Connect with us

ದಿನದ ಸುದ್ದಿ

ಹತ್ತರ ಮಕ್ಕಳು ಏರಬೇಕು ಇನ್ನೂ ಎತ್ತರ; ಇಲ್ಲವಾದರೆ ಪರೀಕ್ಷೆಯಲ್ಲಿ ತತ್ತರ..!

Published

on

  • ಕುಮಾರಸ್ವಾಮಿ ವಿ ಕೆ,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಶಾಲೆ, ಬೆಂಗಳೂರು

2022 – 23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಅಂತೆಯೇ ಈ ಬಾರಿಯ ಶೈಕ್ಷಣಿಕ ಚಟುವಟಿಕೆಗಳೂ ಸಹ ನಿರ್ವಿಘ್ನವಾಗಿ ಸಾಗಿವೆ. ಆದರೆ ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳು ಮಕ್ಕಳನ್ನು ಇನ್ನೂ ಕಾಡುತಿವೆ. ಮಂಕಾಗಿದ್ದ ಮಕ್ಕಳಿಗೆ ಶಾಲೆ ಪುನರಾರಂಭ ಸಂತಸ ತಂದಿದ್ದರೂ ಹಲವು ಮಕ್ಕಳು ಈಗಲೂ ಶಿಕ್ಷಣದ ಮುಖ್ಯ ವಾಹಿನಿಗೆ ಬಂದಿಲ್ಲ. ಹೀಗಾಗಿ ಪರೀಕ್ಷೆ ತಯಾರಿ ಕುರಿತು ಇಲ್ಲೊಂದು ಲೇಖನ.

ಪಾಠಗಳ ಪರಿಚಯ ಅಗತ್ಯ

ಪರೀಕ್ಷೆಗಾಗಿ ದಿನಗಳನ್ನು ಎಣಿಸುತ್ತಿರುವ ಈ ಹೊತ್ತಿನಲ್ಲಿ ಅನೇಕ ಮಕ್ಕಳಿಗೆ ಈಗಲೂ ತಾವು ಅಭ್ಯಸಿಸುತ್ತಿರುವ ವಿಷಯಗಳ ಅಧ್ಯಾಯಗಳ ಹೆಸರೇ ನೆನಪಿಲ್ಲ. ಇದು ಮೂಲಭೂತ ಅವಶ್ಯಕತೆಯಾಗಿದ್ದು, ಮಕ್ಕಳಿಗೆ ಮೊದಲು ತಾವು ಓದುತ್ತಿರುವ ಎಲ್ಲಾ ವಿಷಯದ ಅಧ್ಯಾಯಗಳ ಪರಿಚಯ ಅತ್ಯಗತ್ಯ. ಇದು ಮಕ್ಕಳ ಮೊದಲ ಕರ್ತವ್ಯವಾಗಿದ್ದು, ಪಾಠಗಳ ಹೆಸರು ನೆನಪಿದ್ದರೆ ಮಾತ್ರ ಅವುಗಳ ಬಗ್ಗೆ ಕನಿಷ್ಠ ಮಾಹಿತಿಗಳು ನೆನಪಿಗೆ ಬರಲು ಸಾಧ್ಯ. ಹೀಗೆ ಅಧ್ಯಾಯಗಳನ್ನು ನೆನಪಿಟ್ಟುಕೊಂಡಾಗ ಅದರಲ್ಲಿ ಅಡಕವಾಗಿರುವ ಪಠ್ಯಾಂಶಗಳನ್ನು ಸುಲಭವಾಗಿ ಪುನರ್ಮನನ ಮಾಡಿಕೊಳ್ಳಲು ಸಾಧ್ಯ.

ಗುರಿ ಮುಟ್ಟಲು ಜೊತೆಗಿರಲಿ ಎರಡನೇ ಗುರು

ಶಾಲೆಗಳಲ್ಲಿ ಎಲ್ಲಾ ವಿಷಯ ಶಿಕ್ಷಕರು ಈಗಾಗಲೇ ತಮ್ಮ ತಮ್ಮ ಬೋಧನಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಬಂದಿರುತ್ತಾರೆ ಹಾಗೂ ಪರೀಕ್ಷೆ ಕುರಿತು ಕಾಲಕಾಲಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮಕ್ಕಳಿಗೂ ಸಹ ನೀಡುತ್ತಿರುತ್ತಾರೆ. ಶಿಕ್ಷಕರ ನಂತರ ಮಕ್ಕಳಿಗೆ ಎರಡನೇ ಗುರುವೆಂದರೆ ಅದು ಪಠ್ಯ ಪುಸ್ತಕ. ಅತ್ಯುತ್ತಮ ಅಂಕ ಗಳಿಕೆಯ ಗುರಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಅಭ್ಯಾಸ ಅತ್ಯಂತ ಸಹಕಾರಿಯಾಗಿದೆ.

ಆದ್ದರಿಂದ ಮಕ್ಕಳು ತಪ್ಪದೆ ಪಠ್ಯ ಪುಸ್ತಕಗಳನ್ನು ಅಭ್ಯಸಿಸಬೇಕು ಹಾಗೂ ಅದರಲ್ಲಿನ ಮುಖ್ಯಾಂಶಗಳನ್ನು ಒಂದೆಡೆ ಬರೆದಿಟ್ಟುಕೊಂಡರೆ ಒಳಿತು. ಇಂತಹ ಹವ್ಯಾಸ ಬೆಳೆಸಿಕೊಂಡ ವಿದ್ಯಾರ್ಥಿಗಳ ಫಲಿತಾಂಶ ಬಹುತೇಕ ಅಧಿಕವಾಗಿರುತ್ತದೆ ಮತ್ತು ಗುಟ್ಟಮಟ್ಟದಿಂದ ಕೂಡಿರುತ್ತದೆ. ವಿದ್ಯಾರ್ಥಿಗಳ ಬಳಿ ಎಂತಹುದೇ ಅಧ್ಯಯನ ಸಾಮಗ್ರಿಗಳು ಇದ್ದರೂ, ಪಠ್ಯ ಪುಸ್ತಕವನ್ನು ಓದಿ ಅರ್ಥೈಸಿಕೊಂಡರೆ ಅದರ ಪ್ರತಿಫಲವೂ ಅತ್ಯುತ್ತಮವಾಗಿಯೇ ಇರುತ್ತದೆ. ಹೀಗೆ ಆಳವಾಗಿ ಅಧ್ಯಯನ ಮಾಡುವ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೂ ಸಹ ನೆರವಾಗುತ್ತದೆ.

ಓದಿಗಿರಲಿ ಪ್ರತ್ಯೇಕ ವೇಳಾಪಟ್ಟಿ

ಬಹುತೇಕ ವಿದ್ಯಾರ್ಥಿಗಳಲ್ಲಿ ಕಂಡುಬರುವ ಕೊರತೆ ಎಂದರೆ ಕೇವಲ ಬರವಣಿಗೆಗೆ ಹೆಚ್ಚು ಆದ್ಯತೆ ಕೊಡುವುದು. ಅದರಲ್ಲೂ ಹೆಚ್ಚಾಗಿ ಚಟುವಟಿಕೆಗಳ ರಚನೆಗೆ ಹೆಚ್ಚು ಸಮಯ ಮೀಸಲಿಡುವುದರಿಂದ ಓದಿಗೆ ಸಮಯ ಸಿಗದೆ ಮಾಸಿಕ ಪರೀಕ್ಷೆ, ಘಟಕ ಪರೀಕ್ಷೆಯ ಸಮಯದಲ್ಲಿ ಮಕ್ಕಳು ಕಡಿಮೆ ಅಂಕಗಳಿಸಲು ಕಾರಣವಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಪ್ರತಿದಿನ ಓದಿಗಾಗಿಯೇ ಪ್ರತ್ಯೇಕ ಸಮಯವನ್ನು ಮೀಸಲಿಡಬೇಕು. ಆ ಸಮಯದಲ್ಲಿ ಯಾವುದೇ ವಿಧದ ಬರವಣಿಗೆಗೆ ಆದ್ಯತೆ ನೀಡಬಾರದು. ಓದಿದ ಪ್ರಶ್ನೋತ್ತರಗಳನ್ನು ಒಮ್ಮೆ ಬರೆದರೆ ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತದೆ. ಓದುವ ವೇಳೆ ಸಂಪೂರ್ಣ ಏಕಾಗ್ರತೆ ಇರಲಿ. ಗಾಳಿ ಬೆಳಕಿನ ವ್ಯವಸ್ಥೆ ಚೆನ್ನಾಗಿರಲಿ. ಯಾವುದೇ ಬಗೆಯ ಅಡೆತಡೆಗಳು ಇರದಿರಲಿ. ಓದಿನ ನಡುವೆ ಆಗಾಗ ಸ್ವಲ್ಪ ವಿರಾಮವೂ ಸಹ ಅಗತ್ಯ.

ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಸಂಗ್ರಹ

ವಾರ್ಷಿಕ ಪರೀಕ್ಷೆಯನ್ನು ಎದುರಿಸುವ ಮುನ್ನ ವಿದ್ಯಾರ್ಥಿಗಳು ಹಿಂದಿನ ಐದಾರು ವರ್ಷದ ಪ್ರಶ್ನೆ ಪತ್ರಿಕೆಗಳನ್ನಯ ಗಮನಿಸುವುದರಿಂದ ಪರೀಕ್ಷೆಯ ಭಯ ಇಲ್ಲದಂತಾಗಿ ಆತ್ಮವಿಶ್ವಾಸ ಹೆಚ್ಚುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಉತ್ತರ ಬರೆಯುವ ಕೌಶಲ್ಯ ಸಹ ಲಭಿಸುತ್ತದೆ. ತಾವು ಉತ್ತರಿಸಿದ ಪ್ರಶ್ನೆಗಳನ್ನು ವಿದ್ಯಾರ್ಥಿಗಳೇ ಸ್ವ ಮೌಲ್ಯಮಾಪನ ಮಾಡಿಕೊಂಡಾಗ ತಮ್ಮ ತಪ್ಪಿನ ಅರಿವಾಗುತ್ತದೆ ಹಾಗೆಯೇ ಮುಂದೆ ಇಂತಹ ತಪ್ಪುಗಳು ಆಗದಂತೆ ಎಚ್ಚರ ವಹಿಸಲು ಸಹಕಾರ ಸಿಗುತ್ತದೆ. ಇಷ್ಟೇ ಅಲ್ಲದೆ ವಿದ್ಯಾರ್ಥಿಗಳು ಸ್ವತಃ ತಾವೇ ಅಧ್ಯಾಯವಾರು ಪ್ರಶ್ನೆಗಳನ್ನು ರಚಿಸಿಕೊಂಡು ಅದಕ್ಕೆ ಉತ್ತರಿಸಿದರೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಪ್ರಶ್ನೆ ಪತ್ರಿಕೆಯ ವಿನ್ಯಾಸ ತಿಳಿಯಲು ಸಹ ಈ ವಿಧಾನ ನೆರವಾಗುತ್ತದೆ.

ಎಲ್ಲವೂ ಮಿತಿಯಲ್ಲಿರಲಿ

ಓದಿನಂತೆಯೇ ಮಕ್ಕಳಿಗೆ ಆಟ, ವಿಹಾರ, ಆಹಾರವೂ ಮುಖ್ಯ. ಈ ರೀತಿಯ ವಿಧಾನಗಳನ್ನ ಅನುಸರಿಸುವುದರಿಂದ ಮಕ್ಕಳಲ್ಲಿ ಓದಿದ್ದು ಹೆಚ್ಚು ಕಾಲ ಉಳಿಯುತ್ತದೆ. ಉತ್ತಮ ನಿದ್ದೆ, ಆಟಗಳಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಅಂತೆಯೇ ಆಹಾರವೂ ಸಹ ಬಹು ಮುಖ್ಯ. ಸರಿಯಾದ ಸಮಯಕ್ಕೆ ಈ ಚಟುವಟಿಕೆಗಳು ನಡೆಯದಿದ್ದರೆ ಮಕ್ಕಳಲ್ಲಿ ಒತ್ತಡ ಹೆಚ್ಚುವ ಸಾಧ್ಯತೆ ಹೆಚ್ಚಿರುತ್ತದೆ. ಪ್ರತಿನಿತ್ಯ ಮಕ್ಕಳೊಂದಿಗೆ ಪೋಷಕರು ಹತ್ತಿಪ್ಪತ್ತು ನಿಮಿಷ ಚರ್ಚಿಸಿ ವಿದ್ಯಾಭ್ಯಾಸದಲ್ಲಿ ಮಗುವಿಗೆ ಏನಾದರೂ ಒತ್ತಡಗಳಿವೆಯೇ ಎಂದು ತಿಳಿದು ಅದಕ್ಕೆ ಸೂಕ್ತ ಪರಿಹಾರಗಳನ್ನು ಒದಗಿಸಬೇಕು, ಒತ್ತಡದಿಂದ ಹಲವು ಮಕ್ಕಳು ಆಹಾರ ಸೇವನೆಯಿಂದ ದೂರ ಉಳಿಯುತ್ತಿರುವುದು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ ಹೀಗಾಗಿ ಪೋಷಕರು ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಬೇಕು.

ಸಹಪಾಠಿಗಳೊಂದಿಗೆ ಚರ್ಚೆ

ತನ್ನ ಪ್ರತಿಭಾವಂತ ಸಹಪಾಠಿಗಳೊಂದಿಗೆ ಪ್ರತಿದಿನ ಚರ್ಚೆಯಲ್ಲಿ ತೊಡಗುವ ಮೂಲಕವೂ ಮಗು ಯಾವುದೇ ಪಠ್ಯ ವಿಷಯದಲ್ಲಿ ತನಗಿರುವ ತೊಂದರೆಯನ್ನು ಪರಿಹರಿಸಿಕೊಳ್ಳಬಹುದು. ಇದು ಸಹ ಪರಿಣಾಮಕಾರಿ ಹಾದಿಯಾಗಿದ್ದು ಅತಿ ವೇಗದ ಕಲಿಕೆಗೆ ಪ್ರೋತ್ಸಾಹ ದೊರೆಯುತ್ತದೆ. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗಂತೂ ಇದರಿಂದ ಹೆಚ್ಚು ಅನುಕೂಲಗಳು ಲಭಿಸುತ್ತವೆ. ಓದಿದ ವಿಚಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಾಗ ಅದು ದೀರ್ಘಾವಧಿಯವರೆಗೆ ಮನಸ್ಸಿನಲ್ಲಿ ಉಳಿಯುತ್ತದೆ.

ಶಿಕ್ಷಕರೊಂದಿಗೆ ನಿರಂತರ ಸಂಪರ್ಕ

ಮಕ್ಕಳು ತಮಗೆ ಬರುವ ಸಂದೇಹಗಳನ್ನು ತತಕ್ಷಣವೇ ಸಂಬಂಧಿಸಿದ ಶಿಕ್ಷಕರ ನೆರವಿನೊಂದಿಗೆ ಪರಿಹರಿಸಿಕೊಳ್ಳಬೇಕು. ಸದಾಕಾಲ ಶಿಕ್ಷಕರ ಸಂಪರ್ಕದಲ್ಲಿದ್ದುಕೊಂಡು ಓದಿಗೆ ಪೂರಕ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕು. ಶಾಲೆಗೆ ಹೆಚ್ಚು ಗೈರು ಹಾಜರಾಗದೆ ಅಂದಿನ ಕೆಲಸಗಳನ್ನು ಬಾಕಿ ಇಲ್ಲದಂತೆ ಮಾಡಿ ಮುಗಿಸಿಕೊಳ್ಳಬೇಕು. ಇದರಿಂದ ಮಗುವಿನಲ್ಲಿ ನಿರಾಳತೆ ನಿರ್ಮಾಣವಾಗಿ ಶಾಂತ ರೀತಿಯ ಕಲಿಕೆಗೆ ಅವಕಾಶ ಸಿಗುತ್ತದೆ.

ಮೊಬೈಲ್ ಹುಚ್ಚು; ಹಚ್ಚುವುದು ಕಿಚ್ಚು

ಇಂದು ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಅತಿ ಹೆಚ್ಚು ಕೇಳಿ ಬರುತ್ತಿರುವ ದೂರೆಂದರೆ ಅತಿಯಾದ ಮೊಬೈಲ್ ಬಳಕೆ. ಲಾಕ್‌ ಡೌನ್ ಅವಧಿಯಲ್ಲಿ ಮಕ್ಕಳ ಕೈಗೆ ಸಿಕ್ಕ ಮೊಬೈಲ್ ಸಹವಾಸ ಇಂದಿಗೂ ಸಹ ನಿರಂತರವಾಗಿ ಮುಂದುವರಿಯುತ್ತಿದ್ದು, ಇದು ಮಕ್ಕಳ ಓದಿನ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮವನ್ನು ಬೀರುತ್ತಿದೆ. ಅನೇಕ ಮಕ್ಕಳು ಈಗಲೂ ಮೊಬೈಲ್ ದಾಸರಾಗಿದ್ದು ಮಿತಿಮೀರಿದ ಬಳಕೆಯಿಂದ ಅವರ ಸ್ಮರಣ ಶಕ್ತಿ ಮತ್ತು ಧಾರಣ ಶಕ್ತಿ ಕ್ಷೀಣಿಸುತ್ತಿದೆ. ಈ ಬಗ್ಗೆ ಗಮನ ವಹಿಸುವುದು ಪ್ರತಿ ಪೋಷಕರ ಆದ್ಯ ಕರ್ತವ್ಯವಾಗಿದೆ. ಏಕೆಂದರೆ ಬಹುತೇಕ ಮಕ್ಕಳು ಮೊಬೈಲ್ ಫೋನನ್ನು ಶೈಕ್ಷಣಿಕ ಉದ್ದೇಶಕ್ಕೆ ಬಳಸದೆ, ಗೇಮ್ ಆಡಲು, ಅಶ್ಲೀಲ ಚಿತ್ರ ವೀಕ್ಷಣೆ, ಪ್ರೀತಿ ಪ್ರೇಮದ ಬಲೆಗೆ ಮಕ್ಕಳು ಬೀಳುತ್ತಿದ್ದಾರೆ. ಕೆಲವೊಮ್ಮೆ ಪೋಷಕರ ಅತಿಯಾದ ಪ್ರೀತಿ ಸಹ ಮಕ್ಕಳನ್ನು ಕ್ಲಿಷ್ಟಕರ ಪರಿಸ್ಥಿತಿಗೆ ತಳ್ಳುತ್ತಿದೆ. ಇದು ಮಗುವಿನ ಜೀವನಕ್ಕಲ್ಲದೆ ಜೀವಕ್ಕೂ ಅಪಾಯ ತರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಆದ್ದರಿಂದ ಈಗಲಾದರೂ ಇದಕ್ಕೆ ಕಡಿವಾಣ ಹಾಕಬೇಕಿದೆ.

ಬದಲಾಗಿದೆ ಮಕ್ಕಳ ವರ್ತನೆ

ಕೋವಿಡ್ ಸಮಯದಲ್ಲಿ ಮನೆಯಲ್ಲೇ ಉಳಿದಿದ್ದ ಮಕ್ಕಳ ವರ್ತನೆಯಲ್ಲಿ ಇಂದು ಹೆಚ್ಚು ಋಣಾತ್ಮಕ ಬದಲಾವಣೆಗಳು ಕಂಡುಬರುತ್ತಿವೆ. ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸುವುದಕ್ಕಿಂತ ಹೆಚ್ಚಾಗಿ ಅವರ ನಡಾವಳಿಯನ್ನು ಸರಿಮಾಡುವುದರಲ್ಲೇ ಹೆಚ್ಚು ಸಮಯ ವ್ಯರ್ಥವಾಗುತ್ತದೆ. ಶಿಕ್ಷಣ ವ್ಯವಸ್ಥೆಯ ಒಂದು ಭಾಗವಾಗಿರುವ ಪೋಷಕರು ಕೈಗೂಡಿಸಿದಾಗ ಮಾತ್ರ ಇದಕ್ಕೆ ಸೂಕ್ತ ಪರಿಹಾರ ಒದಗಿಸಲು ಸಾಧ್ಯ.

ಏಕೆಂದರೆ ಶಾಲೆಗಳಲ್ಲಿ ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗುವ ನಮ್ಮ ಶಿಕ್ಷಕ ಬಂಧುಗಳು, ಪ್ರತೀ ಮಗುವಿನ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುತ್ತಾರೆ. ಆದರೆ ಈ ನಡುವೆ ಅಸಹಜ ನಡವಳಿಕೆ ತೋರುವ ಮಕ್ಕಳಿಂದ ಇಡಿಯ ತರಗತಿ ಅಸ್ತವ್ಯಸ್ತತವಾಗಿ ಪ್ರತಿಭಾವಂತ ಮಕ್ಕಳಿಗೂ ತೊಂದರೆಗಳು ಆಗುತ್ತಿವೆ. ಆದ್ದರಿಂದ ಇಂತಹ ಮಕ್ಕಳ ಮೇಲೆ ಪೋಷಕರು ಸಹ ತೀವ್ರ ನಿಗಾ ವಹಿಸಿ ತಮ್ಮ ಮಗುವನ್ನ ನೈತಿಕ ಹಾದಿಗೆ ತರಬೇಕಿದೆ.

ಅತಿಯಾದ ಕೋಪ, ಸುಳ್ಳು ಹೇಳುವುದು, ಪುಂಡ ಗೆಳೆಯರ ಸಹವಾಸ, ಬೀಡಿ, ಸಿಗರೇಟ್ ಚಟ, ಮದ್ಯಪಾನದಂತಹ ಸಮಸ್ಯೆಗಳು ಕಂಗೆಡಿಸಿವೆ. ಎಳೆಯ ವಯಸ್ಸಿನಲ್ಲಿಯೇ ಇವುಗಳಿಗೆ ಮಕ್ಕಳು ದಾಸರಾದರೆ ಮುಂದೆ ಈ ಸಮಾಜದ ಅಡಿಪಾಯ ಅಲುಗಾಡುವುದರಲ್ಲಿ ಸಂಶಯವೇ ಇಲ್ಲ. ಹಿರಿಯರ ಮಾತಿನಂತೆ “ಎಷ್ಟು ಓದಿದ್ದೇವೆ ಎನ್ನುವುದು ಮುಖ್ಯವಲ್ಲ; ಆ ಓದಿನಿಂದ ಏನು ಕಲಿತಿದ್ದೇವೆ ಎಂಬುದೇ ಮುಖ್ಯ” ಹೀಗಾಗಿ ಇದು ಇಂದು ತುರ್ತಾಗಿ ಬಗೆಹರಿಸಬೇಕಾದ ಸಮಸ್ಯೆಯಾಗಿದೆ.

ಕಲಿಕೆಗಾಗಿ ದಶ ಸೂತ್ರಗಳು

  1. ಅನೇಕ ಮಕ್ಕಳು ಕೇವಲ ಉತ್ತರಗಳನ್ನು ಕಲಿಯುತ್ತಾರೆ, ಆದರೆ ಪ್ರಶ್ನೆಯೂ ಅತಿ ಮುಖ್ಯ
  2. ಓದಿನಲ್ಲಿ ಶ್ರದ್ಧೆ, ಆಸಕ್ತಿ ಇರಲಿ, ಒತ್ತಡ ಬೇಡ
  3. ಕಲಿಕೆಯಲ್ಲಿ ಖುಷಿ ಇರಲಿ
  4. ಕಿರು ಪರೀಕ್ಷೆ, ಘಟಕ ಪರೀಕ್ಷೆಗಳನ್ನೂ ಸಹ ಮುಖ್ಯ ಪರೀಕ್ಷೆ ಎಂದೇ ಭಾವಿಸಿ
  5. ಓದಿನ ನಡುವೆ ವಿಶ್ರಾಂತಿ ಅತ್ಯಗತ್ಯ
  6. ಪರೀಕ್ಷೆ ಯುದ್ಧವಲ್ಲ; ಅದೊಂದು ಹಬ್ಬವೆಂದು ಅಭ್ಯಸಿಸಿ
  7. ಪದ್ಯಗಳು, ಗಣಿತದ ಸೂತ್ರಗಳು, ಭೂಪಟ, ವಿಜ್ಞಾನದ ಚಿತ್ರಗಳು, ವ್ಯಾಕರಣ ಎಲ್ಲವನ್ನೂ ಪ್ರತಿನಿತ್ಯ ಅಭ್ಯಸಿಸಿ
  8. ಓದುವ ಕೋಣೆ ದೇವರ ಕೋಣೆಯಷ್ಟೇ ಸ್ವಚ್ಛ ಮತ್ತು ಶಾಂತವಾಗಿರಲಿ
  9. ಗೊತ್ತಿರುವ ಪ್ರಶ್ನೋತ್ತರಗಳನ್ನು ಮರೆಯದಂತೆ ನಿತ್ಯವೂ ಒಮ್ಮೆ ಅಭ್ಯಸಿಸಿ
  10. ಓದು, ಓದಿದ್ದನ್ನು ಬರೆ, ಬರೆದದ್ದನ್ನು ಪರಿಶೀಲಿಸು

(ಕುಮಾರಸ್ವಾಮಿ ವಿ ಕೆ
ಪ್ರೌಢಶಾಲಾ ಮುಖ್ಯ ಶಿಕ್ಷಕರು
ಸಿದ್ಧಾರ್ಥ ಆಂಗ್ಲ ಶಾಲೆ
ಬೆಂಗಳೂರು ಉತ್ತರ
9113906120)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಮತದಾರ ದೇವರು’ ಎಂದ‌ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೇರು ನಟ ಡಾ.ರಾಜ್‌ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.

ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.

ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.

ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.

ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.

ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.

ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.

ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ

ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.

ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.

ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.

ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.

ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.

ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.

ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.

ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.

ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.

ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.

ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್‌ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.

ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.

ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.

ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.

ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.

ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.

ಕವಿತಾ ಮನ್ನಿಕೇರಿ, ಜಿಲ್ಲಾಧಿಕಾರಿ, ವಿಜಯನಗರ

ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್‌ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್‌ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.

ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್‌ ಡಾ. ಪ್ರಸಾದ್‌ ಬಿ ರಾಂಪುರೆ , ರಿಜಿಸ್ಟ್ರಾರ್‌ (ಮೌಲ್ಯಮಾಪನ) ಡಾ.ಉಜ್ವಲ್‌ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್‌ ನಾಯಕ್‌ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.

ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್‌, ಡಾ. ಧನಂಜಯ್‌ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್‌, ಡಿ.ಟಿ.ಶ್ರೀನಿವಾಸ್‌ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending