Connect with us

ಲೈಫ್ ಸ್ಟೈಲ್

ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ

Published

on

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ12, 1863 – ಜುಲೈ 4,1902) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ“ವೆಂದು ಆಚರಿಸಲಾಗುತ್ತದೆ.

ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ; ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಯುವಕರಿಗೆ ಕರೆ ನೀಡಿದ್ದರು. ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವ ಪೀಳಿಗೆಯ ತಲೆ ಒಳಗೆ ಹೊಕ್ಕರೆ, ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಸಾಧ್ಯವಾಗುತ್ತದೆ.

1985ರ ನಂತರ ಭಾರತದಲ್ಲಿ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬವನ್ನು “ರಾಷ್ಟ್ರೀಯ ಯುವ ದಿನ” ಎಂದು ಘೋಷಿಸಲಾಗಿದ್ದು, ಈಗಲೂ ಆಚರಣೆಯಲ್ಲಿದೆ ಎಂಬುದಷ್ಟೇ ಸಂತೋಷ. ಇಂದು ದೇಶದಾದ್ಯಂತ ಆಚರಣೆ ಜಾರಿಯಲ್ಲಿದ್ದು, ಶಾಲಾ, ಕಾಲೇಜು ಅಲ್ಲಲ್ಲಿ ಮೆರವಣಿಗೆ, ಪ್ರಬಂಧ ಸ್ಪರ್ಧೆ, ಭಾಷಣ, ಚರ್ಚಾಕೂಟದಲ್ಲಿ ಪಾಲ್ಗೊಂಡು ವಿವೇಕಾನಂದರರ ಸಂದೇಶ ಸಾರುವಲ್ಲಿ ತೊಡಗಿದ್ದಾರೆ.

ಸ್ವಾಮಿ ವಿವೇಕಾನಂದರು ತಮ್ಮ ಶಕ್ತಿಯುತ ವ್ಯಕ್ತಿತ್ವದ ಮೂಲಕ, ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆ ಮೂಲಕ ನಮ್ಮ ರಾಷ್ಟ್ರ ಚೇತವನ್ನು ಜಾಗೃತಗೊಳಿಸಿ, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ಅವರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯನ್ನು ಕುದುರಿಸಿ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು.

ವಿಶ್ವ ಪರ್ಯಟನೆ

ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.

ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. 1893ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.

ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ.

ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.

ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕೃತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.

ಸ್ವದೇಶ ಮಂತ್ರ

ಹೋ ಜಂಬೂದ್ವೀಪದ ಮೂಲ ನಿವಾಸಿಗಳೇ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ! ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು.

ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.

ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‌ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು.

ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.

ಚಿಕಾಗೋದಲ್ಲಿ ಒಬ್ಬ ಕ್ರಿಶ್ಚನ್ನ ಯುವಕರು ತಮ್ಮಗ್ರಂಥವನ್ನು ಭಗವದ್ಗೀತೆಯ ಕೆಳಗಿಟ್ಟು‌ ತಮ್ಮ‌ಧರ್ಮ ಶ್ರೇಷ್ಠ ಎಂಬ ಮಂಡುವಾದ ಮಾಡಿದರು. ಆ ಪುಸ್ತಕ ಸರಿಸಿದ ವಿವೇಕಾನಂದರು ಕೆಳಗಿದ್ದ ಪುಸ್ತಕ ವನ್ನು ಕುರಿತು ಎಲ್ಲಾಧರ್ಮಗಳಿಗಿಂತ ಮೂಲ ಧರ್ಮ‌ ನಮ್ಮಧರ್ಮ.ಎಲ್ಲಾ ಧರ್ಮವು ಒಂದೇ ಎಂದು ಹೇಳಿದರು.

 

ಸಹೋದರ-ಸಹೋದರಿಯರೇ ಎನ್ನುತ್ತಲೇ ನಮ್ಮ ತನ್ನೆಡೆಗೆ ಸೆಳೆಸಿಕೊಂಡು ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು 1893 ರಲ್ಲಿ ಚಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.

‘ವಿಶ್ವದ ಧರ್ಮಗಳ ಸಂಸತ್ತು’ ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, “ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ” ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು.

ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು”ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ”) ನಂತರ “ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!” ಎಂದು ಸಂಬೋಧಿಸಿ ಮಾತು ಆರಂಭಿಸಿದರು.

ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ ‘ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ’ ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!” (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು.

‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.

ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ “ಆತ್ಮನೋ ಮೋಕ್ಷಾರ್ಥಂ ಜಗದ್ ಹಿತಾಯ ಚ” (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
‘ಸ್ವಾಮಿ ವಿವೇಕಾನಂದ’ರು ದಿವಂಗತರಾದಾಗ ಕೇವಲ 39ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-“ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು”.

ಹೀಗೆ ಸ್ವಾಮೀಜಿ ಬಗ್ಗೆ ಬರೆಯುತ್ತಲೋದರೆ ಕೊನೆಯಿಲ್ಲವೇನೋ ಅನ್ನಿಸಿಬಿಡಬಹುದು ವಾ,,,ವ್ ಒಬ್ಬ ಮನುಷ್ಯ ಇಷ್ಟೇಲ್ಲಾ ಸಾಧನೆ ಮಾಡಲಿಕ್ಕೆ ಸಾಧ್ಯವ?ಎಂಬ ಪ್ರಶ್ನೆ ಮೂಡಿತ್ತಾದರು ಯುವಜನತೆಗೆ ಬಹು ಹತ್ತಿರದವರಾಗಬೇಕಾದರೆ ಇಂತಹ ವಿಶೇಷ ಚಿಂತನೆ, ‌ಹಾಗೂ ರಾಷ್ಟ್ರ ಜಾಗೃತಿಯನ್ನು ಚೇತನಗೊಳ್ಳಿಸಿಕೊಳ್ಳುತ್ತಾ ಮಹಾತ್ಮರನ್ನು ಆದರ್ಶನೀಯವಾಗಿ ಸ್ವೀಕರಿಸಬೇಕು ಆಗ ನವಭಾರತ ನಿರ್ಮಾಣ,ಭವ್ಯಭಾರತದ ಸಂಸ್ಕೃತಿಗಳು ಅಜರಾಮರವಾಗಲು ‌ಸಾಧ್ಯ.

ಕಾರ್ತಿಕ ಆಚಾರ್ಯ.ಕೆ
ಅರೆ ವೈದ್ಯಕೀಯ ವಿದ್ಯಾರ್ಥಿ
ಎಂ.ಕಲ್ಲಹಳ್ಳಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending