Connect with us

ರಾಜಕೀಯ

ಮೌನ ಜೀವಿಯ ತತ್ವವೂ ಆಂದೋಲನಜೀವಿಯ ಸತ್ವವೂ

Published

on

  • ನಾ ದಿವಾಕರ

ಮಾನವನ ಉಗಮ ಮತ್ತು ಅಭ್ಯುದಯದ ಇತಿಹಾಸವನ್ನು ಅರಿತಿರುವ ಯಾರಿಗೇ ಆದರೂ ಒಂದು ಅಂಶ ತಿಳಿದಿರಲೇಬೇಕು. ಅದೇನೆಂದರೆ, ಮಾನವನಲ್ಲಿ ಸ್ವಾಭಾವಿಕವಾದ ಆಂದೋಲನದ ತುಡಿತ ಮತ್ತು ಸಂವೇದನೆ ಇಲ್ಲದೆ ಹೋಗಿದ್ದಲ್ಲಿ ಬಹುಶಃ ಮನುಕುಲ ಶಿಲಾಯುಗದಿಂದ ಒಂದು ಹೆಜ್ಜೆಯೂ ಮುಂದೆ ಚಲಿಸಲಾಗುತ್ತಿರಲಿಲ್ಲ.

ತನಗೆ ಹಸಿವಾಗುವುದನ್ನು ಹೇಳಲಾರದೆ ರಚ್ಚೆ ಹಿಡಿಯುವ ಎಳೆ ಕೂಸಿನ ಅಳು ಸಹ ಒಂದು ರೀತಿಯ ಆಂದೋಲನವೇ. ಅಂಬೆಗಾಲಿನ ಹಂತವನ್ನು ದಾಟಿ ಹೆಜ್ಜೆ ಹಾಕಲು ಕಲಿಯುವ ಹಸುಳೆ ಬೀಳುತ್ತಾ, ಏಳುತ್ತಾ , ಗಾಯ ಮಾಡಿಕೊಳ್ಳುತ್ತಾ ನಡೆಯುವ ಪ್ರಕ್ರಿಯೆಯೂ ಒಂದು ರೀತಿಯ ಆಂತರಿಕ ಆಂದೋಲನವೇ. ಅಂದರೆ, ಮಾನವ ತನ್ನ ಅಭ್ಯುದಯದ ಹಾದಿಯಲ್ಲಿ ಸ್ಥಾಪಿತ ನೆಲೆಯ ವಿರುದ್ಧ ಬಂಡಾಯ ಹೂಡುತ್ತಲೇ ತನ್ನ ಮುನ್ನಡೆ ಸಾಧಿಸಲೆತ್ನಿಸುತ್ತಾನೆ.

ತನಗೆ ನ್ಯಾಯಯುತವಾಗಿ ದಕ್ಕಬೇಕಾಗಿರುವುದನ್ನು, ತನ್ನಿಂದ ಕಸಿದುಕೊಳ್ಳಲಾಗಿರುವುದನ್ನು, ತನಗೆ ವಂಚಿಸಲಾಗಿರುವುದನ್ನು ಮತ್ತು ತನ್ನ ಸ್ವಾಭಾವಿಕ ಹಕ್ಕುಗಳನ್ನು ಸಾಧಿಸಲು ಮನುಷ್ಯ ವ್ಯಕ್ತಿಗತ ನೆಲೆಯಲ್ಲಿ, ಸಾಮುದಾಯಿಕ ನೆಲೆಯಲ್ಲಿ, ಸಾಂಘಿಕ ನೆಲೆಯಲ್ಲಿ ವೈಯಕ್ತಿಕವಾಗಿ, ಸಾಮುದಾಯಿಕವಾಗಿ, ಸಾಂಸ್ಥಿಕವಾಗಿ ಆಂದೋಲನಗಳ ಮೂಲಕವೇ ಪ್ರಯತ್ನಿಸುತ್ತಾ ಬಂದಿದ್ದಾನೆ.

ಮಾನವ ಸಮಾಜ ಇಂದು ಪ್ರಜಾತಂತ್ರ, ಗಣತಂತ್ರ, ಸಂವಿಧಾನ, ಕಾನೂನು ಕಟ್ಟಳೆ ಮುಂತಾದ ನಾಗರಿಕ ಸಮಾಜದ ರೀತಿ ರಿವಾಜುಗಳನ್ನು ರೂಢಿಸಿಕೊಂಡು, ಮೈಗೂಡಿಸಿಕೊಂಡು ನಡೆದು ಬಂದಿದ್ದರೆ ಅದರ ಹಿಂದೆ ಶತಮಾನಗಳಿಂದಲೂ ನಡೆದು ಬಂದ ಜನಾಂದೋಲನಗಳಿವೆ, ಚಳುವಳಿಗಳ ಇತಿಹಾಸವಿದೆ, ಪ್ರತಿರೋಧ ಪ್ರತಿಭಟನೆಯ ಪರಂಪರೆ ಇದೆ.

ಗುಲಾಮಗಿರಿಯ ವಿರುದ್ಧ ಮೊಟ್ಟಮೊದಲ ಬಾರಿಗೆ ದಂಗೆಯೆದ್ದು, ಪ್ರತಿರೋಧದ ಪಂಜುಗಳನ್ನು ತನ್ನ ಮುಂದಿನ ಹಲವು ಶತಮಾನಗಳ ಪೀಳಿಗೆಗೆ ಬಿಟ್ಟು ಹೋದ ಸ್ಪಾರ್ಟಕಸ್ ನಿಂದ ಹಿಡಿದು ಇತ್ತೀಚಿನ ರೈತ ಮುಷ್ಕರದವರೆಗೆ ಮಾನವ ಸಮಾಜ ಜನಾಂದೋಲನಗಳ ಮೂಲಕವೇ, ವೈಯಕ್ತಿಕ/ಸಾಂಘಿಕ ಪ್ರತಿಭಟನೆ, ಪ್ರತಿರೋಧ, ಬಂಡಾಯಗಳ ಮೂಲಕವೇ ತನ್ನ ವಿಕಾಸವನ್ನು ಕಂಡಿದೆ.

ಬಹುಶಃ ಈ ಇತಿಹಾಸದ ವಿಭಿನ್ನ ಕಾಲಘಟ್ಟಗಳಲ್ಲಿ, ವಿಭಿನ್ನ ನೆಲೆಗಳಲ್ಲಿ ಈ ಪ್ರತಿರೋಧದ ದನಿಗಳು ದಾಖಲಾಗದೆ ಹೋಗಿದ್ದರೆ 21ನೆಯ ಶತಮಾನದ ಮನುಕುಲ ಶಿಲಾಯುಗದ ಅಥವಾ ಗುಲಾಮಿ ಸಮಾಜದಲ್ಲೇ ಉಳಿದುಬಿಡುತ್ತಿತ್ತು.

ಆಂದೋಲನಗಳ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿ ನಾಗರಿಕ ಸಮಾಜದ ವಿಕಸನಕ್ಕೆ ಕಾರಣವಾಗುವ ಮನುಷ್ಯರನ್ನು ಒಂದು ‘ ತಳಿ ’ ಎಂದು ಮೂದಲಿಸುವ, ಆಂದೋಲನಜೀವಿಗಳು ಎಂದು ಹೀಗಳೆಯುವ ಪ್ರಧಾನಮಂತ್ರಿಗಳು ಇತಿಹಾಸದ ಪುಟಗಳನ್ನು ಒಮ್ಮೆಯಾದರೂ ತಿರುವಿಹಾಕುವುದು ಒಳಿತು.

ಆಂದೋಲನಜೀವಿಗಳ ಈ ತಳಿ ತನ್ನ ಜೀವವಂತಿಕೆಯನ್ನು ಕಾಪಾಡಿಕೊಂಡು ಬಂದಿರುವುದರಿಂದಲೇ ಇಂದು ಭಾರತದಲ್ಲಿ ಒಂದು ಸಂವಿಧಾನ, ಪ್ರಜಾತಂತ್ರ ಮತ್ತು ಸಮಾನತೆಯ ಕನಸುಗಳು ಜೀವಂತವಾಗಿವೆ.

ಈ ತಳಿಯ ಇತಿಹಾಸ ಮತ್ತು ಪರಂಪರೆ ಮನುಕುಲದ ಇತಿಹಾಸದಷ್ಟೇ ಹಳೆಯದು, ಅಷ್ಟೇ ಅಮೂಲ್ಯವಾದುದಲ್ಲವೇ ? ಟಿಪ್ಪುಸುಲ್ತಾನನಿಂದ ಆರಂಭವಾಗಿ, 1857ರ ಸ್ವಾತಂತ್ರ್ಯ ಸಂಗ್ರಾಮವನ್ನು ಹಾದು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಜೀವ, ಜೀವನ, ಜೀವನೋಪಾಯ ಎಲ್ಲವನ್ನೂ ಕಳೆದುಕೊಂಡ ಲಕ್ಷಾಂತರ ಜೀವಿಗಳು ಈ ತಳಿಗೇ ಸೇರಿದವರು.

ದುರಂತ ಎಂದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂತತಿಯನ್ನು ಪ್ರತಿನಿಧಿಸದ ಒಂದು ಪೀಳಿಗೆ ಇಂದು ದೇಶ ಮತ್ತು ದೇಶಪ್ರೇಮದ ನಿಷ್ಕರ್ಷೆ ಮಾಡುತ್ತಿದೆ. ಈ ಪೀಳಿಗೆಯ ಕೂಸುಗಳು ಆಂದೋಲನಜೀವಿಗಳನ್ನು ಅಪಮಾನಿಸುತ್ತಿವೆ.

ಬುದ್ಧನ ಸಾತ್ವಿಕ ಆಂದೋಲನದಿಂದ ಅಂಬೇಡ್ಕರರ ತಾತ್ವಿಕ ಪ್ರಜಾಂದೋಲನದವರೆಗಿನ ಹೆಜ್ಜೆಗುರುತುಗಳನ್ನು ಗಮನಿಸಿದ್ದರೆ ಅಥವಾ ಶತಮಾನಗಳ ಅಸಮಾನತೆ ಮತ್ತು ತಾರತಮ್ಯಗಳ ಪಳೆಯುಳಿಕೆಗಳನ್ನು ಇಂದಿಗೂ ಉಳಿಸಿಕೊಂಡು ಬಂದಿರುವ ಭಾರತೀಯ ಸಮಾಜದಲ್ಲಿನ ಚಾರಿತ್ರಿಕ ಪ್ರತಿರೋಧದ ದನಿಗಳನ್ನು, ಹೋರಾಟಗಳನ್ನು, ಜನಾಂದೋಲನಗಳನ್ನು ಗಮನಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ‘ ತಳಿ ’ ಎನ್ನುವ ಪದ ಬಳಸುವ ಬದಲು ಪರಂಪರೆ, ನಾಗರಿಕತೆ ಎಂಬ ಮೌಲಿಕ ಪದವನ್ನು ಬಳಸುತ್ತಿದ್ದರು.

ಅಸ್ಪೃಶ್ಯತೆ, ಬಾಲ್ಯ ವಿವಾಹ ಮುಂತಾದ ಅನಿಷ್ಟ ಪದ್ಧತಿಗಳನ್ನು ಇಂದಿಗೂ ಜೀವಂತವಾಗಿರಿಸಿಕೊಂಡು ಬಂದಿರುವ ಭಾರತೀಯ ಸಮಾಜದಲ್ಲಿ ಆಂದೋಲನ ನಾಗರಿಕತೆಯ ಒಂದು ಭಾಗವಾಗಿ ಬೆಳೆದುಬಂದಿರುವುದನ್ನು ಅರಿತಿದ್ದರೆ ‘ ಆಂದೋಲನಜೀವಿ ’ ಎನ್ನುವ ಲೇವಡಿಯ ಮಾತುಗಳು ಹೊರಬರುತ್ತಿರಲಿಲ್ಲ.

ನಿಜ, ಭಾರತದಲ್ಲಿ ‘ ಅಂದೋಲನಜೀವಿಗಳ ’ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಾಗಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯಗಳ ವಿರುದ್ಧ, ಮಹಿಳೆಯರ ಘನತೆಗಾಗಿ, ಹೆಣ್ತನದ ರಕ್ಷಣೆಗಾಗಿ, ಅಸ್ಪೃಶ್ಯತೆ ಮತ್ತು ಜಾತಿ ದೌರ್ಜನ್ಯದ ವಿರುದ್ಧ, ಸಾಮಾಜಿಕ ಅನ್ಯಾಯಗಳ ವಿರುದ್ಧ ಆಂದೋಲನಜೀವಿಗಳ ಒಂದು ಪರಂಪರೆಯೇ ಇಲ್ಲಿ ಬೆಳೆದುಬಂದಿದೆ.

ಬಸವಣ್ಣನಿಂದ ಅಂಬೇಡ್ಕರ್ ವರೆಗೆ ಈ ಪರಂಪರೆ ಬೆಳೆಯುತ್ತಲೇ ಬಂದಿದೆ. ಮಾರ್ಕ್ಸ್, ಲೆನಿನ್, ಮಾವೋ, ಫುಲೆ, ಗಾಂಧಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್ ಹೀಗೆ ಮಹಾನ್ ಚಿಂತಕರ ಸಂತತಿ ಮತ್ತು ವಿಚಾರಧಾರೆ ಈ ಪರಂಪರೆಯನ್ನು ಪೋಷಿಸುತ್ತಾ ಬಂದಿದೆ.

ಇದು ಯಾವುದೇ ವೈಜ್ಞಾನಿಕ ಪ್ರಯೋಗಾಲಯದಲ್ಲಿ ಸೃಷ್ಟಿಸಿದ ತಳಿ ಅಲ್ಲ. ಇದು ಶತಮಾನಗಳ ಅನ್ಯಾಯಗಳ ವಿರುದ್ಧ ಜನಮಾನಸದ ನಡುವೆ ಸೃಷ್ಟಿಯಾಗಿರುವ ಸಂಘರ್ಷದ ಪರಂಪರೆಗಳು, ಹೋರಾಟದ ವಾಹಿನಿಗಳು, ಜನಾಂದೋಲನದ ಸಾಗರಗಳು.

ವಸಾಹತು ದಾಸ್ಯದಿಂದ ವಿಮೋಚನೆ ಪಡೆದ ನಂತರ ವಿಶ್ವದ ಅತ್ಯುತ್ತಮ ಸಂವಿಧಾನವನ್ನು ರಚಿಸಿ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಾಧಿಸುವ ನಿಟ್ಟಿನಲ್ಲಿ 73 ವರ್ಷಗಳ ಸ್ವತಂತ್ರ ಅಡಳಿತ ನಡೆಸಿದ ನಂತರವೂ ಭಾರತದಲ್ಲಿ ಆಂದೋಲನಜೀವಿಗಳು ಸಕ್ರಿಯರಾಗಿದ್ದರೆ ಅದು ಆಡಳಿತ ವ್ಯವಸ್ಥೆ ಮತ್ತು ಆಳುವ ವರ್ಗಗಳು ನಾಚಿಕೆಪಡಬೇಕಾದ ವಿಚಾರ.

ಸಂವಿಧಾನದ ಆಶಯದಂತೆ ಸಮಸಮಾಜವನ್ನು ಕಟ್ಟುವ ಪ್ರಕ್ರಿಯೆಯಲ್ಲಿ, ಶೋಷಣೆ ಮುಕ್ತ, ದೌರ್ಜನ್ಯ ಮುಕ್ತ, ಭ್ರಷ್ಟಾಚಾರ ಮುಕ್ತ, ಸಂವೇದನಾಶೀಲ ಸಮಾಜ ನಿರ್ಮಾಣಕ್ಕಾಗಿ ಈ ದೇಶದ ಆಳುವ ವರ್ಗಗಳು, ರಾಜಕೀಯ ಪಕ್ಷಗಳು ಸಂವಿಧಾನ ಬದ್ಧತೆ ಮತ್ತು ಪ್ರಜಾತಂತ್ರ ನಿಷ್ಠೆಯಿಂದ ಶ್ರಮಿಸಿದ್ದರೆ ಬಹುಶಃ ಆಂದೋಲನಜೀವಿಗಳೂ ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಪ್ರತಿಭಟನೆ, ಪ್ರತಿರೋಧ, ಮುಷ್ಕರ, ಧರಣಿ ಮುಂತಾದ ಸಂಘರ್ಷಗಳಲ್ಲಿ ಕಳೆಯುತ್ತಿರಲಿಲ್ಲ.

1970ರ ದಶಕದ ರೈಲ್ವೆ ಮುಷ್ಕರದಿಂದ 2020ರ ರೈತ ಮುಷ್ಕರದವರೆಗೆ, ನೆಲ್ಲಿ ಹತ್ಯಾಕಾಂಡದಿಂದ ಶಹೀನ್ ಭಾಗ್‍ವರೆಗೆ, ಮಥುರಾ ಅತ್ಯಾಚಾರ ಪ್ರಕರಣದಿಂದ ಹಥ್ರಾಸ್‍ವರೆಗೆ, ತುರ್ತುಪರಿಸ್ಥಿತಿಯಿಂದ ಈ ಕ್ಷಣದವರೆಗೆ ಈ ದೇಶದ ಹಾದಿ ಬೀದಿಗಳಲ್ಲಿ ನಡೆದ ಹೋರಾಟಗಳನ್ನು, ನ್ಯಾಯಾಂಗದ ಅಂಗಳದಲ್ಲಿ ನಡೆದ ಸಂಘರ್ಷಗಳನ್ನು ಗಮನಿಸಿದರೆ ಭಾರತದ ಆಳುವ ವರ್ಗಗಳು ‘ ಆಂದೋಲನಜೀವಿಗಳನ್ನು ’ ಹೇಗೆ ತುದಿಗಾಲಲ್ಲಿ ನಿಲ್ಲಿಸಿವೆ ಎಂದು ಅರ್ಥವಾಗುತ್ತದೆ.

ಶಿಕ್ಷಣ ಹಕ್ಕು, ಆಹಾರ ಹಕ್ಕು, ಅರಣ್ಯ ಹಕ್ಕು, ಮಾಹಿತಿ ಹಕ್ಕು ಹೀಗೆ ಸಾರ್ವಭೌಮ ಪ್ರಜೆಗಳ ಜೀವನ ಮತ್ತು ಜೀವನೋಪಾಯಕ್ಕೆ ಅತ್ಯವಶ್ಯವಾದ ಹಕ್ಕುಗಳನ್ನು ಸಾಂವಿಧಾನಿಕವಾಗಿ ಪ್ರಜೆಗಳಿಗೆ ಒದಗಿಸಲು ಈ ದೇಶಕ್ಕೆ ಆರು ದಶಕಗಳು ಬೇಕಾದವು. ಈ ಎಲ್ಲ ಹಕ್ಕುಗಳೂ ಆಳುವವರ ಔದಾರ್ಯದಿಂದ ಪಡೆದಿದ್ದಲ್ಲ, ಜನಪರ ಸಂಘಟನೆಗಳ, ಜನಾಂದೋಲನಗಳ ಅವಿರತ ಶ್ರಮ, ಹೋರಾಟ ಮತ್ತು ನ್ಯಾಯಯುತ ಪ್ರಯತ್ನಗಳ ಫಲವಾಗಿ ಪಡೆದದ್ದು.

ಪ್ರತಿಭಟನೆ ಮತ್ತು ಪ್ರತಿರೋಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಡಳಿತ ಯಂತ್ರವನ್ನು ಸುಸ್ಥಿತಿಯಲ್ಲಿಡಲು ನೆರವಾಗುವ ಪ್ರಬಲ ಅಸ್ತ್ರಗಳು. ಸರ್ವಾಧಿಕಾರಿ, ನಿರಂಕುಶ ವ್ಯವಸ್ಥೆಯಲ್ಲಿ ದಾಸ್ಯದಿಂದ ಮುಕ್ತಿಪಡೆಯಲು ಇರುವ ಮಾರ್ಗಗಳು. ಜಗತ್ತಿನ ಇತಿಹಾಸದಲ್ಲಿ ಅನೇಕಾನೇಕ ಸರ್ವಾಧಿಕಾರಿಗಳು, ನಿರಂಕುಶ ಪ್ರಭುಗಳು ಜನಾಂದೋಲನಗಳಿಗೆ ಮಣಿದು ಪದತ್ಯಾಗ ಮಾಡಿರುವುದನ್ನು ಕಂಡಿದ್ದೇವೆ, ಇಂದಿಗೂ ಕಾಣುತ್ತಿದ್ದೇವೆ.

1990 ದಶಕದಲ್ಲಿ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕಮ್ಯುನಿಸ್ಟ್ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದು, ಹಿಂದೂ ರಾಷ್ಟ್ರ ಎಂಬ ಹೆಗ್ಗಳಿಕೆಯಿದ್ದ ನೇಪಾಲದಲ್ಲಿ ರಾಜಪ್ರಭುತ್ವವನ್ನು ಕೊನೆಗೊಳಿಸಿದ್ದು ಜನಾಂದೋಲನಗಳೇ ಅಲ್ಲವೇ ? ಭಾರತದಲ್ಲಿ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ಕೊನೆಗೊಳಿಸಿದ್ದೂ ಜನಾಂದೋಲನವೇ ಅಲ್ಲವೇ ?

ಈ ಆಂದೋಲನಜೀವಿಗಳು ಇಲ್ಲದೆ ಹೋಗಿದ್ದರೆ ಭಾರತ ಮತ್ತು ವಿಶ್ವ ಹೇಗಿರುತ್ತಿತ್ತು ? ಈ ಪ್ರಶ್ನೆ ಒಂದು ಘಳಿಗೆ ಮನದಲ್ಲಿ ಸುಳಿದಿದ್ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ‘ ಅಂದೋಲನಜೀವಿ ’ ಪದವನ್ನು ಅವಹೇಳನಕಾರಿಯಾಗಿ ಬಳಸುತ್ತಿರಲಿಲ್ಲ.

ಇಂದು ಭಾರತ ಕವಲು ಹಾದಿಯಲ್ಲಿದೆ. ಇಂದಿನ ಭಾರತ ತನ್ನ ಸ್ಥಾಪಿತ ಮಾನವೀಯ ನೆಲೆಗಳಿಂದ ವಿಮುಖವಾಗುತ್ತಿದೆ, ಶತಮಾನಗಳ ಬಹುಸಂಸ್ಕೃತಿಯ ನೆಲೆಗಳನ್ನು ಅಲ್ಲಗಳೆಯುತ್ತಿದೆ, ಈ ದೇಶದ ಅಂತಃಸತ್ವವನ್ನು ಕಾಪಾಡಿಕೊಂಡು ಬಂದಿರುವ ಜನಸಂಸ್ಕೃತಿಗಳನ್ನು ನಿರಾಕರಿಸುತ್ತಿದೆ, ಸಮಾಜೋ ಸಾಂಸ್ಕೃತಿಕ ನೆಲೆಯಲ್ಲಿ ಚಾರಿತ್ರಿಕವಾಗಿ ನೆಲೆಗೊಂಡಿರುವ ಭ್ರಾತೃತ್ವದ ನೆಲೆಗಳನ್ನು ನಾಶಪಡಿಸುತ್ತಿದೆ, ಮತ್ತೊಂದೆಡೆ ಈ ದೇಶದ ಬಹುಸಂಖ್ಯಾತ ಜನತೆಯನ್ನು ಶೋಷಣೆಗೊಳಪಡಿಸುತ್ತಲೇ ಬ್ರಾಹ್ಮಣ್ಯದ ಅಧಿಕಾರಶಾಹಿ ನೆಲೆಗಳಿಗೆ ಮರುಜನ್ಮ ಕಲ್ಪಿಸುತ್ತಿದೆ.

ನವ ಭಾರತ ಪ್ರಾಚೀನ ಮನುಸ್ಮೃತಿಯ ಪರಂಪರೆಯನ್ನು ಪುನರ್ ಸ್ಥಾಪಿಸುವತ್ತ ಧಾವಿಸುತ್ತಿದೆ. ಸ್ವತಂತ್ರ ಭಾರತ ಶಿಲ್ಪಿಗಳ ಸುಂದರ ಕನಸುಗಳನ್ನು ಭಗ್ನಗೊಳಿಸಿ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹೊಸಕಿಹಾಕುವತ್ತ ದಾಪುಗಾಲು ಹಾಕುತ್ತಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲೇ ಕಳೆದ ಎರಡು ವರ್ಷಗಳಲ್ಲಿ ಪ್ರಬಲ ಜನಾಂದೋಲನಗಳು ರೂಪುಗೊಳ್ಳುತ್ತಿವೆ, ಆಂದೋಲನಜೀವಿಗಳೂ ಹೆಚ್ಚಾಗುತ್ತಿದ್ದಾರೆ.

ದೇಶದ ಶ್ರಮಜೀವಿಗಳನ್ನು, ದುಡಿಯುವ ವರ್ಗಗಳನ್ನು ಶಾಶ್ವತವಾಗಿ ಗುಲಾಮಗಿರಿಗೆ ದೂಡುವ ಕಾರ್ಮಿಕ ಸಂಹಿತೆಗಳು, ಸಮಸ್ತ ರೈತಾಪಿಯನ್ನು ಕಾರ್ಪೋರೇಟ್ ಗುಲಾಮಗಿರಿಗೆ ಒಳಪಡಿಸುವ ಮೂರು ಕರಾಳ ಕೃಷಿ ಮಸೂದೆಗಳು, ದೇಶದ ಅವಕಾಶವಂಚಿತ ಜನಸಮುದಾಯಗಳನ್ನು ಮತ್ತು ಶೋಷಿತರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹೊಸ ಶಿಕ್ಷಣ ನೀತಿ, ಶತಮಾನಗಳಿಂದ ಈ ದೇಶದಲ್ಲಿ ನೆಲೆಸಿರುವ ಜನಸಮುದಾಯಗಳನ್ನು ಹೊರದಬ್ಬುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಕಾಯ್ದೆ, ಸಂವಿಧಾನ ಈ ದೇಶದ ಸಾರ್ವಭೌಮ ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಯುಎಪಿಎ ಎನ್ನುವ ಕರಾಳ ಶಾಸನ, ಸಂವಿಧಾನದ ಕನಸಿನ ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವ ಆಡಳಿತ ನೀತಿಗಳು ಇವೆಲ್ಲವೂ ಆಂದೋಲನಜೀವಿಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ. ಸಹಜವೇ ಅಲ್ಲವೇ “ ದೇಶ ಎಂದರೆ ಮಣ್ಣಲ್ಲವೋ ಮನುಷ್ಯರು ” ಎಂಬ ಕವಿವಾಣಿ ನಿಜ ಅಲ್ಲವೇ ?

ದೇಶದ ಆಡಳಿತ ನಿರ್ವಹಿಸುವವರ ನೈತಿಕ ನೆಲೆ ಪರಿಶುದ್ಧವಾಗಿರಬೇಕು, ವ್ಯಕ್ತಿಗತ ಹಿನ್ನೆಲೆ ದೋಷಮುಕ್ತವಾಗಿರಬೇಕು, ವೈಯಕ್ತಿಕ ನೆಲೆ ಪ್ರಾಮಾಣಿಕವಾಗಿರಬೇಕು. ಹೀಗಿದ್ದಾಗ ಮಾತ್ರ ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಕಾಪಾಡಲು ಸಾಧ್ಯ. ಸಾರ್ವಭೌಮ ಪ್ರಜೆಗಳ ಅಮೂಲ್ಯ ಮತಗಳನ್ನು ಪಡೆದು ವಿಧಾನಸಭೆ, ಸಂಸತ್ತನ್ನು ಪ್ರವೇಶಿಸುವ ಜನಪ್ರತಿನಿಧಿಗಳು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಂಡರೆ ಶಾಸನಸಭೆಗಳು ತಮ್ಮ ಮೌಲ್ಯವನ್ನು ಕಳೆದುಕೊಳ್ಳುತ್ತವೆ.

ಇತ್ತೀಚಿನ ದಿನಗಳಲ್ಲಿ ಇದನ್ನು ಗಮನಿಸುತ್ತಲೇ ಬಂದಿದ್ದೇವೆ. ಗುಂಡಿಟ್ಟು ಕೊಲ್ಲುವವರು, ತಲೆ ಕಡಿಯುವವರು, ಸಮುದ್ರಕ್ಕೆ ಎಸೆಯುವವರು, ಕೈಕಾಲು ಕತ್ತರಿಸುವವರು ಅಧಿಕಾರಪೀಠಗಳನ್ನು ಅಲಂಕರಿಸುತ್ತಿದ್ದಾರೆ. ಶಾಸನಸಭೆಗಳ ಅಂಗಳದಲ್ಲಿ ಸಚ್ಚಾರಿತ್ರ್ಯದ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುತ್ತಿರುವಂತೆಲ್ಲಾ, ಸಭ್ಯ ನಡತೆ, ಸೌಜನ್ಯಯುತ ಮಾತು, ಸಂವೇದನಾಶೀಲ ವರ್ತನೆ ಮತ್ತು ಮಾನವೀಯ ಧೋರಣೆ ಕ್ಷೀಣಿಸುವುದು ಸಹಜ. ಈ ದುರಂತ ಸನ್ನಿವೇಶವನ್ನು ನಾವು ಎದುರಿಸುತ್ತಿದ್ದೇವೆ.

ಈ ಮೌಲ್ಯರಹಿತ ಭೂಮಿಕೆಯ ಮೇಲೆ ನಿಂತು, ತಮ್ಮ ಹಕ್ಕುಗಳಿಗಾಗಿ, ಅಸ್ಮಿತೆ ಅಸ್ತಿತ್ವಗಳಿಗಾಗಿ , ತಮ್ಮ ಭವಿಷ್ಯಕ್ಕಾಗಿ ಹೋರಾಡುವ ಪ್ರಜೆಗಳನ್ನು ‘ ಆಂದೋಲನಜೀವಿಗಳು ’ ಎಂದು ಮೂದಲಿಸುವುದು ಪ್ರಧಾನಮಂತ್ರಿಗಳ ಸ್ಥಾನಕ್ಕೆ ಶೋಭೆ ತರುವಂತಹುದಲ್ಲ.

ಪ್ರಧಾನಿಗಳ ಈ ಹೇಳಿಕೆ ಕೊರೋನಾಗಿಂತಲೂ ಶೀಘ್ರವಾಗಿ ವ್ಯಾಪಿಸಿದ್ದು ತೆಲಂಗಾಣದ ಮುಖ್ಯಮಂತ್ರಿ ಹೋರಾಟನಿರತ ಮಹಿಳೆಯರನ್ನು ನಾಯಿಗಳಿಗೆ ಹೋಲಿಸಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡುತ್ತಿದ್ದ ಕೆ ಚಂದ್ರಶೇಖರ್ ರಾವ್ ತಮ್ಮ ಹಕ್ಕೊತ್ತಾಯಗಳಿಗಾಗಿ ಮನವಿ ಸಲ್ಲಿಸಲು ನೆರೆದಿದ್ದ ಮಹಿಳೆಯರನ್ನು ಉದ್ದೇಶಿಸಿ “ ನೀವು ಈಗ ಅರ್ಜಿ ಸಲ್ಲಿಸಿದ್ದೀರಿ ಈಗ ಇಲ್ಲಿಂದ ಹೊರಡಿ, ನೀವು ಇಲ್ಲಿಯೇ ಇರಲು ಬಯಸಿದರೆ ಮೌನದಿಂದಿರಿ.

ಅನಗತ್ಯವಾಗಿ ನೀವು ಏಟು ತಿನ್ನಬೇಕಾಗುತ್ತದೆ. ನಿಮ್ಮಂತಹ ಸಾಕಷ್ಟು ಜನರನ್ನು ನೋಡಿದ್ದೇವೆ, ಅಮ್ಮಾ , ನಿಮ್ಮಂತಹ ನಾಯಿಗಳು ಸಾಕಷ್ಟಿವೆ ಇಲ್ಲಿಂದ ಹೊರಡಿ ” ಎಂದು ಹೇಳಿದ್ದಾರೆ.(ಟೈಮ್ಸ್ ಆಫ್ ಇಂಡಿಯಾ-11-2-21). ಲಕ್ಷಾಂತರ ಆಂದೋಲನಜೀವಿಗಳ ಹೋರಾಟದ ಫಲಾನುಭವಿಯಾಗಿ ಅಧಿಕಾರಪೀಠದಲ್ಲಿರುವ ಓರ್ವ ಮುಖ್ಯಮಂತ್ರಿಯ ಕಣ್ಣಿಗೆ ಇಂದಿನ ಆಂದೋಲನಜೀವಿಗಳು ನಾಯಿಗಳಂತೆ ಕಾಣುತ್ತಾರೆ. ಇದು ಈ ದೇಶದ ದುರಂತ.

ಭಾರತದ ಸಂವಿಧಾನವನ್ನು ಮುನ್ನಡೆಸಿಕೊಂಡು ಹೋಗುವವರು ತಮ್ಮ ನಡತೆ, ಧೋರಣೆ, ಚಾರಿತ್ರ್ಯ ಮತ್ತು ಸದ್ಗುಣಗಳ ಮೂಲಕ ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿದ್ದರೆ ಮಾತ್ರ ಈ ದೇಶದಲ್ಲಿ ಪ್ರಜಾತಂತ್ರ ಉಳಿಯಲು ಸಾಧ್ಯ ಎನ್ನುವುದನ್ನು ಇನ್ನಾದರೂ ನಾವು ಅರ್ಥಮಾಡಿಕೊಳ್ಳಬೇಕಿದೆ.

ಸ್ವಾತಂತ್ರ್ಯೋತ್ತರ ಭಾರತದಲ್ಲಿ ಇಂತಹ ಉದಾತ್ತ ಚಿಂತನೆಯ ನಾಯಕರು ಇದ್ದುದರಿಂದಲೇ ಭಾರತ ತನ್ನ ಮೌಲ್ಯಗಳನ್ನು ಕೊಂಚಮಟ್ಟಿಗಾದರೂ ಉಳಿಸಿಕೊಂಡುಬಂದಿದೆ. ಸರ್ಕಾರದ ಆಡಳಿತ ನೀತಿಗಳ ವಿರುದ್ಧ, ಜನಸಾಮಾನ್ಯರ ಸಾಂವಿಧಾನಿಕ ಹಕ್ಕುಗಳಿಗಾಗಿ ದನಿ ಎತ್ತುವ, ಹೋರಾಡುವ ಪ್ರಜೆಗಳನ್ನು ‘ ಆಂದೋಲನಜೀವಿಗಳು ’ ಎಂದು ಮೂದಲಿಸುವ ಒಂದು ಸರ್ಕಾರ ಈ ಮೌಲ್ಯಗಳನ್ನು ಸಂರಕ್ಷಿಸಲು ಸಾಧ್ಯವೂ ಇಲ್ಲ, ಅರ್ಹವೂ ಅಲ್ಲ.

ಈ ವಿಕೃತ ಮನಸ್ಥಿತಿಯ ಆಡಳಿತವ ವ್ಯವಸ್ಥೆಯಲ್ಲೇ “ ಭಾರತದ ಪ್ರಜೆಗಳಾದ ನಾವು,,, ನಮಗೆ ನಾವೇ ಅರ್ಪಿಸಿಕೊಂಡಿರುವ ” ಸಂವಿಧಾನವನ್ನು ರಕ್ಷಿಸಲು ನಿರಂತರ ಆಂದೋಲನಗಳ ಹೊಸ ಯುಗವನ್ನು ಪ್ರವೇಶಿಸಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು 

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.

ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ  ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’  ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ  ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು.  ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.

ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ  ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.

ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್‌ ಕುಮಾರ್‌, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್‌ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ

Published

on

ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.

ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.

ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending