ದಿನದ ಸುದ್ದಿ
ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!
- ವಿವೇಕಾನಂದ. ಹೆಚ್.ಕೆ.
ಸಾಮಾಜಿಕ ಜಾಲತಾಣಗಳ ಮೇಲೆ ಇರುವ ಒಂದು ದೊಡ್ಡ ಆರೋಪ ಇಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳು ಬಹು ವೇಗವಾಗಿ ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿವೆ. ಅವುಗಳಲ್ಲಿ ಬಿತ್ತರವಾಗುವ ಸಂದೇಶಗಳನ್ನು ಮಾನಿಟರ್ ಮಾಡಬೇಕು ಮತ್ತು ಶಿಕ್ಷೆ ವಿಧಿಸಬೇಕು ಎಂಬ ಕೂಗಿನ ಜೊತೆ ಕೆಲವು Watsapp ಗುಂಪುಗಳಲ್ಲಿ Forward ಮಾಡುವ ಸಂದೇಶಗಳಿಂದ ನಿರ್ವಾಹಕರು ತೊಂದರೆಗೆ ಆಗುವ ಭಯ ಕಾಡುತ್ತಿದೆ.
ಹಾಗಾದರೆ ವಾಸ್ತವ ಏನು ?
ಸುಳ್ಳು ವಂಚನೆ ಮೋಸ ವಿಷ ಕಾರುವ ಪ್ರಚೋದನಕಾರಿ ವಿಷಯಗಳು ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ ಯಾವಾಗಲೂ ಕಾನೂನು ಬಾಹಿರವೇ,ಅನೈತಿಕವೇ ಮತ್ತು ನಿಷಿದ್ಧವೇ. ಅದು ಸೋಷಿಯಲ್ ಮೀಡಿಯಾ ಆಗಲಿ ಅಥವಾ ಎಲ್ಲೇ ಆಗಿರಲಿ ಅದನ್ನು ಒಪ್ಪುವ ಪ್ರಶ್ನೆಯೇ ಇಲ್ಲ.
ಒಂದು ವೇಳೆ ಅದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಅತ್ಯಂತ ಅಪಾಯಕಾರಿ ಹಂತ ತಲುಪಿದೆ ಎಂದು ಹೇಳಿದರೆ ಇಡೀ ಸಮಾಜದ ಮಾನಸಿಕ ವರ್ತನೆಯ ಬಗ್ಗೆಯೇ ಅನುಮಾನಿಸಬೇಕಾಗುತ್ತದೆ. ಹಾಗಾದರೆ ನಾವೆಲ್ಲರೂ ಸುಳ್ಳು ವಂಚನೆಯ ಸಮಾಜದಲ್ಲಿ ಬದುಕುತ್ತಿದ್ದೇವೆಯೇ ಅಥವಾ ಅದನ್ನು ಅರ್ಥಮಾಡಿಕೊಳ್ಳುವ ಬುದ್ದಿ ಶಕ್ತಿ ನಮಗಿಲ್ಲವೇ.
ಇದನ್ನೂ ಓದಿ | ದಿ ಗ್ರೇಟೆಸ್ಟ್ ಇಂಡಿಯನ್ ಡಾ.ಅಂಬೇಡ್ಕರ್..!
ಸ್ವಲ್ಪ ಯೋಚಿಸಿ ನೋಡಿದರೆ ಸಾಮಾಜಿಕ ಜಾಲತಾಣಗಳನ್ನು ಅತಿಹೆಚ್ಚು ಸದುಪಯೋಗ ಮತ್ತು ದುರುಪಯೋಗ ಪಡಿಸಿಕೊಂಡ ಕುಖ್ಯಾತಿ ರಾಜಕೀಯ ಪಕ್ಷಗಳು ಮತ್ತು ಸಂಘಟನಾತ್ಮಕ ಪಂಥಗಳಿಗೆ ಸಲ್ಲುತ್ತದೆ.
ಇವು ಈ ಜಾಲತಾಣಗಳ ನಿರ್ವಹಣೆಗೆ ಏಜೆಂಟರುಗಳನ್ನು ನೇಮಿಸಿಕೊಂಡರು. ಕೆಲವು ಅಧೀಕೃತ ಮತ್ತೆ ಕೆಲವು ಅನಧಿಕೃತ. ಇವುಗಳ ಕೆಲಸ ಇತಿಹಾಸವನ್ನು ತಿರುಚುವುದು, ಅದನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸುವುದು, ಮಹಾಪುರುಷರ ಸಂದೇಶಗಳನ್ನು ತಪ್ಪಾಗಿ ಬರೆದು ತಮ್ಮ ಪರವಾಗಿ ತಿದ್ದುವುದು, ವಿರೋಧಿಗಳನ್ನು ದೇಶದ್ರೋಹಿಗಳಂತೆ ಚಿತ್ರಿಸುವುದು, ಇಲ್ಲಸಲ್ಲದ ಆರೋಪಗಳನ್ನು ಜಾಣ್ಮೆಯಿಂದ ಇತರರ ತಲೆಗೆ ಕಟ್ಟುವುದು.
ಪೋಟೋ ಶಾಪ್ ಸಂಕಲನ ತಂತ್ರದಿಂದ ಯಾರದೋ ತಲೆಗೆ ಇನ್ಯಾರನ್ನೋ ಜೋಡಿಸುವುದು, ಸುಳ್ಳು ಧ್ವನಿ ಸುರಳಿಗಳನ್ನು ಪ್ರಸಾರ ಮಾಡುವುದು, ಇತ್ತೀಚೆಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮುಸ್ಲಿಂಮನೊಬ್ಬ ಹಿಂದೂ ವೇಷ ಧರಿಸಿ, ಹಿಂದೂ ಒಬ್ಬ ಮುಸ್ಲಿಂ ವೇಷ ಧರಿಸಿ ಅನಾಹುತಕಾರಿಯಾಗಿ ಮಾತನಾಡುವುದು ಮುಂತಾದ ಅನೇಕ ಕುತಂತ್ರಗಳನ್ನು ಹರಿಯ ಬಿಡುತ್ತಾರೆ. ಇದು ಕೊನೆಗೆ ನಿಜ ಮತ್ತು ಸುಳ್ಳುಗಳ ನಡುವಿನ ವ್ಯತ್ಯಾಸಗಳನ್ನೇ ಗೊಂದಲಗೊಳಿಸಿದೆ. ಅದರ ಲಾಭವನ್ನು ಅವು ಪಡೆದರೆ ನಷ್ಟ ಮಾತ್ರ ಜನರ ಪಾಲಿಗೆ.
ಹಾಗಾದರೆ ಸುದ್ದಿಗಳ ನಿಖರತೆಯನ್ನು ಗುರುತಿಸುವುದು ಹೇಗೆ ?
ನೋಡಿ ಈಗಿನ ವ್ಯವಸ್ಥೆಯಲ್ಲಿ ಇದಕ್ಕೆ ದಿಡೀರನೇ ಒಂದು ಸ್ಪಷ್ಟ ಪರಿಹಾರ ಸಿಗುವುದಿಲ್ಲ. ಸತ್ಯ ಹರಿಶ್ಚಂದ್ರರ ಉಗಮವೂ ಆಗುವುದಿಲ್ಲ. ಇರುವುದರಲ್ಲಿ ನಾವು ಒಪ್ಪಬಹುದಾದ ಒಂದು ಸರಳ ಪರಿಹಾರವೆಂದರೆ..
ಏನೇ ಆಪಾದನೆಗಳು, ಪಕ್ಷಪಾತಗಳು, ವಿವೇಚನಾರಹಿತ ವಿಮರ್ಶೆಗಳು, ಸ್ಪರ್ಧಾತ್ಮಕ ತಂತ್ರಗಳು ಇದ್ದರೂ ಈಗಲೂ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಲ್ಲಿ ಹೆಚ್ಚು ಕಡಿಮೆ ನಂಬಲರ್ಹ ಸುದ್ದಿಗಳು ಪ್ರಸಾರವಾಗುತ್ತವೆ. ಅಧೀಕೃತ ಸುದ್ದಿ ಸಂಸ್ಥೆಗಳು, ಸರ್ಕಾರದ ಆಡಳಿತ ವ್ಯವಸ್ಥೆ, ಪೋಲೀಸ್, ಮುಂತಾದ ಎಲ್ಲವೂ ಮೊದಲು ಸುದ್ದಿಗಳನ್ನು ಇವುಗಳಿಗೆ ಕಳುಹಿಸುತ್ತವೆ.
ಈ ಮಾಧ್ಯಮಗಳಿಗೆ ಗೊತ್ತಿಲ್ಲದ ವಿಶ್ವದ ಯಾವುದೇ ದೊಡ್ಡ ಘಟನೆಗಳು ಇರುವುದೇ ಇಲ್ಲ. ಏನೇ ಅಪರಾಧ, ಅಪಘಾತ, ಅವಘಡ, ಸಾಧನೆ, ಪತನ, ಕ್ರಾಂತಿ, ಬದಲಾವಣೆ ಎಲ್ಲವೂ ಬಹುತೇಕ ಮಾಧ್ಯಮಗಳಿಗೆ ತಿಳಿಸಲಾಗುತ್ತದೆ. ಹಾಗೆಂದು ಸಂಪೂರ್ಣ ಎಲ್ಲವೂ ಎಂದು ಅಲ್ಲ.
ಕೆಲವು ಅಪರೂಪದ, ಕುತಂತ್ರದ, ಜನರಿಗೆ ಮರೆಮಾಚಿದ ಸುದ್ದಿಗಳು ಇರುತ್ತವೆ. ಆದರೆ ಅದು ಬಯಲಾಗುವುದು ಸಹ ಮಾಧ್ಯಮಗಳಿಂದಲೇ. ಯಾರೋ ಒಬ್ಬ ಜನಪ್ರಿಯ ವ್ಯಕ್ತಿಯ ಸಾವು ಮೊದಲು ಅಲ್ಲಿನ ಸ್ಥಳೀಯ ಜನರಿಗೆ ತಲುಪಿ, ಸಾಮಾಜಿಕ ಜಾಲತಾಣಗಳಲ್ಲಿ ಬಂದರೂ ಕೆಲವೇ ಕ್ಷಣಗಳಲ್ಲಿ ಮಾಧ್ಯಮಗಳಲ್ಲಿ ಬಂದೇ ಬರುತ್ತದೆ.
ಹಾಗೆಯೇ ಈ ಮಾಧ್ಯಮಗಳಲ್ಲಿ ಒಂದಷ್ಟು ಊಹೆ, ಆತುರ, ಕೆಟ್ಟ ವಿಮರ್ಶೆ, ವ್ಯಕ್ತಿ ನಿಂದನೆ ಇರುತ್ತದೆ. ಆದರೆ ತಲೆಬುಡವಿಲ್ಲದ ಅತ್ಯಂತ ಅಪಾಯಕಾರಿ ಸುದ್ದಿಗಳನ್ನು ಪ್ರಸಾರ ಮಾಡಲು ಭಯಪಡುತ್ತಾರೆ. ಏಕೆಂದರೆ ಅವರು ಸುದ್ದಿಗಳನ್ನು ಖಚಿತ ಪಡಿಸಿಕೊಳ್ಳುವ ವ್ಯವಸ್ಥೆ ಹೊಂದಿದ್ದಾರೆ ಮತ್ತು Accountability ಇದೆ. ಅವರ ಮೇಲೆಯೂ ಮಾನಹಾನಿ ಮೊಕದ್ದಮೆ ಹೂಡಬಹುದು.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ರೀತಿಯ ವ್ಯವಸ್ಥೆ ಇಲ್ಲ. ಯಾರೋ ಒಬ್ಬ ವ್ಯಕ್ತಿ ವೈಯಕ್ತಿಕ ಸಂದೇಶವನ್ನು ಅಥವಾ ದೃಶ್ಯಗಳನ್ನು ಬೇಕಂತಲೇ ಹರಿಯ ಬಿಡಬಹುದು. ಅದು ಹೊಸದೋ ಹಳೆಯದೋ ನಿಜವೋ ಸುಳ್ಳೋ ಯಾರಿಗೂ ತಿಳಿಯುವುದಿಲ್ಲ ಮತ್ತು ಅದಕ್ಕೆ ಯಾರೂ ಜವಾಬ್ದಾರರಿರುವುದಿಲ್ಲ. ನೀವು ಯಾರನ್ನು ಪ್ರಶ್ನಿಸಲು ಸಿಗುವುದಿಲ್ಲ.
ಈಗ ಕೊರೋನಾ ವೈರಸ್ ದಾಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಕೆಲವು ನಿಭಂದನೆಗಳನ್ನು ವಿಧಿಸಿದೆ ಎಂಬ ಮಾಹಿತಿ ಇದೆ. ಇದು ಹೊಸದೇನು ಅಲ್ಲ. ಎಂದಿನಂತೆ ಸುಳ್ಳು ಪ್ರಚೋದನಕಾರಿ ವಿಷಯಗಳಿಗೆ ಮಾತ್ರ ಸಂಬಂಧಿಸಿದೆ. ಸತ್ಯವನ್ನು, ಸ್ವತಂತ್ರ ಅಭಿಪ್ರಾಯವನ್ನು,
ಅಧೀಕೃತ ಮಾಹಿತಿಯನ್ನು ಕಾನೂನು ಮತ್ತು ನೈತಿಕತೆಯ ಮಿತಿಯೊಳಗೆ ವ್ಯಕ್ತಪಡಿಸಲು ಯಾವುದೇ ಅಂಜಿಕೆ ಬೇಡ.
Forward ಮಾಡುವ ವಿಷಯದಲ್ಲಿ ಮಾತ್ರ ಜಾಗೃತವಾಗಿರಿ. ಒಂದು ವೇಳೆ ಸುದ್ದಿಯೊಂದು ಮಾಧ್ಯಮಗಳಲ್ಲಿ ಪ್ರಸಾರವಾಗದೆ ಕೇವಲ ಜಾಲತಾಣಗಳಲ್ಲಿ ಮಾತ್ರ ಹರಿದಾಡುತ್ತಿದ್ದರೆ ಅದನ್ನು ಅಷ್ಟಾಗಿ ನಂಬಬಾರದು ಮತ್ತು Forward ಮಾಡಬಾರದು. ಯಾರೋ ದೇಶಭಕ್ತಿಯ ಹೆಸರಿನಲ್ಲಿ, ದೇವರ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ಏನನ್ನೋ ಹೇಳಿದರೆ ಅದನ್ನು ಓದಬಹುದೇ ಹೊರತು Forward ಮಾಡಬಾರದು.
ಬೇಕಾದರೆ ಅದರ ಸಾರಾಂಶವನ್ನು ಸ್ವತಂತ್ರ ಅಭಿಪ್ರಾಯದೊಂದಿಗೆ ಮತ್ತು ಒಂದು ಅನುಮಾನದೊಂದಿಗೆ ಸ್ವತಃ ಬರೆಯಬಹುದು. ಕರೋನ ಔಷಧಿ, ಸಾವಿನ ಅಂಕಿ ಸಂಖ್ಯೆಗಳು ಮುಂತಾದ ವಿಷಯಗಳ ಬಗ್ಗೆ ಯಾವುದೇ ಸಂದೇಶ ಕಳಿಸಬಾರದು. ಹೊಸ ಸಂಶೋಧನಾ ವರದಿ ಸರ್ಕಾರಕ್ಕೆ ಮಾತ್ರ ಕಳುಹಿಸಿ.
ಸುಳ್ಳುಗಳನ್ನೇ ಧೈರ್ಯವಾಗಿ ರಾಜಾರೋಷವಾಗಿ ಪ್ರಸಾರ ಮತ್ತು ಪ್ರಚಾರ ಮಾಡುವ ಸಂದರ್ಭದಲ್ಲಿ, ಅದರ ಮುಖಾಂತರವೇ ಸಮಾಜವನ್ನು ನಿಯಂತ್ರಣ ಪಡೆಯುವ ಸಮಯದಲ್ಲಿ ಸತ್ಯ ಹೇಳುವವರು ಹೆದರಿಕೊಳ್ಳಬಾರದು. ಸುಳ್ಳು ಸತ್ಯವನ್ನು ಸೋಲಿಸಲು ಬಿಡಬಾರದು.
ಖಂಡಿತವಾಗಿಯೂ ಸತ್ಯ ಸುಳ್ಳಿಗಿಂತ ಹೆಚ್ಚು ಬಲಶಾಲಿ ಮತ್ತು ಪರಿಣಾಮಕಾರಿ. ಆದರೆ ನಾವು ನಿಜಕ್ಕೂ ಪ್ರಾಮಾಣಿಕರಾಗಿರಬೇಕು ಮತ್ತು ಗಟ್ಟಿ ವ್ಯಕ್ತಿತ್ವ ಹೊಂದಿರಬೇಕು. ನಮಗೆ ಅನುಕೂಲಕರ ಮುಖವಾಡ ತೊಟ್ಟು ಸತ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ. ನಮ್ಮ ನಡೆ ನುಡಿ ನೇರವಾಗಿದ್ದರೆ ಸುಳ್ಳನ್ನು ಗೆಲ್ಲುಬಹುದು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ ‘ಅಲ್ಲಮಪ್ರಭು’
ಆದ್ದರಿಂದ ವ್ಯವಸ್ಥೆ ಯಾವುದೇ ಇರಲಿ, ಮಾಧ್ಯಮ ಯಾವುದೇ ಇರಲಿ, ಕಾನೂನು ಏನೇ ಹೇಳಲಿ, ಸುಳ್ಳು ಪ್ರಚೋದನೆ ಅನೈತಿಕತೆ ಖಂಡಿತ ಶಿಕ್ಷಾರ್ಹ ಅಪರಾಧ ಮತ್ತು ಅಮಾನವೀಯ ಹಾಗೂ ದೇಶದ್ರೋಹ. ಆದರೆ ಸತ್ಯಕ್ಕೆ, ಸಮಾಜ ಒಪ್ಪಿತ, ಕಾನೂನಿನ ವ್ಯಾಪ್ತಿಯ ನೈತಿಕತೆಗೆ ಯಾವುದೇ ತಡೆ ಇಲ್ಲ.
ಸಾಮಾನ್ಯ ಜ್ಞಾನ ಇಲ್ಲಿ ಮುಖ್ಯ
ಸಾಮಾಜಿಕ ಜಾಲತಾಣಗಳು ಸಾಮಾನ್ಯ ಜನರ ಪ್ರಜಾಪ್ರಭುತ್ವದ ಒಂದು ಅತ್ಯುತ್ತಮ ವೇದಿಕೆ. ಅದರ ಧ್ವನಿ ಅಡಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದು. ಕೆಟ್ಟದ್ದರ ನೆಪದಲ್ಲಿ ಒಳ್ಳೆಯದನ್ನು ನಾಶ ಮಾಡುವುದು ಬೇಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ5 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ5 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ5 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



