ದಿನದ ಸುದ್ದಿ
ಪ್ರಜಾ ಪರಿವರ್ತನಾ ವೇದಿಕೆಯಿಂದ ಮಾ.14 ರಂದು ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ಕುರಿತು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ
ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ ಪರಿವರ್ತನಾ ವೇದಿಕೆಯು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು ಭಾಗವಹಿಸಬೇಕೆಂದು ವೇದಿಕೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ಮಾನ್ಯರೆ,
ಭಾರತ ಸ್ವಾತಂತ್ರ್ಯ ಪಡೆದು ಸಂವಿಧಾನವನ್ನು ಒಪ್ಪಿ ಜಾರಿಗೊಳಿಸಿದ ದಿನದಿಂದಲೂ ಮೀಸಲಾತಿಯ ವಿರುದ್ಧ ಅಪಸ್ವರಗಳನ್ನು ಮುಂದುಮಾಡುವ ಪರಿಪಾಠವನ್ನು ನಿರಂತರವಾಗಿ ಚಾಲ್ತಿಯಲ್ಲಿ ಇಡಲಾಗಿದೆ. ಇತ್ತೀಚೆಗೆ ಭಾರತದಾದ್ಯಂತ ಮೀಸಲಾತಿಯನ್ನು ವಿರೋಧಿಸುತ್ತಿದ್ದವರು ಸಹ ತಮಗೂ ಮೀಸಲಾತಿಯನ್ನು ನೀಡಬೇಕೆಂದು ಉಗ್ರ ಹೋರಾಟಕ್ಕೆ ಮುಂದಾಗುತ್ತಿದ್ದಾರೆ.
ಕರ್ನಾಟಕದಲ್ಲಿ ಬಲಾಢ್ಯ ಸಮುದಾಯಗಳು ಮಾತ್ರವಲ್ಲದೆ, ಮೀಸಲಾತಿಯನ್ನು ಅನುಭವಿಸುತ್ತಿರುವ ಸಮುದಾಯಗಳೂ ಮೀಸಲಾತಿಯಲ್ಲಿ ತಮ್ಮನ್ನು ಒಂದು ಪ್ರವರ್ಗದಿಂದ ಮತ್ತೊಂದು ಪ್ರವರ್ಗಕಗಕೆ ಸ್ಥಳಾಂತರಿಸಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿವೆ. ಇದರಲ್ಲಿ ಧಾರ್ಮಿಕ ಮುಖಂಡರು, ಮಠಾಧೀಶರು, ಜನಪ್ರತಿನಿಧಿಗಳು ಮತ್ತು ಜಾತೀಯ ಸಮುದಾಯಗಳು ಒಗ್ಗಟ್ಟಾಗಿ ಬಲಪ್ರದರ್ಶನದಲ್ಲಿ ತೊಡಗಿವೆ.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲು ಅವಕಾಶವಿದೆ. ಅದಕ್ಕೆ ಸಂವಿಧಾನವೂ ಸಹ ಬೆಂಬಲವಾಗಿದೆ. ಆದರೆ ಮೀಸಲಾತಿಯ ಮೂಲ ಆಶಯಗಳು ಇದರಲ್ಲಿ ಕಣ್ಮರೆಯಾಗುತ್ತಿರುವುದು ದುರಂತವೇ ಸರಿ. ಇತ್ತೀಚೆಗಷ್ಟೇ ಮೇಲ್ವರ್ಗದಲ್ಲಿನ ಬಡವರಿಗೆ ಶೇ 10. ಮೀಸಲಾತಿಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಷಯ ಮಂಡಿಸಿ ಯಾವ ವಿರೋಧವೂ ಇಲ್ಲದಂತೆ ಸಂವಿಧಾನಕ್ಕೆ ತಿದ್ದುಪಡಿ ತಂದು ಜಾರಿಗೊಳಿಸಿದೆ. ಇದಕ್ಕೆ ಯಾವುದೇ ರೀತಿಯ ಹೋರಾಟ, ಹಕ್ಕೊತ್ತಾಯ, ಅಧ್ಯಯನ ಸಮಿತಿ ವರದಿ, ವೈಜ್ಞಾನಿಕ ಅಧ್ಯಯನ ಅಥವಾ ಸಾಮಾಜಿಕ ಒತ್ತಡಗಳಾಗಲಿ ಇರಲಿಲ್ಲ. ಆಳುವ ಸರ್ಕಾರದ ಹಿತಾಸಕ್ತಿ ಇದಾಗಿತ್ತು ಎಂಬುದನ್ನು ನೆನಪಿನಲ್ಲಿಡಬೇಕು.
ಮೀಸಲಾತಿಯು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ. ಅದು ಸಾಮಾಜಿಕ ಆರ್ಥಿಕ ಅಸಮಾನತೆ ಮತ್ತು ಅವಗಣನೆಗೆ ಒಳಪಟ್ಟಿರುವ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಸುವ ಒಂದು ಉಪಕ್ರಮ. ಜಾತಿಗ್ರಸ್ಥವಾಗಿರುವ ಸಮಾಜವನ್ನು ಜಾತಿರಹಿತವಾಗಿ ರೂಪಿಸುವ ಮಹತ್ವಾಕಾಂಕ್ಷೆಯ ತುಡಿತ ಮೀಸಲಾತಿಯ ಅಂತರಂಗದಲ್ಲಿದೆ.
ಈ ಮೂಲಕ ಪ್ರತಿಯೊಬ್ಬರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸುವ ಮೂಲಕ ಪ್ರಬುದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪ ಮೀಸಲಾತಿಯದ್ದಾಗಿದೆ, ಇಂಥ ಆಶಯಗಳನ್ನು ಗೊಂದಲಗೊಳಿಸಿ ಜಾತಿ– ಮತಗಳ ನಡುವೆ ದ್ವೇಷ, ವೈಷಮ್ಯಗಳನ್ನು ಹರಡಿ ಜಾತಿವ್ಯವಸ್ಥೆಯನ್ನು ಮತ್ತಷ್ಟು ಜಟಿಲಗೊಳಿಸುವ ಆಯುಧವನ್ನಾಗಿ ಮೀಸಲಾತಿಯನ್ನು ಬಳಸಲಾಗುತ್ತಿದೆ.
ಪ್ರಸ್ತುತ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟಗಳನ್ನು ನ್ಯಾಯಸಮ್ಮತ ಎಂದು ಭಾವಿಸಿದರೂ ಪ್ರಾಯೋಗಿಕವಾಗಿ ಅಸಂಬದ್ಧವಾಗಿದೆ ಎನ್ನುವುದು ವಾಸ್ತವ ಸತ್ಯ. ಇದು ಅನೇಕರಿಗೆ ಮನವರಿಕೆಯಾಗಿರುವ ಸಾಧ್ಯತೆಯಿದೆ. ಏಕೆಂದರೆ ಸರ್ವೋಚ್ಚ ನ್ಯಾಯಾಲಯವು ‘‘ಇಂದಿರಾ ಸಹಾನಿ’’ ಪ್ರಕರಣದಲ್ಲಿ ಮೀಸಲಾತಿಯ ಪ್ರಮಾಣ ಒಟ್ಟು ಶೇ. 50 ಮೀರಬಾರದು ಎಂಬ ನಿರ್ಬಂಧವನ್ನು ಹೇರಿದೆ.
ಅಗತ್ಯವಿದ್ದರೆ ಕೇಂದ್ರ ಸರ್ಕಾರ ಕ್ರಮಬದ್ಧವಾದ ರೀತಿಯಲ್ಲಿ ಶಾಸನಾತ್ಮಕವಾಗಿ ಮಿತಿಯನ್ನು ಮೀರಿ ಪ್ರಮಾಣವನ್ನು ಹೆಚ್ಚಳಗೊಳಿಸುವ ಅವಕಾಶ ಇದ್ದೇ ಇದೆ. ಸಂವಿಧಾನದ 340ನೇ ವಿಧಿಯನ್ವಯ ಸಮುದಾಯಗಳ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕ ವಿಧಿ ವಿಧಾನಗಳಿಂದ ದೃಢೀಕರಿಸಿ ನ್ಯಾಯಸಮ್ಮತವಾಗಿ ಅರ್ಹರಾದವರಿಗೆ ಮೀಸಲಾತಿಯನ್ನು ವಿಸ್ತರಿಸುವುದಕ್ಕೆ ಸಾಧ್ಯವಿದೆ.
ಇದು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರದ ಮಟ್ಟದಲ್ಲಿಯೇ ಇತ್ಯರ್ಥವಾಗಬೇಕಾದ ವಿಷಯ. ಅಂದರೆ ಸಂವಿಧಾನಾತ್ಮಕವಾಗಿ ಮೀಸಲಾತಿ ಪ್ರಮಾಣ ಹೆಚ್ಚಾದಲ್ಲಿ ಮಾತ್ರ ಮೀಸಲಾತಿಗಾಗಿ ನಡೆಸುತ್ತಿರುವ ಹಕ್ಕೊತ್ತಾಯಗಳು ಫಲಪ್ರದವಾಗುತ್ತವೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ ಆದರೆ ಈ ನಿಟ್ಟಿನಲ್ಲಿ ಯಾವುದೇ ಬಗೆಯ ಹೋರಾಟಗಳೂ ನಡೆಯುತ್ತಿಲ್ಲ.
ಮೀಸಲಾತಿ ವಿವಾದಗಳಿಲ್ಲನ ಮತ್ತೊಂದು ವಿರೋಧಾಭಾಸ ಏನೆಂದರೆ ಬಂಡವಾಳಶಾಹಿ ವ್ಯವಸ್ಥೆಯನ್ನು ಸದೃಢಗೊಳಿಸಿ ತೀವ್ರತರವಾಗಿ ಖಾಸಗೀಕರಣಕ್ಕೆ ಮುಕ್ತಗೊಳಿಸುತ್ತಿರುವುದು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಒಪ್ಪಿಸಿ ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲಾಗುತ್ತಿದೆ. ಈಗಾಗಲೇ ಶಿಕ್ಷಣ ಕ್ಷೇತ್ರವನ್ನು ಬಹುಪಾಲು ಖಾಸಗೀ ಬಂಡವಾಳಿಗರ ವ್ಯಾಪಾರೀ ಕ್ಷೇತ್ರವನ್ನಾಗಿಸುವುದು ಸೂರ್ಯ ಸ್ಪಷ್ಟವಾಗಿದೆ.
ಅಳಿದುಳಿದ ಸರ್ಕಾರಿ ವಲಯದಲ್ಲಿಯೂ ನೇಮಕಾತಿಗಳನ್ನು ಮಾಡದೆ ಗುತ್ತಿಗೆ ಹೊರಗುತ್ತಿಗೆ ಪದ್ಧತಿಯನ್ನು ಜಾರಿಗೊಳಸಿಲಾಗಿದೆ. ವಾಸ್ತವ ಸ್ಥಿತಿ ಹೀಗಿರುವಾಗ ಶಿಕ್ಷಣ ಮತ್ತು ಉದ್ಯೋಗಗಳಲ್ಲಿನ ಮೀಸಲಾತಿಗಾಗಿ ಹಂಬಲಿಸುವುದೇ ಬಹುದೊಡ್ಡ ವೈರುಧ್ಯವಾಗಿ ಪರಿಣಮಿಸಿದೆ. ಬೃಹದಾಕಾರದಲ್ಲಿ ವಿಸ್ತಾರವಾಗುತ್ತಿರುವ ಖಾಸಗೀ ಕ್ಷೇತ್ರದಲ್ಲಿ ಮೀಸಲಾತಿಯನ್ನು ಹೊಂದಬೇಕಾದ್ದು ಇಂದಿನ ಅಗತ್ಯ. ಮೀಸಲಾತಿ ಹೋರಾಟಗಳು ಅನಿವಾರ್ಯವಾಗಿ ಖಾಸಗೀ ಕ್ಷೇತ್ರದ ಮೀಸಲಾತಿಗಾಗಿ ಸಂಘಟಿತಗೊಳ್ಳಬೇಕಾದ ತುರ್ತು ಇಂದಿನದಾಗಿದೆ.
ಇದನ್ನೂ ಓದಿ | ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!
ಮೀಸಲಾತಿಯ ಹೆಚ್ಚಳ ಮತ್ತು ಖಾಸಗೀ ವಲಯವನ್ನು ಮೀಸಲಾತಿ ತೆಕ್ಕೆಗೆ ಸೇರಿಸಿಕೊಳ್ಳುವುದಕ್ಕಿಂತಲೂ ಬಹುದೊಡ್ಡ ವ್ಯಂಗ್ಯ ಮತ್ತೊಂದಿದೆ. ಅದೇನೆಂದರೆ ಸಂವಿಧಾನದತ್ತವಾಗಿಯೇ ಪರಿಶಿಷ್ಟಜಾತಿ– ಪರಿಶಿಷ್ಟವರ್ಗಗಳು ಹಿಂದುಳಿದ ವರ್ಗಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆಂದು ನಿಗಧಿಯಾಗಿದ್ದ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗಳಿಸದಿರುವುದು. ಈ ವರ್ಗಗಳಿಗೆಂದು ಶೇ. 50 ಮೀರದಂತೆ ಕರ್ನಾಟಕದಲ್ಲಿ ಒಟ್ಟು ಶೇ. 49.5 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದೆ.
ಆದರೆ ಇದರಲ್ಲಿ ಜಾರಿಯಾಗಿರುವ ಪ್ರಮಾಣವೆಂದರೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿ ಶೇ.12 ಜಾರಿಯಾಗಿದೆ ಇನ್ನೂ ಶೇ. 6 ಖಾಲಿಯಿದೆ. ಇತರೆ ಹಿಂದುಳಿದ ವರ್ಗಗಳಿಗೆ ಶೇ 5 ಜಾರಿಗೊಳಸಿದ್ದು ಖಾಲಿಯಿರುವ ಪ್ರಮಾಣ ಶೇ 22 ಇದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಜಾರಿಗೊಳಿಸಿರುವುದು ಶೇ 2.5 ಖಾಲಿಯಿರುವುದು ಶೇ 2 ಅಂದರೆ ಮೀಸಲಾತಿಯಲ್ಲಿ ಜಾರಿಯಾಗಿರುವ ಒಟ್ಟು ಪ್ರಮಾಣ ಕೇವಲ ಶೇ. 19.5 ಮಾತ್ರ. ಇನ್ನೂ ಶೇ 30ರಷ್ಟು ಮೀಸಲಾತಿಯೇ ಭರ್ತಿಯಾಗಿರುವುದಿಲ್ಲ. ಈ ಅಂತರ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ವಿಸ್ತಾರಗೊಳ್ಳುತ್ತದೆ.
ಈ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಧರ್ಮ, ಜಾತಿ, ಉಪಜಾತಿಗಳ ನಡುವೆ ಮೀಸಲಾತಿ ವಿಷಯವನ್ನು ನೆಪಮಾಡಿ ಅಸಹನೆಯನ್ನು ತುಂಬುತ್ತಿರುವುದು ಯಾವ ನ್ಯಾಯ? ಈ ರೀತಿಯ ಕಟುವಾಸ್ತವಗಳನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕಿದೆ. ನಮ್ಮ ನಡುವಿನ ಸಾಮಾಜಿಕ ಆರ್ಥಿಕ ರಾಜಕೀಯ ವಿದ್ಯಾಮಾನಗಳು ಮಾನವೀಯವಾದ ಮೌಲ್ಯಗಳನ್ನು ಕಳೆದುಕೊಂಡು ಸಮಯಕ್ಕೊಂದು ಸುಳ್ಳನ್ನು ಹೆಣೆದು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಿವೆ.
ಆಳುವ ಸರ್ಕಾರಗಳಿಗೆ ಇದೊಂದು ಅಸ್ತ್ರವಾಗಿ ಪರಿಣಮಿಸಿದೆ. ದೇಶದ ಜನತೆಯನ್ನು ಗೊಂದಲದಲ್ಲಿ ದೂಡಿ ಅತಂತ್ರಗೊಳಸಿ ವರ್ಣಾಶ್ರಮ ವ್ಯವಸ್ಥೆಯನ್ನು ಶಾಶ್ವತಗೊಳಿಸುವ ಹುನ್ನಾರದಲ್ಲಿವೆ. ಇನ್ನಾದರೂ ನಾವೆಲ್ಲ ಇದನ್ನು ಅರ್ಥಮಾಡಿಕೊಂಡು ಒಗ್ಗಟ್ಟಾಗಿ ಸಂವಾದ ಸಂಘರ್ಷವನ್ನು ಕಟ್ಟುವ ಮೂಲಕ ಆಳುವ ವ್ಯವಸ್ಥೆಯನ್ನು ಎಚ್ಚರಿಸಬೇಕಾಗಿದೆ.
’ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಿ; ಇಲ್ಲವಾದರೆ ಅಧಿಕಾರವನ್ನು ತ್ಯಜಿಸಿ‘ ಎಂದು ಕೇಳುವ ಸ್ಥಿತಿ ಬಂದಿದೆ. ಜನತಂತ್ರದಲ್ಲಿ ಜನರದ್ದೇ ಪರಮಾಧಿಕಾರ ಎಂಬ ಸತ್ಯವನ್ನು ಸಾಕಾರಗೊಳಿಸೋಣ. ಪ್ರಜಾಪ್ರಭುತ್ವವನ್ನು ಉಳಿಸೋಣ ಎಲ್ಲರೂ ಬನ್ನಿ; ನಿಮ್ಮವರನ್ನೇಲ್ಲ ಕರೆ ತನ್ನಿ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ.
–ಪ್ರಜಾ ಪರಿವರ್ತನಾ ವೇದಿಕೆ, ಕರ್ನಾಟಕ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ19 hours agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ15 hours agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

