ದಿನದ ಸುದ್ದಿ
ದಾವಣಗೆರೆ | ‘ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿ’ ಚುನಾವಣೆ : ವೇಳಾಪಟ್ಟಿ ಪ್ರಕಟ
ಸುದ್ದಿದಿನ,ದಾವಣಗೆರೆ : ಆಯುಕ್ತರು, ಸಹಕಾರ ಚುನಾವಣಾ ಆಯೋಗ ಬೆಂಗಳೂರು ಇವರ ಆದೇಶದನ್ವಯ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ)ನಿಯಮ-2019 ರನ್ವಯ ಪಟ್ಟಣ ವ್ಯಾಪಾರ ಸಮಿತಿ ಮಹಾನಗರ ಪಾಲಿಕೆ ದಾವಣಗೆರೆ ಇವರ ಸರ್ಕಾರೇತರ ಸದಸ್ಯರ ಪ್ರತಿನಿದಿಗಳ ಆಯ್ಕೆಯ ಚುನಾವಣೆಯು ಡಿ.21 ರಂದು ಶ್ರೀಮತಿ ಗೌರಮ್ಮ ಹನಗೋಡಿ ಮಠ ಹಿರಿಯ ಪ್ರಾಥಮಿಕ ಶಾಲೆ, ಕೊಠಡಿ ಸಂಖ್ಯೆ: 4,5,7 ಮತ್ತು 8, ಹದಡಿ ರಸ್ತೆ, ದಾವಣಗೆರೆ ಇಲ್ಲಿ ನಡೆಯಲಿದೆ.
ಈ ಚುನಾವಣೆಯಲ್ಲಿ ಪಟ್ಟಣದ ವ್ಯಾಪಾರ ಸಮಿತಿಯ ಒಟ್ಟು 10 ಜನ ಪ್ರತಿನಿಧಿಗಳು (3ನೇ ಒಂದರಷ್ಟು) ಮಹಿಳಾ ವ್ಯಾಪಾರಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಇತರೆ ಹಿಂದುಳಿದ ವರ್ಗಗಳ, ಅಲ್ಪ ಸಂಖ್ಯಾತರ ಹಾಗೂ ವಿಕಲ ಚೇತನರ ಕನಿಷ್ಠ ಒಬ್ಬ ಪ್ರತಿನಿಧಿಗೆ ಮೀಸರಿಸಿದ ಪಟ್ಟಣ ವ್ಯಾಪಾರ ಸಮಿತಿಗೆ ಚುನಾಯಿಸಲು ಈ ಚುನಾವಣೆಗೆ ನೋಟಿಸ್, ನಾಮಪತ್ರ ಆಹ್ವಾನಿಸಿ ಡಿ. 7 ರಂದು ಅಧಿಸೂಚನೆ ಹೊರಡಿಸಿದೆ.
ದಾವಣಗೆರೆ ಮಹಾನಗರಪಾಲಿಕೆಯ ಎಸ್ಜೆಎಸ್ಆರ್ವೈ ವಿಭಾಗ ಕೆಂಪು ಕಟ್ಟಡ ಕಚೇರಿಯಲ್ಲಿ ಡಿ 9 ರಿಂದ 13 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಾಮ ಪತ್ರಗಳನ್ನು ಚುನಾವಣಾ ಅಧಿಕಾರಿ/ಸಹಾಯಕ ಚುನಾವಣಾ ಅಧಿಕಾರಿಯವರಿಗೆ ನಿಗದಿಪಡಿಸಿದ ಅವಧಿಯಲ್ಲಿ ಸಲ್ಲಿಸುವುದು. ಡಿ. 14 ರಂದು ಬೆಳಿಗ್ಗೆ 11 ಗಂಟೆಗೆ ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಡಿ. 14 ರಂದು ಮಧ್ಯಾಹ್ನ 3 ಗಂಟೆಗೆ ಸಿಂಧುವಾದ ನಾಮಪತ್ರಗಳನ್ನು ಪ್ರಕಟಿಸಬೇಕಾದ ದಿನಾಂಕವಾಗಿರುತ್ತದೆ.
ಡಿ. 15 ರಂದು ಸಂಜೆ 5 ಗಂಟೆಗಿಂತ ಮುಂಚೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ದಿನವಾಗಿದೆ. ಹಾಗೂ ಅದೇ ದಿನ ಸಂಜೆ 5.30 ಗಂಟೆಯವರೆಗೆ ನಾಮಪತ್ರಗಳು ಸಿಂಧುವಾಗಿವೆ ಎಂದು ಘೋಷಿಸಲಾಗಿರುವ ಅಭ್ಯರ್ಥಿಗಳ ಸಂಖ್ಯೆಯು ಚುನಾಯಿಸಬೇಕಾದ ಅಭ್ಯರ್ಥಿಗಳ ಸಂಖ್ಯೆಯನ್ನು ಮೀರದಿದ್ದರೆ ಉಮೇದುವಾರಿಕೆಯನ್ನು ಹಿಂಪಡೆಯಲು ನಿಗದಿಪಡಿಸಲಾದ ದಿನ ಮುಕ್ತಾಯಗೊಂಡ ತರುವಾಯ, ಅಂಥ ಎಲ್ಲ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸತಕ್ಕದ್ದು. ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಅವರು ಯುಕ್ತವಾಗಿ ಚುನಾಯಿತರಾಗಿದ್ದಾರೆಂದು ಘೋಷಿಸತಕ್ಕದ್ದು.
ಡಿ 21 ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶ್ರೀಮತಿ ಗೌರಮ್ಮ ಹನಗೋಡಿ ಮಠ ಹಿರಿಯ ಪ್ರಾಥಮಿಕ ಶಾಲೆ, ಕೊಠಡಿ ಸಂಖ್ಯೆ: 4,5,7 ಮತ್ತು 8, ಹದಡಿ ರಸ್ತೆ, ದಾವಣಗೆರೆ ಇಲ್ಲಿ ಮತದಾನ ನಡೆಯಲಿದೆ. ಹಾಗೂ ಅದೇ ದಿನ ಮತದಾನದ ಅವಧಿ ಮುಗಿದ ನಂತರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಚುನಾವಣಾ ಫಲಿತಾಂಶ ಪ್ರಕಟಿಸಲಾಗುವುದು.
ಉಮೇದುವಾರರು ನಾಮಪತ್ರವನ್ನು ನಮೂನೆ-1 ರಲ್ಲಿ ನಾಮಪತ್ರ ಚುನಾವಣಾಧಿಕಾರಿಗಳಿಗೆ ಸಲ್ಲಿಸುವುದು. ಮತದಾನಕ್ಕೆ ಬರುವ ಬೀದಿ ಬದಿ ವ್ಯಾಪಾರಿಗಳು ಮಹಾನಗರಪಾಲಿಕೆ ದಾವಣಗೆರೆ ಇಂದ ನೀಡಿರುವ ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಮತ ಚಲಾಯಿಸತಕ್ಕದ್ದು, ಮತ್ತು ನಿಗದಿಪಡಿಸಿದ ಪುಸ್ತಕದಲ್ಲಿ ಸಹಿ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ರಿಟರ್ನಿಂಗ್ ಅಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸುವಂತೆ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ಪಟ್ಟಣ ವ್ಯಾಪಾರ ಸಮಿತಿ ಮಹಾನಗರ ಪಾಲಿಕೆ ಚುನಾವಣಾ ಅಧಿಕಾರಿಗಳು ಹಾಗೂ ದಾವಣಗೆರೆ ತಾಲ್ಲೂಕು ತಹಶಿಲ್ದಾರರಾದ ಜಿ. ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243