Connect with us

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

Published

on

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು, ಗ್ರಾಮದ ಮುಖಂಡರೊಂದಿಗೆ ಐಮಂಗಲ ಸಮೀಪದ ಹರಳಯ್ಯ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿಕ ಮಠಕ್ಕೆ ಶ್ರೀಗಳು ಬಂದಿದ್ದಾರೆಂದು ಭಾವಿಸಿ ಧೈರ್ಯ ಹೇಳಲು ಬಂದಿದ್ದೇನೆ. ಆದರೆ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದು ಅವರ ಆರೋಗ್ಯ ಸ್ಥಿತಿ ಕುರಿತು ಕಳವಳ ವ್ಯಕ್ತವಾಗಿದೆ ಎಂದರು.

ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರು ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳಿಗೆ ಧಾರ್ಮಿಕ ಸ್ಥಾನ ನೀಡಲು ಹಲವರಿಗೆ ದೀಕ್ಷೆ ನೀಡಿ, ಜಮೀನು ಸೇರಿ ಅಗತ್ಯ
ಸಹಕಾರ ನೀಡಿದ್ದು ಸ್ಮರಣೀಯ. ಆ ಸಂದರ್ಭದಲ್ಲಿ ಹರಳಯ್ಯ ಮಠ ಸ್ಥಾಪನೆಗಾಗಿ ಜಮೀನು ಖರೀದಿಸಲು ಹಣ ಕೊಟ್ಟಿದ್ದರು. ಆ ಹಣದಲ್ಲಿ ಭೂಮಿ ಖರೀದಿಸಿ ಮಠ, ಶಾಲೆ ನಿರ್ಮಿಸಲು ಬಸವ ಹರಳಯ್ಯ ಸ್ವಾಮೀಜಿ ಶ್ರಮಿಸಿ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ಮಠ-ಮಾನ್ಯಗಳು ಮಾಡಬೇಕಾದ ಕಾರ್ಯವನ್ನು ಅತ್ಯಂತ ಶ್ರದ್ಧೆ, ಸವಾಲುಗಳ ಮಧ್ಯೆ,‌ ಹಗಲು-ರಾತ್ರಿ ಶ್ರಮಪಟ್ಟು ಹರಳಯ್ಯ ಸ್ವಾಮೀಜಿ ಮಾಡಿದ್ದಾರೆ. ಸಮಾಜ ಕಲ್ಯಾಣ
ಸಚಿವನಾಗಿದ್ದ ವೇಳೆ 1 ಕೋಟಿ ರೂ. ಅನುದಾನ ಕೊಡಿದ್ದೇ. ಬಳಿಕ ಅಸ್ಥಿತ್ವಕ್ಕೆ ಬಂದ ಸರ್ಕಾರ ಹಾಗೂ ಭಕ್ತರು, ಜನರಿಗೆ ದೇಣಿಗೆ ಸಂಗ್ರಹಿಸಿ ಭವ್ಯವಾದ ಮಠ ನಿರ್ಮಿಸಿದ್ದಾರೆ.
ಸುತ್ತಮುತ್ತಲ ಬಡ ಮಕ್ಕಳಿಗಾಗಿ ಶಾಲೆ, ಸತ್ ಚಿಂತನೆ ಮೂಡಿಸಲು ಧಾರ್ಮಿಕ ಕಾರ್ಯಕ್ಕಾಗಿ ಸಭಾಂಗಣ ನಿರ್ಮಿಸಿದ್ದಾರೆ ಎಂದರು.

ಈ ಸಂದರ್ಭ ತಗ್ಗುಗುಂಡಿ ಆಗಿದ್ದ ಅನುಪಯುಕ್ತ ಎರಡು ಗುಂಟೆ ಜಮೀನು ಗೊಂದಲದಿಂದ ಒತ್ತುವರಿ ಆಗಿದೆ. ಈ ವಿಷಯಕ್ಕಾಗಿ ಹಲವು ಬಾರಿ ವ್ಯಕ್ತಿಯೊರ್ವ ಗಲಾಟೆ ಮಾಡಿದ್ದಾನೆ. ಗೊತ್ತಿಲ್ಲದೆ ಎರಡು ಗುಂಟೆ ಜಾಗ ಒತ್ತುವರಿ ಆಗಿದ್ದು, ತಪ್ಪು ನನ್ನಿಂದಲೇ ಆಗಿದೆಯೆಂದು ಶ್ರೀಗಳು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಜಾಗಕ್ಕೆ ಈಗಿನ ಮಾರುಕಟ್ಟೆ ಮೌಲ್ಯದಷ್ಟು ಹಣ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ವ್ಯಕ್ತಿ ನಿರಾಕರಿಸಿದಾಗ ಒತ್ತುವರಿ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡನ್ನು ಸ್ವಾಮೀಜಿ ಕೆಡವಿಸಿದ್ದಾರೆ. ಆದರೂ ಆ ವ್ಯಕ್ತಿ ದ್ವೇಷ ಮುಂದುವರಿಸಿದ್ದು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ
ಮಾರಾಣಾಂತಿಕ ಹಲ್ಲೆ ನಡೆಸಿದ್ದು, ದೂರು ಕೊಡಲು ಠಾಣೆಗೆ ತೆರಳಿರುವ ವಿಷಯ ತಿಳಿದು ಅಲ್ಲಿಗೆ ತೆರಳಿ ಕಾಲಿನಿಂದ ಸ್ವಾಮೀಜಿ ಎದೆಗೆ ಒದ್ದಿದ್ದಾನೆ ಎಂದರು.

ಧಾರ್ಮಿಕ ನೇತಾರರನ್ನು ಗೌರವಿಸುವ ನಾಡು ಭಾರತ. ಇಂತಹ ಸಂದರ್ಭ ಖಾವಿಧಾರಿಯೊಬ್ಬರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ, ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿರುವುದು ಎಚ್ಚರಿಕೆ
ಗಂಟೆಯಾಗಿದೆ. ಈ ದುಷ್ಕೃತ್ಯವನ್ನು ನಾಡಿನ ಎಲ್ಲ ಮಠಾಧೀಶರು ಖಂಡಿಸಬೇಕು, ಸ್ವಾಮೀಜಿಗೆ ನೈತಿಕವಾಗಿ ಬೆಂಬಲಿಸಬೇಕು. ಇಲ್ಲದಿದ್ದರೇ ಇಂತಹ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲ್ಲೆ ನಡೆಸಿದ ಮೂವರನ್ನು ಮಟ್ಟಹಾಕುವ ಶಕ್ತಿ ನಮ್ಮಲ್ಲೂ ಇದೆ. ಆದರೆ, ನಾವು ವಾಮಮಾರ್ಗದಲ್ಲಿ ಸಾಗುವವರಲ್ಲ, ಕಾನೂನು ಪರಿಪಾಲಕರು. ನಮ್ಮ ಹಕ್ಕೋತ್ತಾಯ ಬಸವ
ತತ್ವದಡಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆ ಭೀತಿ ಹುಟ್ಟಿಸುವಂತದ್ದಾಗಿದೆ. ಈ ಕುರಿತು ತಕ್ಷಣವೇ ಎಲ್ಲ ಮಠಾಧೀಶರು, ಧರ್ಮಗಳ ಪ್ರತಿಪಾದಕರು ಖಂಡಿಸಬೇಕು ಎಂದು ಕೋರಿದರು.

ಈಗ ಯಾವುದೇ ಕಾರಣಕ್ಕೂ ಸಂಧಾನ-ಚರ್ಚೆ ಅಗತ್ಯವಿಲ್ಲ. ಮಠದ ಸಾಮಾಜಿಕ ಕಾರ್ಯಕ್ಕಾಗಿ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು. ಅದಕ್ಕೆ ತಗಲುವ ವೆಚ್ಚವನ್ನು ನಾನೇ‌ ಸ್ವಂತವಾಗಿ ಭರಿಸುತ್ತೇನೆ. ತಕ್ಷಣ ಅಧಿಕಾರಿಗಳು ಈ ಸಂಬಂಧ ಕಾರ್ಯಪ್ರವೃತ್ತರಾಗಬೇಕೆಂದು ಆಂಜನೇಯ ಆಗ್ರಹಿಸಿದರಲ್ಲದೇ ಒಂದು ವೇಳೆ ಭೂಮಿ ಯಾರದ್ದಾಗಿದ್ದರೇ ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರ ನೀಡಬಹುದು. ಈ ನಿಟ್ಟಿನಲ್ಲಿ ನಾನು ತಗಲುವ ಸಂಪೂರ್ಣ ವೆಚ್ಚ ಭರಿಸುವೆ ಎಂದು ತಿಳಿಸಿದರು.

ಐಮಂಗಲ ಸುತ್ತಮುತ್ತಲ ಗ್ರಾಮಗಳ ಬಡ ಮಕ್ಕಳಿಗೆ ಶಿಕ್ಷಣ ನೀಡುವುದು, ಅನಾಥಾಲಯ ಸ್ಥಾಪನೆಯ ಸದುದ್ದೇಶ ಹೊಂದಿರುವ ಶ್ರೀಗಳ ಮೇಲೆ ಹಲ್ಲೆ ಇಡೀ ಧಾರ್ಮಿಕ ಮುಖಂಡರಿಗೆ ಮಾಡಿರುವ ಅಪಮಾನ ಮತ್ತು ಅವರಲ್ಲಿ ಭೀತಿ ಸೃಷ್ಠಿಸುವಂತದ್ದಾಗಿದೆ. ಆದ್ದರಿಂದ‌ ಮಾರಾಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ತಕ್ಷಣವೇ ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಜೊತೆಗೆ ಕಠಿಣ ಶಿಕ್ಷೆ ಆಗುವ ರೀತಿ ಕಾನೂನು ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಎಸಿ ಕಾಂತರಾಜ್, ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಹಾಗೂ ಗ್ರಾಮದ ಹಿರಿಯರು
ಉಪಸ್ಥಿತರಿದ್ದರು.

*ಪೋಟೊ ಕ್ಯಾಪ್ಷನ್* ಐಮಂಗಲದ ಹರಳಯ್ಯ ಗುರುಪೀಠಕ್ಕೆ ಶುಕ್ರವಾರ ಸಂಜೆ ಮಾಜಿ‌ಸಚಿವ ಎಚ್.ಆಂಜನೇಯ ‌ಅಧಿಕಾರಿಗಳೊಂದಿಗೆ ಭೇಟಿ‌ ನೀಡಿ‌ ಪರಿಶೀಲಿಸಿದರು.

Continue Reading

ದಿನದ ಸುದ್ದಿ

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

Published

on

ಮುಖ್ಯಾಂಶಗಳು


ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ

​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ

ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್

ಸುದ್ದಿದಿನ,​ದಾವಣಗೆರೆ: ತಾಲೂಕು ಪಂಚಾಯಿತಿಯ 2022-23ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಖರೀದಿ ವ್ಯವಹಾರದಲ್ಲಿ ನಿಯಮ ಉಲ್ಲಂಘಿಸಿ, ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪದ ಬೆನ್ನತ್ತಿರುವ ಲೋಕಾಯುಕ್ತ ಸಂಸ್ಥೆಯು ತನಿಖೆಯನ್ನು ತೀವ್ರಗೊಳಿಸಿದೆ.

​ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ಅಧಿಕಾರಿಗಳು ಜುಲೈ 7 ರಿಂದ 10 ರವರೆಗೆ ಜಿಲ್ಲೆಯಲ್ಲಿ ಬೀಡುಬಿಡಲಿದ್ದು, ಸ್ಥಳ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ.

ನಿಯಮ ಗಾಳಿಗೆ: ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ– ಕರ್ನಾಟಕ’ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೆ.ಎ. ಓಬಳೇಶ್ ಅವರು 2025ರ ಜನೆವರಿ 21ರಂದು ಲೋಕಾಯುಕ್ತಕ್ಕೆ ಈ ಕುರಿತು ಅಧಿಕೃತ ದೂರು ನೀಡಿದ್ದರು. 2022-23ನೇ ಸಾಲಿನಲ್ಲಿ ದಾವಣಗೆರೆ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಾಮಗ್ರಿಗಳನ್ನು ಖರೀದಿಸುವಾಗ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸಿಲ್ಲ. ಅಧಿಕೃತ ಮಾರಾಟಗಾರರಿಂದ ದರಪಟ್ಟಿ (ಕೊಟೇಷನ್) ಪಡೆಯದೆ, ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಸರ್ಕಾರದ ಹಣ ಪೋಲು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ತನಿಖೆ ಎದುರಿಸುತ್ತಿರುವವರು

ಶ್ರೀ ಎನ್.ಜೆ. ಆನಂದ್, ಕಾರ್ಯನಿರ್ವಾಹಕ ಅಧಿಕಾರಿ (ಇಒ), ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ನಾಗರಾಜ್ ನಾಯ್ಕ್, ಸಹಾಯಕ ಲೆಕ್ಕಾಧಿಕಾರಿ, ತಾಲೂಕು ಪಂಚಾಯಿತಿ, ದಾವಣಗೆರೆ.

​ಶ್ರೀ ಚನ್ನಪ್ಪ ಎ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ), ಜಿಲ್ಲಾ ಪಂಚಾಯತ್, ದಾವಣಗೆರೆ.

ಕಚೇರಿಯಲ್ಲಿ ತಪಾಸಣೆ

ದೂರಿನ ಅನ್ವಯ ಲೋಕಾಯುಕ್ತದ ತಾಂತ್ರಿಕ ಮತ್ತು ಲೆಕ್ಕಪತ್ರ ಶಾಖೆಯ ತನಿಖಾಧಿಕಾರಿ ಟಿ.ಸಿ. ಜಯರಾಮಯ್ಯ ಅವರು ತನಿಖಾ ವೇಳಾಪಟ್ಟಿ ಸಿದ್ಧಪಡಿಸಿದ್ದಾರೆ. ಜುಲೈ 7 ರಂದು ಬೆಳಗ್ಗೆ 11.30ಕ್ಕೆ ದಾವಣಗೆರೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತನಿಖಾ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 10 ರವರೆಗೆ ಸರಣಿ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸ್ಥಳ ತನಿಖೆಯ ಸಂದರ್ಭದಲ್ಲಿ ಖುದ್ದಾಗಿ ಹಾಜರಿದ್ದು, ಪೂರಕ ದಾಖಲೆಗಳೊಂದಿಗೆ ಸಹಕರಿಸುವಂತೆ ದೂರುದಾರರಿಗೂ ನೋಟಿಸ್ ನೀಡಲಾಗಿದೆ.

​ಜಿಲ್ಲೆಯ ಪ್ರಭಾವಿ ಅಧಿಕಾರಿಗಳೇ ಲೋಕಾಯುಕ್ತ ತನಿಖೆಯ ಬಿಸಿಗೆ ಸಿಲುಕಿರುವುದು ಆಡಳಿತ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

Published

on

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ತಿಳಿಸಿದರು.

ಅವರು ಸೋಮವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲೂ ಕೂಡ ಸಾಮೂಹಿಕವಾಗಿ ಫಾರಂ ವಿತರಣೆ ಮಾಡುತ್ತಿಲ್ಲ ಮತ್ತು ಮಾಡುವುದೂ ಇಲ್ಲ, ಕೆಲವು ಬೂತ್‌ಗಳಲ್ಲಿ ಸಾರ್ವಜನಿಕರೇ ಗುಂಪುಗೂಡಿ ಇಲ್ಲೇ ಫಾರಂ ನೀಡಿ ಎಂದು ಕೇಳಿರುವ ಉದಾಹರಣೆಗಳು ಇವೆಯೇ ಹೊರತು, ಇಲಾಖೆಯಿಂದ ಸಾಮೂಹಿಕ ವಿತರಣೆ ನಡೆದಿಲ್ಲ ಎಂದರು.

ಪ್ರತಿಯೊಬ್ಬ ಬೂತ್ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ಲಿಖಿತ ಸೂಚನೆ ಹಾಗೂ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಅವರು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ ಫಾರಂಗಳನ್ನು ವಿತರಿಸುವರು. ಭೇಟಿ ನೀಡಿದ ನಂತರ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಬೇಕೆಂದು ಆದೇಶಿಸಲಾಗಿದೆ. ಹಳ್ಳಿಗಳಲ್ಲಿ ಹಾಗೂ ಕೆಲವು ಕಡೆ ಸಾರ್ವಜನಿಕರು ತಮ್ಮ ಫಾರಂಗಳನ್ನು ಬೇಗ ಮಾಡಿಕೊಡಿ ಎಂದು ಬಿ.ಎಲ್.ಓಗಳ ಬಳಿ ಗುಂಪುಗೂಡುತ್ತಿರುವುದು ಕಂಡುಬಂದಿದೆ. ಆದರೆ, ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲು ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಪೂರ್ಣ ತಂಡವು ಬಿ.ಎಲ್.ಓ.ಗಳಿಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 40 ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ನೇರವಾಗಿ ಈ ಸಹಾಯ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಫಾರಂಗಳನ್ನು ಭರ್ತಿ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಫಾರಂಗಳನ್ನು ಕಡ್ಡಾಯವಾಗಿ ಬಿ.ಎಲ್.ಓ.ಗಳಿಗೆ ಹಸ್ತಾಂತರಿಸಬೇಕು ಎಂದರು
ರಾಷ್ಟ್ರೀಯ ಪಕ್ಷಗಳಿಂದ ನೇಮಕಗೊಂಡಿರುವ ಬಿ.ಎಲ್.ಎ (ಬೂತ್ ಮಟ್ಟದ ಏಜೆಂಟ್‌ಗಳು) ಸಾರ್ವಜನಿಕರಿಗೆ ಫಾರಂ ಭರ್ತಿ ಮಾಡಲು ಸಹಾಯ ಮಾಡಬಹುದು. ಅವರು ಮೊದಲ ಹಂತದಲ್ಲಿ ತಲಾ 50 ಫಾರಂಗಳನ್ನು ಸಂಗ್ರಹಿಸಿ, ಭರ್ತಿ ಮಾಡಿ ನಮ್ಮ ಬಿ.ಎಲ್.ಓ.ಗಳಿಗೆ ತಂದುಕೊಡಲು ಅವಕಾಶ ಕಲ್ಪಿಸಲಾಗಿದೆ. ಇದು ಗುಂಪಾಗಿ ಮಾಡುವುದಲ್ಲ, ಬದಲಿಗೆ ಮನೆ ಮನೆಗೆ ಹೋಗಿ ಬಿ.ಎಲ್.ಓಗಳ ಸಹಯೋಗದೊಂದಿಗೆ ಮಾಡುವ ಕಾರ್ಯವಾಗಿದೆ ಎಂದರು.

ಸಹಿ ಮಾಡುವ ಪ್ರಕ್ರಿಯೆಯು ಮತದಾರರದ್ದೇ ಆಗಿರುತ್ತದೆ. ಮೊಬೈಲ್ ಬಳಸಲು ಬಾರದ ಅನಕ್ಷರಸ್ಥರಿಗೆ ಅಥವಾ ತಾಂತ್ರಿಕ ತೊಂದರೆ ಇರುವವರಿಗೆ ಬಿ.ಎಲ್.ಓ ಹಾಗೂ ಬಿ.ಎಲ್.ಎ.ಗಳು ಸಹಾಯ ಮಾಡಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಅಡಿಯಲ್ಲೇ ನಮ್ಮ ಇಡೀ ತಂಡ ಕೆಲಸ ಮಾಡುತ್ತಿದೆ ಎಂದರು.

ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಶಿಫ್ಟ್ ಮಾಡಿಕೊಂಡಿರುವ ಮತದಾರರು, ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ. ಅಂತಹ ಮತದಾರರು ‘ಫಾರಂ-8’ ಅನ್ನು ಸಲ್ಲಿಸುವ ಮೂಲಕ ತಮ್ಮ ವಿಳಾಸವನ್ನು ಸುಲಭವಾಗಿ ಬದಲಾಯಿಸಿಕೊಳ್ಳಬಹುದು ಎಂದರು.

ಈಗಾಗಲೇ ಮ್ಯಾಪಿಂಗ್ ಆಗಿರುವ ಮತದಾರರು ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ. ಒಂದು ವೇಳೆ ತಪ್ಪಾಗಿ ಮ್ಯಾಪಿಂಗ್ ಆಗಿದ್ದರೆ ಅಥವಾ ತಂದೆ-ತಾಯಿಯ ಹೆಸರುಗಳಲ್ಲಿ ತಪ್ಪುಗಳಾಗಿದ್ದರೆ, 2002ರ ಹಳೆಯ ವೋಟರ್ ಐಡಿ ವಿವರಗಳ ಆಧಾರದ ಮೇಲೆ ಬಿ.ಎಲ್.ಓ ಮೊಬೈಲ್ ಆಪ್ (BLO Mobile App) ಮೂಲಕ ತಿದ್ದುಪಡಿ ಹಾಗೂ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

18 ವರ್ಷ ತುಂಬಿರುವ ಅರ್ಹ ಯುವ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದ ಫಾರಂಗಳನ್ನು ಪಡೆದು ಭರ್ತಿ ಮಾಡಬಹುದಾಗಿದೆ. ಇದಕ್ಕಾಗಿ ಸಾರ್ವಜನಿಕರು ಯಾರೂ ಮತಗಟ್ಟೆಗಳನ್ನಾಗಲಿ ಅಥವಾ ಬಿ.ಎಲ್.ಓಗಳನ್ನಾಗಲಿ ಹುಡುಕಿಕೊಂಡು ಹೋಗುವ ಅಗತ್ಯವಿಲ್ಲ, ನಾವೇ ನಿಮ್ಮ ಮನೆ ಬಾಗಿಲಿಗೆ ಬರುತ್ತೇವೆ ಎಂದು ತಿಳಿಸಿದರು.

ಅನಾಥಾಶ್ರಮಗಳಲ್ಲಿರುವ ಹಾಗೂ ತಂದೆ-ತಾಯಿಯರ ಮಾಹಿತಿ ಇಲ್ಲದವರಿಗೂ ಸಹ ಮತದಾನದ ಹಕ್ಕನ್ನು ಕಲ್ಪಿಸಲು ಚುನಾವಣಾ ಆಯೋಗವು ವಿಶೇಷ ಕ್ರಮ ಕೈಗೊಂಡಿದೆ. ಸರ್ಕಾರಿ ಅನಾಥಾಶ್ರಮವೊಂದರಲ್ಲಿರುವ 43 ಯುವಕರು 2025ನೇ ಇಸವಿಯಲ್ಲೂ ಮತದಾರರ ಪಟ್ಟಿಯಲ್ಲಿದ್ದಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರವೇ ಅವರಿಗೆ ಪೋಷಕರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೆ ಅವರ ಅಧಿಕೃತ ಪೋಷಕರಾಗಿರುತ್ತಾರೆ ಎಂದರು.

ದೇವದಾಸಿಯರಂತಹ ಪ್ರಕರಣಗಳಲ್ಲಿ ತಂದೆಯ ವಿವರಗಳು ಲಭ್ಯವಿಲ್ಲದಿದ್ದರೆ, ತಾಯಿಯ ವಿವರಗಳನ್ನು ನೀಡಿ ಹೆಸರು ನಮೂದಿಸಲು ಅವಕಾಶವಿದೆ. ಇನ್ನು ಕೆಲವು ಸಂದರ್ಭಗಳಲ್ಲಿ ತಂದೆ-ತಾಯಿ ಇಬ್ಬರೂ ಇಲ್ಲದಿದ್ದರೆ, ಅಂತವರು ತಮ್ಮ ಅಜ್ಜ ಅಥವಾ ಅಜ್ಜಿಯ ಹೆಸರನ್ನು ಸಂಬಂಧದ ಕಾಲಂನಲ್ಲಿ ನಮೂದಿಸಿ ಗುರುತಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಇಂತಹ ಎಲ್ಲಾ ಸವಾಲುಗಳಿಗೂ ಕಾನೂನಾತ್ಮಕವಾಗಿ ಹಾಗೂ ecinet ಮೊಬೈಲ್ ಆಪ್ ಮತ್ತು https://voters.eci.gov.in ಮೂಲಕ ಸೂಕ್ತ ಪರಿಹಾರವನ್ನು ಕಲ್ಪಿಸಿದೆ. ಹೀಗಾಗಿ ಯಾವುದೇ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಬಿ.ಎ.ಲ್.ಓ ಗಳು ಮನೆಗೆ ಬಂದಾಗ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಾಗ ಸಾರ್ವಜನಿಕರು ಸ್ಪಂದಿಸಿ, ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಫಾರಂ ಹಂಚಿಕೆಯಲ್ಲಿ ರಾಜ್ಯದಲ್ಲೇ ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ; ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಪ್ರಗತಿಯಲ್ಲಿದ್ದು, ಜಿಲ್ಲಾದ್ಯಂತ ಒಟ್ಟಾರೆ ಶೇ. 94 ರಷ್ಟು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಫಾರಂಗಳನ್ನು ಹಂಚಿಕೆ ಮಾಡುವ ಮೂಲಕ ದಾವಣಗೆರೆ ಜಿಲ್ಲೆಯು ರಾಜ್ಯದಲ್ಲಿಯೇ 2ನೇ ಸ್ಥಾನ ಪಡೆದು ಅಭೂತಪೂರ್ವ ಸಾಧನೆ ಮಾಡಿದೆ. ಇದೇ ವೇಳೆ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 99.81 ರಷ್ಟು ದಾಖಲೆ ಪ್ರಮಾಣದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ಅತ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಲಾಗಿದ್ದು, ಇಡೀ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಹಾಗೂ ಶೇ. 10.8 ರಷ್ಟು ಗಣಕೀಕರಣವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ ಪ್ರಗತಿಯಲ್ಲಿ

ದಾವಣಗೆರೆ ಜಿಲ್ಲೆಯಲ್ಲಿ ಜೂನ್‌ 16 ರ ವೇಳೆಗೆ ಒಟ್ಟು 14,99,282 ಮತದಾರರಿದ್ದು, ಇವರಿಗೆ ಸಂಬಂಧಿಸಿದ ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಮುದ್ರಿಸಿ ಬಿಎಲ್‌ಓಗಳಿಗೆ ವಿತರಿಸಲಾಗಿದೆ. ಜಿಲ್ಲಾದ್ಯಂತ ಜೂನ್‌ 06 ರಿಂದ ಜುಲೈ 29 ರ ಅವಧಿಯಲ್ಲಿ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಇದೇ ಅವಧಿಯಲ್ಲಿ ಸಂಗ್ರಹಿಸಿದ ನಮೂನೆಗಳ ಗಣಕೀಕರಣ ಕಾರ್ಯವೂ ಪ್ರಗತಿಯಲ್ಲಿದೆ.

ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮತ್ತು ಪ್ರಗತಿ ವಿವರ

ಜಿಲ್ಲೆಯ ಒಟ್ಟು 14,99,282 ಮತದಾರರ ಪೈಕಿ ಬಿಎಲ್‌ಓಗಳು ಇದುವರೆಗೆ ಒಟ್ಟು 14,06,472 ಎನ್ಯುಮರೇಷನ್ ನಮೂನೆಗಳನ್ನು ವಿತರಿಸಿದ್ದು, 1,54,504 ನಮೂನೆಗಳನ್ನು ಗಣಕೀಕರಿಸಿದ್ದಾರೆ.

103-ಜಗಳೂರು: ಒಟ್ಟು 2,00,836 ಮತದಾರರಿದ್ದು, 1,88,446 ನಮೂನೆಗಳನ್ನು ವಿತರಿಸಲಾಗಿದ್ದು, 18,003 ನಮೂನೆಗಳನ್ನು ಗಣಕೀಕರಿಸಲಾಗಿದೆ. 105-ಹರಿಹರ: ಒಟ್ಟು 2,11,023 ಮತದಾರರಿದ್ದು, 2,06,550 ನಮೂನೆಗಳನ್ನು ವಿತರಿಸಲಾಗಿದ್ದು, 32,630 ನಮೂನೆಗಳನ್ನು ಗಣಕೀಕರಿಸಲಾಗಿದೆ. 106-ದಾವಣಗೆರೆ ಉತ್ತರ: ಒಟ್ಟು 2,58,718 ಮತದಾರರಿದ್ದು, 2,44,948 ನಮೂನೆಗಳನ್ನು ವಿತರಿಸಲಾಗಿದ್ದು, 7,120 ನಮೂನೆಗಳನ್ನು ಗಣಕೀಕರಿಸಲಾಗಿದೆ. 107-ದಾವಣಗೆರೆ ದಕ್ಷಿಣ : ಒಟ್ಟು 2,27,996 ಮತದಾರರಿದ್ದು, 194,785 ನಮೂನೆಗಳನ್ನು ವಿತರಿಸಲಾಗಿದ್ದು, 5,085 ನಮೂನೆಗಳನ್ನು ಗಣಕೀಕರಿಸಲಾಗಿದೆ. 108-ಮಾಯಕೊಂಡ: ಒಟ್ಟು 197,048 ಮತದಾರರಿದ್ದು, 196,486 ನಮೂನೆಗಳನ್ನು ವಿತರಿಸಲಾಗಿದ್ದು, 42,785 ನಮೂನೆಗಳನ್ನು ಗಣಕೀಕರಿಸಲಾಗಿದೆ. 109-ಚನ್ನಗಿರಿ ಒಟ್ಟು 2,03,628 ಮತದಾರರಿದ್ದು, 192,838 ನಮೂನೆಗಳನ್ನು ವಿತರಿಸಲಾಗಿದ್ದು, 36,531 ನಮೂನೆಗಳನ್ನು ಗಣಕೀಕರಿಸಲಾಗಿದೆ. 110- ಹೊನ್ನಾಳಿ ಒಟ್ಟು 2,00,033 ಮತದಾರರಿದ್ದು, 182,419 ನಮೂನೆಗಳನ್ನು ವಿತರಿಸಲಾಗಿದ್ದು, 12,350 ನಮೂನೆಗಳನ್ನು ಗಣಕೀಕರಿಸಲಾಗಿದೆ.

ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಮತದಾರರ ಗುರುತಿಸುವಿಕೆ ಪ್ರಗತಿ

ಜೂನ್‌ 6 ರಿಂದ ಜಿಲ್ಲೆಯಲ್ಲಿ ಮತದಾರರ ಎನ್ಯುಮರೇಷನ್ ಫಾರ್ಮ್ಸ್ ಹಂಚಿಕೆ ಹಾಗೂ ಮಾಹಿತಿ ಸಂಗ್ರಹಣೆಯ ವೇಳೆ ಒಟ್ಟು 1,707 ವಿವಿಧ ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಒಟ್ಟು 30 ನಮೂನೆಗಳು ಸಂಗ್ರಹವಾಗದ/ಗೈರು ಹಾಜರಿ ಪ್ರಕರಣಗಳಾಗಿದ್ದು, 641 ಶಾಶ್ವತ ವಲಸೆ, 751 ಮರಣ ಹಾಗೂ 271 ದ್ವಿಪ್ರತಿ (Duplicate) ಪ್ರಕರಣಗಳಾಗಿವೆ.
ಜಗಳೂರು ಕ್ಷೇತ್ರದಲ್ಲಿ 122 ಪ್ರಕರಣಗಳನ್ನು ಗುರುತಿಸಲಾಗಿದ್ದು (2 ಗೈರು, 31 ಶಾಶ್ವತ ವಲಸೆ, 47 ಮರಣ, 40 ದ್ವಿಪ್ರತಿ, 2 ಇತರೆ), ಹರಿಹರ ಕ್ಷೇತ್ರದಲ್ಲಿ 149 ಪ್ರಕರಣಗಳು (2 ಗೈರು, 48 ಶಾಶ್ವತ ವಲಸೆ, 71 ಮರಣ, 26 ದ್ವಿಪ್ರತಿ, 2 ಇತರೆ), ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 246 ಪ್ರಕರಣಗಳು (5 ಗೈರು, 98 ಶಾಶ್ವತ ವಲಸೆ, 112 ಮರಣ, 31 ದ್ವಿಪ್ರತಿ), ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 235 ಪ್ರಕರಣಗಳು (6 ಗೈರು, 123 ಶಾಶ್ವತ ವಲಸೆ, 60 ಮರಣ, 44 ದ್ವಿಪ್ರತಿ, 2 ಇತರೆ), ಮಾಯಕೊಂಡ ಕ್ಷೇತ್ರದಲ್ಲಿ 337 ಪ್ರಕರಣಗಳು (4 ಗೈರು, 113 ಶಾಶ್ವತ ವಲಸೆ, 174 ಮರಣ, 45 ದ್ವಿಪ್ರತಿ,1 ಇತರೆ), ಚನ್ನಗಿರಿ ಕ್ಷೇತ್ರದಲ್ಲಿ 386 ಪ್ರಕರಣಗಳು (10 ಗೈರು, 139 ಶಾಶ್ವತ ವಲಸೆ, 167 ಮರಣ, 63 ದ್ವಿಪ್ರತಿ, 7 ಇತರೆ) ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 232 ಪ್ರಕರಣಗಳ (1 ಗೈರು, 89 ಶಾಶ್ವತ ವಲಸೆ, 120 ಮರಣ, 22 ದ್ವಿಪ್ರತಿ) ಗುರುತಿಸಿದೆ ಎಂದು ತಿಳಿಸಿದರು.

ಪತ್ರಿಕಾ ಗೋಷ್ಠಿಗೂ ಮುನ್ನ ವಿವಿಧ ರಾಷ್ಟ್ರೀಯ ಪಕ್ಷಗಳೊಂದಿಗೆ ಸಭೆ ನಡೆಸಿದ್ದು, ರಾಷ್ಟ್ರೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಬಿ.ಎಲ್.ಎ ಗಳನ್ನು ನೇಮಕ ಮಾಡಿದ್ದು ಎನ್ಯುಮರೇಷನ್ ಫಾರ್ಮ್‌ಗಳನ್ನು (Enumeration Forms) ಪಾರಂಗಳನ್ನು ನಮೂದಿಸಿ ಬಿ.ಎಲ್.ಓ ಗಳಿಗೆ ನೀಡಲು ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾರ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಸಹಕಾರ ನೀಡುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ಕಾರ್ಯದರ್ಶಿ ಮಮತ ಹಸ ಗೌಡರ್‌, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಪಾಲಿಕೆ ಆಯುಕ್ತ ಮಹಾಂತೇಶ್‌ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending