Connect with us

ನೆಲದನಿ

ದಮನಿತರ ದನಿಯಾಗಿ ನಿಂತ ವೈಚಾರಿಕ ಅನುವಾದಕ ಬಿ.ಸುಜ್ಞಾನಮೂರ್ತಿ

Published

on

  • ಡಾ.ಕೆ.ಎ.ಓಬಳೇಶ್

ನ್ನಡ ಸಾಹಿತ್ಯವು ವಿಭಿನ್ನ ಸಾಹಿತ್ಯ ಪ್ರಕಾರಗಳ ಮೂಲಕ ತನ್ನ ಅಸ್ಮಿತೆಯನ್ನು ಮುಂದುವರೆಸಿಕೊಂಡು ಬಂದಿದೆ. ಅನ್ಯಭಾಷೆಯ ಕೃತಿಗಳನ್ನು ಅನುವಾದಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪ್ರಕಾರವನ್ನು ಶ್ರೀಮಂತಗೊಳಿಸುವ ಕಾರ್ಯವು ಬಹು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪ್ರಕಾರಕ್ಕೆ ಹಲವಾರು ಪಂಡಿತ ಪಾಮರರು ಶ್ರಮಿಸಿದ್ದಾರೆ. ಕನ್ನಡ ಸಾರಸ್ವತ ಲೋಕ ಕಂಡ ಇಂತಹ ಮಹಾನಿಯರಲ್ಲಿ ಬಿ.ಸುಜ್ಞಾನಮೂರ್ತಿಯವರು ಒಬ್ಬರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅನುವಾದಕರ ಸಂಖ್ಯೆಯು ಅತ್ಯಧಿಕವಾಗಿ ಲಭಿಸುತ್ತದೆ. ಆದರೆ ಅನ್ಯಭಾಷೆಯ ವಿಶಿಷ್ಟವಾದ ಸಂವೇದನಾ ಕೃತಿಗಳನ್ನು ಕನ್ನಡದ ಮನಸುಗಳಿಗೆ ಸ್ಪಂದಿಸುವಂತೆ ಕಟ್ಟಿಕೊಡುವಲ್ಲಿ ಸುಜ್ಞಾನಮೂರ್ತಿಯವರು ಪ್ರಮುಖರಾಗಿದ್ದಾರೆ. ಇದಕ್ಕೆ ಬಹುಮುಖ್ಯವಾದ ಕಾರಣ ಇವರು ಅನುವಾದಕ್ಕೆ ಆಯ್ದುಕೊಂಡ ಕೃತಿಗಳ ವೈಶಿಷ್ಟ್ಯತೆ. ಇವರು ಅನುವಾದಕ್ಕೆ ಆಯ್ದುಕೊಂಡಿರುವ ಕೃತಿಗಳು ನೊಂದವರ, ಶೋಷಿತರ, ತಳವರ್ಗದವರ ಸಂವೇದನೆಗಳನ್ನು ಎತ್ತಿಹಿಡಿಯುವ ಎಡಪಂಥೀಯ ಚಿಂತನೆಗಳಿಂದ ಕೂಡಿದವುಗಳಾಗಿವೆ.

ಹೀಗಾಗಿಯೇ ಬಿ.ಸುಜ್ಞಾನಮೂರ್ತಿಯವರು ಕನ್ನಡ ಸಾರಸತ್ವ ಲೋಕದಲ್ಲಿ ವಿಶಿಷ್ಟವಾಗಿ ಕಂಡುಬರುತ್ತಾರೆ. ಇವರ ಅನುವಾದ ಸಾಹಿತ್ಯ ಸೇವೆಗೆ 2003ರಲ್ಲಿ ‘ಯಾರದೀ ಕಾಡು’ ಕಾದಂಬರಿ ಮತ್ತು 2013ರಲ್ಲಿ ‘ತೆಲಂಗಾಣ ರೈತ ಹೋರಾಟ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರೆತಿವೆ. ಹಾಗೆಯೇ 2016ನೇ ಸಾಲಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿಗೆ ಇವರು ಪಾತ್ರರಾಗಿದ್ದಾರೆ.

ಶ್ರೀಯುತ ಬಿ.ಸುಜ್ಞಾನಮೂರ್ತಿಯವರು ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುವ ಮೂಲಕ ಸಾವಿರಾರು ಕೃತಿಗಳಿಗೆ ತಾಂತ್ರಿಕ ಮೆರುಗು ನೀಡಿದವರು. ಪುಸ್ತಕಗಳ ಮೇಲಿನ ಇವರ ಕಾಳಜಿ, ಕೌಶಲ್ಯ ಹಾಗೂ ವಿದ್ವತ್ತನ್ನು ಯಾರೂ ಅಲ್ಲಗಳೆಯುವಂತಿಲ್ಲ. ಪ್ರಸಾರಂಗದಿಂದ ಹೊರ ಬರುವ ಕೃತಿಗಳಿಗೆ ಮಾತ್ರವಲ್ಲದೆ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ಯುವ ಬರಹಗಾರರಿಗೆ ಸ್ಫೂರ್ತಿ ತುಂಬುವ ಮೂಲಕ ಅವರ ಕೃತಿಗಳಿಗೆ ಮೆರಗನ್ನು ನೀಡುವ ಮಹತ್ತರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ.

ಯಾವುದೇ ಕೃತಿ ಹಾಗೂ ಲೇಖಕರು ಸುಜ್ಞಾನಮೂರ್ತಿ ಅವರಿಂದ ಮೌಲ್ಯಮಾಪನಕ್ಕೆ ಒಳಗಾಗಿ ಮೆಚ್ಚುಗೆಯನ್ನು ಪಡೆದುಕೊಂಡರೆ ಆ ಕೃತಿ ಹಾಗೂ ಲೇಖಕನನ್ನು ಯಾರು ತಿರಸ್ಕರಿಸುವುದಕ್ಕೆ ಸಾಧ್ಯವೇ ಇಲ್ಲ. ಇಂತಹ ವಿಶಿಷ್ಟ ಪ್ರತಿಭೆಯೊಂದು ಕನ್ನಡ ವಿಶ್ವವಿದ್ಯಾಲದಲ್ಲಿರುವುದು ಕರ್ನಾಟಕದ ಪುಸ್ತಕ ಸಂಸ್ಕøತಿಯ ಹೆಗ್ಗಳಿಕೆಯೂ ಹೌದು.

ಸುಜ್ಞಾನಮೂರ್ತಿಯವರು ಪ್ರಸಾರಾಂಗದ ಉಪ ನಿರ್ದೇಶಕರಾಗಿದ್ದುಕೊಂಡೆ ಕನ್ನಡ ಸಾಹಿತ್ಯದ ಶ್ರೀಮಂತಿಕೆಗಾಗಿ ದುಡಿದವರು. ಒಬ್ಬ ಪ್ರಾಧ್ಯಾಪಕ ಮಾತ್ರವಲ್ಲ, ವಿಶ್ವವಿದ್ಯಾಲಯದ ಒಂದು ವಿಭಾಗ ಮಾಡುವಷ್ಟು ಅನುವಾದ ಕಾರ್ಯವನ್ನು ಮಾಡಿದ ಕೀರ್ತಿಗೆ ಶ್ರೀಯುತರು ಪಾತ್ರರಾಗಿದ್ದಾರೆ. ಇವರ ಈ ಅನುವಾದ ಕಾರ್ಯದ ಹಿಂದೆ ಜೀವಪರ ತುಡಿತವಿದೆ.

ಈ ತುಡಿತದ ಭಾಗವಾಗಿಯೇ ಇವರು ಸುಮಾರು ಐವತ್ತಕ್ಕೂ ಹೆಚ್ಚೂ ಮೌಲಿಕವಾದ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಸಮರ್ಪಿಸಿದ್ದಾರೆ. ತೆಲುಗು ಭಾಷೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿರುವ ಶ್ರೀಯುತರು ಹೆಸರಾಂತ ವೈಚಾರಿಕ ಚಿಂತಕರಾದ ಪ್ರೊ. ಕಂಚ ಐಲಯ್ಯ ಶೆಫರ್ಡ್, ಜಿ.ಎಲೋಶಿಯಸ್, ಬೊಜ್ಜಾ ತಾರಕಂ, ವಿ.ಎಸ್.ನೈಪಾಲ್ ಮುಂತಾದವರ ವೈಚಾರಿಕ ಕೃತಿಗಳನ್ನು ಕನ್ನಡೀಕರಿಸಿದ್ದಾರೆ.

ಬಿ.ಸುಜ್ಞಾನಮೂರ್ತಿಯವರು ಅತ್ಯುತ್ತಮ ಅನುವಾದಕರು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಇವರು ವಿಶೇಷವಾಗಿ ಕಾಣುವುದು ಮಾತ್ರ ಅವರ ಅನುವಾದದ ಹಿಂದಿನ ಕಾಳಜಿಯಿಂದ. ಅವರು ಇದುವರೆಗೂ ಕನ್ನಡಕ್ಕೆ ಅನುವಾದಿಸಿದ ಎಲ್ಲ ಕೃತಿಗಳ ಆತರ್ಯದಲ್ಲಿ ಜೀವಪರ ಕಾಳಜಿಯೊಂದು ಸದಾ ಎದ್ದು ಕಾಣುತ್ತದೆ. ಇದು ಸಮಾಜದಲ್ಲಿ ನೊಂದವರ, ನಿರ್ಲಕ್ಷ್ಯಕ್ಕೆ ಒಳಗಾದವರ, ಶೋಷಿತರ, ದನಿತರ ದನಿಯಾಗಿ ಮಿಡಿಯುತ್ತ ಸಾಗಿದೆ.

ಇದೇ ಸುಜ್ಞಾನಮೂರ್ತಿಯವರ ಅನುವಾದದ ಬಹುಮುಖ್ಯ ವೈಶಿಷ್ಟ್ಯತೆ. ಇವರು ತಮ್ಮಲ್ಲಿ ಅಂತರ್ಗತವಾಗಿರುವ ಜೀವಪರ ಕಾಳಜಿಯಿಂದಾಗಿ ಅನುವಾದಿಸಿದ ಕೃತಿಗಳೆಲ್ಲ ಕನ್ನಡಕ್ಕೆ ವೈಚಾರಿಕ ಶಕ್ತಿಯನ್ನು ತುಂಬಿವೆ. ಇವರ ಬಹುತೇಕ ಅನುವಾದಿತ ಕೃತಿಗಳಲ್ಲಿ ದಲಿತಪರ ಕಾಳಜಿ ಎದ್ದು ಕಾಣುತ್ತದೆ. ಇದಕ್ಕೆ ನಿದರ್ಶನವಾಗಿ ಜಾತಿವಿನಾಶ, ದಲಿತತತ್ವ, ಜಾತಿವಿನಾಶ ವರ್ಗವಿನಾಶ, ಜಾತಿಯ ನೆರಳಲ್ಲಿ ಅಭಿವೃದ್ಧಿ ರಾಜಕೀಯ, ದಲಿತರು ಮತ್ತು ಪ್ರಭುತ್ವ, ಆಂಧ್ರಪ್ರದೇಶದ ಶತಮಾನದ ದಲಿತ ಚಳವಳಿ, ಹೊಲೆಯತತ್ವ ಹಾಗೂ ಮಾದಿಗತತ್ವ ಕೃತಿಗಳು ಮೂಡಿಬಂದಿವೆ.

ಈ ಎಲ್ಲಾ ಕೃತಿಗಳು ದಲಿತರ ಸ್ವಾಭಿಮಾನದ ಪ್ರತೀಕವಾಗಿ ಮೂಡಿಬಂದವುಗಳಾಗಿವೆ. ದಲಿತರಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ಮೂಡಿಬಂದ ಭಾರತೀಯ ವಿವಿಧ ಭಾಷೆಗಳ ಕೃತಿಗಳನ್ನು ಕನ್ನಡದ ಓದುಗನಿಗೆ ಸರಳವಾಗಿ ಮತ್ತು ಸುಲಭವಾಗಿ ತಲುಪಿಸುವ ಮಹತ್ತರ ಕಾರ್ಯವನ್ನು ಸುಜ್ಞಾನಮೂರ್ತಿಯವರು ನಿರಂತರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ. ಇವರ ಈ ತುಡಿತವೇ ಅವರ ಆತಂರ್ಯದಲ್ಲಿರುವ ಅಸ್ಪøಶ್ಯತಾ ವಿರೋಧಿ ಧೋರಣೆಯನ್ನು, ಸಮಸಮಾಜದ ಕನಸನ್ನು ಎತ್ತಿಹಿಡಿಯುತ್ತದೆ.

ಶ್ರೀಯುತರು ತಮ್ಮಲ್ಲಿ ಅಂತರ್ಗತವಾಗಿರುವ ದಲಿತಪರ ಕಾಳಜಿಯ ಪ್ರತೀಕವಾಗಿ ಹಲವಾರು ದಲಿತ ಹೋರಾಟಗಾರರನ್ನು ಕನ್ನಡಿಗರಿಗೆ ಪರಿಚಯಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರ ಫಲಶೃತಿಯಾಗಿ ದಲಿತ ಹೋರಾಟಗಾರ ಅಯ್ಯನ್‍ಕಾಳಿ, ತಮಿಳು ಬೌದ್ಧ ದಲಿತ ಹೋರಾಟಗಾರ ಅಯೋತಿದಾಸ್, ಪೆರಿಯಾರ್: ಜೀವನ-ಚಳುವಳಿ, ರಮಾಬಾಯಿ ಅಂಬೇಡ್ಕರ್ ಜೀವನಚಿತ್ರ, ಆದಿವಾಸಿ ಹೋರಾಟಗಾರ ಕೊಮುರಂ ಭೀಮು ಎಂಬ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಈ ಎಲ್ಲಾ ಕೃತಿಗಳು ಕರ್ನಾಟಕದ ದಲಿತ ಹೋರಾಟಗಾರರಿಗೆ ಹಾಗೂ ದಲಿತ ಚಳುವಳಿಗೆ ಪ್ರೇರಕ ಶಕ್ತಿಯಾಗಿವೆ. ಇಂತಹ ವಿಶಿಷ್ಟ ಪ್ರತಿಭೆಗಳ ಹೋರಾಟ ಕ್ರಮವನ್ನು ಸುಜ್ಞಾನಮೂರ್ತಿಯವರು ಜೀವಪರ ಕಾಳಜಿಯಿಂದ ಕನ್ನಡಕ್ಕೆ ಪರಿಚಿಸಿದ್ದಾರೆ. ಇವರ ಈ ಶ್ರಮದ ಹಿಂದೆ ದಲಿತಪರವಾದ ತುಡಿತ ಮಿಡಿತವಿದೆ. ಇವರ ಆಂತರ್ಯದ ದಲಿತಪರ ತುಡಿತದ ಫಲವಾಗಿಯೇ ಇಂತಹ ಮೌಲಿಕ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ಸಮರ್ಪಿಸಿದ್ದಾರೆ.

ಹೀಗಾಗಿ ಶ್ರೀಯುತ ಬಿ.ಸುಜ್ಞಾನಮೂರ್ತಿವರು ಕೇವಲ ಅನುವಾದಕರು ಮಾತ್ರವಲ್ಲ, ಅವರೊಳಗೊಬ್ಬ ಪ್ರಾಮಾಣಿಕ ನೆಲೆಯ ದಲಿತ ಚಿಂತಕನಿದ್ದಾನೆ. ಹಾಗೆಯೇ ಸಾವಿರಾರು ವರ್ಷಗಳಿಂದ ದಲಿತರನ್ನು ಜಾತಿಯ ಹೆಸರಿನಲ್ಲಿ ಶೋಷಿಸಿಕೊಂಡು ಬಂದ ಪುರೋಹಿತಶಾಹಿ ವ್ಯವಸ್ಥೆಯ ವಿರುದ್ಧ ಬಂಡಾಯದ ದನಿ ಎತ್ತುವ ದಲಿತಪರ ಹೋರಾಟಗಾರನಿದ್ದಾನೆ.

ಆದರೆ ಕರ್ನಾಟಕದ ದಲಿತಪರ ಚಿಂತಕರನ್ನು, ಸಾಹಿತಿಗಳನ್ನು ಉಲ್ಲೆಖಿಸುವಾಗ ಇವರನ್ನು ವಿಸ್ಮøತಿಗೆ ತಳ್ಳಲಾಗಿದೆ. ಆದರೆ ಇವರ ದಲಿತಪರ ಕಾಳಜಿಯಿಂದ ಮೂಡಿಬಂದ ಅನುವಾದಿತ ಕೃತಿಗಳ ಮೌಲ್ಯವನ್ನು ಗಮನಿಸಿದರೆ ಇವರೊಬ್ಬ ನಿಜವಾದ ದಲಿತಪರ ಚಿಂತಕರಾಗಿ ನಮಗೆ ಎದುರಾಗುತ್ತಾರೆ. ಇವರ ಶ್ರಮದ ಫಲವಾಗಿ ದಲಿತ ಸಾಹಿತ್ಯವು ವಿಭಿನ್ನ ಭಾಷೆಗಳ ವಿಚಾರಧಾರೆ ಹಾಗೂ ಚಿಂತನ ಕ್ರಮದಿಂದಾಗಿ ಶ್ರೀಮಂತವಾಗಿರುವುದನ್ನು ಅಲ್ಲಗಳೆಯುವುದಕ್ಕೆ ಸಾಧ್ಯವೇ ಇಲ್ಲ.

ಸುಜ್ಞಾನಮೂರ್ತಿಯವರ ಅನುವಾದಿತ ಕೃತಿಗಳು ಬಹುಮುಖ್ಯವಾಗಿ ವೈಚಾರಿಕ ನೆಲೆಗಟ್ಟಿನಿಂದ ಕೂಡಿದ್ದು, ಸಾಮಾಜಿಕ ಅಸಮಾನತೆಯ ವಿರೋಧಿಸುವ ನಿಟ್ಟಿನಲ್ಲಿ ಮೂಡಿಬಂದಿವೆ. ಕುಟುಂಬ ವ್ಯವಸ್ಥೆ: ಮಾಕ್ರ್ಸ್‍ವಾದ-ಸ್ತ್ರೀವಾದ, ಪುರುಷ ಅಹಂಕಾರಕ್ಕೆ ಸವಾಲು, ನೇಣುಗಂಬದ ನೆರಳಿನಲ್ಲಿ, ತೆಲಂಗಾಣ ಹೋರಾಟ, ತೆಲಂಗಾಣ ರೈತ ಹೋರಾಟ ಎಂಬ ಶ್ರೀಯುತರ ಅನುವಾದಿತ ಕೃತಿಗಳು ಸಾಮಾಜಿಕ ತಾರತಮ್ಯ ನೀತಿಯನ್ನು ವಿರೋಧಿಸಿ ಸಮಸಮಾಜದ ನೆಲೆಗಟ್ಟಿನಲ್ಲಿ ರೂಪತಳೆದಿವೆ. ಈ ಅನುವಾದಿತ ಕಾರ್ಯದ ಹಿಂದೆ ಶ್ರೀಯುತರ ಸಮಾನತೆಯ ಆಶಯವಿದೆ.

ತನ್ನ ಸುತ್ತಮುತ್ತಲಿನ ಪರಿಸರದಲ್ಲಿ ನೆಲೆಯೂರಿರುವ ಅಸಮಾನತೆಯನ್ನು ಮೆಟ್ಟಿನಿಲ್ಲುವ ಹಾಗೂ ಪ್ರತಿಭಟಿಸುವ ಭಾಗವಾಗಿಯೇ ಈ ಕೃತಿಗಳು ಕನ್ನಡ ಸಾಹಿತ್ಯದಲ್ಲಿ ಮೂರ್ತರೂಪ ಪಡೆದಿವೆ. ಬುದ್ಧ, ಬಸವ, ಮಾಕ್ರ್ಸ್, ಗಾಂಧಿ, ಅಂಬೇಡ್ಕರ್ ಅವರಂತಹ ದಾರ್ಶನಿಕ ಚಿಂತನಧಾರೆಗಳಿಂದ ಪ್ರಭಾವಿತರಾದ ಸುಜ್ಞಾನಮೂರ್ತಿಯವರು, ಸಮಾನತೆಯ ಆಶಯಗಳನ್ನು ವಿಸ್ತರಿಸುವ ದೃಷ್ಟಿಕೋನದ ಅಡಿಯಲ್ಲಿ ವಿವಿಧ ಭಾಷೆಯ ಕೃತಿಗಳನ್ನು ಕನ್ನಡೀಕರಿಸಿದ್ದಾರೆ. ಈ ಅನುವಾದ ಕಾರ್ಯದಲ್ಲಿಯೂ ಜೀವಪರವಾದ ತುಡಿತ ಮಿಡಿತಗಳಿವೆ. ಈ ತುಡಿತ ಮಿಡಿತಗಳಿಗೆ ಅನುವಾದಕರು ಬೆಳೆದುಬಂದ ಸಾಮಾಜಿಕ ಪರಿಸರವು ಕೂಡ ಬಹುಮುಖ್ಯ ಪ್ರೇರಣೆಯನ್ನೊದಗಿಸಿದೆ.

ಸುಜ್ಞಾನಮೂರ್ತಿಯವರ ಅನುವಾದಿತ ಕೃತಿಗಳಲ್ಲಿ ಬಹುತೇಕ ಕೃತಿಗಳು ಕೋಮುವಾದ ಹಾಗೂ ಧಾರ್ಮಿಕ ಮೂಲಭೂತವಾದವನ್ನು ಪ್ರತಿರೋಧಿಸುತ್ತವೆ. ಭಾರತದಲ್ಲಿ ನೆಲೆಯೂರಿರುವ ಕೋಮುವಾದ ಹಾಗೂ ಧಾರ್ಮಿಕ ಮೂಲಭೂತವಾದಿ ಕಟ್ಟುಪಾಡುಗಳನ್ನು ವಿರೋಧಿಸಿ ಹಲವಾರು ದಾರ್ಶನಿಕರು ತಮ್ಮ ಹೋರಾಟವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಆದರೆ ಭಾರತದ ಸನಾತನವಾದಿಗಳು ಇಂತಹ ದಾರ್ಶನಿಕ ಚಿಂತನಧಾರೆಗಳನ್ನು ನಿರಂತರವಾಗಿ ವೈದಿಕೀಕರಣಗೊಳಿಸುತ್ತ ಬಂದಿದ್ದಾರೆ.

ಇದರ ಪರಿಣಾಮವಾಗಿ ಇಂದಿಗೂ ಕೋಮುವಾದವು ಸಾಮಾಜಿಕ ಶಾಂತಿಯನ್ನು ಕದಡುವಲ್ಲಿ ಯಶಸ್ವಿಯಾಗಿದ್ದು, ಇದರಿಂದ ನಿರಂತರವಾದ ರಕ್ತಪಾತ, ಸಾವು, ನೋವು, ಹಿಂಸೆಗಳು ಸಂಭವಿಸುತ್ತಿವೆ. ಇಂತಹ ಕೋಮುವಾದಿ ಧೋರಣೆಗಳನ್ನು ವಿರೋಧಿಸುವ ನಿಟ್ಟಿನಲ್ಲಿ ಶ್ರೀಯುತ ಸುಜ್ಞಾನಮೂರ್ತಿಯವರು ಹಲವಾರು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮತಾಂಧತೆ ಮತ್ತು ಮಾನವೀಯತೆ, ಹಿಂದೂಧರ್ಮ ಅಂತರ್ಯುದ್ಧ ಲಕ್ಷಣಗಳು, ಆಧ್ಯಾತ್ಮಿಕ ಫ್ಯಾಸಿಸ್ಟರು ಬ್ರಾಹ್ಮಣರು, ಇಂಟಲೆಕ್ಚುವಲ್ ಗೂಂಡಾಗಳು ಎಂಬ ಕೃತಿಗಳು ಧಾರ್ಮಿಕ ಮೂಲಭೂತ ಸ್ವರೂಪವನ್ನು ಪ್ರತಿರೋಧಿಸುತ್ತವೆ.

ಸಾವಿರಾರು ವರ್ಷಗಳಿಂದ ಭಾರತದ ಮೂಲನಿವಾಸಿಗಳನ್ನು ಶೋಷಣೆಗೆ ಒಳಪಡಿಸಿಕೊಂಡು ಬಂದ ಸನಾತನವಾದದ ತಂತ್ರಗಾರಿಯನ್ನು ಇಲ್ಲಿ ಎತ್ತಿಹಿಡಿಯಲಾಗಿದೆ. ಆ ಮೂಲಕ ಮೂಲನಿವಾಸಿ ಭಾರತೀಯರಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸುವ ನಿಟ್ಟಿನಲ್ಲಿ ಈ ಕೃತಿಗಳು ಮೂಡಿಬಂದಿವೆ.

ಶ್ರೀಯುತ ಬಿ.ಸುಜ್ಞಾನಮೂರ್ತಿಯವರು ತೆಲುಗು ಭಾಷೆಯಿಂದ ಸುಮಾರು ಐವತ್ತಕ್ಕೂ ಹೆಚ್ಚು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಎಲ್ಲಾ ಕೃತಿಗಳು ವೈಚಾರಿಕ ನೆಲೆಯಿಂದ ಕೂಡಿವೆ. ವೈಚಾರಿಕ ಕೃತಿಗಳ ಅನುವಾದದ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಇವರ ವೈಚಾರಿಕ ಚಿಂತನೆಗಳಿಗೆ ಬಹುಮುಖ್ಯವಾದ ವೇದಿಕೆಯನ್ನು ರೂಪಿಸಿಕೊಟ್ಟಿರುವುದು ಕನ್ನಡ ಹಾಗೂ ಕರ್ನಾಟಕದ ಸಾಂಸ್ಕøತಿಕ ಕೇಂದ್ರವಾದ ಕನ್ನಡ ವಿಶ್ವವಿದ್ಯಾಲಯ.

ದೇಶಿಯತೆ ಹಾಗೂ ವೈಚಾರಿಕ ತಳಹದಿಯ ಮೇಲೆ ರೂಪಿತವಾದ ಕನ್ನಡ ವಿಶ್ವವಿದ್ಯಾಲಯದ ವಿಶಿಷ್ಟ ಗುಣವೇ ಸುಜ್ಞಾನಮೂರ್ತಿಯವರ ವೈಚಾರಿಕ ಶಕ್ತಿ ಎಂದರೆ ಅತಿಶಯೋಕ್ತಿಯಾಗದು. ಹೀಗಾಗಿ ಕನ್ನಡ ವಿಶ್ವವಿದ್ಯಾಲಯದ ಆವರಣದ ಕಲ್ಲುಗಳ ನಡುವೆ ಚಿಗುರೊಡೆದ ಕೆಲವೇ ವೈಚಾರಿಕ ಗರಿಕೆಯ ಕುಡಿಗಳಲ್ಲಿ ಸುಜ್ಞಾನಮೂರ್ತಿಯವರು ಒಬ್ಬರಾಗಿದ್ದಾರೆ. ಇವರು ಕನ್ನಡ ವಿಶ್ವವಿದ್ಯಾಲಯದ ಉಪ ನಿರ್ದೇಶಕರಾಗಿ ಸಾವಿರಾರು ಪುಸ್ತಕಗಳಿಗೆ ರೂಪುರೇಷೆಯನ್ನು ಸಿದ್ಧಪಡಿಸಿದ್ದಾರೆ.

ಇವರು ಪುಸ್ತಕ ಕ್ಷೇತ್ರದಲ್ಲಿ ಹೊಂದಿದ ಕಾರ್ಯಕ್ಷಮತೆಯಿಂದಾಗಿ ಹಲವಾರು ಕೃತಿಗಳು ಮೆರಗು ಪಡೆದುಕೊಂಡಿವೆ. ತಮ್ಮ ವೃತ್ತಿ ಜೀವನದುದ್ದಕ್ಕೂ ಪುಸ್ತಕ ಲೋಕದೊಂದಿಗೆ ನಿರಂತರವಾದ ನಂಟನ್ನು ರೂಢಿಸಿಕೊಂಡು ಬಂದ ಶ್ರೀಯುತರು ಇಂದು ತಮ್ಮ ವೃತ್ತಿ ಜೀವನದಿಂದ ತಾಂತ್ರಿಕವಾಗಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇವರು ತಮ್ಮ ವೃತ್ತಿ ಜೀವನದ ನಂತರ ವಿಶ್ರಾಂತ ಸಮಯದಲ್ಲಿಯೂ ಮತ್ತಷ್ಟು ವೈಚಾರಿಕ ಕೃತಿಗಳ ಅನುವಾದದ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸುತ್ತಾರೆ ಎಂಬ ಬಲವಾದ ನಂಬಿಕೆಯಿದೆ. ಆದ ಕಾರಣ ಶ್ರೀಯುತರ ವಿಶ್ರಾಂತದ ದಿನಗಳು ಸುಖಕರವಾಗಿರಲೆಂದು ಹಾರೈಸುತ್ತ, ಶ್ರೀಯುತರಿಂದ ಮತ್ತಷ್ಟು ಸಾಹಿತ್ಯ ಕೃಷಿಯನ್ನು ಎದುರು ನೋಡುತ್ತೇವೆ.

(-ಡಾ.ಕೆ.ಎ.ಓಬಳೇಶ್
ಲೋಕಿಕೆರೆ, ದಾವಣಗೆರೆ ತಾ||ಜಿ||
ಮೊ: 9591420216)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ

Published

on

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

ವಸ್ತು ಪ್ರದರ್ಶನ

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

ದೇಸೀ ಆಟಗಳು

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಜಾನಪದ ಕಲೆ, ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯ ಜೀವನದೊಂದಿಗೆ ಸಂಬಂಧ ಹೊಂದಿದ್ದು ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಜನಪದ ಪರಂಪರೆಯ ಪ್ರತೀಕವಾಗಿ ‘ಜನಪದ ಉತ್ಸವ – 2025’ ನಮ್ಮ‌ಸಂಸ್ಕೃತಿ ನಮ್ಮ ಹೆಮ್ಮೆ ಹೆಚ್ಚು ಅರ್ಥ ಪೂರ್ಣವಾಗಿ ಮೂಡಿ ಬಂದಿದೆ.
| ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ

ನಮ್ಮ ದೇಶಿ ಸಂಸ್ಕೃತಿಯನ್ನು ಸಂರಕ್ಷಿಸಿ, ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ತಲೆಮಾರುಗಳಿಂದ ಹೊಂದಿರುವ, ಆಯಾ ಪ್ರಾದೇಶಿಕ ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿಯ ಸೊಗಡುಗಳು ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಒಂದು ಅತ್ಯುತ್ತಮ ಪ್ರಯತ್ನ ‘ಜಾನಪದ ‌ಉತ್ಸವ’-2025.
| ಡಾ.ಬಿ‌.ಜಿ.ಅಮೃತೇಶ್ವರ, ಪ್ರಾಂಶುಪಾಲರು

ಜನಪದರ ಬದುಕು, ಆಧುನಿಕ ಜಾಗತೀಕರಣದ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತಿದೆ ಅದರ ಸದಾಶಯವನ್ನು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಎಲ್ಲಾ ಅಧ್ಯಾಪಕರ ಸಹಾಯದಿಂದ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆಗಳು.
| ಷಣ್ಮುಖಪ್ಪ ಕೆ ಎಚ್ ,ಕಾರ್ಯಕ್ರಮದ ನಿರ್ದೇಶಕರು, ಸಂಚಾಲಕರು,ಸಾಂಸ್ಕೃತಿಕ ವೇದಿಕೆ

Continue Reading

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending