ಬಹಿರಂಗ
ಪ್ರತಿರೋಧದ ದನಿಯೂ, ಪ್ರಭುತ್ವದ ನಿಷ್ಕ್ರಿಯತೆಯೂ..!
- ನಾ ದಿವಾಕರ
ಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ ಪೀಠಗಳನ್ನು ಆಕ್ರಮಿಸುವ ಆಳುವ ವರ್ಗಗಳು ಪ್ರತಿರೋಧದ ದನಿಗೆ ಕಿವಿಗೊಡದಿದ್ದರೆ ಅಂತಹ ವ್ಯವಸ್ಥೆ ಕ್ರಮೇಣ ಅರಾಜಕತೆಯತ್ತ ಸಾಗುತ್ತದೆ. ಸಾಮಾಜಿಕ ವಲಯದಲ್ಲಿ ಪ್ರತಿರೋಧಕ್ಕೆ ಅವಕಾಶವೇ ಕೊಡದ ಒಂದು ಸಮಾಜ ತನ್ನ ಅಂತಃಸತ್ವವನ್ನೇ ಕಳೆದುಕೊಂಡು ಜಡಗಟ್ಟುತ್ತದೆ. ಭಾರತೀಯ ಸಮಾಜ ತನ್ನೊಳಗಿನ ಶ್ರೇಣೀಕೃತ ಜಾತಿ ವ್ಯವಸ್ಥೆ, ಜಾತಿ ಶ್ರೇಷ್ಠತೆಯ ವ್ಯಸನ, ಜಾತಿ ಪದ್ಧತಿಯ ಅನಿಷ್ಟಗಳು, ಅಸ್ಪೃಶ್ಯತೆಯಂತಹ ಕ್ರೂರ ಮನೋಭಾವ, ಪಿತೃಪ್ರಧಾನ ಧೋರಣೆ ಇವೆಲ್ಲವನ್ನೂ ಹೊತ್ತುಕೊಂಡಿದ್ದರೂ ಇಂದಿಗೂ ಸಹ ತನ್ನ ಮೂಲ ನೆಲೆಗಳನ್ನು ಉಳಿಸಿಕೊಂಡುಬಂದಿದ್ದರೆ ಅದಕ್ಕೆ ಕಾರಣ ಈ ದೇಶದ ನೆಲದಲ್ಲಿ ಪ್ರಾಚೀನ ಕಾಲದಿಂದಲೂ ಉಗಮಿಸುತ್ತಲೇ ಇರುವ ಪ್ರತಿರೋಧದ ನೆಲೆಗಳು.
ಚಾರ್ವಾಕನಿಂದ ಅಂಬೇಡ್ಕರ್ ವರೆಗೆ ಭಾರತೀಯ ಸಮಾಜದಲ್ಲಿ, ಪ್ರಬಲ ಸಾಮ್ರಾಜ್ಯಗಳು ಅಧಿಪತ್ಯ ಸಾಧಿಸಿದ್ದ ಸಂದರ್ಭದಲ್ಲೂ ಸಹ ಪ್ರತಿರೋಧದ ನೆಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡೇ ಬಂದಿವೆ. ಇಂದು ನಾವು ಪ್ರಾಚೀನ ನಿರಂಕುಶಾಧಿಕಾರದ ನೆಲೆಗಳನ್ನು ಧ್ವಂಸಗೊಳಿಸಿ ಒಂದು ಪ್ರಜಾಸತ್ತಾತ್ಮಕ ಸಮಾಜೋ ರಾಜಕೀಯ ನೆಲೆಯಲ್ಲಿ ನೆಲೆಸಿದ್ದರೆ ಅದಕ್ಕೆ ಕಾರಣವೂ ಈ ಪ್ರತಿರೋಧದ ನೆಲೆಗಳೇ ಆಗಿವೆ. ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲೂ ಡಾ ಬಿ ಆರ್ ಅಂಬೇಡ್ಕರ್ ಹಲವಾರು ಪ್ರತಿರೋಧಗಳನ್ನು ಎದುರಿಸುತ್ತಲೇ ಅಂತಿಮ ಕರಡು ಸಿದ್ಧಪಡಿಸಿದ್ದರು. ಹಾಗೆಯೇ ಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲವಾಗಿದ್ದ ಮೇಲ್ಜಾತಿಗಳ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಲೇ, ಸಮಸಮಾಜದ ಕನಸುಗಳನ್ನು ಹೊತ್ತ ಸಮಾಜವಾದಿ, ಜಾತ್ಯತೀತ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದರು.
ಇಂದು ನಾವು 21ನೆಯ ಶತಮಾನದ ಮೂರನೆಯ ದಶಕದಲ್ಲಿದ್ದೇವೆ. 73 ವರ್ಷಗಳ ಸ್ವಾತಂತ್ರ್ಯದ ಸವಿ ಅನುಭವಿಸಿದ್ದೇವೆ. 70 ವರ್ಷಗಳ ಕಾಲ ಸಂವಿಧಾನದ ಆಶಯಗಳನ್ನು ಈಡೇರಿಸುವ ಮಾರ್ಗದಲ್ಲಿ ನಡೆದುಬಂದಿದ್ದೇವೆ. ಅಂಬೇಡ್ಕರ್ ಪ್ರತಿಪಾದಿಸಿದ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಏನೇ ಸಮಸ್ಯೆಗಳು ಎದುರಾಗಿದ್ದರೂ ಸಮರ್ಥವಾಗಿ ಪರಿಹರಿಸುತ್ತಲೇ ಭಾರತ ಒಂದು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಏಕೆಂದರೆ ಕಾಲದಿಂದ ಕಾಲಕ್ಕೆ ಸರ್ಕಾರಗಳು ಬದಲಾಗುತ್ತಿದ್ದರೂ, ಪ್ರತಿಯೊಂದು ಕಾಲಘಟ್ಟದಲ್ಲೂ ಸಾಮಾಜಿಕ ನ್ಯಾಯಕ್ಕಾಗಿ, ಆರ್ಥಿಕ ಸಮಾನತೆಗಾಗಿ, ಸಾಂಸ್ಕೃತಿಕ ಅಸ್ಮಿತೆ ಮತ್ತು ಅಸ್ತಿತ್ವಕ್ಕಾಗಿ, ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ, ಅನ್ಯಾಯದ ವಿರುದ್ಧ, ನಿರಂಕುಶ ಅಧಿಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುತ್ತಲೇ ಜನಾಂದೋಲನಗಳು ನಡೆದಿರುವುದನ್ನು ಕಂಡಿದ್ದೇವೆ. ಈ ಪ್ರತಿರೋಧದ ದನಿಗಳೇ ಭಾರತದ ಪ್ರಜಾತಂತ್ರ ವ್ಯವಸ್ಥೆಯ ತಳಹದಿಯನ್ನು ಸುಭದ್ರವಾಗಿರಿಸಿವೆ.
ಆದರೆ ಇಂದು ಈ ತಳಪಾಯ ಶಿಥಿಲವಾಗುತ್ತಿದೆ. ಆಳುವ ವರ್ಗಗಳು ಮತ್ತು ಈ ವರ್ಗವನ್ನು ಪ್ರತಿನಿಧಿಸುವ ರಾಜಕೀಯ ಪಕ್ಷಗಳು ಕ್ರಮೇಣ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನು ಶಿಥಿಲಗೊಳಿಸಲು ಯತ್ನಿಸುತ್ತಲೇ ಇವೆ. ಸಂವಿಧಾನದ ಚೌಕಟ್ಟಿನಲ್ಲೇ ಕಾಯ್ದೆ ಕಾನೂನುಗಳ ತಿದ್ದುಪಡಿ ಮಾಡುವ ಮೂಲಕ, ಜನಾಭಿಪ್ರಾಯವನ್ನು ಸ್ವೇಚ್ಚಾಚಾರದ ಅಧಿಕಾರಕ್ಕೆ ಪರವಾನಗಿ ಎನ್ನುವಂತೆ ಭಾವಿಸಿ, ಪ್ರಜೆಗಳ ಬದುಕಿಗೇ ಸಂಚಕಾರ ತರುವಂತಹ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರಾಳ ಶಾಸನಗಳಿಂದ ಹಿಡಿದು, ಜನಸಾಮಾನ್ಯರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುವ ಮಸೂದೆಗಳನ್ನು, ಸಂವಿಧಾನದ ನಿಯಮಗಳನ್ನೂ ಮೀರಿ ಜಾರಿಗೊಳಿಸಲಾಗುತ್ತಿದೆ. ಇಂತಹ ಒಂದು ಪ್ರಯತ್ನವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳಲ್ಲಿ ಕಾಣಬಹುದು.
ಜನವರಿ 26ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಭಾರತದ ಬಹುತೇಕ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು, ಆಳುವ ಪಕ್ಷದ ಬೆಂಬಲಿಗರು, ಪ್ರಜಾತಂತ್ರದ ಮೌಲ್ಯವನ್ನೇ ಅರಿಯದ ಪ್ರಜ್ಞಾವಂತ ನಾಗರಿಕರು ಮತ್ತು ಸಾಂಸ್ಕೃತಿಕ ರಾಷ್ಟ್ರೀಯವಾದದ ಹರಿಕಾರರು, ದೇಶದ ರಾಜಧಾನಿಯೊಳಗೆ ನುಗ್ಗಿ, ಪ್ರತಿಷ್ಠಿತ ಕೆಂಪುಕೋಟೆಯನ್ನು ಆಕ್ರಮಿಸಿ ಅಲ್ಲಿ ತಮ್ಮದೇ ಆದ ಧಾರ್ಮಿಕ ಧ್ವಜವನ್ನು ಹಾರಿಸುವ ಒಂದು ಗುಂಪಿನ ಪ್ರತಿರೋಧವನ್ನು, ಭಯೋತ್ಪಾದಕ ಕೃತ್ಯದಂತೆ ಬಿಂಬಿಸುತ್ತಿರುವುದು ಕಾಣುತ್ತಿದ್ದೇವೆ. ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ಹುಯಿಲೆಬ್ಬಿಸುತ್ತಲೇ ಕೆಂಪುಕೋಟೆಯನ್ನು ಪ್ರವೇಶಿಸಿರುವುದೇ ರಾಷ್ಟ್ರದ್ರೋಹದ ಕೃತ್ಯ ಎನ್ನುವಂತೆ ಸುದ್ದಿಮನೆಗಳು ಬಿತ್ತರಿಸುತ್ತಿವೆ. ಈ ಘಟನೆಯ ಸತ್ಯಾಸತ್ಯತೆಗಳು ಏನೇ ಇರಲಿ, ಧ್ವಜ ನೆಟ್ಟವರು ಯಾರೇ ಇರಲಿ, ಅನ್ಯಾಯಕ್ಕೊಳಗಾದ, ನೊಂದ ಮನಸುಗಳ ಪ್ರತಿರೋಧದ ಹಿಂದೆ ಸುಪ್ತ ಆಕ್ರೋಶ ಮಡುಗಟ್ಟಿರುತ್ತದೆ ಎನ್ನುವುದನ್ನು ಈ ಘಟನೆ ನಿರೂಪಿಸುತ್ತದೆ.
ದೆಹಲಿಯಲ್ಲಿ ನಡೆದ ಘಟನೆ ಸರಿಯೋ ತಪ್ಪೋ ಎನ್ನುವುದಕ್ಕಿಂತಲೂ, 60 ದಿನಗಳ ಕಾಲ ಅತ್ಯಂತ ಶಾಂತಿಯುತವಾಗಿ ನಡೆದ ಒಂದು ಜನಾಂದೋಲನ, 150ಕ್ಕೂ ಹೆಚ್ಚು ಸಾವುಗಳ ನಂತರವೂ ತಾಳ್ಮೆ ಸಂಯಮ ಕಳೆದುಕೊಳ್ಳದ ಒಂದು ಆಂದೋಲನ, ಪೊಲೀಸರ ಲಾಠಿ, ಜಲಫಿರಂಗಿ, ಅಶ್ರುವಾಯು ದಾಳಿಯನ್ನು ಸಹಿಸಿಕೊಂಡು ದೃಢಚಿತ್ತದಿಂದ ಮುನ್ನಡೆದ ಒಂದು ಹೋರಾಟ, ಚಳಿ ಮಳೆಯನ್ನೂ ಲೆಕ್ಕಿಸದೆ ಜನರಿಂದಲೇ ಹಣ ಸಂಗ್ರಹಿಸಿ ತನ್ನ ಸ್ವಂತಬಲದಿಂದ ಎರಡು ತಿಂಗಳ ಕಾಲ ನಡೆದ ಚಳುವಳಿ, ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳು ಮುಷ್ಕರ ನಿರತರ ಮುನ್ನಡಿಗೆಯನ್ನು ತಡೆಗಟ್ಟಲು ಸಿಮೆಂಟ್ ಗೋಡೆಗಳನ್ನು, ಮುಳ್ಳು ತಂತಿಗಳನ್ನು, ಜೆಸಿಬಿ ಮತ್ತು ಬೃಹತ್ ಲಾರಿಗಳನ್ನು ಬಳಸಿದರೂ ಕಂಗೆಡದೆ ನಡೆದ ಹೋರಾಟ, ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿ ಬೃಹತ್ ಕಂದಕಗಳನ್ನು ತೋಡಿ ಮುನ್ನಡಿಗೆಗೆ ಅಡ್ಡಿಪಡಿಸಿದರೂ ಧೃತಿಗೆಡದೆ ನಡೆದ ಒಂದು ಹೋರಾಟ, ಹೇಗೆ ಹಿಂಸಾತ್ಮಕವಾಗಲು ಸಾಧ್ಯ ಎನ್ನುವ ಪ್ರಶ್ನೆ ನಮ್ಮನ್ನು ಕಾಡಬೇಕಿದೆ.
ನಿಗದಿತ ಮಾರ್ಗವನ್ನು ಬಿಟ್ಟು, ಒಳಮಾರ್ಗದಿಂದ ದೆಹಲಿಯನ್ನು ಪ್ರವೇಶಿಸಿ, ಪೊಲೀಸರ ಅಡ್ಡಗೋಡೆಗಳನ್ನು ದಾಟಿ ರಾಜಧಾನಿಯನ್ನು ಪ್ರವೇಶಿಸಿ ಕೆಂಪುಕೋಟೆಯ ಮೇಲೆ ನೆರೆದ ಹೋರಾಟಗಾರರೆಲ್ಲರೂ ದೇಶದ್ರೋಹಿಗಳೇನಲ್ಲ. ಅಲ್ಲಿ ಧ್ವಜ ನೆಡುವ ಮೂಲಕ ವಿವಾದ ಮತ್ತು ಗೊಂದಲ ಸೃಷ್ಟಿಸಿದ ವ್ಯಕ್ತಿಯೂ ದೇಶದ್ರೋಹಿಯೇನಲ್ಲ. ರೈತ ಮುಷ್ಕರವನ್ನು ಶಿಥಿಲಗೊಳಿಸಲೆಂದೇ, ದುರ್ಬಲಗೊಳಿಸಲೆಂದೇ ಇಂತಹ ಪಿತೂರಿಗಳನ್ನು ನಡೆಸುವ ರಾಜಕೀಯ ಶಕ್ತಿಗಳು ನಿಜವಾದ ದೇಶದ್ರೋಹಿಗಳು ಅಲ್ಲವೇ ? ಲಕ್ಷಾಂತರ ಜನರ ಪ್ರತಿಭಟನೆಯಲ್ಲಿ ಒಂದು ಸಣ್ಣ ಗುಂಪು ಈ ರೀತಿಯ ಗಲಭೆಯಲ್ಲಿ ತೊಡಗುವುದೂ ಸಹ ಘೋರ ಅಪರಾಧವೇನಲ್ಲ. ಇದು ಸಹಜ ಪ್ರಕ್ರಿಯೆ. ಏಕೆಂದರೆ ಈ ರೈತಾಪಿ ಸಮುದಾಯ ಎರಡು ತಿಂಗಳ ಕಾಲ ತಾಳ್ಮೆಯಿಂದ ನ್ಯಾಯಕ್ಕಾಗಿ ಹೋರಾಡುತ್ತಿದೆ.
ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸಂಸದ ಸನ್ನಿ ಡಯೋಲ್ನ ನಿಕಟವರ್ತಿ ಮತ್ತು ಕೇಂದ್ರ ನಾಯಕರಿಗೆ ಸಮೀಪವರ್ತಿಯಾದ ದೀಪ್ ಸಿಧು ಎಂದು ಇದೀಗ ಸಾಬೀತಾಗಿದೆ. ತಾನೇ ಧ್ವಜ ಹಾರಿಸಿದ್ದಾಗಿ ದೀಪ್ ಸಿಧು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ. ಆದರೆ ರಾಷ್ಟ್ರಧ್ವಜಕ್ಕೆ ಯಾವುದೇ ಅಪಮಾನವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ಭಾರತದ ಧ್ವಜಕ್ಕಿಂತಲೂ ಕೆಳಮಟ್ಟದಲ್ಲೇ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೀಪ್ ಸಿಧು ವಿರುದ್ಧ ದೂರು ದಾಖಲಿಸದ ದೆಹಲಿ ಪೊಲೀಸರು, ಘಟನೆಗೆ ಸಂಬಂಧವೇ ಇಲ್ಲದ 22 ರೈತ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಈ ಘಟನೆಯ ಹಿಂದಿನ ಹುನ್ನಾರವನ್ನು ತಂತಾನೇ ಬಯಲು ಮಾಡುತ್ತದೆ.
ಇಲ್ಲಿ ನಮ್ಮನ್ನು ಕಾಡಬೇಕಾದ ಪ್ರಶ್ನೆ ಎಂದರೆ, ಎರಡು ತಿಂಗಳ ಕಾಲ ಶಾಂತಿಯುತ ಮುಷ್ಕರ ನಡೆಸಿರುವ 540ಕ್ಕೂ ಹೆಚ್ಚು ರೈತ ಸಂಘಟನೆಗಳು ಗಣರಾಜ್ಯೋತ್ಸವದ ದಿನದಂದೇ ದೆಹಲಿಯಲ್ಲಿ ಎರಡು ಲಕ್ಷ ಟ್ರಾಕ್ಟರ್ಗಳ ಪರೇಡ್ ನಡೆಸಲು ತೀರ್ಮಾನಿಸಿದ್ದು ಏಕೆ ? ರೈತರ ಬೇಡಿಕೆ ಮೊದಲನೆ ದಿನದಿಂದಲೂ ಒಂದೇ ಆಗಿದೆ, ಮೂರೂ ಕೃಷಿ ಮಸೂದೆಗಳನ್ನು ಹಿಂಪಡೆಯುವುದು. ಇದರ ಹೊರತಾಗಿ ಮತ್ತಾವುದೇ ರಾಜೀಸೂತ್ರಕ್ಕೆ ತಾವು ಸಿದ್ಧರಾಗಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸುತ್ತಲೇ ಇವೆ. ಕೇಂದ್ರ ಸರ್ಕಾರ ಈ ಬೇಡಿಕೆಗಳಿಗೆ ಮಾತುಕತೆಗಳ ಪ್ರಸ್ತಾವದ ಮೂಲಕ ಸ್ಪಂದಿಸಿದೆಯೇ ಹೊರತು, ಮಾನವೀಯ ಸ್ಪಂದನೆಯನ್ನು ತೋರಿಯೇ ಇಲ್ಲ. 150ಕ್ಕೂ ಹೆಚ್ಚು ರೈತರ ಸಾವಿಗೆ ಒಂದು ಅನುಕಂಪದ ಮಾತನ್ನೂ ಆಡದ ಬೌದ್ಧಿಕ ನಿಷ್ಕ್ರಿಯತೆ ಮತ್ತು ಕ್ರೌರ್ಯವನ್ನು ನಾವು ಕಂಡಿದ್ದೇವೆ. ಇದು ಸಹಜವಾಗಿಯೇ ಮುಷ್ಕರ ನಿರತರಲ್ಲಿ ಆಕ್ರೋಶ ಮೂಡಿಸುತ್ತದೆ.
“ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ, ಸದ್ಯಕ್ಕೆ ಮಸೂದೆಗಳನ್ನು ಹಿಂಪಡೆಯುತ್ತೇವೆ. ಸಂಸತ್ತಿನಲ್ಲಿ ಚರ್ಚೆಗೊಳಪಡಿಸುವ ಮೂಲಕ, ಕೃಷಿ ತಜ್ಞರು ಮತ್ತು ವಿಜ್ಞಾನಿಗಳೊಡನೆ, ರೈತ ಸಂಘಟನೆಗಳೊಡನೆ ಮಾತುಕತೆ ನಡೆಸಿ ದೇಶದ ರೈತಾಪಿಗೆ ಸಮಧಾನಕರವಾಗಿರುವಂತಹ ಹೊಸ ಮಸೂದೆಯನ್ನು ಜಾರಿಗೊಳಿಸುತ್ತೇವೆ ” ಎನ್ನುವ ಮೂರು ನಾಲ್ಕು ಸಾಂತ್ವನದ ಮಾತುಗಳು ಮುಷ್ಕರವನ್ನು ಕೊನೆಗೊಳಿಸಬಹುದಿತ್ತು. ಗಣರಾಜ್ಯೋತ್ಸವದ ದಿನದಂದೇ ಎರಡು ಲಕ್ಷ ಟ್ರಾಕ್ಟರ್ಗಳು ದೇಶದ ರಾಜಧಾನಿಯಲ್ಲಿ ಮೆರವಣಿಗೆ ನಡೆಸುವ ಒಂದು ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಮಾನವೀಯ, ಸಕಾರಾತ್ಮಕ ಸ್ಪಂದನೆ ತಡೆಒಡ್ಡಬಹುದಿತ್ತು. ಆದರೆ ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯಗಳನ್ನೇ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಒಕ್ಕೊರಲ ಬೇಡಿಕೆಗಳನ್ನು ನಿರ್ಲಕ್ಷಿಸಿರುವುದೇ ಹೆಚ್ಚು. ಈ ಧೋರಣೆ ಸಣ್ಣ ಪುಟ್ಟ ಗಲಭೆಗಳಿಗೆ, ಅಹಿತಕರ ಘಟನೆಗಳಿಗೆ ಎಡೆಮಾಡಿಕೊಟ್ಟರೆ ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಹಬ್ಬದ ದಿನದಂದು ದೇಶವ್ಯಾಪಿ ಆಂದೋಲನವೊಂದು ರೂಪುಗೊಂಡಿರುವುದು ನಿಜಕ್ಕೂ ಅಭೂತಪೂರ್ವ ಬೆಳವಣಿಗೆ. ಭಾರತದಲ್ಲಿ ಪ್ರಜಾತಂತ್ರ ಉಳಿದಿರುವುದಕ್ಕೆ ಸಾಕ್ಷಿಯಾದಂತೆಯೇ ಈ ಜನಾಂದೋಲನ ಈ ದೇಶದ ಆಡಳಿತ ವ್ಯವಸ್ಥೆ ನಿರಂಕುಶತ್ವದೆಡೆಗೆ ಜಾರುತ್ತಿರುವುದಕ್ಕೂ ಸಾಕ್ಷಿಯಾಗಿದೆ. ಹೋರಾಟಗಾರರನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳು, ಟ್ರಾಕ್ಟರ್ಗಳನ್ನು ಜಪ್ತಿ ಮಾಡುವುದು, ಉತ್ತರಪ್ರದೇಶದಲ್ಲಿ ಟ್ರಾಕ್ಟರ್ಗಳಿಗೆ ಡೀಸೆಲ್ ಸರಬರಾಜು ಸ್ಥಗಿತಗೊಳಿಸುವುದು, ಕರ್ನಾಟಕದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಟ್ರಾಕ್ಟರುಗಳನ್ನು ತಡೆಗಟ್ಟಿರುವುದು, ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸುವ ಮೂಲಕ ಹೋರಾಟಗಾರರಲ್ಲಿ ಭೀತಿ ಹುಟ್ಟಿಸುವುದು ಈ ಎಲ್ಲ ಕ್ರಮಗಳು ನಿರಂಕುಶ ಪ್ರಭುತ್ವದ ಸೂಚನೆಗಳಾಗಿಯೇ ಕಾಣುತ್ತವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪ್ರತಿಭಟನೆಗೆ ಮುಕ್ತ ಅವಕಾಶ ನೀಡಿದ್ದರೆ, ಟ್ರಾಕ್ಟರ್ ಪರೇಡ್ಗೆ ಪೂರ್ಣ ಅನುಮತಿ ನೀಡಿದ್ದಲ್ಲಿ ಬಹುಶಃ ಗಲಭೆ ಸಂಭವಿಸುತ್ತಿರಲಿಲ್ಲ. ಅಥವಾ ನಿಮ್ಮ ಬೇಡಿಕೆಗಳಿಗೆ ಮನ್ನಣೆ ನೀಡುತ್ತೇವೆ, ಮುಷ್ಕರ ಹಿಂಪಡೆಯಿರಿ ಎಂದು ವಿನಂತಿಸಿದ್ದರೆ ಟ್ರಾಕ್ಟರ್ ಪರೇಡ್ ನಡೆಯುತ್ತಲೇ ಇರಲಿಲ್ಲ. ಎರಡೂ ನೆಲೆಯಲ್ಲಿ ಸರ್ಕಾರಗಳು ವಿಫಲವಾಗಿವೆ. ಬದಲಾಗಿ, ಹೋರಾಟಗಾರರಲ್ಲಿ ಭಯೋತ್ಪಾದಕರನ್ನು, ಖಲಿಸ್ತಾನಿಗಳನ್ನು, ನಗರ ನಕ್ಸಲರನ್ನು ಹುಡುಕಲು ಪ್ರಯತ್ನಿಸಿವೆ. ತಮ್ಮ ಜೀವನೋಪಾಯದ ಮೂಲ ಸೆಲೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಅನ್ನದಾತರನ್ನು ದೇಶದ್ರೋಹಿಗಳೆಂದು ಕರೆಯುವಷ್ಟು ಮಟ್ಟಿಗೆ ನಮ್ಮ ರಾಜಕೀಯ ನಾಯಕರು, ಪಕ್ಷಗಳು ಬೌದ್ಧಿಕ ದಾರಿದ್ರ್ಯ ಪ್ರದರ್ಶಿಸಿವೆ.
ಆಳುವ ವರ್ಗಗಳ ಈ ದುರ್ವರ್ತನೆಗೆ ಪೂರಕವಾಗಿ ವಿದ್ಯುನ್ಮಾನ ಮಾಧ್ಯಮಗಳು ರೈತ ಮುಷ್ಕರವನ್ನು ಬಿಂಬಿಸಿವೆ. ಜನವರಿ 25ರವರೆಗೂ ದೆಹಲಿಯಲ್ಲಿ ಮುಷ್ಕರ ಹೂಡಿದ್ದ ರೈತರ ಸಮಸ್ಯೆಗಳನ್ನಾಗಲೀ, ಬೇಡಿಕೆಗಳನ್ನಾಗಲೀ, ಮುಷ್ಕರದ ಮೂಲ ಸಮಸ್ಯೆಯನ್ನಾಗಲೀ ಕಣ್ಣೆತ್ತಿಯೂ ನೋಡದ ಮಾಧ್ಯಮಗಳು ಹಠಾತ್ತನೆ ತಮ್ಮ ರಾಷ್ಟ್ರವಾದಿ ದೇಶಪ್ರೇಮವನ್ನು ಪ್ರದರ್ಶಿಸಲು ಆರಂಭಿಸಿದ್ದು ಜನವರಿ 26ರಂದು, ಟ್ರಾಕ್ಟರ್ ಪರೇಡ್ ಆರಂಭವಾದ ನಂತರ. ಒಂದು ರೀತಿಯಲ್ಲಿ ಇದು ರೈತ ಮುಷ್ಕರದ ವಿಜಯ ಎಂದೇ ಹೇಳಬಹುದು. ಇಡೀ ದೇಶದ ಗಮನ ಸೆಳೆಯುವಂತಹ ಒಂದು ಜನಾಂದೋಲನ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹೆಚ್ಚು ಗೌರವಯುತವಾಗಿ ಕಾಣುತ್ತದೆ. ಕನ್ನಡದ ಸುದ್ದಿಮನೆಗಳ ಪಕ್ಷಪಾತಿ ಧೋರಣೆ ಮತ್ತು ಉತ್ಕಟ-ಉನ್ಮತ್ತ ರಾಷ್ಟ್ರವಾದಿ ದೇಶಪ್ರೇಮದ ಹೊರತಾಗಿಯೂ ರೈತ ಮುಷ್ಕರ ಟಿವಿ ಪರದೆಗಳ ಮೂಲಕ ಮನೆಮನೆ ತಲುಪಿರುವುದು ರೈತರ ದಿಗ್ವಿಜಯವಾಗಿ ಕಾಣುತ್ತದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿರೋಧದ ಧ್ವನಿಗಳಿಗೆ ಕಿವಿಗೊಡುವ ಸಂಯಮ ಇರುವವರು ಅಧಿಕಾರದಲ್ಲಿದ್ದರೆ ಒಂದು ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ . ನೊಂದ ಜನತೆಯ ಹಕ್ಕೊತ್ತಾಯಗಳನ್ನು, ಆಗ್ರಹಗಳನ್ನು ಆಲಿಸಿ, ಪರಿಶೀಲಿಸಿ, ಪರಾಮರ್ಶಿಸಿ, ಶಾಸನ ಸಭೆಗಳಲ್ಲಿ ಜನಪ್ರತಿನಿಧಿಗಳ ನಡುವೆ ಚರ್ಚೆಗೊಳಪಡಿಸಿ ಸಮಸ್ತ ಜನತೆಗೆ ಒಳಿತನ್ನುಂಟುಮಾಡುವ ನೀತಿಗಳನ್ನು, ಯೋಜನೆಗಳನ್ನು ಜಾರಿಗೊಳಿಸುವುದು ಒಂದು ಪ್ರಬುದ್ಧ ಸಂಸದೀಯ ಪ್ರಜಾತಂತ್ರದ ಲಕ್ಷಣ. ದುರಂತ ಎಂದರೆ ಏಳು ದಶಕಗಳ ಸ್ವತಂತ್ರ ಆಳ್ವಿಕೆಯ ನಂತರ ಭಾರತ ಈ ಪ್ರಬುದ್ಧತೆಯನ್ನು ಕಳೆದುಕೊಳ್ಳುತ್ತಿದೆ. ಸಂಸತ್ತಿನಲ್ಲಿ, ವಿಧಾನಸಭೆಯಲ್ಲಿ ಪೂರ್ಣ ಬಹುಮತ ಗಳಿಸುವುದು ಎಂದರೆ ದೇಶದ ಅತಿ ಹೆಚ್ಚಿನ ಜನಸಂಖ್ಯೆಯನ್ನು ಪ್ರತಿನಿಧಿಸುವುದು ಎಂದರ್ಥವೇ ಹೊರತು, ಸ್ವೇಚ್ಚಾನುಸಾರ ಕಾನೂನುಗಳನ್ನು ರೂಪಿಸಲು ಮುಕ್ತ ಪರವಾನಗಿ ದೊರೆತಂತಲ್ಲ. ಡಾ ಬಿ ಆರ್ ಅಂಬೇಡ್ಕರ್ ಈ ಕುರಿತು ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡುತ್ತಲೇ ಸಂವಿಧಾನ ರಚನೆಯಲ್ಲಿ ತೊಡಗುತ್ತಾರೆ.
ಆದರೆ ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸ್ಪಷ್ಟ ಬಹುಮತ ಎನ್ನುವುದು ಸ್ವೇಚ್ಚಾಚಾರದ ಪರವಾನಗಿಯೇ ಆಗಿದೆ. ಕಳೆದ ಆರು ವರ್ಷಗಳಲ್ಲಿ ಈ ಧೋರಣೆ ಸಮೂಹ ಸನ್ನಿಗೊಳಗಾದ ಬೃಹತ್ ಜನಸಮುದಾಯದ ನಡುವೆ ಸ್ವೀಕೃತಿಯನ್ನೂ ಪಡೆದುಬಿಟ್ಟಿದೆ. ಹಾಗಾಗಿಯೇ 150 ಮುಷ್ಕರ ನಿರತ ರೈತರ ಸಾವು, ಲಕ್ಷಾಂತರ ರೈತರ ಒಕ್ಕೊರಲ ದನಿ, ಬೃಹತ್ ಸಂಖ್ಯೆಯ ರೈತಾಪಿಯ ಮೇಲೆ ನಡೆಯುವ ದೌರ್ಜನ್ಯ, ರೈತರ ಬೆನ್ನ ಮೇಲೆ ಬಾಸುಂಡೆ ಬರುವಂತೆ ಬಾರಿಸುವ ಪೊಲೀಸರ ಕ್ರೌರ್ಯ ಎಲ್ಲವೂ ‘ ದೇಶದ ಅಭಿವೃದ್ಧಿಯ ’ ದೃಷ್ಟಿಯಿಂದ ಸ್ವೀಕಾರಾರ್ಹ ಎನಿಸಿಬಿಡುತ್ತವೆ. ಇದು ಹಿತವಲಯದಲ್ಲಿರುವ ಮಧ್ಯಮ ವರ್ಗಗಳನ್ನು ಕಾಡುತ್ತಿರುವ ಒಂದು ದುರ್ವ್ಯಸನ. ಈ ವ್ಯಸನವೇ ದೇಶದಲ್ಲಿ ನಿರಂಕುಶ ಆಳ್ವಿಕೆಗೆ ಸುಭದ್ರ ತಳಪಾಯವನ್ನು ನಿರ್ಮಿಸುತ್ತಿರುವುದನ್ನು ಕಾಣುತ್ತಿದ್ದೇವೆ.
ಮೂರು ಲಕ್ಷ ರೈತರು ಆತ್ಮಹತ್ಯೆಗೆ ಶರಣಾದಾಗ, ಎರಡು ತಿಂಗಳ ಕಾಲ ಚಳಿ ಮಳೆ ಎನ್ನದೆ, ಕೇಳುವವರಿಲ್ಲದೆ ಲಕ್ಷಾಂತರ ರೈತರು ರಸ್ತೆಗಳಲ್ಲೇ ಕುಳಿತು ಪ್ರತಿರೋಧ ವ್ಯಕ್ತಪಡಿಸುವಾಗ, ಈ ಮುಷ್ಕರದ ನಡುವೆಯೇ 150 ರೈತರು ಮೃತಪಟ್ಟಾಗ ಈ ದೇಶಕ್ಕೆ ಅಪಮಾನವಾಗಿದೆ ಎನಿಸಬೇಕಿತ್ತು. ಇದರಲ್ಲೇ ಆಡಳಿತ ವ್ಯವಸ್ಥೆಯ ರಾಷ್ಟ್ರದ್ರೋಹದ ವರ್ತನೆ ಗೋಚರಿಸಬೇಕಿತ್ತು. ದುರಂತ ಎಂದರೆ ಈ ದೇಶದ ಒಂದು ವರ್ಗದ ಜನತೆಗೆ, ಕಾರ್ಪೋರೇಟ್ ನಿಯಂತ್ರಿತ ಮಾಧ್ಯಮಗಳಿಗೆ ಮತ್ತು ಅಧಿಕಾರ ಲಾಲಸೆಯಿಂದ ತಮ್ಮ ಸಭ್ಯತೆ, ಸಂಯಮ, ಸೌಜನ್ಯ ಮತ್ತು ಎಲ್ಲ ಮಾನವೀಯ ಮೌಲ್ಯಗಳನ್ನೂ ಕಳೆದುಕೊಂಡಿರುವ ಜನಪ್ರತಿನಿಧಿಗಳಿಗೆ ಈ ಹೋರಾಟವೇ ದೇಶದ್ರೋಹದ ನಡೆಯಂತೆ ಕಾಣುತ್ತಿದೆ. ಜನಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಾದ ಸಾಂವಿಧಾನಿಕ ಸಂಸ್ಥೆಗಳಿಗೆ ಇದು ಗಂಭೀರ ವಿಚಾರ ಎನಿಸುತ್ತಲೇ ಇಲ್ಲ.
ಈ ವಿಷಮ ಸನ್ನಿವೇಶದಲ್ಲೇ ಭಾರತದ ರೈತಾಪಿ ತನ್ನ ದಿಗ್ವಿಜಯ ಸಾಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಗಣತಂತ್ರದಿನದ ಟ್ರಾಕ್ಟರ್ ಪರೇಡ್ ಮತ್ತು ದೇಶದ ರಾಜಧಾನಿಯನ್ನೂ ಸೇರಿದಂತೆ ದೇಶವ್ಯಾಪಿಯಾಗಿ ನಡೆದ ಪ್ರಜೆಗಳ ಜನಗಣರಾಜ್ಯೋತ್ಸವದ ಪ್ರತಿರೋಧದ ನೆಲೆಗಳು ಪ್ರಜಾತಂತ್ರಕ್ಕೆ ಸಂದ ದಿಗ್ವಿಜಯವಾಗಿದೆ. ಕೆಲವು ಅಹಿತಕರ ಘಟನೆಗಳ ನಡುವೆಯೂ ರೈತ ಸಮುದಾಯ ತನ್ನ ಅಂತಿಮ ಗುರಿಗೆ ಬದ್ಧತೆ ತೋರಿ ಶಿಸ್ತು ಸಂಯಮದಿಂದ ವರ್ತಿಸಿರುವುದು, ಈ ದೇಶದ ಜನಸಾಮಾನ್ಯರಲ್ಲಿರುವ ಸಂಯಮ, ತಾಳ್ಮೆಯ ಸಂಕೇತವಾಗಿದೆ. ಹಾಗೆಯೇ ಈ ಹೋರಾಟವನ್ನು ಕ್ರೂರವಾಗಿ ಹತ್ತಿಕ್ಕುವ ಪ್ರಯತ್ನಗಳ ಮೂಲಕ ಪ್ರಭುತ್ವ ಮತ್ತು ಆಳುವ ವರ್ಗಗಳು ಬೆತ್ತಲಾಗಿವೆ. ಸಾರ್ವಭೌಮ ಪ್ರಜೆಗಳ ಹೋರಾಟಗಳನ್ನು ರಾಷ್ಟ್ರದ್ರೋಹದ ಪರಿಭಾಷೆಯಲ್ಲಿ ಅಪಮಾನಿಸುವ ಮೂಲಕ ಮಾಧ್ಯಮಗಳು ಪೂರ್ಣ ಬೆತ್ತಲೆಯಾಗಿವೆ.
ಮುಂಬರುವ ದಿನಗಳಲ್ಲಿ ನಡೆಯಬಹುದಾದ ಜನಪರ ಹೋರಾಟಗಳಿಗೆ ದೆಹಲಿಯಲ್ಲಿನ ರೈತರ ಹೋರಾಟ ಮತ್ತು ದೇಶವ್ಯಾಪಿ ನಡೆಯುತ್ತಿರುವ ಆಂದೋಲನಗಳು ಸ್ಫೂರ್ತಿದಾಯಕವಾಗುವ ಆಶಯದೊಂದಿಗೇ, ಈ ದೇಶದ ಕಾರ್ಮಿಕ ಬಂಧುಗಳು, ಗ್ರಾಮೀಣ ಬಡಜನತೆ, ಶೋಷಿತ ಸಮುದಾಯಗಳು, ಅವಕಾಶವಂಚಿತರು, ಮಹಿಳೆಯರು ಮತ್ತು ಜಾತಿ ದೌರ್ಜನ್ಯವನ್ನು ನಿತ್ಯ ಎದುರಿಸುತ್ತಿರುವ ದಲಿತ ಸಮುದಾಯಗಳು ತಮ್ಮ ಹಕ್ಕೊತ್ತಾಯಗಳೊಂದಿಗೆ ಹೋರಾಟಗಳಿಗೆ ಸಜ್ಜಾಗಬೇಕಿದೆ. ಈ ದೇಶ ನಮ್ಮದು, ಈ ಮಣ್ಣು ನಮ್ಮದು, ಸಂವಿಧಾನ ನಮ್ಮದು, ನಮಗೆ ನಾವೇ ಅರ್ಪಿಸಿಕೊಂಡಿರುವ ಸಂವಿಧಾನದ ಆಶಯಗಳೂ ನಮ್ಮವೇ ಆಗಿದೆ. ಈ ಸಂವಿಧಾನದ ರಕ್ಷಣೆಯಾದರೆ ಮಾತ್ರವೇ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ ಎನ್ನುವುದನ್ನು ಇನ್ನಾದರೂ ಮನಗಾಣಬೇಕಿದೆ. ಇತಿಹಾಸದ ಕರಾಳ ಪುಟಗಳು, ಸಮಕಾಲೀನ ಭಾರತದ ಕರಾಳ ಹಾಳೆಗಳು ನಮ್ಮ ಮುಂದಿವೆ, ಕಣ್ತೆರೆದು ನೋಡುವ ಇಚ್ಚಾಶಕ್ತಿ ನಮ್ಮೊಳಗಿದ್ದರೆ ಗೆಲುವು ನಮ್ಮದೇ. ಈ ಆಶಯದೊಂದಿಗೇ ಮುನ್ನಡೆಯಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


