ಕಾಂಗ್ರೆಸ್ ಪರವಾಗಿ ಮಾತನಾಡಿದ್ದಾರೆಯೇ? ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಎದುರಾಳಿಯೇ ಜೆಡಿಎಸ್. ಚುನಾವಣಾ ಪ್ರಚಾರದ ಕಾಲದಲ್ಲಿ ಜೆಡಿಎಸ್ ವಿರುದ್ದ ಮಾತನಾಡದೆ ಮತ್ತೆ ಯಾರ ವಿರುದ್ಧ ಮಾತನಾಡಬೇಕು?
ನಾನು ಒಕ್ಕಲಿಗ ವಿರೋಧಿ ಎಂಬಂತೆ ದೇವೇಗೌಡರು ಮತ್ತು ಅವರ ಕುಟುಂಬ ಅಪಪ್ರಚಾರ ಮಾಡುತ್ತಾ ಬಂದಿದೆ. ನಾನು ಒಕ್ಕಲಿಗ ಸಮುದಾಯದ ವಿರೋಧಿ ಅಲ್ಲ. ಜೆಡಿಎಸ್ ನಲ್ಲಿ ಒಕ್ಕಲಿಗ ನಾಯಕರ ಜೊತೆಯಲ್ಲಿಯೇ ರಾಜಕೀಯ ಮಾಡುತ್ತಾ ಬಂದವನು. ಈಗಲೂ ನನ್ನ ಬಹಳಷ್ಟು ಸ್ನೇಹಿತರು ಒಕ್ಕಲಿಗ ಸಮುದಾಯವರೇ ಆಗಿದ್ದಾರೆ. ದೇವೇಗೌಡರು ನನ್ನನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದ ನಂತರ ಆ ಪಕ್ಷವನ್ನು ವಿರೋಧಿಸುತ್ತಾ ಬಂದಿದ್ದೇನೆ. ಜೆಡಿಎಸ್ ಎನ್ನುವುದು ಒಕ್ಕಲಿಗರ ಪಕ್ಷವೇ? ಜೆಡಿಎಸ್ ವಿರೋಧಿಸಿದರೆ, ದೇವೇಗೌಡರನ್ನು ವಿರೋಧಿಸಿದರೆ ನಾನು ಹೇಗೆ ಒಕ್ಕಲಿಗ ವಿರೋಧಿಯಾಗುತ್ತೇನೆ?
ತಮ್ಮ ವಿರೋಧಿಗಳನ್ನು ಒಕ್ಕಲಿಗ ವಿರೋಧಿ ಎಂದು ಸುಳ್ಳು ಆರೋಪ ಮಾಡುವ ದೇವೇಗೌಡರು ತಮ್ಮ ಮಕ್ಕಳನ್ನು ಹೊರತುಪಡಿಸಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ? ದೇವೇಗೌಡರು ರಾಜಕೀಯವಾಗಿ ನಾಶಮಾಡಿದವರ ಪಟ್ಟಿಯಲ್ಲಿ ಶೇಕಡಾ 90ರಷ್ಟು ಮಂದಿ ಒಕ್ಕಲಿಗರೇ ಆಗಿದ್ದಾರೆ. ಇದಕ್ಕೆಲ್ಲ ಗೌಡರು ಉತ್ತರ ಕೊಡುವುದಿಲ್ಲ. ಹೆಚ್ಚಿನ ಮಾಹಿತಿಬೇಕಾದರೆ ಈಗ ಬಿಜೆಪಿಯಲ್ಲಿರುವ ಬಚ್ಚೇಗೌಡರನ್ನು ಕೇಳಿ, ಅವರು ವಿವರವಾಗಿ ಹೇಳ್ತಾರೆ.
ಒಕ್ಕಲಿಗರಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಿದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಕೆಂಗಲ್ ಹನುಮಂತಯ್ಯ, ಎಸ್.ಎಂ.ಕೃಷ್ಣ ಅವರಿಂದ ಹಿಡಿದು ಈಗಿನ ಡಿ.ಕೆ.ಶಿವಕುಮಾರ್, ಕೃಷ್ಣಬೈರೇಗೌಡರ ವರೆಗೆ ಒಕ್ಕಲಿಗ ನಾಯಕರಿಗೆ ಅವಕಾಶ ನೀಡಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ. ದೇವೇಗೌಡರು ತಮ್ಮ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ?
1996ರಲ್ಲಿ, 2004ರಲ್ಲಿ ಏನಾಯಿತು ಎನ್ನುವುದನ್ನು ಹಿಂದೆ ಬಹಳಷ್ಟು ಬಾರಿ ಹೇಳಿದ್ದೇನೆ. ನಾನು ಮುಖ್ಯಮಂತ್ರಿಯಾಗದಂತೆ ಮಾಡಲು ದೇವೇಗೌಡರು ಮತ್ತು ಕುಮಾರ ಸ್ವಾಮಿಯವರು ಏನೆಲ್ಲಾ ಮಾಡಿದರು ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ. ವಿಧಾನಸಭೆಯಲ್ಲಿಯೇ ಈ ಬಗ್ಗೆ ಮಾತನಾಡಿದ್ದೇನೆ, ಕುಮಾರಸ್ವಾಮಿವಯರೇ ಇದನ್ನೆಲ್ಲ ಒಪ್ಪಿಕೊಂಡಿದ್ದಾರೆ. ಇದು ವಿಧಾನಸಭೆಯ ದಾಖಲೆಯಲ್ಲಿಯೇ ಇದೆ. ಈಗ ದೇವೇಗೌಡರು ಇದ್ದಕ್ಕಿದ್ದ ಹಾಗೆ ನನ್ನ ಮೇಲೆ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಲು ಕಾರಣಗಳೇನು ಎನ್ನುವುದು ತಿಳಿಯದಷ್ಟು ನಾನು ದಡ್ಡನಲ್ಲ. ಇದರ ಹಿಂದೆ ಗೌಡರ ಜೊತೆ ಯಾರೆಲ್ಲ ಷಾಮೀಲಾಗಿದ್ದಾರೆ ಎನ್ನುವುದು ತಿಳಿದಿದೆ. ಅದಕ್ಕೆಲ್ಲ ಮುಂದೆ ಉತ್ತರ ಕೊಡ್ತೇನೆ.
ನಾನೇನಾದರೂ ವಿರೋಧಪಕ್ಷದ ನಾಯಕನಾಗಿಬಿಟ್ಟರೆ ಹೇಗೆ ಎಂಬ ಚಿಂತೆ ಕಾಡುತ್ತಿರುವ ಕಾರಣಕ್ಕಾಗಿಯೇ ದೇವೇಗೌಡರು ಈಗ ಹೊಸ ನಾಟಕ ಶುರು ಮಾಡಿದ್ದಾರೆ. ಈ ಹೊಸ ನಾಟಕದ ಮೂಲ ಉದ್ದೇಶವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಾಶಮಾಡಿ, ಆ ಸ್ಥಾನದಲ್ಲಿ ತಮ್ಮ ಪಕ್ಷವನ್ನು ಬೆಳೆಸುವುದು. ಇದೆಲ್ಲ ದೇವೇಗೌಡರಿಗೆ ಹೊಸದೇನಲ್ಲ. ಪ್ರಧಾನಿ ಮಾಡಲು ಬೆಂಬಲಿಸಿದ ಪಕ್ಷಕ್ಕೆ ದ್ರೋಹ ಬಗೆದವರು ದೇವೇಗೌಡರು. ಆಗಿನ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರ ವಿರುದ್ಧದ ಹಳೆಪ್ರಕರಣವನ್ನು ಹುಡುಕಿ ಅವರನ್ನೇ ಜೈಲಿಗೆ ಕಳುಹಿಸುವ ಸಂಚು ಮಾಡಿದವರು ದೇವೇಗೌಡರು. ಆದ್ದರಿಂದ ನಂಬಿದವರಿಗೆ ಕೈಕೊಡುವುದು, ವಿರೋಧಿಗಳ ಮೇಲೆ ಸುಳ್ಳು ಆರೋಪ ಮಾಡುವುದು, ರಾಜಕೀಯ ಲಾಭಕ್ಕಾಗಿ, ಅನುಕಂಪ ಗಿಟ್ಟಿಸಿಕೊಳ್ಳಲು ಅಳುವುದು, ಕೊರಗುವುದು ಇವೆಲ್ಲ ದೇವೇಗೌಡರ ಹಳೆ ಗಿಮಿಕ್ ಗಳು. ಇದನ್ನೆಲ್ಲ ರಾಜ್ಯದ ಜನ ನೋಡುತ್ತಾ ಬಂದಿದ್ದಾರೆ.
ಹಿಂದೆ – ಮುಂದೆ ರಾಜಕೀಯ ಮಾಡುವ ಅಭ್ಯಾಸ ನನಗಿಲ್ಲ. ನೇರ ರಾಜಕಾರಣ ಮಾಡುತ್ತೇನೆ. ತಾತ, ಮೊಮ್ಮಕ್ಕಳು ಸೇರಿ ಇಡೀ ಕುಟುಂಬವೇ ಚುನಾವಣೆಗೆ ನಿಂತಿದ್ದರಿಂದ ಅವರು ಸೋತಿದ್ದು. ಈಗ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಿದ್ದಾರೆ. ಲಿಂಗಾಯತ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಹೀಗೆ ನನ್ನನ್ನು ತಪ್ಪಾಗಿ ಬಿಂಬಿಸಿದ್ದೆ ಹೆಚ್ಚು. 5 ವರ್ಷದ ನನ್ನ ಕಾರ್ಯಕ್ರಮ ಎಲ್ಲ ಜಾತಿ, ಧರ್ಮಗಳನ್ನು ಮೀರಿ ವಿಸ್ತರಿಸಿದೆ. ನನಗೆ ಸರ್ಟಿಫಿಕೇಟ್ ಕೊಡುವುದು ಜನರೇ ಹೊರತು, ದೇವೇಗೌಡರಲ್ಲ.
ಬಿಜೆಪಿಯನ್ನು ಮೆಚ್ಚಿಸಲು ದೇವೇಗೌಡರು ನನ್ನ ಮೇಲೆ ಸುಳ್ಳು ಆರೋಪ ಮಾಡಿರಬಹುದು.
ಐ ಡೋಂಟ್ ಕೇರ್!!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ10 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

