ದಿನದ ಸುದ್ದಿ
ಹಿಂದುತ್ವದ ಹಿತಾಸಕ್ತಿಯೂ ಜಾತಿಯ ಅನಿವಾರ್ಯತೆಯೂ
- ನಾ ದಿವಾಕರ
ಜಾತಿ ರಾಜಕಾರಣ ಈ ದೇಶಕ್ಕೆ ಅಂಟಿರುವ ಒಂದು ಶಾಪವಾದರೆ, ಹಿಂದುತ್ವ ರಾಜಕಾರಣ ಒಂದು ಭೀಕರ ಸ್ವಪ್ನ. ಕರ್ನಾಟಕದ ಜನತೆಗೆ ಈಗ ಶಾಪಗ್ರಸ್ತರಾಗಿ ಈ ಭೀಕರ ಸ್ವಪ್ನ ಲೋಕದಲ್ಲಿ ವಿಹರಿಸುವ ಒಂದು ಅವಕಾಶ.
ಜಾತಿ ಸಮೀಕರಣದಿಂದಾಚೆಗೆ ಸರ್ಕಾರಗಳನ್ನು ರಚಿಸಲು ಸಾಧ್ಯವೇ ಆಗದ ಒಂದು ದುಸ್ಥಿತಿಗೆ ರಾಜ್ಯ ತಲುಪಿರುವುದು, ಮೌಲ್ಯಾಧಾರಿತ ರಾಜಕಾರಣದ ಹರಿಕಾರರಿಗೆ ಮಾಡುವ ಅಪಮಾನ ಹೌದಾದರೂ, ಈ ಮೌಲ್ಯಗಳ ನಿಷ್ಕರ್ಷೆಯಾದದ್ದೇ ಮಾರುಕಟ್ಟೆ ರಾಜಕಾರಣದ ಆವರಣದಲ್ಲಿ ಎನ್ನುವ ವಾಸ್ತವವನ್ನು ಅರಿತರೆ, ಅಷ್ಟೇನೂ ನಿರಾಶರಾಗಬೇಕಿಲ್ಲ.
ಏಕೆಂದರೆ ಕರ್ನಾಟಕದಲ್ಲಿ ಮೌಲ್ಯಾಧಾರಿತ ರಾಜಕಾರಣದ ಛಾಯೆ ಮೂಡುವ ವೇಳೆಗೇ ರಾಜಕೀಯ ವಲಯದಲ್ಲಿ ಅಧಿಕಾರ ಪೀಠದ ಮಾರುಕಟ್ಟೆ ಮೌಲ್ಯ ನಿರ್ಧಾರವಾಗುವ ಪರಂಪರೆಗೆ ನಾಂದಿ ಹಾಡಲಾಗಿತ್ತು. ನವ ಉದಾರವಾದ ಜಾತಿ ಧರ್ಮಗಳನ್ನೂ ಸಂತೆಯಲ್ಲಿಟ್ಟು ಮಾರುವ ಸಾಮಥ್ರ್ಯ ಹೊಂದಿರುವುದನ್ನು ಇಲ್ಲಿ ಗಮನಿಸಲೇಬೇಕು.
ಬಿಜೆಪಿ ಹೈಕಮಾಂಡ್ ತನ್ನ ಪಗಡೆಯಾಟದಲ್ಲಿ ದಾಳ ಉರುಳಿಸುವ ಮುನ್ನ ಯಾವ ಚೌಕಗಳಲ್ಲಿ ಯಾರನ್ನು ಕೂಡಿಸಬೇಕು ಎಂದು ನಿರ್ಧರಿಸಿಯೇ ಮುಂದೆ ಹೆಜ್ಜೆಯಿಟ್ಟಿದೆ. ಹಣಕಾಸು ಬಂಡವಾಳ ಮತ್ತು ನವ ಉದಾರವಾದದ ಮಾರುಕಟ್ಟೆ ಆರ್ಥಿಕತೆಯಲ್ಲಿ ಕರ್ನಾಟಕ ಪ್ರಶಸ್ತ ಸ್ಥಾನ ಗಳಿಸಿರುವುದರಿಂದಲೇ ಉಳಿದೆಲ್ಲಾ ರಾಜ್ಯಗಳಿಗಿಂತಲೂ ಇಲ್ಲಿನ ರಾಜಕಾರಣಕ್ಕೆ ಹೆಚ್ಚಿನ ಮಾರುಕಟ್ಟೆ ಮೌಲ್ಯವಿದೆ.
ನಮ್ಮ ರಾಜ್ಯದಲ್ಲಿರುವ ಜಲಮೂಲಗಳು ಮತ್ತು ಅರಣ್ಯ ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳು ಕಾರ್ಪೋರೇಟ್ ರಾಜಕಾರಣದ ಸಾಮ್ರಾಜ್ಯ ವಿಸ್ತರಣೆಗೆ ಹೆದ್ದಾರಿಗಳನ್ನು ನಿರ್ಮಿಸಲು ಹೆಚ್ಚು ನೆರವಾಗುತ್ತವೆ. ಹಾಗಾಗಿಯೇ ಇಲ್ಲಿನ ರಾಜಕಾರಣದಲ್ಲಿ ನಾವು ಕಾಣುತ್ತಿರುವ ಪ್ರಬಲ ಜಾತಿಗಳ ವೈರುಧ್ಯಗಳು ಮತ್ತು ಪೈಪೋಟಿಗಳು ಹೆಚ್ಚು ಗಮನಾರ್ಹವಾಗುತ್ತವೆ.
ಯಡಿಯೂರಪ್ಪನವರ ಪದಚ್ಯುತಿ ಮತ್ತು ಬೊಮ್ಮಾಯಿಯವರ ಅಧಿಕಾರ ಸ್ವೀಕಾರವನ್ನು ಕೇವಲ ಜಾತಿ ರಾಜಕಾರಣದ ಕೋನದಿಂದಲೇ ನೋಡಲಾಗುವುದಿಲ್ಲ. ಇಲ್ಲಿ ಜಾತಿ ಒಂದು ನಿಮಿತ್ತಮಾತ್ರ.
ಲಿಂಗಾಯತ ರಾಜಕಾರಣದ ಹಿಂದಿರುವ ಔದ್ಯಮಿಕ ಸಾಮ್ರಾಜ್ಯದ ಹಿತಾಸಕ್ತಿಗಳನ್ನು, ಬಂಡವಾಳಶಾಹಿ ಕಾರ್ಪೋರೇಟ್ ಅಭಿವೃದ್ಧಿ ಮಾರ್ಗಗಳೊಡನೆ ಮುಖಾಮುಖಿಯಾಗಿಸಿ ನೋಡಿದಾಗ, ಇಲ್ಲಿನ ಮಠೋದ್ಯಮಿಗಳ ಒತ್ತಾಸೆ, ವೀರಶೈವ-ಲಿಂಗಾಯತ ಅನುಯಾಯಿಗಳ ಸಾಂಸ್ಕೃತಿಕ ಮತ್ತು ರಾಜಕೀಯ ಹಿತಾಸಕ್ತಿ ಮತ್ತು ಹಿಂದುತ್ವ ರಾಜಕಾರಣದ ಭವಿಷ್ಯದ ಕಾರ್ಯಸೂಚಿಗಳೂ ಸ್ಪಷ್ಟವಾಗುತ್ತವೆ.
ಕರ್ನಾಟಕವನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಕೆಲವು ಪ್ರಾತ್ಯಕ್ಷಿಕೆಗಳನ್ನು ಒದಗಿಸಿ ಈಗಾಗಲೇ ಎಂಟು ಹತ್ತು ವರ್ಷಗಳೇ ಕಳೆದಿವೆ. ಚರ್ಚ್ ಮೇಲಿನ ಧಾಳಿ, ಕರಾವಳಿ ಜಿಲ್ಲೆಗಳ ಕೋಮು ಧೃವೀಕರಣ ಮತ್ತು ಮತ್ತು ಇಸ್ಲಾಂ ಭೀತಿಯನ್ನು ಸೃಷ್ಟಿಸುವ ಪ್ರಯೋಗಗಳಿಗೆ ಬಿಜೆಪಿಯ ಪ್ರಥಮ ಸೋಪಾನದಲ್ಲೇ ಚಾಲನೆ ನೀಡಲಾಗಿದ್ದು, ಈಗ ಧೃವೀಕರಣ ಘನೀಕೃತವಾಗಿರುವುದನ್ನೂ ಅಲ್ಲಗಳೆಯಲಾಗುವುದಿಲ್ಲ.
ಇಂದಿನ ಬೆಳವಣಿಗೆಗಳು ಮೇಲ್ನೋಟಕ್ಕೆ ಯಡಿಯೂರಪ್ಪನವರ ಮೇಲುಗೈ ಎಂದೋ ಅಥವಾ ನೂತನ ಮುಖ್ಯಮಂತ್ರಿ ಬೊಮ್ಮಾಯಿಯ ಮೂಲಕ ಯಡಿಯೂರಪ್ಪ ಯುಗಕ್ಕೆ ಇನ್ನೂ ಉಸಿರಾಡಲು ಅವಕಾಶ ನೀಡಲಾಗಿದೆ ಎಂದೋ ಭಾವಿಸಲು ಸಾಧ್ಯ. ಕಾರ್ಪೋರೇಟ್ ರಾಜಕಾರಣಕ್ಕೆ ಲಿಂಗಾಯತ ಎನ್ನುವ ಒಂದು ನಿಮಿತ್ತ ಇರುವಂತೆಯೇ ಅಧಿಕಾರ ರಾಜಕಾರಣಕ್ಕೆ ಯಡಿಯೂರಪ್ಪ ಒಂದು ನಿಮಿತ್ತ ಮಾತ್ರವಾಗಿರುತ್ತಾರೆ.
ಹಾಗಾಗಿಯೇ ಬಿಜೆಪಿ ಹೈಕಮಾಂಡ್ ಮೇಲ್ನೋಟಕ್ಕೆ ಸೌಮ್ಯವಾದಿಯಂತೆ ಕಾಣುವ ಒಬ್ಬ ಪರಿವರ್ತಿತ ಹಿಂದುತ್ವವಾದಿಯನ್ನು ಗದ್ದುಗೆಯಲ್ಲಿ ಕೂರಿಸಿದೆ. ಕರಾವಳಿಯಲ್ಲಿ ಕೋಮು ದ್ವೇಷದ ಬೀಜಗಳನ್ನು ವ್ಯವಸ್ಥಿತವಾಗಿ ಬಿತ್ತಿದ ಸಂದರ್ಭದಲ್ಲೂ ರಾಜ್ಯದಲ್ಲಿ ಪರಿಭಾವಿತ ಸೌಮ್ಯವಾದಿಗಳೇ ಅಧಿಕಾರದಲ್ಲಿದ್ದುದನ್ನು ಸ್ಮರಿಸುವುದು ಅಗತ್ಯ.
ಬೊಮ್ಮಾಯಿಯವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪನವರ ಕೌಟುಂಬಿಕ ಹಿತಾಸಕ್ತಿಗಳಿಗೂ ಕಡಿವಾಣ ಹಾಕಿರುವುದು ಸ್ಪಷ್ಟ . ಹಿಂದಿನ ಸರ್ಕಾರದಲ್ಲಿ ಕಾರ್ಯತಃ ಅಧಿಕಾರ ಚಲಾಯಿಸುತ್ತಿದ್ದ ವಿಜಯೇಂದ್ರನಿಗೆ ನೂತನ ಸಚಿವ ಸಂಪುಟದಲ್ಲೂ ಅವಕಾಶ ನೀಡದಿರುವುದನ್ನು ಗಮನಿಸಿದರೆ ಬಹುಶಃ ಯಡಿಯೂರಪ್ಪ ಕ್ರಮೇಣ ಮೂಲೆಗುಂಪಾಗುವ ಸಾಧ್ಯತೆಗಳು ಕಾಣುತ್ತವೆ.
ಇಲ್ಲಿ ವೀರಶೈವ ಲಿಂಗಾಯತ ಮಠೋದ್ಯಮಿಗಳ ವಾಣಿಜ್ಯ ಹಿತಾಸಕ್ತಿಯನ್ನು ಸೂಕ್ಷ್ಮವಾಗಿ ಗಮನಿಸಬೇಕಿದೆ. ಇವರಿಗೆ ಯಡಿಯೂರಪ್ಪ ನಿಮಿತ್ತ ಮಾತ್ರವಾಗಿದ್ದರು. ಹಣಕಾಸು ಬಂಡವಾಳ ಮಾರುಕಟ್ಟೆಯಲ್ಲಿ ಈ ಬೃಹತ್ ಜಾತಿ ಸಮುದಾಯ ಹೊಂದಿರುವ ಬೃಹತ್ ಬಂಡವಾಳದ ಮರು ಕ್ರೋಢೀಕರಣ ಮತ್ತು ಸಂರಕ್ಷಣೆಗೆ ಲಿಂಗಾಯತ ಮುಖ್ಯಮಂತ್ರಿ ಅವಶ್ಯ, ಯಡಿಯೂರಪ್ಪ ಅಲ್ಲ ಎನ್ನುವುದು ಸಾಬೀತಾಗಿದೆ.
ಆದರೆ ಮತಬ್ಯಾಂಕ್ ರಾಜಕಾರಣದಲ್ಲಿ ತಮ್ಮದೇ ಪ್ರಭಾವಿ ವಲಯ ಹೊಂದಿರುವ ರಾಜಕೀಯ ಉದ್ಯಮಿ ಯಡಿಯೂರಪ್ಪನವರನ್ನು ಸುಲಭವಾಗಿ ಕೈಬಿಡುವುದೂ ಚುನಾವಣೆಗಳ ದೃಷ್ಟಿಯಿಂದ ಪ್ರಮಾದವಾಗುತ್ತದೆ. ಹಾಗಾಗಿಯೇ ಬಿಜೆಪಿ ಹೈಕಮಾಂಡ್ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆದು, ದಾಳ ಬೀಸಿದೆ.
ಈಗ ಮಾಜಿ ಮುಖ್ಯಮಂತ್ರಿಗೆ ಉಳಿದ ಅವಧಿಗೆ ಸಂಪುಟ ದರ್ಜೆಯ ಸ್ಥಾನಮಾನಗಳನ್ನು ನೀಡಿರುವುದನ್ನು ಈ ದೃಷ್ಟಿಯಿಂದಲೇ ನೋಡಬೇಕಿದೆ. ಯಡಿಯೂರಪ್ಪ ಅವರ ಕೃತ್ರಿಮ ರಾಜಕಾರಣದ ಮೂಲಕವೇ ಬಿಜೆಪಿಯಿಂದ ಖರೀದಿಸಲ್ಪಟ್ಟ ವಲಸಿಗರೂ ಸಹ ತಮ್ಮ ಸ್ವಾಮಿನಿಷ್ಠೆಯನ್ನು ಬದಲಿಸಿ ಇದೀಗ ವಾಣಿಜ್ಯ ಹಿತಾಸಕ್ತಿಗಳಿಗೆ ಶರಣಾಗಿದ್ದಾರೆ. ಆದ್ದರಿಂದಲೇ ಬಂಡಾಯದ ಸ್ವರ ಕ್ಷೀಣವಾಗಿದೆ. ಕಾರ್ಪೋರೇಟ್ ರಾಜಕಾರಣದಲ್ಲಿ ಮಾರುಕಟ್ಟೆಯೇ ನಿರ್ಣಾಯಕ ಎನ್ನುವುದಕ್ಕೆ ಇದಕ್ಕಿಂತಲೂ ಸಾಕ್ಷಿ ಬೇಕೇ ?
ನೂತನ ಸಂಪುಟ ರಚನೆಯಲ್ಲೂ ಬಿಜೆಪಿ ಹೈಕಮಾಂಡ್ ಇದೇ ರಣತಂತ್ರವನ್ನು ಅನುಸರಿಸಿದೆ. ಯಡಿಯೂರಪ್ಪ ಅವಧಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ಬಹುತೇಕ ಅನಿವಾರ್ಯ ಎಂಬಂತೆ ಮೂವರನ್ನು ನೇಮಿಸಿದ್ದ ಹೈಕಮಾಂಡ್ ಇದೀಗ ಆ ಹುದ್ದೆಯನ್ನೇ ಕೈಬಿಟ್ಟಿದೆ. ಇಲ್ಲಿ ಆಕಾಂಕ್ಷಿಗಳ ಕೊರತೆ ಇಲ್ಲದಿದ್ದರೂ ಬಂಡಾಯದ ಧ್ವನಿಯಂತೂ ಕೇಳಿಬರುವುದಿಲ್ಲ. ಏಕೆಂದರೆ ಯಡಿಯೂರಪ್ಪನವರಿಗೆ ಕತ್ತರಿಸಬೇಕಾದ ರೆಕ್ಕೆಗಳಿದ್ದವು, ಬೊಮ್ಮಾಯಿ ಈಗಾಗಲೇ ರೆಕ್ಕೆ ಕತ್ತರಿಸಿಕೊಂಡೇ ಪದಗ್ರಹಣ ಮಾಡಿದ್ದಾರೆ.
ವೀರಶೈವ ಲಿಂಗಾಯತ ಮಠೋದ್ಯಮಿಗಳ ಹಿತಾಸಕ್ತಿಯ ಸಂರಕ್ಷಣೆಗೆ ಕಾವಲುಗಾರರಾಗಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಜೋಡಿ ಕಾರ್ಯನಿರ್ವಹಿಸುವುದಂತೂ ಖಚಿತ. ಇದು ಮುಂದಿನ ಚುನಾವಣೆಗಳ ದೃಷ್ಟಿಯಿಂದ ಮುಖ್ಯವಾಗುತ್ತದೆ. ಉಳಿದಂತೆ ಸರ್ಕಾರ ಹೈಕಮಾಂಡ್ ಅಣತಿಯಂತೆಯೇ ನಡೆಯಲಿದೆ. ನೂತನ ಸಂಪುಟದಲ್ಲಿ ಯಡಿಯೂರಪ್ಪನವರಿಗೆ ಕಂಟಕವಾಗಿದ್ದ ಬಂಡಾಯ ಶಾಸಕರನ್ನು ದೂರ ಇಟ್ಟಿರುವಂತೆಯೇ ಅವರ ಆಪ್ತರನ್ನೂ ದೂರ ಇಡುವ ಮೂಲಕ ಸಂತೃಪ್ತಿಗೊಳಿಸಿರುವುದನ್ನು ಸುರೇಶ್ ಕುಮಾರ್ ಮತ್ತು ಲಕ್ಷ್ಮಣ ಸವದಿಯವರ ಪದಚ್ಯುತಿಯಲ್ಲಿ ಗಮನಿಸಬಹುದು.
ಹಿಂದುತ್ವವಾದದ ಸೌಮ್ಯವಾದಿ ಮುಖವಾಡ ಹೊತ್ತವರಲ್ಲಿ ಸುರೇಶ್ ಕುಮಾರ್ ಸಹ ಒಬ್ಬರು. ವಿರೋಧ ಪಕ್ಷಗಳಷ್ಟೇ ಅಲ್ಲದೆ ಸಾರ್ವಜನಿಕ ವಲಯದಲ್ಲಿ ಪ್ರಗತಿಪರರ ನಡುವೆಯೇ “ಅಜಾತಶತ್ರು” ಎಂದೇ ಪರಿಭಾವಿಸಲಾಗುವ ವಾಜಪೇಯಿ ಸಂತತಿಯ ರಾಜಕಾರಣಿಗಳಲ್ಲಿ ದಿವಂಗತ ಅನಂತಕುಮಾರ್ ಮತ್ತು ಸುರೇಶ್ ಕುಮಾರ್ ಪ್ರಮುಖರು. ಪ್ರಾಥಮಿಕ ಶಿಕ್ಷಣ ಸಚಿವರಾಗಿ ಸುರೇಶ್ ಕುಮಾರ್ ಕಾರ್ಪೋರೇಟ್ ಅರ್ಥವ್ಯವಸ್ಥೆಯ ಕಾರ್ಯಸೂಚಿಯನ್ನು ಬಹುಪಾಲು ಪೂರೈಸಿದ್ದಾಗಿದೆ. ಕೋವಿದ್ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಿಂದ ಹೊರಗುಳಿಯಲ್ಪಟ್ಟ ಲಕ್ಷಾಂತರ ಮಕ್ಕಳ ಸಂಖ್ಯೆ ಇವರನ್ನು ಬಾಧಿಸಿಯೇ ಇಲ್ಲ ಎನ್ನುವುದು ಗಮನಿಸತಕ್ಕ ಅಂಶ ಅಲ್ಲವೇ ?
ಕಾರ್ಪೋರೇಟ್ ಅರ್ಥವ್ಯವಸ್ಥೆಯಲ್ಲಿ ಸಾರ್ವಜನಿಕ ಉದ್ದಿಮೆಗಳ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಖಾಸಗೀಕರಣ ಮತ್ತು ವಾಣಿಜ್ಯೀಕರಣ ಪ್ರಕ್ರಿಯೆಗೆ ಇನ್ನು ಮುಂದೆ ಚಾಲನೆ ದೊರೆಯಲಿದೆ. ಹಿಂದಿನ ಸಾರಿಗೆ ಸಚಿವ ಲಕ್ಷ್ಮಣಸವದಿ ಈ ಬಾರಿ ಅವಕಾಶವಂಚಿತರಾಗಿದ್ದರೂ, ರಾಜ್ಯ ಸಾರಿಗೆ ಸಂಸ್ಥೆಯ ಖಾಸಗೀಕರಣಕ್ಕೆ ಅವಶ್ಯವಾದ ಭೂಮಿಕೆಯನ್ನು ಸಿದ್ಧಪಡಿಸಿಯೇ ನಿರ್ಗಮಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ನೆಪದಲ್ಲಿ ಸಂಘಟಿತ ಕಾರ್ಮಿಕರ ಐಕ್ಯತೆಯನ್ನು ಭಂಗಗೊಳಿಸುವ ಮೂಲಕ ಸಾರಿಗೆ ನಿಗಮಗಳ ಖಾಸಗೀಕರಣದ ಹಾದಿ ಸುಗಮವಾಗಿದೆ. ನೂತನ ಸಾರಿಗೆ ಸಚಿವ ಶ್ರೀರಾಮುಲು ಬಹುಶಃ ಈ ನಿಟ್ಟಿನಲ್ಲಿ ಇನ್ನೂ ಕ್ಷಿಪ್ರಗತಿಯಲ್ಲಿ ಮುನ್ನಡೆಯಬಹುದು.
ಆರೆಸ್ಸೆಸ್ ಹಿನ್ನೆಲೆಯಿಂದಲೇ ಬಂದ ಇಬ್ಬರು ಶಾಸಕರಿಗೆ ನೂತನ ಸಂಪುಟದಲ್ಲಿ ಪ್ರಮುಖ, ಪ್ರಭಾವಿ ಇಲಾಖೆಗಳನ್ನು ನೀಡಿರುವುದು, ಬೊಮ್ಮಾಯಿ ಸರ್ಕಾರದ ಹಿಂದುತ್ವ ಕಾರ್ಯಸೂಚಿಯ ಲಕ್ಷಣವೇ ಆಗಿದೆ. ಸಂಘಪರಿವಾರದ ನೆರಳಲ್ಲೇ ಬೆಳೆದ ಅರಗ ಜ್ಞಾನೇಂದ್ರ ಗೃಹ ಸಚಿವರಾಗಿ, “ ಸಚಿವ ಹುದ್ದೆಗಿಂತಲೂ ಹಿಂದುತ್ವವೇ ಮುಖ್ಯ ” ಎಂದು ಈಗಾಗಲೇ ಘೋಷಿಸಿರುವ ಸುನೀಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ, ಮತ್ತಿಬ್ಬರು ಸಂಘನಿಷ್ಠರಾದ ಕೋಟಾ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಇಲಾಖೆ ಮತ್ತು ಬಿ ಸಿ ನಾಗೇಶ್ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯನ್ನು ವಹಿಸಿಕೊಳ್ಳುವ ಮೂಲಕ ಹಿಂದುತ್ವದ ಕಾರ್ಯಸೂಚಿಯನ್ನು ಜಾರಿಗೊಳಿಸುವ ಮುಂಚೂಣಿ ತಂಡವಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸೌಮ್ಯ ಹಿಂದುತ್ವವಾದಿ ಹಣೆಪಟ್ಟಿ ಹೊತ್ತ ಬೊಮ್ಮಾಯಿ ಅವರ ಸಂಪುಟದಲ್ಲಿ ಗೃಹ, ಕನ್ನಡ ಮತ್ತು ಸಂಸ್ಕೃತಿ, ಸಮಾಜ ಕಲ್ಯಾಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಈ ಪ್ರಮುಖ-ಪ್ರಭಾವಿ ವಲಯಗಳು ಸಂಘಪರಿವಾರದ ಪಾಲಾಗಿರುವುದನ್ನು ಸೂಕ್ಷ್ಮವಾಗಿ ಗಮನಿಸಬೇಕಿದೆ. ಮತಬ್ಯಾಂಕ್ ಧೃವೀಕರಣದ ದೃಷ್ಟಿಯಿಂದ ವೀರಶೈವ-ಲಿಂಗಾಯತರನ್ನು ಓಲೈಸಲು ಬೊಮ್ಮಾಯಿ ಒಂದು ಮುಖವಾಡವಾಗುತ್ತಾರೆ.
ಈ ಮಠೋದ್ಯಮಿಗಳ ಕಾರ್ಪೋರೇಟ್ ಹಿತಾಸಕ್ತಿಯನ್ನು ಸಂರಕ್ಷಿಸಲು ಸರ್ಕಾರವೇ ಬದ್ಧವಾಗಿದೆ. ಹಿಂದುತ್ವ ಕಾರ್ಯಸೂಚಿಯನ್ನು ಜಾರಿಗೊಳಿಸಲು ನಾಲ್ಕು ಪ್ರಮುಖ ಸಚಿವ ಹುದ್ದೆಗಳು ಸನ್ನದ್ಧವಾಗಿವೆ. ಕ್ರಮೇಣ ನಿಮಿತ್ತ ಮಾತ್ರವಾಗಿರುವ ಯಡಿಯೂರಪ್ಪ ಅಪ್ರಸ್ತುತವಾದರೂ ಅಚ್ಚರಿಯೇನಿಲ್ಲ. ಏಕೆಂದರೆ ಜಾತಿ ರಾಜಕಾರಣ ಮೂಲತಃ ಔದ್ಯಮಿಕ ಸಾಮ್ರಾಜ್ಯದ ಒಂದು ಅಂಶಿಕ ಭಾಗವಾಗಿಯೇ ರೂಪುಗೊಂಡಿದೆ.
ಎಂಟು ಲಿಂಗಾಯತ, ಏಳು ಒಕ್ಕಲಿಗ, ಏಳು ಒಬಿಸಿ ಸಚಿವರನ್ನೊಳಗೊಂಡ ಬೊಮ್ಮಾಯಿ ಸಂಪುಟವನ್ನು ಜಾತಿಯ ದೃಷ್ಟಿಕೋನದಿಂದ ನೋಡದೆ, ಈ ಸಚಿವರುಗಳ ಹಿಂದಿರುವ ಔದ್ಯಮಿಕ ಪ್ರಭಾವವನ್ನು ಗಮನಿಸಿದರೆ ಬಹುಶಃ ಈ ಸಮೀಕರಣವನ್ನು ಗ್ರಹಿಸುವುದು ಸುಲಭವಾಗುತ್ತದೆ. ಬೊಮ್ಮಾಯಿಯವರ ಅಲ್ಪಾಯುಷಿ ಸರ್ಕಾರದ ಮುಂದೆ ಬೃಹತ್ ಸವಾಲುಗಳೂ ಇವೆ.
ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ರಸ್ತೆ, ನೀರಾವರಿ, ವಿದ್ಯುತ್ ಮತ್ತಿತರ ಮೂಲ ಸೌಕರ್ಯಗಳಲ್ಲಿ ಕಾರ್ಪೋರೇಟ್ ವಲಯಕ್ಕೆ ಮುಕ್ತ ಪ್ರವೇಶ, ಭೂ ಸುಧಾರಣೆ ಕಾಯ್ದೆಯ ತ್ವರಿತ ಅನುಷ್ಟಾನ ಮತ್ತು ನೂತನ ಕಾರ್ಮಿಕ ಸಂಹಿತೆಗಳ ಪ್ರಾಮಾಣಿಕ ಜಾರಿ ಇವೆಲ್ಲವೂ ಬೊಮ್ಮಾಯಿ ಸರ್ಕಾರದ ಮುಂದಿರುವ ಹೆಜ್ಜೆಗಳು. ಹಾಗಾಗಿಯೇ ಈ ಸರ್ಕಾರದ ಪ್ರತಿಯೊಂದು ಹೆಜ್ಜೆಯ ಮೇಲೂ ಬಿಜೆಪಿ ಹೈಕಮಾಂಡಿನ ಕಣ್ಗಾವಲು ಶತಃಸಿದ್ಧ.
ಸೌಮ್ಯವಾದಿ ಮುಖವಾಡದ ಯಡಿಯೂರಪ್ಪ-ಸುರೇಶ್ ಕುಮಾರ್ ಕರ್ನಾಟಕದ ಹಿಂದುತ್ವ ರಾಜಕಾರಣದ ಭದ್ರಕೋಟೆಗೆ ಬುನಾದಿಯನ್ನು ನಿರ್ಮಿಸಿಯೇ ನಿರ್ಗಮಿಸಿದ್ದಾರೆ. ವೀರಶೈವ ಲಿಂಗಾಯತ ಮಠೋದ್ಯಮಿಗಳು. ಒಕ್ಕಲಿಗ ಔದ್ಯಮಿಕ ಹಿತಾಸಕ್ತಿಗಳು ಮತ್ತು ಒಬಿಸಿ ಕಾರ್ಪೋರೇಟ್ ಶಕ್ತಿಗಳು ಈ ರಾಜಕೀಯ ಮುನ್ನಡೆಗೆ ಒತ್ತಾಸೆಯಾಗಿ ನಿಂತಿವೆ. ಅಂಬೇಡ್ಕರರನ್ನು ಸಾಂವಿಧಾನಿಕ ಬಳಕೆಯ ವಸ್ತುವನ್ನಾಗಿ ಮಾಡಿಕೊಂಡಿರುವ ದಲಿತ ಶಾಸಕರು ಸಚಿವ ಹುದ್ದೆಗಳಿಂದ ವಂಚಿತರಾದರೂ, ಹಿಂದುತ್ವದ ಕಾಲಾಳುಗಳಾಗಿ ಮುಂದುವರೆಯಲು ಸಜ್ಜಾಗಿದ್ದಾರೆ. ಎನ್ ಮಹೇಶ್ ಇತ್ತೀಚಿನ ಸೇರ್ಪಡೆಯಷ್ಟೆ.
2024ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಭಾರತದ ಅರ್ಥವ್ಯವಸ್ಥೆಯನ್ನು ಕಾರ್ಪೋರೇಟ್ ವಲಯಕ್ಕೆ ಒಪ್ಪಿಸಿ, ಸಾಂಸ್ಕೃತಿಕ ವಲಯವನ್ನು ಸಂಘಪರಿವಾರಕ್ಕೆ ಅರ್ಪಿಸಿ, ಸಾಂವಿಧಾನಿಕ ಸಂಸ್ಥೆಗಳನ್ನು ಶಿಥಿಲಗೊಳಿಸುವ ಮೂಲಕ ನವ #ಆತ್ಮನಿರ್ಭರ ಭಾರತವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ.
ಹಿಂದುತ್ವ ರಾಜಕಾರಣವನ್ನು ಬಲಪಡಿಸಲು ದಕ್ಷಿಣ ಭಾರತದಲ್ಲಿ ಪ್ರಶಸ್ತ ಭೂಮಿಕೆಯನ್ನು ಕರ್ನಾಟಕದಲ್ಲಿ ನಿರ್ಮಿಸಲಾಗಿದ್ದು, ಈ ಸೌಧವನ್ನು ಪೂರ್ಣಗೊಳಿಸುವ ಜವಾಬ್ದಾರಿ ಬೊಮ್ಮಾಯಿ ಸರ್ಕಾರದ ಮೇಲಿದೆ. ನೂತನ ಸಚಿವ ಸಂಪುಟ ಈ ಬೆಳವಣಿಗೆಯ ದಿಕ್ಸೂಚಿಯಾಗಿದೆ.
ಕರ್ನಾಟಕದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಈ ಸೂಕ್ಷ್ಮಗಳನ್ನು ಸಮರ್ಪಕವಾಗಿ ಗ್ರಹಿಸಲು ವಿಫಲವಾಗಿದೆ. ಮಣ್ಣಿನ ಮಕ್ಕಳ ಪಕ್ಷ ಜೆಡಿಎಸ್ ಅಧಿಕಾರ ರಾಜಕಾರಣದ ಚೌಕಟ್ಟಿನಿಂದ ಹೊರಗೆ ಇಣುಕಿ ನೋಡಲೂ ಸಾಧ್ಯವಾಗದೆ ತನ್ನ ಸಾಮ್ರಾಜ್ಯವನ್ನು ಸಂರಕ್ಷಿಸುವಲ್ಲಿ ನಿರತವಾಗಿದೆ.
ಈ ಸಂದರ್ಭದಲ್ಲಿ ರಾಜ್ಯದ ಪ್ರಜಾಪ್ರಭುತ್ವದ ನೆಲೆಗಳನ್ನು, ಸಾಮಾಜಿಕ ನ್ಯಾಯದ ನೆಲೆಗಳನ್ನು ಮತ್ತು ಸಾಂವಿಧಾನಿಕ ಪ್ರಜಾತಂತ್ರದ ನಿಕ್ಷೇಪಗಳನ್ನು ಸಂರಕ್ಷಿಸುವ ಹೊಣೆ ಕರ್ನಾಟಕದ ದುಡಿಯುವ ಜನತೆಯ ಮೇಲಿದೆ, ಶೋಷಿತ-ದಮನಿತ ಸಮುದಾಯಗಳ ಮೇಲಿದೆ. ಈ ವರ್ಗದ ಮುಂದಿರುವ ಬೃಹತ್ ಸವಾಲನ್ನು ಎದುರಿಸಲು ಇರುವ ಏಕೈಕ ಮಾರ್ಗ ಸೈದ್ದಾಂತಿಕ ಸ್ಪಷ್ಟತೆಯೊಂದಿಗೆ ಸಂಘಟನಾತ್ಮಕ ವಿಘಟನೆಯನ್ನು ತಡೆಗಟ್ಟಿ ಐಕ್ಯತೆಯತ್ತ ಸಾಗುವುದೇ ಆಗಿದೆ. ಪ್ರಜಾತಂತ್ರ ಮತ್ತು ಸಂವಿಧಾನದ ರಕ್ಷಣೆ ನಮ್ಮ ಆದ್ಯತೆಯೂ ಆಗಬೇಕಿದೆ. ಈ ಸಂಕಲ್ಪದೊಂದಿಗೆ ಸ್ವಾತಂತ್ರ್ಯ ದಿನವನ್ನು ಆಚರಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


