ದಿನದ ಸುದ್ದಿ

ಭಾನುವಾರ | ಬೆಳಗಿನ ಪ್ರಮುಖ ಸುದ್ದಿಗಳು

Published

on

ಭಾನುವಾರ | ಬೆಳಗಿನ ಪ್ರಮುಖ ಸುದ್ದಿಗಳು

  1. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಒತ್ತು ನೀಡುತ್ತಿದೆ. ಒಂದೇ ವರ್ಷದಲ್ಲಿ 7 ಸಾವಿರ ಕೊಠಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವುದರ ಜತೆಗೆ ಕಡು ಬಡವರಿಗೆ, ಹಿರಿಯರಿಗೆ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯೂರಿನಲ್ಲಿ ನಿನ್ನೆ ಹೇಳಿದ್ದಾರೆ.
  2. ರಾಜ್ಯ ಸರ್ಕಾರದ ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಬೆಂಗಳೂರು ಬಯೋ ಇನ್ನೋವೇಶನ್ ಸೆಂಟರ್ ಮತ್ತು ಸೆಂಟರ್ ಫಾರ್ ಸೆಲ್ಯೂಲರ್ ಅಂಡ್ ಮಾಲಿಕ್ಯೂಲರ್ ಫ್ಲಾಟ್ ಫಾರ್ಮ್ಸ್, ಬಯೋ ಸ್ಪೆಕ್ಟ್ರಮ್ ವಾರ್ಷಿಕ ಸಮೀಕ್ಷೆಯಲ್ಲಿ ಸಾರ್ವಜನಿಕ ವಲಯ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವೀತಿಯ ಸ್ಥಾನಗಳನ್ನು ಪಡೆದುಕೊಂಡಿವೆ ಎಂದು ಐಟಿಬಿಟಿ ಸಚಿವ ಡಾ|| ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
  3. ಬೆಂಗಳೂರಿನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಮತ್ತು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಆಯೋಜಿಸಲಿರುವ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
  4. ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸಲು ಉದ್ಯಮಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮನವಿ ಮಾಡಿದ್ದಾರೆ. ಖಾನ್‌ಪುರದಲ್ಲಿ ನಿನ್ನೆ ಉತ್ತರಪ್ರದೇಶದ ವ್ಯಾಪಾರಿಗಳ ಒಕ್ಕೂಟದ 90ನೇ ವಾರ್ಷಿಕೋತ್ಸವದಲ್ಲಿ ಪೊಲ್ಗೊಂಡು ಅವರು ಮಾತನಾಡಿದರು. ಕೈಗಾರಿಕೆಗಳ ಸ್ಥಾಪನೆ ವಿಚಾರದಲ್ಲಿ ಖಾನ್‌ಪುರ ಪ್ರಸಿದ್ಧಿಯಾಗಿದೆ. ಆದರೆ ಇದೇ ಸಂದರ್ಭದಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಬಗ್ಗೆ ಅಪಖ್ಯಾತಿಗೂ ಪಾತ್ರವಾಗಿದೆ. ವಿಶೇಷವಾಗಿ ಗಂಗಾನದಿಯಲ್ಲಿ ಮಾಲಿನ್ಯ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ ಎಂದರು.
  5. ಪರಿಸರ ಸಂರಕ್ಷಣೆಗೆ ಪೂರಕವಾದ ಜೀವನಶೈಲಿ ಕುರಿತ ಜಾಗತಿಕ ಉಪಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಲ್ ಅಂಡ್ ಮೆಲಿಂಡಾ ಗೇಟ್ಸ್ ಫೌಂಡೇಷನ್‌ನ ಸಹ ಅಧ್ಯಕ್ಷ ಬಿಲ್‌ಗೇಟ್ಸ್ ಕ್ಲೈಮೆಟ್ ಎಕಾನಾಮಿಸ್ಟ್ ಲಾರ್ಡ್ ನಿಕೋಲಾಸ ಸ್ಟರ್ನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರದಾನ ಭಾಷಣ ಮಾಡಲಿದ್ದಾರೆ.
  6. ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ. ಕೇಂದ್ರ ಸರ್ಕಾರ ಯೋಜನೆ ಜಾರಿಗೆ 20 ಸಾವಿರ ಕೋಟಿ ರೂಪಾಯಿ ಮಂಜೂರು ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ನಿನ್ನೆ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  7. ಕೃಷಿ ಮತ್ತು ಜಲಾನಯನ ಇಲಾಖೆಯಿಂದ ಇದೇ ಮೊದಲ ಬಾರಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ತುಮಕೂರಿನಲ್ಲಿ ಕೋಟಿ ವೃಕ್ಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹಿರೇಕೇರೂರಿನಲ್ಲಿ ಹೇಳಿದ್ದಾರೆ.
  8. ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವಸದಸ್ಯರ ಸಭೆಯ ನಂತರ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದರು. ಬೆಂಗಳೂರಿನ ರಾಷ್ಟ್ರೋತ್ಥಾನ ಸಂಸ್ಥೆ ಅತ್ಯತ್ತಮ ಪ್ರಕಾಶನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
  9. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 40ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
  10. ದೇಶದ ವಿವಿಧ ಕಲ್ಲಿದ್ದಲು ನಿಗಮಗಳಲ್ಲಿ ಸುಮಾರು 73 ಮಿಲಿಯನ್ ಟನ್ ಕಲ್ಲಿದ್ದಲು ದಾಸ್ತಾನು ಇದೆ. ಶಾಖೋತ್ಪನ್ನ ಘಟಕಗಳಿಗೆ ಅಗತ್ಯವಾದ ಕಲ್ಲಿದ್ದಲನ್ನು ಸರಬರಾಜು ಮಾಡಲಾಗುವುದು ಎಂದು ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ನೈವೇಲಿಯಲ್ಲಿ ನಿನ್ನೆ ಮಾಧಮಗಳಿಗೆ ಮಾಹಿತಿ ನೀಡಿದ್ದಾರೆ.
  11. ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಏರ್ಪಡಿಸಿರುವ ಮಣ್ಣಿನ ಫಲವತ್ತತೆ ರಕ್ಷಣೆ ಕುರಿತ ಆಂಧೋಲನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ’ಸೇವ್ ಸಾಯಿಲ್ ಮುಮೆಂಟ್’ ಎಂಬುದನ್ನು ಜಾಗತಿಕ ಆಂದೋಲನವನ್ನಾಗಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version