ಅಂತರಂಗ
ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು
ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.
ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ. ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.
ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.
ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.
ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.
ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.
ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243