ದಿನದ ಸುದ್ದಿ
ಪ್ರಜಾ ಪರಿವರ್ತನಾ ವೇದಿಕೆಯಿಂದ ಮಾ.14 ರಂದು ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ಕುರಿತು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ
ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ ಪರಿವರ್ತನಾ ವೇದಿಕೆಯು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು ಭಾಗವಹಿಸಬೇಕೆಂದು ವೇದಿಕೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಮಾನ್ಯರೆ,
ಭಾರತ ಸ್ವಾತಂತ್ರ್ಯ ಪಡೆದು ಸಂವಿಧಾನವನ್ನು ಒಪ್ಪಿ ಜಾರಿಗೊಳಿಸಿದ ದಿನದಿಂದಲೂ ಮೀಸಲಾತಿಯ ವಿರುದ್ಧ ಅಪಸ್ವರಗಳನ್ನು ಮುಂದುಮಾಡುವ ಪರಿಪಾಠವನ್ನು ನಿರಂತರವಾಗಿ ಚಾಲ್ತಿಯಲ್ಲಿ ಇಡಲಾಗಿದೆ. ಇತ್ತೀಚೆಗೆ ಭಾರತದಾದ್ಯಂತ ಮೀಸಲಾತಿಯನ್ನು ವಿರೋಧಿಸುತ್ತಿದ್ದವರು ಸಹ ತಮಗೂ ಮೀಸಲಾತಿಯನ್ನು ನೀಡಬೇಕೆಂದು ಉಗ್ರ ಹೋರಾಟಕ್ಕೆ ಮುಂದಾಗುತ್ತಿದ್ದಾರೆ.
ಕರ್ನಾಟಕದಲ್ಲಿ ಬಲಾಢ್ಯ ಸಮುದಾಯಗಳು ಮಾತ್ರವಲ್ಲದೆ, ಮೀಸಲಾತಿಯನ್ನು ಅನುಭವಿಸುತ್ತಿರುವ ಸಮುದಾಯಗಳೂ ಮೀಸಲಾತಿಯಲ್ಲಿ ತಮ್ಮನ್ನು ಒಂದು ಪ್ರವರ್ಗದಿಂದ ಮತ್ತೊಂದು ಪ್ರವರ್ಗಕಗಕೆ ಸ್ಥಳಾಂತರಿಸಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿವೆ. ಇದರಲ್ಲಿ ಧಾರ್ಮಿಕ ಮುಖಂಡರು, ಮಠಾಧೀಶರು, ಜನಪ್ರತಿನಿಧಿಗಳು ಮತ್ತು ಜಾತೀಯ ಸಮುದಾಯಗಳು ಒಗ್ಗಟ್ಟಾಗಿ ಬಲಪ್ರದರ್ಶನದಲ್ಲಿ ತೊಡಗಿವೆ.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲು ಅವಕಾಶವಿದೆ. ಅದಕ್ಕೆ ಸಂವಿಧಾನವೂ ಸಹ ಬೆಂಬಲವಾಗಿದೆ. ಆದರೆ ಮೀಸಲಾತಿಯ ಮೂಲ ಆಶಯಗಳು ಇದರಲ್ಲಿ ಕಣ್ಮರೆಯಾಗುತ್ತಿರುವುದು ದುರಂತವೇ ಸರಿ. ಇತ್ತೀಚೆಗಷ್ಟೇ ಮೇಲ್ವರ್ಗದಲ್ಲಿನ ಬಡವರಿಗೆ ಶೇ 10. ಮೀಸಲಾತಿಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಷಯ ಮಂಡಿಸಿ ಯಾವ ವಿರೋಧವೂ ಇಲ್ಲದಂತೆ ಸಂವಿಧಾನಕ್ಕೆ ತಿದ್ದುಪಡಿ ತಂದು ಜಾರಿಗೊಳಿಸಿದೆ. ಇದಕ್ಕೆ ಯಾವುದೇ ರೀತಿಯ ಹೋರಾಟ, ಹಕ್ಕೊತ್ತಾಯ, ಅಧ್ಯಯನ ಸಮಿತಿ ವರದಿ, ವೈಜ್ಞಾನಿಕ ಅಧ್ಯಯನ ಅಥವಾ ಸಾಮಾಜಿಕ ಒತ್ತಡಗಳಾಗಲಿ ಇರಲಿಲ್ಲ. ಆಳುವ ಸರ್ಕಾರದ ಹಿತಾಸಕ್ತಿ ಇದಾಗಿತ್ತು ಎಂಬುದನ್ನು ನೆನಪಿನಲ್ಲಿಡಬೇಕು.
ಮೀಸಲಾತಿಯು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ. ಅದು ಸಾಮಾಜಿಕ ಆರ್ಥಿಕ ಅಸಮಾನತೆ ಮತ್ತು ಅವಗಣನೆಗೆ ಒಳಪಟ್ಟಿರುವ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಸುವ ಒಂದು ಉಪಕ್ರಮ. ಜಾತಿಗ್ರಸ್ಥವಾಗಿರುವ ಸಮಾಜವನ್ನು ಜಾತಿರಹಿತವಾಗಿ ರೂಪಿಸುವ ಮಹತ್ವಾಕಾಂಕ್ಷೆಯ ತುಡಿತ ಮೀಸಲಾತಿಯ ಅಂತರಂಗದಲ್ಲಿದೆ.
ಈ ಮೂಲಕ ಪ್ರತಿಯೊಬ್ಬರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸುವ ಮೂಲಕ ಪ್ರಬುದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪ ಮೀಸಲಾತಿಯದ್ದಾಗಿದೆ, ಇಂಥ ಆಶಯಗಳನ್ನು ಗೊಂದಲಗೊಳಿಸಿ ಜಾತಿ– ಮತಗಳ ನಡುವೆ ದ್ವೇಷ, ವೈಷಮ್ಯಗಳನ್ನು ಹರಡಿ ಜಾತಿವ್ಯವಸ್ಥೆಯನ್ನು ಮತ್ತಷ್ಟು ಜಟಿಲಗೊಳಿಸುವ ಆಯುಧವನ್ನಾಗಿ ಮೀಸಲಾತಿಯನ್ನು ಬಳಸಲಾಗುತ್ತಿದೆ.
ಪ್ರಸ್ತುತ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟಗಳನ್ನು ನ್ಯಾಯಸಮ್ಮತ ಎಂದು ಭಾವಿಸಿದರೂ ಪ್ರಾಯೋಗಿಕವಾಗಿ ಅಸಂಬದ್ಧವಾಗಿದೆ ಎನ್ನುವುದು ವಾಸ್ತವ ಸತ್ಯ. ಇದು ಅನೇಕರಿಗೆ ಮನವರಿಕೆಯಾಗಿರುವ ಸಾಧ್ಯತೆಯಿದೆ. ಏಕೆಂದರೆ ಸರ್ವೋಚ್ಚ ನ್ಯಾಯಾಲಯವು ‘‘ಇಂದಿರಾ ಸಹಾನಿ’’ ಪ್ರಕರಣದಲ್ಲಿ ಮೀಸಲಾತಿಯ ಪ್ರಮಾಣ ಒಟ್ಟು ಶೇ. 50 ಮೀರಬಾರದು ಎಂಬ ನಿರ್ಬಂಧವನ್ನು ಹೇರಿದೆ.
ಅಗತ್ಯವಿದ್ದರೆ ಕೇಂದ್ರ ಸರ್ಕಾರ ಕ್ರಮಬದ್ಧವಾದ ರೀತಿಯಲ್ಲಿ ಶಾಸನಾತ್ಮಕವಾಗಿ ಮಿತಿಯನ್ನು ಮೀರಿ ಪ್ರಮಾಣವನ್ನು ಹೆಚ್ಚಳಗೊಳಿಸುವ ಅವಕಾಶ ಇದ್ದೇ ಇದೆ. ಸಂವಿಧಾನದ 340ನೇ ವಿಧಿಯನ್ವಯ ಸಮುದಾಯಗಳ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕ ವಿಧಿ ವಿಧಾನಗಳಿಂದ ದೃಢೀಕರಿಸಿ ನ್ಯಾಯಸಮ್ಮತವಾಗಿ ಅರ್ಹರಾದವರಿಗೆ ಮೀಸಲಾತಿಯನ್ನು ವಿಸ್ತರಿಸುವುದಕ್ಕೆ ಸಾಧ್ಯವಿದೆ.
ಇದು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರದ ಮಟ್ಟದಲ್ಲಿಯೇ ಇತ್ಯರ್ಥವಾಗಬೇಕಾದ ವಿಷಯ. ಅಂದರೆ ಸಂವಿಧಾನಾತ್ಮಕವಾಗಿ ಮೀಸಲಾತಿ ಪ್ರಮಾಣ ಹೆಚ್ಚಾದಲ್ಲಿ ಮಾತ್ರ ಮೀಸಲಾತಿಗಾಗಿ ನಡೆಸುತ್ತಿರುವ ಹಕ್ಕೊತ್ತಾಯಗಳು ಫಲಪ್ರದವಾಗುತ್ತವೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ ಆದರೆ ಈ ನಿಟ್ಟಿನಲ್ಲಿ ಯಾವುದೇ ಬಗೆಯ ಹೋರಾಟಗಳೂ ನಡೆಯುತ್ತಿಲ್ಲ.
ಮೀಸಲಾತಿ ವಿವಾದಗಳಿಲ್ಲನ ಮತ್ತೊಂದು ವಿರೋಧಾಭಾಸ ಏನೆಂದರೆ ಬಂಡವಾಳಶಾಹಿ ವ್ಯವಸ್ಥೆಯನ್ನು ಸದೃಢಗೊಳಿಸಿ ತೀವ್ರತರವಾಗಿ ಖಾಸಗೀಕರಣಕ್ಕೆ ಮುಕ್ತಗೊಳಿಸುತ್ತಿರುವುದು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಒಪ್ಪಿಸಿ ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲಾಗುತ್ತಿದೆ. ಈಗಾಗಲೇ ಶಿಕ್ಷಣ ಕ್ಷೇತ್ರವನ್ನು ಬಹುಪಾಲು ಖಾಸಗೀ ಬಂಡವಾಳಿಗರ ವ್ಯಾಪಾರೀ ಕ್ಷೇತ್ರವನ್ನಾಗಿಸುವುದು ಸೂರ್ಯ ಸ್ಪಷ್ಟವಾಗಿದೆ.
ಅಳಿದುಳಿದ ಸರ್ಕಾರಿ ವಲಯದಲ್ಲಿಯೂ ನೇಮಕಾತಿಗಳನ್ನು ಮಾಡದೆ ಗುತ್ತಿಗೆ ಹೊರಗುತ್ತಿಗೆ ಪದ್ಧತಿಯನ್ನು ಜಾರಿಗೊಳಸಿಲಾಗಿದೆ. ವಾಸ್ತವ ಸ್ಥಿತಿ ಹೀಗಿರುವಾಗ ಶಿಕ್ಷಣ ಮತ್ತು ಉದ್ಯೋಗಗಳಲ್ಲಿನ ಮೀಸಲಾತಿಗಾಗಿ ಹಂಬಲಿಸುವುದೇ ಬಹುದೊಡ್ಡ ವೈರುಧ್ಯವಾಗಿ ಪರಿಣಮಿಸಿದೆ. ಬೃಹದಾಕಾರದಲ್ಲಿ ವಿಸ್ತಾರವಾಗುತ್ತಿರುವ ಖಾಸಗೀ ಕ್ಷೇತ್ರದಲ್ಲಿ ಮೀಸಲಾತಿಯನ್ನು ಹೊಂದಬೇಕಾದ್ದು ಇಂದಿನ ಅಗತ್ಯ. ಮೀಸಲಾತಿ ಹೋರಾಟಗಳು ಅನಿವಾರ್ಯವಾಗಿ ಖಾಸಗೀ ಕ್ಷೇತ್ರದ ಮೀಸಲಾತಿಗಾಗಿ ಸಂಘಟಿತಗೊಳ್ಳಬೇಕಾದ ತುರ್ತು ಇಂದಿನದಾಗಿದೆ.
ಇದನ್ನೂ ಓದಿ | ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!
ಮೀಸಲಾತಿಯ ಹೆಚ್ಚಳ ಮತ್ತು ಖಾಸಗೀ ವಲಯವನ್ನು ಮೀಸಲಾತಿ ತೆಕ್ಕೆಗೆ ಸೇರಿಸಿಕೊಳ್ಳುವುದಕ್ಕಿಂತಲೂ ಬಹುದೊಡ್ಡ ವ್ಯಂಗ್ಯ ಮತ್ತೊಂದಿದೆ. ಅದೇನೆಂದರೆ ಸಂವಿಧಾನದತ್ತವಾಗಿಯೇ ಪರಿಶಿಷ್ಟಜಾತಿ– ಪರಿಶಿಷ್ಟವರ್ಗಗಳು ಹಿಂದುಳಿದ ವರ್ಗಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆಂದು ನಿಗಧಿಯಾಗಿದ್ದ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗಳಿಸದಿರುವುದು. ಈ ವರ್ಗಗಳಿಗೆಂದು ಶೇ. 50 ಮೀರದಂತೆ ಕರ್ನಾಟಕದಲ್ಲಿ ಒಟ್ಟು ಶೇ. 49.5 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದೆ.
ಆದರೆ ಇದರಲ್ಲಿ ಜಾರಿಯಾಗಿರುವ ಪ್ರಮಾಣವೆಂದರೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿ ಶೇ.12 ಜಾರಿಯಾಗಿದೆ ಇನ್ನೂ ಶೇ. 6 ಖಾಲಿಯಿದೆ. ಇತರೆ ಹಿಂದುಳಿದ ವರ್ಗಗಳಿಗೆ ಶೇ 5 ಜಾರಿಗೊಳಸಿದ್ದು ಖಾಲಿಯಿರುವ ಪ್ರಮಾಣ ಶೇ 22 ಇದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಜಾರಿಗೊಳಿಸಿರುವುದು ಶೇ 2.5 ಖಾಲಿಯಿರುವುದು ಶೇ 2 ಅಂದರೆ ಮೀಸಲಾತಿಯಲ್ಲಿ ಜಾರಿಯಾಗಿರುವ ಒಟ್ಟು ಪ್ರಮಾಣ ಕೇವಲ ಶೇ. 19.5 ಮಾತ್ರ. ಇನ್ನೂ ಶೇ 30ರಷ್ಟು ಮೀಸಲಾತಿಯೇ ಭರ್ತಿಯಾಗಿರುವುದಿಲ್ಲ. ಈ ಅಂತರ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ವಿಸ್ತಾರಗೊಳ್ಳುತ್ತದೆ.
ಈ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಧರ್ಮ, ಜಾತಿ, ಉಪಜಾತಿಗಳ ನಡುವೆ ಮೀಸಲಾತಿ ವಿಷಯವನ್ನು ನೆಪಮಾಡಿ ಅಸಹನೆಯನ್ನು ತುಂಬುತ್ತಿರುವುದು ಯಾವ ನ್ಯಾಯ? ಈ ರೀತಿಯ ಕಟುವಾಸ್ತವಗಳನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕಿದೆ. ನಮ್ಮ ನಡುವಿನ ಸಾಮಾಜಿಕ ಆರ್ಥಿಕ ರಾಜಕೀಯ ವಿದ್ಯಾಮಾನಗಳು ಮಾನವೀಯವಾದ ಮೌಲ್ಯಗಳನ್ನು ಕಳೆದುಕೊಂಡು ಸಮಯಕ್ಕೊಂದು ಸುಳ್ಳನ್ನು ಹೆಣೆದು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಿವೆ.
ಆಳುವ ಸರ್ಕಾರಗಳಿಗೆ ಇದೊಂದು ಅಸ್ತ್ರವಾಗಿ ಪರಿಣಮಿಸಿದೆ. ದೇಶದ ಜನತೆಯನ್ನು ಗೊಂದಲದಲ್ಲಿ ದೂಡಿ ಅತಂತ್ರಗೊಳಸಿ ವರ್ಣಾಶ್ರಮ ವ್ಯವಸ್ಥೆಯನ್ನು ಶಾಶ್ವತಗೊಳಿಸುವ ಹುನ್ನಾರದಲ್ಲಿವೆ. ಇನ್ನಾದರೂ ನಾವೆಲ್ಲ ಇದನ್ನು ಅರ್ಥಮಾಡಿಕೊಂಡು ಒಗ್ಗಟ್ಟಾಗಿ ಸಂವಾದ ಸಂಘರ್ಷವನ್ನು ಕಟ್ಟುವ ಮೂಲಕ ಆಳುವ ವ್ಯವಸ್ಥೆಯನ್ನು ಎಚ್ಚರಿಸಬೇಕಾಗಿದೆ.
’ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಿ; ಇಲ್ಲವಾದರೆ ಅಧಿಕಾರವನ್ನು ತ್ಯಜಿಸಿ‘ ಎಂದು ಕೇಳುವ ಸ್ಥಿತಿ ಬಂದಿದೆ. ಜನತಂತ್ರದಲ್ಲಿ ಜನರದ್ದೇ ಪರಮಾಧಿಕಾರ ಎಂಬ ಸತ್ಯವನ್ನು ಸಾಕಾರಗೊಳಿಸೋಣ. ಪ್ರಜಾಪ್ರಭುತ್ವವನ್ನು ಉಳಿಸೋಣ ಎಲ್ಲರೂ ಬನ್ನಿ; ನಿಮ್ಮವರನ್ನೇಲ್ಲ ಕರೆ ತನ್ನಿ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ.
–ಪ್ರಜಾ ಪರಿವರ್ತನಾ ವೇದಿಕೆ, ಕರ್ನಾಟಕ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


