Connect with us

ಬಹಿರಂಗ

ಪ್ರತಿರೋಧದ ದನಿಯೂ, ಪ್ರಭುತ್ವದ ನಿಷ್ಕ್ರಿಯತೆಯೂ..!

Published

on

ಸಾಂದರ್ಭಿಕ ಚಿತ್ರ
  • ನಾ ದಿವಾಕರ

ಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ ಪೀಠಗಳನ್ನು ಆಕ್ರಮಿಸುವ ಆಳುವ ವರ್ಗಗಳು ಪ್ರತಿರೋಧದ ದನಿಗೆ ಕಿವಿಗೊಡದಿದ್ದರೆ ಅಂತಹ ವ್ಯವಸ್ಥೆ ಕ್ರಮೇಣ ಅರಾಜಕತೆಯತ್ತ ಸಾಗುತ್ತದೆ. ಸಾಮಾಜಿಕ ವಲಯದಲ್ಲಿ ಪ್ರತಿರೋಧಕ್ಕೆ ಅವಕಾಶವೇ ಕೊಡದ ಒಂದು ಸಮಾಜ ತನ್ನ ಅಂತಃಸತ್ವವನ್ನೇ ಕಳೆದುಕೊಂಡು ಜಡಗಟ್ಟುತ್ತದೆ. ಭಾರತೀಯ ಸಮಾಜ ತನ್ನೊಳಗಿನ ಶ್ರೇಣೀಕೃತ ಜಾತಿ ವ್ಯವಸ್ಥೆ, ಜಾತಿ ಶ್ರೇಷ್ಠತೆಯ ವ್ಯಸನ, ಜಾತಿ ಪದ್ಧತಿಯ ಅನಿಷ್ಟಗಳು, ಅಸ್ಪೃಶ್ಯತೆಯಂತಹ ಕ್ರೂರ ಮನೋಭಾವ, ಪಿತೃಪ್ರಧಾನ ಧೋರಣೆ ಇವೆಲ್ಲವನ್ನೂ ಹೊತ್ತುಕೊಂಡಿದ್ದರೂ ಇಂದಿಗೂ ಸಹ ತನ್ನ ಮೂಲ ನೆಲೆಗಳನ್ನು ಉಳಿಸಿಕೊಂಡುಬಂದಿದ್ದರೆ ಅದಕ್ಕೆ ಕಾರಣ ಈ ದೇಶದ ನೆಲದಲ್ಲಿ ಪ್ರಾಚೀನ ಕಾಲದಿಂದಲೂ ಉಗಮಿಸುತ್ತಲೇ ಇರುವ ಪ್ರತಿರೋಧದ ನೆಲೆಗಳು.

ಚಾರ್ವಾಕನಿಂದ ಅಂಬೇಡ್ಕರ್ ವರೆಗೆ ಭಾರತೀಯ ಸಮಾಜದಲ್ಲಿ, ಪ್ರಬಲ ಸಾಮ್ರಾಜ್ಯಗಳು ಅಧಿಪತ್ಯ ಸಾಧಿಸಿದ್ದ ಸಂದರ್ಭದಲ್ಲೂ ಸಹ ಪ್ರತಿರೋಧದ ನೆಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡೇ ಬಂದಿವೆ. ಇಂದು ನಾವು ಪ್ರಾಚೀನ ನಿರಂಕುಶಾಧಿಕಾರದ ನೆಲೆಗಳನ್ನು ಧ್ವಂಸಗೊಳಿಸಿ ಒಂದು ಪ್ರಜಾಸತ್ತಾತ್ಮಕ ಸಮಾಜೋ ರಾಜಕೀಯ ನೆಲೆಯಲ್ಲಿ ನೆಲೆಸಿದ್ದರೆ ಅದಕ್ಕೆ ಕಾರಣವೂ ಈ ಪ್ರತಿರೋಧದ ನೆಲೆಗಳೇ ಆಗಿವೆ. ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲೂ ಡಾ ಬಿ ಆರ್ ಅಂಬೇಡ್ಕರ್ ಹಲವಾರು ಪ್ರತಿರೋಧಗಳನ್ನು ಎದುರಿಸುತ್ತಲೇ ಅಂತಿಮ ಕರಡು ಸಿದ್ಧಪಡಿಸಿದ್ದರು. ಹಾಗೆಯೇ ಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲವಾಗಿದ್ದ ಮೇಲ್ಜಾತಿಗಳ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಲೇ, ಸಮಸಮಾಜದ ಕನಸುಗಳನ್ನು ಹೊತ್ತ ಸಮಾಜವಾದಿ, ಜಾತ್ಯತೀತ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದರು.

ಇಂದು ನಾವು 21ನೆಯ ಶತಮಾನದ ಮೂರನೆಯ ದಶಕದಲ್ಲಿದ್ದೇವೆ. 73 ವರ್ಷಗಳ ಸ್ವಾತಂತ್ರ್ಯದ ಸವಿ ಅನುಭವಿಸಿದ್ದೇವೆ. 70 ವರ್ಷಗಳ ಕಾಲ ಸಂವಿಧಾನದ ಆಶಯಗಳನ್ನು ಈಡೇರಿಸುವ ಮಾರ್ಗದಲ್ಲಿ ನಡೆದುಬಂದಿದ್ದೇವೆ. ಅಂಬೇಡ್ಕರ್ ಪ್ರತಿಪಾದಿಸಿದ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಏನೇ ಸಮಸ್ಯೆಗಳು ಎದುರಾಗಿದ್ದರೂ ಸಮರ್ಥವಾಗಿ ಪರಿಹರಿಸುತ್ತಲೇ ಭಾರತ ಒಂದು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಏಕೆಂದರೆ ಕಾಲದಿಂದ ಕಾಲಕ್ಕೆ ಸರ್ಕಾರಗಳು ಬದಲಾಗುತ್ತಿದ್ದರೂ, ಪ್ರತಿಯೊಂದು ಕಾಲಘಟ್ಟದಲ್ಲೂ ಸಾಮಾಜಿಕ ನ್ಯಾಯಕ್ಕಾಗಿ, ಆರ್ಥಿಕ ಸಮಾನತೆಗಾಗಿ, ಸಾಂಸ್ಕೃತಿಕ ಅಸ್ಮಿತೆ ಮತ್ತು ಅಸ್ತಿತ್ವಕ್ಕಾಗಿ, ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ, ಅನ್ಯಾಯದ ವಿರುದ್ಧ, ನಿರಂಕುಶ ಅಧಿಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುತ್ತಲೇ ಜನಾಂದೋಲನಗಳು ನಡೆದಿರುವುದನ್ನು ಕಂಡಿದ್ದೇವೆ. ಈ ಪ್ರತಿರೋಧದ ದನಿಗಳೇ ಭಾರತದ ಪ್ರಜಾತಂತ್ರ ವ್ಯವಸ್ಥೆಯ ತಳಹದಿಯನ್ನು ಸುಭದ್ರವಾಗಿರಿಸಿವೆ.

ಆದರೆ ಇಂದು ಈ ತಳಪಾಯ ಶಿಥಿಲವಾಗುತ್ತಿದೆ. ಆಳುವ ವರ್ಗಗಳು ಮತ್ತು ಈ ವರ್ಗವನ್ನು ಪ್ರತಿನಿಧಿಸುವ ರಾಜಕೀಯ ಪಕ್ಷಗಳು ಕ್ರಮೇಣ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನು ಶಿಥಿಲಗೊಳಿಸಲು ಯತ್ನಿಸುತ್ತಲೇ ಇವೆ. ಸಂವಿಧಾನದ ಚೌಕಟ್ಟಿನಲ್ಲೇ ಕಾಯ್ದೆ ಕಾನೂನುಗಳ ತಿದ್ದುಪಡಿ ಮಾಡುವ ಮೂಲಕ, ಜನಾಭಿಪ್ರಾಯವನ್ನು ಸ್ವೇಚ್ಚಾಚಾರದ ಅಧಿಕಾರಕ್ಕೆ ಪರವಾನಗಿ ಎನ್ನುವಂತೆ ಭಾವಿಸಿ, ಪ್ರಜೆಗಳ ಬದುಕಿಗೇ ಸಂಚಕಾರ ತರುವಂತಹ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರಾಳ ಶಾಸನಗಳಿಂದ ಹಿಡಿದು, ಜನಸಾಮಾನ್ಯರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುವ ಮಸೂದೆಗಳನ್ನು, ಸಂವಿಧಾನದ ನಿಯಮಗಳನ್ನೂ ಮೀರಿ ಜಾರಿಗೊಳಿಸಲಾಗುತ್ತಿದೆ. ಇಂತಹ ಒಂದು ಪ್ರಯತ್ನವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳಲ್ಲಿ ಕಾಣಬಹುದು.

ಜನವರಿ 26ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಭಾರತದ ಬಹುತೇಕ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು, ಆಳುವ ಪಕ್ಷದ ಬೆಂಬಲಿಗರು, ಪ್ರಜಾತಂತ್ರದ ಮೌಲ್ಯವನ್ನೇ ಅರಿಯದ ಪ್ರಜ್ಞಾವಂತ ನಾಗರಿಕರು ಮತ್ತು ಸಾಂಸ್ಕೃತಿಕ ರಾಷ್ಟ್ರೀಯವಾದದ ಹರಿಕಾರರು, ದೇಶದ ರಾಜಧಾನಿಯೊಳಗೆ ನುಗ್ಗಿ, ಪ್ರತಿಷ್ಠಿತ ಕೆಂಪುಕೋಟೆಯನ್ನು ಆಕ್ರಮಿಸಿ ಅಲ್ಲಿ ತಮ್ಮದೇ ಆದ ಧಾರ್ಮಿಕ ಧ್ವಜವನ್ನು ಹಾರಿಸುವ ಒಂದು ಗುಂಪಿನ ಪ್ರತಿರೋಧವನ್ನು, ಭಯೋತ್ಪಾದಕ ಕೃತ್ಯದಂತೆ ಬಿಂಬಿಸುತ್ತಿರುವುದು ಕಾಣುತ್ತಿದ್ದೇವೆ. ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ಹುಯಿಲೆಬ್ಬಿಸುತ್ತಲೇ ಕೆಂಪುಕೋಟೆಯನ್ನು ಪ್ರವೇಶಿಸಿರುವುದೇ ರಾಷ್ಟ್ರದ್ರೋಹದ ಕೃತ್ಯ ಎನ್ನುವಂತೆ ಸುದ್ದಿಮನೆಗಳು ಬಿತ್ತರಿಸುತ್ತಿವೆ. ಈ ಘಟನೆಯ ಸತ್ಯಾಸತ್ಯತೆಗಳು ಏನೇ ಇರಲಿ, ಧ್ವಜ ನೆಟ್ಟವರು ಯಾರೇ ಇರಲಿ, ಅನ್ಯಾಯಕ್ಕೊಳಗಾದ, ನೊಂದ ಮನಸುಗಳ ಪ್ರತಿರೋಧದ ಹಿಂದೆ ಸುಪ್ತ ಆಕ್ರೋಶ ಮಡುಗಟ್ಟಿರುತ್ತದೆ ಎನ್ನುವುದನ್ನು ಈ ಘಟನೆ ನಿರೂಪಿಸುತ್ತದೆ.

ದೆಹಲಿಯಲ್ಲಿ ನಡೆದ ಘಟನೆ ಸರಿಯೋ ತಪ್ಪೋ ಎನ್ನುವುದಕ್ಕಿಂತಲೂ, 60 ದಿನಗಳ ಕಾಲ ಅತ್ಯಂತ ಶಾಂತಿಯುತವಾಗಿ ನಡೆದ ಒಂದು ಜನಾಂದೋಲನ, 150ಕ್ಕೂ ಹೆಚ್ಚು ಸಾವುಗಳ ನಂತರವೂ ತಾಳ್ಮೆ ಸಂಯಮ ಕಳೆದುಕೊಳ್ಳದ ಒಂದು ಆಂದೋಲನ, ಪೊಲೀಸರ ಲಾಠಿ, ಜಲಫಿರಂಗಿ, ಅಶ್ರುವಾಯು ದಾಳಿಯನ್ನು ಸಹಿಸಿಕೊಂಡು ದೃಢಚಿತ್ತದಿಂದ ಮುನ್ನಡೆದ ಒಂದು ಹೋರಾಟ, ಚಳಿ ಮಳೆಯನ್ನೂ ಲೆಕ್ಕಿಸದೆ ಜನರಿಂದಲೇ ಹಣ ಸಂಗ್ರಹಿಸಿ ತನ್ನ ಸ್ವಂತಬಲದಿಂದ ಎರಡು ತಿಂಗಳ ಕಾಲ ನಡೆದ ಚಳುವಳಿ, ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳು ಮುಷ್ಕರ ನಿರತರ ಮುನ್ನಡಿಗೆಯನ್ನು ತಡೆಗಟ್ಟಲು ಸಿಮೆಂಟ್ ಗೋಡೆಗಳನ್ನು, ಮುಳ್ಳು ತಂತಿಗಳನ್ನು, ಜೆಸಿಬಿ ಮತ್ತು ಬೃಹತ್ ಲಾರಿಗಳನ್ನು ಬಳಸಿದರೂ ಕಂಗೆಡದೆ ನಡೆದ ಹೋರಾಟ, ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿ ಬೃಹತ್ ಕಂದಕಗಳನ್ನು ತೋಡಿ ಮುನ್ನಡಿಗೆಗೆ ಅಡ್ಡಿಪಡಿಸಿದರೂ ಧೃತಿಗೆಡದೆ ನಡೆದ ಒಂದು ಹೋರಾಟ, ಹೇಗೆ ಹಿಂಸಾತ್ಮಕವಾಗಲು ಸಾಧ್ಯ ಎನ್ನುವ ಪ್ರಶ್ನೆ ನಮ್ಮನ್ನು ಕಾಡಬೇಕಿದೆ.

ನಿಗದಿತ ಮಾರ್ಗವನ್ನು ಬಿಟ್ಟು, ಒಳಮಾರ್ಗದಿಂದ ದೆಹಲಿಯನ್ನು ಪ್ರವೇಶಿಸಿ, ಪೊಲೀಸರ ಅಡ್ಡಗೋಡೆಗಳನ್ನು ದಾಟಿ ರಾಜಧಾನಿಯನ್ನು ಪ್ರವೇಶಿಸಿ ಕೆಂಪುಕೋಟೆಯ ಮೇಲೆ ನೆರೆದ ಹೋರಾಟಗಾರರೆಲ್ಲರೂ ದೇಶದ್ರೋಹಿಗಳೇನಲ್ಲ. ಅಲ್ಲಿ ಧ್ವಜ ನೆಡುವ ಮೂಲಕ ವಿವಾದ ಮತ್ತು ಗೊಂದಲ ಸೃಷ್ಟಿಸಿದ ವ್ಯಕ್ತಿಯೂ ದೇಶದ್ರೋಹಿಯೇನಲ್ಲ. ರೈತ ಮುಷ್ಕರವನ್ನು ಶಿಥಿಲಗೊಳಿಸಲೆಂದೇ, ದುರ್ಬಲಗೊಳಿಸಲೆಂದೇ ಇಂತಹ ಪಿತೂರಿಗಳನ್ನು ನಡೆಸುವ ರಾಜಕೀಯ ಶಕ್ತಿಗಳು ನಿಜವಾದ ದೇಶದ್ರೋಹಿಗಳು ಅಲ್ಲವೇ ? ಲಕ್ಷಾಂತರ ಜನರ ಪ್ರತಿಭಟನೆಯಲ್ಲಿ ಒಂದು ಸಣ್ಣ ಗುಂಪು ಈ ರೀತಿಯ ಗಲಭೆಯಲ್ಲಿ ತೊಡಗುವುದೂ ಸಹ ಘೋರ ಅಪರಾಧವೇನಲ್ಲ. ಇದು ಸಹಜ ಪ್ರಕ್ರಿಯೆ. ಏಕೆಂದರೆ ಈ ರೈತಾಪಿ ಸಮುದಾಯ ಎರಡು ತಿಂಗಳ ಕಾಲ ತಾಳ್ಮೆಯಿಂದ ನ್ಯಾಯಕ್ಕಾಗಿ ಹೋರಾಡುತ್ತಿದೆ.

ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸಂಸದ ಸನ್ನಿ ಡಯೋಲ್‍ನ ನಿಕಟವರ್ತಿ ಮತ್ತು ಕೇಂದ್ರ ನಾಯಕರಿಗೆ ಸಮೀಪವರ್ತಿಯಾದ ದೀಪ್ ಸಿಧು ಎಂದು ಇದೀಗ ಸಾಬೀತಾಗಿದೆ. ತಾನೇ ಧ್ವಜ ಹಾರಿಸಿದ್ದಾಗಿ ದೀಪ್ ಸಿಧು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ. ಆದರೆ ರಾಷ್ಟ್ರಧ್ವಜಕ್ಕೆ ಯಾವುದೇ ಅಪಮಾನವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ಭಾರತದ ಧ್ವಜಕ್ಕಿಂತಲೂ ಕೆಳಮಟ್ಟದಲ್ಲೇ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೀಪ್ ಸಿಧು ವಿರುದ್ಧ ದೂರು ದಾಖಲಿಸದ ದೆಹಲಿ ಪೊಲೀಸರು, ಘಟನೆಗೆ ಸಂಬಂಧವೇ ಇಲ್ಲದ 22 ರೈತ ನಾಯಕರ ವಿರುದ್ಧ ಎಫ್‍ಐಆರ್ ದಾಖಲಿಸಿರುವುದು ಈ ಘಟನೆಯ ಹಿಂದಿನ ಹುನ್ನಾರವನ್ನು ತಂತಾನೇ ಬಯಲು ಮಾಡುತ್ತದೆ.

ಇಲ್ಲಿ ನಮ್ಮನ್ನು ಕಾಡಬೇಕಾದ ಪ್ರಶ್ನೆ ಎಂದರೆ, ಎರಡು ತಿಂಗಳ ಕಾಲ ಶಾಂತಿಯುತ ಮುಷ್ಕರ ನಡೆಸಿರುವ 540ಕ್ಕೂ ಹೆಚ್ಚು ರೈತ ಸಂಘಟನೆಗಳು ಗಣರಾಜ್ಯೋತ್ಸವದ ದಿನದಂದೇ ದೆಹಲಿಯಲ್ಲಿ ಎರಡು ಲಕ್ಷ ಟ್ರಾಕ್ಟರ್‍ಗಳ ಪರೇಡ್ ನಡೆಸಲು ತೀರ್ಮಾನಿಸಿದ್ದು ಏಕೆ ? ರೈತರ ಬೇಡಿಕೆ ಮೊದಲನೆ ದಿನದಿಂದಲೂ ಒಂದೇ ಆಗಿದೆ, ಮೂರೂ ಕೃಷಿ ಮಸೂದೆಗಳನ್ನು ಹಿಂಪಡೆಯುವುದು. ಇದರ ಹೊರತಾಗಿ ಮತ್ತಾವುದೇ ರಾಜೀಸೂತ್ರಕ್ಕೆ ತಾವು ಸಿದ್ಧರಾಗಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸುತ್ತಲೇ ಇವೆ. ಕೇಂದ್ರ ಸರ್ಕಾರ ಈ ಬೇಡಿಕೆಗಳಿಗೆ ಮಾತುಕತೆಗಳ ಪ್ರಸ್ತಾವದ ಮೂಲಕ ಸ್ಪಂದಿಸಿದೆಯೇ ಹೊರತು, ಮಾನವೀಯ ಸ್ಪಂದನೆಯನ್ನು ತೋರಿಯೇ ಇಲ್ಲ. 150ಕ್ಕೂ ಹೆಚ್ಚು ರೈತರ ಸಾವಿಗೆ ಒಂದು ಅನುಕಂಪದ ಮಾತನ್ನೂ ಆಡದ ಬೌದ್ಧಿಕ ನಿಷ್ಕ್ರಿಯತೆ ಮತ್ತು ಕ್ರೌರ್ಯವನ್ನು ನಾವು ಕಂಡಿದ್ದೇವೆ. ಇದು ಸಹಜವಾಗಿಯೇ ಮುಷ್ಕರ ನಿರತರಲ್ಲಿ ಆಕ್ರೋಶ ಮೂಡಿಸುತ್ತದೆ.

“ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ, ಸದ್ಯಕ್ಕೆ ಮಸೂದೆಗಳನ್ನು ಹಿಂಪಡೆಯುತ್ತೇವೆ. ಸಂಸತ್ತಿನಲ್ಲಿ ಚರ್ಚೆಗೊಳಪಡಿಸುವ ಮೂಲಕ, ಕೃಷಿ ತಜ್ಞರು ಮತ್ತು ವಿಜ್ಞಾನಿಗಳೊಡನೆ, ರೈತ ಸಂಘಟನೆಗಳೊಡನೆ ಮಾತುಕತೆ ನಡೆಸಿ ದೇಶದ ರೈತಾಪಿಗೆ ಸಮಧಾನಕರವಾಗಿರುವಂತಹ ಹೊಸ ಮಸೂದೆಯನ್ನು ಜಾರಿಗೊಳಿಸುತ್ತೇವೆ ” ಎನ್ನುವ ಮೂರು ನಾಲ್ಕು ಸಾಂತ್ವನದ ಮಾತುಗಳು ಮುಷ್ಕರವನ್ನು ಕೊನೆಗೊಳಿಸಬಹುದಿತ್ತು. ಗಣರಾಜ್ಯೋತ್ಸವದ ದಿನದಂದೇ ಎರಡು ಲಕ್ಷ ಟ್ರಾಕ್ಟರ್‍ಗಳು ದೇಶದ ರಾಜಧಾನಿಯಲ್ಲಿ ಮೆರವಣಿಗೆ ನಡೆಸುವ ಒಂದು ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಮಾನವೀಯ, ಸಕಾರಾತ್ಮಕ ಸ್ಪಂದನೆ ತಡೆಒಡ್ಡಬಹುದಿತ್ತು. ಆದರೆ ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯಗಳನ್ನೇ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಒಕ್ಕೊರಲ ಬೇಡಿಕೆಗಳನ್ನು ನಿರ್ಲಕ್ಷಿಸಿರುವುದೇ ಹೆಚ್ಚು. ಈ ಧೋರಣೆ ಸಣ್ಣ ಪುಟ್ಟ ಗಲಭೆಗಳಿಗೆ, ಅಹಿತಕರ ಘಟನೆಗಳಿಗೆ ಎಡೆಮಾಡಿಕೊಟ್ಟರೆ ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಹಬ್ಬದ ದಿನದಂದು ದೇಶವ್ಯಾಪಿ ಆಂದೋಲನವೊಂದು ರೂಪುಗೊಂಡಿರುವುದು ನಿಜಕ್ಕೂ ಅಭೂತಪೂರ್ವ ಬೆಳವಣಿಗೆ. ಭಾರತದಲ್ಲಿ ಪ್ರಜಾತಂತ್ರ ಉಳಿದಿರುವುದಕ್ಕೆ ಸಾಕ್ಷಿಯಾದಂತೆಯೇ ಈ ಜನಾಂದೋಲನ ಈ ದೇಶದ ಆಡಳಿತ ವ್ಯವಸ್ಥೆ ನಿರಂಕುಶತ್ವದೆಡೆಗೆ ಜಾರುತ್ತಿರುವುದಕ್ಕೂ ಸಾಕ್ಷಿಯಾಗಿದೆ. ಹೋರಾಟಗಾರರನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳು, ಟ್ರಾಕ್ಟರ್‍ಗಳನ್ನು ಜಪ್ತಿ ಮಾಡುವುದು, ಉತ್ತರಪ್ರದೇಶದಲ್ಲಿ ಟ್ರಾಕ್ಟರ್‍ಗಳಿಗೆ ಡೀಸೆಲ್ ಸರಬರಾಜು ಸ್ಥಗಿತಗೊಳಿಸುವುದು, ಕರ್ನಾಟಕದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಟ್ರಾಕ್ಟರುಗಳನ್ನು ತಡೆಗಟ್ಟಿರುವುದು, ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸುವ ಮೂಲಕ ಹೋರಾಟಗಾರರಲ್ಲಿ ಭೀತಿ ಹುಟ್ಟಿಸುವುದು ಈ ಎಲ್ಲ ಕ್ರಮಗಳು ನಿರಂಕುಶ ಪ್ರಭುತ್ವದ ಸೂಚನೆಗಳಾಗಿಯೇ ಕಾಣುತ್ತವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪ್ರತಿಭಟನೆಗೆ ಮುಕ್ತ ಅವಕಾಶ ನೀಡಿದ್ದರೆ, ಟ್ರಾಕ್ಟರ್ ಪರೇಡ್‍ಗೆ ಪೂರ್ಣ ಅನುಮತಿ ನೀಡಿದ್ದಲ್ಲಿ ಬಹುಶಃ ಗಲಭೆ ಸಂಭವಿಸುತ್ತಿರಲಿಲ್ಲ. ಅಥವಾ ನಿಮ್ಮ ಬೇಡಿಕೆಗಳಿಗೆ ಮನ್ನಣೆ ನೀಡುತ್ತೇವೆ, ಮುಷ್ಕರ ಹಿಂಪಡೆಯಿರಿ ಎಂದು ವಿನಂತಿಸಿದ್ದರೆ ಟ್ರಾಕ್ಟರ್ ಪರೇಡ್ ನಡೆಯುತ್ತಲೇ ಇರಲಿಲ್ಲ. ಎರಡೂ ನೆಲೆಯಲ್ಲಿ ಸರ್ಕಾರಗಳು ವಿಫಲವಾಗಿವೆ. ಬದಲಾಗಿ, ಹೋರಾಟಗಾರರಲ್ಲಿ ಭಯೋತ್ಪಾದಕರನ್ನು, ಖಲಿಸ್ತಾನಿಗಳನ್ನು, ನಗರ ನಕ್ಸಲರನ್ನು ಹುಡುಕಲು ಪ್ರಯತ್ನಿಸಿವೆ. ತಮ್ಮ ಜೀವನೋಪಾಯದ ಮೂಲ ಸೆಲೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಅನ್ನದಾತರನ್ನು ದೇಶದ್ರೋಹಿಗಳೆಂದು ಕರೆಯುವಷ್ಟು ಮಟ್ಟಿಗೆ ನಮ್ಮ ರಾಜಕೀಯ ನಾಯಕರು, ಪಕ್ಷಗಳು ಬೌದ್ಧಿಕ ದಾರಿದ್ರ್ಯ ಪ್ರದರ್ಶಿಸಿವೆ.

ಆಳುವ ವರ್ಗಗಳ ಈ ದುರ್ವರ್ತನೆಗೆ ಪೂರಕವಾಗಿ ವಿದ್ಯುನ್ಮಾನ ಮಾಧ್ಯಮಗಳು ರೈತ ಮುಷ್ಕರವನ್ನು ಬಿಂಬಿಸಿವೆ. ಜನವರಿ 25ರವರೆಗೂ ದೆಹಲಿಯಲ್ಲಿ ಮುಷ್ಕರ ಹೂಡಿದ್ದ ರೈತರ ಸಮಸ್ಯೆಗಳನ್ನಾಗಲೀ, ಬೇಡಿಕೆಗಳನ್ನಾಗಲೀ, ಮುಷ್ಕರದ ಮೂಲ ಸಮಸ್ಯೆಯನ್ನಾಗಲೀ ಕಣ್ಣೆತ್ತಿಯೂ ನೋಡದ ಮಾಧ್ಯಮಗಳು ಹಠಾತ್ತನೆ ತಮ್ಮ ರಾಷ್ಟ್ರವಾದಿ ದೇಶಪ್ರೇಮವನ್ನು ಪ್ರದರ್ಶಿಸಲು ಆರಂಭಿಸಿದ್ದು ಜನವರಿ 26ರಂದು, ಟ್ರಾಕ್ಟರ್ ಪರೇಡ್ ಆರಂಭವಾದ ನಂತರ. ಒಂದು ರೀತಿಯಲ್ಲಿ ಇದು ರೈತ ಮುಷ್ಕರದ ವಿಜಯ ಎಂದೇ ಹೇಳಬಹುದು. ಇಡೀ ದೇಶದ ಗಮನ ಸೆಳೆಯುವಂತಹ ಒಂದು ಜನಾಂದೋಲನ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹೆಚ್ಚು ಗೌರವಯುತವಾಗಿ ಕಾಣುತ್ತದೆ. ಕನ್ನಡದ ಸುದ್ದಿಮನೆಗಳ ಪಕ್ಷಪಾತಿ ಧೋರಣೆ ಮತ್ತು ಉತ್ಕಟ-ಉನ್ಮತ್ತ ರಾಷ್ಟ್ರವಾದಿ ದೇಶಪ್ರೇಮದ ಹೊರತಾಗಿಯೂ ರೈತ ಮುಷ್ಕರ ಟಿವಿ ಪರದೆಗಳ ಮೂಲಕ ಮನೆಮನೆ ತಲುಪಿರುವುದು ರೈತರ ದಿಗ್ವಿಜಯವಾಗಿ ಕಾಣುತ್ತದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿರೋಧದ ಧ್ವನಿಗಳಿಗೆ ಕಿವಿಗೊಡುವ ಸಂಯಮ ಇರುವವರು ಅಧಿಕಾರದಲ್ಲಿದ್ದರೆ ಒಂದು ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ . ನೊಂದ ಜನತೆಯ ಹಕ್ಕೊತ್ತಾಯಗಳನ್ನು, ಆಗ್ರಹಗಳನ್ನು ಆಲಿಸಿ, ಪರಿಶೀಲಿಸಿ, ಪರಾಮರ್ಶಿಸಿ, ಶಾಸನ ಸಭೆಗಳಲ್ಲಿ ಜನಪ್ರತಿನಿಧಿಗಳ ನಡುವೆ ಚರ್ಚೆಗೊಳಪಡಿಸಿ ಸಮಸ್ತ ಜನತೆಗೆ ಒಳಿತನ್ನುಂಟುಮಾಡುವ ನೀತಿಗಳನ್ನು, ಯೋಜನೆಗಳನ್ನು ಜಾರಿಗೊಳಿಸುವುದು ಒಂದು ಪ್ರಬುದ್ಧ ಸಂಸದೀಯ ಪ್ರಜಾತಂತ್ರದ ಲಕ್ಷಣ. ದುರಂತ ಎಂದರೆ ಏಳು ದಶಕಗಳ ಸ್ವತಂತ್ರ ಆಳ್ವಿಕೆಯ ನಂತರ ಭಾರತ ಈ ಪ್ರಬುದ್ಧತೆಯನ್ನು ಕಳೆದುಕೊಳ್ಳುತ್ತಿದೆ. ಸಂಸತ್ತಿನಲ್ಲಿ, ವಿಧಾನಸಭೆಯಲ್ಲಿ ಪೂರ್ಣ ಬಹುಮತ ಗಳಿಸುವುದು ಎಂದರೆ ದೇಶದ ಅತಿ ಹೆಚ್ಚಿನ ಜನಸಂಖ್ಯೆಯನ್ನು ಪ್ರತಿನಿಧಿಸುವುದು ಎಂದರ್ಥವೇ ಹೊರತು, ಸ್ವೇಚ್ಚಾನುಸಾರ ಕಾನೂನುಗಳನ್ನು ರೂಪಿಸಲು ಮುಕ್ತ ಪರವಾನಗಿ ದೊರೆತಂತಲ್ಲ. ಡಾ ಬಿ ಆರ್ ಅಂಬೇಡ್ಕರ್ ಈ ಕುರಿತು ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡುತ್ತಲೇ ಸಂವಿಧಾನ ರಚನೆಯಲ್ಲಿ ತೊಡಗುತ್ತಾರೆ.

ಆದರೆ ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸ್ಪಷ್ಟ ಬಹುಮತ ಎನ್ನುವುದು ಸ್ವೇಚ್ಚಾಚಾರದ ಪರವಾನಗಿಯೇ ಆಗಿದೆ. ಕಳೆದ ಆರು ವರ್ಷಗಳಲ್ಲಿ ಈ ಧೋರಣೆ ಸಮೂಹ ಸನ್ನಿಗೊಳಗಾದ ಬೃಹತ್ ಜನಸಮುದಾಯದ ನಡುವೆ ಸ್ವೀಕೃತಿಯನ್ನೂ ಪಡೆದುಬಿಟ್ಟಿದೆ. ಹಾಗಾಗಿಯೇ 150 ಮುಷ್ಕರ ನಿರತ ರೈತರ ಸಾವು, ಲಕ್ಷಾಂತರ ರೈತರ ಒಕ್ಕೊರಲ ದನಿ, ಬೃಹತ್ ಸಂಖ್ಯೆಯ ರೈತಾಪಿಯ ಮೇಲೆ ನಡೆಯುವ ದೌರ್ಜನ್ಯ, ರೈತರ ಬೆನ್ನ ಮೇಲೆ ಬಾಸುಂಡೆ ಬರುವಂತೆ ಬಾರಿಸುವ ಪೊಲೀಸರ ಕ್ರೌರ್ಯ ಎಲ್ಲವೂ ‘ ದೇಶದ ಅಭಿವೃದ್ಧಿಯ ’ ದೃಷ್ಟಿಯಿಂದ ಸ್ವೀಕಾರಾರ್ಹ ಎನಿಸಿಬಿಡುತ್ತವೆ. ಇದು ಹಿತವಲಯದಲ್ಲಿರುವ ಮಧ್ಯಮ ವರ್ಗಗಳನ್ನು ಕಾಡುತ್ತಿರುವ ಒಂದು ದುರ್ವ್ಯಸನ. ಈ ವ್ಯಸನವೇ ದೇಶದಲ್ಲಿ ನಿರಂಕುಶ ಆಳ್ವಿಕೆಗೆ ಸುಭದ್ರ ತಳಪಾಯವನ್ನು ನಿರ್ಮಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ಮೂರು ಲಕ್ಷ ರೈತರು ಆತ್ಮಹತ್ಯೆಗೆ ಶರಣಾದಾಗ, ಎರಡು ತಿಂಗಳ ಕಾಲ ಚಳಿ ಮಳೆ ಎನ್ನದೆ, ಕೇಳುವವರಿಲ್ಲದೆ ಲಕ್ಷಾಂತರ ರೈತರು ರಸ್ತೆಗಳಲ್ಲೇ ಕುಳಿತು ಪ್ರತಿರೋಧ ವ್ಯಕ್ತಪಡಿಸುವಾಗ, ಈ ಮುಷ್ಕರದ ನಡುವೆಯೇ 150 ರೈತರು ಮೃತಪಟ್ಟಾಗ ಈ ದೇಶಕ್ಕೆ ಅಪಮಾನವಾಗಿದೆ ಎನಿಸಬೇಕಿತ್ತು. ಇದರಲ್ಲೇ ಆಡಳಿತ ವ್ಯವಸ್ಥೆಯ ರಾಷ್ಟ್ರದ್ರೋಹದ ವರ್ತನೆ ಗೋಚರಿಸಬೇಕಿತ್ತು. ದುರಂತ ಎಂದರೆ ಈ ದೇಶದ ಒಂದು ವರ್ಗದ ಜನತೆಗೆ, ಕಾರ್ಪೋರೇಟ್ ನಿಯಂತ್ರಿತ ಮಾಧ್ಯಮಗಳಿಗೆ ಮತ್ತು ಅಧಿಕಾರ ಲಾಲಸೆಯಿಂದ ತಮ್ಮ ಸಭ್ಯತೆ, ಸಂಯಮ, ಸೌಜನ್ಯ ಮತ್ತು ಎಲ್ಲ ಮಾನವೀಯ ಮೌಲ್ಯಗಳನ್ನೂ ಕಳೆದುಕೊಂಡಿರುವ ಜನಪ್ರತಿನಿಧಿಗಳಿಗೆ ಈ ಹೋರಾಟವೇ ದೇಶದ್ರೋಹದ ನಡೆಯಂತೆ ಕಾಣುತ್ತಿದೆ. ಜನಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಾದ ಸಾಂವಿಧಾನಿಕ ಸಂಸ್ಥೆಗಳಿಗೆ ಇದು ಗಂಭೀರ ವಿಚಾರ ಎನಿಸುತ್ತಲೇ ಇಲ್ಲ.

ಈ ವಿಷಮ ಸನ್ನಿವೇಶದಲ್ಲೇ ಭಾರತದ ರೈತಾಪಿ ತನ್ನ ದಿಗ್ವಿಜಯ ಸಾಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಗಣತಂತ್ರದಿನದ ಟ್ರಾಕ್ಟರ್ ಪರೇಡ್ ಮತ್ತು ದೇಶದ ರಾಜಧಾನಿಯನ್ನೂ ಸೇರಿದಂತೆ ದೇಶವ್ಯಾಪಿಯಾಗಿ ನಡೆದ ಪ್ರಜೆಗಳ ಜನಗಣರಾಜ್ಯೋತ್ಸವದ ಪ್ರತಿರೋಧದ ನೆಲೆಗಳು ಪ್ರಜಾತಂತ್ರಕ್ಕೆ ಸಂದ ದಿಗ್ವಿಜಯವಾಗಿದೆ. ಕೆಲವು ಅಹಿತಕರ ಘಟನೆಗಳ ನಡುವೆಯೂ ರೈತ ಸಮುದಾಯ ತನ್ನ ಅಂತಿಮ ಗುರಿಗೆ ಬದ್ಧತೆ ತೋರಿ ಶಿಸ್ತು ಸಂಯಮದಿಂದ ವರ್ತಿಸಿರುವುದು, ಈ ದೇಶದ ಜನಸಾಮಾನ್ಯರಲ್ಲಿರುವ ಸಂಯಮ, ತಾಳ್ಮೆಯ ಸಂಕೇತವಾಗಿದೆ. ಹಾಗೆಯೇ ಈ ಹೋರಾಟವನ್ನು ಕ್ರೂರವಾಗಿ ಹತ್ತಿಕ್ಕುವ ಪ್ರಯತ್ನಗಳ ಮೂಲಕ ಪ್ರಭುತ್ವ ಮತ್ತು ಆಳುವ ವರ್ಗಗಳು ಬೆತ್ತಲಾಗಿವೆ. ಸಾರ್ವಭೌಮ ಪ್ರಜೆಗಳ ಹೋರಾಟಗಳನ್ನು ರಾಷ್ಟ್ರದ್ರೋಹದ ಪರಿಭಾಷೆಯಲ್ಲಿ ಅಪಮಾನಿಸುವ ಮೂಲಕ ಮಾಧ್ಯಮಗಳು ಪೂರ್ಣ ಬೆತ್ತಲೆಯಾಗಿವೆ.

ಮುಂಬರುವ ದಿನಗಳಲ್ಲಿ ನಡೆಯಬಹುದಾದ ಜನಪರ ಹೋರಾಟಗಳಿಗೆ ದೆಹಲಿಯಲ್ಲಿನ ರೈತರ ಹೋರಾಟ ಮತ್ತು ದೇಶವ್ಯಾಪಿ ನಡೆಯುತ್ತಿರುವ ಆಂದೋಲನಗಳು ಸ್ಫೂರ್ತಿದಾಯಕವಾಗುವ ಆಶಯದೊಂದಿಗೇ, ಈ ದೇಶದ ಕಾರ್ಮಿಕ ಬಂಧುಗಳು, ಗ್ರಾಮೀಣ ಬಡಜನತೆ, ಶೋಷಿತ ಸಮುದಾಯಗಳು, ಅವಕಾಶವಂಚಿತರು, ಮಹಿಳೆಯರು ಮತ್ತು ಜಾತಿ ದೌರ್ಜನ್ಯವನ್ನು ನಿತ್ಯ ಎದುರಿಸುತ್ತಿರುವ ದಲಿತ ಸಮುದಾಯಗಳು ತಮ್ಮ ಹಕ್ಕೊತ್ತಾಯಗಳೊಂದಿಗೆ ಹೋರಾಟಗಳಿಗೆ ಸಜ್ಜಾಗಬೇಕಿದೆ. ಈ ದೇಶ ನಮ್ಮದು, ಈ ಮಣ್ಣು ನಮ್ಮದು, ಸಂವಿಧಾನ ನಮ್ಮದು, ನಮಗೆ ನಾವೇ ಅರ್ಪಿಸಿಕೊಂಡಿರುವ ಸಂವಿಧಾನದ ಆಶಯಗಳೂ ನಮ್ಮವೇ ಆಗಿದೆ. ಈ ಸಂವಿಧಾನದ ರಕ್ಷಣೆಯಾದರೆ ಮಾತ್ರವೇ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ ಎನ್ನುವುದನ್ನು ಇನ್ನಾದರೂ ಮನಗಾಣಬೇಕಿದೆ. ಇತಿಹಾಸದ ಕರಾಳ ಪುಟಗಳು, ಸಮಕಾಲೀನ ಭಾರತದ ಕರಾಳ ಹಾಳೆಗಳು ನಮ್ಮ ಮುಂದಿವೆ, ಕಣ್ತೆರೆದು ನೋಡುವ ಇಚ್ಚಾಶಕ್ತಿ ನಮ್ಮೊಳಗಿದ್ದರೆ ಗೆಲುವು ನಮ್ಮದೇ. ಈ ಆಶಯದೊಂದಿಗೇ ಮುನ್ನಡೆಯಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading

Trending