ದಿನದ ಸುದ್ದಿ
ಎಣ್ಣೆ ಕಾಳು ಕೃಷಿಗೆ ವಿಶೇಷ ಆದ್ಯತೆ; ಸ್ವಾವಲಂಬನೆಗೆ ಒತ್ತು : ಸಚಿವೆ ಶೋಭಾ ಕರಂದ್ಲಾಜೆ
ಸುದ್ದಿದಿನ ಡೆಸ್ಕ್ : ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿದ್ದು, ರೈತರಿಗೆ ಕಾಲಕಾಲಕ್ಕೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿಯ ಮತ್ತಿಕೊಪ್ಪ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರು ಹಾಗೂ ಸಿಬ್ಬಂದಿ ವಸತಿ ಗೃಹ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಸಣ್ಣ ಹಿಡುವಳಿದಾರರ ಕೃಷಿ ಚಟುವಟಿಕೆಗೆ ಆದ್ಯತೆ ನೀಡಲಾಗುತ್ತಿದೆ. ತಾವು ಬೆಳೆದ ಉತ್ಪನ್ನಗಳನ್ನು ಸ್ವತಃ ಮಾರಾಟ ಮಾಡಬೇಕು. ಉತ್ಪಾದನೆಯು ದ್ವಿಗುಣಗೊಳ್ಳುವಂತೆ ತಾಂತ್ರಿಕತೆ ಅಳವಡಿಸಿಕೊಳ್ಳಬೇಕು. ರೈತರಿಗೆ ಶಕ್ತಿ ತುಂಬಲು ಕೇಂದ್ರ ಬಜೆಟ್ನಲ್ಲಿ 1 ಲಕ್ಷದ 32 ಸಾವಿರ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದರು.
ಕೃಷಿ ತಾಂತ್ರಿಕತೆ ಅಭಿವೃದ್ಧಿಗೆ 800 ಕೋಟಿ ರೂಪಾಯಿ ನಿಗದಿಮಾಡಿದ್ದು, ಇದು ಅತಿ ಹೆಚ್ಚಿನ ಮೊತ್ತವಾಗಿದೆ. ಕೃಷಿಯಿಂದ ಜಿಡಿಪಿಗೆ ಶೇಕಡ 22.5ರಷ್ಟು ಕೊಡುಗೆ ಇದ್ದು, ಕೇಂದ್ರ ಸರಕಾರ ಜಾರಿಗೊಳಿಸುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನ ಕೆಡದಂತೆ ರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅನೇಕ ಉಪಕ್ರಮಗಳನ್ನು ಅಳವಡಿಸಲಾಗಿದೆ. ಕೃಷಿ ಆಧಾರಿತ ಉದ್ದಿಮೆಗಳನ್ನು ಪ್ರಾರಂಭಿಸಲು ಶೇಕಡ 3ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದ್ದು ರಫ್ತು ಚಟುವಟಿಕೆಯನ್ನು ಉತ್ತೇಜಿಸಲಾಗುತ್ತಿದೆ. ಎಣ್ಣೆ ಕಾಳು ಕೃಷಿಗೆ ಹಲವು ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದ್ದು, ಸೂರ್ಯಕಾಂತಿ ತೈಲ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಒತ್ತು ನೀಡಲಾಗಿದೆ ಎಂದು ಸಚಿವೆ ಶೋಭ ಕರಂದ್ಲಾಜೆ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243