ದಿನದ ಸುದ್ದಿ
ಸೂಳೆಕೆರೆ ಎಂಬ ಬೃಹತ್ ಸರೋವರದ ಇತಿಹಾಸ
ನೂರಾರು ವರ್ಷಗಳ ಹಿಂದೆ ಕಟ್ಟಿಸಿದ ಕೆರೆಗಳು ಇಂದಿಗೂ ಸಾವಿರಾರು ರೈತ ಕುಟುಂಬಗಳಿಗೆ ಆಸರೆಯಾಗಿವೆ. ಚೆನ್ನಗಿರಿ ತಾಲ್ಲೂಕಿನ ”ಸೂಳೆಕೆರೆ’ ಅಂತಹ ಕೆರೆಗಳಲ್ಲಿ ಒಂದು. ಇದು ಏಷ್ಯಾ ಖಂಡದ ‘ಅತಿ ದೊಡ್ಡ ಕೆರೆ ‘ಎಂಬ ಖ್ಯಾತಿ ಪಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ ಏಷ್ಯಾಖಂಡದಲ್ಲೇ ಎರಡನೆ ಅತಿ ದೊಡ್ಡ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಯಲು ಸೀಮೆಯ ಬಟ್ಟ ಬಯಲುಗಳ ನಡುವೆ ಮೈತಳೆದಿರುವ ಸೂಳೆಕೆರೆ ಈ ಭಾಗದ ಹೆಮ್ಮೆಯ ನಿಸರ್ಗ ತಾಣವೂ ಆಗಿದ್ದು ನೂರಾರು ರೈತ ಕುಟುಂಬಗಳ ಜೀವನಕ್ಕೆ ಆಧಾರವಾಗಿದೆ.
ಈ ಕೆರೆಯ ವಿಸ್ತೀರ್ಣ 4416 ಎಕರೆ 17 ಗುಂಟೆ. ಈ ವಿಸ್ತಾರದ ಕೆರೆ ನೋಡುಗರ ಕಣ್ಣಿಗೆ ಸಾಗರದಂತೆ ಕಾಣುತ್ತದೆ. ಎರಡು ಬೆಟ್ಟಗಳ ನಡುವೆ ಸುಮಾರು 950 ಅಡಿ ಉದ್ದದ ಏರಿಯನ್ನು ನಿರ್ಮಾಣ ಮಾಡಿ ನೀರು ನಿಲ್ಲಿಸಲಾಗಿದೆ. ಏರಿಯ ಅಗಲ ಒಂದೆಡೆ 60 ಅಡಿಗಳಾದರೆ, ಇನ್ನೊಂದೆಡೆ 80 ಅಡಿಗಳಷ್ಟಿದೆ.
ಐತಿಹಾಸಿಕ ಹಿನ್ನೆಲೆ: ಈ ಕೆರೆಯ ನಿರ್ಮಾಣದ ಹಿಂದೆ ಅಚ್ಚರಿಯ ಸಂಗತಿಗಳಿವೆ. ಕೆಲವು ಐತಿಹ್ಯದಂತಿವೆ. ಇವು ಇತಿಹಾಸಕ್ತರಿಗೆ ಹೆಚ್ಚಿನ ಸಂಶೋಧನೆಗೆ ಆಕರಗಳನ್ನು ಒದಗಿಸುತ್ತವೆ. ಈ ಕೆರೆ ಪ್ರದೇಶದಲ್ಲಿ ಹಿಂದೆ ಸ್ವರ್ಗವತಿ ಎಂಬ ಪಟ್ಟಣ ಇತ್ತೆಂಬ ಐತಿಹ್ಯವಿದೆ. ವಿಕ್ರಮರಾಯನೆಂಬ ರಾಜ ಸ್ವರ್ಗವತಿಯನ್ನು ಆಳುತ್ತಿದ್ದ. ನೂತನಾ ದೇವಿ ಅವನ ಪತ್ನಿ. ಈ ದಂಪತಿಗೆ ಶಾಂತಲಾದೇವಿ (ಶಾಂತಮ್ಮ ) ಎಂಬ ಒಬ್ಬಳೇ ಮಗಳು. ಅವಳು ಯೌವ್ವನಾವಸ್ಥೆಗೆ ಬಂದಾಗ ಒಮ್ಮೆ ತಂದೆಯ ಅನುಮತಿ ಪಡೆಯದೆ ಕಾರ್ಯ ನಿಮಿತ್ತ ನೆರೆಯ ಊರಿಗೆ ಹೋಗಿ ಅರಮನೆಗೆ ಹಿಂತಿರುಗುತ್ತಾಳೆ. ಆಕೆಯ ನಡವಳಿಕೆಯನ್ನು ತಂದೆ ವಿಕ್ರಮರಾಯ ಆಕ್ಷೇಪಿಸಿ ನಿಂದಿಸುತ್ತಾನೆ. ನಡತೆಗೆಟ್ಟವಳು ಎಂದು ಆರೋಪಿಸುತ್ತಾನೆ.
ತಂದೆಯ ಬೈಗುಳದ ಮಾತುಗಳನ್ನು ಕೇಳಿ ನೊಂದ ಶಾಂತಲಾದೇವಿ ಆರೋಪದಿಂದ ಮುಕ್ತಳಾಗಲು ತಂದೆಯ ನಂತರ ಒಂದು ಕೆರೆಯನ್ನು ನಿರ್ಮಿಸಲು ಸಂಕಲ್ಪ ಮಾಡುತ್ತಾಳೆ. ಸ್ವರ್ಗಾವತಿ ಪಟ್ಟಣದ ವೇಶ್ಯೆಯರು ವಾಸಿಸುತ್ತಿದ್ದ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವೆಂದು ನಿರ್ಧರಿಸುತ್ತಾಳೆ. ಆ ಜಾಗವನ್ನು ಬಿಟ್ಟುಕೊಡುವಂತೆ ವೇಶ್ಯೆಯರನ್ನು ಕೇಳುತ್ತಾಳೆ. ಕೆರೆಗೆ ‘ಸೂಳೆಕೆರೆ’ ಎಂದು ನಾಮಕರಣ ಮಾಡುವುದಾದರೆ ಆ ಪ್ರದೇಶವನ್ನು ಬಿಟ್ಟುಕೊಡುವುದಾಗಿ ಅವರು ಹೇಳುತ್ತಾರೆ.ಆ ಬೇಡಿಕೆಗೆ ಒಪ್ಪಿದ ರಾಜಪುತ್ರಿ ಅಲ್ಲಿ ಕೆರೆ ನಿರ್ಮಾಣ ಮಾಡಿದಳು ಎಂದು ಇತಿಹಾಸ ಹೇಳುತ್ತದೆ.
ಕೆರೆ ವಿಸ್ತಾರವಾದ ಬೆಟ್ಟ ಸಾಲುಗಳ ಪ್ರದೇಶದಲ್ಲಿದೆ. ಸುತ್ತಲಿನ ನೂರಾರು ಹಳ್ಳಿಗಳಲ್ಲಿ ಬೀಳುವ ಮಳೆ ನೀರು ಈ ಕೆರೆಗೆ ಹರಿದು ಬರುತ್ತದೆ. ಹಳೇ ಮೈಸೂರು ರಾಜ್ಯದ ಬ್ರಿಟಿಷ್ ಇಂಜಿನಿಯರ್ ಸ್ಯಾಂಕಿ (ಕೆ) ಅವರು ‘ಈ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವಲ್ಲ. ಹಿಂದಿನ ಕಾಲದ ನೀರಾವರಿ ತಂತ್ರಜ್ಞರ ಚಾಣಾಕ್ಷತೆಯಿಂದ ಈ ಕೆರೆ ನಿರ್ಮಾಣವಾಗಿದೆ. ಅದು ಅಚ್ಚರಿಯ ಸಂಗತಿ’ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.
ಕೆರೆಯ ಉತ್ತರದಲ್ಲಿ ಸಿದ್ಧ ನಾಲೆ ಹಾಗೂ ದಕ್ಷಿಣದಲ್ಲಿ ಬಸವ ನಾಲೆ ಎಂಬ ಎರಡು ನಾಲೆಗಳಿವೆ. ಈ ಕೆರೆ ಸುಮಾರು 15 ರಿಂದ 20 ಹಳ್ಳಿಗಳ ಕೃಷಿ ಭೂಮಿಗೆ (2000 ಎಕರೆ) ನೀರಾವರಿ ಸೌಲಭ್ಯ ಒದಗಿಸಿದೆ. ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರನ್ನೂ ಪೂರೈಸುತ್ತಿದೆ.
ಕೆರೆಯ ಪೂರ್ವ ದಿಕ್ಕಿಗೆ ಹೊಯ್ಸಳ ಮತ್ತು ಕೆಳದಿ ವಾಸ್ತುಶೈಲಿಯ ಸಿದ್ದೇಶ್ವರ ದೇವಾಲಯವಿದೆ. ಕೆರೆಯ ಅಂಚಿನಲ್ಲಿ ಆಕರ್ಷಕ ಕಲ್ಲು ಮಂಟಪವಿದೆ. ಇಲ್ಲಿಂದ ಕೆರೆಯನ್ನು ನೋಡುವುದು ಸೊಗಸಾದ ಅನುಭವ.
ಕೆರೆಗೆ ಸಿದ್ದೇಶ್ವರ ಸ್ವಾಮಿ, ಬಸವೇಶ್ವರ ಸ್ವಾಮಿ ಹಾಗೂ ಕತ್ತರಿ ತೂಬು ಎಂಬ ಮೂರು ತೂಬುಗಳಿವೆ. ಗುಡ್ಡಗಳ ಪರಿಸರದಲ್ಲಿ ಇರುವುದರಿಂದ ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳಿವೆ.
ಸುಮಾರು 27 ಅಡಿ ನೀರಿನ ಮಟ್ಟವಿರುವ ಕೆರೆಯಲ್ಲಿ 10 ಅಡಿಗಳಷ್ಟು ಹೂಳು ತುಂಬಿಕೊಂಡಿದೆ. ಈ ಕೆರೆಯು 1992ರಲ್ಲಿ ಕೋಡಿ ಬಿದ್ದಿತ್ತು. ಹದಿನೇಳು ವರ್ಷದ ನಂತರ ಈ ವರ್ಷ (2009) ಮತ್ತೊಮ್ಮೆ ಕೋಡಿ ಬಿತ್ತು. ಇದರಿಂದ ಅಪಾರ ಹಾನಿಯೂ ಆಯಿತು. ಹಿನ್ನೀರಿನಿಂದಾಚೆಯ 3500 ಎಕರೆ ಪ್ರದೇಶ ಜಲಾವೃತ್ತಗೊಂಡಿತ್ತು. ಕೆರೆಯಲ್ಲಿರುವ ಹೂಳನ್ನು ಕಾಲಕಾಲಕ್ಕೆ ಎತ್ತಿದ್ದರೆ ಹಾನಿ ತಪ್ಪಿಸಬಹುದಿತ್ತು.
ಕೆರೆಗಳ ಹೂಳನ್ನು ಕಾಲಕಾಲಕ್ಕೆ ತೆಗೆದು ಕೆರೆಯನ್ನು ಬಲಪಡಿಸುವ ಗ್ರಾಮಗಳಿಗೆ ಹಿಂದಿನ ಕಾಲದಲ್ಲಿ ತೆರಿಗೆ ವಿನಾಯಿತಿ ನೀಡುವ ಪದ್ಧತಿ ಇತ್ತು ಎಂಬುದು ಕೌಟಿಲ್ಯನ ‘ಅರ್ಥಶಾಸ್ತ್ರ’ದಲ್ಲಿ ಉಲ್ಲೇಖವಾಗಿದೆ. ಆದರೆ ಈಗ ಹೂಳು ತೆಗೆಯುವ ವ್ಯವಸ್ಥೆಯೇ ಇಲ್ಲ.
ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಕೆರೆಗಳಲ್ಲಿ ಒಂದು ಎನ್ನಲಾದ ಈ ಕೆರೆಗೆ ಶಾಂತಿಸಾಗರ ಎಂದೂ ಹೆಸರಿದೆ. ಕೆರೆ ನಿರ್ಮಾಣ ಮಾಡಿದ ಶಾಂತಲಾದೇವಿಯನ್ನು ಸ್ಮರಿಸುವುದೂ ಇದರ ಉದ್ದೇಶ. ಸರ್ಕಾರಿ ದಾಖಲೆಗಳಲ್ಲಿ ಶಾಂತಿಸಾಗರ ಎಂದಿದ್ದರೂ ಜನ ಸಾಮಾನ್ಯರ ಬಾಯಲ್ಲಿ ಅದು ಇಂದಿಗೂ ಸೂಳೆಕೆರೆ ಆಗಿ ಉಳಿದಿದೆ.
ಕೆರೆಯ ಹೆಸರು ಬದಲಾವಣೆಗೆ ಇತಿಹಾಸಕ್ತರು, ಚಿಂತಕರು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಸಮದ್ರ ನೋಡಿಲ್ಲದ ಮಕ್ಕಳ ಪಾಲಿಗೆ ಈ ಕೆರೆ ಸಮುದ್ರದಂತೆ ಕಾಣುತ್ತದೆ.
(ಸಂಗ್ರಹ)

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ




