ದಿನದ ಸುದ್ದಿ
ಐಟಿ ಹಬ್ ಕನಸು ನನಸಾಗಲಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜನರ ಸಾಫ್ಟ್ ವೇರ್ ಪಾರ್ಕ್ ಕನಸು ಕೆಲವೇ ದಿನಗಳಲ್ಲಿ ನನಸಾಗಲಿದೆ. ದಾವಣಗರೆಯಲ್ಲಿ ಇಂಜನಿಯರಿಂಗ್ ಮಾಡಿದವರು ಉದ್ಯೋಗಕ್ಕಾಗಿ ಬೆಂಗಳೂರು ಅಥವಾ ನೆರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳ ಅವಲಂಭನೆ ಇಲ್ಲದೆ ಜಿಲ್ಲೆಯಲ್ಲಿಯೇ ದುಡಿಯುವ ದಿನಗಳು ಸಮೀಪಿಸುತ್ತಿವೆ ಎಂದು ಸಂಸದರಾದ ಡಾ: ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಸಾಫ್ಟ್ವೇರ್ ಟೆಕ್ನಾಲಜಿ ಆಫ್ ಇಂಡಿಯಾ ಬೆಂಗಳೂರು, ವಿಷನ್ ದಾವಣಗೆರೆ ಹಾಗೂ ದಾವಣಗೆರೆಯ ಐಟಿಬಿಟಿ ಸಂಸ್ಥೆಗಳ ಸಂಯುಕ್ತಾಶಯದಲ್ಲಿ ಬಿಐಟಿ ಇಂಜಿನಿಯರಿಂಗ್ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೆಂಟರ್ ಆಫ್ ಎಕ್ಸಲೆನ್ಸ್ ಮೂಲಕ ನಾವೀನ್ಯತೆಗೆ ಅವರು ಚಾಲನೆ ನೀಡಲು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಮತ್ತು ದಾವಣಗೆರೆಯ ಐಟಿಬಿಟಿ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಮೇರು ಪತದಲ್ಲಿಡಲು ವಿನ್ಯಾಸಗೊಳ್ಳಲಾಗಿತ್ತಿದೆ. ಜಿಲ್ಲೆಯಲ್ಲಿ ಐಟಿ ಪಾರ್ಕ್ ಮಾಡಲು ಪೂರಕ ವಾತಾವರಣವಿದೆ. ಅದನ್ನು ನಾವೆಲ್ಲಾ ಸರಿಯಾದ ರೀತಿ ಬಳಕೆ ಮಾಡಿಕೊಳ್ಳಬೇಕು. ಟೈಯರ್ 2 ಅಥವಾ 3 ಜಿಲ್ಲೆಗಳಲ್ಲಿ ಐಟಿ ಹಬ್ ಸ್ಥಾಪಿಸಿದಲ್ಲಿ ಜಿಲ್ಲೆಯು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಸಾಫ್ಟ್ವೇರ್ ಪಾರ್ಕ್ ಜೊತೆಗೆ 25 ರಿಂದ 30 ಎಕರೆ ವಿಸ್ತೀರ್ಣದಲ್ಲಿ ಅತೀ ಶೀಘ್ರದಲ್ಲಿಯೇ ಡಾಟಾ ಸೆಂಟರ್ ಸ್ಥಾಪಿಸಲಾಗುವುದು ಎಂದರು.
ಲೋಕಸಭಾ ಚುನಾವಣಾ ಸಮಯದಲ್ಲಿ ಚುನಾವಣಾ ಪ್ರಚಾರಕ್ಕೆ ಹೋದಾಗ ಮತದಾರರು ನಮ್ಮ ಮಕ್ಕಳು ಬೇರೆ ಊರುಗಳಲ್ಲಿ ಉದ್ಯೋಗ ಮಾಡುತ್ತಿದ್ದು ಇಲ್ಲಿ ಐಟಿ ಪಾರ್ಕ್ ಮಾಡುವಂತೆ ಒತ್ತಾಯಿಸಿದ್ದರು. ಅದರ ಫಲವೇ ಇಂದು ದಾವಣಗೆರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೊಳ್ಳುತ್ತಿದೆ. ಲೋಕಸಭೆಯ ಪ್ರಶ್ನಾವಳಿ ಸಂದರ್ಭದಲ್ಲಿ ನಾನು ದಾವಣಗೆರೆಗೆ ಐಟಿ ಪಾರ್ಕ್ ಸ್ಥಾಪನೆ ಬಗ್ಗೆ ಪ್ರಸ್ಥಾಪಿಸಿದ್ದೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರು ಸಕಾರತ್ಮಕವಾಗಿ ಸ್ಪಂದಿಸಿ ಈಗಾಗಲೆ ಐಟಿ ಹಬ್ ಸ್ಥಾಪಿಸಲು ಪ್ರಸ್ಥಾಪಿಸಲಾಗಿದ್ದು ಅದನ್ನು ನೀವು ಅಭಿವೃದ್ಧಿಪಡಿಸಿಕೊಂಡು ಹೋಗುವಂತೆ ನಾಲ್ಕು ಪುಟಗಳ ಮಾಹಿತಿಯನ್ನು ನೀಡಿದರು ಎಂದರು.
ಮುಂದಿನ ಆರು ತಿಂಗಳಲ್ಲಿ ಸ್ಥಳೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ ಆಯೋಜಿಸಲಾಗುವುದು. ಇದೇ ಅಕ್ಟೋಬರ್ 15, 16 ರಂದು ಕೃತಕ ಬುದ್ದಿಮತ್ತೆ (ಎಐ), ಬಿಗ್ ಡೆಟಾ, ಎಡಿಎ ಟೂಲ್ಸ್, ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ , ಡಿಸೈನ್ ಐಪಿಗಳು ರೊಬೋಟಿಕ್ಸ್ ಇನ್ ಎಜುಕೇಷನ್ ಇಂಡಸ್ಟ್ರೀ ಹಾರ್ಡ್ವೇರ್ ಮತ್ತು ಸಾಫ್ಟೆವೇರ್ ತಂತ್ರಾಂಶಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ದಾವಣಗೆರೆಯಲ್ಲಿ ಐಟಿ ಹಬ್ ಮಾಡುವ ಉದ್ದೇಶದಿಂದ ಅಧಿಕಾರಿಗಳ ತಂಡದೊಂದಿಗೆ ಬೆಂಗಳೂರಿನ ಐಟಿಬಿಟಿ ಕಂಪನಿಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ, ಅವಶ್ಯಕತೆ ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಅದೇ ಉದ್ದೇಶದಿಂದ ದಾವಣಗೆರೆಯಲ್ಲಿ ಮೊದಲಿಗೆ ಎರಡು ಎಕರೆ ಜಾಗವನ್ನು ಗುರುತಿಸಿ ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮೀಟಿಂಗ್ ಹಾಲ್, ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದೊಂದಿಗೆ ಎಸ್ಟಿಪಿಐ ಯನ್ನು ಸ್ಥಾಪಿಸಲಾಯಿತು.
ಕೈಗಾರಿಕೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ಪರಿಸರ ವ್ಯವಸ್ಥೆ ನಿರ್ಮಾಣ ಮಾಡಿ ತಂತ್ರಜ್ಞಾನ ದೃಶ್ಯವನ್ನು ಅಭಿವೃದ್ಧಿಪಡಿಸುವ ಸೆಂಟರ್ ಆಫ್ ಎಕ್ಸಲೆನ್ಸ್ಗಳ ಮೂಲಕ ಜಿಲ್ಲೆಯಲ್ಲಿ ಸ್ಟಾರ್ಟ್ಅಪ್ ಸ್ಥಾಪಿಸುವುದು. ಇಂತಹ ಸಂಸ್ಥೆಗಳ ಮೂಲಕ ಉದ್ಯಮದ ತಜ್ಞರು, ಶೈಕ್ಷಣಿಕ ಸಂಶೋಧಕರು, ಸರ್ಕಾರಿ ಸಂಸ್ಥೆಗಳು ಮತ್ತು ನವೋದ್ಯಮಿಗಳನ್ನು ಭೇಟಿ ಮಾಡಿ ದಾವಣಗೆರೆ ಐಟಿ ಹಬ್ಗೆ ಅವಶ್ಯವಿರುವ ಸೌಕರ್ಯಗಳನ್ನು ಪಡೆಯಲು ಸಲಹೆ ಸೂಚನೆಗಳನ್ನು ಪಡೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆಯುತ್ತಾರೆ. ಇಲ್ಲಿ ವ್ಯಾಸಂಗ ಮಾಡಿದಂತಹ ಅನೇಕ ನಿರುದ್ಯೋಗಿಗಳಿಗೆ ಕೌಶಲ್ಯ ಮತ್ತು ಭಾಷೆಯ ತೊಂದರೆ ಉಂಟಾಗುತ್ತಿದೆ. ಅಂತಹ ಯಾವುದೇ ತೊಂದರೆಗಳು ವಿದ್ಯಾರ್ಥಿಗಳಿಗೆ ಆಗದಂತೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಸಹ ನೀಡಲಾಗುವುದು ಎಂದರು.
ಕೃತಿಕ ಬುದ್ದಿಮತ್ತೆಯಿಂದ ಕೃಷಿ, ಆರೋಗ್ಯ, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಇಂಟೆಲ್ ಕಂಪನಿಯಿಂದ ಈಗಾಗಲೇ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತಿದೆ. ಇಂತಹ 35 ಕ್ಕೂ ಹೆಚ್ಚು ಹೆಸರಾಂತ ಕಂಪನಿಗಳು ದಾವಣಗೆರೆಯಲ್ಲಿ ಘಟಕ ತೆರೆಯಲು ಉತ್ಸುಕತೆ ತೋರುತ್ತಿವೆ ಎಂದರು.
ಎಸ್ಟಿಪಿಐ ನಿರ್ದೇಶಕರಾದ ಸಂಜಯ್ ತ್ಯಾಗಿ ಯವರು ಮಾತನಾಡಿ ದಾವಣಗೆರೆಯಲ್ಲಿ ಐಟಿ ಪಾರ್ಕ್ ಮಾಡಲು ನಾವು ಉತ್ಸಕರಾಗಿದ್ದೇವೆ. ಇಲ್ಲಿನ ವಾತಾವರಣವು ಸಹ ಅದಕ್ಕೆ ಪೂರಕವಾಗಿದೆ. ಇಲ್ಲಿ ಅನೇಕ ಕಂಪನಿಗಳು ಘಟಕ ಪ್ರಾರಂಭಿಸಲು ಉತ್ಸಾಕರಾಗಿದ್ದಾರೆ. ಈಗಾಗಲೇ ಅನೇಕ ಸುತ್ತಿನ ಮಾತುಕತೆಯಾಗಿದೆ, ಇದರ ಪ್ರಯೋಜನೆಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ, ದಾವಣಗೆರೆ ಸಾಫ್ಟ್ವೇರ್ ಪಾರ್ಕ್ ಮಾಡಲು ಲೋಕಸಭಾ ಸದಸ್ಯರು, ಜಿಲ್ಲಾಧಿಕಾರಿಗಳು ಸೇರಿದಂತೆ ಒಂದು ವಿಷನ್ ಟೀಮ್ ಮಾಡಲಾಗಿದೆ. ಅದರ ಫಲವೇ ಸಾಪ್ಟ್ವೇರ್ ಪಾರ್ಕ್ ದಾವಣಗೆರೆಯಲ್ಲಿ ಆಗಲು ಸಾಧ್ಯವಾಯಿತು. ವಿಷನ್ ದಾವಣಗೆರೆ ಬಗ್ಗೆ ಫೇಸ್ಬುಕ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸಾಫ್ಟ್ವೇರ್ ಪಾರ್ಕ್ ಬಗ್ಗೆ ಮಾಹಿತಿ ಇದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡುವಂತೆ ತಿಳಿಸಿದರು. ವಿಷನ್ ಟೀಂ ನಾಸಿಕ್ ಮತ್ತು ಚೆನ್ನೈನ ಡಾಟಾ ಸೆಂಟರ್ಗೆ ಭೇಟಿ ನೀಡಲಿವೆ. ಎಸ್ಟಿಪಿಐ ಮತ್ತು ಕಿಯೋನಿಕ್ಸ್ ಸಂಸ್ಥೆಗಳಿಗೆ ತಲಾ ನಾಲ್ಕು ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದರು. 25 ರಿಂದ 30 ಎಕರೆ ಜಮೀನಿನಲ್ಲಿ ಜಿಲ್ಲೆಯಲ್ಲಿ ಗಾಲ್ಪ್ ಕೋರ್ಸ್ ಅನ್ನು ತೆರೆಯಲು ಸಹ ಚಿಂತನೆ ನಡೆಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಎಸ್ಟಿಪಿಐ ಬಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಜೈನ್ ತಾಂತ್ರಿಕ ಕಾಲೇಜು, ಯುಬಿಡಿಟಿ, ಜಿಎಂಐಟಿ ಕಾಲೇಜು ಮತ್ತು ಬಿಐಇಟಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಇಂಟಲ್ ಸಂಸ್ಥೆಯ ಸಾಮ್ಯೂಯಲ್ ದೊರೆರಾಜ್, ಕೆಡಿಇಎಂ ಪ್ರೊಗ್ರಾಮ್ ಡೈರೆಕ್ಟರ್ ಸುವಿನ್ ನಾರಾಯಣ್ ಬಿಐಇಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ. ಅರವಿಂದ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ22 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

