ರಾಜಕೀಯ
ಮೌನ ಜೀವಿಯ ತತ್ವವೂ ಆಂದೋಲನಜೀವಿಯ ಸತ್ವವೂ
- ನಾ ದಿವಾಕರ
ಮಾನವನ ಉಗಮ ಮತ್ತು ಅಭ್ಯುದಯದ ಇತಿಹಾಸವನ್ನು ಅರಿತಿರುವ ಯಾರಿಗೇ ಆದರೂ ಒಂದು ಅಂಶ ತಿಳಿದಿರಲೇಬೇಕು. ಅದೇನೆಂದರೆ, ಮಾನವನಲ್ಲಿ ಸ್ವಾಭಾವಿಕವಾದ ಆಂದೋಲನದ ತುಡಿತ ಮತ್ತು ಸಂವೇದನೆ ಇಲ್ಲದೆ ಹೋಗಿದ್ದಲ್ಲಿ ಬಹುಶಃ ಮನುಕುಲ ಶಿಲಾಯುಗದಿಂದ ಒಂದು ಹೆಜ್ಜೆಯೂ ಮುಂದೆ ಚಲಿಸಲಾಗುತ್ತಿರಲಿಲ್ಲ.
ತನಗೆ ಹಸಿವಾಗುವುದನ್ನು ಹೇಳಲಾರದೆ ರಚ್ಚೆ ಹಿಡಿಯುವ ಎಳೆ ಕೂಸಿನ ಅಳು ಸಹ ಒಂದು ರೀತಿಯ ಆಂದೋಲನವೇ. ಅಂಬೆಗಾಲಿನ ಹಂತವನ್ನು ದಾಟಿ ಹೆಜ್ಜೆ ಹಾಕಲು ಕಲಿಯುವ ಹಸುಳೆ ಬೀಳುತ್ತಾ, ಏಳುತ್ತಾ , ಗಾಯ ಮಾಡಿಕೊಳ್ಳುತ್ತಾ ನಡೆಯುವ ಪ್ರಕ್ರಿಯೆಯೂ ಒಂದು ರೀತಿಯ ಆಂತರಿಕ ಆಂದೋಲನವೇ. ಅಂದರೆ, ಮಾನವ ತನ್ನ ಅಭ್ಯುದಯದ ಹಾದಿಯಲ್ಲಿ ಸ್ಥಾಪಿತ ನೆಲೆಯ ವಿರುದ್ಧ ಬಂಡಾಯ ಹೂಡುತ್ತಲೇ ತನ್ನ ಮುನ್ನಡೆ ಸಾಧಿಸಲೆತ್ನಿಸುತ್ತಾನೆ.
ತನಗೆ ನ್ಯಾಯಯುತವಾಗಿ ದಕ್ಕಬೇಕಾಗಿರುವುದನ್ನು, ತನ್ನಿಂದ ಕಸಿದುಕೊಳ್ಳಲಾಗಿರುವುದನ್ನು, ತನಗೆ ವಂಚಿಸಲಾಗಿರುವುದನ್ನು ಮತ್ತು ತನ್ನ ಸ್ವಾಭಾವಿಕ ಹಕ್ಕುಗಳನ್ನು ಸಾಧಿಸಲು ಮನುಷ್ಯ ವ್ಯಕ್ತಿಗತ ನೆಲೆಯಲ್ಲಿ, ಸಾಮುದಾಯಿಕ ನೆಲೆಯಲ್ಲಿ, ಸಾಂಘಿಕ ನೆಲೆಯಲ್ಲಿ ವೈಯಕ್ತಿಕವಾಗಿ, ಸಾಮುದಾಯಿಕವಾಗಿ, ಸಾಂಸ್ಥಿಕವಾಗಿ ಆಂದೋಲನಗಳ ಮೂಲಕವೇ ಪ್ರಯತ್ನಿಸುತ್ತಾ ಬಂದಿದ್ದಾನೆ.
ಮಾನವ ಸಮಾಜ ಇಂದು ಪ್ರಜಾತಂತ್ರ, ಗಣತಂತ್ರ, ಸಂವಿಧಾನ, ಕಾನೂನು ಕಟ್ಟಳೆ ಮುಂತಾದ ನಾಗರಿಕ ಸಮಾಜದ ರೀತಿ ರಿವಾಜುಗಳನ್ನು ರೂಢಿಸಿಕೊಂಡು, ಮೈಗೂಡಿಸಿಕೊಂಡು ನಡೆದು ಬಂದಿದ್ದರೆ ಅದರ ಹಿಂದೆ ಶತಮಾನಗಳಿಂದಲೂ ನಡೆದು ಬಂದ ಜನಾಂದೋಲನಗಳಿವೆ, ಚಳುವಳಿಗಳ ಇತಿಹಾಸವಿದೆ, ಪ್ರತಿರೋಧ ಪ್ರತಿಭಟನೆಯ ಪರಂಪರೆ ಇದೆ.
ಗುಲಾಮಗಿರಿಯ ವಿರುದ್ಧ ಮೊಟ್ಟಮೊದಲ ಬಾರಿಗೆ ದಂಗೆಯೆದ್ದು, ಪ್ರತಿರೋಧದ ಪಂಜುಗಳನ್ನು ತನ್ನ ಮುಂದಿನ ಹಲವು ಶತಮಾನಗಳ ಪೀಳಿಗೆಗೆ ಬಿಟ್ಟು ಹೋದ ಸ್ಪಾರ್ಟಕಸ್ ನಿಂದ ಹಿಡಿದು ಇತ್ತೀಚಿನ ರೈತ ಮುಷ್ಕರದವರೆಗೆ ಮಾನವ ಸಮಾಜ ಜನಾಂದೋಲನಗಳ ಮೂಲಕವೇ, ವೈಯಕ್ತಿಕ/ಸಾಂಘಿಕ ಪ್ರತಿಭಟನೆ, ಪ್ರತಿರೋಧ, ಬಂಡಾಯಗಳ ಮೂಲಕವೇ ತನ್ನ ವಿಕಾಸವನ್ನು ಕಂಡಿದೆ.
ಬಹುಶಃ ಈ ಇತಿಹಾಸದ ವಿಭಿನ್ನ ಕಾಲಘಟ್ಟಗಳಲ್ಲಿ, ವಿಭಿನ್ನ ನೆಲೆಗಳಲ್ಲಿ ಈ ಪ್ರತಿರೋಧದ ದನಿಗಳು ದಾಖಲಾಗದೆ ಹೋಗಿದ್ದರೆ 21ನೆಯ ಶತಮಾನದ ಮನುಕುಲ ಶಿಲಾಯುಗದ ಅಥವಾ ಗುಲಾಮಿ ಸಮಾಜದಲ್ಲೇ ಉಳಿದುಬಿಡುತ್ತಿತ್ತು.
ಆಂದೋಲನಗಳ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿ ನಾಗರಿಕ ಸಮಾಜದ ವಿಕಸನಕ್ಕೆ ಕಾರಣವಾಗುವ ಮನುಷ್ಯರನ್ನು ಒಂದು ‘ ತಳಿ ’ ಎಂದು ಮೂದಲಿಸುವ, ಆಂದೋಲನಜೀವಿಗಳು ಎಂದು ಹೀಗಳೆಯುವ ಪ್ರಧಾನಮಂತ್ರಿಗಳು ಇತಿಹಾಸದ ಪುಟಗಳನ್ನು ಒಮ್ಮೆಯಾದರೂ ತಿರುವಿಹಾಕುವುದು ಒಳಿತು.
ಆಂದೋಲನಜೀವಿಗಳ ಈ ತಳಿ ತನ್ನ ಜೀವವಂತಿಕೆಯನ್ನು ಕಾಪಾಡಿಕೊಂಡು ಬಂದಿರುವುದರಿಂದಲೇ ಇಂದು ಭಾರತದಲ್ಲಿ ಒಂದು ಸಂವಿಧಾನ, ಪ್ರಜಾತಂತ್ರ ಮತ್ತು ಸಮಾನತೆಯ ಕನಸುಗಳು ಜೀವಂತವಾಗಿವೆ.
ಈ ತಳಿಯ ಇತಿಹಾಸ ಮತ್ತು ಪರಂಪರೆ ಮನುಕುಲದ ಇತಿಹಾಸದಷ್ಟೇ ಹಳೆಯದು, ಅಷ್ಟೇ ಅಮೂಲ್ಯವಾದುದಲ್ಲವೇ ? ಟಿಪ್ಪುಸುಲ್ತಾನನಿಂದ ಆರಂಭವಾಗಿ, 1857ರ ಸ್ವಾತಂತ್ರ್ಯ ಸಂಗ್ರಾಮವನ್ನು ಹಾದು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಜೀವ, ಜೀವನ, ಜೀವನೋಪಾಯ ಎಲ್ಲವನ್ನೂ ಕಳೆದುಕೊಂಡ ಲಕ್ಷಾಂತರ ಜೀವಿಗಳು ಈ ತಳಿಗೇ ಸೇರಿದವರು.
ದುರಂತ ಎಂದರೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಂತತಿಯನ್ನು ಪ್ರತಿನಿಧಿಸದ ಒಂದು ಪೀಳಿಗೆ ಇಂದು ದೇಶ ಮತ್ತು ದೇಶಪ್ರೇಮದ ನಿಷ್ಕರ್ಷೆ ಮಾಡುತ್ತಿದೆ. ಈ ಪೀಳಿಗೆಯ ಕೂಸುಗಳು ಆಂದೋಲನಜೀವಿಗಳನ್ನು ಅಪಮಾನಿಸುತ್ತಿವೆ.
ಬುದ್ಧನ ಸಾತ್ವಿಕ ಆಂದೋಲನದಿಂದ ಅಂಬೇಡ್ಕರರ ತಾತ್ವಿಕ ಪ್ರಜಾಂದೋಲನದವರೆಗಿನ ಹೆಜ್ಜೆಗುರುತುಗಳನ್ನು ಗಮನಿಸಿದ್ದರೆ ಅಥವಾ ಶತಮಾನಗಳ ಅಸಮಾನತೆ ಮತ್ತು ತಾರತಮ್ಯಗಳ ಪಳೆಯುಳಿಕೆಗಳನ್ನು ಇಂದಿಗೂ ಉಳಿಸಿಕೊಂಡು ಬಂದಿರುವ ಭಾರತೀಯ ಸಮಾಜದಲ್ಲಿನ ಚಾರಿತ್ರಿಕ ಪ್ರತಿರೋಧದ ದನಿಗಳನ್ನು, ಹೋರಾಟಗಳನ್ನು, ಜನಾಂದೋಲನಗಳನ್ನು ಗಮನಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ‘ ತಳಿ ’ ಎನ್ನುವ ಪದ ಬಳಸುವ ಬದಲು ಪರಂಪರೆ, ನಾಗರಿಕತೆ ಎಂಬ ಮೌಲಿಕ ಪದವನ್ನು ಬಳಸುತ್ತಿದ್ದರು.
ಅಸ್ಪೃಶ್ಯತೆ, ಬಾಲ್ಯ ವಿವಾಹ ಮುಂತಾದ ಅನಿಷ್ಟ ಪದ್ಧತಿಗಳನ್ನು ಇಂದಿಗೂ ಜೀವಂತವಾಗಿರಿಸಿಕೊಂಡು ಬಂದಿರುವ ಭಾರತೀಯ ಸಮಾಜದಲ್ಲಿ ಆಂದೋಲನ ನಾಗರಿಕತೆಯ ಒಂದು ಭಾಗವಾಗಿ ಬೆಳೆದುಬಂದಿರುವುದನ್ನು ಅರಿತಿದ್ದರೆ ‘ ಆಂದೋಲನಜೀವಿ ’ ಎನ್ನುವ ಲೇವಡಿಯ ಮಾತುಗಳು ಹೊರಬರುತ್ತಿರಲಿಲ್ಲ.
ನಿಜ, ಭಾರತದಲ್ಲಿ ‘ ಅಂದೋಲನಜೀವಿಗಳ ’ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಾಗಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯಗಳ ವಿರುದ್ಧ, ಮಹಿಳೆಯರ ಘನತೆಗಾಗಿ, ಹೆಣ್ತನದ ರಕ್ಷಣೆಗಾಗಿ, ಅಸ್ಪೃಶ್ಯತೆ ಮತ್ತು ಜಾತಿ ದೌರ್ಜನ್ಯದ ವಿರುದ್ಧ, ಸಾಮಾಜಿಕ ಅನ್ಯಾಯಗಳ ವಿರುದ್ಧ ಆಂದೋಲನಜೀವಿಗಳ ಒಂದು ಪರಂಪರೆಯೇ ಇಲ್ಲಿ ಬೆಳೆದುಬಂದಿದೆ.
ಬಸವಣ್ಣನಿಂದ ಅಂಬೇಡ್ಕರ್ ವರೆಗೆ ಈ ಪರಂಪರೆ ಬೆಳೆಯುತ್ತಲೇ ಬಂದಿದೆ. ಮಾರ್ಕ್ಸ್, ಲೆನಿನ್, ಮಾವೋ, ಫುಲೆ, ಗಾಂಧಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್ ಹೀಗೆ ಮಹಾನ್ ಚಿಂತಕರ ಸಂತತಿ ಮತ್ತು ವಿಚಾರಧಾರೆ ಈ ಪರಂಪರೆಯನ್ನು ಪೋಷಿಸುತ್ತಾ ಬಂದಿದೆ.
ಇದು ಯಾವುದೇ ವೈಜ್ಞಾನಿಕ ಪ್ರಯೋಗಾಲಯದಲ್ಲಿ ಸೃಷ್ಟಿಸಿದ ತಳಿ ಅಲ್ಲ. ಇದು ಶತಮಾನಗಳ ಅನ್ಯಾಯಗಳ ವಿರುದ್ಧ ಜನಮಾನಸದ ನಡುವೆ ಸೃಷ್ಟಿಯಾಗಿರುವ ಸಂಘರ್ಷದ ಪರಂಪರೆಗಳು, ಹೋರಾಟದ ವಾಹಿನಿಗಳು, ಜನಾಂದೋಲನದ ಸಾಗರಗಳು.
ವಸಾಹತು ದಾಸ್ಯದಿಂದ ವಿಮೋಚನೆ ಪಡೆದ ನಂತರ ವಿಶ್ವದ ಅತ್ಯುತ್ತಮ ಸಂವಿಧಾನವನ್ನು ರಚಿಸಿ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಾಧಿಸುವ ನಿಟ್ಟಿನಲ್ಲಿ 73 ವರ್ಷಗಳ ಸ್ವತಂತ್ರ ಅಡಳಿತ ನಡೆಸಿದ ನಂತರವೂ ಭಾರತದಲ್ಲಿ ಆಂದೋಲನಜೀವಿಗಳು ಸಕ್ರಿಯರಾಗಿದ್ದರೆ ಅದು ಆಡಳಿತ ವ್ಯವಸ್ಥೆ ಮತ್ತು ಆಳುವ ವರ್ಗಗಳು ನಾಚಿಕೆಪಡಬೇಕಾದ ವಿಚಾರ.
ಸಂವಿಧಾನದ ಆಶಯದಂತೆ ಸಮಸಮಾಜವನ್ನು ಕಟ್ಟುವ ಪ್ರಕ್ರಿಯೆಯಲ್ಲಿ, ಶೋಷಣೆ ಮುಕ್ತ, ದೌರ್ಜನ್ಯ ಮುಕ್ತ, ಭ್ರಷ್ಟಾಚಾರ ಮುಕ್ತ, ಸಂವೇದನಾಶೀಲ ಸಮಾಜ ನಿರ್ಮಾಣಕ್ಕಾಗಿ ಈ ದೇಶದ ಆಳುವ ವರ್ಗಗಳು, ರಾಜಕೀಯ ಪಕ್ಷಗಳು ಸಂವಿಧಾನ ಬದ್ಧತೆ ಮತ್ತು ಪ್ರಜಾತಂತ್ರ ನಿಷ್ಠೆಯಿಂದ ಶ್ರಮಿಸಿದ್ದರೆ ಬಹುಶಃ ಆಂದೋಲನಜೀವಿಗಳೂ ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಪ್ರತಿಭಟನೆ, ಪ್ರತಿರೋಧ, ಮುಷ್ಕರ, ಧರಣಿ ಮುಂತಾದ ಸಂಘರ್ಷಗಳಲ್ಲಿ ಕಳೆಯುತ್ತಿರಲಿಲ್ಲ.
1970ರ ದಶಕದ ರೈಲ್ವೆ ಮುಷ್ಕರದಿಂದ 2020ರ ರೈತ ಮುಷ್ಕರದವರೆಗೆ, ನೆಲ್ಲಿ ಹತ್ಯಾಕಾಂಡದಿಂದ ಶಹೀನ್ ಭಾಗ್ವರೆಗೆ, ಮಥುರಾ ಅತ್ಯಾಚಾರ ಪ್ರಕರಣದಿಂದ ಹಥ್ರಾಸ್ವರೆಗೆ, ತುರ್ತುಪರಿಸ್ಥಿತಿಯಿಂದ ಈ ಕ್ಷಣದವರೆಗೆ ಈ ದೇಶದ ಹಾದಿ ಬೀದಿಗಳಲ್ಲಿ ನಡೆದ ಹೋರಾಟಗಳನ್ನು, ನ್ಯಾಯಾಂಗದ ಅಂಗಳದಲ್ಲಿ ನಡೆದ ಸಂಘರ್ಷಗಳನ್ನು ಗಮನಿಸಿದರೆ ಭಾರತದ ಆಳುವ ವರ್ಗಗಳು ‘ ಆಂದೋಲನಜೀವಿಗಳನ್ನು ’ ಹೇಗೆ ತುದಿಗಾಲಲ್ಲಿ ನಿಲ್ಲಿಸಿವೆ ಎಂದು ಅರ್ಥವಾಗುತ್ತದೆ.
ಶಿಕ್ಷಣ ಹಕ್ಕು, ಆಹಾರ ಹಕ್ಕು, ಅರಣ್ಯ ಹಕ್ಕು, ಮಾಹಿತಿ ಹಕ್ಕು ಹೀಗೆ ಸಾರ್ವಭೌಮ ಪ್ರಜೆಗಳ ಜೀವನ ಮತ್ತು ಜೀವನೋಪಾಯಕ್ಕೆ ಅತ್ಯವಶ್ಯವಾದ ಹಕ್ಕುಗಳನ್ನು ಸಾಂವಿಧಾನಿಕವಾಗಿ ಪ್ರಜೆಗಳಿಗೆ ಒದಗಿಸಲು ಈ ದೇಶಕ್ಕೆ ಆರು ದಶಕಗಳು ಬೇಕಾದವು. ಈ ಎಲ್ಲ ಹಕ್ಕುಗಳೂ ಆಳುವವರ ಔದಾರ್ಯದಿಂದ ಪಡೆದಿದ್ದಲ್ಲ, ಜನಪರ ಸಂಘಟನೆಗಳ, ಜನಾಂದೋಲನಗಳ ಅವಿರತ ಶ್ರಮ, ಹೋರಾಟ ಮತ್ತು ನ್ಯಾಯಯುತ ಪ್ರಯತ್ನಗಳ ಫಲವಾಗಿ ಪಡೆದದ್ದು.
ಪ್ರತಿಭಟನೆ ಮತ್ತು ಪ್ರತಿರೋಧ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಡಳಿತ ಯಂತ್ರವನ್ನು ಸುಸ್ಥಿತಿಯಲ್ಲಿಡಲು ನೆರವಾಗುವ ಪ್ರಬಲ ಅಸ್ತ್ರಗಳು. ಸರ್ವಾಧಿಕಾರಿ, ನಿರಂಕುಶ ವ್ಯವಸ್ಥೆಯಲ್ಲಿ ದಾಸ್ಯದಿಂದ ಮುಕ್ತಿಪಡೆಯಲು ಇರುವ ಮಾರ್ಗಗಳು. ಜಗತ್ತಿನ ಇತಿಹಾಸದಲ್ಲಿ ಅನೇಕಾನೇಕ ಸರ್ವಾಧಿಕಾರಿಗಳು, ನಿರಂಕುಶ ಪ್ರಭುಗಳು ಜನಾಂದೋಲನಗಳಿಗೆ ಮಣಿದು ಪದತ್ಯಾಗ ಮಾಡಿರುವುದನ್ನು ಕಂಡಿದ್ದೇವೆ, ಇಂದಿಗೂ ಕಾಣುತ್ತಿದ್ದೇವೆ.
1990 ದಶಕದಲ್ಲಿ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕಮ್ಯುನಿಸ್ಟ್ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದು, ಹಿಂದೂ ರಾಷ್ಟ್ರ ಎಂಬ ಹೆಗ್ಗಳಿಕೆಯಿದ್ದ ನೇಪಾಲದಲ್ಲಿ ರಾಜಪ್ರಭುತ್ವವನ್ನು ಕೊನೆಗೊಳಿಸಿದ್ದು ಜನಾಂದೋಲನಗಳೇ ಅಲ್ಲವೇ ? ಭಾರತದಲ್ಲಿ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ಕೊನೆಗೊಳಿಸಿದ್ದೂ ಜನಾಂದೋಲನವೇ ಅಲ್ಲವೇ ?
ಈ ಆಂದೋಲನಜೀವಿಗಳು ಇಲ್ಲದೆ ಹೋಗಿದ್ದರೆ ಭಾರತ ಮತ್ತು ವಿಶ್ವ ಹೇಗಿರುತ್ತಿತ್ತು ? ಈ ಪ್ರಶ್ನೆ ಒಂದು ಘಳಿಗೆ ಮನದಲ್ಲಿ ಸುಳಿದಿದ್ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ‘ ಅಂದೋಲನಜೀವಿ ’ ಪದವನ್ನು ಅವಹೇಳನಕಾರಿಯಾಗಿ ಬಳಸುತ್ತಿರಲಿಲ್ಲ.
ಇಂದು ಭಾರತ ಕವಲು ಹಾದಿಯಲ್ಲಿದೆ. ಇಂದಿನ ಭಾರತ ತನ್ನ ಸ್ಥಾಪಿತ ಮಾನವೀಯ ನೆಲೆಗಳಿಂದ ವಿಮುಖವಾಗುತ್ತಿದೆ, ಶತಮಾನಗಳ ಬಹುಸಂಸ್ಕೃತಿಯ ನೆಲೆಗಳನ್ನು ಅಲ್ಲಗಳೆಯುತ್ತಿದೆ, ಈ ದೇಶದ ಅಂತಃಸತ್ವವನ್ನು ಕಾಪಾಡಿಕೊಂಡು ಬಂದಿರುವ ಜನಸಂಸ್ಕೃತಿಗಳನ್ನು ನಿರಾಕರಿಸುತ್ತಿದೆ, ಸಮಾಜೋ ಸಾಂಸ್ಕೃತಿಕ ನೆಲೆಯಲ್ಲಿ ಚಾರಿತ್ರಿಕವಾಗಿ ನೆಲೆಗೊಂಡಿರುವ ಭ್ರಾತೃತ್ವದ ನೆಲೆಗಳನ್ನು ನಾಶಪಡಿಸುತ್ತಿದೆ, ಮತ್ತೊಂದೆಡೆ ಈ ದೇಶದ ಬಹುಸಂಖ್ಯಾತ ಜನತೆಯನ್ನು ಶೋಷಣೆಗೊಳಪಡಿಸುತ್ತಲೇ ಬ್ರಾಹ್ಮಣ್ಯದ ಅಧಿಕಾರಶಾಹಿ ನೆಲೆಗಳಿಗೆ ಮರುಜನ್ಮ ಕಲ್ಪಿಸುತ್ತಿದೆ.
ನವ ಭಾರತ ಪ್ರಾಚೀನ ಮನುಸ್ಮೃತಿಯ ಪರಂಪರೆಯನ್ನು ಪುನರ್ ಸ್ಥಾಪಿಸುವತ್ತ ಧಾವಿಸುತ್ತಿದೆ. ಸ್ವತಂತ್ರ ಭಾರತ ಶಿಲ್ಪಿಗಳ ಸುಂದರ ಕನಸುಗಳನ್ನು ಭಗ್ನಗೊಳಿಸಿ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹೊಸಕಿಹಾಕುವತ್ತ ದಾಪುಗಾಲು ಹಾಕುತ್ತಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲೇ ಕಳೆದ ಎರಡು ವರ್ಷಗಳಲ್ಲಿ ಪ್ರಬಲ ಜನಾಂದೋಲನಗಳು ರೂಪುಗೊಳ್ಳುತ್ತಿವೆ, ಆಂದೋಲನಜೀವಿಗಳೂ ಹೆಚ್ಚಾಗುತ್ತಿದ್ದಾರೆ.
ದೇಶದ ಶ್ರಮಜೀವಿಗಳನ್ನು, ದುಡಿಯುವ ವರ್ಗಗಳನ್ನು ಶಾಶ್ವತವಾಗಿ ಗುಲಾಮಗಿರಿಗೆ ದೂಡುವ ಕಾರ್ಮಿಕ ಸಂಹಿತೆಗಳು, ಸಮಸ್ತ ರೈತಾಪಿಯನ್ನು ಕಾರ್ಪೋರೇಟ್ ಗುಲಾಮಗಿರಿಗೆ ಒಳಪಡಿಸುವ ಮೂರು ಕರಾಳ ಕೃಷಿ ಮಸೂದೆಗಳು, ದೇಶದ ಅವಕಾಶವಂಚಿತ ಜನಸಮುದಾಯಗಳನ್ನು ಮತ್ತು ಶೋಷಿತರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹೊಸ ಶಿಕ್ಷಣ ನೀತಿ, ಶತಮಾನಗಳಿಂದ ಈ ದೇಶದಲ್ಲಿ ನೆಲೆಸಿರುವ ಜನಸಮುದಾಯಗಳನ್ನು ಹೊರದಬ್ಬುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಕಾಯ್ದೆ, ಸಂವಿಧಾನ ಈ ದೇಶದ ಸಾರ್ವಭೌಮ ಪ್ರಜೆಗಳಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಯುಎಪಿಎ ಎನ್ನುವ ಕರಾಳ ಶಾಸನ, ಸಂವಿಧಾನದ ಕನಸಿನ ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುವ ಆಡಳಿತ ನೀತಿಗಳು ಇವೆಲ್ಲವೂ ಆಂದೋಲನಜೀವಿಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ. ಸಹಜವೇ ಅಲ್ಲವೇ “ ದೇಶ ಎಂದರೆ ಮಣ್ಣಲ್ಲವೋ ಮನುಷ್ಯರು ” ಎಂಬ ಕವಿವಾಣಿ ನಿಜ ಅಲ್ಲವೇ ?
ದೇಶದ ಆಡಳಿತ ನಿರ್ವಹಿಸುವವರ ನೈತಿಕ ನೆಲೆ ಪರಿಶುದ್ಧವಾಗಿರಬೇಕು, ವ್ಯಕ್ತಿಗತ ಹಿನ್ನೆಲೆ ದೋಷಮುಕ್ತವಾಗಿರಬೇಕು, ವೈಯಕ್ತಿಕ ನೆಲೆ ಪ್ರಾಮಾಣಿಕವಾಗಿರಬೇಕು. ಹೀಗಿದ್ದಾಗ ಮಾತ್ರ ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಕಾಪಾಡಲು ಸಾಧ್ಯ. ಸಾರ್ವಭೌಮ ಪ್ರಜೆಗಳ ಅಮೂಲ್ಯ ಮತಗಳನ್ನು ಪಡೆದು ವಿಧಾನಸಭೆ, ಸಂಸತ್ತನ್ನು ಪ್ರವೇಶಿಸುವ ಜನಪ್ರತಿನಿಧಿಗಳು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಂಡರೆ ಶಾಸನಸಭೆಗಳು ತಮ್ಮ ಮೌಲ್ಯವನ್ನು ಕಳೆದುಕೊಳ್ಳುತ್ತವೆ.
ಇತ್ತೀಚಿನ ದಿನಗಳಲ್ಲಿ ಇದನ್ನು ಗಮನಿಸುತ್ತಲೇ ಬಂದಿದ್ದೇವೆ. ಗುಂಡಿಟ್ಟು ಕೊಲ್ಲುವವರು, ತಲೆ ಕಡಿಯುವವರು, ಸಮುದ್ರಕ್ಕೆ ಎಸೆಯುವವರು, ಕೈಕಾಲು ಕತ್ತರಿಸುವವರು ಅಧಿಕಾರಪೀಠಗಳನ್ನು ಅಲಂಕರಿಸುತ್ತಿದ್ದಾರೆ. ಶಾಸನಸಭೆಗಳ ಅಂಗಳದಲ್ಲಿ ಸಚ್ಚಾರಿತ್ರ್ಯದ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುತ್ತಿರುವಂತೆಲ್ಲಾ, ಸಭ್ಯ ನಡತೆ, ಸೌಜನ್ಯಯುತ ಮಾತು, ಸಂವೇದನಾಶೀಲ ವರ್ತನೆ ಮತ್ತು ಮಾನವೀಯ ಧೋರಣೆ ಕ್ಷೀಣಿಸುವುದು ಸಹಜ. ಈ ದುರಂತ ಸನ್ನಿವೇಶವನ್ನು ನಾವು ಎದುರಿಸುತ್ತಿದ್ದೇವೆ.
ಈ ಮೌಲ್ಯರಹಿತ ಭೂಮಿಕೆಯ ಮೇಲೆ ನಿಂತು, ತಮ್ಮ ಹಕ್ಕುಗಳಿಗಾಗಿ, ಅಸ್ಮಿತೆ ಅಸ್ತಿತ್ವಗಳಿಗಾಗಿ , ತಮ್ಮ ಭವಿಷ್ಯಕ್ಕಾಗಿ ಹೋರಾಡುವ ಪ್ರಜೆಗಳನ್ನು ‘ ಆಂದೋಲನಜೀವಿಗಳು ’ ಎಂದು ಮೂದಲಿಸುವುದು ಪ್ರಧಾನಮಂತ್ರಿಗಳ ಸ್ಥಾನಕ್ಕೆ ಶೋಭೆ ತರುವಂತಹುದಲ್ಲ.
ಪ್ರಧಾನಿಗಳ ಈ ಹೇಳಿಕೆ ಕೊರೋನಾಗಿಂತಲೂ ಶೀಘ್ರವಾಗಿ ವ್ಯಾಪಿಸಿದ್ದು ತೆಲಂಗಾಣದ ಮುಖ್ಯಮಂತ್ರಿ ಹೋರಾಟನಿರತ ಮಹಿಳೆಯರನ್ನು ನಾಯಿಗಳಿಗೆ ಹೋಲಿಸಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡುತ್ತಿದ್ದ ಕೆ ಚಂದ್ರಶೇಖರ್ ರಾವ್ ತಮ್ಮ ಹಕ್ಕೊತ್ತಾಯಗಳಿಗಾಗಿ ಮನವಿ ಸಲ್ಲಿಸಲು ನೆರೆದಿದ್ದ ಮಹಿಳೆಯರನ್ನು ಉದ್ದೇಶಿಸಿ “ ನೀವು ಈಗ ಅರ್ಜಿ ಸಲ್ಲಿಸಿದ್ದೀರಿ ಈಗ ಇಲ್ಲಿಂದ ಹೊರಡಿ, ನೀವು ಇಲ್ಲಿಯೇ ಇರಲು ಬಯಸಿದರೆ ಮೌನದಿಂದಿರಿ.
ಅನಗತ್ಯವಾಗಿ ನೀವು ಏಟು ತಿನ್ನಬೇಕಾಗುತ್ತದೆ. ನಿಮ್ಮಂತಹ ಸಾಕಷ್ಟು ಜನರನ್ನು ನೋಡಿದ್ದೇವೆ, ಅಮ್ಮಾ , ನಿಮ್ಮಂತಹ ನಾಯಿಗಳು ಸಾಕಷ್ಟಿವೆ ಇಲ್ಲಿಂದ ಹೊರಡಿ ” ಎಂದು ಹೇಳಿದ್ದಾರೆ.(ಟೈಮ್ಸ್ ಆಫ್ ಇಂಡಿಯಾ-11-2-21). ಲಕ್ಷಾಂತರ ಆಂದೋಲನಜೀವಿಗಳ ಹೋರಾಟದ ಫಲಾನುಭವಿಯಾಗಿ ಅಧಿಕಾರಪೀಠದಲ್ಲಿರುವ ಓರ್ವ ಮುಖ್ಯಮಂತ್ರಿಯ ಕಣ್ಣಿಗೆ ಇಂದಿನ ಆಂದೋಲನಜೀವಿಗಳು ನಾಯಿಗಳಂತೆ ಕಾಣುತ್ತಾರೆ. ಇದು ಈ ದೇಶದ ದುರಂತ.
ಭಾರತದ ಸಂವಿಧಾನವನ್ನು ಮುನ್ನಡೆಸಿಕೊಂಡು ಹೋಗುವವರು ತಮ್ಮ ನಡತೆ, ಧೋರಣೆ, ಚಾರಿತ್ರ್ಯ ಮತ್ತು ಸದ್ಗುಣಗಳ ಮೂಲಕ ಮುಂದಿನ ಪೀಳಿಗೆಗೆ ಮಾರ್ಗದರ್ಶಕರಾಗಿದ್ದರೆ ಮಾತ್ರ ಈ ದೇಶದಲ್ಲಿ ಪ್ರಜಾತಂತ್ರ ಉಳಿಯಲು ಸಾಧ್ಯ ಎನ್ನುವುದನ್ನು ಇನ್ನಾದರೂ ನಾವು ಅರ್ಥಮಾಡಿಕೊಳ್ಳಬೇಕಿದೆ.
ಸ್ವಾತಂತ್ರ್ಯೋತ್ತರ ಭಾರತದಲ್ಲಿ ಇಂತಹ ಉದಾತ್ತ ಚಿಂತನೆಯ ನಾಯಕರು ಇದ್ದುದರಿಂದಲೇ ಭಾರತ ತನ್ನ ಮೌಲ್ಯಗಳನ್ನು ಕೊಂಚಮಟ್ಟಿಗಾದರೂ ಉಳಿಸಿಕೊಂಡುಬಂದಿದೆ. ಸರ್ಕಾರದ ಆಡಳಿತ ನೀತಿಗಳ ವಿರುದ್ಧ, ಜನಸಾಮಾನ್ಯರ ಸಾಂವಿಧಾನಿಕ ಹಕ್ಕುಗಳಿಗಾಗಿ ದನಿ ಎತ್ತುವ, ಹೋರಾಡುವ ಪ್ರಜೆಗಳನ್ನು ‘ ಆಂದೋಲನಜೀವಿಗಳು ’ ಎಂದು ಮೂದಲಿಸುವ ಒಂದು ಸರ್ಕಾರ ಈ ಮೌಲ್ಯಗಳನ್ನು ಸಂರಕ್ಷಿಸಲು ಸಾಧ್ಯವೂ ಇಲ್ಲ, ಅರ್ಹವೂ ಅಲ್ಲ.
ಈ ವಿಕೃತ ಮನಸ್ಥಿತಿಯ ಆಡಳಿತವ ವ್ಯವಸ್ಥೆಯಲ್ಲೇ “ ಭಾರತದ ಪ್ರಜೆಗಳಾದ ನಾವು,,, ನಮಗೆ ನಾವೇ ಅರ್ಪಿಸಿಕೊಂಡಿರುವ ” ಸಂವಿಧಾನವನ್ನು ರಕ್ಷಿಸಲು ನಿರಂತರ ಆಂದೋಲನಗಳ ಹೊಸ ಯುಗವನ್ನು ಪ್ರವೇಶಿಸಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ2 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ3 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

