ದಿನದ ಸುದ್ದಿ
ಹತ್ತರ ಮಕ್ಕಳು ಏರಬೇಕು ಇನ್ನೂ ಎತ್ತರ; ಇಲ್ಲವಾದರೆ ಪರೀಕ್ಷೆಯಲ್ಲಿ ತತ್ತರ..!
- ಕುಮಾರಸ್ವಾಮಿ ವಿ ಕೆ,ಪ್ರೌಢಶಾಲಾ ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಶಾಲೆ, ಬೆಂಗಳೂರು
2022 – 23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಅಂತೆಯೇ ಈ ಬಾರಿಯ ಶೈಕ್ಷಣಿಕ ಚಟುವಟಿಕೆಗಳೂ ಸಹ ನಿರ್ವಿಘ್ನವಾಗಿ ಸಾಗಿವೆ. ಆದರೆ ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳು ಮಕ್ಕಳನ್ನು ಇನ್ನೂ ಕಾಡುತಿವೆ. ಮಂಕಾಗಿದ್ದ ಮಕ್ಕಳಿಗೆ ಶಾಲೆ ಪುನರಾರಂಭ ಸಂತಸ ತಂದಿದ್ದರೂ ಹಲವು ಮಕ್ಕಳು ಈಗಲೂ ಶಿಕ್ಷಣದ ಮುಖ್ಯ ವಾಹಿನಿಗೆ ಬಂದಿಲ್ಲ. ಹೀಗಾಗಿ ಪರೀಕ್ಷೆ ತಯಾರಿ ಕುರಿತು ಇಲ್ಲೊಂದು ಲೇಖನ.
ಪಾಠಗಳ ಪರಿಚಯ ಅಗತ್ಯ
ಪರೀಕ್ಷೆಗಾಗಿ ದಿನಗಳನ್ನು ಎಣಿಸುತ್ತಿರುವ ಈ ಹೊತ್ತಿನಲ್ಲಿ ಅನೇಕ ಮಕ್ಕಳಿಗೆ ಈಗಲೂ ತಾವು ಅಭ್ಯಸಿಸುತ್ತಿರುವ ವಿಷಯಗಳ ಅಧ್ಯಾಯಗಳ ಹೆಸರೇ ನೆನಪಿಲ್ಲ. ಇದು ಮೂಲಭೂತ ಅವಶ್ಯಕತೆಯಾಗಿದ್ದು, ಮಕ್ಕಳಿಗೆ ಮೊದಲು ತಾವು ಓದುತ್ತಿರುವ ಎಲ್ಲಾ ವಿಷಯದ ಅಧ್ಯಾಯಗಳ ಪರಿಚಯ ಅತ್ಯಗತ್ಯ. ಇದು ಮಕ್ಕಳ ಮೊದಲ ಕರ್ತವ್ಯವಾಗಿದ್ದು, ಪಾಠಗಳ ಹೆಸರು ನೆನಪಿದ್ದರೆ ಮಾತ್ರ ಅವುಗಳ ಬಗ್ಗೆ ಕನಿಷ್ಠ ಮಾಹಿತಿಗಳು ನೆನಪಿಗೆ ಬರಲು ಸಾಧ್ಯ. ಹೀಗೆ ಅಧ್ಯಾಯಗಳನ್ನು ನೆನಪಿಟ್ಟುಕೊಂಡಾಗ ಅದರಲ್ಲಿ ಅಡಕವಾಗಿರುವ ಪಠ್ಯಾಂಶಗಳನ್ನು ಸುಲಭವಾಗಿ ಪುನರ್ಮನನ ಮಾಡಿಕೊಳ್ಳಲು ಸಾಧ್ಯ.
ಗುರಿ ಮುಟ್ಟಲು ಜೊತೆಗಿರಲಿ ಎರಡನೇ ಗುರು
ಶಾಲೆಗಳಲ್ಲಿ ಎಲ್ಲಾ ವಿಷಯ ಶಿಕ್ಷಕರು ಈಗಾಗಲೇ ತಮ್ಮ ತಮ್ಮ ಬೋಧನಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿಕೊಂಡು ಬಂದಿರುತ್ತಾರೆ ಹಾಗೂ ಪರೀಕ್ಷೆ ಕುರಿತು ಕಾಲಕಾಲಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮಕ್ಕಳಿಗೂ ಸಹ ನೀಡುತ್ತಿರುತ್ತಾರೆ. ಶಿಕ್ಷಕರ ನಂತರ ಮಕ್ಕಳಿಗೆ ಎರಡನೇ ಗುರುವೆಂದರೆ ಅದು ಪಠ್ಯ ಪುಸ್ತಕ. ಅತ್ಯುತ್ತಮ ಅಂಕ ಗಳಿಕೆಯ ಗುರಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಅಭ್ಯಾಸ ಅತ್ಯಂತ ಸಹಕಾರಿಯಾಗಿದೆ.
ಆದ್ದರಿಂದ ಮಕ್ಕಳು ತಪ್ಪದೆ ಪಠ್ಯ ಪುಸ್ತಕಗಳನ್ನು ಅಭ್ಯಸಿಸಬೇಕು ಹಾಗೂ ಅದರಲ್ಲಿನ ಮುಖ್ಯಾಂಶಗಳನ್ನು ಒಂದೆಡೆ ಬರೆದಿಟ್ಟುಕೊಂಡರೆ ಒಳಿತು. ಇಂತಹ ಹವ್ಯಾಸ ಬೆಳೆಸಿಕೊಂಡ ವಿದ್ಯಾರ್ಥಿಗಳ ಫಲಿತಾಂಶ ಬಹುತೇಕ ಅಧಿಕವಾಗಿರುತ್ತದೆ ಮತ್ತು ಗುಟ್ಟಮಟ್ಟದಿಂದ ಕೂಡಿರುತ್ತದೆ. ವಿದ್ಯಾರ್ಥಿಗಳ ಬಳಿ ಎಂತಹುದೇ ಅಧ್ಯಯನ ಸಾಮಗ್ರಿಗಳು ಇದ್ದರೂ, ಪಠ್ಯ ಪುಸ್ತಕವನ್ನು ಓದಿ ಅರ್ಥೈಸಿಕೊಂಡರೆ ಅದರ ಪ್ರತಿಫಲವೂ ಅತ್ಯುತ್ತಮವಾಗಿಯೇ ಇರುತ್ತದೆ. ಹೀಗೆ ಆಳವಾಗಿ ಅಧ್ಯಯನ ಮಾಡುವ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೂ ಸಹ ನೆರವಾಗುತ್ತದೆ.
ಓದಿಗಿರಲಿ ಪ್ರತ್ಯೇಕ ವೇಳಾಪಟ್ಟಿ
ಬಹುತೇಕ ವಿದ್ಯಾರ್ಥಿಗಳಲ್ಲಿ ಕಂಡುಬರುವ ಕೊರತೆ ಎಂದರೆ ಕೇವಲ ಬರವಣಿಗೆಗೆ ಹೆಚ್ಚು ಆದ್ಯತೆ ಕೊಡುವುದು. ಅದರಲ್ಲೂ ಹೆಚ್ಚಾಗಿ ಚಟುವಟಿಕೆಗಳ ರಚನೆಗೆ ಹೆಚ್ಚು ಸಮಯ ಮೀಸಲಿಡುವುದರಿಂದ ಓದಿಗೆ ಸಮಯ ಸಿಗದೆ ಮಾಸಿಕ ಪರೀಕ್ಷೆ, ಘಟಕ ಪರೀಕ್ಷೆಯ ಸಮಯದಲ್ಲಿ ಮಕ್ಕಳು ಕಡಿಮೆ ಅಂಕಗಳಿಸಲು ಕಾರಣವಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಪ್ರತಿದಿನ ಓದಿಗಾಗಿಯೇ ಪ್ರತ್ಯೇಕ ಸಮಯವನ್ನು ಮೀಸಲಿಡಬೇಕು. ಆ ಸಮಯದಲ್ಲಿ ಯಾವುದೇ ವಿಧದ ಬರವಣಿಗೆಗೆ ಆದ್ಯತೆ ನೀಡಬಾರದು. ಓದಿದ ಪ್ರಶ್ನೋತ್ತರಗಳನ್ನು ಒಮ್ಮೆ ಬರೆದರೆ ಹೆಚ್ಚು ಕಾಲ ನೆನಪಿನಲ್ಲಿ ಉಳಿಯುತ್ತದೆ. ಓದುವ ವೇಳೆ ಸಂಪೂರ್ಣ ಏಕಾಗ್ರತೆ ಇರಲಿ. ಗಾಳಿ ಬೆಳಕಿನ ವ್ಯವಸ್ಥೆ ಚೆನ್ನಾಗಿರಲಿ. ಯಾವುದೇ ಬಗೆಯ ಅಡೆತಡೆಗಳು ಇರದಿರಲಿ. ಓದಿನ ನಡುವೆ ಆಗಾಗ ಸ್ವಲ್ಪ ವಿರಾಮವೂ ಸಹ ಅಗತ್ಯ.
ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಸಂಗ್ರಹ
ವಾರ್ಷಿಕ ಪರೀಕ್ಷೆಯನ್ನು ಎದುರಿಸುವ ಮುನ್ನ ವಿದ್ಯಾರ್ಥಿಗಳು ಹಿಂದಿನ ಐದಾರು ವರ್ಷದ ಪ್ರಶ್ನೆ ಪತ್ರಿಕೆಗಳನ್ನಯ ಗಮನಿಸುವುದರಿಂದ ಪರೀಕ್ಷೆಯ ಭಯ ಇಲ್ಲದಂತಾಗಿ ಆತ್ಮವಿಶ್ವಾಸ ಹೆಚ್ಚುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಉತ್ತರ ಬರೆಯುವ ಕೌಶಲ್ಯ ಸಹ ಲಭಿಸುತ್ತದೆ. ತಾವು ಉತ್ತರಿಸಿದ ಪ್ರಶ್ನೆಗಳನ್ನು ವಿದ್ಯಾರ್ಥಿಗಳೇ ಸ್ವ ಮೌಲ್ಯಮಾಪನ ಮಾಡಿಕೊಂಡಾಗ ತಮ್ಮ ತಪ್ಪಿನ ಅರಿವಾಗುತ್ತದೆ ಹಾಗೆಯೇ ಮುಂದೆ ಇಂತಹ ತಪ್ಪುಗಳು ಆಗದಂತೆ ಎಚ್ಚರ ವಹಿಸಲು ಸಹಕಾರ ಸಿಗುತ್ತದೆ. ಇಷ್ಟೇ ಅಲ್ಲದೆ ವಿದ್ಯಾರ್ಥಿಗಳು ಸ್ವತಃ ತಾವೇ ಅಧ್ಯಾಯವಾರು ಪ್ರಶ್ನೆಗಳನ್ನು ರಚಿಸಿಕೊಂಡು ಅದಕ್ಕೆ ಉತ್ತರಿಸಿದರೆ ಅವರ ಆತ್ಮ ವಿಶ್ವಾಸ ಇಮ್ಮಡಿಯಾಗುತ್ತದೆ. ಪ್ರಶ್ನೆ ಪತ್ರಿಕೆಯ ವಿನ್ಯಾಸ ತಿಳಿಯಲು ಸಹ ಈ ವಿಧಾನ ನೆರವಾಗುತ್ತದೆ.
ಎಲ್ಲವೂ ಮಿತಿಯಲ್ಲಿರಲಿ
ಓದಿನಂತೆಯೇ ಮಕ್ಕಳಿಗೆ ಆಟ, ವಿಹಾರ, ಆಹಾರವೂ ಮುಖ್ಯ. ಈ ರೀತಿಯ ವಿಧಾನಗಳನ್ನ ಅನುಸರಿಸುವುದರಿಂದ ಮಕ್ಕಳಲ್ಲಿ ಓದಿದ್ದು ಹೆಚ್ಚು ಕಾಲ ಉಳಿಯುತ್ತದೆ. ಉತ್ತಮ ನಿದ್ದೆ, ಆಟಗಳಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಅಂತೆಯೇ ಆಹಾರವೂ ಸಹ ಬಹು ಮುಖ್ಯ. ಸರಿಯಾದ ಸಮಯಕ್ಕೆ ಈ ಚಟುವಟಿಕೆಗಳು ನಡೆಯದಿದ್ದರೆ ಮಕ್ಕಳಲ್ಲಿ ಒತ್ತಡ ಹೆಚ್ಚುವ ಸಾಧ್ಯತೆ ಹೆಚ್ಚಿರುತ್ತದೆ. ಪ್ರತಿನಿತ್ಯ ಮಕ್ಕಳೊಂದಿಗೆ ಪೋಷಕರು ಹತ್ತಿಪ್ಪತ್ತು ನಿಮಿಷ ಚರ್ಚಿಸಿ ವಿದ್ಯಾಭ್ಯಾಸದಲ್ಲಿ ಮಗುವಿಗೆ ಏನಾದರೂ ಒತ್ತಡಗಳಿವೆಯೇ ಎಂದು ತಿಳಿದು ಅದಕ್ಕೆ ಸೂಕ್ತ ಪರಿಹಾರಗಳನ್ನು ಒದಗಿಸಬೇಕು, ಒತ್ತಡದಿಂದ ಹಲವು ಮಕ್ಕಳು ಆಹಾರ ಸೇವನೆಯಿಂದ ದೂರ ಉಳಿಯುತ್ತಿರುವುದು ಇಂದಿನ ದಿನಗಳಲ್ಲಿ ಹೆಚ್ಚುತ್ತಿದೆ ಹೀಗಾಗಿ ಪೋಷಕರು ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಬೇಕು.
ಸಹಪಾಠಿಗಳೊಂದಿಗೆ ಚರ್ಚೆ
ತನ್ನ ಪ್ರತಿಭಾವಂತ ಸಹಪಾಠಿಗಳೊಂದಿಗೆ ಪ್ರತಿದಿನ ಚರ್ಚೆಯಲ್ಲಿ ತೊಡಗುವ ಮೂಲಕವೂ ಮಗು ಯಾವುದೇ ಪಠ್ಯ ವಿಷಯದಲ್ಲಿ ತನಗಿರುವ ತೊಂದರೆಯನ್ನು ಪರಿಹರಿಸಿಕೊಳ್ಳಬಹುದು. ಇದು ಸಹ ಪರಿಣಾಮಕಾರಿ ಹಾದಿಯಾಗಿದ್ದು ಅತಿ ವೇಗದ ಕಲಿಕೆಗೆ ಪ್ರೋತ್ಸಾಹ ದೊರೆಯುತ್ತದೆ. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗಂತೂ ಇದರಿಂದ ಹೆಚ್ಚು ಅನುಕೂಲಗಳು ಲಭಿಸುತ್ತವೆ. ಓದಿದ ವಿಚಾರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡಾಗ ಅದು ದೀರ್ಘಾವಧಿಯವರೆಗೆ ಮನಸ್ಸಿನಲ್ಲಿ ಉಳಿಯುತ್ತದೆ.
ಶಿಕ್ಷಕರೊಂದಿಗೆ ನಿರಂತರ ಸಂಪರ್ಕ
ಮಕ್ಕಳು ತಮಗೆ ಬರುವ ಸಂದೇಹಗಳನ್ನು ತತಕ್ಷಣವೇ ಸಂಬಂಧಿಸಿದ ಶಿಕ್ಷಕರ ನೆರವಿನೊಂದಿಗೆ ಪರಿಹರಿಸಿಕೊಳ್ಳಬೇಕು. ಸದಾಕಾಲ ಶಿಕ್ಷಕರ ಸಂಪರ್ಕದಲ್ಲಿದ್ದುಕೊಂಡು ಓದಿಗೆ ಪೂರಕ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕು. ಶಾಲೆಗೆ ಹೆಚ್ಚು ಗೈರು ಹಾಜರಾಗದೆ ಅಂದಿನ ಕೆಲಸಗಳನ್ನು ಬಾಕಿ ಇಲ್ಲದಂತೆ ಮಾಡಿ ಮುಗಿಸಿಕೊಳ್ಳಬೇಕು. ಇದರಿಂದ ಮಗುವಿನಲ್ಲಿ ನಿರಾಳತೆ ನಿರ್ಮಾಣವಾಗಿ ಶಾಂತ ರೀತಿಯ ಕಲಿಕೆಗೆ ಅವಕಾಶ ಸಿಗುತ್ತದೆ.
ಮೊಬೈಲ್ ಹುಚ್ಚು; ಹಚ್ಚುವುದು ಕಿಚ್ಚು
ಇಂದು ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಅತಿ ಹೆಚ್ಚು ಕೇಳಿ ಬರುತ್ತಿರುವ ದೂರೆಂದರೆ ಅತಿಯಾದ ಮೊಬೈಲ್ ಬಳಕೆ. ಲಾಕ್ ಡೌನ್ ಅವಧಿಯಲ್ಲಿ ಮಕ್ಕಳ ಕೈಗೆ ಸಿಕ್ಕ ಮೊಬೈಲ್ ಸಹವಾಸ ಇಂದಿಗೂ ಸಹ ನಿರಂತರವಾಗಿ ಮುಂದುವರಿಯುತ್ತಿದ್ದು, ಇದು ಮಕ್ಕಳ ಓದಿನ ಮೇಲೆ ಸಂಪೂರ್ಣ ಋಣಾತ್ಮಕ ಪರಿಣಾಮವನ್ನು ಬೀರುತ್ತಿದೆ. ಅನೇಕ ಮಕ್ಕಳು ಈಗಲೂ ಮೊಬೈಲ್ ದಾಸರಾಗಿದ್ದು ಮಿತಿಮೀರಿದ ಬಳಕೆಯಿಂದ ಅವರ ಸ್ಮರಣ ಶಕ್ತಿ ಮತ್ತು ಧಾರಣ ಶಕ್ತಿ ಕ್ಷೀಣಿಸುತ್ತಿದೆ. ಈ ಬಗ್ಗೆ ಗಮನ ವಹಿಸುವುದು ಪ್ರತಿ ಪೋಷಕರ ಆದ್ಯ ಕರ್ತವ್ಯವಾಗಿದೆ. ಏಕೆಂದರೆ ಬಹುತೇಕ ಮಕ್ಕಳು ಮೊಬೈಲ್ ಫೋನನ್ನು ಶೈಕ್ಷಣಿಕ ಉದ್ದೇಶಕ್ಕೆ ಬಳಸದೆ, ಗೇಮ್ ಆಡಲು, ಅಶ್ಲೀಲ ಚಿತ್ರ ವೀಕ್ಷಣೆ, ಪ್ರೀತಿ ಪ್ರೇಮದ ಬಲೆಗೆ ಮಕ್ಕಳು ಬೀಳುತ್ತಿದ್ದಾರೆ. ಕೆಲವೊಮ್ಮೆ ಪೋಷಕರ ಅತಿಯಾದ ಪ್ರೀತಿ ಸಹ ಮಕ್ಕಳನ್ನು ಕ್ಲಿಷ್ಟಕರ ಪರಿಸ್ಥಿತಿಗೆ ತಳ್ಳುತ್ತಿದೆ. ಇದು ಮಗುವಿನ ಜೀವನಕ್ಕಲ್ಲದೆ ಜೀವಕ್ಕೂ ಅಪಾಯ ತರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಆದ್ದರಿಂದ ಈಗಲಾದರೂ ಇದಕ್ಕೆ ಕಡಿವಾಣ ಹಾಕಬೇಕಿದೆ.
ಬದಲಾಗಿದೆ ಮಕ್ಕಳ ವರ್ತನೆ
ಕೋವಿಡ್ ಸಮಯದಲ್ಲಿ ಮನೆಯಲ್ಲೇ ಉಳಿದಿದ್ದ ಮಕ್ಕಳ ವರ್ತನೆಯಲ್ಲಿ ಇಂದು ಹೆಚ್ಚು ಋಣಾತ್ಮಕ ಬದಲಾವಣೆಗಳು ಕಂಡುಬರುತ್ತಿವೆ. ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸುವುದಕ್ಕಿಂತ ಹೆಚ್ಚಾಗಿ ಅವರ ನಡಾವಳಿಯನ್ನು ಸರಿಮಾಡುವುದರಲ್ಲೇ ಹೆಚ್ಚು ಸಮಯ ವ್ಯರ್ಥವಾಗುತ್ತದೆ. ಶಿಕ್ಷಣ ವ್ಯವಸ್ಥೆಯ ಒಂದು ಭಾಗವಾಗಿರುವ ಪೋಷಕರು ಕೈಗೂಡಿಸಿದಾಗ ಮಾತ್ರ ಇದಕ್ಕೆ ಸೂಕ್ತ ಪರಿಹಾರ ಒದಗಿಸಲು ಸಾಧ್ಯ.
ಏಕೆಂದರೆ ಶಾಲೆಗಳಲ್ಲಿ ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗುವ ನಮ್ಮ ಶಿಕ್ಷಕ ಬಂಧುಗಳು, ಪ್ರತೀ ಮಗುವಿನ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುತ್ತಾರೆ. ಆದರೆ ಈ ನಡುವೆ ಅಸಹಜ ನಡವಳಿಕೆ ತೋರುವ ಮಕ್ಕಳಿಂದ ಇಡಿಯ ತರಗತಿ ಅಸ್ತವ್ಯಸ್ತತವಾಗಿ ಪ್ರತಿಭಾವಂತ ಮಕ್ಕಳಿಗೂ ತೊಂದರೆಗಳು ಆಗುತ್ತಿವೆ. ಆದ್ದರಿಂದ ಇಂತಹ ಮಕ್ಕಳ ಮೇಲೆ ಪೋಷಕರು ಸಹ ತೀವ್ರ ನಿಗಾ ವಹಿಸಿ ತಮ್ಮ ಮಗುವನ್ನ ನೈತಿಕ ಹಾದಿಗೆ ತರಬೇಕಿದೆ.
ಅತಿಯಾದ ಕೋಪ, ಸುಳ್ಳು ಹೇಳುವುದು, ಪುಂಡ ಗೆಳೆಯರ ಸಹವಾಸ, ಬೀಡಿ, ಸಿಗರೇಟ್ ಚಟ, ಮದ್ಯಪಾನದಂತಹ ಸಮಸ್ಯೆಗಳು ಕಂಗೆಡಿಸಿವೆ. ಎಳೆಯ ವಯಸ್ಸಿನಲ್ಲಿಯೇ ಇವುಗಳಿಗೆ ಮಕ್ಕಳು ದಾಸರಾದರೆ ಮುಂದೆ ಈ ಸಮಾಜದ ಅಡಿಪಾಯ ಅಲುಗಾಡುವುದರಲ್ಲಿ ಸಂಶಯವೇ ಇಲ್ಲ. ಹಿರಿಯರ ಮಾತಿನಂತೆ “ಎಷ್ಟು ಓದಿದ್ದೇವೆ ಎನ್ನುವುದು ಮುಖ್ಯವಲ್ಲ; ಆ ಓದಿನಿಂದ ಏನು ಕಲಿತಿದ್ದೇವೆ ಎಂಬುದೇ ಮುಖ್ಯ” ಹೀಗಾಗಿ ಇದು ಇಂದು ತುರ್ತಾಗಿ ಬಗೆಹರಿಸಬೇಕಾದ ಸಮಸ್ಯೆಯಾಗಿದೆ.
ಕಲಿಕೆಗಾಗಿ ದಶ ಸೂತ್ರಗಳು
- ಅನೇಕ ಮಕ್ಕಳು ಕೇವಲ ಉತ್ತರಗಳನ್ನು ಕಲಿಯುತ್ತಾರೆ, ಆದರೆ ಪ್ರಶ್ನೆಯೂ ಅತಿ ಮುಖ್ಯ
- ಓದಿನಲ್ಲಿ ಶ್ರದ್ಧೆ, ಆಸಕ್ತಿ ಇರಲಿ, ಒತ್ತಡ ಬೇಡ
- ಕಲಿಕೆಯಲ್ಲಿ ಖುಷಿ ಇರಲಿ
- ಕಿರು ಪರೀಕ್ಷೆ, ಘಟಕ ಪರೀಕ್ಷೆಗಳನ್ನೂ ಸಹ ಮುಖ್ಯ ಪರೀಕ್ಷೆ ಎಂದೇ ಭಾವಿಸಿ
- ಓದಿನ ನಡುವೆ ವಿಶ್ರಾಂತಿ ಅತ್ಯಗತ್ಯ
- ಪರೀಕ್ಷೆ ಯುದ್ಧವಲ್ಲ; ಅದೊಂದು ಹಬ್ಬವೆಂದು ಅಭ್ಯಸಿಸಿ
- ಪದ್ಯಗಳು, ಗಣಿತದ ಸೂತ್ರಗಳು, ಭೂಪಟ, ವಿಜ್ಞಾನದ ಚಿತ್ರಗಳು, ವ್ಯಾಕರಣ ಎಲ್ಲವನ್ನೂ ಪ್ರತಿನಿತ್ಯ ಅಭ್ಯಸಿಸಿ
- ಓದುವ ಕೋಣೆ ದೇವರ ಕೋಣೆಯಷ್ಟೇ ಸ್ವಚ್ಛ ಮತ್ತು ಶಾಂತವಾಗಿರಲಿ
- ಗೊತ್ತಿರುವ ಪ್ರಶ್ನೋತ್ತರಗಳನ್ನು ಮರೆಯದಂತೆ ನಿತ್ಯವೂ ಒಮ್ಮೆ ಅಭ್ಯಸಿಸಿ
- ಓದು, ಓದಿದ್ದನ್ನು ಬರೆ, ಬರೆದದ್ದನ್ನು ಪರಿಶೀಲಿಸು
(ಕುಮಾರಸ್ವಾಮಿ ವಿ ಕೆ
ಪ್ರೌಢಶಾಲಾ ಮುಖ್ಯ ಶಿಕ್ಷಕರು
ಸಿದ್ಧಾರ್ಥ ಆಂಗ್ಲ ಶಾಲೆ
ಬೆಂಗಳೂರು ಉತ್ತರ
9113906120)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ
ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.
ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.
ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.
ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ5 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ4 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ2 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ5 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

