Connect with us

ಬಹಿರಂಗ

ಸಾಮಾಜಿಕ ಪ್ರಜ್ಞೆಯೂ ಸಾಂಸ್ಕೃತಿಕ ಭೂಮಿಕೆಗಳೂ

Published

on


ಬೌದ್ಧಿಕ ಆಲೋಚನಾಕ್ರಮವನ್ನು ಮೊಳಕೆಯಲ್ಲೇ ಚಿವುಟುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ.


  • ನಾ ದಿವಾಕರ

ಳುವ ವರ್ಗಗಳು ಸದಾ ಸಮಾಜದಲ್ಲಿನ ಪ್ರಬಲ ವರ್ಗಗಳ ಭಾಷೆಯಲ್ಲೇ ಮಾತನಾಡಲಿಚ್ಚಿಸುತ್ತದೆ. ಪ್ರಜಾಪ್ರಭುತ್ವದಲ್ಲೂ ಸಹ ಸಾಂವಿಧಾನಿಕ ಮಾರ್ಗಗಳ ಮೂಲಕವೇ ಪ್ರಬಲ ವರ್ಗಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಗಳಿರುವುದರಿಂದ ಆಡಳಿತ ವ್ಯವಸ್ಥೆಯ ಎಲ್ಲ ಕವಲುಗಳಲ್ಲೂ ಇದೇ ವರ್ಗಗಳ ಅಭಿಪ್ರಾಯ, ಪ್ರತಿಪಾದನೆ ಮತ್ತು ತಾತ್ವಿಕ ನೆಲೆಗಳು ತಮ್ಮ ಪಾರಮ್ಯ ಕಂಡುಕೊಳ್ಳುತ್ತವೆ.

ವರ್ತಮಾನ ಭಾರತದ ಸಂದರ್ಭದಲ್ಲಿ ಈ ವರ್ಗಗಳನ್ನು ನಾವು ಮೂರು ಮಜಲುಗಳಲ್ಲಿ ಗುರುತಿಸಬಹುದು. ಮೊದಲನೆಯದು ಊಳಿಗಮಾನ್ಯ ವ್ಯವಸ್ಥೆಯ ಪಳೆಯುಳಿಕೆಗಳಾಗಿಯೇ ಈಗ ಕಾರ್ಪೋರೇಟ್‌ ಮಾರುಕಟ್ಟೆಯ ವಾರಸುದಾರರಾಗಿ ರೂಪಾಂತರಗೊಂಡಿರುವ ಔದ್ಯಮಿಕ ವರ್ಗ. ಎರಡನೆಯದು ಪ್ರಜಾಪ್ರಭುತ್ವದ ನೆರಳಿನಲ್ಲೇ, ಸಾಂವಿಧಾನಿಕ ಮಾರ್ಗದಲ್ಲೇ ಜನಪ್ರಾತಿನಿಧ್ಯದ ವಾರಸುದಾರಿಕೆ ವಹಿಸಿಕೊಂಡಿರುವ ಅಧಿಕಾರ ರಾಜಕಾರಣದ ಉತ್ತರಾಧಿಕಾರಿಗಳು.

ಮೂರನೆಯದು ಶ್ರೇಣೀಕೃತ ಜಾತಿ ವ್ಯವಸ್ಥೆಯನ್ನು ಆಧುನಿಕತೆಯ ಕವಚದೊಂದಿಗೆ ಯಥಾವತ್ತಾಗಿ ಕಾಪಾಡಿಕೊಂಡು ಬಂದಿರುವ ಸಾಂಸ್ಕೃತಿಕ ಆಧಿಪತ್ಯದ ವಾರಸುದಾರರು. ಈ ಮೂರೂ ವರ್ಗಗಳನ್ನು ಚುನಾವಣಾ ರಾಜಕಾರಣದ ಅಂಗಳದಲ್ಲಿ ಪ್ರತ್ಯೇಕಿಸಬಹುದಾದರೂ, ಪ್ರಭುತ್ವದ ಆಡಳಿತ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಏಕಾಭಿಪ್ರಾಯ ಹೊಂದಿರುವ ಒಂದು ಗುಂಪಾಗಿ ಕಾಣಬಹುದು.

ಸಾಮಾಜಿಕವಾಗಿ ಭಾರತ ತನ್ನ ಸಾಂವಿಧಾನಿಕ ಮೌಲ್ಯಗಳಿಗನುಗುಣವಾಗಿ ಎಷ್ಟೇ ಸಮಾನತೆಯ ಹಾದಿಯಲ್ಲಿ ಸಾಗುತ್ತಿದ್ದರೂ, ಪ್ರಬಲ ಜಾತಿ ಸಮುದಾಯಗಳು ಗ್ರಾಮದಿಂದ ದೆಹಲಿಯವರೆಗೆ ತಮ್ಮ ಆಧಿಪತ್ಯವನ್ನು ಸಾಧಿಸಿವೆ. ಸಮತಲ ನೆಲೆಯಲ್ಲಿ ಕಾಣಬಹುದಾದ ಸಮಾನತೆಯ ಹಾದಿಗಳು ಲಂಬ ನೆಲೆಯಲ್ಲಿ ಸಮತೋಲನವನ್ನು ಕಳೆದುಕೊಳ್ಳುವುದನ್ನೂ ಗಮನಿಸುತ್ತಿದ್ದೇವೆ. ಹಾಗಾಗಿಯೇ ಮೀಸಲಾತಿಯ ಫಲಾನುಭವಿಗಳೂ ಕೆಲವೊಮ್ಮೆ ಲಂಬನೆಲೆಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಾರೆ.

ಊಳಿಗಮಾನ್ಯ ಧೋರಣೆ ಮತ್ತು ಪಿತೃಪ್ರಧಾನ ಮನಸ್ಥಿತಿ ಇಂದಿಗೂ ಜೀವಂತವಾಗಿರುವ ಭಾರತೀಯ ಸಮಾಜದಲ್ಲಿ ಈ ಮೇಲರಿಮೆಯ ಅಹಮಿಕೆಗಳು ಮತ್ತು ಶ್ರೇಷ್ಠತೆಯ ಜೀವಂತಿಕೆಯೇ ಇಲ್ಲಿನ ಕಾರ್ಪೋರೇಟ್‌ ಮಾರುಕಟ್ಟೆ ವ್ಯವಸ್ಥೆಯ ಬಂಡವಾಳಶಾಹಿ ಅಭಿವೃದ್ಧಿ ಮಾರ್ಗಗಳನ್ನು ಇಂದಿಗೂ ರಕ್ಷಿಸುತ್ತಿವೆ. ಸಾಮಾಜಿಕ ಸಮಾನತೆಯೊಂದಿಗೆ ಆರ್ಥಿಕ ಸಮಾನತೆಯನ್ನೂ ಸಾಧಿಸದಿದ್ದರೆ ಪ್ರಜಾಪ್ರಭುತ್ವ ಪರಿಪೂರ್ಣವಾಗುವುದಿಲ್ಲ ಎಂಬ ಅಂಬೇಡ್ಕರ್‌ ಅವರ ಮಾತುಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ.

ಬಂಡವಾಳಶಾಹಿ ಆರ್ಥಿಕತೆಯನ್ನೇ ಪೋಷಿಸಿಕೊಂಡು ಬಂದಿರುವ ಭಾರತದ ಆಳುವ ವರ್ಗಗಳು, ಪಕ್ಷಾತೀತವಾಗಿ ಈ ತರತಮಗಳನ್ನೂ ಕಾಪಾಡಿಕೊಂಡು ಬಂದಿವೆ. ಭಾರತದ ಮೇಲ್ಪದರದ ಶೇ 10ರಷ್ಟು ಜನರ ಬಳಿ ದೇಶದ ಶೇ 77ರಷ್ಟು ಸಂಪತ್ತು ಕ್ರೋಢೀಕೃತವಾಗಿದ್ದರೆ, ಶೇ 57ರಷ್ಟು ರಾಷ್ಟ್ರೀಯ ಆದಾಯದ ಪಾಲನ್ನು ಹೊಂದಿದೆ. ಶೇ 1ರಷ್ಟು ಜನರ ಬಳಿ ಶೇ 22ರಷ್ಟು ರಾಷ್ಟ್ರೀಯ ಆದಾಯ ಶೇಖರಣೆಯಾಗಿದೆ. 2017ರ ನಂತರ ಉತ್ಪಾದನೆಯಾದ ಶೇ 73ರಷ್ಟು ರಾಷ್ಟ್ರೀಯ ಸಂಪತ್ತು ಮೇಲ್ಪದರದ ಶೇ 1ರಷ್ಟು ಜನರ ಪಾಲಾಗಿದೆ.

ಭಾರತ ಜಾಗತಿಕ ಬಂಡವಾಳ ಮಾರುಕಟ್ಟೆಯಲ್ಲಿ ಯಾವ ಸ್ಥಾನವನ್ನು ಗಳಿಸಿದರೂ, ತಳಮಟ್ಟದ ವಾಸ್ತವ ಸನ್ನಿವೇಶವನ್ನು ಗಮನಿಸಿದಾಗ ಅನೌಪಚಾರಿಕ ಕ್ಷೇತ್ರವೇ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿರುವುದು ಕಂಡುಬರುತ್ತದೆ. ಎನ್‌ಎಸ್‌ಎಸ್‌ಒ ಬಿಡುಗಡೆ ಮಾಡಿರುವ ಇತ್ತೀಚಿನ ಅಧಿಕೃತ ವರದಿಯ ಪ್ರಕಾರ ಭಾರತದ ಕಾರ್ಮಿಕರಲ್ಲಿ ಶೇ 93ರಷ್ಟು ಅನೌಪಚಾರಿಕ ವಲಯದಲ್ಲಿದ್ದಾರೆ.

ಕೋವಿದ್‌ ಲಾಕ್‌ಡೌನ್‌ ಸಂದರ್ಭದಲ್ಲಿ ತೀವ್ರ ಆಘಾತಕ್ಕೊಳಗಾದ ಈ ವಲಯ ನಂತರ ಚೇತರಿಸಿಕೊಂಡಿದ್ದರೂ, ಮುಂಚಿನ ಸ್ಥಿತಿಗೆ ತಲುಪಲು ಸಾಧ್ಯವಾಗಿಲ್ಲ. 2021ರ ಸಮೀಕ್ಷೆಯ ಪ್ರಕಾರ ದೇಶದಲ್ಲಿರುವ ಒಟ್ಟು 6.36 ಕೋಟಿ ಉದ್ಯಮಗಳ ಪೈಕಿ ಶೇ 99.7ರಷ್ಟು ಉದ್ದಿಮೆಗಳು ಅಸಂಘಟಿತ ಕ್ಷೇತ್ರದಲ್ಲಿದೆ.

ನೋಂದಣಿಯಾಗಿರುವ ಔಪಚಾರಿಕ ಕ್ಷೇತ್ರದ ಉದ್ದಿಮೆಗಳ ಸಂಖ್ಯೆ ಕೇವಲ 1 ಲಕ್ಷ 70 ಸಾವಿರ ಅಥವಾ ಶೇ 0.3ರಷ್ಟಿದೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವ ಶ್ರಮಿಕರ ನೆರವಿಗೆ ಸೂಕ್ತ ಯೋಜನೆಗಳನ್ನು ರೂಪಿಸುವ ಸಲುವಾಗಿ ರಚಿಸಿರುವ ಇ-ಶ್ರಮ್‌ ಪೋರ್ಟಲ್‌ನಲ್ಲಿ ಅನೌಪಚಾರಿಕ ಕ್ಷೇತ್ರದ ಎಲ್ಲ ದುಡಿಮೆಗಾರರೂ ನೋಂದಣಿ ಮಾಡಿಸಬೇಕಿದೆ. ನಿಖರವಾಗಿ ಈ ವಲಯದಲ್ಲಿರುವ ಕಾರ್ಮಿಕರನ್ನು ಗುರುತಿಸುವುದೇ ಸಾಧ್ಯವಾಗದೆ ಇರುವುದರಿಂದ ನೋಂದಾಯಿತ 27.69 ಕೋಟಿ ಕಾರ್ಮಿಕರ ಪೈಕಿ ಶೇ 94ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ.

ನೋಂದಾಯಿತವಾಗಿರುವ 27.69 ಕೋಟಿ ಕಾರ್ಮಿಕರ ಪೈಕಿ ಶೇ 74ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಕಾರ್ಮಿಕರಿದ್ದಾರೆ. ಶೇ 45.32 ಒಬಿಸಿ, ಶೇ 20.95 ಪರಿಶಿಷ್ಟ ಜಾತಿ ಮತ್ತು ಶೇ 8.17ರಷ್ಟು ಪರಿಶಿಷ್ಟ ಪಂಗಡಗಳ ಕಾರ್ಮಿಕರಿದ್ದಾರೆ. ಅನೌಪಚಾರಿಕ ಕ್ಷೇತ್ರದಲ್ಲಿ ಶೇ 94.11ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ಸಾವಿರ ರೂಗಳಿಗಿಂತಲೂ ಕಡಿಮೆ ಇದೆ. ಶೇ 4.36ರಷ್ಟು ಕಾರ್ಮಿಕರ ಮಾಸಿಕ ಆದಾಯ 10 ರಿಂದ 15 ಸಾವಿರ ರೂಗಳಷ್ಟಿದೆ.

ದೇಶದಲ್ಲಿ ಒಟ್ಟು 38 ಕೋಟಿ ಅನೌಪಚಾರಿಕ ವಲಯದ ಕಾರ್ಮಿಕರಿರುವುದಾಗಿ ಅಂದಾಜು ಮಾಡಲಾಗಿದ್ದು, ಈ ದತ್ತಾಂಶಗಳನ್ನು ಪರಿಶೀಲಿಸಿದರೆ ದೇಶದ ಆರ್ಥಿಕತೆಯಲ್ಲಿ ಅಸಮಾನತೆ ಢಾಳಾಗಿ ಕಾಣುತ್ತದೆ. ಈ ಕಾರ್ಮಿಕ ಕುಟುಂಬಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸುವುದು ಇ-ಶ್ರಮ್‌ ಪೋರ್ಟಲ್‌ನ ಸ್ಥಾಪಿತ ಉದ್ದೇಶವಾಗಿದೆ.

ಈ ಸಮೀಕ್ಷೆಯ ಅನುಸಾರ ನೋಂದಾಯಿತ ಶೇ 61.72ರಷ್ಟು ಕಾರ್ಮಿಕರ ವಯಸ್ಸು 18 ರಿಂದ 40 ವರ್ಷಗಳಷ್ಟಿದೆ. ಶೇ 22.12ರಷ್ಟು ಕಾರ್ಮಿಕರು 40 ರಿಂದ 40 ವಯೋಮಾನದವರಾಗಿದ್ದಾರೆ. ಶೇ 2.98ರಷ್ಟು ಕಾರ್ಮಿಕರ ವಯೋಮಾನ 16 ರಿಂದ 18 ವರ್ಷಗಳಾಗಿವೆ. ನೋಂದಾಯಿತ ಮಹಿಳಾ ಕಾರ್ಮಿಕರ ಸಂಖ್ಯೆ ಶೇ 52.18ರಷ್ಟಿದೆ. ಕೃಷಿ ಕ್ಷೇತ್ರವನ್ನು ಅವಲಂಬಿಸಿದ ಕಾರ್ಮಿಕರ ಸಂಖ್ಯೆಯೇ ಶೇ 52.11ರಷ್ಟಿದೆ. ಅಂದರೆ ಅರ್ಧಕ್ಕಿಂತಲೂ ಹೆಚ್ಚಿನ ಅಸಂಘಟಿತ ಕಾರ್ಮಿಕರು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳನ್ನೇ ಅವಲಂಬಿಸಿರುವುದು ಭಾರತೀಯ ಆರ್ಥಿಕತೆಯ ಸ್ಪಷ್ಟ ಚಿತ್ರಣವನ್ನು ನೀಡುತ್ತದೆ.

ಈ ಅಸಮಾನತೆಗಳು ಢಾಳಾಗಿ ಕಾಣುತ್ತಿರುವಂತೆಯೇ ದೇಶದ ಅನೌಪಚಾರಿಕ ವಲಯದ ಲಕ್ಷಾಂತರ ದುಡಿಮೆಯ ಕೈಗಳು ಬೀದಿಪಾಲಾಗುತ್ತಿವೆ. ಓಲಾ, ಊಬರ್‌, ಜಮೋಟೋ, ಸ್ವಿಗಿ ಮುಂತಾದ ಆದಾಯ ಮಾರ್ಗಗಳಲ್ಲಿ ಎದುರಾಗುತ್ತಿರುವ ಬಿಕ್ಕಟ್ಟು ಈ ದೇಶದ ನಿರುದ್ಯೋಗಿ ಯುವ ಜನತೆಯನ್ನು ಬಾಣಲೆಯಿಂದ ಬೆಂಕಿಗೆ ಬೀಳಿಸುತ್ತಿವೆ. ತಾತ್ಕಾಲಿಕವಾಗಿ ಜೀವನ ನಿರ್ವಹಣೆಗೆ ನೆರವಾಗುವ ಯಾವುದೇ ಉದ್ಯೋಗವೂ ಒಂದು ಸುಸ್ಥಿರ ಸಮಾಜವನ್ನು ನಿರ್ಮಿಸಲು ಪೂರಕವಾಗಿರುವುದಿಲ್ಲ. ಬಹುಶಃ ಇನ್ನು ಹತ್ತು ವರ್ಷಗಳಲ್ಲಿ ಭಾರತ ಈ ಸಂದಿಗ್ಧತೆಯನ್ನು ಎದುರಿಸುತ್ತದೆ.

ಸ್ವಯಂ ಉದ್ಯೋಗ, ಕೌಶಲ್ಯಾಧಾರಿತ ಉದ್ಯೋಗ ಮತ್ತು ತ್ವರಿತ ಆದಾಯ ಗಳಿಕೆಯ ಮಾರ್ಗಗಳು ಮಾರುಕಟ್ಟೆ ಅರ್ಥವ್ಯವಸ್ಥೆಯಲ್ಲಿ ಅದ್ಭುತ ಫಲಿತಾಂಶಗಳನ್ನು ತೋರುವುದಾದರೂ, ದೀರ್ಘಾವಧಿಯಲ್ಲಿ ಒಂದು ಅಸ್ಥಿರ ಸಮಾಜವನ್ನು ಸೃಷ್ಟಿಸುವುದನ್ನು ಹಲವು ದೇಶಗಳಲ್ಲಿ ಕಾಣಬಹುದು. ಹಾಗೆಯೇ ಮಾರುಕಟ್ಟೆ ವ್ಯವಸ್ಥೆ ರೂಪಿಸುವ ಉದ್ಯೋಗಾವಕಾಶಗಳು ಹಣಕಾಸು ಬಂಡವಾಳದ ಅವಶ್ಯಕತೆಗಳಿಗನುಗುಣವಾಗಿಯೇ ಇರುವುದರಿಂದ, ಈ ನೌಕರಿಯನ್ನು ಅವಲಂಬಿಸುವವರು ಮಾರುಕಟ್ಟೆ ವ್ಯತ್ಯಯಗಳ ಮೊದಲ ಬಲಿ ಆಗುತ್ತಾರೆ.

ಈ ಬಲಿಪೀಠಗಳನ್ನು ಸೃಷ್ಟಿಸಲೆಂದೇ ಸರ್ಕಾರಗಳು ಹಲವು ಯೋಜನೆಗಳನ್ನೂ, ಆಡಳಿತ ನೀತಿಗಳನ್ನೂ ರೂಪಿಸುತ್ತಿರುತ್ತವೆ. ಹಾಗಾಗಿಯೇ ಇಂದು ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಬಿಸಿಯೂಟ ಯೋಜನೆಯ ನೌಕರರು ತಮ್ಮ ಬದುಕಿನ ಘನತೆಗಾಗಿ, ಹಕ್ಕಿಗಾಗಿ ಹೋರಾಡುವಂತಾಗಿದೆ.

ದೇಶದ ಒಂದು ಬೃಹತ್‌ ಜನಸಮೂಹ ತಮ್ಮ ಜೀವನ ನಿರ್ವಹಣೆಗೆ ಪರದಾಡುತ್ತಿರುವುದನ್ನು ಅಧಿಕೃತ ಅಂಕಿಅಂಶಗಳೇ ಸಾಬೀತುಪಡಿಸುತ್ತವೆ. ಕರ್ನಾಟಕದಲ್ಲೇ 42 ಸಾವಿರ ಆಶಾ ಕಾರ್ಯಕರ್ತೆಯರು ತಮ್ಮ ಸೇವಾ ಭತ್ಯೆಗಳಿಗಾಗಿ, ಸುಭದ್ರ ನೌಕರಿಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಆಶಾ ಕಾರ್ಯಕರ್ತೆಯರು ಕನಿಷ್ಟ ವೇತನದೊಂದಿಗೆ, ಉದ್ಯೋಗ ಭದ್ರತೆ ಇಲ್ಲದೆ ಅನಿಶ್ಚಿತ ಬದುಕು ಎದುರಿಸುತ್ತಿದ್ದಾರೆ.

ಕರ್ನಾಟಕದಲ್ಲಿ 60 ವರ್ಷ ದಾಟಿದ ಕಾರಣಕ್ಕಾಗಿಯೇ ಹೊರಹಾಕಲ್ಪಟಿರುವ 12 ಸಾವಿರ ಬಿಸಿಯೂಟ ಯೋಜನೆಯ ಮಹಿಳೆಯರು ತಮ್ಮ ಜೀವನ ಭದ್ರತೆಗಾಗಿ ಹೋರಾಡುತ್ತಿದ್ದಾರೆ. ದೇಶಾದ್ಯಂತ 13 ಲಕ್ಷ ಅಂಗನವಾಡಿ ನೌಕರರು, ಬಹುಪಾಲು ಮಹಿಳೆಯರು, ಹೊಸ ಶಿಕ್ಷಣ ನೀತಿಯ ಪರಿಣಾಮ ತಮ್ಮ ನೆಲೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. ದೇಶದ ಬಹುದೊಡ್ಡ ಉದ್ಯೋಗದಾತ ಸಾರ್ವಜನಿಕ ಸಂಸ್ಥೆ ರೈಲ್ವೆ ಇಲಾಖೆಯಲ್ಲಿ 72 ಸಾವಿರ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಬಿಜೆಪಿ ಸಂಸದ ವರುಣ್‌ ಗಾಂಧಿ ಇತ್ತೀಚೆಗೆ ಹೇಳಿದಂತೆ 60 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ.

ಭಾರತದ ಬೃಹತ್‌ ಜನಸಮೂಹದ ಬದುಕಿನ ಪ್ರಶ್ನೆಯಾಗಿರುವ ಈ ಸಮಸ್ಯೆಗಳು ಇಂದಿನ ಸಾರ್ವಜನಿಕ ಸಂಕಥನದ ಒಂದು ಭಾಗವಾಗಬೇಕಿತ್ತು. ಆದರೆ ಭಾರತ ಇಂತಹ ಒಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, 45 ವರ್ಷಗಳಲ್ಲೇ ಅತಿ ಹೆಚ್ಚಿನ ನಿರುದ್ಯೋಗ ಪ್ರಮಾಣ ದಾಖಲಾಗಿದ್ದರೂ, ಎಂಟು ವರ್ಷಗಳಲ್ಲೇ ಅತಿ ಹೆಚ್ಚು ಹಣದುಬ್ಬರ ದಾಖಲಾಗಿದ್ದರೂ ಸಾರ್ವಜನಿಕ ಹಾಗೂ ಬೌದ್ಧಿಕ ವಲಯದ ಸಂಕಥನಗಳು ಭಿನ್ನ ಮಾರ್ಗದಲ್ಲಿ ಸಾಗುತ್ತಿವೆ. ಈ ವಿಕೃತ ಬೆಳವಣಿಗೆಯ ಮೂಲವನ್ನು ನಾವು ಸಾಂಸ್ಕೃತಿಕ ಹಾಗೂ ರಾಜಕೀಯ ಭೂಮಿಕೆಗಳಲ್ಲಿ ಶೋಧಿಸಬೇಕಿದೆ.

ಇಲ್ಲಿ ಬೌದ್ಧಿಕ ವಲಯದ ತಾತ್ವಿಕ ಗ್ರಹಿಕೆ ಮತ್ತು ಸಾಂಸ್ಕೃತಿಕ ವಲಯದ ಪ್ರಾಮಾಣಿಕತೆ ಮುಖ್ಯವಾಗುತ್ತದೆ. ರಾಜಕೀಯ ಮತ್ತು ಸೈದ್ಧಾಂತಿಕ ನಿಲುಮೆಗಳು ವಸ್ತುನಿಷ್ಠವಾಗದೆ ಹೋದರೆ ಸತ್ಯದ ಸಮಾಧಿಯಾಗುತ್ತದೆ. ತಾವು ಅನುಕರಿಸುವ ನಾಯಕರಲ್ಲಿ ಸರ್ವಶ್ರೇಷ್ಠತೆಯನ್ನು, ಸಾರ್ವಭೌಮತ್ವವನ್ನು ಕಾಣುವಂತಹ ವಂಧಿಮಾಗದ ಸಂಸ್ಕೃತಿಯನ್ನು ತಳಮಟ್ಟದವರೆಗೂ ತಲುಪಿಸಿರುವ ಭಾರತದ ರಾಜಕೀಯ ಪರಂಪರೆ ಇಂದು ದೇಶದ ಭವಿಷ್ಯತ್ತಿಗೆ ಮುಳುವಾಗಲಿದೆ. ಆಂತರಿಕ ಪ್ರಜಾತಂತ್ರದ ಮೌಲ್ಯಗಳನ್ನೇ ಮರೆತಿರುವ ರಾಜಕೀಯ ಪಕ್ಷಗಳು ಅಧಿಕಾರ ರಾಜಕಾರಣವನ್ನು ಒಂದು ಅವಕಾಶದ ಭೂಮಿಕೆ ಎಂದು ಭಾವಿಸದೆ, ತಮ್ಮ ವಾರಸುದಾರಿಕೆ ಅಥವಾ ಉತ್ತರಾಧಿಕಾರದ ವೇದಿಕೆ ಎಂದು ಭಾವಿಸುತ್ತಿರುವುದೇ ಇಂದಿನ ಸಕಲ ಸಮಸ್ಯೆಗಳಿಗೆ ಕಾರಣವಾಗಿದೆ.

ವರ್ತಮಾನದ ಭಾರತ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಈ ದೇಶದ ಸಂಸ್ಕೃತಿಯಷ್ಟೇ ವೈವಿಧ್ಯಮಯ ಅಷ್ಟೇ ಜಟಿಲ. ಆದರೆ ಈ ಸಮಸ್ಯೆಗಳಿಗೆ ಅಧಿಕಾರ ರಾಜಕಾರಣ ಸೂಚಿಸುತ್ತಿರುವ ಪರಿಹಾರ ಮಾರ್ಗಗಳು ಜನಸಾಮಾನ್ಯರಿಗೆ ಅರ್ಥವೇ ಆಗದಷ್ಟು ಸಂಕೀರ್ಣವಾಗಿರುತ್ತವೆ. ಹಾಗಾಗಿಯೇ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ಡ್ರೋನ್‌ ಮೂಲಕ ವೀಕ್ಷಿಸುತ್ತಿದ್ದೇನೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಿಂದ ಇಡೀ ದೇಶವೇ ಪುಳಕಿತವಾಗುತ್ತದೆ.

ಆದರೆ ಈ ಡ್ರೋನ್‌ ವೀಕ್ಷಣೆಗೆ ಕರ್ನಾಟಕದ ಭ್ರಷ್ಟಾಚಾರದ ಕೂಪಗಳು ನಿಲುಕದೆ ಹೋಗುತ್ತವೆ. ರಾಜಕೀಯ ಭ್ರಷ್ಟಾಚಾರ ಭಾರತದ ಆಡಳಿತ ವ್ಯವಸ್ಥೆಯ ಒಂದು ಅವಿಭಾಜ್ಯ ಅಂಗ ಎನ್ನುವ ವಾಸ್ತವವನ್ನು ಅರಿತಿದ್ದರೂ ಜನಸಾಮಾನ್ಯರು ಭ್ರಷ್ಟರನ್ನೇ ಪೋಷಿಸಲು ತತ್ವ ಸಿದ್ಧಾಂತಗಳ ಮೊರೆ ಹೋಗುತ್ತಿದ್ದಾರೆ. ಕರ್ನಾಟಕದಲ್ಲಿ ಕೇಳಿಬರುತ್ತಿರುವ 40 % ಕಮಿಷನ್‌ ದಂಧೆ, ಪಿಎಸ್‌ಐ ಪರೀಕ್ಷೆಯ ಹಗರಣ, ಕೆಪಿಎಸ್‌ಸಿ ಹಗರಣ ಇವೆಲ್ಲವೂ ಕೇವಲ ಅಧಿಕಾರಶಾಹಿಯ ಚೌಕಟ್ಟಿನಲ್ಲೇ ಕಂಡುಬರುತ್ತವೆ.

ಸಾರಿಗೆ ನೌಕರರ ಸಂಘಟಿತ ಶಕ್ತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ತಮ್ಮ ಪರಿಣತ ಕ್ಷೇತ್ರವನ್ನು ಬಿಟ್ಟು ಕಾರ್ಮಿಕ ಸಂಘಟನೆಗೆ ಮುಂದಾದ ಕೋಡಿಹಳ್ಳಿ ಚಂದ್ರಶೇಖರ್‌ ಈಗ ಬೃಹತ್‌ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದರೂ, ಪ್ರಾಮಾಣಿಕತೆಯನ್ನೇ ಹೊದ್ದಿಕೊಂಡಿರುವ ಆಮ್‌ ಆದ್ಮಿ ಪಕ್ಷ ಅವರನ್ನು ಉಚ್ಚಾಟಿಸಲು ಹಿಂಜರಿಯುತ್ತದೆ. ಕಾನೂನು ಪಾಲನೆ ರಕ್ಷಣೆ ಮತ್ತು ಸಾರ್ವಜನಿಕ ಸ್ವಾಸ್ಥ್ಯದ ಹೊಣೆ ಹೊರಬೇಕಾಗಿರುವ ಪೊಲೀಸ್‌ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವಾಡುತ್ತಿದೆ. ತಾಂಡವಾಡುತ್ತಿದೆ

ಈ ಎಲ್ಲ ಬೆಳವಣಿಗೆಗಳೂ ಅಭಿವೃದ್ಧಿ ಕಾಮಗಾರಿಗಳ ಒಂದು ಭಾಗವಾಗಿಯೇ ಇರುವಾಗ, ಡ್ರೋನ್‌ ವೀಕ್ಷಣೆಯಲ್ಲಿ ಕಾಣದೆ ಹೋಗುವುದಾದರೂ ಹೇಗೆ ? ಇಷ್ಟೆಲ್ಲಾ ಅಕ್ರಮಗಳ ನಡುವೆಯೂ ಸರ್ಕಾರಗಳು ಅಬಾಧಿತವಾಗಿರುತ್ತವೆ, ಸಂಬಂಧಪಟ್ಟ ಸಚಿವರು ʼಮೇಲಿನವರʼ ಕೃಪಾಕಟಾಕ್ಷದೊಂದಿಗೆ ನಿರಾಳವಾಗಿರುತ್ತಾರೆ. ಸಾರ್ವಜನಿಕ ವಲಯದಲ್ಲೂ ಇದು ಯಾವುದೇ ಪ್ರತಿರೋಧದ ದನಿಗಳನ್ನು ಮೂಡಿಸುವುದಿಲ್ಲ. ಏಕೆಂದರೆ ಜನಸಾಮಾನ್ಯರ ಸಾಮಾಜಿಕ ಪ್ರಜ್ಞೆ ಯಾವುದೋ ಒಂದು ನಿಷ್ಠೆಗೊಳಗಾಗಿ ನಿಷ್ಕ್ರಿಯವಾಗಿರುತ್ತದೆ.

ಈ ತಾರತಮ್ಯಗಳನ್ನು ಯಥಾವತ್ತಾಗಿ ಕಾಪಾಡಲೆಂದೇ ಅಥವಾ ಮತ್ತಷ್ಟು ಕಂದರಗಳನ್ನು ಸೃಷ್ಟಿಸುವ ಸಲುವಾಗಿಯೇ ರೂಪಿಸಲಾಗುವ ಆಡಳಿತ ನೀತಿಗಳನ್ನು ಜಾರಿಗೊಳಿಸಲು ಗ್ರಾಮ ಮಟ್ಟದಿಂದ ದೆಹಲಿಯವರೆಗೂ ಒಂದು ಸಾಮಾಜಿಕ ವ್ಯವಸ್ಥೆ ಇನ್ನೂ ಜೀವಂತವಾಗಿದೆ. ಈ ಸಾಮಾಜಿಕ ಚೌಕಟ್ಟು ಶತಮಾನಗಳ ಬುನಾದಿ ಇರುವ ಜಾತಿ ವ್ಯವಸ್ಥೆಯಿಂದ ನಿಯಂತ್ರಿಸಲ್ಪಡುತ್ತದೆ. ದಿನನಿತ್ಯ ಕೇಳಿಬರುವ ಜಾತಿ ದೌರ್ಜನ್ಯಗಳು ನಮ್ಮ ಆಂತರಿಕ ಪ್ರಜ್ಞೆಯನ್ನು ಕದಡುತ್ತಿಲ್ಲ. ಏಕೆಂದರೆ ದೌರ್ಜನ್ಯಕ್ಕೊಳಗಾಗುತ್ತಿರುವುದು ಆರ್ಥಿಕ ನೆಲೆಯಲ್ಲಿ ಕೆಳಸ್ತರಕ್ಕೆ ಸೇರಿದವರಾಗಿದ್ದಾರೆ.

ಇಲ್ಲಿರುವ ಜಾತ್ಯತೀತ ಲಕ್ಷಣ ರಾಜಕೀಯ ನೆಲೆಯಲ್ಲಾಗಲೀ, ಸಾಂಸ್ಕೃತಿಕ ನೆಲೆಯಲ್ಲಾಗಲೀ ಕಂಡುಬರುವುದಿಲ್ಲ. ಅಂದರೆ, ಮತನಿರಪೇಕ್ಷವಾಗಿ, ಜಾತಿ ಗೋಡೆಗಳನ್ನು ಮೀರಿದ ಒಂದು ಅಸಮಾನತೆ ನಮ್ಮ ಸಮಾಜದಲ್ಲಿ ಬೇರೂರುತ್ತಿದೆ. ಶ್ರೀಮಂತಿಕೆ ಮತ್ತು ದಾರಿದ್ರ್ಯತೆಯ ನಡುವಿನ ಕಂದರದಲ್ಲಿ ಹುದುಗಿಹೋಗುವ ಅಸಂಖ್ಯಾತ ಅಸಹಾಯಕ ದನಿಗಳು ತಮ್ಮ ಪ್ರತಿರೋಧವನ್ನು ದಾಖಲಿಸಲೂ ಸಾಧ್ಯವಾಗದಂತೆ ಕಾಯ್ದೆ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಎಲ್ಲ ಜಾತಿ ಮತದ ನೆಲೆಗಳಲ್ಲಿ ವಿಸ್ತರಿಸಿರುವ ಈ ತಾರತಮ್ಯಗಳನ್ನು ವಿರೋಧಿಸಲು ಅತ್ಯವಶ್ಯವಾದ ಒಂದು ಜಾತ್ಯತೀತ ಭೂಮಿಕೆಯನ್ನು ಶೈಶಾವಸ್ಥೆಯಲ್ಲೇ ಭಗ್ನಗೊಳಿಸಲಾಗುತ್ತಿದೆ.

ಯಾವುದೇ ಭೌಗೋಳಿಕ ರಾಷ್ಟ್ರದ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾತಾವರಣದಲ್ಲಿ ಜಾಗೃತವಾಗಿರಬೇಕಾದ ಸಾರ್ವಜನಿಕ ಅರಿವು ಮತ್ತು ಸಾಮಾಜಿಕ ಪ್ರಜ್ಞೆಯನ್ನು ಮೊಳಕೆಯಲ್ಲೇ ಚಿವುಟಿ, ಯಾವುದೋ ಒಂದು ಆಧಿಪತ್ಯಕ್ಕೊಳಪಡಿಸುವ ನಿಟ್ಟಿನಲ್ಲಿ ಇಂದು ರಾಷ್ಟ್ರ ರಾಜಕಾರಣ ಬೆಳೆಯುತ್ತಿದೆ. ಅಂತರಿಕವಾಗಿ ಜಾತಿ, ಉಪಜಾತಿ, ಒಳಜಾತಿ ಮತ್ತು ಮೇಲ್ಜಾತಿಗಳ ಆಧಿಪತ್ಯಗಳು ಬಲವಾಗುತ್ತಿರುವಂತೆಯೇ ವ್ಯಾಪಕ ನೆಲೆಯಲ್ಲಿ ಮತಧರ್ಮಗಳ ಆಧಿಪತ್ಯದ ನೆಲೆಗಳೂ ಪ್ರಬಲವಾಗುತ್ತಿವೆ.

ಈ ಆಧಿಪತ್ಯದ ನೆಲೆಗಳು ತಮ್ಮ ಸಾಂಸ್ಥಿಕ, ಸಾಂಘಿಕ ಅಸ್ತಿತ್ವವನ್ನು ಕಾಪಾಡಿಕೊಳ್ಳಲೆಂದೇ ಸಾರ್ವಜನಿಕ ಸಂಕಥನಗಳ ನಿರೂಪಣೆಗಳನ್ನೂ ನಿರ್ಧರಿಸುತ್ತವೆ. ಆಳುವ ವರ್ಗಗಳು ಈ ಆಧಿಪತ್ಯದ ನೆಲೆಗಳನ್ನೇ ಬಳಸಿಕೊಂಡು ಇಂತಹ ಸಾಪೇಕ್ಷ ನಿರೂಪಣೆಗಳಿಗೆ ಸಾರ್ವತ್ರಿಕತೆಯನ್ನು ಕಲ್ಪಿಸಲು ಸಾಂವಿಧಾನಿಕ ಮಾರ್ಗಗಳನ್ನೇ ಅನುಸರಿಸುತ್ತವೆ. ತಂತ್ರಜ್ಞಾನ ಯುಗದಲ್ಲಿ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಡಿಜಿಟಲ್‌ ವೇದಿಕೆಗಳು ಇದಕ್ಕೆ ಸಹಾಯಕವಾಗಿರುತ್ತವೆ. ಇಂದು ಸಾರ್ವಜನಿಕವಾಗಿ ಬಹುಚರ್ಚಿತವಾಗಿರುವ ಪಠ್ಯ ಪರಿಷ್ಕರಣೆಯೂ ಇದರ ಒಂದು ಭಾಗವಷ್ಟೇ ಆಗಿದೆ.

ಹಿಂದುತ್ವ ರಾಜಕಾರಣ ಈ ಮೇಲ್ಜಾತಿ, ಮೇಲ್ವರ್ಗ ಮತ್ತು ವೈದಿಕಶಾಹಿ ಸಾಂಸ್ಕೃತಿಕ ನೆಲೆಗಳ ಸಮ್ಮಿಶ್ರಣವಾಗಿರುವುದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳಲ್ಲಿ ಈ ಆಧಿಪತ್ಯ ರಾಜಕಾರಣದ ಮಹತ್ವಾಕಾಂಕ್ಷೆಗೆ ಒಂದು ಪ್ರಜಾಸತ್ತಾತ್ಮಕ ಪ್ರತಿರೋಧದ ನೆಲೆಯನ್ನು ರೂಪಿಸುವುದು ಈ ಸಂದರ್ಭದ ಅನಿವಾರ್ಯತೆಯೂ ಆಗಿದೆ. ಭಾರತದ ಸಂವಿಧಾನ ಈ ನಿಟ್ಟಿನಲ್ಲಿ ನಮಗೆ ದಾರಿದೀಪವಾಗಬಹುದು ಹಾಗೆಯೇ ನಮ್ಮೊಳಗಿನ ಜಾಗೃತ ಸಾಮಾಜಿಕ ಪ್ರಜ್ಞೆ ಬೆಳಕಿನ ಕಿಂಡಿಯೂ ಆಗಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending