Connect with us

ದಿನದ ಸುದ್ದಿ

ಸಮೀಪಿಸುತ್ತಿದೆ ಎಸ್.ಎಸ್.ಎಲ್.ಸಿ ಪರೀಕ್ಷೆ ; ಹೆಚ್ಚಾಗುತ್ತಿದೆ ಅಂಕ ಗಳಿಕೆಯ ನಿರೀಕ್ಷೆ..?

Published

on

ಸಾಂದರ್ಭಿಕ ಚಿತ್ರ
  • ಕುಮಾರಸ್ವಾಮಿ.ವಿ.ಕೆ,ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,ತೋಟಗೆರೆ, ಬೆಂಗಳೂರು ಉತ್ತರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಈಗ ದಿನಗಣನೆ ಆರಂಭವಾಗಿದೆ. ನಿರಂತರ ಅಭ್ಯಾಸದಲ್ಲಿರುವ ವಿದ್ಯಾರ್ಥಿಗಳು ಕೆಲವೇ ದಿನಗಳಲ್ಲಿ ಪರೀಕ್ಷೆ ಬರೆದು ನಿರಾಳಗೊಳ್ಳಲಿದ್ದಾರೆ. ವರ್ಷಪೂರ್ತಿ ಅಭ್ಯಾಸ ಮಾಡಿದ ಪಾಠಗಳನ್ನು ಕೇವಲ ಮೂರು ಗಂಟೆಗಳ ಪರೀಕ್ಷೆಯಲ್ಲಿ ಬರಯುವುದು ಅತ್ಯಂತ ಸವಾಲಿನ ಕೆಲಸವೂ ಹೌದು. ಹೀಗಾಗಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಇಲ್ಲೊಂದಿಷ್ಟು ಸೂಚನೆಗಳು.

ಪುನರ್ಮನನವಷ್ಟೇ ಬಾಕಿ

ವಿದ್ಯಾರ್ಥಿಗಳು ಈಗಾಗಲೇ ನಿರಂತರ ಅಭ್ಯಾಸದಲ್ಲಿ ತೊಡಗಿದ್ದು, ಪರೀಕ್ಷೆ ಬರೆಯಲು ಸಂಪೂರ್ಣವಾಗಿ ತಯಾರಿ ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಎಲ್ಲವನ್ನೂ ಓದಲು ಸವiಯಾವಕಾಶ ಇಲ್ಲದಿರುವುದರಿಂದ ಈಗಾಗಲೇ ಮಕ್ಕಳು ಕಲಿತಿರುವ ವಿಷಯಗಳನ್ನು ಪುನರರ್ಮನನ ಮಾಡಬೇಕಿದೆ. ತಾವು ತಯಾರಿಸಿಟ್ಟುಕೊಂಡಿರುವ ಮುಖ್ಯಾಂಶಗಳು, ಟಿಪ್ಪಣಿಗಳು ಇತ್ಯಾದಿ ಅಧ್ಯಯನ ಸಾಮಗ್ರಿಗಳನ್ನು ದಿನಕ್ಕೊಮ್ಮೆ ಮೆಲುಕು ಹಾಕುವುದರಿಂದ ಪರೀಕ್ಷೆಗೆ ಸಾಕಷ್ಟು ಅನುಕೂಲವಾಗುತ್ತದೆ.

ಒತ್ತಡ ಬೇಡ

ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಸೇರಿ ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಎದುರಿಸಿಯಾಗಿದೆ. ಸದರಿ ಪರೀಕ್ಷೆಗಳಲ್ಲಿ ಮಕ್ಕಳಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದ ಸಾಕಷ್ಟು ನಿರ್ದೇಶನಗಳು ದೊರೆತಿರುತ್ತವೆ. ಆದ್ದರಿಂದ ಮಕ್ಕಳು ಯಾವುದೇ ಹಂತದಲ್ಲಿ ತಮ್ಮ ಮೇಲೆ ಒತ್ತಡ ಹಾಕಿಕೊಳ್ಳದೆ ನಿರಾತಂಕವಾಗಿದ್ದಾಗ ಮಾತ್ರ ಹೆಚ್ಚು ಅಂಕ ಗಳಿಸಲು ಸಾಧ್ಯ. ಅಲ್ಲದೇ ಹಿಂದಿನ ಪರೀಕ್ಷೆಗಳಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಇದು ಸಕಾಲವಾಗಿದೆ.

ಎರಡು ವರ್ಷಗಳ ಅಂತರ

ಹಾಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿರುವ ವಿದ್ಯಾರ್ಥಿಗಳು ಶಾಲೆಗಳಲ್ಲಿ ನೇರ ಪರೀಕ್ಷೆ ಬರೆದು ಎರಡು ವರ್ಷಗಳಾಗಿವೆ. ಏಳನೇ ತರಗತಿಯ ಪರೀಕ್ಷೆ ಮುಗಿಸಿದ ನಂತರ ಕೊರೋನಾ ಕಾರಣದಿಂದ ಬಹುತೇಕ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆದಿವೆ. ಹೀಗಾಗಿ ಮಕ್ಕಳಿಗೆ ಸಹಜವಾಗಿಯೇ ಶೈಕ್ಷಣಿಕ ಅಂತರ ಕಾಡುತ್ತಿರುತ್ತದೆ. ಅದೂ ಅಲ್ಲದೇ ಬರವಣಿಗೆ ಶೈಲಿಯೂ ಬದಲಾಗಿರುತ್ತದೆ. ಹೀಗಾಗಿ ಮಕ್ಕಳು ಉಳಿದಿರುವ ಕಾಲಾವಧಿಯಲ್ಲಿ ಹೆಚ್ಚು ಬರವಣಿಗೆಗೆ ಮಹತ್ವ ಕೊಡಬೇಕಿದೆ.

ಪಠ್ಯ ಪುಸ್ತಕವೆಂಬ ಸ್ನೇಹಿತ

ಮಕ್ಕಳಲ್ಲಿ ಹತ್ತಾರು ರೀತಿಯ ಅಧ್ಯಯನ ಸಾಮಗ್ರಿಗಳು ಈಗಾಗಲೇ ಇರಬಹುದು ನಿಜ. ಆದರೆ ಎಲ್ಲಕ್ಕಿಂತ ಮಿಗಿಲಾಗಿ ಯಾವ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಓದಿಗೆ ಪ್ರಾಮುಖ್ಯತೆ ನೀಡುತ್ತಾರೋ, ಸಹಜವಾಗಿಯೇ ಅವರ ಅಂಕಗಳಿಕೆ ಹೆಚ್ಚಾಗುತ್ತದೆ. ಪರೀಕ್ಷೆಗೆ ಬರುವ ಯಾವುದೇ ಪ್ರಶ್ನೆಗಳು ಪಠ್ಯ ಪುಸ್ತಕವನ್ನು ಆಧರಿಸಿರುತ್ತವೆ. ಆದ್ದರಿಂದ ಮಕ್ಕಳು ಹೆಚ್ಚಾಗಿ ಪಠ್ಯ ಪುಸ್ತಕವನ್ನು ಒಳ್ಳೆಯ ಸ್ನೇಹಿತನಂತೆ ಬಳಸಿಕೊಳ್ಳಬೇಕಿದೆ.

ಇರುವ ಭಾಗ್ಯವ ನೆನೆದು ಬಾರನೆಂಬುದನು ಬಿಡು! :

ಬಹುತೇಕ ವಿದ್ಯಾರ್ಥಿಗಳು ಮಾಡುತ್ತಿರುವ ದೊಡ್ಡ ತಪ್ಪೇನೆಂದರೆ ಪ್ರಶ್ನೆ ಪತ್ರಿಕೆಯನ್ನು ಓದಿದಾಗ ತಮಗೆ ಗೊತ್ತಿಲ್ಲದಿರುವ ಯಾವುದೋ ಒಂದೆರಡು ಪ್ರಶ್ನೆಗಳ ಬಗ್ಗೆ ಗಾಬರಿಯಾಗಿ ಅದನ್ನೇ ಚಿಂತಿಸುತ್ತಾ ಕುಳಿತು, ಗೊತ್ತಿರುವ ಪ್ರಶ್ನೆಗಳ ಉತ್ತರವನ್ನೂ ಮರೆಯುತ್ತಿದ್ದಾರೆ. ಇದರಿಂದ ಅವರ ಅಂಕ ಗಳಿಕೆಯ ಮೇಲೆ ಋಣಾತ್ಮಕ ಪ್ರಭಾವ ಬೀರುವುದು ಖಚಿತ. ಆದ್ದರಿಂದ ಮೊದಲು ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯುವುದನ್ನು ರೂಢಿಸಿಕೊಳ್ಳಬೇಕಿದೆ.

ಹಳೆಯ ಪ್ರಶ್ನೆ ಪತ್ರಿಕೆಗಳ ವಿಮರ್ಶೆ

ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಸಹಾಯ ಮಾಡುವುದೇ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ವರದಾನವೇ ಆಗಿದೆ. ಪ್ರೌಢ ಶಿಕ್ಷಣ ಮಂಡಳಿಯಲ್ಲಿರುವ ಲಭ್ಯವಿರುವ ಹಿಂದಿನ ಮೂರು ನಾಲ್ಕು ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಮಕ್ಕಳು ಅಭ್ಯಸಿಸಿದಾಗ ಅವರಿಗೆ ಪರೀಕ್ಷೆ ಬರೆಯಲು ಇನ್ನೂ ವಿಶ್ವಾಸ ಹೆಚ್ಚಾಗುತ್ತದೆ. ಅಲ್ಲದೇ ಗೊತ್ತಿಲ್ಲದಿರುವ ಸುಮರು ಪ್ರಶ್ನೆಗಳಿಗೆ ಉತ್ತರವೂ ಸಿಗುತ್ತದೆ.

ಶಿಕ್ಷಕರೊಂದಿಗೆ ಸಂಪರ್ಕ

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅಭ್ಯಸಿಸುವ ಮುನ್ನ ಸಂಬAಧಿಸಿದ ವಿಷಯ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸ್ವಯಂ ಅಭ್ಯಾಸ ಮಾಡಿದಾಗ ಎಲ್ಲವೂ ಗೊಂದಲಮಯವಾಗಿ ಪರೀಕ್ಷೆಗೆ ತೊಡಕಾಗುವುದು ಖಚಿತ. ಆದ್ದರಿಂದ ತಮಗೆ ಏನೇ ಸಂದೇಹಗಳು ಬಂದಲ್ಲಿ ಕೂಡಲೇ ಅದನ್ನು ಶಿಕ್ಷಕರಿಂದ ಬಗೆಹರಿಸಿಕೊಂಡು ಮುಂದೆ ಸಾಗಬೇಕು.

ಬಿಡುವಿಲ್ಲದ ಓದು ಬೇಡ

ಹೆಚ್ಚು ಅಂಕಗಳಿಕೆ ನಿರೀಕ್ಷೆಯಲ್ಲಿರುವ ಮಕ್ಕಳು ಎರಡು – ಮೂರು ಗಂಟೆಗಳ ನಿರಂತರ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಸ್ಮರಣ ಶಕ್ತಿ ಕಡಿಮೆಯಾಗುವುದು ಖಚಿತ. ಆದ್ದರಿಂದ ಮಕ್ಕಳು ಕನಿಷ್ಠ ಅರ್ಧ ಗಂಟೆ ಓದಿ ನಂತರ ಹತ್ತರಿಂದ ಹದಿನೈದು ನಿಮಿಷಗಳ ಬ್ರೇಕೆ ಪಡೆದಾಗ ಓದಿದ ವಿಚಾರಗಳು ಮನಸ್ಸಿನಲ್ಲೇ ಉಳಿಯುತ್ತವೆ. ಓದುವಾಗ ಯಾವುದೇ ವಿಧಧ ಗದ್ದಲವಿರದ ಸ್ಥಳದ ಆಯ್ಕೆ ಅತಿ ಅಗತ್ಯ.

ಪರೀಕ್ಷೆಗೆ ಅಗತ್ಯವಾದ ಪ್ರಮುಖ ಸೂಚನೆಗಳು

  1. ಬರವಣಿಗೆ ಸ್ಫುಟವಾಗಿರಲಿ ಸಮಯದ ಹೊಂದಾಣಿಕೆ ಅತ್ಯಗತ್ಯ
  2. ಪ್ರಶ್ನೆ ಪತ್ರಿಕೆಯನ್ನು ಚೆನ್ನಾಗಿ ಓದಿ ನೋಂದಣಿ ಸಂಖ್ಯೆಯನ್ನು ತಪ್ಪಿಲ್ಲದೆ ಬರೆಯಿರಿ
  3. ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ಬರೆಯಿರಿ ಮರೆಯದೆ ಪ್ರವೇಶ ಪತ್ರವನ್ನು ಒಯ್ಯಿರಿ
  4. ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಪರೀಕ್ಷೆಗೆ ಬೇಕಾದ ಉಪಕರಣಗಳನ್ನು ಮರೆಯದೆ ತೆಗೆದುಕೊಂಡು ಹೋಗಿ
  5. ಪರೀಕ್ಷೆಗೆ ಮುನ್ನ ಅನಗತ್ಯ ಚರ್ಚೆ ಬೇಡ ಪರೀಕ್ಷೆಗೆ ಒಂದು ಗಂಟೆಗಿಂತ ಮುಂಚೆ ಓದುವುದನ್ನು ನಿಲ್ಲಿಸಿ
  6. ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿರಿ
  7. ವದಂತಿಗಳಿಗೆ ಕಿವಿ ಕೊಡಬೇಡಿ
  8. ಸಡಿಲವಾದ ಉಡುಪುಗಳನ್ನು ಧರಿಸಿ ಪರೀಕ್ಷೆಯನ್ನು ಒಂದು ಹಬ್ಬದಂತೆ ಸ್ವೀಕರಿಸಿ
  9. ಪರೀಕ್ಷೆ ಮುಗಿಯವರೆಗೂ ಮೊಬೈಲ್, ಟಿವಿ ವೀಕ್ಷಣೆಯಿಂದ ದೂರವಿರಿ ನಿಯಮಿತ ನಿದ್ದೆ, ಧ್ಯಾನ, ವ್ಯಾಯಾಮಗಳಂತಹ ಕ್ರಿಯೆ ನಿಮ್ಮ ಸ್ಮರಣಯನ್ನು ಹೆಚ್ಚು ಮಾಡುತ್ತದೆ.
  10. ಎಲ್ಲಾ ವಿಷಯದ ಪರೀಕ್ಷೆ ಮುಗಿಯುವವರೆಗೂ ಮಾದರಿ ಉತ್ತರಗಳ ಬಗ್ಗೆ ಚಿಂತಿಸದಿರಿ ಕೇವಲ ಅಂಕಗಳಿಗಾಗಿ ಅಲ್ಲ, ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆ ಬರೆಯಿರಿ.
  11. ಮುಖ್ಯಾಂಶಗಳಿಗೆ ಅಡಿಗೆರೆ ಹಾಕಿರಿ ಅಪರಿಚಿತರಿಗೆ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡದಿರಿ.
  12. ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಿ ಉತ್ತರ ಪತ್ರಿಕೆಯನ್ನು ಹಿಂತಿರುಗಿಸುವ ಮುನ್ನ ಗಮನವಿಟ್ಟು ಪರಿಶಿಲೀಸಿ.
  13. ಎಲ್ಲಾ ಪ್ರಶ್ನೆಗಳಿಗೂ ತಪ್ಪದೇ ಉತ್ತರಿಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಕರ ನಿರ್ದೇಶನದಂತೆ ಸಹಿ ಮಾಡಲು ಮರೆಯದಿರಿ
    ಓದುವ ಕೋಣೆ ಗಾಳಿ, ಬೆಳಕಿನಿಂದ ಕೂಡಿರಲಿ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ

(ಕುಮಾರಸ್ವಾಮಿ.ವಿ.ಕೆ
ಮುಖ್ಯ ಶಿಕ್ಷಕರು,
ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,
ತೋಟಗೆರೆ, ಬೆಂಗಳೂರು ಉತ್ತರ
ಮೊ : ೯೧೧೩೯೦೬೧೨೦)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending