ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




