ಲೈಫ್ ಸ್ಟೈಲ್
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/01/Vivekananda-suddidina79.jpg&description=ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/01/Vivekananda-suddidina79.jpg&description=ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ', 'pinterestShare', 'width=750,height=350'); return false;" title="Pin This Post">
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ12, 1863 – ಜುಲೈ 4,1902) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ“ವೆಂದು ಆಚರಿಸಲಾಗುತ್ತದೆ.
ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ; ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಯುವಕರಿಗೆ ಕರೆ ನೀಡಿದ್ದರು. ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವ ಪೀಳಿಗೆಯ ತಲೆ ಒಳಗೆ ಹೊಕ್ಕರೆ, ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಸಾಧ್ಯವಾಗುತ್ತದೆ.
1985ರ ನಂತರ ಭಾರತದಲ್ಲಿ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು “ರಾಷ್ಟ್ರೀಯ ಯುವ ದಿನ” ಎಂದು ಘೋಷಿಸಲಾಗಿದ್ದು, ಈಗಲೂ ಆಚರಣೆಯಲ್ಲಿದೆ ಎಂಬುದಷ್ಟೇ ಸಂತೋಷ. ಇಂದು ದೇಶದಾದ್ಯಂತ ಆಚರಣೆ ಜಾರಿಯಲ್ಲಿದ್ದು, ಶಾಲಾ, ಕಾಲೇಜು ಅಲ್ಲಲ್ಲಿ ಮೆರವಣಿಗೆ, ಪ್ರಬಂಧ ಸ್ಪರ್ಧೆ, ಭಾಷಣ, ಚರ್ಚಾಕೂಟದಲ್ಲಿ ಪಾಲ್ಗೊಂಡು ವಿವೇಕಾನಂದರರ ಸಂದೇಶ ಸಾರುವಲ್ಲಿ ತೊಡಗಿದ್ದಾರೆ.
ಸ್ವಾಮಿ ವಿವೇಕಾನಂದರು ತಮ್ಮ ಶಕ್ತಿಯುತ ವ್ಯಕ್ತಿತ್ವದ ಮೂಲಕ, ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆ ಮೂಲಕ ನಮ್ಮ ರಾಷ್ಟ್ರ ಚೇತವನ್ನು ಜಾಗೃತಗೊಳಿಸಿ, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಅವರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಕುದುರಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು.
ವಿಶ್ವ ಪರ್ಯಟನೆ
ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.
ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. 1893ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.
ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ.
ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.
ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.
ಸ್ವದೇಶ ಮಂತ್ರ
ಹೋ ಜಂಬೂದ್ವೀಪದ ಮೂಲ ನಿವಾಸಿಗಳೇ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ! ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು.
ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.
ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು.
ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.
ಚಿಕಾಗೋದಲ್ಲಿ ಒಬ್ಬ ಕ್ರಿಶ್ಚನ್ನ ಯುವಕರು ತಮ್ಮಗ್ರಂಥವನ್ನು ಭಗವದ್ಗೀತೆಯ ಕೆಳಗಿಟ್ಟು ತಮ್ಮಧರ್ಮ ಶ್ರೇಷ್ಠ ಎಂಬ ಮಂಡುವಾದ ಮಾಡಿದರು. ಆ ಪುಸ್ತಕ ಸರಿಸಿದ ವಿವೇಕಾನಂದರು ಕೆಳಗಿದ್ದ ಪುಸ್ತಕ ವನ್ನು ಕುರಿತು ಎಲ್ಲಾಧರ್ಮಗಳಿಗಿಂತ ಮೂಲ ಧರ್ಮ ನಮ್ಮಧರ್ಮ.ಎಲ್ಲಾ ಧರ್ಮವು ಒಂದೇ ಎಂದು ಹೇಳಿದರು.
ಸಹೋದರ-ಸಹೋದರಿಯರೇ ಎನ್ನುತ್ತಲೇ ನಮ್ಮ ತನ್ನೆಡೆಗೆ ಸೆಳೆಸಿಕೊಂಡು ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು 1893 ರಲ್ಲಿ ಚಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
‘ವಿಶ್ವದ ಧರ್ಮಗಳ ಸಂಸತ್ತು’ ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, “ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ” ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು.
ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು”ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ”) ನಂತರ “ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!” ಎಂದು ಸಂಬೋಧಿಸಿ ಮಾತು ಆರಂಭಿಸಿದರು.
ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ ‘ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ’ ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!” (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು.
‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ “ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ” (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
‘ಸ್ವಾಮಿ ವಿವೇಕಾನಂದ’ರು ದಿವಂಗತರಾದಾಗ ಕೇವಲ 39ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-“ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು”.
ಹೀಗೆ ಸ್ವಾಮೀಜಿ ಬಗ್ಗೆ ಬರೆಯುತ್ತಲೋದರೆ ಕೊನೆಯಿಲ್ಲವೇನೋ ಅನ್ನಿಸಿಬಿಡಬಹುದು ವಾ,,,ವ್ ಒಬ್ಬ ಮನುಷ್ಯ ಇಷ್ಟೇಲ್ಲಾ ಸಾಧನೆ ಮಾಡಲಿಕ್ಕೆ ಸಾಧ್ಯವ?ಎಂಬ ಪ್ರಶ್ನೆ ಮೂಡಿತ್ತಾದರು ಯುವಜನತೆಗೆ ಬಹು ಹತ್ತಿರದವರಾಗಬೇಕಾದರೆ ಇಂತಹ ವಿಶೇಷ ಚಿಂತನೆ, ಹಾಗೂ ರಾಷ್ಟ್ರ ಜಾಗೃತಿಯನ್ನು ಚೇತನಗೊಳ್ಳಿಸಿಕೊಳ್ಳುತ್ತಾ ಮಹಾತ್ಮರನ್ನು ಆದರ್ಶನೀಯವಾಗಿ ಸ್ವೀಕರಿಸಬೇಕು ಆಗ ನವಭಾರತ ನಿರ್ಮಾಣ,ಭವ್ಯಭಾರತದ ಸಂಸ್ಕೃತಿಗಳು ಅಜರಾಮರವಾಗಲು ಸಾಧ್ಯ.
–ಕಾರ್ತಿಕ ಆಚಾರ್ಯ.ಕೆ
ಅರೆ ವೈದ್ಯಕೀಯ ವಿದ್ಯಾರ್ಥಿ
ಎಂ.ಕಲ್ಲಹಳ್ಳಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

