ದಿನದ ಸುದ್ದಿ
ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಥಮ ಕುಂದುಕೊರತೆ ಸಭೆ |ಸಿಂದಗಿ ತಾಲೂಕಿನ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ : ಸಚಿವೆ ಶಶಿಕಲಾ ಜೊಲ್ಲೆ
ಸುದ್ದಿದಿನ,ವಿಜಯಪುರ : ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರಣ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲೆಯ ಸಿಂದಗಿಯಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಗೆ ಸಾರ್ವಜನಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ಮತ್ತು ಸ್ಪಂದನೆ ದೊರೆತಿದೆ.
ಸಿಂದಗಿ ಸಾತವಿರೇಶ್ವರ ಸಭಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ದೀಪ ಬೆಳಗಿಸಿ ಮಾತನಾಡಿ ಕೊರೋನಾ ಹಿನ್ನೆಲೆಯಲ್ಲಿ ಸ್ವಲ್ಪ ವಿಳಂಬವಾಗಿದ್ದರೂ ಕೂಡ ಜಿಲ್ಲೆಯ ತಾಲೂಕಾವಾರು ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ಹಮ್ಮಿಕೊಳ್ಳುವ ದಿಸೆಯಲ್ಲಿ ಇದೇ ಪ್ರಥಮ ಬಾರಿಗೆ ಸಿಂದಗಿಯಲ್ಲಿ ಕುಂದುಕೊರತೆ ಸಭೆಯನ್ನು ಏರ್ಪಡಿಸಿದ್ದು, ಮಹಿಳೆಯರು, ಹಿರಿಯ ನಾಗರೀಕರು, ವಿಶೇಷ ಚೇತನರು, ರೈತರು ಸೇರಿದಂತೆ ಎಲ್ಲಾ ವರ್ಗದ ಜನರಿಂದ ಕುಂದುಕೊರತೆ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಸುಮಾರು 76 ಅರ್ಜಿಗಳಿಗೆ ತಕ್ಷಣ ಪರಿಹಾರ ಕಲ್ಪಿಸಿದ್ದು, ಇನ್ನುಳಿದ ಅರ್ಜಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ | ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದೇ ಮೊದಲ ತಪ್ಪು..!
ಸರ್ಕಾರವನ್ನೇ ಜನರ ಹತ್ತಿರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ರೂಪಿಸಿ ಬಡವರ, ರೈತರ, ವಿಕಲಚೇತನರ ಹಾಗೂ ಹಿರಿಯ ನಾಗರೀಕರು, ಮಹಿಳೆಯರು ಮತ್ತು ಮಕ್ಕಳ ಜೀವನವನ್ನು ಸುಧಾರಿಸುವ ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಅಧಿಕಾರಿಗಳು ಸಹಕಾರ ನೀಡುತ್ತಿದ್ದು, ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಈ ಅರ್ಜಿಗಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಲಿದ್ದಾರೆ ಎಂದು ಹೇಳಿದರು.
ಅತೀವೃಷಿ ಭೀಮಾ ಮತ್ತು ಡೋಣಿ ನದಿಗೆ ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಗಮನ ನೀಡಲಾಯಿತು. ಕೋವಿಡ್ ಹಿನ್ನೆಲೆ ಸ್ವಲ್ಪ ವಿಳಂಬವಾಗಿದ್ದರೂ ಸಾರ್ವಜನಿಕ ಕುಂದುಕೊರತೆಗಳಿಗೆ ಸ್ಪಂದಿಸಲು ಈ ಸಭೆ ಆಯೋಜಿಸಿದ್ದು ನಿರೀಕ್ಷೆಗೂ ಮೀರಿ ಸಾರ್ವಜನಿಕರು ಆಗಮಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.
ಸಮಸ್ಯೆಗಳ ಪರಿಹಾರಕ್ಕಾಗಿ ಇಲ್ಲಿಗೆ ಆಗಮಿಸಿದ್ದು ಅಲ್ಲಮಪ್ರಭು ವಚನ ಬೆಟ್ಟದ ನೆಲ್ಲಿಕಾಯಿ ಹಾಗೂ ಸಮುದ್ರದೊಳಗಿನ ಉಪ್ಪಿಗೂ ಎತ್ತಣದೆತ್ತಣ ಸಂಬಂಧವಯ್ಯಾ ಎಂದು ಹೇಳಿ ದೀನದಲಿತರ ಸಂಕಷ್ಟದಲ್ಲಿರುವ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಲು ತಾವು, ಅಧಿಕಾರಿಗಳು ಬಂದಿರುವುದಾಗಿ ಸಚಿವರು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ರಸ್ತೆ, ಮನೆ ಸೇರಿದಂತೆ ಇನ್ನೀತರ ಸೌಕರ್ಯ ಕಲ್ಪಿಸುವ ದಿಸೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಬಡಜನರ ಸಮಸ್ಯೆಗಳಿಗೆ ಸ್ಪಂದಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವರು ಹೇಳಿದರು. ಇದೇ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್, ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಿದರು.
ಇಂದು ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಕುಡಿಯುವ ನೀರು, ವಿದ್ಯುತ್, ಪುನರ್ ವಸತಿ, ರಸ್ತೆಗಳ ದುರಸ್ತಿ, ಸಿಂದಗಿ ಪಟ್ಟಣದ ಒಳಚರಂಡಿ ಸಮಸ್ಯೆ ನಿವಾರಣೆ, ಬೀದಿ ದನಗಳನ್ನು ನೋಂದಾಯಿತ ಗೋಶಾಲೆಗಳಿಗೆ ಕಳುಹಿಸುವ ಒಂದು ವಾರದ ಮುಂಚೆ ನೋಟಿಸ್ ಜಾರಿಗೊಳಿಸಿ ಮಾಲೀಕರಿಗೆ ಸೂಕ್ತ ತಿಳುವಳಿಕೆ ನೀಡಿ ರವಾನಿಸಬೇಕು. ಪಟ್ಟಣದಲ್ಲಿ ವಿದ್ಯುತ್ ದೀಪ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಅರ್ಜಿಗಳು ಸಲ್ಲಿಕೆಯಾಗಿದ್ದು, 80 ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ ಎಂದು ಹೇಳಿದರು.
ತಾಲೂಕಿನ ಸ್ಮಶಾನ ಭೂಮಿ, ಅಂಗನವಾಡಿಗಳ ಸ್ಥಳಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಮಳೆಗೆ ಬಿದ್ದ ಮನೆಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಿಂದಗಿ ಪಟ್ಟಣದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ, ವಿದ್ಯುತ್ ದೀಪಗಳ ಸುಧಾರಣೆ ಬಗ್ಗೆ ಪರಿಶೀಲನೆ ಮತ್ತು ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ತಾಲೂಕಿನ ಕೆರೆ, ಹಳ್ಳ, ಸೇತುವೆಗಳ ಹತ್ತಿರದ ರಸ್ತೆ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಪರಿಹರಿಸಿ, ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ, ತಹಶೀಲ್ದಾರ ಸಂಜೀವ ದಾಸರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಿಸಿದ್ಧಿ, ಪುರಸಭೆ ಅಧ್ಯಕ್ಷ ಶ್ರೀ ಮನಗೂಳಿ, ಜಿ,ಪಂ, ತಾಲೂಕು ಪಂಚಾಯತ್ ಅಧ್ಯಕ್ಷರು, ಸದಸ್ಯರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ4 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ5 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ5 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

