Connect with us

ದಿನದ ಸುದ್ದಿ

ಸದ್ದಿಲ್ಲದೆ ಬದಲಾಗುತ್ತಿದೆ ಮಕ್ಕಳ ಜೀವನ ; ನೀವೇ ಹೇಳಿ, ಈ ಬದುಕು ಸರೀನಾ?

Published

on

ಸಾಂದರ್ಭಿಕ ಚಿತ್ರ
  • ಕುಮಾರಸ್ವಾಮಿ ವಿ ಕೆ,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಶಾಲೆ,ಬೆಂಗಳೂರು ಉತ್ತರ

ಳೆದ ತಿಂಗಳು ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗಿದ್ದೆ. ಹೀಗೆ ರಸ್ತೆಯಲ್ಲಿ ಸುತ್ತಾಡುವಾಗ ಒಂದಷ್ಟು ಹುಡುಗಿಯರ ಹಿಂಡು ಕಾಣಿಸಿತು. ಸಣ್ಣದೊಂದು ಟೀ ಅಂಗಡಿಯ ಮುಂದೆ ಒಬ್ಬಳಂತು ರಾಜಾರೋಷವಾಗಿ ನಿಂತು ಸಿಗರೇಟನ್ನು ಬಾಯಿಗೆ ಸಿಕ್ಕಿಸಿಕೊಂಡು ಉಗಿಬಂಡಿಯಂತೆ ನಿರಂತರವಾಗಿ ಹೊಗೆ ಬಿಡುತ್ತಿದ್ದಳು, ಮತ್ತೊಂದಷ್ಟು ಲಲನೆಯರು ಸಿಗರೇಟ್ ಸೇದಲು ಕಲಿಯಲು ಪರದಾಡುತ್ತಿದ್ದರು, ಇನ್ನೊಂದಷ್ಟು ಗುಂಪು ತಾವು ಸಿಗರೇಟ್ ಸೇದುವುದನ್ನು ಯಾರಾದರೂ ನೋಡಿಯಾರು ಎಂಬ ಆತಂಕದಲ್ಲೇ ಬಾಯಲ್ಲಿ ಹೊಗೆ ಬಿಡುತ್ತಿದ್ದರು. ಅವರ ಕೈಲಿದ್ದ ಪುಸ್ತಕಗಳು ಹೇಳುತ್ತಿದ್ದವು ಬಹುತೇಕ ಅವರೆಲ್ಲರೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರು!! ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣು ಎಂಬಂತೆ ಮೊಳಕೆಗಳು ಚೆನ್ನಾಗೇ ಕಂಡವು!!

ಘಟನೆ -2 : ಅದೊಂದು ಸರಕಾರಿ ಕಾಲೇಜು, ಒಂದಷ್ಟು ಗಂಡು ಮಕ್ಕಳು ಕಾಲೇಜಿನ ಕಾಂಪೌಂಡ್ ಗೋಡೆಯ ಮೇಲೆ ಕುಳಿತು ಬುಸ್ಸೆಂದು ಬಾಯಿ ತುಂಬಾ ಹೊಗೆ ತುಂಬಿಕೊಂಡು ಸಿನಿಮಾ ಸ್ಟೈಲ್ ನಲ್ಲಿ ಬಿಡುತ್ತಿದ್ದರು. ಅಲ್ಲೇ ಓಡಾಡುತ್ತಿದ್ದ ಶಿಕ್ಷಕ ಮಹಾಷಯರು ನೋಡಿಯೂ ನೋಡದಂತೆ ತಲೆ ತಗ್ಗಿಸಿ ಮುಂದೆ ಸಾಗಿದರು. ಎರಡು ವರ್ಷಗಳ ಶಿಕ್ಷಣದ ಅಂತರ ಮಾಡಿರುವ ಅನಾಹುತಗಳ ಪೈಕಿ ಇವು ಒಂದೆರಡು ನಿದರ್ಶನಗಳು ಅಷ್ಟೇ.

ಹೌದು ಮಕ್ಕಳ ಲೋಕದಲ್ಲಿ ಇಂತಹ ಹತ್ತು ಹಲವು ತಲ್ಲಣಗಳು ಪ್ರಾರಂಭವಾಗಿವೆ. ಕಳೆದ ಎರಡು ವರ್ಷಗಳ ಕಾಲ ಕೊರೋನಾ ಕಾರಣದಿಂದ ಶಾಲೆಗಳು ಮುಚ್ಚಿದ್ದ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಸಂಪೂರ್ಣ ಬದಲಿಸಿದೆ. ಅಂತಹ ಮಕ್ಕಳನ್ನು ಈಗ ಸಹಜ ಸ್ಥಿತಿಗೆ ತರುವುದು ಅತ್ಯಂತ ಪ್ರಾಯಾಸ ಹಾಗೂ ದೊಡ್ಡ ಮಟ್ಟದ ಸವಾಲಾಗಿದೆ.

ಹೆಚ್ಚಾಗಿದೆ ದುರ್ನಡತೆ

ಬಹುತೇಕ ಮಕ್ಕಳಲ್ಲಿ ಅವರ ವಯೋಮಾನಕ್ಕೆ ಮೀರಿದ ದುರ್ನಡತೆಗಳು ತಲೆದೋರುತ್ತಿವೆ. ಧೂಮಪಾನ, ಮದ್ಯಪಾನ, ಅಶ್ಲೀಲ ಚಿತ್ರಗಳ ವೀಕ್ಷಣೆ, ಸಮಾಜ ವಿರೋಧಿ ಕೃತ್ಯಗಳತ್ತ ಆಕರ್ಷಣೆ, ತಮಗಿಂತ ಕಿರಿಯ ವಯಸ್ಸಿನವರನ್ನು ಬೆದರಿಸುವುದು ಹೀಗೆ ಹಲವು ಭಾವನಾತ್ಮಕ ಸಮಸ್ಯೆಗಳು ಮಕ್ಕಳ ಪಾಲಿಗೆ ಮುಳ್ಳಾಗುತ್ತಿವೆ. ಈ ಹಂತದಲ್ಲಿ ಮಕ್ಕಳು ಸ್ವಲ್ಪ ಎಡವಿದರೂ ಅವರ ಭವಿಷ್ಯ ಅಲ್ಲೋಲ – ಕಲ್ಲೋಲವಾಗುವುದು‌ ನಿಶ್ಚಿತ. ಎಷ್ಟೋ ಶಾಲೆಗಳಲ್ಲಿ ಮಕ್ಕಳು ಚಾಕು, ಚೂರಿಗಳಂತ ಶಸ್ತ್ರಗಳನ್ನೂ ತರುತ್ತಿದ್ದಾರೆಂಬ ಮಾಹಿತಿ ಆತಂಕ ಮೂಡಿಸುತ್ತಿದೆ. ಇಂತಹ ಮಾನಸಿಕ ಅಸಮತೋಲನಗಳನ್ನು ಅತೀ ತುರ್ತಾಗಿ ಸರಿಪಡಿಸುವ ಕೆಲಸ ಆಗಬೇಕಿದೆ.

ಶಿಕ್ಷಣದ ಮೇಲೆ ಬಿದ್ದಿದೆ ಋಣಾತ್ಮಕ ಪರಿಣಾಮ

ಮಕ್ಕಳ ವರ್ತನೆಯಲ್ಲಿ ಆಗುತ್ತಿರುವ ಕೆಲವು ಬದಲಾವಣೆಗಳಿಂದ ಇದು ಶಿಕ್ಷಣದ ಮೇಲೂ ಸಹ ಋಣಾತ್ಮಕ ಪ್ರಭಾವ ಬೀರುತ್ತಿದೆ. ಸಹಜವಾಗಿಯೇ ಮಕ್ಕಳ ಸ್ಮರಣ ಶಕ್ತಿ ಕಡಿಮೆಯಾಗುತ್ತಿದ್ದು, ಶಿಕ್ಷಣದ ಮೇಲಿನ ಒಲವು ಕಡಿಮೆಯಾಗುತ್ತಿದೆ. ಮಕ್ಕಳು ತಮ್ಮ ಭವಿಷ್ಯದ ಗುರಿಗಳನ್ನು ಹೊಂದಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ. ಅವರ ಆಸಕ್ತಿ, ಕುತೂಹಲ ಎಲ್ಲವೂ ಕ್ರಮೇಣ ಕ್ಷೀಣಿಸುತ್ತಿದೆ. ಇಂತಹ ಪರಿಸ್ಥಿತಿಯಿಂದ ಮಕ್ಕಳನ್ನು ಸಹಜ ಸ್ಥಿತಿಗೆ ತರುವುದು ಸವಾಲೇ ಸರಿ. ಎಲ್ಲಕ್ಕಿಂತ ಹೆಚ್ಚಾಗಿ ಮಕ್ಕಳು ಶಿಕ್ಷಣದ ಕನಿಷ್ಠ ಮೂಲಭೂತ ಪರಿಕಲ್ಪನೆಗಳಿಂದಲೂ ದೂರ ಉಳಿಯುತ್ತಿರುವುದು ಬಹು ದೊಡ್ಡ ತಲೆನೋವಾಗಿದೆ.

ವಿಧೇಯತೆಯ ಮಾತೇ ಇಲ್ಲ

ಸರ್ಕಾರ ಈಗಾಗಲೇ ಶಿಕ್ಷೆ ಇಲ್ಲದ ಶಿಕ್ಷಣ ನೀಡಬೇಕೆಂಬ ಕಾನೂನು ಮಾಡಿರುವುದರಿಂದ ಮಕ್ಕಳಲ್ಲಿ ವಿಧೇಯತೆ ತೀರಾ ಕಡಿಮೆಯಾಗಿದೆ. ಶಿಕ್ಷಕರಿಗೆ ಬೆತ್ತ ಹಿಡಿದು ಹೆದರಿಸುವ ಸಾಮಾನ್ಯ ಅಧಿಕಾರವನ್ನೂ ಮೊಟಕುಗೊಳಿಸಿರುವುದು ಮಕ್ಕಳ ಅವಿಧೇಯ ನಡುವಳಿಕೆಗಳ ಮತ್ತಷ್ಟು ಕುಮ್ಮಕ್ಕು ನೀಡಿದೆ. ಈ ಪರಿಣಾಮವಾಗಿ ಅನೇಕರು ಬಾಲಾಪರಾಧಿಗಳಾಗುತ್ತಿದ್ದಾರೆ. ವಿಚಿತ್ರವೆಂದರೆ ಶಿಕ್ಷಕರೇ ಮಕ್ಕಳ ಅವಿಧೇಯ ನಡವಳಿಕೆಗಳಿಂದ ಬೆಚ್ಚಿ ಬೀಳುವಂತಾಗಿದೆ. ಏರು ಧ್ವನಿಯಲ್ಲಿ ಪ್ರತ್ಯುತ್ತರ, ಶಿಕ್ಷಕರ ಮಾತಿಗೆ ಅಗೌರವ ತೋರುವುದು, ತೋರ್ಪಡಿಕೆಯ ಗೌರವಗಳು ಸಹಜವಾಗಿ ಮಕ್ಕಳನ್ನು ಕಾಡುತ್ತಿವೆ. ಹಿಂದಿನ ಶಿಕ್ಷಣದಲ್ಲಿದ್ದ ಭಯ ಮತ್ತು ಗೌರವಗಳನ್ನು ಒಂದರ್ಥದಲ್ಲಿ ಇಂದಿನ ಕಾನೂನುಗಳೇ ಮುರಿಯುವಂತಾಗಿದೆ!

ಮೊಬೈಲ್‌ ಎಂಬ ಪೆಡಂಭೂತ

ಮಕ್ಕಳಲ್ಲಿ ಕಂಡುಬರುತ್ತಿರುವ ಬಹುತೇಕ ಅಸಹಜ ನಡವಳಿಕೆಗಳಿಕೆ ಮೊಬೈಲ್ ಎಂಬ ಮಾಯಾ ಪೆಟ್ಟಿಗೆಯ ಕಾರಣ ಹೆಚ್ಚಾಗಿದೆ. ಕ್ಷಣ ಮಾತ್ರವೂ ಮೊಬೈಲನ್ನು ಬಿಟ್ಟಿರದಂತಹ ಸ್ಥಿತಿಯನ್ನು ಅನೇಕ ಮಕ್ಕಳು ತಲುಪಿದ್ದಾರೆ. ಮಕ್ಕಳ ಕೈಲಿ ಮೊಬೈಲ್ ಇದೆ ಎಂದರೆ ಅಲ್ಲಿ ಪೋಷಕರ ಕಣ್ಣಿದ್ದರೆ ಮಾತ್ರ ಕೆಲವು ಋಣಾತ್ಮಕ ಬೆಳವಣಿಗೆಗಳನ್ನು ತಡೆಯಲು ಸಾಧ್ಯ.

ನೂರು ಜನ ವಿದ್ಯಾರ್ಥಿಗಳನ್ನು ಸರಿದಾರಿಗೆ ತರಲು ಒಬ್ಬ ಶಿಕ್ಷಕ ಪ್ರಯತ್ನಿಸುತ್ತಿರುವ ವೇಳೆ, ಅದೇ ನೂರು ಜನರನ್ನು ಕೇವಲ ಒಂದು ಮೊಬೈಲ್‌ ಫೋನ್ ದಿಕ್ಕು ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿದೆ! ಅಷ್ಟೇ ಅಲ್ಲದೆ ಎಲ್ಲಕ್ಕೂ ಮೊಬೈಲ್ ಮೇಲೆಯೇ ಅವಲಂಬಿಸುತ್ತಿರುವುದು ಮಕ್ಕಳ ಸಹಜ ಯೋಚನಾ ಶಕ್ತಿಯನ್ನು ಕ್ಷೀಣಿಸುತ್ತಿದೆ.

ಈ ಅಭ್ಯಾಸದಿಂದ ಮಕ್ಕಳನ್ನು ಬಿಡಿಸಲು ಪೋಷಕರು ಅನ್ಯ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ. ಅದೇ ಮೊಬೈಲನ್ನು ಬಳಸಿ ಮಗುವನ್ನು ಕ್ರಿಯಾತ್ಮಕವಾಗಿಸುವ ಹಾದಿಯಲ್ಲಿ ತೆರಳಬಹುದಾಗಿದೆ. ಒಂದೆರಡು ಅಂಕಗಳು ಕಡಿಮೆಯಾದರೂ ಪರವಾಗಿಲ್ಲ, ಜೀವನದ ತತ್ವಗಳು ಕ್ಷೀಣಿಸಬಾರದು. ಇರುಳು ಕಂಡ ಬಾವಿಗೆ ಹಗಲಿನಲ್ಲಿ ಮಕ್ಕಳನ್ನು ತಳ್ಳಬಾರದು. ನೆನಪಿರಲಿ ಮೊಬೈಲ್ ಎಂಬ ಮಾಯಾ ಪೆಟ್ಟಿಗೆ ಕೇವಲ ಮಕ್ಕಳ ಜೀವನಕ್ಕಷ್ಟೇ ಅಲ್ಲ, ಜೀವಕ್ಕೂ ಮಾರಕವಾಗಬಹುದು.

ಬೇಕಿದೆ ನೈತಿಕ ಶಿಕ್ಷಣ

ಶಾಲಾ ಕಾಲೇಜುಗಳಲ್ಲಿ ಇಂದು ಮಕ್ಕಳಿಗೆ ನೈತಿಕ ಶಿಕ್ಷಣದ ಅಗತ್ಯತೆ ಅಗತ್ಯವಾಗಿದೆ. ಪ್ರಸ್ತುತ ಸಮಾಜವು ದಿಕ್ಕು ತಪ್ಪಲು ಇಂದು ಹೆಚ್ಚಾಗಿ ಯುವ ಜನತೆಯೇ ಕಾರಣವಾಗುತ್ತಿರುವುದರಿಂದ ಮಕ್ಕಳಿಗೆ ಬಾಲ್ಯದಲ್ಲೇ ತಿಳುವಳಿಕೆ ನೀಡಿದಾಗ ಇಂತಹ ಆತಂಕಗಳನ್ನು ಕ್ರಮೇಣ ಕಡಿಮೆಗೊಳಿಸಲು ಸಾಧ್ಯ. ಕೆಲವು ಮಕ್ಕಳಿಗಂತೂ ತಾವೇನು ಮಾಡುತ್ತಿದ್ದೇವೆ, ತಮ್ಮ ನಡೆ ಸರಿಯೋ ತಪ್ಪೋ ಎಂಬ ಅರಿವೂ ಸಹ ಆಗುತ್ತಿಲ್ಲ.

ಅಂತಹ ಮಕ್ಕಳನ್ನು ಶೀಘ್ರವಾಗಿ ಗುರುತಿಸಿ ಅವರನ್ನು ವೈಯಕ್ತಿಕವಾಗಿ ತಿದ್ದುವ ಕೆಲಸ ಆಗಬೇಕಿದೆ. ಇಲ್ಲವಾದಲ್ಲಿ ಮುಂದಿನ ಕ್ರೂರ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾತ್ರಧಾರಿಗಳಾಗಬೇಕಿದೆ! ನೈತಿಕ ಶಿಕ್ಷಣವು ಸಾಂಪ್ರದಾಯಿಕ ಶಿಕ್ಷಣದ ಒಂದು ಪ್ರಮುಖ ಭಾಗವಾಗಬೇಕಿದೆ. ಮಗುವನ್ನು ಕೇವಲ ಅಂಕ ಗಳಿಕೆಯ ಯಂತ್ರವನ್ನಾಗಿಸದೆ, ಅದನ್ನು ಸರಿಯಾದ ಕ್ರಮದಲ್ಲಿ ಸಮಾಜಕ್ಕೆ ಪರಿಚಯಿಸುವ ತಂತ್ರಗಳನ್ನು ಹೆಣೆಯಬೇಕಿದೆ.

ಪೋಷಕರ ನಿಗಾ ತುಂಬಾ ಅಗತ್ಯ

ಶಾಲಾ ಕಾಲೇಜುಗಳಿಗೆ ಹೋಗುತ್ತಿರುವ ತಮ್ಮ ಮಕ್ಕಳ ನಡವಳಿಕೆಗಳನ್ನು ಗಮನಿಸುವುದು ಎಲ್ಲಾ ಪೋಷಕರ ಆದ್ಯ ಕರ್ತವ್ಯವಾಗಿದೆ. ಆದರೆ ಆಧುನಿಕ ಜೀವನ ಶೈಲಿಯ ನಡುವೆ ಪೋಷಕರು ಕೇವಲ ದುಡಿಯುವ ಯಂತ್ರದಂತಾಗುತ್ತಿದ್ದಾರೆ. ತಮ್ಮ ಮಕ್ಕಳಲ್ಲಾಗುತ್ತಿರುವ ಕನಿಷ್ಠ ಋಣಾತ್ಮಕ ನಡವಳಿಕೆಗಳನ್ನು ಗುರುತಿಸುವಲ್ಲಿ ಹೆಚ್ಚು ಪೋಷಕರು ವಿಫಲವಾಗುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕ, ಪಠ್ಯ ವಸ್ತು ಹಾಗೂ ಪೋಷಕರ ನಡುವಿನ ಸಂಬಂಧಗಳು ಸರಿಯಾದ ಪ್ರಮಾಣದಲ್ಲಿ ಮಿಶ್ರಣವಾಗದ ಹೊರತು ನಿರೀಕ್ಷಿತ ಫಲಗಳನ್ನು ಪಡೆಯಲು ಸಾಧ್ಯವಿಲ್ಲ.

ಹೀಗಾಗಿ ಮನೆಯೇ ಮೊದಲ ಪಾಠಶಾಲೆ ಎಂಬಂತೆ ತಾಯಂದಿರು ಈ ಬಗ್ಗೆ ಹೆಚ್ಚಿನ ಆಸ್ತೆ ವಹಿಸಬೇಕಿದೆ. ಸುಮಾರು ಮಂದಿ ಪೋಷಕರು ಎಲ್ಲದಕ್ಕೂ ಶಾಲೆಯನ್ನೇ ಹೊಣೆ ಮಾಡುವ ಚಾಳಿ ಮುಂದುವರಿಸುವುದರಿಂದ ತಮ್ಮ ಮಕ್ಕಳ ತಪ್ಪುಗಳನ್ನು ಅರಿಯುವಲ್ಲಿ ವಿಫಲರಾಗುತ್ತಿದ್ದಾರೆ.

ಎಲ್ಲ ಶಿಕ್ಷಕರ ಸಂಯೋಜನೆ

ಶಾಲೆಗಳಲ್ಲಿ ಮಕ್ಕಳ ಮನೋವಿಕಾಸದ ನಿಮಿತ್ತ ಆಗುತ್ತಿರುವ ಬದಲಾವಣೆಗಳನ್ನು ಸರಿಪಡಿಸುವಲ್ಲಿ ಎಲ್ಲಾ ಶಿಕ್ಷಕರ ಸಂಯೋಜನೆ ಅತ್ಯಗತ್ಯ. ಮಕ್ಕಳ ನಡವಳಿಕೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಅದಕ್ಕೆ ಸೂಕ್ತ ಪರಿಹಾರ ಒದಗಿಸುವಲ್ಲಿ ಶಿಕ್ಷಕರ ಪಾತ್ರ ಹೆಚ್ಚಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಹಡಗನ್ನು ಮುನ್ನಡೆಸುವ ನಾವಿಕನಂತಿರುವ ಶಿಕ್ಷಕರು ಬಾಲ್ಯದಲ್ಲೇ ಬೇಡದ ಚಟುವಟಿಕೆಗಳನ್ನು ಚಿವುಟಿದಾಗ ಮಾತ್ರ ಸದೃಢ ಸಮಾಜವನ್ನು ನಿರ್ಮಿಸಲು ಸಾಧ್ಯ.

ಆತ್ಮಹತ್ಯೆಯ ಬೆದರಿಕೆಗಳು

ತಮ್ಮ ಪೋಷಕರನ್ನು ಬೆದರಿಸಲೆಂದು ಅಥವಾ ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳುವಲ್ಲಿ ಅಸಮತೋಲನ ಏರ್ಪಟ್ಟಾಗ ಸುಮಾರು ಮಕ್ಕಳು ತಮ್ಮ ಪೋಷಕರಿಗೆ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಭಯ ಹುಟ್ಟಿಸುವ ನಿದರ್ಶನಗಳೂ ಇವೆ. ಮಕ್ಕಳನ್ನು ಮಕ್ಕಳಂತೆಯೇ ನೋಡುವ ಮನೋಭಾವವನ್ನು ತೊರೆದರ ಪರಿಣಾಮ ಇದಾಗಿದೆ. ಯಾರಿಗೆ ಕಷ್ಟಗಳ ಅರಿವು ಆಗುವುದಿಲ್ಲವೋ, ಓದುವ ವೇಳೆ ಎಲ್ಲ ಸೌಕರ್ಯಗಳು ಕ್ಷಣಮಾತ್ರದಲ್ಲಿ ಸಿಗುತ್ತಿವೆಯೋ ಅಂತಹ ಮಕ್ಕಳ ಭಾವನಾತ್ಮಕ ಆಲೋಚನೆಗಳು ಮಿತಿ ಮೀರುತ್ತಿವೆ. ಆದರೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಹೆತ್ತವರು ಮಾತ್ರ ನಿರಾಳವಾಗಿ ಸಾಗುತ್ತಿದ್ದಾರೆ.

(ಕುಮಾರಸ್ವಾಮಿ ವಿ ಕೆ
ಪ್ರೌಢಶಾಲಾ ಮುಖ್ಯ ಶಿಕ್ಷಕರು
ಸಿದ್ಧಾರ್ಥ ಆಂಗ್ಲ ಶಾಲೆ
ಬೆಂಗಳೂರು ಉತ್ತರ
ಮೊ : 9113906120)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending