Connect with us

ನೆಲದನಿ

ದಮನಿತರ ದನಿಯಾಗಿ ನಿಂತ ವೈಚಾರಿಕ ಅನುವಾದಕ ಬಿ.ಸುಜ್ಞಾನಮೂರ್ತಿ

Published

on

  • ಡಾ.ಕೆ.ಎ.ಓಬಳೇಶ್

ನ್ನಡ ಸಾಹಿತ್ಯವು ವಿಭಿನ್ನ ಸಾಹಿತ್ಯ ಪ್ರಕಾರಗಳ ಮೂಲಕ ತನ್ನ ಅಸ್ಮಿತೆಯನ್ನು ಮುಂದುವರೆಸಿಕೊಂಡು ಬಂದಿದೆ. ಅನ್ಯಭಾಷೆಯ ಕೃತಿಗಳನ್ನು ಅನುವಾದಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪ್ರಕಾರವನ್ನು ಶ್ರೀಮಂತಗೊಳಿಸುವ ಕಾರ್ಯವು ಬಹು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪ್ರಕಾರಕ್ಕೆ ಹಲವಾರು ಪಂಡಿತ ಪಾಮರರು ಶ್ರಮಿಸಿದ್ದಾರೆ. ಕನ್ನಡ ಸಾರಸ್ವತ ಲೋಕ ಕಂಡ ಇಂತಹ ಮಹಾನಿಯರಲ್ಲಿ ಬಿ.ಸುಜ್ಞಾನಮೂರ್ತಿಯವರು ಒಬ್ಬರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅನುವಾದಕರ ಸಂಖ್ಯೆಯು ಅತ್ಯಧಿಕವಾಗಿ ಲಭಿಸುತ್ತದೆ. ಆದರೆ ಅನ್ಯಭಾಷೆಯ ವಿಶಿಷ್ಟವಾದ ಸಂವೇದನಾ ಕೃತಿಗಳನ್ನು ಕನ್ನಡದ ಮನಸುಗಳಿಗೆ ಸ್ಪಂದಿಸುವಂತೆ ಕಟ್ಟಿಕೊಡುವಲ್ಲಿ ಸುಜ್ಞಾನಮೂರ್ತಿಯವರು ಪ್ರಮುಖರಾಗಿದ್ದಾರೆ. ಇದಕ್ಕೆ ಬಹುಮುಖ್ಯವಾದ ಕಾರಣ ಇವರು ಅನುವಾದಕ್ಕೆ ಆಯ್ದುಕೊಂಡ ಕೃತಿಗಳ ವೈಶಿಷ್ಟ್ಯತೆ. ಇವರು ಅನುವಾದಕ್ಕೆ ಆಯ್ದುಕೊಂಡಿರುವ ಕೃತಿಗಳು ನೊಂದವರ, ಶೋಷಿತರ, ತಳವರ್ಗದವರ ಸಂವೇದನೆಗಳನ್ನು ಎತ್ತಿಹಿಡಿಯುವ ಎಡಪಂಥೀಯ ಚಿಂತನೆಗಳಿಂದ ಕೂಡಿದವುಗಳಾಗಿವೆ.

ಹೀಗಾಗಿಯೇ ಬಿ.ಸುಜ್ಞಾನಮೂರ್ತಿಯವರು ಕನ್ನಡ ಸಾರಸತ್ವ ಲೋಕದಲ್ಲಿ ವಿಶಿಷ್ಟವಾಗಿ ಕಂಡುಬರುತ್ತಾರೆ. ಇವರ ಅನುವಾದ ಸಾಹಿತ್ಯ ಸೇವೆಗೆ 2003ರಲ್ಲಿ ‘ಯಾರದೀ ಕಾಡು’ ಕಾದಂಬರಿ ಮತ್ತು 2013ರಲ್ಲಿ ‘ತೆಲಂಗಾಣ ರೈತ ಹೋರಾಟ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ದೊರೆತಿವೆ. ಹಾಗೆಯೇ 2016ನೇ ಸಾಲಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಗೌರವ ಪ್ರಶಸ್ತಿಗೆ ಇವರು ಪಾತ್ರರಾಗಿದ್ದಾರೆ.

ಶ್ರೀಯುತ ಬಿ.ಸುಜ್ಞಾನಮೂರ್ತಿಯವರು ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುವ ಮೂಲಕ ಸಾವಿರಾರು ಕೃತಿಗಳಿಗೆ ತಾಂತ್ರಿಕ ಮೆರುಗು ನೀಡಿದವರು. ಪುಸ್ತಕಗಳ ಮೇಲಿನ ಇವರ ಕಾಳಜಿ, ಕೌಶಲ್ಯ ಹಾಗೂ ವಿದ್ವತ್ತನ್ನು ಯಾರೂ ಅಲ್ಲಗಳೆಯುವಂತಿಲ್ಲ. ಪ್ರಸಾರಂಗದಿಂದ ಹೊರ ಬರುವ ಕೃತಿಗಳಿಗೆ ಮಾತ್ರವಲ್ಲದೆ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ಯುವ ಬರಹಗಾರರಿಗೆ ಸ್ಫೂರ್ತಿ ತುಂಬುವ ಮೂಲಕ ಅವರ ಕೃತಿಗಳಿಗೆ ಮೆರಗನ್ನು ನೀಡುವ ಮಹತ್ತರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ.

ಯಾವುದೇ ಕೃತಿ ಹಾಗೂ ಲೇಖಕರು ಸುಜ್ಞಾನಮೂರ್ತಿ ಅವರಿಂದ ಮೌಲ್ಯಮಾಪನಕ್ಕೆ ಒಳಗಾಗಿ ಮೆಚ್ಚುಗೆಯನ್ನು ಪಡೆದುಕೊಂಡರೆ ಆ ಕೃತಿ ಹಾಗೂ ಲೇಖಕನನ್ನು ಯಾರು ತಿರಸ್ಕರಿಸುವುದಕ್ಕೆ ಸಾಧ್ಯವೇ ಇಲ್ಲ. ಇಂತಹ ವಿಶಿಷ್ಟ ಪ್ರತಿಭೆಯೊಂದು ಕನ್ನಡ ವಿಶ್ವವಿದ್ಯಾಲದಲ್ಲಿರುವುದು ಕರ್ನಾಟಕದ ಪುಸ್ತಕ ಸಂಸ್ಕøತಿಯ ಹೆಗ್ಗಳಿಕೆಯೂ ಹೌದು.

ಸುಜ್ಞಾನಮೂರ್ತಿಯವರು ಪ್ರಸಾರಾಂಗದ ಉಪ ನಿರ್ದೇಶಕರಾಗಿದ್ದುಕೊಂಡೆ ಕನ್ನಡ ಸಾಹಿತ್ಯದ ಶ್ರೀಮಂತಿಕೆಗಾಗಿ ದುಡಿದವರು. ಒಬ್ಬ ಪ್ರಾಧ್ಯಾಪಕ ಮಾತ್ರವಲ್ಲ, ವಿಶ್ವವಿದ್ಯಾಲಯದ ಒಂದು ವಿಭಾಗ ಮಾಡುವಷ್ಟು ಅನುವಾದ ಕಾರ್ಯವನ್ನು ಮಾಡಿದ ಕೀರ್ತಿಗೆ ಶ್ರೀಯುತರು ಪಾತ್ರರಾಗಿದ್ದಾರೆ. ಇವರ ಈ ಅನುವಾದ ಕಾರ್ಯದ ಹಿಂದೆ ಜೀವಪರ ತುಡಿತವಿದೆ.

ಈ ತುಡಿತದ ಭಾಗವಾಗಿಯೇ ಇವರು ಸುಮಾರು ಐವತ್ತಕ್ಕೂ ಹೆಚ್ಚೂ ಮೌಲಿಕವಾದ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಸಮರ್ಪಿಸಿದ್ದಾರೆ. ತೆಲುಗು ಭಾಷೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿರುವ ಶ್ರೀಯುತರು ಹೆಸರಾಂತ ವೈಚಾರಿಕ ಚಿಂತಕರಾದ ಪ್ರೊ. ಕಂಚ ಐಲಯ್ಯ ಶೆಫರ್ಡ್, ಜಿ.ಎಲೋಶಿಯಸ್, ಬೊಜ್ಜಾ ತಾರಕಂ, ವಿ.ಎಸ್.ನೈಪಾಲ್ ಮುಂತಾದವರ ವೈಚಾರಿಕ ಕೃತಿಗಳನ್ನು ಕನ್ನಡೀಕರಿಸಿದ್ದಾರೆ.

ಬಿ.ಸುಜ್ಞಾನಮೂರ್ತಿಯವರು ಅತ್ಯುತ್ತಮ ಅನುವಾದಕರು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಇವರು ವಿಶೇಷವಾಗಿ ಕಾಣುವುದು ಮಾತ್ರ ಅವರ ಅನುವಾದದ ಹಿಂದಿನ ಕಾಳಜಿಯಿಂದ. ಅವರು ಇದುವರೆಗೂ ಕನ್ನಡಕ್ಕೆ ಅನುವಾದಿಸಿದ ಎಲ್ಲ ಕೃತಿಗಳ ಆತರ್ಯದಲ್ಲಿ ಜೀವಪರ ಕಾಳಜಿಯೊಂದು ಸದಾ ಎದ್ದು ಕಾಣುತ್ತದೆ. ಇದು ಸಮಾಜದಲ್ಲಿ ನೊಂದವರ, ನಿರ್ಲಕ್ಷ್ಯಕ್ಕೆ ಒಳಗಾದವರ, ಶೋಷಿತರ, ದನಿತರ ದನಿಯಾಗಿ ಮಿಡಿಯುತ್ತ ಸಾಗಿದೆ.

ಇದೇ ಸುಜ್ಞಾನಮೂರ್ತಿಯವರ ಅನುವಾದದ ಬಹುಮುಖ್ಯ ವೈಶಿಷ್ಟ್ಯತೆ. ಇವರು ತಮ್ಮಲ್ಲಿ ಅಂತರ್ಗತವಾಗಿರುವ ಜೀವಪರ ಕಾಳಜಿಯಿಂದಾಗಿ ಅನುವಾದಿಸಿದ ಕೃತಿಗಳೆಲ್ಲ ಕನ್ನಡಕ್ಕೆ ವೈಚಾರಿಕ ಶಕ್ತಿಯನ್ನು ತುಂಬಿವೆ. ಇವರ ಬಹುತೇಕ ಅನುವಾದಿತ ಕೃತಿಗಳಲ್ಲಿ ದಲಿತಪರ ಕಾಳಜಿ ಎದ್ದು ಕಾಣುತ್ತದೆ. ಇದಕ್ಕೆ ನಿದರ್ಶನವಾಗಿ ಜಾತಿವಿನಾಶ, ದಲಿತತತ್ವ, ಜಾತಿವಿನಾಶ ವರ್ಗವಿನಾಶ, ಜಾತಿಯ ನೆರಳಲ್ಲಿ ಅಭಿವೃದ್ಧಿ ರಾಜಕೀಯ, ದಲಿತರು ಮತ್ತು ಪ್ರಭುತ್ವ, ಆಂಧ್ರಪ್ರದೇಶದ ಶತಮಾನದ ದಲಿತ ಚಳವಳಿ, ಹೊಲೆಯತತ್ವ ಹಾಗೂ ಮಾದಿಗತತ್ವ ಕೃತಿಗಳು ಮೂಡಿಬಂದಿವೆ.

ಈ ಎಲ್ಲಾ ಕೃತಿಗಳು ದಲಿತರ ಸ್ವಾಭಿಮಾನದ ಪ್ರತೀಕವಾಗಿ ಮೂಡಿಬಂದವುಗಳಾಗಿವೆ. ದಲಿತರಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ಮೂಡಿಬಂದ ಭಾರತೀಯ ವಿವಿಧ ಭಾಷೆಗಳ ಕೃತಿಗಳನ್ನು ಕನ್ನಡದ ಓದುಗನಿಗೆ ಸರಳವಾಗಿ ಮತ್ತು ಸುಲಭವಾಗಿ ತಲುಪಿಸುವ ಮಹತ್ತರ ಕಾರ್ಯವನ್ನು ಸುಜ್ಞಾನಮೂರ್ತಿಯವರು ನಿರಂತರವಾಗಿ ಮುಂದುವರೆಸಿಕೊಂಡು ಬಂದಿದ್ದಾರೆ. ಇವರ ಈ ತುಡಿತವೇ ಅವರ ಆತಂರ್ಯದಲ್ಲಿರುವ ಅಸ್ಪøಶ್ಯತಾ ವಿರೋಧಿ ಧೋರಣೆಯನ್ನು, ಸಮಸಮಾಜದ ಕನಸನ್ನು ಎತ್ತಿಹಿಡಿಯುತ್ತದೆ.

ಶ್ರೀಯುತರು ತಮ್ಮಲ್ಲಿ ಅಂತರ್ಗತವಾಗಿರುವ ದಲಿತಪರ ಕಾಳಜಿಯ ಪ್ರತೀಕವಾಗಿ ಹಲವಾರು ದಲಿತ ಹೋರಾಟಗಾರರನ್ನು ಕನ್ನಡಿಗರಿಗೆ ಪರಿಚಯಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರ ಫಲಶೃತಿಯಾಗಿ ದಲಿತ ಹೋರಾಟಗಾರ ಅಯ್ಯನ್‍ಕಾಳಿ, ತಮಿಳು ಬೌದ್ಧ ದಲಿತ ಹೋರಾಟಗಾರ ಅಯೋತಿದಾಸ್, ಪೆರಿಯಾರ್: ಜೀವನ-ಚಳುವಳಿ, ರಮಾಬಾಯಿ ಅಂಬೇಡ್ಕರ್ ಜೀವನಚಿತ್ರ, ಆದಿವಾಸಿ ಹೋರಾಟಗಾರ ಕೊಮುರಂ ಭೀಮು ಎಂಬ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಈ ಎಲ್ಲಾ ಕೃತಿಗಳು ಕರ್ನಾಟಕದ ದಲಿತ ಹೋರಾಟಗಾರರಿಗೆ ಹಾಗೂ ದಲಿತ ಚಳುವಳಿಗೆ ಪ್ರೇರಕ ಶಕ್ತಿಯಾಗಿವೆ. ಇಂತಹ ವಿಶಿಷ್ಟ ಪ್ರತಿಭೆಗಳ ಹೋರಾಟ ಕ್ರಮವನ್ನು ಸುಜ್ಞಾನಮೂರ್ತಿಯವರು ಜೀವಪರ ಕಾಳಜಿಯಿಂದ ಕನ್ನಡಕ್ಕೆ ಪರಿಚಿಸಿದ್ದಾರೆ. ಇವರ ಈ ಶ್ರಮದ ಹಿಂದೆ ದಲಿತಪರವಾದ ತುಡಿತ ಮಿಡಿತವಿದೆ. ಇವರ ಆಂತರ್ಯದ ದಲಿತಪರ ತುಡಿತದ ಫಲವಾಗಿಯೇ ಇಂತಹ ಮೌಲಿಕ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ಸಮರ್ಪಿಸಿದ್ದಾರೆ.

ಹೀಗಾಗಿ ಶ್ರೀಯುತ ಬಿ.ಸುಜ್ಞಾನಮೂರ್ತಿವರು ಕೇವಲ ಅನುವಾದಕರು ಮಾತ್ರವಲ್ಲ, ಅವರೊಳಗೊಬ್ಬ ಪ್ರಾಮಾಣಿಕ ನೆಲೆಯ ದಲಿತ ಚಿಂತಕನಿದ್ದಾನೆ. ಹಾಗೆಯೇ ಸಾವಿರಾರು ವರ್ಷಗಳಿಂದ ದಲಿತರನ್ನು ಜಾತಿಯ ಹೆಸರಿನಲ್ಲಿ ಶೋಷಿಸಿಕೊಂಡು ಬಂದ ಪುರೋಹಿತಶಾಹಿ ವ್ಯವಸ್ಥೆಯ ವಿರುದ್ಧ ಬಂಡಾಯದ ದನಿ ಎತ್ತುವ ದಲಿತಪರ ಹೋರಾಟಗಾರನಿದ್ದಾನೆ.

ಆದರೆ ಕರ್ನಾಟಕದ ದಲಿತಪರ ಚಿಂತಕರನ್ನು, ಸಾಹಿತಿಗಳನ್ನು ಉಲ್ಲೆಖಿಸುವಾಗ ಇವರನ್ನು ವಿಸ್ಮøತಿಗೆ ತಳ್ಳಲಾಗಿದೆ. ಆದರೆ ಇವರ ದಲಿತಪರ ಕಾಳಜಿಯಿಂದ ಮೂಡಿಬಂದ ಅನುವಾದಿತ ಕೃತಿಗಳ ಮೌಲ್ಯವನ್ನು ಗಮನಿಸಿದರೆ ಇವರೊಬ್ಬ ನಿಜವಾದ ದಲಿತಪರ ಚಿಂತಕರಾಗಿ ನಮಗೆ ಎದುರಾಗುತ್ತಾರೆ. ಇವರ ಶ್ರಮದ ಫಲವಾಗಿ ದಲಿತ ಸಾಹಿತ್ಯವು ವಿಭಿನ್ನ ಭಾಷೆಗಳ ವಿಚಾರಧಾರೆ ಹಾಗೂ ಚಿಂತನ ಕ್ರಮದಿಂದಾಗಿ ಶ್ರೀಮಂತವಾಗಿರುವುದನ್ನು ಅಲ್ಲಗಳೆಯುವುದಕ್ಕೆ ಸಾಧ್ಯವೇ ಇಲ್ಲ.

ಸುಜ್ಞಾನಮೂರ್ತಿಯವರ ಅನುವಾದಿತ ಕೃತಿಗಳು ಬಹುಮುಖ್ಯವಾಗಿ ವೈಚಾರಿಕ ನೆಲೆಗಟ್ಟಿನಿಂದ ಕೂಡಿದ್ದು, ಸಾಮಾಜಿಕ ಅಸಮಾನತೆಯ ವಿರೋಧಿಸುವ ನಿಟ್ಟಿನಲ್ಲಿ ಮೂಡಿಬಂದಿವೆ. ಕುಟುಂಬ ವ್ಯವಸ್ಥೆ: ಮಾಕ್ರ್ಸ್‍ವಾದ-ಸ್ತ್ರೀವಾದ, ಪುರುಷ ಅಹಂಕಾರಕ್ಕೆ ಸವಾಲು, ನೇಣುಗಂಬದ ನೆರಳಿನಲ್ಲಿ, ತೆಲಂಗಾಣ ಹೋರಾಟ, ತೆಲಂಗಾಣ ರೈತ ಹೋರಾಟ ಎಂಬ ಶ್ರೀಯುತರ ಅನುವಾದಿತ ಕೃತಿಗಳು ಸಾಮಾಜಿಕ ತಾರತಮ್ಯ ನೀತಿಯನ್ನು ವಿರೋಧಿಸಿ ಸಮಸಮಾಜದ ನೆಲೆಗಟ್ಟಿನಲ್ಲಿ ರೂಪತಳೆದಿವೆ. ಈ ಅನುವಾದಿತ ಕಾರ್ಯದ ಹಿಂದೆ ಶ್ರೀಯುತರ ಸಮಾನತೆಯ ಆಶಯವಿದೆ.

ತನ್ನ ಸುತ್ತಮುತ್ತಲಿನ ಪರಿಸರದಲ್ಲಿ ನೆಲೆಯೂರಿರುವ ಅಸಮಾನತೆಯನ್ನು ಮೆಟ್ಟಿನಿಲ್ಲುವ ಹಾಗೂ ಪ್ರತಿಭಟಿಸುವ ಭಾಗವಾಗಿಯೇ ಈ ಕೃತಿಗಳು ಕನ್ನಡ ಸಾಹಿತ್ಯದಲ್ಲಿ ಮೂರ್ತರೂಪ ಪಡೆದಿವೆ. ಬುದ್ಧ, ಬಸವ, ಮಾಕ್ರ್ಸ್, ಗಾಂಧಿ, ಅಂಬೇಡ್ಕರ್ ಅವರಂತಹ ದಾರ್ಶನಿಕ ಚಿಂತನಧಾರೆಗಳಿಂದ ಪ್ರಭಾವಿತರಾದ ಸುಜ್ಞಾನಮೂರ್ತಿಯವರು, ಸಮಾನತೆಯ ಆಶಯಗಳನ್ನು ವಿಸ್ತರಿಸುವ ದೃಷ್ಟಿಕೋನದ ಅಡಿಯಲ್ಲಿ ವಿವಿಧ ಭಾಷೆಯ ಕೃತಿಗಳನ್ನು ಕನ್ನಡೀಕರಿಸಿದ್ದಾರೆ. ಈ ಅನುವಾದ ಕಾರ್ಯದಲ್ಲಿಯೂ ಜೀವಪರವಾದ ತುಡಿತ ಮಿಡಿತಗಳಿವೆ. ಈ ತುಡಿತ ಮಿಡಿತಗಳಿಗೆ ಅನುವಾದಕರು ಬೆಳೆದುಬಂದ ಸಾಮಾಜಿಕ ಪರಿಸರವು ಕೂಡ ಬಹುಮುಖ್ಯ ಪ್ರೇರಣೆಯನ್ನೊದಗಿಸಿದೆ.

ಸುಜ್ಞಾನಮೂರ್ತಿಯವರ ಅನುವಾದಿತ ಕೃತಿಗಳಲ್ಲಿ ಬಹುತೇಕ ಕೃತಿಗಳು ಕೋಮುವಾದ ಹಾಗೂ ಧಾರ್ಮಿಕ ಮೂಲಭೂತವಾದವನ್ನು ಪ್ರತಿರೋಧಿಸುತ್ತವೆ. ಭಾರತದಲ್ಲಿ ನೆಲೆಯೂರಿರುವ ಕೋಮುವಾದ ಹಾಗೂ ಧಾರ್ಮಿಕ ಮೂಲಭೂತವಾದಿ ಕಟ್ಟುಪಾಡುಗಳನ್ನು ವಿರೋಧಿಸಿ ಹಲವಾರು ದಾರ್ಶನಿಕರು ತಮ್ಮ ಹೋರಾಟವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಆದರೆ ಭಾರತದ ಸನಾತನವಾದಿಗಳು ಇಂತಹ ದಾರ್ಶನಿಕ ಚಿಂತನಧಾರೆಗಳನ್ನು ನಿರಂತರವಾಗಿ ವೈದಿಕೀಕರಣಗೊಳಿಸುತ್ತ ಬಂದಿದ್ದಾರೆ.

ಇದರ ಪರಿಣಾಮವಾಗಿ ಇಂದಿಗೂ ಕೋಮುವಾದವು ಸಾಮಾಜಿಕ ಶಾಂತಿಯನ್ನು ಕದಡುವಲ್ಲಿ ಯಶಸ್ವಿಯಾಗಿದ್ದು, ಇದರಿಂದ ನಿರಂತರವಾದ ರಕ್ತಪಾತ, ಸಾವು, ನೋವು, ಹಿಂಸೆಗಳು ಸಂಭವಿಸುತ್ತಿವೆ. ಇಂತಹ ಕೋಮುವಾದಿ ಧೋರಣೆಗಳನ್ನು ವಿರೋಧಿಸುವ ನಿಟ್ಟಿನಲ್ಲಿ ಶ್ರೀಯುತ ಸುಜ್ಞಾನಮೂರ್ತಿಯವರು ಹಲವಾರು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮತಾಂಧತೆ ಮತ್ತು ಮಾನವೀಯತೆ, ಹಿಂದೂಧರ್ಮ ಅಂತರ್ಯುದ್ಧ ಲಕ್ಷಣಗಳು, ಆಧ್ಯಾತ್ಮಿಕ ಫ್ಯಾಸಿಸ್ಟರು ಬ್ರಾಹ್ಮಣರು, ಇಂಟಲೆಕ್ಚುವಲ್ ಗೂಂಡಾಗಳು ಎಂಬ ಕೃತಿಗಳು ಧಾರ್ಮಿಕ ಮೂಲಭೂತ ಸ್ವರೂಪವನ್ನು ಪ್ರತಿರೋಧಿಸುತ್ತವೆ.

ಸಾವಿರಾರು ವರ್ಷಗಳಿಂದ ಭಾರತದ ಮೂಲನಿವಾಸಿಗಳನ್ನು ಶೋಷಣೆಗೆ ಒಳಪಡಿಸಿಕೊಂಡು ಬಂದ ಸನಾತನವಾದದ ತಂತ್ರಗಾರಿಯನ್ನು ಇಲ್ಲಿ ಎತ್ತಿಹಿಡಿಯಲಾಗಿದೆ. ಆ ಮೂಲಕ ಮೂಲನಿವಾಸಿ ಭಾರತೀಯರಲ್ಲಿ ಆತ್ಮಸ್ಥೈರ್ಯವನ್ನು ಮೂಡಿಸುವ ನಿಟ್ಟಿನಲ್ಲಿ ಈ ಕೃತಿಗಳು ಮೂಡಿಬಂದಿವೆ.

ಶ್ರೀಯುತ ಬಿ.ಸುಜ್ಞಾನಮೂರ್ತಿಯವರು ತೆಲುಗು ಭಾಷೆಯಿಂದ ಸುಮಾರು ಐವತ್ತಕ್ಕೂ ಹೆಚ್ಚು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಈ ಎಲ್ಲಾ ಕೃತಿಗಳು ವೈಚಾರಿಕ ನೆಲೆಯಿಂದ ಕೂಡಿವೆ. ವೈಚಾರಿಕ ಕೃತಿಗಳ ಅನುವಾದದ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಇವರ ವೈಚಾರಿಕ ಚಿಂತನೆಗಳಿಗೆ ಬಹುಮುಖ್ಯವಾದ ವೇದಿಕೆಯನ್ನು ರೂಪಿಸಿಕೊಟ್ಟಿರುವುದು ಕನ್ನಡ ಹಾಗೂ ಕರ್ನಾಟಕದ ಸಾಂಸ್ಕøತಿಕ ಕೇಂದ್ರವಾದ ಕನ್ನಡ ವಿಶ್ವವಿದ್ಯಾಲಯ.

ದೇಶಿಯತೆ ಹಾಗೂ ವೈಚಾರಿಕ ತಳಹದಿಯ ಮೇಲೆ ರೂಪಿತವಾದ ಕನ್ನಡ ವಿಶ್ವವಿದ್ಯಾಲಯದ ವಿಶಿಷ್ಟ ಗುಣವೇ ಸುಜ್ಞಾನಮೂರ್ತಿಯವರ ವೈಚಾರಿಕ ಶಕ್ತಿ ಎಂದರೆ ಅತಿಶಯೋಕ್ತಿಯಾಗದು. ಹೀಗಾಗಿ ಕನ್ನಡ ವಿಶ್ವವಿದ್ಯಾಲಯದ ಆವರಣದ ಕಲ್ಲುಗಳ ನಡುವೆ ಚಿಗುರೊಡೆದ ಕೆಲವೇ ವೈಚಾರಿಕ ಗರಿಕೆಯ ಕುಡಿಗಳಲ್ಲಿ ಸುಜ್ಞಾನಮೂರ್ತಿಯವರು ಒಬ್ಬರಾಗಿದ್ದಾರೆ. ಇವರು ಕನ್ನಡ ವಿಶ್ವವಿದ್ಯಾಲಯದ ಉಪ ನಿರ್ದೇಶಕರಾಗಿ ಸಾವಿರಾರು ಪುಸ್ತಕಗಳಿಗೆ ರೂಪುರೇಷೆಯನ್ನು ಸಿದ್ಧಪಡಿಸಿದ್ದಾರೆ.

ಇವರು ಪುಸ್ತಕ ಕ್ಷೇತ್ರದಲ್ಲಿ ಹೊಂದಿದ ಕಾರ್ಯಕ್ಷಮತೆಯಿಂದಾಗಿ ಹಲವಾರು ಕೃತಿಗಳು ಮೆರಗು ಪಡೆದುಕೊಂಡಿವೆ. ತಮ್ಮ ವೃತ್ತಿ ಜೀವನದುದ್ದಕ್ಕೂ ಪುಸ್ತಕ ಲೋಕದೊಂದಿಗೆ ನಿರಂತರವಾದ ನಂಟನ್ನು ರೂಢಿಸಿಕೊಂಡು ಬಂದ ಶ್ರೀಯುತರು ಇಂದು ತಮ್ಮ ವೃತ್ತಿ ಜೀವನದಿಂದ ತಾಂತ್ರಿಕವಾಗಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇವರು ತಮ್ಮ ವೃತ್ತಿ ಜೀವನದ ನಂತರ ವಿಶ್ರಾಂತ ಸಮಯದಲ್ಲಿಯೂ ಮತ್ತಷ್ಟು ವೈಚಾರಿಕ ಕೃತಿಗಳ ಅನುವಾದದ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸುತ್ತಾರೆ ಎಂಬ ಬಲವಾದ ನಂಬಿಕೆಯಿದೆ. ಆದ ಕಾರಣ ಶ್ರೀಯುತರ ವಿಶ್ರಾಂತದ ದಿನಗಳು ಸುಖಕರವಾಗಿರಲೆಂದು ಹಾರೈಸುತ್ತ, ಶ್ರೀಯುತರಿಂದ ಮತ್ತಷ್ಟು ಸಾಹಿತ್ಯ ಕೃಷಿಯನ್ನು ಎದುರು ನೋಡುತ್ತೇವೆ.

(-ಡಾ.ಕೆ.ಎ.ಓಬಳೇಶ್
ಲೋಕಿಕೆರೆ, ದಾವಣಗೆರೆ ತಾ||ಜಿ||
ಮೊ: 9591420216)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ; ಒಂದು ಚಿಂತನೆ

Published

on

  • ಮಹಾಂತೇಶ್.ಬಿ.ನಿಟ್ಟೂರು, ದಾವಣಗೆರೆ

ನಿಜ ಶರಣ ಶ್ರೀ ಅಂಬಿಗರ ಚೌಡಯ್ಯನವರ ಜೀವಿತ ಕಾಲ 12 ನೇ ಶತಮಾನದ ಬಸವಾದಿ ಶರಣರ ಕಾಲದಲ್ಲೇ ಇತ್ತು ಎಂಬುದು ಇತಿಹಾಸಕಾರರ ಸಂಶೋಧನೆಯಿಂದ ತಿಳಿದು ಬರುತ್ತದೆ. ಅವರ ಹುಟ್ಟೂರು ಹಾವೇರಿ ಜಿಲ್ಲೆಯ ಆಗಿನ ಶಿವಪುರ, ಈಗಿನ ಚೌಡಯ್ಯದಾನಪುರ. ಅವರ ತಂದೆಯ ಹೆಸರು ಶ್ರೀ ವಿರೂಪಾಕ್ಷ, ತಾಯಿಯ ಹೆಸರು ಪಂಪಾಂಭಿಕೆ, ಹೆಂಡತಿಯ ಹೆಸರು ಸುಲೋಚನಾ ಹಾಗೂ ಮಗನ ಹೆಸರು ಪುರವಂತ.

ಅಂಬಿಗ ವೃತ್ತಿಯ ಚೌಡಯ್ಯನವರು ಅಲ್ಲಮ ಪ್ರಭು ಮತ್ತು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಇದ್ದ ಒಬ್ಬ ಕ್ರಾಂತಿಕಾರಿ, ದಿಟ್ಟ, ನೇರ, ನಿಷ್ಠುರ ನುಡಿಯ ವಚನಕಾರ. ಕಲ್ಯಾಣ ಕ್ರಾಂತಿಯ ನಂತರ ಇವರು ತಮ್ಮ ವಚನಗಳ ಗಂಟನ್ನು ಹೊತ್ತು ಉಳವಿಗೆ ನಂತರ ತಮ್ಮ ಗ್ರಾಮವಾದ ತುಂಗಭದ್ರಾ ನದಿಯ ದಡದ ಮೇಲಿರುವ ಶಿವಪುರಕ್ಕೆ ಬಂದು ದೋಣಿ ನಡೆಸುವ ವೃತ್ತಿಯಲ್ಲಿ ನಿರತರಾಗಿ ವಚನ ರಚನೆ ಮಾಡಿರುವುದು ತಿಳಿದು ಬರುತ್ತದೆ.

ಚೌಡಯ್ಯನವರು ತಮ್ಮ ಜೀವಿತಾವಧಿಯಲ್ಲಿ ಅನೇಕ ಪವಾಡಗಳನ್ನು ಮಾಡಿರುತ್ತಾರೆ. ಗಿಡಮೂಲಿಕೆ ಔಷಧಿಗಳಿಂದ ಕ್ಷಯ ರೋಗ, ಕುಷ್ಠರೋಗ ಗುಣಪಡಿಸುವುದು, ಹಾವು ಕಚ್ಚಿದವರನ್ನು

ಬದುಕಿಸುವುದು ಇತ್ಯಾದಿ..

ಒಮ್ಮೆ ಗುತ್ತಲದ ಅರಸನು ಬೇಟೆಗಾಗಿ ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಆತನ ಸೇನಾಧಿಪತಿಯು ಹಾವು ಕಚ್ಚಿ ಮೃತಪಟ್ಟನು. ಇದರಿಂದಾಗಿ ಅರಸನಿಗೆ ಅತೀವ ದುಃಖವುಂಟಾಗಿ ರೋಧಿಸತೊಡಗಿದನು. ಆಗ ಆತನ ಸೈನಿಕನೊಬ್ಬನು ಶ್ರೀ ಚೌಡಯ್ಯನವರ ಪವಾಡಗಳ ಬಗ್ಗೆ ವಿವರಿಸಿ ಹೇಳಲಾಗಿ, ಅರಸನು ತನ್ನ ಮೃತ ಸೇನಾಧಿಪತಿಯ ಶರೀರವನ್ನು ಚೌಡಯ್ಯನವರಲ್ಲಿಗೆ ತಂದು ಆತನನ್ನು ಬದುಕಿಸುವಂತೆ ಕೇಳಿಕೊಂಡರು, ಆಗ ಚೌಡಯ್ಯನವರು ಸೇನಾಧಿಪತಿಯನ್ನು ಬದುಕಿಸುತ್ತಾರೆ. ಇದರಿಂದ ಸಂತುಷ್ಟನಾದ ಅರಸನು ಶಿವಪುರದ ಸುತ್ತಲಿನ ಪೂರ್ವ – ಪಶ್ಚಿಮಕ್ಕೆ 14 ಮೈಲು ಹಾಗೂ ಉತ್ತರ – ದಕ್ಷಿಣಕ್ಕೆ 7 ಮೈಲು ಸುತ್ತಳತೆಯ ಭೂಮಿಯನ್ನು ಚೌಡಯ್ಯನವರಿಗೆ ದಾನವಾಗಿ ನೀಡಿದನು.

ಆದರೆ ಚೌಡಯ್ಯನರು ವೈರಾಗ್ಯಶಾಲಿಯು, ಲೌಕಿಕದಲ್ಲಿ ನಿರಾಸಕ್ತಿ ಹೊಂದಿದವರು ಆಗಿದ್ದರಿಂದ, ಅರಸನು ಕೊಡಮಾಡಿದ್ದ ಸಂಪೂರ್ಣ ಜಮೀನನ್ನು ತನ್ನ ಗುರುಗಳಾದ ಶ್ರೀ ಶಿವದೇವರಿಗೆ ದಾನವಾಗಿ ನೀಡಿದರು ಎಂಬ ಉಲ್ಲೇಖವಿದೆ. ಅಂದಿನಿಂದ ಶಿವಪುರ ಗ್ರಾಮಕ್ಕೆ ‘ಚೌಡಯ್ಯದಾನಪುರ’ ಎಂದು ಹೆಸರು ಬರುತ್ತದೆ. ಮುಂದೆ ಚೌಡಯ್ಯನರು ಅಲ್ಲಿ ದೇಹ ತ್ಯಾಗ ಮಾಡಿದ್ದರಿಂದ ತುಂಗಭದ್ರಾ ನದಿಯ ದಡದಲ್ಲಿ ಈಗಲೂ ಚೌಡಯ್ಯನವರ ಸಮಾಧಿ ಗದ್ದುಗೆ ಇದೆ.

ಭ್ರಮಾಲೋಕದಲ್ಲಿ ವಿಹರಿಸುತ್ತಾ ಕುಳಿತ, ಆಡಂಬರದಲ್ಲಿ ಅಡ್ಡಾದಿಡ್ಡಿ ಅಡ್ಡಾಡುವ ಮಂದಿಯ ಕಪಾಳಕ್ಕೆ ಹೊಡೆದು ಎಚ್ಚರಿಸುವಂತಿವೆ ಚೌಡಯ್ಯನವರ ವಚನಗಳು. ಧಾರ್ಮಿಕ ಮೂಢನಂಬಿಕೆ ಬಿತ್ತುವವರಿಗೆ, ಸ್ವಾರ್ಥಿಗಳಾಗಿ ಬದುಕುವವರಿಗೆ, ಮುಖವಾಡ ಹಾಕಿ ಮಂಕು ಬೂದಿ ಎರಚುವವರಿಗೆ ಸಿಂಹ ಸ್ವಪ್ನದಂತೆ ಬೆಚ್ಚಿ ಬೀಳಿಸುತ್ತವೆ ನಿಜ ಶರಣ ಅಂಬಿಗರ ಚೌಡಯ್ಯನವರ ವಚನಗಳು. ಇದಕ್ಕೆ ತಾತ್ಪೂರ್ತಿಕವಾಗಿ ಕೆಲವು ವಚನಗಳು ಈ ಕೆಳಗಿನಂತಿವೆ;

“ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು/ನಂಬಿದರೆ ಒಂದೇ ಹುಟ್ಟಲಿ/ಕಡೆಯ ಹಾಯಿಸುವೆನೆಂದಾತನಂಬಿಗರ/ಚೌಡಯ್ಯ ನಿಜಶರಣನು”

ಈ ಮೇಲಿನ ವಚನ ಶ್ರೀ ಅಂಬಿಗರ ಚೌಡಯ್ಯನವರ ಸ್ವಾಭಿಮಾನ, ಧೈರ್ಯ, ನೇರ, ನಿರ್ಭಿಡೆಯ ವ್ಯಕ್ತಿತ್ವದ ಪ್ರತೀಕವಾಗಿದೆ.

ಹನ್ನೆರಡನೇ ಶತಮಾನದ ಸಂದರ್ಭದಲ್ಲಿ ಜಾತಿ ಮತ್ತು ವರ್ಗ ವ್ಯವಸ್ಥೆ ಎಷ್ಟರಮಟ್ಟಿಗಿತ್ತು ಎಂಬುದನ್ನು ಈ ವಚನ ಸೂಚಿಸುತ್ತದೆ. ಅಂತಹ ವಿಚಿತ್ರ, ವಿಕ್ಷಿಪ್ತ ಸನ್ನಿವೇಶದಲ್ಲಿ ಬಸವಾದಿ ಶರಣರು ಜಾತೀಯತೆ, ವರ್ಗ – ವರ್ಣ ವ್ಯವಸ್ಥೆಯ ವಿರುದ್ಧ ಬೃಹತ್ ಚಳುವಳಿಯನ್ನು ಕೈಗೊಂಡಾಗ ಅಂಬಿಗರ ಚೌಡಯ್ಯನವರ ಸತ್ಯನಿಷ್ಠೆ, ಪ್ರಾಮಾಣಿಕತೆಯ ವಚನಗಳು ಪ್ರಖರವಾಗಿ ಕಾಣಿಸುತ್ತವೆ. ಕೆಲವು ಢೋಂಗಿ ಭಕ್ತರಿಗೆ, ಕಪಟ ಸನ್ಯಾಸಿಗಳಿಗೆ ತನ್ನ ಖಾರವಾದ ವಚನಗಳ ಮೂಲಕ ಚುರುಕು ಮುಟ್ಟಿಸುತ್ತಾರೆ.

ಆಡಂಬರ ಮತ್ತು ದುರಾಸೆಯ ಜನರ ಮನಸ್ಥಿತಿ ಕಂಡು ಕೆಂಡಾಮಂಡಲವಾಗಿ ಪ್ರಸ್ತುತ ಪಡಿಸಿದ ಒಂದು ವಚನ ಇಂತಿದೆ;

“ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಕಾಳೋಗರನ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹಾರುವ ಪಕ್ಷಿಯನು/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೆಬ್ಬುಲಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಹೊಯ್ವ ಹೆಮ್ಮಾರಿಯ/ನಿಲ್ಲಿಸ ಬಹುದಯ್ಯ ಒಂದೇ ಮಂತ್ರದಲ್ಲಿ ಬರುವ ಉರಿ ಬಾಣವನು/ಇಂತೆಲ್ಲವನು ಒಂದೇ ಮಂತ್ರದಲ್ಲಿ ನಿಲ್ಲಿಸಬಹುದು;/ಲೋಭವೆಂಬ ಗ್ರಹಣ ಹಿಡಿದವರ ಏತರಿಂದಲೂ/ನಿಲ್ಲಿಸಲಾಗದು/ಈ ಲೋಭಕ್ಕೆ ದಾರಿದ್ರ್ಯವೇ ಔಷಧವು;/ಹೇಳಿದರೆ ಕೇಳರು, ತಾವು ತಿಳಿಯರು/ಶಾಸ್ತ್ರವ ನೋಡರು, ಭಕ್ತಿಯ ಹಿಡಿಯರು/ಇಂತಹ ಗೊಡ್ಡು ಮೂಳ ಹೊಲೆಯರಿಗೆ/ಕರ್ಮವೆಂಬ ಶರದ್ಧಿಯಲ್ಲಿ ಬಿದ್ದು ಹೊರಳಾಡುವುದೇ/ಸತ್ಯವೆಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು”

ಸಂಸಾರದ ಜಂಜಾಟದಲ್ಲಿ ಬಿದ್ದು ಒದ್ದಾಡುತ್ತಾ ಶಿವನನ್ನು ಮರೆತು ಹತ್ತು ಹಲವು ಚಿಂತೆಯಲ್ಲಿ ಮುಳುಗಿರುವ ಶವ ಮುಖದ ಜನರ ಸ್ಥಿತಿ-ಗತಿಯನ್ನು ಅರ್ಥಗರ್ಭಿತವಾಗಿ ಸಾದರಪಡಿಸುವ ಒಂದು ವಚನ ಇಂತಿದೆ;

“ಬಡತನಕೆ ಉಂಬುವ ಚಿಂತೆ/ಉಣಲಾದಡೆ ಉಡುವ ಚಿಂತೆ/ಉಡಲಾದಡೆ ಇಡುವ ಚಿಂತೆ/ಇಡಲಾದಡೆ ಹೆಂಡಿರ ಚಿಂತೆ/ಹೆಂಡಿರಾದರೆ ಮಕ್ಕಳ ಚಿಂತೆ/ಮಕ್ಕಳಾದಡೆ ಬದುಕಿನ ಚಿಂತೆ/ಬದುಕಾದಡೆ ಕೇಡಿನ ಚಿಂತೆ/ಕೇಡಾದಡೆ ಮರಣದ ಚಿಂತೆ/ಇಂತೀ ಹಲವು ಚಿಂತೆಯಲ್ಲಿಪ್ಪವರ ಕಂಡೆನು/ಶಿವನ ಚಿಂತೆಯಲ್ಲಿದ್ದಾತರೊಬ್ಬರನೂ ಕಾಣೆನೆಂದಾತ/ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು!”

ಸಮಯದ ಸದ್ಬಳಕೆ ಮಾಡಿಕೊಂಡು ಕಾಯಕ ಮಾಡುತ್ತಾ ಶಿವಭಕ್ತರಾಗಿ, ಜೀವನ ಪಾವನವಾಗಿಸುವಂತೆ ಕರೆ ನೀಡುವ ಒಂದು ವಚನ ಇಂತಿದೆ;

“ಗಾಳಿ ಬಿಟ್ಟಾಗ ತೂರಿಕೊಳ್ಳಿರಯ್ಯ/ಗಾಳಿ ನಿಮ್ಮ ಅಧೀನವಲ್ಲ ಕಂಡಯ್ಯ/ನಾಳೆ ತೂರಿಹೆನೆಂದಡಿಲ್ಲ ಕಂಡಯ್ಯ/ಶಿವಶರಣೆ ಎಂಬುದೊಂದು ಗಾಳಿ ಬಿಟ್ಟಲ್ಲಿ/ಬೇಗ ತೂರೆಂದನಂಬಿಗರ ಚೌಡಯ್ಯ”

ಕಾವಿ ಬಟ್ಟೆ ತೊಟ್ಟು, ಭಿಕ್ಷೆಗಾಗಿ ಜೋಳಿಗೆ ಹಾಕಿದವರೆಲ್ಲರೂ ಜಂಗಮರು, ಗುರುಗಳಾಗಲಾರರು ಎಂಬುದನ್ನು ವಿಡಂಬಿಸುವ ಒಂದು ವಚನ ಇಂತಿದೆ;

“ಕಂಥೆ ತೊಟ್ಟವ ಗುರುವಲ್ಲ/ಕಾವಿ ಹೊದ್ದವ ಜಂಗಮನಲ್ಲ/ಶೀಲ ಕಟ್ಟಿದವ ಶಿವಭಕ್ತನಲ್ಲ/ನೀರು ತೀರ್ಥವಲ್ಲ/ಕೂಳು ಪ್ರಸಾದವಲ್ಲ/ಹೌದೆಂಬವನ ಬಾಯ ಮೇಲೆ/ಅರ್ಧ ಮಣದ ಪಾದರಕ್ಷೆಯ ತೆಗೆದುಕೊಂಡು/ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ/ಟೊಕ ಟೊಕನೆ ಹೊಡೆ ಎಂದಾತ/ನಮ್ಮ ಅಂಬಿಗರ ಚೌಡಯ್ಯ”

ಹೀಗೆ ಬಸವಾದಿ ಶರಣರ ಸಮಾಜ ಸುಧಾರಣಾ ಚಳವಳಿಯಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಮುಡುಪಾಗಿಟ್ಟ ಶ್ರೀ ಅಂಬಿಗರ ಚೌಡಯ್ಯನವರು ತಮ್ಮ ಬದುಕಿನ ನೀತಿಯಿಂದ, ನಿಷ್ಠೆಯಿಂದ, ತೀಕ್ಷ್ಣ ಖಂಡನೆಯ ಬಂಡಾಯ ವಚನಗಳಿಂದ ಗಮನ ಸೆಳೆದು, ಅವರು ರಚಿಸಿದ ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವನ್ನಾಗಿಟ್ಟಿರುವದು ವಿಶೇಷವಾಗಿದೆ. ಸಮಾಜದ ಕೊಳೆಯನ್ನು ತೊಳೆಯುವ ನಿಟ್ಟಿನಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ಪ್ರಸ್ತುತತೆ ಎದ್ದು ಕಾಣುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

Published

on

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.

ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.

ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.

ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.

ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.

ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.

ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.

ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.

ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending