Connect with us

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending