ದಿನದ ಸುದ್ದಿ
ರಾಜ್ಯ ಸರ್ಕಾರಿ ನೌಕರರ ದಿನಾಚರಣೆ | ಇತಿಹಾಸದ ಪುಟಗಳಲ್ಲಿ ಗೆದ್ದವರು-ಸೋತವರು ದಾಖಲಾಗಿದ್ದಾರೆ ; ಆಡಿಕೊಂಡು ನಕ್ಕವರು ದಾಖಲಾಗಿಲ್ಲ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗರೆ : ಸರ್ಕಾರಿ ನೌಕರರು ಇಲಾಖೆಗಳಿಂದ ಸಿಗುವ ಸೌಲಭ್ಯವನ್ನು ತೊಂದರೆ, ಅಡೆತಡೆಗಳಿಲ್ಲದೆ ಜನರಿಗೆ ದೊರಕಿಸುವಂತೆ ಕಾರ್ಯ ನಿರ್ವಹಿಸಬೇಕು, ಈ ಮೂಲಕ ಜನಸ್ನೇಹಿ ಆಡಳಿತ ನೀಡಲು ಎಲ್ಲ ಮಟ್ಟದ ಸರ್ಕಾರಿ ನೌಕರರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾವು ನಮ್ಮ ಕೆಲಸವನ್ನು ಸಂತೋಷದಿಂದ ಮಾಡಿದಾಗ ಅದು ನಮಗೆ ತೃಪ್ತಿ ನೀಡುತ್ತದೆ. ಕೇವಲ ಕರ್ತವ್ಯವೆಂದು ಮಾಡತೊಡಗಿದಾಗ ಬೇಸರ ಉಂಟುಮಾಡುತ್ತದೆ. ಸರ್ಕಾರಿ ಕಚೇರಿಗಳಿಗೆ ಬರುವ ಜನರೊಂದಿಗೆ ಅಧಿಕಾರಿಗಳು ಸ್ಪಂದಿಸಿ ಉತ್ತಮ ಸಂವಹನ ನಡೆಸಬೇಕು. ಕಚೇರಿ ಬಿಟ್ಟು ಹೋದರೂ ಕೂಡ ಆ ಸ್ಥಳದಲ್ಲಿ ನಿಮ್ಮದೇ ಉತ್ತಮ ಛಾಪು ಮೂಡಿಸುವಂತೆ ಕಾರ್ಯ ನಿರ್ವಹಿಸಬೇಕು. ಇತಿಹಾಸದ ಪುಟಗಳಲ್ಲಿ ಗೆದ್ದವರು ಮತ್ತು ಸೋತವರು ಮಾತ್ರ ದಾಖಲಾಗಿದ್ದಾರೆ ಆದರೆ ನೋಡಿಕೊಂಡು ನಕ್ಕವರು, ಆಡಿಕೊಂಡು ಮಾತನಾಡಿದವರು ಯಾರು ಕೂಡ ದಾಖಲಾಗಿಲ್ಲ.
ಹಾಗಾಗಿ ನಾವುಗಳು ಕೂಡ ಚರಿತ್ರೆಯಲ್ಲಿ ಒಳ್ಳೆಯ ಹೆಸರಿನೊಂದಿಗೆ ದಾಖಲಾಗುವಂತಹ ಮಹತ್ಕಾರ್ಯಗಳನ್ನು ಮಾಡಬೇಕು. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಗ್ರೂಪ್-ಡಿ ಸಿಬ್ಬಂದಿಯಿಂದ ಮೊದಲುಗೊಂಡು ಎಲ್ಲ ಹಂತದ ಅಧಿಕಾರಿಗಳು, ಜಿಲ್ಲಾಧಿಕಾರಿವರೆಗಿನ ಎಲ್ಲರೂ ಉತ್ತಮವಾಗಿ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಜಿಲ್ಲೆಗೆ ಉತ್ತಮ ಹೆಸರು ತಂದುಕೊಟ್ಟರು. ಸರ್ಕಾರಿ ನೌಕರರಾದ ನಾವೆಲ್ಲಾ ಇರುವುದು ಜನರಿಗಾಗಿ ಎಂಬುದನ್ನು ಮರೆಯಬಾರದು.
ಜನಸ್ನೇಹಿ, ಜನಮುಖಿ ಆಡಳಿತ ನೀಡಲು ನೌಕರರು ಬದ್ಧರಾಗಿರಬೇಕು. ಉತ್ತಮ ಪುಸ್ತಕಗಳನ್ನು ಓದಿ ದೊಡ್ಡ ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಯನ್ನು ಪಡೆದುಕೊಂಡ ನಂತರದಲ್ಲಿ ಎಲ್ಲವನ್ನು ಮರೆತು ಬೀಗುವಂತಾಗಬಾರದು ಎಂದು ನೌಕರರಿಗೆ ಜಿಲ್ಲಾಧಿಕಾರಿಗಳು ಕಿವಿಮಾತು ಹೇಳಿದರು.
ನಿವೃತ್ತ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಜನಸ್ನೇಹಿ ಆಡಳಿತದ ಕುರಿತು ಉಪನ್ಯಾಸ ನೀಡಿ, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ನೌಕರರು ಸಲ್ಲಿಸಿದ ಸೇವೆ ಗಣನೀಯವಾದದ್ದು. ಕೊರೋನಾ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ತುಸು ನೆಮ್ಮದಿಯಿಂದ ಬದುಕಲು ಭಾರತದ ಸಂವಿಧಾನ ಒದಗಿಸಿಕೊಟ್ಟ ಸೇವಾ ಭದ್ರತೆಯೇ ಕಾರಣ. ಸರ್ಕಾರಿ ನೌಕರರು ನಡತೆ ನಿಯಮಗಳಲ್ಲಿನ 38 ನಿಯಮಗಳನ್ನು ಅಳವಡಿಸಿಕೊಂಡರೆ ಸಾಕು ಜನಸ್ನೇಹಿ ಆಡಳಿತ ನೀಡಲು ಸಾಧ್ಯ.
ನೌಕರರು ಸ್ಪಂದನಾಶೀಲತೆಯನ್ನು ಹೊಂದಿರಬೇಕು. ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆಯನ್ನು ಎಂದಿಗೂ ಬಿಡಬಾರದು. ನೌಕರರು ತಮ್ಮ ಕುಟುಂಬವನ್ನು ಕೂಡ ನಿರ್ವಹಣೆ ಮಾಡಿಕೊಂಡು ಹೋಗಬೇಕು, ಆಡಳಿತದ ಮೇಲೆ ಹೆಚ್ಚು ಗಮನ ವಹಿಸಿ ಕುಟುಂಬವನ್ನು ನಿರ್ಲಕ್ಷಿಸಬಾರದು. ಆಡಳಿತ ಮತ್ತು ಕುಟುಂಬ ಎರಡನ್ನೂ ಸಮಾನವಾಗಿ ನಿರ್ವಹಣೆ ಮಾಡಬೇಕು. ಆಡಳಿತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕುತೂಹಲ ನೌಕರರಿಗೆ ಇರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನನ್ಯ ಸೇವೆ ಸಲ್ಲಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಕುಂಬಳೂರು ಮುಖ್ಯ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ, ದಾವಣಗೆರೆ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಕೊಟ್ರೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಉಮೇಶ್ ಡಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಟಿ ಪ್ರಕಾಶ್, ಮಲೇಬೆನ್ನೂರು ಉಪ ತಹಶೀಲ್ದಾರ್ ಆರ್.ರವಿ, ಕೈದಾಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾವತಿ ಐ.ಸಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆರ್.ಲೋಕೇಶ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಮಿತ್ರ ಎನ್.ಹೆಗಡೆ ಇವರುಗಳಿಗೆ 2020-21 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
2021-22 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ ಕಕ್ಕುಪ್ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ಶಶಿಧರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ಕುಮಾರ್ ಕೆ.ಹೆಚ್, ಭೂದಾಖಲೆಗಳ ಕಚೇರಿಯ ಸಹಾಯಕ ನಿರ್ದೇಶಕ ಲೋಹಿತ್ ಟಿ.ಕೆ, ಜಿಲ್ಲಾಧಿಕಾರಿಗಳ ಕಚೇರಿ ದ್ವಿತೀಯ ದರ್ಜೆ ಸಹಾಯಕ ಎಂ.ಪ್ರಭಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಹೆಚ್.ಉಮಾಪತಿ, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಶೀಘ್ರಲಿಪಿಗಾರರಾದ ರೇಖಾ.ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಕೇಶವಮೂರ್ತಿ.ಎನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಶೀಘ್ರಲಿಪಿಗಾರರಾದ ಲಕ್ಷ್ಮೀದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿ.ದರ್ಜೆ ನೌಕರರಾದ ಬಸವರಾಜಪ್ಪ ಬಿ.ಎಸ್ ಇವರುಗಳಿಗೆ ನೀಡಿ ಸನ್ಮಾನಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಪ್ರಾರಂಭದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಏ. 21 ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಕಳೆದ ವರ್ಷವೇ ಸಮಾರಂಭ ಆಯೋಜಿಸಬೇಕಾಗಿತ್ತು. ಆದರೆ ಕೋವಿಡ್ ಕಾರಣಕ್ಕಾಗಿ ಆಚರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ 2020-21 ಹಾಗೂ 21-22 ನೇ ಸಾಲಿಗೆ ಒಟ್ಟು 18 ಜನ ಅಧಿಕಾರಿ, ಸಿಬ್ಬಂದಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಈ ವರ್ಷ ನೀಡಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಆರ್.ಗೋಪಿನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಆರ್ ಉಜ್ಜನಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


