Connect with us

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಭೆ ಮಕ್ಕಳು ಅಂಕಗಳ ಬೆನ್ನತ್ತುವುದರೊಂದಿಗೆ ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ : ನೋಡಲ್ ಅಧಿಕಾರಿ ರಘುವೀರ ಬಿ.ಎಸ್

Published

on

ಸುದ್ದಿದಿನ,ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸೋಣ ಎಂದು ದಾವಣಗೆರೆ ಜಿಲ್ಲಾ ಎಸ್.ಎಸ್.ಎಲ್.ಸಿ ಪರೀಕ್ಷಾ ನೋಡಲ್ ಅಧಿಕಾರಿಗಳು ಹಾಗೂ ಧಾರವಾಡದ ಸಿಸ್ಲೆಪ್‍ನ ನಿರ್ದೇಶಕ ರಘುವೀರ ಬಿ.ಎಸ್ ಹೇಳಿದರು.

ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮುಖ್ಯೋಪಾಧ್ಯಯರ ಸಂಘ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯುವ ಪರೀಕ್ಷೆಗಳಲ್ಲಿ ಫಲಿತಾಂಶದ ಬಗ್ಗೆ ಎಲ್ಲರಿಗೂ ಹೆಚ್ಚಿನ ಆಸಕ್ತಿ ಇದೆ. ಅದರಂತೆ ಪರಿಶ್ರಮ ಪಟ್ಟರೆ ಒಳ್ಳೆಯ ಅವಕಾಶಗಳು ಸಿಗಲಿವೆ ಹಾಗಾಗಿ ಪರೀಕ್ಷೆಯ ಬಗ್ಗೆ ಭಯ ಇಟ್ಟುಕೊಳ್ಳದೆ, ಆತ್ಮಸ್ಥೆರ್ಯದಿಂದ ಮಕ್ಕಳು ಪರೀಕ್ಷೆ ಬರೆಯಲು ಪ್ರೇರೇಪಿಸಿ ಎಂದರು.

ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ ಮಾತನಾಡಿ, ಈ ಪರೀಕ್ಷೆ ಜಿಲ್ಲೆಯ 22226 ವಿದ್ಯಾರ್ಥಿಗಳ ಭವಿಷ್ಯ, ವಿಧ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ ನಡೆಯಲಿ, ಅತಿಯಾದ ಆತ್ಮವಿಶ್ವಾಸ ಬೇಡ, ಪರೀಕ್ಷೆಗಳ ಆರಂಭದಿಂದ ಅಂತ್ಯದವರೆಗೂ ಎಲ್ಲಾ ಅಧಿಕಾರಿಗಳು ಎಚ್ಚರದಿಂದಿರಬೇಕು.

ಈ ಹಿಂದಿನ ಎಲ್ಲಾ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿದ ಹೆಗ್ಗಳಿಕೆ ನಮ್ಮ ಜಿಲ್ಲೆಗಿದೆ ಹಾಗಾಗಿ ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆಗಳು ಸುವ್ಯವಸ್ಥೆಯಿಂದ ನಡೆಯಲಿ ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಪರೀಕ್ಷಾ ದಿನಗಳಂದು ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಮತ್ತು ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹಲವಾರು ಮಾರ್ಪಾಡುಗಳಾಗುತಿದ್ದು ಎಸ್.ಓ.ಪಿ ಗಳನ್ನು ಸರಿಯಾಗಿ ಪಾಲಿಸಿ. ಈ ಬಾರಿ ಪರೀಕ್ಷೆಯಲ್ಲಿ ಆರೋಗ್ಯ ಅಧಿಕಾರಿಗಳ ಪಾತ್ರವೂ ಹೆಚ್ಚಾಗಿದೆ, ಪರೀಕ್ಷೆ ನಡೆಯುವ ಮುನ್ನ ಹಾಗೂ ನಂತರ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು, ಎಲ್ಲರೂ ಒಗ್ಗಟ್ಟಿನಿಂದ ಮುಂಜಾಗೃತೆವಹಿಸಿ ಜಿಲ್ಲೆಗೆ ಒಳ್ಳೆಯ ಹೆಸರು ತರುವ ಪ್ರಯತ್ನ ಮಾಡುವ ಮಾಡೋಣ ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್ ಮಾತನಾಡಿ, ಕಳೆದೆರಡು ವರ್ಷಗಳಿಂದ ಕೋವಿಡ್ ನಿಂದಾಗಿ ನಮ್ಮ ಜಿಲ್ಲೆಯ ಫಲಿತಾಂಶದಲ್ಲಿ 16, 17 ನೇ ಸ್ಥಾನದಲ್ಲಿದೆ. ಶಿಕ್ಷಕರು ಮಕ್ಕಳಿಗೆ ಕೇವಲ ಪುಸ್ತಕದಲ್ಲಿರುವ ಪಠ್ಯಗಳನ್ನು ತಿಳಿಸುವುದರ ಜೊತೆಗೆ ಸಂವಹನ, ನಾಯಕತ್ವದ ಗುಣಗಳ ಬಗ್ಗೆ ಮಾರ್ಗದರ್ಶನವನ್ನು ತಿಳಿಸುವುದರೊಂದಿಗೆ ಜಿಲ್ಲೆಯಲ್ಲಿ ಶಿಕ್ಷಣದ ಶೇಕಡವಾರು ಪ್ರಗತಿ ಸಾಧಿಸಲು ಶ್ರಮಪಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೋವಿಡ್ ಒಂದನೆಯ, ಎರಡನೇ, ಮೂರನೇ ಅಲೆ ಹೀಗೆ ಬರೀ ಅಲೆಗಳನ್ನು ನೋಡುತ್ತಿದ್ದ ನಾವು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದಲೂ ಒಂದೂ ಕೋವಿಡ್ ಪ್ರಕರಣ ಇಲ್ಲದಿರುವುದು ಹೆಮ್ಮೆಯ ವಿಷಯ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಸಹಾಯಕರು/ಆಶಾ ಕಾರ್ಯಕರ್ತೆಯರನ್ನು (ಅಗತ್ಯ ಔಷಧಗಳೊಂದಿಗೆ) ನಿಯೋಜಿಸಲಾಗುವುದು.

ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳು ಇದ್ದರೆ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿಯಂತೆ ಎಸೆಸೆಲ್ಸಿ ಪರೀಕ್ಷೆಗೆ ಆರೋಗ್ಯ ಇಲಾಖೆಯ ಎಲ್ಲಾ ಸಹಕಾರ ನೀಡುತ್ತೇವೆ ಎಂದರು.

ಡಿ.ಡಿಪಿ.ಐ ಜಿ.ಆರ್ ತಿಪ್ಪೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 22,226 ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದು, ಒಟ್ಟು 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಕೆ.ಎಸ್.ಆರ್.ಟಿ.ಸಿ ಯವರು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ ಜಿಲ್ಲೆಯಲ್ಲಿ ಉತ್ತಮವಾಗಿ ಪರೀಕ್ಷೆ ನಡೆಯಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಎಲ್ಲಾ ಮುಂಜಾಗೃತ ಕ್ರಮ ವಹಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೀಕ್ಷಕ ಎಸ್.ವಿ.ಬಿ. ಪ್ರಸಾದ್, ಜಿಲ್ಲಾ ಪ್ರೌಢ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹಾಲಪ್ಪ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥಯ್ಯ, ಡಿವೈಪಿಸಿಗಳು ಎಲ್ಲಾ ವಿಷಯದ ಪರಿವೀಕ್ಷಕರು ಹಾಗೂ ಎಪಿಸಿಗಳು, ಬಿಇಓಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.

ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್‌ನ ‘ಯೂನಿವರ್ಸಿಟಿ ಆಫ್ ಸ್ಯಾಲ್‌ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.

ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್‌ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending