Connect with us

ಅಂತರಂಗ

ಹಳದಿ ಕನ್ನಡಕ ತೆಗೆದು ನೋಡೋಣವೇ..?

Published

on

  • ಹಿರಿಯೂರು ಪ್ರಕಾಶ್

ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾದಂತೆಲ್ಲಾ ಜನರಲ್ಲಿ ಪ್ರಜ್ಞಾವಂತಿಕೆ ಕೂಡಾ ಹೆಚ್ಚಾಗುತ್ತಿದೆ. ಜಗತ್ತಿನ ಸುದ್ದಿಗಳು ಅಂಗೈಯಲ್ಲೇ ಅರೆಕ್ಷಣದಲ್ಲಿ ನರ್ತಿಸುವುದರಿಂದ ಅವುಗಳ ಬಗೆಗಿನ ಕುತೂಹಲ, ಆಕರ್ಷಣೆ, ಸರಿ ತಪ್ಪುಗಳ ವಿಮರ್ಶೆ ಎಲ್ಲವೂ ಸಹಜವೆಂಬಂತೆ ಜರುಗುತ್ತಿವೆ.

ಹೀಗಾಗಿ ಫೇಸ್ ಬುಕ್, ವಾಟ್ಸಪ್, ಟ್ವೀಟ್, ಇನ್ಸ್ಟಾ ಗ್ರಾಂ… ಮುಂತಾದೆಲ್ಲೆಡೆ ಪರಸ್ಪರ ಪರಿಚಯ, ಚರ್ಚೆ, ವಾದ -ವಿವಾದ , ವಿಚಾರ -ವಿಮರ್ಶೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದನ್ನು ಕಾಣಬಹುದು. ಹೀಗಾಗಿ ಫೇಸ್ ಬುಕ್ ನಲ್ಲಿ ಅನೇಕ ವಿಚಾರಗಳ ಬಗೆಗೆ ಬರೆಯುವವರ ಸಂಖ್ಯೆ ಹೆಚ್ಚಾದಂತೆ, ಬರೆದದ್ದನ್ನು ವಿಮರ್ಶಿಸುವವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ . ಅನೇಕ ವಿಷಯಗಳ ಮೇಲೆ ಸಾವಿರಾರು ಜನರ ಅಭಿರುಚಿ ಅಭಿಪ್ರಾಯಗಳು ಕ್ರೋಢೀಕರಣಗೊಂಡು ಒಂದು ಆರೋಗ್ಯಕರ ಚರ್ಚೆಗೆ ವೇದಿಕೆಗಳಾಗಿ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಇವು ರೂಪುಗೊಂಡಿವೆ. ಇದು ಸ್ವಾಗತಾರ್ಹ ಬೆಳವಣಿಗೆ.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇದನ್ನೇ ಮತ್ತೊಂದು ಆಯಾಮದಿಂದ ನೋಡುವುದಾದರೆ, ಇಂದಿನ ಕಾಲಘಟ್ಟದಲ್ಲಿ ಒಂದು ವಿಚಾರದ ಬಗೆಗೆ ಆರೋಗ್ಯಕರ ಚರ್ಚೆಗಳು ನೆಡೆಯುವುದಕ್ಕಿಂತಲೂ ಹೆಚ್ಚಾಗಿ ತಮ್ಮ ಅಭಿಪ್ರಾಯಗಳಿಗೆ ಅಥವಾ ತಾವು ನಂಬಿದ ಸಿದ್ದಾಂತಗಳಿಗೆ ವಿರುದ್ಧವಾದ ವಿಚಾರವೇನಾದರೂ ಇದ್ದಲ್ಲಿ ಅದರ ಸಾಧಕ‌ ಭಾಧಕಗಳ ಅರ್ಥಪೂರ್ಣ ಚರ್ಚೆಗಿಂತ ಮಿಗಿಲಾಗಿ ಪೂರ್ವಾಗ್ರಹ ಪೀಡಿತವಾದ ವಿಷಯ ಮಂಡನೆಗಳು, ಜಾತಿ- ಮತ, ರಾಜಕೀಯ, ಪಕ್ಷ ಆಧಾರಿತ ದ್ವೇಷಪೂರಿತ ಪ್ರತಿಕ್ರಿಯೆಗಳು , ನಿಂದನೆ , ಆರೋಪ , ಪಕ್ಷಪಾತ ಎಲ್ಲವೂ ಒಟ್ಟೊಟ್ಟೊಗೇ ವಕ್ಕರಿಸಿಬಿಡುತ್ತವೆ. ಯಾರು ಹೆಚ್ಚು ಯಾವುದು ಶ್ರೇಷ್ಠ ಎನ್ನುವ ಅನಾರೋಗ್ಯಕರ ಮೇಲಾಟದಲ್ಲಿ ಮಾನವೀಯ ಮೂಲಗಳನ್ನೇ ಹೊಸಕಿ ಬಿಸುಡುವ ಹಂತಕ್ಕೆ ಹೋಗಿ ತಲುಪಿರುತ್ತದೆ.

ಅಪ್ಪಿತಪ್ಪಿ ಮೋದಿಯವರ ಸರ್ಕಾರದ ಉತ್ತಮ ಸಾಧನೆಯನ್ನು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ದಿಟ್ಟ‌ ನಿರ್ಧಾರಗಳನ್ನು ಹೊಗಳಿದರೆ ನೀವು ಬಲಪಂಥೀಯ ಅಥವಾ ಹಿಂದೂವಾದಿಯಾಗಿ ಗೋಚರಿಸುತ್ತೀರ. ಅದೇ ರೀತಿ ಕಾಂಗ್ರೆಸ್‌ನ ಕೆಲವು ಹಿಂದಿನ ಸಾಧನೆಗಳನ್ನು ಮೆಚ್ಚಿ ಹೇಳಿದರೆ ನೀವು ಎಡ ಪಂಥೀಯನಾಗಿ ಅಪಹಾಸ್ಯಕ್ಕೀಡಾಗಿಬಿಡುತ್ತೀರ.

ಸ್ವಲ್ಪಮಟ್ಟಿಗೆ ಜಾತ್ಯಾತೀತತೆಯ ನೆರಳಲ್ಲಿ ಬರೆದರೆ ಬು(ಲ)ದ್ದಿಜೀವಿಯೆಂದೋ , ವಸ್ತುನಿಷ್ಠ ವಾಗಿ ವಿಮರ್ಶಿಸುವವ ಗಂಜಿಕಿರಾಕಿಯಾಗಿಯೋ ಕಂಗೊಳಿಸುವಂತೆ ಎಲ್ಲೆಡೆ ಅಸಹ್ಯಕರ ವಾಂತಿಯಾಗಿರುತ್ತದೆ. ತಮ್ಮ ಪಕ್ಷವನ್ನು ಹೊಗಳುವ ಸಿನಿಮಾ ನಟ ಅಥವಾ ನಟಿಯನ್ನು ಹಿಂದೆ ಮುಂದೆ ನೋಡದೆ ಆರಾಧಿಸುವ ಹಾಗೆ ಅವರು ಹಿಂಬಾಲಿಸುವ ಪಕ್ಷದ ತಪ್ಪುಗಳನ್ನು ಎತ್ತಿ ತೋರಿಸುವ ನಟ ನಟಿಯ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡೋದು….ತೀರಾ ಅಸಹ್ಯವಾಗಿ ಟ್ರೋಲ್ ಮಾಡುವುದು ನಿತ್ಯದ ಪ್ರಕ್ರಿಯೆಯಾಗಿದೆ.

ಯಾರಾದರೂ ಅಪರಾಧ ಮಾಡಿ ತಗಲಾಕಿಕೊಳ್ಳುವ ಮುನ್ನ ತಮ್ಮ ಪಕ್ಷದವರೆಂದು ರಾಜಾರೋಷವಾಗಿ ಹೇಳುತ್ತಿದ್ದವರು , ಅವರ ಅಪರಾಧ ಬಯಲಿಗೆ ಬಂದ ಕೂಡಲೇ ಅವರ ವರಸೆ ಬದಲಾಯಿಸಿ ಅವರನ್ನು ತಮ್ಮವರೆಂದು ಒಪ್ಪಿಕೊಳ್ಳಲು ತಯಾರಾಗದೇ ಅದನ್ನು ವಿರೋಧಿಗಳ ಹಣೆಗೆ ಕಟ್ಟುವ ಚಾಳಿ ಪರಸ್ಪರ ಕೆಸರೆರೆಚಾಟ ಮಾಮೂಲಿಯಾಗಿ ಬಿಟ್ಟಿದೆ.

ಕೆಲವರಂತೂ ಹೆತ್ತವರಿಗೆ ಹೆಗ್ಗಣ ಮುದ್ದು ಎಂಬಂತೆ ನೀವು ಏನೇ ಬರೆದರೂ ತಮ್ಮ ಪಕ್ಷಾಧಾರಿತ ಚೌಕಟ್ಟನ್ನು ಮೀರಿ ಹೊರಬರಲಾರರು. ಮತ್ತೇ ಕೆಲವರು ತಮ್ಮ ಧರ್ಮ ಅಥವಾ ಜಾತಿಯ ವ್ಯೂಹದಿಂದ ಆಚೆಗೆ ಏನನ್ನೂ ನೋಡುವ ಅರ್ಹತೆಯನ್ನೇ ಕಳೆದುಕೊಂಡುಬಿಟ್ಟಿರುತ್ತಾರೆ. ಬೇರೆಯವರ ಜಾತಿ ಹಾಗೂ ಧರ್ಮಗಳು ಇಂಥವರ ಕಣ್ಣಿಗೆ ಅಸಹ್ಯವಾಗಿಯೇ ಕಾಣುತ್ತವೆ.

ಉದಾಹರಣೆಗೆ ಒಂದಷ್ಟು ಜನಕ್ಕೆ ಮೋದಿಯವರನ್ನು ಹಿಂದೂಗಳನ್ನು ಕಂಡರೆ ನಖ‌ಶಿಖಾಂತ ಉರಿದುಕೊಂಡು ಹೀಯ್ಯಾಳಿಸದಿದ್ದರೆ ಸಮಾಧಾನವಿರೋದಿಲ್ಲ. ಮತ್ತೇ ಹಲವರಿಗೆ ಇಂದಿರಾ ನೆಹರೂ ಫ಼್ಯಾಮಿಲಿ ಕಂಡರೆ ಕೆಂಡದಂಥ ಕೋಪ. ಅವರ ಬಗ್ಗೆ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳುವ ಹಾಗೇ ಇಲ್ಲ. ರಾಮನಿಗೆ ಬಾಬರ್ ಕಂಡರೆ ದ್ವೇಷದಂತೆ , ಬಾಬರ್ ಗೆ ರಾಮನನ್ನು ಕಂಡರೆ ಈರ್ಷ್ಯೆಯಂತೆ
ಅನ್ಯ ಧರ್ಮೀಯರ ಪ್ರತೀ ನಡೆಯಲ್ಲೂ ವಿವಾದ ಹುಡುಕುವ ಪ್ರಯತ್ನ ಮುಂದುವರೆಸುತ್ತಾ ಮಂದಿರ ಮಸೀದಿ ಗಳನ್ನು ವಾರ್ ಫ಼ೀಲ್ಡ್ ಮಾಡಿಕೊಂಡು ಬಿಟ್ಟಿರುತ್ತಾರೆ.

ಅನಗತ್ಯ ಪೋಸ್ಟ್ ಗಳಿಂದ ಸಾಮಾನ್ಯ‌ ಜನಜೀವನವನ್ನೇ ‌ಕಂಗೆಡಿಸಿಬಿಡುತ್ತಾರೆ. ಯಾವನೋ ಒಬ್ಬ ಒಂದು ಧರ್ಮದ ವಿಚಾರದಲ್ಲಿ ಅಯೋಗ್ಯತನದ ಕೆಲಸ ಮಾಡಿದರೆ, ಅಪರಾಧ ಮಾಡಿದರೆ ಅವನು ಮೊದಲು ಯಾವ ಪಾರ್ಟಿಯವನೆಂದು , ಯಾವ ಧರ್ಮಕ್ಕೆ ಸಂಘಟನೆಗೆ‌ ಸೇರಿದವನೆಂದು ‌ಅಳೆದು ತೂಗಿ ಪ್ರತಿಕ್ರಿಯಿಸುತ್ತಾರೆಯೇ ಹೊರತು ಅವನ‌ ಕುಕೃತ್ಯವನ್ನು ಮನಸಾರೆ ಖಂಡಿಸುವ ಹೃದಯ ವೈಶಾಲ್ಯತೆ ಇರುವುದಿಲ್ಲ.

ಅಂದರೆ ಧರ್ಮಾಂಧನೊಬ್ಬ ತನ್ನ ಜಾತಿ- ಧರ್ಮಕ್ಕೆ ಸೇರಿದವನಾಗಿ ಎಂತಹಾ ಹಲ್ಕಾ ಕೆಲಸ ಮಾಡಿದರೂ ಅವನನ್ನು‌ ನಿರ್ಲಜ್ಜವಾಗಿ ಸಮರ್ಥಿಸಿಕೊಳ್ಳುವ ಮನಸ್ಥಿತಿಯ ಮಹಾನುಭಾವರು ನಮ್ಮ‌ ನಡುವೆ‌ ಹೆಚ್ಚಾಗುತ್ತಿದ್ದಾರೆ . ಅವನ‌ ಜಾತಿ ಧರ್ಮ ಪಕ್ಷದ ಹಿನ್ನೆಲೆ ನೋಡದೇ ಕೇವಲ ಅವರ ತಪ್ಪು ತಪರಾಕಿಗಳನ್ನು‌ ನೀವು ವಸ್ತುನಿಷ್ಠ ವಾಗಿ ಬರೆದರೋ…ಅಲ್ಲಿಗೆ ನಿಮ್ಮ ಮೇಲೆ ಎಡ ಬಲ ಗಂಜಿ ಎಂಬಿತ್ಯಾದಿ ವಿಶೇಷಣಗಳ ಬಾಣಗಳಿಂದ ಇಲ್ಲ ಸಲ್ಲದ ಯುದ್ಧಕ್ಕೆ ರೆಡಿಯಾಗುವ ಮಹಾನ್ ಸರಸ್ವತಿ ಪುತ್ರರು ಸಾಮಾಜಿಕ ಜಾಲತಾಣಗಳ ಸೈನ್ಯದಲ್ಲಿ ಶಸ್ತ್ರ ಸಜ್ಜಿತರಾಗಿ ಕಾದುಕುಳಿತಿರುತ್ತಾರೆ.!!

ಯಾಕೆ ಹೀಗೆ…??? ಒಂದು‌ ವಿಷಯವನ್ನು ಅದರ ಸತ್ಯದ ಹಾಗೂ ವಾಸ್ತವದ ನೆರಳಲ್ಲೇ ನೋಡಿ ನೈಜತೆಯಿಂದ ಹೇಳುವ , ಬರೆಯುವ ಅಥವಾ ವಿಮರ್ಶಿಸುವ ಪರಿಸ್ಥಿತಿ ಸಾಮಾಜಿಕ ಜಾಲತಾಣದಲ್ಲಿ ಸಂಪೂರ್ಣವಾಗಿ ಕಾಣೆಯಾಗುತ್ತಿದೆಯೇ ? ವಾಸ್ತವಿಕ ನೆಲೆಗಟ್ಟಿನಲ್ಲಿ ಪ್ರಶ್ನಿಸುವುದು ಅಪರಾಧವಾಗಿ ಕಂಡುಬರುತ್ತಿದೆಯೇ ? ಎಲ್ಲವನ್ನೂ ನಮ್ಮ ನಮ್ಮ‌ ಮೂಗಿನ‌ ನೇರಕ್ಕೇ ನೋಡಿ ನಿರ್ಧರಿಸುವ ಪರಿಯೇ ಇಂದಿನ ಆದೇಶವೇ ? ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲದಂತೆ ವರ್ತಿಸುವ ರೀತಿಯಲ್ಲಿ ಮನುಷ್ಯನ ಕಾಮನ್ ಸೆನ್ಸ್ ಕಾಣೆಯಾಗುತ್ತಿರುವುದರ ಬಗ್ಗೆ ಯಃಕಿಂಚಿತ್ ಅಳುಕೂ, ಆತ್ಮವಿಮರ್ಶೆ ಇಲ್ಲವಾಗುತ್ತಿದೆಯೇ ?

ತಮಾಷೆ ಹಾಗೂ ವಿಪರ್ಯಾಸವೆಂದರೆ ಈ ಎಲ್ಲಾ ಉಲ್ಟಾ ಬೆಳವಣಿಗೆಗೆ ಅವಿದ್ಯಾವಂತರು ಕಾರಣರಲ್ಲ. ಅವರೆಲ್ಲಾ ಮೊದಲು ಹೇಗಿದ್ದರೋ ಈಗಲೂ ಅದೇ ಮುಗ್ದತೆ ಮತ್ತು ಅಮಾಯಕತನವನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ ವಿದ್ಯಾವಂತರೆನ್ನುವ ಗುಂಪುಗಳ ನಡುವೆ ಈ ವೈಷಮ್ಯದ ಮೇಲಾಟ ದ್ವೇಷಮಯವಾಗಿ ಮಾರ್ದನಿಸುತ್ತಿರುವುದು ದೇಶದ ಭವಿಷ್ಯಕ್ಕೇ ಮಾರಕ. ಇನ್ನೂ ನೋವೆಂದರೆ ಇದರ ಗಂಭೀರತೆಯನ್ನು ಅರಿಯದೇ ಅದನ್ನು ಪೋಷಿಸುವ ಕೆಲಸ ಅವ್ಯಾಹತವಾಗಿ ನೆಡೆಯುತ್ತಿರುವುದು !

ಗೆಳೆಯರೇ, ಸಾಮಾಜಿಕ ಜಾಲತಾಣದಲ್ಲಿ ಯಾರು ಯಾರನ್ನೂ ಬದಲಾಯಿಸಲು ಅಥವಾ ಪ್ರಭಾವ ಬೀರಲು ಸಾಧ್ಯವಿಲ್ಲ . ಎಲ್ಲರೂ ಅವರವರ ನೇರಕ್ಕೆ ಸರಿಯೇ ! ಆದರೆ ಒಂದು ವಿಚಾರ ತನಗೆ ಇಷ್ಟವಾಗದಿದ್ದರೂ ಒಂದು ಆರೋಗ್ಯಕರ ಚರ್ಚೆಗೆ ಒಳಪಡುವ ಮನಸು‌ ಬಹಳಷ್ಟು ಜನರಿಗೆ ಇಲ್ಲವಾಗಿರುವುದು ಆತಂಕಕಾರಿ ಪ್ರವೃತ್ತಿ. ಈ ರೀತಿಯ ರೋಗಗ್ರಸ್ತ ಮನಸುಗಳಿಂದ ನರಳುವವರ ಭಯಾನಕ ಕೃತ್ಯಗಳ ಪರಿಣಾಮ ಸಮಾಜದ ಭಾವೈಕ್ಯತೆಯ ದೃಷ್ಟಿಯಿಂದ ತೀರಾ ಅಪಾಯಕಾರಿ.

ಈ ಎಲ್ಲದಕ್ಕೂ ಕಾರಣ – ಸಮಾಜದ ಇಡೀ ವ್ಯವಸ್ಥೆಯನ್ನು ಬಹುಪಾಲು ಜನ ಪೂರ್ವಾಗ್ರಹ ಪೀಡಿತರಾಗಿ, ಹುಟ್ಟುವ ಮುನ್ನ ಹೀಗೇ ಇಂತಹದೇ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಗುಜರಾಯಿಸಿ ಹುಟ್ಟಿದವರಂತೆ ಭಾವಿಸಿ, ಹಳದಿ‌ ಕನ್ನಡಕ ಧರಿಸಿ ನೋಡುತ್ತಿರುವುದೇ ಆಗಿದೆ. ಆರೋಗ್ಯಕರ ಚರ್ಚೆಯ ತಕ್ಕಡಿಯಲ್ಲಿ ತೂಗಿದ ವಿಚಾರಗಳು ಎಲ್ಲರಲ್ಲೂ ಉತ್ಸಾಹ ಉಲ್ಲಾಸವನ್ನು‌ ಮೂಡಿಸುವಂತಿದ್ದರೂ ಅದನ್ನು ಮರೆತು ಜಾತಿ- ಧರ್ಮ, ಪಕ್ಷ, ಹುಸಿ ತತ್ವದ ಕುರುಡಲ್ಲಿ ವಾಸ್ತವವನ್ನು ಕಸದಂತೆ ಹೊಸೆದು ಬಿಸುಡುವ ದಾನವತೆ ಮೈಮೇಲೆ ಬಂದಂತಾಡುವ ಮನಸ್ಥಿತಿ ಮೆರೆಯುತ್ತಲಿದೆ.

ಮರೆಯುವ ಮುನ್ನ

ಕೇವಲ ಉನ್ನತ ವಿದ್ಯೆಯಿಂದ, ಹುದ್ದೆಯಿಂದ ನಾವು ದೊಡ್ಡವರಾಗುವುದಿಲ್ಲ. ನಾವು ಕಲಿತ ವಿದ್ಯೆ ನಮಲ್ಲಿನ ವಿವೇಕ‌, ಬುದ್ದಿ ಹಾಗೂ ಮುಖ್ಯವಾಗಿ ಸಾಮಾನ್ಯ ಜ್ಞಾನವನ್ನು ವೃದ್ದಿಗೊಳಿಸುವಂತಿದ್ದರೆ ಮಾತ್ರವೇ ವಿದ್ಯಾವಂತರಾಗಿದ್ದಕ್ಕೂ ಸಾರ್ಥಕ. ಇಲವಾದಲ್ಲಿ ಅದು ನಾಯಿ ಮೊಲೆಯಲ್ಲಿನ ಹಾಲಂತೆ ಸಮಾಜಕ್ಕೆ‌ ನಿಷ್ಪ್ರಯೋಜಕ. ನಮ್ಮಿಂದ ಮತ್ತೊಬ್ಬರಿಗೆ ಒಳ್ಳೆಯದಾಗದಿದ್ದರೂ ಪರವಾಗಿಲ್ಲ ಆದರೆ ಕೆಟ್ಟದ್ದನ್ನು ಬಯಸುವ, ಮಾಡುವ ಕೆಲಸ ಆಗದಿದ್ದರೆ ಅದೂ ಈ ಸಮಾಜಕ್ಕೆ ಮಾಡುವ ಉಪಕಾರದಂತೆ ! ದೀಪದಿಂದ ದೀಪ ಹಚ್ಚುವ ಕೆಲಸವಾಗಬೇಕೇ ವಿನಃ ಬೆಂಕಿ ಹಚ್ಚುವ ಕೃತ್ಯವಾಗಬಾರದು. ಸಾಮಾಜಿಕ ಜಾಲತಾಣಗಳು ತಂತ್ರಜ್ಞಾನ ಇವೆಲ್ಲವನ್ನೂ ಮನುಷ್ಯತ್ವದ ತತ್ವದಾಧರದಲ್ಲಿ ಆರೋಗ್ಯಕರ ರೀತಿಯಲ್ಲಿ‌ ಬಳಸಿದರೆ ಮಾತ್ರವೇ ನಾಡಿಗೆ ಕ್ಷೇಮ ! ಇಲ್ಲವಾದಲ್ಲಿ ಮುಂದೊಂದು ದಿನ ಅದರಿಂದ ಮಾನವೀಯ ಮೌಲ್ಯಗಳ ಕ್ಷಾಮ !

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending