ದಿನದ ಸುದ್ದಿ
ಯಶಸ್ವಿಯಾಗದ 22 ಕೆರೆಗಳ ಏತ ನೀರಾವರಿಯ ಯೋಜನೆ : ತರಳಬಾಳು ಶ್ರೀ ಬೇಸರ
ಸುದ್ದಿದಿನ,ಹರಿಹರ : 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯು ಹಲವು ಲೋಪದೋಷಗಳಿಂದಾಗಿ ಪರಿಣಾಮಕಾರಿಯಾಗಿ ಯಶಸ್ವಿಯಾಗದೇ ಇರುವುದು ಅತ್ಯಂತ ಬೇಸರ ತಂದಿದೆ ಎಂದು ತರಳಬಾಳು ಜಗದ್ಗುರು ಡಾ .ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.
ಹರಿಹರ ನಗರದ ಹೊರವಲಯದಲ್ಲಿರುವ ಜಾಕ್ ವೆಲ್ ಬಳಿ ಯೋಜನೆಯ ಕಾಮಗಾರಿ ಪರಿಶೀಲಿಸಿ ಶ್ರೀಗಳು ಮಾತನಾಡಿದರು.ಪ್ರಾಕೃತಿಕ, ತಾಂತ್ರಿಕ ಹಾಗೂ ಮನುಷ್ಯರ ಸಮಸ್ಯೆಗಳು ಒಟ್ಟಾಗಿ ಸೇರಿಕೊಂಡು 22 ಕೆರೆಗಳ ಏತ ನೀರಾವರಿಯ ಯೋಜನೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಬೇಸರ ಹೊರಹಾಕಿದರು.
ನದಿಯಲ್ಲಿ ನೀರಿದ್ದರು ಜಾಕ್ ವೆಲ್ ಮೂಲಕ ನೀರು ಬರುತ್ತಿಲ್ಲ. ಕಳೆದ ಬಾರಿ ಮೂರು ಮೋಟರ್ ಅಳವಡಿಸಿದ್ದರಿಂದ ನೀರು ತಕ್ಕಮಟ್ಟಿಗೆ ನೀರು ಕೆರೆಗಳಿಗೆ ಹರಿದಿದೆ. ಆದರೆ ಇದು ಶಾಶ್ವತ ಪರಿಹಾರದ ಕೆಲಸ ಅಲ್ಲ.
ಶಾಶ್ವತ ಪರಿಹಾರ ದೊರಕಬೇಕಾದರೆ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.
ತಾಂತ್ರಿಕ ತೊಂದರೆ ಸರಿಯಾದಗ ನದಿಯಲ್ಲಿ ನೀರಿನ ಕೊರತೆ ಕಂಡು ಬರುತ್ತದೆ.ಆದ್ದರಿಂದ ಈ ಸ್ಥಳದಲ್ಲಿ ಕೆರೆ ನಿರ್ಮಾಣ ಮಾಡಿದರೆ ಸ್ವತಂತ್ರವಾಗಿ ನೀರು ಎರಡನೇ ಜಾಕ್ ವೆಲ್ ನಲ್ಲಿ ಇರುವಂತಹ ಮೋಟರ್ ಸರಿಯಾಗಿ ಕೆಲಸ ಮಾಡುತ್ತದೆಯೋ , ಇಲ್ಲವೋ ಎಂದು ತಿಳಿಯುತ್ತದೆ. ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದಾಗ ತಾಂತ್ರಿಕ ತೊಂದರೆ ಇದೆ ಎಂಬುದು ಗೊತ್ತಾಗಿದೆ ಎಂದರು. ಈ ಯೋಜನೆಗೆ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣನವರು 1 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಗುಂಗೆಯವರು ಸುಮಾರು 4 ರಿಂದ 5 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಬಹುದು. ಅದನ್ನು ಅವರೇ ಮಾಡಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು .
ಜಗಳೂರು ತಾಲ್ಲೂಕಿನ 53 ಹಾಗೂ ಭರಮಸಾಗರ ಸುತ್ತಮುತ್ತಲಿನ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು, ತದ ನಂತರ ಈಗಿನ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು
ಸ್ಪಂದಿಸುವುದಾಗಿ ಹೇಳಿದ್ದಾರೆಂದರು.ಸಂಸದರಾದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಮಳೆಗಾಲದಲ್ಲಿ 120 ಟಿ ಎಂ ಸಿ ನೀರು
ತುಂಗಭದ್ರಾ ನದಿಯ ಮೂಲಕ ಸಮುದ್ರ ಪಾಲಾಗಿದೆ. ನಮ್ಮ ಈ ಏತ ನೀರಾವರಿ ಯೋಜನೆಗೆ ಬೇಕಾಗಿರುವುದು 1 ಟಿ ಎಂ ಸಿ ನೀರು ಮಾತ್ರ. ಸಾಕಷ್ಟು ನೀರು ಪೋಲಾಗಿರುವುದು ನೋವು ತಂದಿದೆ ಎಂದರು. ಶ್ರೀಗಳು ಏತ ನೀರಾವರಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಅತ್ಯಂತ ಕಾಳಜಿ ಹೊಂದಿದ್ದಾರೆ. ಶ್ರೀಗಳ ಆಶಯದಂತೆ ಜಗಳೂರು ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 330 ಕೋಟಿ ಹಾಗೂ ಭರಮಸಾಗರ ಮತ್ತು ಚಿತ್ರದುರ್ಗ ಎಲ್ಲಾ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗೆ 600 ಕೋಟಿ ರೂ ಅನುದಾನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಸಮಗ್ರ ವರದಿ ತಯಾರಾಗಿದ್ದು ,ಶ್ರೀಗಳ ಸೂಚನೆಯ ಮೇರೆಗೆ ಈ ಯೋಜನೆಯಡಿ ಕೆಲವು ಸಣ್ಣ ಪುಟ್ಟ ಮಾರ್ಪಾಡುಗಳು ಆಗಬೇಕಿದೆ ಎಂದು ಹೇಳಿದರು.
ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜೆ ಮಲ್ಲಿಕಾರ್ಜುನ್ ಗುಂಗೆ ಮಾತನಾಡಿ ಈ ಯೋಜನೆಯಲ್ಲಿ ವೆಲ್ಡಿಂಗ್ ಮತ್ತು ವಿದ್ಯುತ್ ವ್ಯತ್ಯಯದಿಂದ
ಲೋಪದೋಷಗಳು ಹುಟ್ಟಿಕೊಂಡಿವೆ.ಇದಕ್ಕೆ ಸ್ಥಳದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಿ,ನೀರು ಸರಾಗವಾಗಿ ಜಾಕ್ ವೆಲ್ ಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.
ಇದಕ್ಕೆ ಬೇಕಾಗುವ 4 ರಿಂದ 5 ಕೋಟಿ ಹಣವನ್ನು ಬಳಕೆ ಮಾಡಲು ಯಾವುದೇ ತೊಂದರೆ ಬರುವುದಿಲ್ಲ.ಆದರೆ ಟೆಂಡರ್ ಹಂತ ಮಾತ್ರ ನಮ್ಮ ವ್ಯಾಪ್ತಿಗೆ ವ್ಯಾಪ್ತಿಗೆ ಬರುತ್ತದೆ.ಆದರೆ ಹಣ ಬಿಡುಗಡೆ ಮಾಡಲಿಕ್ಕೆ ಸಿ ಎಂ ಬಳಿ ಚರ್ಚೆ ಮಾಡಿ ಶೀಘ್ರವೇ ಕೆಲಸ ಮಾಡಿಸಿಕೊಡುವುದಾಗಾ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರ ,ಪ್ರೊ.ಲಿಂಗಣ್ಣ, ಮುಖ್ಯ ಎಂಜಿನಿಯರ್ ಯತೀಶ್ ಚಂದ್ರನ್, ಅಧೀಕ್ಷಕ ಎಂಜಿನಿಯರ್ ದಿವಾಕರ್ ನಾಯಕ್,ಕಾರ್ಯಪಾಲಕ ಎಂಜಿನಿಯರ್ ಜಿ.ಆರ್ ಕೊಟ್ರೇಶ್ ,ಗಂಗಪ್ಪ,ವಿಕಾಸ್ ನಿಂಬಣ್ಣ,ನಾಗರಾಜಪ್ಪ ಕರೆ ನೀರಾವರಿ ಯೋಜನೆಯ ಅಧ್ಯಕ್ಷರಾದ ಡಾ.ಮಂಜುನಾಥ್ ಗೌಡ,ಸುಭಾಷ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


