ದಿನದ ಸುದ್ದಿ
ರಾಜ್ಯ ಸರ್ಕಾರಿ ನೌಕರರ ದಿನಾಚರಣೆ | ಇತಿಹಾಸದ ಪುಟಗಳಲ್ಲಿ ಗೆದ್ದವರು-ಸೋತವರು ದಾಖಲಾಗಿದ್ದಾರೆ ; ಆಡಿಕೊಂಡು ನಕ್ಕವರು ದಾಖಲಾಗಿಲ್ಲ : ಡಿಸಿ ಮಹಾಂತೇಶ ಬೀಳಗಿ
ಸುದ್ದಿದಿನ,ದಾವಣಗರೆ : ಸರ್ಕಾರಿ ನೌಕರರು ಇಲಾಖೆಗಳಿಂದ ಸಿಗುವ ಸೌಲಭ್ಯವನ್ನು ತೊಂದರೆ, ಅಡೆತಡೆಗಳಿಲ್ಲದೆ ಜನರಿಗೆ ದೊರಕಿಸುವಂತೆ ಕಾರ್ಯ ನಿರ್ವಹಿಸಬೇಕು, ಈ ಮೂಲಕ ಜನಸ್ನೇಹಿ ಆಡಳಿತ ನೀಡಲು ಎಲ್ಲ ಮಟ್ಟದ ಸರ್ಕಾರಿ ನೌಕರರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾವು ನಮ್ಮ ಕೆಲಸವನ್ನು ಸಂತೋಷದಿಂದ ಮಾಡಿದಾಗ ಅದು ನಮಗೆ ತೃಪ್ತಿ ನೀಡುತ್ತದೆ. ಕೇವಲ ಕರ್ತವ್ಯವೆಂದು ಮಾಡತೊಡಗಿದಾಗ ಬೇಸರ ಉಂಟುಮಾಡುತ್ತದೆ. ಸರ್ಕಾರಿ ಕಚೇರಿಗಳಿಗೆ ಬರುವ ಜನರೊಂದಿಗೆ ಅಧಿಕಾರಿಗಳು ಸ್ಪಂದಿಸಿ ಉತ್ತಮ ಸಂವಹನ ನಡೆಸಬೇಕು. ಕಚೇರಿ ಬಿಟ್ಟು ಹೋದರೂ ಕೂಡ ಆ ಸ್ಥಳದಲ್ಲಿ ನಿಮ್ಮದೇ ಉತ್ತಮ ಛಾಪು ಮೂಡಿಸುವಂತೆ ಕಾರ್ಯ ನಿರ್ವಹಿಸಬೇಕು. ಇತಿಹಾಸದ ಪುಟಗಳಲ್ಲಿ ಗೆದ್ದವರು ಮತ್ತು ಸೋತವರು ಮಾತ್ರ ದಾಖಲಾಗಿದ್ದಾರೆ ಆದರೆ ನೋಡಿಕೊಂಡು ನಕ್ಕವರು, ಆಡಿಕೊಂಡು ಮಾತನಾಡಿದವರು ಯಾರು ಕೂಡ ದಾಖಲಾಗಿಲ್ಲ.
ಹಾಗಾಗಿ ನಾವುಗಳು ಕೂಡ ಚರಿತ್ರೆಯಲ್ಲಿ ಒಳ್ಳೆಯ ಹೆಸರಿನೊಂದಿಗೆ ದಾಖಲಾಗುವಂತಹ ಮಹತ್ಕಾರ್ಯಗಳನ್ನು ಮಾಡಬೇಕು. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಗ್ರೂಪ್-ಡಿ ಸಿಬ್ಬಂದಿಯಿಂದ ಮೊದಲುಗೊಂಡು ಎಲ್ಲ ಹಂತದ ಅಧಿಕಾರಿಗಳು, ಜಿಲ್ಲಾಧಿಕಾರಿವರೆಗಿನ ಎಲ್ಲರೂ ಉತ್ತಮವಾಗಿ ಕೆಲಸ ಮಾಡುವ ಮೂಲಕ ರಾಜ್ಯದಲ್ಲಿ ಜಿಲ್ಲೆಗೆ ಉತ್ತಮ ಹೆಸರು ತಂದುಕೊಟ್ಟರು. ಸರ್ಕಾರಿ ನೌಕರರಾದ ನಾವೆಲ್ಲಾ ಇರುವುದು ಜನರಿಗಾಗಿ ಎಂಬುದನ್ನು ಮರೆಯಬಾರದು.
ಜನಸ್ನೇಹಿ, ಜನಮುಖಿ ಆಡಳಿತ ನೀಡಲು ನೌಕರರು ಬದ್ಧರಾಗಿರಬೇಕು. ಉತ್ತಮ ಪುಸ್ತಕಗಳನ್ನು ಓದಿ ದೊಡ್ಡ ದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಯನ್ನು ಪಡೆದುಕೊಂಡ ನಂತರದಲ್ಲಿ ಎಲ್ಲವನ್ನು ಮರೆತು ಬೀಗುವಂತಾಗಬಾರದು ಎಂದು ನೌಕರರಿಗೆ ಜಿಲ್ಲಾಧಿಕಾರಿಗಳು ಕಿವಿಮಾತು ಹೇಳಿದರು.
ನಿವೃತ್ತ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಜನಸ್ನೇಹಿ ಆಡಳಿತದ ಕುರಿತು ಉಪನ್ಯಾಸ ನೀಡಿ, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ನೌಕರರು ಸಲ್ಲಿಸಿದ ಸೇವೆ ಗಣನೀಯವಾದದ್ದು. ಕೊರೋನಾ ಪರಿಸ್ಥಿತಿಯಲ್ಲಿ ಸರ್ಕಾರಿ ನೌಕರರು ತುಸು ನೆಮ್ಮದಿಯಿಂದ ಬದುಕಲು ಭಾರತದ ಸಂವಿಧಾನ ಒದಗಿಸಿಕೊಟ್ಟ ಸೇವಾ ಭದ್ರತೆಯೇ ಕಾರಣ. ಸರ್ಕಾರಿ ನೌಕರರು ನಡತೆ ನಿಯಮಗಳಲ್ಲಿನ 38 ನಿಯಮಗಳನ್ನು ಅಳವಡಿಸಿಕೊಂಡರೆ ಸಾಕು ಜನಸ್ನೇಹಿ ಆಡಳಿತ ನೀಡಲು ಸಾಧ್ಯ.
ನೌಕರರು ಸ್ಪಂದನಾಶೀಲತೆಯನ್ನು ಹೊಂದಿರಬೇಕು. ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆಯನ್ನು ಎಂದಿಗೂ ಬಿಡಬಾರದು. ನೌಕರರು ತಮ್ಮ ಕುಟುಂಬವನ್ನು ಕೂಡ ನಿರ್ವಹಣೆ ಮಾಡಿಕೊಂಡು ಹೋಗಬೇಕು, ಆಡಳಿತದ ಮೇಲೆ ಹೆಚ್ಚು ಗಮನ ವಹಿಸಿ ಕುಟುಂಬವನ್ನು ನಿರ್ಲಕ್ಷಿಸಬಾರದು. ಆಡಳಿತ ಮತ್ತು ಕುಟುಂಬ ಎರಡನ್ನೂ ಸಮಾನವಾಗಿ ನಿರ್ವಹಣೆ ಮಾಡಬೇಕು. ಆಡಳಿತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕುತೂಹಲ ನೌಕರರಿಗೆ ಇರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನನ್ಯ ಸೇವೆ ಸಲ್ಲಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಕುಂಬಳೂರು ಮುಖ್ಯ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ, ದಾವಣಗೆರೆ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಕೊಟ್ರೇಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಉಮೇಶ್ ಡಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಟಿ ಪ್ರಕಾಶ್, ಮಲೇಬೆನ್ನೂರು ಉಪ ತಹಶೀಲ್ದಾರ್ ಆರ್.ರವಿ, ಕೈದಾಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿದ್ಯಾವತಿ ಐ.ಸಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆರ್.ಲೋಕೇಶ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಮಿತ್ರ ಎನ್.ಹೆಗಡೆ ಇವರುಗಳಿಗೆ 2020-21 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
2021-22 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ ಕಕ್ಕುಪ್ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ಶಶಿಧರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ಕುಮಾರ್ ಕೆ.ಹೆಚ್, ಭೂದಾಖಲೆಗಳ ಕಚೇರಿಯ ಸಹಾಯಕ ನಿರ್ದೇಶಕ ಲೋಹಿತ್ ಟಿ.ಕೆ, ಜಿಲ್ಲಾಧಿಕಾರಿಗಳ ಕಚೇರಿ ದ್ವಿತೀಯ ದರ್ಜೆ ಸಹಾಯಕ ಎಂ.ಪ್ರಭಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಹೆಚ್.ಉಮಾಪತಿ, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಶೀಘ್ರಲಿಪಿಗಾರರಾದ ರೇಖಾ.ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಕೇಶವಮೂರ್ತಿ.ಎನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಶೀಘ್ರಲಿಪಿಗಾರರಾದ ಲಕ್ಷ್ಮೀದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಿ.ದರ್ಜೆ ನೌಕರರಾದ ಬಸವರಾಜಪ್ಪ ಬಿ.ಎಸ್ ಇವರುಗಳಿಗೆ ನೀಡಿ ಸನ್ಮಾನಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಿ. ಪಾಲಾಕ್ಷಿ ಅವರು ಪ್ರಾರಂಭದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಏ. 21 ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಕಳೆದ ವರ್ಷವೇ ಸಮಾರಂಭ ಆಯೋಜಿಸಬೇಕಾಗಿತ್ತು. ಆದರೆ ಕೋವಿಡ್ ಕಾರಣಕ್ಕಾಗಿ ಆಚರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ 2020-21 ಹಾಗೂ 21-22 ನೇ ಸಾಲಿಗೆ ಒಟ್ಟು 18 ಜನ ಅಧಿಕಾರಿ, ಸಿಬ್ಬಂದಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಈ ವರ್ಷ ನೀಡಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಆರ್.ಗೋಪಿನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎ.ಆರ್ ಉಜ್ಜನಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ತಾಲ್ಲೂಕು ಘಟಕಗಳ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

