Connect with us

ಬಹಿರಂಗ

ಪ್ರತಿರೋಧದ ದನಿಯೂ, ಪ್ರಭುತ್ವದ ನಿಷ್ಕ್ರಿಯತೆಯೂ..!

Published

on

ಸಾಂದರ್ಭಿಕ ಚಿತ್ರ
  • ನಾ ದಿವಾಕರ

ಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ ಪೀಠಗಳನ್ನು ಆಕ್ರಮಿಸುವ ಆಳುವ ವರ್ಗಗಳು ಪ್ರತಿರೋಧದ ದನಿಗೆ ಕಿವಿಗೊಡದಿದ್ದರೆ ಅಂತಹ ವ್ಯವಸ್ಥೆ ಕ್ರಮೇಣ ಅರಾಜಕತೆಯತ್ತ ಸಾಗುತ್ತದೆ. ಸಾಮಾಜಿಕ ವಲಯದಲ್ಲಿ ಪ್ರತಿರೋಧಕ್ಕೆ ಅವಕಾಶವೇ ಕೊಡದ ಒಂದು ಸಮಾಜ ತನ್ನ ಅಂತಃಸತ್ವವನ್ನೇ ಕಳೆದುಕೊಂಡು ಜಡಗಟ್ಟುತ್ತದೆ. ಭಾರತೀಯ ಸಮಾಜ ತನ್ನೊಳಗಿನ ಶ್ರೇಣೀಕೃತ ಜಾತಿ ವ್ಯವಸ್ಥೆ, ಜಾತಿ ಶ್ರೇಷ್ಠತೆಯ ವ್ಯಸನ, ಜಾತಿ ಪದ್ಧತಿಯ ಅನಿಷ್ಟಗಳು, ಅಸ್ಪೃಶ್ಯತೆಯಂತಹ ಕ್ರೂರ ಮನೋಭಾವ, ಪಿತೃಪ್ರಧಾನ ಧೋರಣೆ ಇವೆಲ್ಲವನ್ನೂ ಹೊತ್ತುಕೊಂಡಿದ್ದರೂ ಇಂದಿಗೂ ಸಹ ತನ್ನ ಮೂಲ ನೆಲೆಗಳನ್ನು ಉಳಿಸಿಕೊಂಡುಬಂದಿದ್ದರೆ ಅದಕ್ಕೆ ಕಾರಣ ಈ ದೇಶದ ನೆಲದಲ್ಲಿ ಪ್ರಾಚೀನ ಕಾಲದಿಂದಲೂ ಉಗಮಿಸುತ್ತಲೇ ಇರುವ ಪ್ರತಿರೋಧದ ನೆಲೆಗಳು.

ಚಾರ್ವಾಕನಿಂದ ಅಂಬೇಡ್ಕರ್ ವರೆಗೆ ಭಾರತೀಯ ಸಮಾಜದಲ್ಲಿ, ಪ್ರಬಲ ಸಾಮ್ರಾಜ್ಯಗಳು ಅಧಿಪತ್ಯ ಸಾಧಿಸಿದ್ದ ಸಂದರ್ಭದಲ್ಲೂ ಸಹ ಪ್ರತಿರೋಧದ ನೆಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡೇ ಬಂದಿವೆ. ಇಂದು ನಾವು ಪ್ರಾಚೀನ ನಿರಂಕುಶಾಧಿಕಾರದ ನೆಲೆಗಳನ್ನು ಧ್ವಂಸಗೊಳಿಸಿ ಒಂದು ಪ್ರಜಾಸತ್ತಾತ್ಮಕ ಸಮಾಜೋ ರಾಜಕೀಯ ನೆಲೆಯಲ್ಲಿ ನೆಲೆಸಿದ್ದರೆ ಅದಕ್ಕೆ ಕಾರಣವೂ ಈ ಪ್ರತಿರೋಧದ ನೆಲೆಗಳೇ ಆಗಿವೆ. ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲೂ ಡಾ ಬಿ ಆರ್ ಅಂಬೇಡ್ಕರ್ ಹಲವಾರು ಪ್ರತಿರೋಧಗಳನ್ನು ಎದುರಿಸುತ್ತಲೇ ಅಂತಿಮ ಕರಡು ಸಿದ್ಧಪಡಿಸಿದ್ದರು. ಹಾಗೆಯೇ ಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲವಾಗಿದ್ದ ಮೇಲ್ಜಾತಿಗಳ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಲೇ, ಸಮಸಮಾಜದ ಕನಸುಗಳನ್ನು ಹೊತ್ತ ಸಮಾಜವಾದಿ, ಜಾತ್ಯತೀತ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದರು.

ಇಂದು ನಾವು 21ನೆಯ ಶತಮಾನದ ಮೂರನೆಯ ದಶಕದಲ್ಲಿದ್ದೇವೆ. 73 ವರ್ಷಗಳ ಸ್ವಾತಂತ್ರ್ಯದ ಸವಿ ಅನುಭವಿಸಿದ್ದೇವೆ. 70 ವರ್ಷಗಳ ಕಾಲ ಸಂವಿಧಾನದ ಆಶಯಗಳನ್ನು ಈಡೇರಿಸುವ ಮಾರ್ಗದಲ್ಲಿ ನಡೆದುಬಂದಿದ್ದೇವೆ. ಅಂಬೇಡ್ಕರ್ ಪ್ರತಿಪಾದಿಸಿದ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಏನೇ ಸಮಸ್ಯೆಗಳು ಎದುರಾಗಿದ್ದರೂ ಸಮರ್ಥವಾಗಿ ಪರಿಹರಿಸುತ್ತಲೇ ಭಾರತ ಒಂದು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಏಕೆಂದರೆ ಕಾಲದಿಂದ ಕಾಲಕ್ಕೆ ಸರ್ಕಾರಗಳು ಬದಲಾಗುತ್ತಿದ್ದರೂ, ಪ್ರತಿಯೊಂದು ಕಾಲಘಟ್ಟದಲ್ಲೂ ಸಾಮಾಜಿಕ ನ್ಯಾಯಕ್ಕಾಗಿ, ಆರ್ಥಿಕ ಸಮಾನತೆಗಾಗಿ, ಸಾಂಸ್ಕೃತಿಕ ಅಸ್ಮಿತೆ ಮತ್ತು ಅಸ್ತಿತ್ವಕ್ಕಾಗಿ, ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ, ಅನ್ಯಾಯದ ವಿರುದ್ಧ, ನಿರಂಕುಶ ಅಧಿಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುತ್ತಲೇ ಜನಾಂದೋಲನಗಳು ನಡೆದಿರುವುದನ್ನು ಕಂಡಿದ್ದೇವೆ. ಈ ಪ್ರತಿರೋಧದ ದನಿಗಳೇ ಭಾರತದ ಪ್ರಜಾತಂತ್ರ ವ್ಯವಸ್ಥೆಯ ತಳಹದಿಯನ್ನು ಸುಭದ್ರವಾಗಿರಿಸಿವೆ.

ಆದರೆ ಇಂದು ಈ ತಳಪಾಯ ಶಿಥಿಲವಾಗುತ್ತಿದೆ. ಆಳುವ ವರ್ಗಗಳು ಮತ್ತು ಈ ವರ್ಗವನ್ನು ಪ್ರತಿನಿಧಿಸುವ ರಾಜಕೀಯ ಪಕ್ಷಗಳು ಕ್ರಮೇಣ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನು ಶಿಥಿಲಗೊಳಿಸಲು ಯತ್ನಿಸುತ್ತಲೇ ಇವೆ. ಸಂವಿಧಾನದ ಚೌಕಟ್ಟಿನಲ್ಲೇ ಕಾಯ್ದೆ ಕಾನೂನುಗಳ ತಿದ್ದುಪಡಿ ಮಾಡುವ ಮೂಲಕ, ಜನಾಭಿಪ್ರಾಯವನ್ನು ಸ್ವೇಚ್ಚಾಚಾರದ ಅಧಿಕಾರಕ್ಕೆ ಪರವಾನಗಿ ಎನ್ನುವಂತೆ ಭಾವಿಸಿ, ಪ್ರಜೆಗಳ ಬದುಕಿಗೇ ಸಂಚಕಾರ ತರುವಂತಹ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರಾಳ ಶಾಸನಗಳಿಂದ ಹಿಡಿದು, ಜನಸಾಮಾನ್ಯರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುವ ಮಸೂದೆಗಳನ್ನು, ಸಂವಿಧಾನದ ನಿಯಮಗಳನ್ನೂ ಮೀರಿ ಜಾರಿಗೊಳಿಸಲಾಗುತ್ತಿದೆ. ಇಂತಹ ಒಂದು ಪ್ರಯತ್ನವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳಲ್ಲಿ ಕಾಣಬಹುದು.

ಜನವರಿ 26ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಭಾರತದ ಬಹುತೇಕ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು, ಆಳುವ ಪಕ್ಷದ ಬೆಂಬಲಿಗರು, ಪ್ರಜಾತಂತ್ರದ ಮೌಲ್ಯವನ್ನೇ ಅರಿಯದ ಪ್ರಜ್ಞಾವಂತ ನಾಗರಿಕರು ಮತ್ತು ಸಾಂಸ್ಕೃತಿಕ ರಾಷ್ಟ್ರೀಯವಾದದ ಹರಿಕಾರರು, ದೇಶದ ರಾಜಧಾನಿಯೊಳಗೆ ನುಗ್ಗಿ, ಪ್ರತಿಷ್ಠಿತ ಕೆಂಪುಕೋಟೆಯನ್ನು ಆಕ್ರಮಿಸಿ ಅಲ್ಲಿ ತಮ್ಮದೇ ಆದ ಧಾರ್ಮಿಕ ಧ್ವಜವನ್ನು ಹಾರಿಸುವ ಒಂದು ಗುಂಪಿನ ಪ್ರತಿರೋಧವನ್ನು, ಭಯೋತ್ಪಾದಕ ಕೃತ್ಯದಂತೆ ಬಿಂಬಿಸುತ್ತಿರುವುದು ಕಾಣುತ್ತಿದ್ದೇವೆ. ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ಹುಯಿಲೆಬ್ಬಿಸುತ್ತಲೇ ಕೆಂಪುಕೋಟೆಯನ್ನು ಪ್ರವೇಶಿಸಿರುವುದೇ ರಾಷ್ಟ್ರದ್ರೋಹದ ಕೃತ್ಯ ಎನ್ನುವಂತೆ ಸುದ್ದಿಮನೆಗಳು ಬಿತ್ತರಿಸುತ್ತಿವೆ. ಈ ಘಟನೆಯ ಸತ್ಯಾಸತ್ಯತೆಗಳು ಏನೇ ಇರಲಿ, ಧ್ವಜ ನೆಟ್ಟವರು ಯಾರೇ ಇರಲಿ, ಅನ್ಯಾಯಕ್ಕೊಳಗಾದ, ನೊಂದ ಮನಸುಗಳ ಪ್ರತಿರೋಧದ ಹಿಂದೆ ಸುಪ್ತ ಆಕ್ರೋಶ ಮಡುಗಟ್ಟಿರುತ್ತದೆ ಎನ್ನುವುದನ್ನು ಈ ಘಟನೆ ನಿರೂಪಿಸುತ್ತದೆ.

ದೆಹಲಿಯಲ್ಲಿ ನಡೆದ ಘಟನೆ ಸರಿಯೋ ತಪ್ಪೋ ಎನ್ನುವುದಕ್ಕಿಂತಲೂ, 60 ದಿನಗಳ ಕಾಲ ಅತ್ಯಂತ ಶಾಂತಿಯುತವಾಗಿ ನಡೆದ ಒಂದು ಜನಾಂದೋಲನ, 150ಕ್ಕೂ ಹೆಚ್ಚು ಸಾವುಗಳ ನಂತರವೂ ತಾಳ್ಮೆ ಸಂಯಮ ಕಳೆದುಕೊಳ್ಳದ ಒಂದು ಆಂದೋಲನ, ಪೊಲೀಸರ ಲಾಠಿ, ಜಲಫಿರಂಗಿ, ಅಶ್ರುವಾಯು ದಾಳಿಯನ್ನು ಸಹಿಸಿಕೊಂಡು ದೃಢಚಿತ್ತದಿಂದ ಮುನ್ನಡೆದ ಒಂದು ಹೋರಾಟ, ಚಳಿ ಮಳೆಯನ್ನೂ ಲೆಕ್ಕಿಸದೆ ಜನರಿಂದಲೇ ಹಣ ಸಂಗ್ರಹಿಸಿ ತನ್ನ ಸ್ವಂತಬಲದಿಂದ ಎರಡು ತಿಂಗಳ ಕಾಲ ನಡೆದ ಚಳುವಳಿ, ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳು ಮುಷ್ಕರ ನಿರತರ ಮುನ್ನಡಿಗೆಯನ್ನು ತಡೆಗಟ್ಟಲು ಸಿಮೆಂಟ್ ಗೋಡೆಗಳನ್ನು, ಮುಳ್ಳು ತಂತಿಗಳನ್ನು, ಜೆಸಿಬಿ ಮತ್ತು ಬೃಹತ್ ಲಾರಿಗಳನ್ನು ಬಳಸಿದರೂ ಕಂಗೆಡದೆ ನಡೆದ ಹೋರಾಟ, ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿ ಬೃಹತ್ ಕಂದಕಗಳನ್ನು ತೋಡಿ ಮುನ್ನಡಿಗೆಗೆ ಅಡ್ಡಿಪಡಿಸಿದರೂ ಧೃತಿಗೆಡದೆ ನಡೆದ ಒಂದು ಹೋರಾಟ, ಹೇಗೆ ಹಿಂಸಾತ್ಮಕವಾಗಲು ಸಾಧ್ಯ ಎನ್ನುವ ಪ್ರಶ್ನೆ ನಮ್ಮನ್ನು ಕಾಡಬೇಕಿದೆ.

ನಿಗದಿತ ಮಾರ್ಗವನ್ನು ಬಿಟ್ಟು, ಒಳಮಾರ್ಗದಿಂದ ದೆಹಲಿಯನ್ನು ಪ್ರವೇಶಿಸಿ, ಪೊಲೀಸರ ಅಡ್ಡಗೋಡೆಗಳನ್ನು ದಾಟಿ ರಾಜಧಾನಿಯನ್ನು ಪ್ರವೇಶಿಸಿ ಕೆಂಪುಕೋಟೆಯ ಮೇಲೆ ನೆರೆದ ಹೋರಾಟಗಾರರೆಲ್ಲರೂ ದೇಶದ್ರೋಹಿಗಳೇನಲ್ಲ. ಅಲ್ಲಿ ಧ್ವಜ ನೆಡುವ ಮೂಲಕ ವಿವಾದ ಮತ್ತು ಗೊಂದಲ ಸೃಷ್ಟಿಸಿದ ವ್ಯಕ್ತಿಯೂ ದೇಶದ್ರೋಹಿಯೇನಲ್ಲ. ರೈತ ಮುಷ್ಕರವನ್ನು ಶಿಥಿಲಗೊಳಿಸಲೆಂದೇ, ದುರ್ಬಲಗೊಳಿಸಲೆಂದೇ ಇಂತಹ ಪಿತೂರಿಗಳನ್ನು ನಡೆಸುವ ರಾಜಕೀಯ ಶಕ್ತಿಗಳು ನಿಜವಾದ ದೇಶದ್ರೋಹಿಗಳು ಅಲ್ಲವೇ ? ಲಕ್ಷಾಂತರ ಜನರ ಪ್ರತಿಭಟನೆಯಲ್ಲಿ ಒಂದು ಸಣ್ಣ ಗುಂಪು ಈ ರೀತಿಯ ಗಲಭೆಯಲ್ಲಿ ತೊಡಗುವುದೂ ಸಹ ಘೋರ ಅಪರಾಧವೇನಲ್ಲ. ಇದು ಸಹಜ ಪ್ರಕ್ರಿಯೆ. ಏಕೆಂದರೆ ಈ ರೈತಾಪಿ ಸಮುದಾಯ ಎರಡು ತಿಂಗಳ ಕಾಲ ತಾಳ್ಮೆಯಿಂದ ನ್ಯಾಯಕ್ಕಾಗಿ ಹೋರಾಡುತ್ತಿದೆ.

ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸಂಸದ ಸನ್ನಿ ಡಯೋಲ್‍ನ ನಿಕಟವರ್ತಿ ಮತ್ತು ಕೇಂದ್ರ ನಾಯಕರಿಗೆ ಸಮೀಪವರ್ತಿಯಾದ ದೀಪ್ ಸಿಧು ಎಂದು ಇದೀಗ ಸಾಬೀತಾಗಿದೆ. ತಾನೇ ಧ್ವಜ ಹಾರಿಸಿದ್ದಾಗಿ ದೀಪ್ ಸಿಧು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ. ಆದರೆ ರಾಷ್ಟ್ರಧ್ವಜಕ್ಕೆ ಯಾವುದೇ ಅಪಮಾನವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ಭಾರತದ ಧ್ವಜಕ್ಕಿಂತಲೂ ಕೆಳಮಟ್ಟದಲ್ಲೇ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೀಪ್ ಸಿಧು ವಿರುದ್ಧ ದೂರು ದಾಖಲಿಸದ ದೆಹಲಿ ಪೊಲೀಸರು, ಘಟನೆಗೆ ಸಂಬಂಧವೇ ಇಲ್ಲದ 22 ರೈತ ನಾಯಕರ ವಿರುದ್ಧ ಎಫ್‍ಐಆರ್ ದಾಖಲಿಸಿರುವುದು ಈ ಘಟನೆಯ ಹಿಂದಿನ ಹುನ್ನಾರವನ್ನು ತಂತಾನೇ ಬಯಲು ಮಾಡುತ್ತದೆ.

ಇಲ್ಲಿ ನಮ್ಮನ್ನು ಕಾಡಬೇಕಾದ ಪ್ರಶ್ನೆ ಎಂದರೆ, ಎರಡು ತಿಂಗಳ ಕಾಲ ಶಾಂತಿಯುತ ಮುಷ್ಕರ ನಡೆಸಿರುವ 540ಕ್ಕೂ ಹೆಚ್ಚು ರೈತ ಸಂಘಟನೆಗಳು ಗಣರಾಜ್ಯೋತ್ಸವದ ದಿನದಂದೇ ದೆಹಲಿಯಲ್ಲಿ ಎರಡು ಲಕ್ಷ ಟ್ರಾಕ್ಟರ್‍ಗಳ ಪರೇಡ್ ನಡೆಸಲು ತೀರ್ಮಾನಿಸಿದ್ದು ಏಕೆ ? ರೈತರ ಬೇಡಿಕೆ ಮೊದಲನೆ ದಿನದಿಂದಲೂ ಒಂದೇ ಆಗಿದೆ, ಮೂರೂ ಕೃಷಿ ಮಸೂದೆಗಳನ್ನು ಹಿಂಪಡೆಯುವುದು. ಇದರ ಹೊರತಾಗಿ ಮತ್ತಾವುದೇ ರಾಜೀಸೂತ್ರಕ್ಕೆ ತಾವು ಸಿದ್ಧರಾಗಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸುತ್ತಲೇ ಇವೆ. ಕೇಂದ್ರ ಸರ್ಕಾರ ಈ ಬೇಡಿಕೆಗಳಿಗೆ ಮಾತುಕತೆಗಳ ಪ್ರಸ್ತಾವದ ಮೂಲಕ ಸ್ಪಂದಿಸಿದೆಯೇ ಹೊರತು, ಮಾನವೀಯ ಸ್ಪಂದನೆಯನ್ನು ತೋರಿಯೇ ಇಲ್ಲ. 150ಕ್ಕೂ ಹೆಚ್ಚು ರೈತರ ಸಾವಿಗೆ ಒಂದು ಅನುಕಂಪದ ಮಾತನ್ನೂ ಆಡದ ಬೌದ್ಧಿಕ ನಿಷ್ಕ್ರಿಯತೆ ಮತ್ತು ಕ್ರೌರ್ಯವನ್ನು ನಾವು ಕಂಡಿದ್ದೇವೆ. ಇದು ಸಹಜವಾಗಿಯೇ ಮುಷ್ಕರ ನಿರತರಲ್ಲಿ ಆಕ್ರೋಶ ಮೂಡಿಸುತ್ತದೆ.

“ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ, ಸದ್ಯಕ್ಕೆ ಮಸೂದೆಗಳನ್ನು ಹಿಂಪಡೆಯುತ್ತೇವೆ. ಸಂಸತ್ತಿನಲ್ಲಿ ಚರ್ಚೆಗೊಳಪಡಿಸುವ ಮೂಲಕ, ಕೃಷಿ ತಜ್ಞರು ಮತ್ತು ವಿಜ್ಞಾನಿಗಳೊಡನೆ, ರೈತ ಸಂಘಟನೆಗಳೊಡನೆ ಮಾತುಕತೆ ನಡೆಸಿ ದೇಶದ ರೈತಾಪಿಗೆ ಸಮಧಾನಕರವಾಗಿರುವಂತಹ ಹೊಸ ಮಸೂದೆಯನ್ನು ಜಾರಿಗೊಳಿಸುತ್ತೇವೆ ” ಎನ್ನುವ ಮೂರು ನಾಲ್ಕು ಸಾಂತ್ವನದ ಮಾತುಗಳು ಮುಷ್ಕರವನ್ನು ಕೊನೆಗೊಳಿಸಬಹುದಿತ್ತು. ಗಣರಾಜ್ಯೋತ್ಸವದ ದಿನದಂದೇ ಎರಡು ಲಕ್ಷ ಟ್ರಾಕ್ಟರ್‍ಗಳು ದೇಶದ ರಾಜಧಾನಿಯಲ್ಲಿ ಮೆರವಣಿಗೆ ನಡೆಸುವ ಒಂದು ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಮಾನವೀಯ, ಸಕಾರಾತ್ಮಕ ಸ್ಪಂದನೆ ತಡೆಒಡ್ಡಬಹುದಿತ್ತು. ಆದರೆ ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯಗಳನ್ನೇ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಒಕ್ಕೊರಲ ಬೇಡಿಕೆಗಳನ್ನು ನಿರ್ಲಕ್ಷಿಸಿರುವುದೇ ಹೆಚ್ಚು. ಈ ಧೋರಣೆ ಸಣ್ಣ ಪುಟ್ಟ ಗಲಭೆಗಳಿಗೆ, ಅಹಿತಕರ ಘಟನೆಗಳಿಗೆ ಎಡೆಮಾಡಿಕೊಟ್ಟರೆ ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಹಬ್ಬದ ದಿನದಂದು ದೇಶವ್ಯಾಪಿ ಆಂದೋಲನವೊಂದು ರೂಪುಗೊಂಡಿರುವುದು ನಿಜಕ್ಕೂ ಅಭೂತಪೂರ್ವ ಬೆಳವಣಿಗೆ. ಭಾರತದಲ್ಲಿ ಪ್ರಜಾತಂತ್ರ ಉಳಿದಿರುವುದಕ್ಕೆ ಸಾಕ್ಷಿಯಾದಂತೆಯೇ ಈ ಜನಾಂದೋಲನ ಈ ದೇಶದ ಆಡಳಿತ ವ್ಯವಸ್ಥೆ ನಿರಂಕುಶತ್ವದೆಡೆಗೆ ಜಾರುತ್ತಿರುವುದಕ್ಕೂ ಸಾಕ್ಷಿಯಾಗಿದೆ. ಹೋರಾಟಗಾರರನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳು, ಟ್ರಾಕ್ಟರ್‍ಗಳನ್ನು ಜಪ್ತಿ ಮಾಡುವುದು, ಉತ್ತರಪ್ರದೇಶದಲ್ಲಿ ಟ್ರಾಕ್ಟರ್‍ಗಳಿಗೆ ಡೀಸೆಲ್ ಸರಬರಾಜು ಸ್ಥಗಿತಗೊಳಿಸುವುದು, ಕರ್ನಾಟಕದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಟ್ರಾಕ್ಟರುಗಳನ್ನು ತಡೆಗಟ್ಟಿರುವುದು, ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸುವ ಮೂಲಕ ಹೋರಾಟಗಾರರಲ್ಲಿ ಭೀತಿ ಹುಟ್ಟಿಸುವುದು ಈ ಎಲ್ಲ ಕ್ರಮಗಳು ನಿರಂಕುಶ ಪ್ರಭುತ್ವದ ಸೂಚನೆಗಳಾಗಿಯೇ ಕಾಣುತ್ತವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪ್ರತಿಭಟನೆಗೆ ಮುಕ್ತ ಅವಕಾಶ ನೀಡಿದ್ದರೆ, ಟ್ರಾಕ್ಟರ್ ಪರೇಡ್‍ಗೆ ಪೂರ್ಣ ಅನುಮತಿ ನೀಡಿದ್ದಲ್ಲಿ ಬಹುಶಃ ಗಲಭೆ ಸಂಭವಿಸುತ್ತಿರಲಿಲ್ಲ. ಅಥವಾ ನಿಮ್ಮ ಬೇಡಿಕೆಗಳಿಗೆ ಮನ್ನಣೆ ನೀಡುತ್ತೇವೆ, ಮುಷ್ಕರ ಹಿಂಪಡೆಯಿರಿ ಎಂದು ವಿನಂತಿಸಿದ್ದರೆ ಟ್ರಾಕ್ಟರ್ ಪರೇಡ್ ನಡೆಯುತ್ತಲೇ ಇರಲಿಲ್ಲ. ಎರಡೂ ನೆಲೆಯಲ್ಲಿ ಸರ್ಕಾರಗಳು ವಿಫಲವಾಗಿವೆ. ಬದಲಾಗಿ, ಹೋರಾಟಗಾರರಲ್ಲಿ ಭಯೋತ್ಪಾದಕರನ್ನು, ಖಲಿಸ್ತಾನಿಗಳನ್ನು, ನಗರ ನಕ್ಸಲರನ್ನು ಹುಡುಕಲು ಪ್ರಯತ್ನಿಸಿವೆ. ತಮ್ಮ ಜೀವನೋಪಾಯದ ಮೂಲ ಸೆಲೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಅನ್ನದಾತರನ್ನು ದೇಶದ್ರೋಹಿಗಳೆಂದು ಕರೆಯುವಷ್ಟು ಮಟ್ಟಿಗೆ ನಮ್ಮ ರಾಜಕೀಯ ನಾಯಕರು, ಪಕ್ಷಗಳು ಬೌದ್ಧಿಕ ದಾರಿದ್ರ್ಯ ಪ್ರದರ್ಶಿಸಿವೆ.

ಆಳುವ ವರ್ಗಗಳ ಈ ದುರ್ವರ್ತನೆಗೆ ಪೂರಕವಾಗಿ ವಿದ್ಯುನ್ಮಾನ ಮಾಧ್ಯಮಗಳು ರೈತ ಮುಷ್ಕರವನ್ನು ಬಿಂಬಿಸಿವೆ. ಜನವರಿ 25ರವರೆಗೂ ದೆಹಲಿಯಲ್ಲಿ ಮುಷ್ಕರ ಹೂಡಿದ್ದ ರೈತರ ಸಮಸ್ಯೆಗಳನ್ನಾಗಲೀ, ಬೇಡಿಕೆಗಳನ್ನಾಗಲೀ, ಮುಷ್ಕರದ ಮೂಲ ಸಮಸ್ಯೆಯನ್ನಾಗಲೀ ಕಣ್ಣೆತ್ತಿಯೂ ನೋಡದ ಮಾಧ್ಯಮಗಳು ಹಠಾತ್ತನೆ ತಮ್ಮ ರಾಷ್ಟ್ರವಾದಿ ದೇಶಪ್ರೇಮವನ್ನು ಪ್ರದರ್ಶಿಸಲು ಆರಂಭಿಸಿದ್ದು ಜನವರಿ 26ರಂದು, ಟ್ರಾಕ್ಟರ್ ಪರೇಡ್ ಆರಂಭವಾದ ನಂತರ. ಒಂದು ರೀತಿಯಲ್ಲಿ ಇದು ರೈತ ಮುಷ್ಕರದ ವಿಜಯ ಎಂದೇ ಹೇಳಬಹುದು. ಇಡೀ ದೇಶದ ಗಮನ ಸೆಳೆಯುವಂತಹ ಒಂದು ಜನಾಂದೋಲನ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹೆಚ್ಚು ಗೌರವಯುತವಾಗಿ ಕಾಣುತ್ತದೆ. ಕನ್ನಡದ ಸುದ್ದಿಮನೆಗಳ ಪಕ್ಷಪಾತಿ ಧೋರಣೆ ಮತ್ತು ಉತ್ಕಟ-ಉನ್ಮತ್ತ ರಾಷ್ಟ್ರವಾದಿ ದೇಶಪ್ರೇಮದ ಹೊರತಾಗಿಯೂ ರೈತ ಮುಷ್ಕರ ಟಿವಿ ಪರದೆಗಳ ಮೂಲಕ ಮನೆಮನೆ ತಲುಪಿರುವುದು ರೈತರ ದಿಗ್ವಿಜಯವಾಗಿ ಕಾಣುತ್ತದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿರೋಧದ ಧ್ವನಿಗಳಿಗೆ ಕಿವಿಗೊಡುವ ಸಂಯಮ ಇರುವವರು ಅಧಿಕಾರದಲ್ಲಿದ್ದರೆ ಒಂದು ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ . ನೊಂದ ಜನತೆಯ ಹಕ್ಕೊತ್ತಾಯಗಳನ್ನು, ಆಗ್ರಹಗಳನ್ನು ಆಲಿಸಿ, ಪರಿಶೀಲಿಸಿ, ಪರಾಮರ್ಶಿಸಿ, ಶಾಸನ ಸಭೆಗಳಲ್ಲಿ ಜನಪ್ರತಿನಿಧಿಗಳ ನಡುವೆ ಚರ್ಚೆಗೊಳಪಡಿಸಿ ಸಮಸ್ತ ಜನತೆಗೆ ಒಳಿತನ್ನುಂಟುಮಾಡುವ ನೀತಿಗಳನ್ನು, ಯೋಜನೆಗಳನ್ನು ಜಾರಿಗೊಳಿಸುವುದು ಒಂದು ಪ್ರಬುದ್ಧ ಸಂಸದೀಯ ಪ್ರಜಾತಂತ್ರದ ಲಕ್ಷಣ. ದುರಂತ ಎಂದರೆ ಏಳು ದಶಕಗಳ ಸ್ವತಂತ್ರ ಆಳ್ವಿಕೆಯ ನಂತರ ಭಾರತ ಈ ಪ್ರಬುದ್ಧತೆಯನ್ನು ಕಳೆದುಕೊಳ್ಳುತ್ತಿದೆ. ಸಂಸತ್ತಿನಲ್ಲಿ, ವಿಧಾನಸಭೆಯಲ್ಲಿ ಪೂರ್ಣ ಬಹುಮತ ಗಳಿಸುವುದು ಎಂದರೆ ದೇಶದ ಅತಿ ಹೆಚ್ಚಿನ ಜನಸಂಖ್ಯೆಯನ್ನು ಪ್ರತಿನಿಧಿಸುವುದು ಎಂದರ್ಥವೇ ಹೊರತು, ಸ್ವೇಚ್ಚಾನುಸಾರ ಕಾನೂನುಗಳನ್ನು ರೂಪಿಸಲು ಮುಕ್ತ ಪರವಾನಗಿ ದೊರೆತಂತಲ್ಲ. ಡಾ ಬಿ ಆರ್ ಅಂಬೇಡ್ಕರ್ ಈ ಕುರಿತು ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡುತ್ತಲೇ ಸಂವಿಧಾನ ರಚನೆಯಲ್ಲಿ ತೊಡಗುತ್ತಾರೆ.

ಆದರೆ ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸ್ಪಷ್ಟ ಬಹುಮತ ಎನ್ನುವುದು ಸ್ವೇಚ್ಚಾಚಾರದ ಪರವಾನಗಿಯೇ ಆಗಿದೆ. ಕಳೆದ ಆರು ವರ್ಷಗಳಲ್ಲಿ ಈ ಧೋರಣೆ ಸಮೂಹ ಸನ್ನಿಗೊಳಗಾದ ಬೃಹತ್ ಜನಸಮುದಾಯದ ನಡುವೆ ಸ್ವೀಕೃತಿಯನ್ನೂ ಪಡೆದುಬಿಟ್ಟಿದೆ. ಹಾಗಾಗಿಯೇ 150 ಮುಷ್ಕರ ನಿರತ ರೈತರ ಸಾವು, ಲಕ್ಷಾಂತರ ರೈತರ ಒಕ್ಕೊರಲ ದನಿ, ಬೃಹತ್ ಸಂಖ್ಯೆಯ ರೈತಾಪಿಯ ಮೇಲೆ ನಡೆಯುವ ದೌರ್ಜನ್ಯ, ರೈತರ ಬೆನ್ನ ಮೇಲೆ ಬಾಸುಂಡೆ ಬರುವಂತೆ ಬಾರಿಸುವ ಪೊಲೀಸರ ಕ್ರೌರ್ಯ ಎಲ್ಲವೂ ‘ ದೇಶದ ಅಭಿವೃದ್ಧಿಯ ’ ದೃಷ್ಟಿಯಿಂದ ಸ್ವೀಕಾರಾರ್ಹ ಎನಿಸಿಬಿಡುತ್ತವೆ. ಇದು ಹಿತವಲಯದಲ್ಲಿರುವ ಮಧ್ಯಮ ವರ್ಗಗಳನ್ನು ಕಾಡುತ್ತಿರುವ ಒಂದು ದುರ್ವ್ಯಸನ. ಈ ವ್ಯಸನವೇ ದೇಶದಲ್ಲಿ ನಿರಂಕುಶ ಆಳ್ವಿಕೆಗೆ ಸುಭದ್ರ ತಳಪಾಯವನ್ನು ನಿರ್ಮಿಸುತ್ತಿರುವುದನ್ನು ಕಾಣುತ್ತಿದ್ದೇವೆ.

ಮೂರು ಲಕ್ಷ ರೈತರು ಆತ್ಮಹತ್ಯೆಗೆ ಶರಣಾದಾಗ, ಎರಡು ತಿಂಗಳ ಕಾಲ ಚಳಿ ಮಳೆ ಎನ್ನದೆ, ಕೇಳುವವರಿಲ್ಲದೆ ಲಕ್ಷಾಂತರ ರೈತರು ರಸ್ತೆಗಳಲ್ಲೇ ಕುಳಿತು ಪ್ರತಿರೋಧ ವ್ಯಕ್ತಪಡಿಸುವಾಗ, ಈ ಮುಷ್ಕರದ ನಡುವೆಯೇ 150 ರೈತರು ಮೃತಪಟ್ಟಾಗ ಈ ದೇಶಕ್ಕೆ ಅಪಮಾನವಾಗಿದೆ ಎನಿಸಬೇಕಿತ್ತು. ಇದರಲ್ಲೇ ಆಡಳಿತ ವ್ಯವಸ್ಥೆಯ ರಾಷ್ಟ್ರದ್ರೋಹದ ವರ್ತನೆ ಗೋಚರಿಸಬೇಕಿತ್ತು. ದುರಂತ ಎಂದರೆ ಈ ದೇಶದ ಒಂದು ವರ್ಗದ ಜನತೆಗೆ, ಕಾರ್ಪೋರೇಟ್ ನಿಯಂತ್ರಿತ ಮಾಧ್ಯಮಗಳಿಗೆ ಮತ್ತು ಅಧಿಕಾರ ಲಾಲಸೆಯಿಂದ ತಮ್ಮ ಸಭ್ಯತೆ, ಸಂಯಮ, ಸೌಜನ್ಯ ಮತ್ತು ಎಲ್ಲ ಮಾನವೀಯ ಮೌಲ್ಯಗಳನ್ನೂ ಕಳೆದುಕೊಂಡಿರುವ ಜನಪ್ರತಿನಿಧಿಗಳಿಗೆ ಈ ಹೋರಾಟವೇ ದೇಶದ್ರೋಹದ ನಡೆಯಂತೆ ಕಾಣುತ್ತಿದೆ. ಜನಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಾದ ಸಾಂವಿಧಾನಿಕ ಸಂಸ್ಥೆಗಳಿಗೆ ಇದು ಗಂಭೀರ ವಿಚಾರ ಎನಿಸುತ್ತಲೇ ಇಲ್ಲ.

ಈ ವಿಷಮ ಸನ್ನಿವೇಶದಲ್ಲೇ ಭಾರತದ ರೈತಾಪಿ ತನ್ನ ದಿಗ್ವಿಜಯ ಸಾಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಗಣತಂತ್ರದಿನದ ಟ್ರಾಕ್ಟರ್ ಪರೇಡ್ ಮತ್ತು ದೇಶದ ರಾಜಧಾನಿಯನ್ನೂ ಸೇರಿದಂತೆ ದೇಶವ್ಯಾಪಿಯಾಗಿ ನಡೆದ ಪ್ರಜೆಗಳ ಜನಗಣರಾಜ್ಯೋತ್ಸವದ ಪ್ರತಿರೋಧದ ನೆಲೆಗಳು ಪ್ರಜಾತಂತ್ರಕ್ಕೆ ಸಂದ ದಿಗ್ವಿಜಯವಾಗಿದೆ. ಕೆಲವು ಅಹಿತಕರ ಘಟನೆಗಳ ನಡುವೆಯೂ ರೈತ ಸಮುದಾಯ ತನ್ನ ಅಂತಿಮ ಗುರಿಗೆ ಬದ್ಧತೆ ತೋರಿ ಶಿಸ್ತು ಸಂಯಮದಿಂದ ವರ್ತಿಸಿರುವುದು, ಈ ದೇಶದ ಜನಸಾಮಾನ್ಯರಲ್ಲಿರುವ ಸಂಯಮ, ತಾಳ್ಮೆಯ ಸಂಕೇತವಾಗಿದೆ. ಹಾಗೆಯೇ ಈ ಹೋರಾಟವನ್ನು ಕ್ರೂರವಾಗಿ ಹತ್ತಿಕ್ಕುವ ಪ್ರಯತ್ನಗಳ ಮೂಲಕ ಪ್ರಭುತ್ವ ಮತ್ತು ಆಳುವ ವರ್ಗಗಳು ಬೆತ್ತಲಾಗಿವೆ. ಸಾರ್ವಭೌಮ ಪ್ರಜೆಗಳ ಹೋರಾಟಗಳನ್ನು ರಾಷ್ಟ್ರದ್ರೋಹದ ಪರಿಭಾಷೆಯಲ್ಲಿ ಅಪಮಾನಿಸುವ ಮೂಲಕ ಮಾಧ್ಯಮಗಳು ಪೂರ್ಣ ಬೆತ್ತಲೆಯಾಗಿವೆ.

ಮುಂಬರುವ ದಿನಗಳಲ್ಲಿ ನಡೆಯಬಹುದಾದ ಜನಪರ ಹೋರಾಟಗಳಿಗೆ ದೆಹಲಿಯಲ್ಲಿನ ರೈತರ ಹೋರಾಟ ಮತ್ತು ದೇಶವ್ಯಾಪಿ ನಡೆಯುತ್ತಿರುವ ಆಂದೋಲನಗಳು ಸ್ಫೂರ್ತಿದಾಯಕವಾಗುವ ಆಶಯದೊಂದಿಗೇ, ಈ ದೇಶದ ಕಾರ್ಮಿಕ ಬಂಧುಗಳು, ಗ್ರಾಮೀಣ ಬಡಜನತೆ, ಶೋಷಿತ ಸಮುದಾಯಗಳು, ಅವಕಾಶವಂಚಿತರು, ಮಹಿಳೆಯರು ಮತ್ತು ಜಾತಿ ದೌರ್ಜನ್ಯವನ್ನು ನಿತ್ಯ ಎದುರಿಸುತ್ತಿರುವ ದಲಿತ ಸಮುದಾಯಗಳು ತಮ್ಮ ಹಕ್ಕೊತ್ತಾಯಗಳೊಂದಿಗೆ ಹೋರಾಟಗಳಿಗೆ ಸಜ್ಜಾಗಬೇಕಿದೆ. ಈ ದೇಶ ನಮ್ಮದು, ಈ ಮಣ್ಣು ನಮ್ಮದು, ಸಂವಿಧಾನ ನಮ್ಮದು, ನಮಗೆ ನಾವೇ ಅರ್ಪಿಸಿಕೊಂಡಿರುವ ಸಂವಿಧಾನದ ಆಶಯಗಳೂ ನಮ್ಮವೇ ಆಗಿದೆ. ಈ ಸಂವಿಧಾನದ ರಕ್ಷಣೆಯಾದರೆ ಮಾತ್ರವೇ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ ಎನ್ನುವುದನ್ನು ಇನ್ನಾದರೂ ಮನಗಾಣಬೇಕಿದೆ. ಇತಿಹಾಸದ ಕರಾಳ ಪುಟಗಳು, ಸಮಕಾಲೀನ ಭಾರತದ ಕರಾಳ ಹಾಳೆಗಳು ನಮ್ಮ ಮುಂದಿವೆ, ಕಣ್ತೆರೆದು ನೋಡುವ ಇಚ್ಚಾಶಕ್ತಿ ನಮ್ಮೊಳಗಿದ್ದರೆ ಗೆಲುವು ನಮ್ಮದೇ. ಈ ಆಶಯದೊಂದಿಗೇ ಮುನ್ನಡೆಯಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending