ಬಹಿರಂಗ
ಪ್ರತಿರೋಧದ ದನಿಯೂ, ಪ್ರಭುತ್ವದ ನಿಷ್ಕ್ರಿಯತೆಯೂ..!
- ನಾ ದಿವಾಕರ
ಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ ಪೀಠಗಳನ್ನು ಆಕ್ರಮಿಸುವ ಆಳುವ ವರ್ಗಗಳು ಪ್ರತಿರೋಧದ ದನಿಗೆ ಕಿವಿಗೊಡದಿದ್ದರೆ ಅಂತಹ ವ್ಯವಸ್ಥೆ ಕ್ರಮೇಣ ಅರಾಜಕತೆಯತ್ತ ಸಾಗುತ್ತದೆ. ಸಾಮಾಜಿಕ ವಲಯದಲ್ಲಿ ಪ್ರತಿರೋಧಕ್ಕೆ ಅವಕಾಶವೇ ಕೊಡದ ಒಂದು ಸಮಾಜ ತನ್ನ ಅಂತಃಸತ್ವವನ್ನೇ ಕಳೆದುಕೊಂಡು ಜಡಗಟ್ಟುತ್ತದೆ. ಭಾರತೀಯ ಸಮಾಜ ತನ್ನೊಳಗಿನ ಶ್ರೇಣೀಕೃತ ಜಾತಿ ವ್ಯವಸ್ಥೆ, ಜಾತಿ ಶ್ರೇಷ್ಠತೆಯ ವ್ಯಸನ, ಜಾತಿ ಪದ್ಧತಿಯ ಅನಿಷ್ಟಗಳು, ಅಸ್ಪೃಶ್ಯತೆಯಂತಹ ಕ್ರೂರ ಮನೋಭಾವ, ಪಿತೃಪ್ರಧಾನ ಧೋರಣೆ ಇವೆಲ್ಲವನ್ನೂ ಹೊತ್ತುಕೊಂಡಿದ್ದರೂ ಇಂದಿಗೂ ಸಹ ತನ್ನ ಮೂಲ ನೆಲೆಗಳನ್ನು ಉಳಿಸಿಕೊಂಡುಬಂದಿದ್ದರೆ ಅದಕ್ಕೆ ಕಾರಣ ಈ ದೇಶದ ನೆಲದಲ್ಲಿ ಪ್ರಾಚೀನ ಕಾಲದಿಂದಲೂ ಉಗಮಿಸುತ್ತಲೇ ಇರುವ ಪ್ರತಿರೋಧದ ನೆಲೆಗಳು.
ಚಾರ್ವಾಕನಿಂದ ಅಂಬೇಡ್ಕರ್ ವರೆಗೆ ಭಾರತೀಯ ಸಮಾಜದಲ್ಲಿ, ಪ್ರಬಲ ಸಾಮ್ರಾಜ್ಯಗಳು ಅಧಿಪತ್ಯ ಸಾಧಿಸಿದ್ದ ಸಂದರ್ಭದಲ್ಲೂ ಸಹ ಪ್ರತಿರೋಧದ ನೆಲೆಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡೇ ಬಂದಿವೆ. ಇಂದು ನಾವು ಪ್ರಾಚೀನ ನಿರಂಕುಶಾಧಿಕಾರದ ನೆಲೆಗಳನ್ನು ಧ್ವಂಸಗೊಳಿಸಿ ಒಂದು ಪ್ರಜಾಸತ್ತಾತ್ಮಕ ಸಮಾಜೋ ರಾಜಕೀಯ ನೆಲೆಯಲ್ಲಿ ನೆಲೆಸಿದ್ದರೆ ಅದಕ್ಕೆ ಕಾರಣವೂ ಈ ಪ್ರತಿರೋಧದ ನೆಲೆಗಳೇ ಆಗಿವೆ. ಭಾರತದ ಸಂವಿಧಾನ ರಚನೆಯ ಸಂದರ್ಭದಲ್ಲೂ ಡಾ ಬಿ ಆರ್ ಅಂಬೇಡ್ಕರ್ ಹಲವಾರು ಪ್ರತಿರೋಧಗಳನ್ನು ಎದುರಿಸುತ್ತಲೇ ಅಂತಿಮ ಕರಡು ಸಿದ್ಧಪಡಿಸಿದ್ದರು. ಹಾಗೆಯೇ ಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಪ್ರಬಲವಾಗಿದ್ದ ಮೇಲ್ಜಾತಿಗಳ ವಿರುದ್ಧ ತಮ್ಮ ಪ್ರತಿರೋಧ ವ್ಯಕ್ತಪಡಿಸುತ್ತಲೇ, ಸಮಸಮಾಜದ ಕನಸುಗಳನ್ನು ಹೊತ್ತ ಸಮಾಜವಾದಿ, ಜಾತ್ಯತೀತ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದರು.
ಇಂದು ನಾವು 21ನೆಯ ಶತಮಾನದ ಮೂರನೆಯ ದಶಕದಲ್ಲಿದ್ದೇವೆ. 73 ವರ್ಷಗಳ ಸ್ವಾತಂತ್ರ್ಯದ ಸವಿ ಅನುಭವಿಸಿದ್ದೇವೆ. 70 ವರ್ಷಗಳ ಕಾಲ ಸಂವಿಧಾನದ ಆಶಯಗಳನ್ನು ಈಡೇರಿಸುವ ಮಾರ್ಗದಲ್ಲಿ ನಡೆದುಬಂದಿದ್ದೇವೆ. ಅಂಬೇಡ್ಕರ್ ಪ್ರತಿಪಾದಿಸಿದ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಏನೇ ಸಮಸ್ಯೆಗಳು ಎದುರಾಗಿದ್ದರೂ ಸಮರ್ಥವಾಗಿ ಪರಿಹರಿಸುತ್ತಲೇ ಭಾರತ ಒಂದು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಏಕೆಂದರೆ ಕಾಲದಿಂದ ಕಾಲಕ್ಕೆ ಸರ್ಕಾರಗಳು ಬದಲಾಗುತ್ತಿದ್ದರೂ, ಪ್ರತಿಯೊಂದು ಕಾಲಘಟ್ಟದಲ್ಲೂ ಸಾಮಾಜಿಕ ನ್ಯಾಯಕ್ಕಾಗಿ, ಆರ್ಥಿಕ ಸಮಾನತೆಗಾಗಿ, ಸಾಂಸ್ಕೃತಿಕ ಅಸ್ಮಿತೆ ಮತ್ತು ಅಸ್ತಿತ್ವಕ್ಕಾಗಿ, ಶೋಷಣೆ ಮತ್ತು ದಬ್ಬಾಳಿಕೆಯ ವಿರುದ್ಧ, ಅನ್ಯಾಯದ ವಿರುದ್ಧ, ನಿರಂಕುಶ ಅಧಿಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುತ್ತಲೇ ಜನಾಂದೋಲನಗಳು ನಡೆದಿರುವುದನ್ನು ಕಂಡಿದ್ದೇವೆ. ಈ ಪ್ರತಿರೋಧದ ದನಿಗಳೇ ಭಾರತದ ಪ್ರಜಾತಂತ್ರ ವ್ಯವಸ್ಥೆಯ ತಳಹದಿಯನ್ನು ಸುಭದ್ರವಾಗಿರಿಸಿವೆ.
ಆದರೆ ಇಂದು ಈ ತಳಪಾಯ ಶಿಥಿಲವಾಗುತ್ತಿದೆ. ಆಳುವ ವರ್ಗಗಳು ಮತ್ತು ಈ ವರ್ಗವನ್ನು ಪ್ರತಿನಿಧಿಸುವ ರಾಜಕೀಯ ಪಕ್ಷಗಳು ಕ್ರಮೇಣ ಭಾರತದ ಪ್ರಜಾತಂತ್ರ ವ್ಯವಸ್ಥೆಯನ್ನು ಶಿಥಿಲಗೊಳಿಸಲು ಯತ್ನಿಸುತ್ತಲೇ ಇವೆ. ಸಂವಿಧಾನದ ಚೌಕಟ್ಟಿನಲ್ಲೇ ಕಾಯ್ದೆ ಕಾನೂನುಗಳ ತಿದ್ದುಪಡಿ ಮಾಡುವ ಮೂಲಕ, ಜನಾಭಿಪ್ರಾಯವನ್ನು ಸ್ವೇಚ್ಚಾಚಾರದ ಅಧಿಕಾರಕ್ಕೆ ಪರವಾನಗಿ ಎನ್ನುವಂತೆ ಭಾವಿಸಿ, ಪ್ರಜೆಗಳ ಬದುಕಿಗೇ ಸಂಚಕಾರ ತರುವಂತಹ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ವ್ಯಕ್ತಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರಾಳ ಶಾಸನಗಳಿಂದ ಹಿಡಿದು, ಜನಸಾಮಾನ್ಯರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುವ ಮಸೂದೆಗಳನ್ನು, ಸಂವಿಧಾನದ ನಿಯಮಗಳನ್ನೂ ಮೀರಿ ಜಾರಿಗೊಳಿಸಲಾಗುತ್ತಿದೆ. ಇಂತಹ ಒಂದು ಪ್ರಯತ್ನವನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳಲ್ಲಿ ಕಾಣಬಹುದು.
ಜನವರಿ 26ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಅಹಿತಕರ ಘಟನೆಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಭಾರತದ ಬಹುತೇಕ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು, ಆಳುವ ಪಕ್ಷದ ಬೆಂಬಲಿಗರು, ಪ್ರಜಾತಂತ್ರದ ಮೌಲ್ಯವನ್ನೇ ಅರಿಯದ ಪ್ರಜ್ಞಾವಂತ ನಾಗರಿಕರು ಮತ್ತು ಸಾಂಸ್ಕೃತಿಕ ರಾಷ್ಟ್ರೀಯವಾದದ ಹರಿಕಾರರು, ದೇಶದ ರಾಜಧಾನಿಯೊಳಗೆ ನುಗ್ಗಿ, ಪ್ರತಿಷ್ಠಿತ ಕೆಂಪುಕೋಟೆಯನ್ನು ಆಕ್ರಮಿಸಿ ಅಲ್ಲಿ ತಮ್ಮದೇ ಆದ ಧಾರ್ಮಿಕ ಧ್ವಜವನ್ನು ಹಾರಿಸುವ ಒಂದು ಗುಂಪಿನ ಪ್ರತಿರೋಧವನ್ನು, ಭಯೋತ್ಪಾದಕ ಕೃತ್ಯದಂತೆ ಬಿಂಬಿಸುತ್ತಿರುವುದು ಕಾಣುತ್ತಿದ್ದೇವೆ. ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ಹುಯಿಲೆಬ್ಬಿಸುತ್ತಲೇ ಕೆಂಪುಕೋಟೆಯನ್ನು ಪ್ರವೇಶಿಸಿರುವುದೇ ರಾಷ್ಟ್ರದ್ರೋಹದ ಕೃತ್ಯ ಎನ್ನುವಂತೆ ಸುದ್ದಿಮನೆಗಳು ಬಿತ್ತರಿಸುತ್ತಿವೆ. ಈ ಘಟನೆಯ ಸತ್ಯಾಸತ್ಯತೆಗಳು ಏನೇ ಇರಲಿ, ಧ್ವಜ ನೆಟ್ಟವರು ಯಾರೇ ಇರಲಿ, ಅನ್ಯಾಯಕ್ಕೊಳಗಾದ, ನೊಂದ ಮನಸುಗಳ ಪ್ರತಿರೋಧದ ಹಿಂದೆ ಸುಪ್ತ ಆಕ್ರೋಶ ಮಡುಗಟ್ಟಿರುತ್ತದೆ ಎನ್ನುವುದನ್ನು ಈ ಘಟನೆ ನಿರೂಪಿಸುತ್ತದೆ.
ದೆಹಲಿಯಲ್ಲಿ ನಡೆದ ಘಟನೆ ಸರಿಯೋ ತಪ್ಪೋ ಎನ್ನುವುದಕ್ಕಿಂತಲೂ, 60 ದಿನಗಳ ಕಾಲ ಅತ್ಯಂತ ಶಾಂತಿಯುತವಾಗಿ ನಡೆದ ಒಂದು ಜನಾಂದೋಲನ, 150ಕ್ಕೂ ಹೆಚ್ಚು ಸಾವುಗಳ ನಂತರವೂ ತಾಳ್ಮೆ ಸಂಯಮ ಕಳೆದುಕೊಳ್ಳದ ಒಂದು ಆಂದೋಲನ, ಪೊಲೀಸರ ಲಾಠಿ, ಜಲಫಿರಂಗಿ, ಅಶ್ರುವಾಯು ದಾಳಿಯನ್ನು ಸಹಿಸಿಕೊಂಡು ದೃಢಚಿತ್ತದಿಂದ ಮುನ್ನಡೆದ ಒಂದು ಹೋರಾಟ, ಚಳಿ ಮಳೆಯನ್ನೂ ಲೆಕ್ಕಿಸದೆ ಜನರಿಂದಲೇ ಹಣ ಸಂಗ್ರಹಿಸಿ ತನ್ನ ಸ್ವಂತಬಲದಿಂದ ಎರಡು ತಿಂಗಳ ಕಾಲ ನಡೆದ ಚಳುವಳಿ, ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳು ಮುಷ್ಕರ ನಿರತರ ಮುನ್ನಡಿಗೆಯನ್ನು ತಡೆಗಟ್ಟಲು ಸಿಮೆಂಟ್ ಗೋಡೆಗಳನ್ನು, ಮುಳ್ಳು ತಂತಿಗಳನ್ನು, ಜೆಸಿಬಿ ಮತ್ತು ಬೃಹತ್ ಲಾರಿಗಳನ್ನು ಬಳಸಿದರೂ ಕಂಗೆಡದೆ ನಡೆದ ಹೋರಾಟ, ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿ ಬೃಹತ್ ಕಂದಕಗಳನ್ನು ತೋಡಿ ಮುನ್ನಡಿಗೆಗೆ ಅಡ್ಡಿಪಡಿಸಿದರೂ ಧೃತಿಗೆಡದೆ ನಡೆದ ಒಂದು ಹೋರಾಟ, ಹೇಗೆ ಹಿಂಸಾತ್ಮಕವಾಗಲು ಸಾಧ್ಯ ಎನ್ನುವ ಪ್ರಶ್ನೆ ನಮ್ಮನ್ನು ಕಾಡಬೇಕಿದೆ.
ನಿಗದಿತ ಮಾರ್ಗವನ್ನು ಬಿಟ್ಟು, ಒಳಮಾರ್ಗದಿಂದ ದೆಹಲಿಯನ್ನು ಪ್ರವೇಶಿಸಿ, ಪೊಲೀಸರ ಅಡ್ಡಗೋಡೆಗಳನ್ನು ದಾಟಿ ರಾಜಧಾನಿಯನ್ನು ಪ್ರವೇಶಿಸಿ ಕೆಂಪುಕೋಟೆಯ ಮೇಲೆ ನೆರೆದ ಹೋರಾಟಗಾರರೆಲ್ಲರೂ ದೇಶದ್ರೋಹಿಗಳೇನಲ್ಲ. ಅಲ್ಲಿ ಧ್ವಜ ನೆಡುವ ಮೂಲಕ ವಿವಾದ ಮತ್ತು ಗೊಂದಲ ಸೃಷ್ಟಿಸಿದ ವ್ಯಕ್ತಿಯೂ ದೇಶದ್ರೋಹಿಯೇನಲ್ಲ. ರೈತ ಮುಷ್ಕರವನ್ನು ಶಿಥಿಲಗೊಳಿಸಲೆಂದೇ, ದುರ್ಬಲಗೊಳಿಸಲೆಂದೇ ಇಂತಹ ಪಿತೂರಿಗಳನ್ನು ನಡೆಸುವ ರಾಜಕೀಯ ಶಕ್ತಿಗಳು ನಿಜವಾದ ದೇಶದ್ರೋಹಿಗಳು ಅಲ್ಲವೇ ? ಲಕ್ಷಾಂತರ ಜನರ ಪ್ರತಿಭಟನೆಯಲ್ಲಿ ಒಂದು ಸಣ್ಣ ಗುಂಪು ಈ ರೀತಿಯ ಗಲಭೆಯಲ್ಲಿ ತೊಡಗುವುದೂ ಸಹ ಘೋರ ಅಪರಾಧವೇನಲ್ಲ. ಇದು ಸಹಜ ಪ್ರಕ್ರಿಯೆ. ಏಕೆಂದರೆ ಈ ರೈತಾಪಿ ಸಮುದಾಯ ಎರಡು ತಿಂಗಳ ಕಾಲ ತಾಳ್ಮೆಯಿಂದ ನ್ಯಾಯಕ್ಕಾಗಿ ಹೋರಾಡುತ್ತಿದೆ.
ಕೆಂಪುಕೋಟೆಯ ಮೇಲೆ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ, ಬಿಜೆಪಿ ಸಂಸದ ಸನ್ನಿ ಡಯೋಲ್ನ ನಿಕಟವರ್ತಿ ಮತ್ತು ಕೇಂದ್ರ ನಾಯಕರಿಗೆ ಸಮೀಪವರ್ತಿಯಾದ ದೀಪ್ ಸಿಧು ಎಂದು ಇದೀಗ ಸಾಬೀತಾಗಿದೆ. ತಾನೇ ಧ್ವಜ ಹಾರಿಸಿದ್ದಾಗಿ ದೀಪ್ ಸಿಧು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ. ಆದರೆ ರಾಷ್ಟ್ರಧ್ವಜಕ್ಕೆ ಯಾವುದೇ ಅಪಮಾನವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ಭಾರತದ ಧ್ವಜಕ್ಕಿಂತಲೂ ಕೆಳಮಟ್ಟದಲ್ಲೇ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ದೀಪ್ ಸಿಧು ವಿರುದ್ಧ ದೂರು ದಾಖಲಿಸದ ದೆಹಲಿ ಪೊಲೀಸರು, ಘಟನೆಗೆ ಸಂಬಂಧವೇ ಇಲ್ಲದ 22 ರೈತ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಈ ಘಟನೆಯ ಹಿಂದಿನ ಹುನ್ನಾರವನ್ನು ತಂತಾನೇ ಬಯಲು ಮಾಡುತ್ತದೆ.
ಇಲ್ಲಿ ನಮ್ಮನ್ನು ಕಾಡಬೇಕಾದ ಪ್ರಶ್ನೆ ಎಂದರೆ, ಎರಡು ತಿಂಗಳ ಕಾಲ ಶಾಂತಿಯುತ ಮುಷ್ಕರ ನಡೆಸಿರುವ 540ಕ್ಕೂ ಹೆಚ್ಚು ರೈತ ಸಂಘಟನೆಗಳು ಗಣರಾಜ್ಯೋತ್ಸವದ ದಿನದಂದೇ ದೆಹಲಿಯಲ್ಲಿ ಎರಡು ಲಕ್ಷ ಟ್ರಾಕ್ಟರ್ಗಳ ಪರೇಡ್ ನಡೆಸಲು ತೀರ್ಮಾನಿಸಿದ್ದು ಏಕೆ ? ರೈತರ ಬೇಡಿಕೆ ಮೊದಲನೆ ದಿನದಿಂದಲೂ ಒಂದೇ ಆಗಿದೆ, ಮೂರೂ ಕೃಷಿ ಮಸೂದೆಗಳನ್ನು ಹಿಂಪಡೆಯುವುದು. ಇದರ ಹೊರತಾಗಿ ಮತ್ತಾವುದೇ ರಾಜೀಸೂತ್ರಕ್ಕೆ ತಾವು ಸಿದ್ಧರಾಗಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸುತ್ತಲೇ ಇವೆ. ಕೇಂದ್ರ ಸರ್ಕಾರ ಈ ಬೇಡಿಕೆಗಳಿಗೆ ಮಾತುಕತೆಗಳ ಪ್ರಸ್ತಾವದ ಮೂಲಕ ಸ್ಪಂದಿಸಿದೆಯೇ ಹೊರತು, ಮಾನವೀಯ ಸ್ಪಂದನೆಯನ್ನು ತೋರಿಯೇ ಇಲ್ಲ. 150ಕ್ಕೂ ಹೆಚ್ಚು ರೈತರ ಸಾವಿಗೆ ಒಂದು ಅನುಕಂಪದ ಮಾತನ್ನೂ ಆಡದ ಬೌದ್ಧಿಕ ನಿಷ್ಕ್ರಿಯತೆ ಮತ್ತು ಕ್ರೌರ್ಯವನ್ನು ನಾವು ಕಂಡಿದ್ದೇವೆ. ಇದು ಸಹಜವಾಗಿಯೇ ಮುಷ್ಕರ ನಿರತರಲ್ಲಿ ಆಕ್ರೋಶ ಮೂಡಿಸುತ್ತದೆ.
“ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ, ಸದ್ಯಕ್ಕೆ ಮಸೂದೆಗಳನ್ನು ಹಿಂಪಡೆಯುತ್ತೇವೆ. ಸಂಸತ್ತಿನಲ್ಲಿ ಚರ್ಚೆಗೊಳಪಡಿಸುವ ಮೂಲಕ, ಕೃಷಿ ತಜ್ಞರು ಮತ್ತು ವಿಜ್ಞಾನಿಗಳೊಡನೆ, ರೈತ ಸಂಘಟನೆಗಳೊಡನೆ ಮಾತುಕತೆ ನಡೆಸಿ ದೇಶದ ರೈತಾಪಿಗೆ ಸಮಧಾನಕರವಾಗಿರುವಂತಹ ಹೊಸ ಮಸೂದೆಯನ್ನು ಜಾರಿಗೊಳಿಸುತ್ತೇವೆ ” ಎನ್ನುವ ಮೂರು ನಾಲ್ಕು ಸಾಂತ್ವನದ ಮಾತುಗಳು ಮುಷ್ಕರವನ್ನು ಕೊನೆಗೊಳಿಸಬಹುದಿತ್ತು. ಗಣರಾಜ್ಯೋತ್ಸವದ ದಿನದಂದೇ ಎರಡು ಲಕ್ಷ ಟ್ರಾಕ್ಟರ್ಗಳು ದೇಶದ ರಾಜಧಾನಿಯಲ್ಲಿ ಮೆರವಣಿಗೆ ನಡೆಸುವ ಒಂದು ನಿರ್ಧಾರಕ್ಕೆ ಕೇಂದ್ರ ಸರ್ಕಾರದ ಮಾನವೀಯ, ಸಕಾರಾತ್ಮಕ ಸ್ಪಂದನೆ ತಡೆಒಡ್ಡಬಹುದಿತ್ತು. ಆದರೆ ಪ್ರಜಾತಂತ್ರ ವ್ಯವಸ್ಥೆಯ ಮೂಲ ಆಶಯಗಳನ್ನೇ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಒಕ್ಕೊರಲ ಬೇಡಿಕೆಗಳನ್ನು ನಿರ್ಲಕ್ಷಿಸಿರುವುದೇ ಹೆಚ್ಚು. ಈ ಧೋರಣೆ ಸಣ್ಣ ಪುಟ್ಟ ಗಲಭೆಗಳಿಗೆ, ಅಹಿತಕರ ಘಟನೆಗಳಿಗೆ ಎಡೆಮಾಡಿಕೊಟ್ಟರೆ ಅದರ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಹಬ್ಬದ ದಿನದಂದು ದೇಶವ್ಯಾಪಿ ಆಂದೋಲನವೊಂದು ರೂಪುಗೊಂಡಿರುವುದು ನಿಜಕ್ಕೂ ಅಭೂತಪೂರ್ವ ಬೆಳವಣಿಗೆ. ಭಾರತದಲ್ಲಿ ಪ್ರಜಾತಂತ್ರ ಉಳಿದಿರುವುದಕ್ಕೆ ಸಾಕ್ಷಿಯಾದಂತೆಯೇ ಈ ಜನಾಂದೋಲನ ಈ ದೇಶದ ಆಡಳಿತ ವ್ಯವಸ್ಥೆ ನಿರಂಕುಶತ್ವದೆಡೆಗೆ ಜಾರುತ್ತಿರುವುದಕ್ಕೂ ಸಾಕ್ಷಿಯಾಗಿದೆ. ಹೋರಾಟಗಾರರನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳು, ಟ್ರಾಕ್ಟರ್ಗಳನ್ನು ಜಪ್ತಿ ಮಾಡುವುದು, ಉತ್ತರಪ್ರದೇಶದಲ್ಲಿ ಟ್ರಾಕ್ಟರ್ಗಳಿಗೆ ಡೀಸೆಲ್ ಸರಬರಾಜು ಸ್ಥಗಿತಗೊಳಿಸುವುದು, ಕರ್ನಾಟಕದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಟ್ರಾಕ್ಟರುಗಳನ್ನು ತಡೆಗಟ್ಟಿರುವುದು, ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸುವ ಮೂಲಕ ಹೋರಾಟಗಾರರಲ್ಲಿ ಭೀತಿ ಹುಟ್ಟಿಸುವುದು ಈ ಎಲ್ಲ ಕ್ರಮಗಳು ನಿರಂಕುಶ ಪ್ರಭುತ್ವದ ಸೂಚನೆಗಳಾಗಿಯೇ ಕಾಣುತ್ತವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪ್ರತಿಭಟನೆಗೆ ಮುಕ್ತ ಅವಕಾಶ ನೀಡಿದ್ದರೆ, ಟ್ರಾಕ್ಟರ್ ಪರೇಡ್ಗೆ ಪೂರ್ಣ ಅನುಮತಿ ನೀಡಿದ್ದಲ್ಲಿ ಬಹುಶಃ ಗಲಭೆ ಸಂಭವಿಸುತ್ತಿರಲಿಲ್ಲ. ಅಥವಾ ನಿಮ್ಮ ಬೇಡಿಕೆಗಳಿಗೆ ಮನ್ನಣೆ ನೀಡುತ್ತೇವೆ, ಮುಷ್ಕರ ಹಿಂಪಡೆಯಿರಿ ಎಂದು ವಿನಂತಿಸಿದ್ದರೆ ಟ್ರಾಕ್ಟರ್ ಪರೇಡ್ ನಡೆಯುತ್ತಲೇ ಇರಲಿಲ್ಲ. ಎರಡೂ ನೆಲೆಯಲ್ಲಿ ಸರ್ಕಾರಗಳು ವಿಫಲವಾಗಿವೆ. ಬದಲಾಗಿ, ಹೋರಾಟಗಾರರಲ್ಲಿ ಭಯೋತ್ಪಾದಕರನ್ನು, ಖಲಿಸ್ತಾನಿಗಳನ್ನು, ನಗರ ನಕ್ಸಲರನ್ನು ಹುಡುಕಲು ಪ್ರಯತ್ನಿಸಿವೆ. ತಮ್ಮ ಜೀವನೋಪಾಯದ ಮೂಲ ಸೆಲೆಯನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಅನ್ನದಾತರನ್ನು ದೇಶದ್ರೋಹಿಗಳೆಂದು ಕರೆಯುವಷ್ಟು ಮಟ್ಟಿಗೆ ನಮ್ಮ ರಾಜಕೀಯ ನಾಯಕರು, ಪಕ್ಷಗಳು ಬೌದ್ಧಿಕ ದಾರಿದ್ರ್ಯ ಪ್ರದರ್ಶಿಸಿವೆ.
ಆಳುವ ವರ್ಗಗಳ ಈ ದುರ್ವರ್ತನೆಗೆ ಪೂರಕವಾಗಿ ವಿದ್ಯುನ್ಮಾನ ಮಾಧ್ಯಮಗಳು ರೈತ ಮುಷ್ಕರವನ್ನು ಬಿಂಬಿಸಿವೆ. ಜನವರಿ 25ರವರೆಗೂ ದೆಹಲಿಯಲ್ಲಿ ಮುಷ್ಕರ ಹೂಡಿದ್ದ ರೈತರ ಸಮಸ್ಯೆಗಳನ್ನಾಗಲೀ, ಬೇಡಿಕೆಗಳನ್ನಾಗಲೀ, ಮುಷ್ಕರದ ಮೂಲ ಸಮಸ್ಯೆಯನ್ನಾಗಲೀ ಕಣ್ಣೆತ್ತಿಯೂ ನೋಡದ ಮಾಧ್ಯಮಗಳು ಹಠಾತ್ತನೆ ತಮ್ಮ ರಾಷ್ಟ್ರವಾದಿ ದೇಶಪ್ರೇಮವನ್ನು ಪ್ರದರ್ಶಿಸಲು ಆರಂಭಿಸಿದ್ದು ಜನವರಿ 26ರಂದು, ಟ್ರಾಕ್ಟರ್ ಪರೇಡ್ ಆರಂಭವಾದ ನಂತರ. ಒಂದು ರೀತಿಯಲ್ಲಿ ಇದು ರೈತ ಮುಷ್ಕರದ ವಿಜಯ ಎಂದೇ ಹೇಳಬಹುದು. ಇಡೀ ದೇಶದ ಗಮನ ಸೆಳೆಯುವಂತಹ ಒಂದು ಜನಾಂದೋಲನ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಹೆಚ್ಚು ಗೌರವಯುತವಾಗಿ ಕಾಣುತ್ತದೆ. ಕನ್ನಡದ ಸುದ್ದಿಮನೆಗಳ ಪಕ್ಷಪಾತಿ ಧೋರಣೆ ಮತ್ತು ಉತ್ಕಟ-ಉನ್ಮತ್ತ ರಾಷ್ಟ್ರವಾದಿ ದೇಶಪ್ರೇಮದ ಹೊರತಾಗಿಯೂ ರೈತ ಮುಷ್ಕರ ಟಿವಿ ಪರದೆಗಳ ಮೂಲಕ ಮನೆಮನೆ ತಲುಪಿರುವುದು ರೈತರ ದಿಗ್ವಿಜಯವಾಗಿ ಕಾಣುತ್ತದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿರೋಧದ ಧ್ವನಿಗಳಿಗೆ ಕಿವಿಗೊಡುವ ಸಂಯಮ ಇರುವವರು ಅಧಿಕಾರದಲ್ಲಿದ್ದರೆ ಒಂದು ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ . ನೊಂದ ಜನತೆಯ ಹಕ್ಕೊತ್ತಾಯಗಳನ್ನು, ಆಗ್ರಹಗಳನ್ನು ಆಲಿಸಿ, ಪರಿಶೀಲಿಸಿ, ಪರಾಮರ್ಶಿಸಿ, ಶಾಸನ ಸಭೆಗಳಲ್ಲಿ ಜನಪ್ರತಿನಿಧಿಗಳ ನಡುವೆ ಚರ್ಚೆಗೊಳಪಡಿಸಿ ಸಮಸ್ತ ಜನತೆಗೆ ಒಳಿತನ್ನುಂಟುಮಾಡುವ ನೀತಿಗಳನ್ನು, ಯೋಜನೆಗಳನ್ನು ಜಾರಿಗೊಳಿಸುವುದು ಒಂದು ಪ್ರಬುದ್ಧ ಸಂಸದೀಯ ಪ್ರಜಾತಂತ್ರದ ಲಕ್ಷಣ. ದುರಂತ ಎಂದರೆ ಏಳು ದಶಕಗಳ ಸ್ವತಂತ್ರ ಆಳ್ವಿಕೆಯ ನಂತರ ಭಾರತ ಈ ಪ್ರಬುದ್ಧತೆಯನ್ನು ಕಳೆದುಕೊಳ್ಳುತ್ತಿದೆ. ಸಂಸತ್ತಿನಲ್ಲಿ, ವಿಧಾನಸಭೆಯಲ್ಲಿ ಪೂರ್ಣ ಬಹುಮತ ಗಳಿಸುವುದು ಎಂದರೆ ದೇಶದ ಅತಿ ಹೆಚ್ಚಿನ ಜನಸಂಖ್ಯೆಯನ್ನು ಪ್ರತಿನಿಧಿಸುವುದು ಎಂದರ್ಥವೇ ಹೊರತು, ಸ್ವೇಚ್ಚಾನುಸಾರ ಕಾನೂನುಗಳನ್ನು ರೂಪಿಸಲು ಮುಕ್ತ ಪರವಾನಗಿ ದೊರೆತಂತಲ್ಲ. ಡಾ ಬಿ ಆರ್ ಅಂಬೇಡ್ಕರ್ ಈ ಕುರಿತು ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡುತ್ತಲೇ ಸಂವಿಧಾನ ರಚನೆಯಲ್ಲಿ ತೊಡಗುತ್ತಾರೆ.
ಆದರೆ ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸ್ಪಷ್ಟ ಬಹುಮತ ಎನ್ನುವುದು ಸ್ವೇಚ್ಚಾಚಾರದ ಪರವಾನಗಿಯೇ ಆಗಿದೆ. ಕಳೆದ ಆರು ವರ್ಷಗಳಲ್ಲಿ ಈ ಧೋರಣೆ ಸಮೂಹ ಸನ್ನಿಗೊಳಗಾದ ಬೃಹತ್ ಜನಸಮುದಾಯದ ನಡುವೆ ಸ್ವೀಕೃತಿಯನ್ನೂ ಪಡೆದುಬಿಟ್ಟಿದೆ. ಹಾಗಾಗಿಯೇ 150 ಮುಷ್ಕರ ನಿರತ ರೈತರ ಸಾವು, ಲಕ್ಷಾಂತರ ರೈತರ ಒಕ್ಕೊರಲ ದನಿ, ಬೃಹತ್ ಸಂಖ್ಯೆಯ ರೈತಾಪಿಯ ಮೇಲೆ ನಡೆಯುವ ದೌರ್ಜನ್ಯ, ರೈತರ ಬೆನ್ನ ಮೇಲೆ ಬಾಸುಂಡೆ ಬರುವಂತೆ ಬಾರಿಸುವ ಪೊಲೀಸರ ಕ್ರೌರ್ಯ ಎಲ್ಲವೂ ‘ ದೇಶದ ಅಭಿವೃದ್ಧಿಯ ’ ದೃಷ್ಟಿಯಿಂದ ಸ್ವೀಕಾರಾರ್ಹ ಎನಿಸಿಬಿಡುತ್ತವೆ. ಇದು ಹಿತವಲಯದಲ್ಲಿರುವ ಮಧ್ಯಮ ವರ್ಗಗಳನ್ನು ಕಾಡುತ್ತಿರುವ ಒಂದು ದುರ್ವ್ಯಸನ. ಈ ವ್ಯಸನವೇ ದೇಶದಲ್ಲಿ ನಿರಂಕುಶ ಆಳ್ವಿಕೆಗೆ ಸುಭದ್ರ ತಳಪಾಯವನ್ನು ನಿರ್ಮಿಸುತ್ತಿರುವುದನ್ನು ಕಾಣುತ್ತಿದ್ದೇವೆ.
ಮೂರು ಲಕ್ಷ ರೈತರು ಆತ್ಮಹತ್ಯೆಗೆ ಶರಣಾದಾಗ, ಎರಡು ತಿಂಗಳ ಕಾಲ ಚಳಿ ಮಳೆ ಎನ್ನದೆ, ಕೇಳುವವರಿಲ್ಲದೆ ಲಕ್ಷಾಂತರ ರೈತರು ರಸ್ತೆಗಳಲ್ಲೇ ಕುಳಿತು ಪ್ರತಿರೋಧ ವ್ಯಕ್ತಪಡಿಸುವಾಗ, ಈ ಮುಷ್ಕರದ ನಡುವೆಯೇ 150 ರೈತರು ಮೃತಪಟ್ಟಾಗ ಈ ದೇಶಕ್ಕೆ ಅಪಮಾನವಾಗಿದೆ ಎನಿಸಬೇಕಿತ್ತು. ಇದರಲ್ಲೇ ಆಡಳಿತ ವ್ಯವಸ್ಥೆಯ ರಾಷ್ಟ್ರದ್ರೋಹದ ವರ್ತನೆ ಗೋಚರಿಸಬೇಕಿತ್ತು. ದುರಂತ ಎಂದರೆ ಈ ದೇಶದ ಒಂದು ವರ್ಗದ ಜನತೆಗೆ, ಕಾರ್ಪೋರೇಟ್ ನಿಯಂತ್ರಿತ ಮಾಧ್ಯಮಗಳಿಗೆ ಮತ್ತು ಅಧಿಕಾರ ಲಾಲಸೆಯಿಂದ ತಮ್ಮ ಸಭ್ಯತೆ, ಸಂಯಮ, ಸೌಜನ್ಯ ಮತ್ತು ಎಲ್ಲ ಮಾನವೀಯ ಮೌಲ್ಯಗಳನ್ನೂ ಕಳೆದುಕೊಂಡಿರುವ ಜನಪ್ರತಿನಿಧಿಗಳಿಗೆ ಈ ಹೋರಾಟವೇ ದೇಶದ್ರೋಹದ ನಡೆಯಂತೆ ಕಾಣುತ್ತಿದೆ. ಜನಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಾದ ಸಾಂವಿಧಾನಿಕ ಸಂಸ್ಥೆಗಳಿಗೆ ಇದು ಗಂಭೀರ ವಿಚಾರ ಎನಿಸುತ್ತಲೇ ಇಲ್ಲ.
ಈ ವಿಷಮ ಸನ್ನಿವೇಶದಲ್ಲೇ ಭಾರತದ ರೈತಾಪಿ ತನ್ನ ದಿಗ್ವಿಜಯ ಸಾಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಗಣತಂತ್ರದಿನದ ಟ್ರಾಕ್ಟರ್ ಪರೇಡ್ ಮತ್ತು ದೇಶದ ರಾಜಧಾನಿಯನ್ನೂ ಸೇರಿದಂತೆ ದೇಶವ್ಯಾಪಿಯಾಗಿ ನಡೆದ ಪ್ರಜೆಗಳ ಜನಗಣರಾಜ್ಯೋತ್ಸವದ ಪ್ರತಿರೋಧದ ನೆಲೆಗಳು ಪ್ರಜಾತಂತ್ರಕ್ಕೆ ಸಂದ ದಿಗ್ವಿಜಯವಾಗಿದೆ. ಕೆಲವು ಅಹಿತಕರ ಘಟನೆಗಳ ನಡುವೆಯೂ ರೈತ ಸಮುದಾಯ ತನ್ನ ಅಂತಿಮ ಗುರಿಗೆ ಬದ್ಧತೆ ತೋರಿ ಶಿಸ್ತು ಸಂಯಮದಿಂದ ವರ್ತಿಸಿರುವುದು, ಈ ದೇಶದ ಜನಸಾಮಾನ್ಯರಲ್ಲಿರುವ ಸಂಯಮ, ತಾಳ್ಮೆಯ ಸಂಕೇತವಾಗಿದೆ. ಹಾಗೆಯೇ ಈ ಹೋರಾಟವನ್ನು ಕ್ರೂರವಾಗಿ ಹತ್ತಿಕ್ಕುವ ಪ್ರಯತ್ನಗಳ ಮೂಲಕ ಪ್ರಭುತ್ವ ಮತ್ತು ಆಳುವ ವರ್ಗಗಳು ಬೆತ್ತಲಾಗಿವೆ. ಸಾರ್ವಭೌಮ ಪ್ರಜೆಗಳ ಹೋರಾಟಗಳನ್ನು ರಾಷ್ಟ್ರದ್ರೋಹದ ಪರಿಭಾಷೆಯಲ್ಲಿ ಅಪಮಾನಿಸುವ ಮೂಲಕ ಮಾಧ್ಯಮಗಳು ಪೂರ್ಣ ಬೆತ್ತಲೆಯಾಗಿವೆ.
ಮುಂಬರುವ ದಿನಗಳಲ್ಲಿ ನಡೆಯಬಹುದಾದ ಜನಪರ ಹೋರಾಟಗಳಿಗೆ ದೆಹಲಿಯಲ್ಲಿನ ರೈತರ ಹೋರಾಟ ಮತ್ತು ದೇಶವ್ಯಾಪಿ ನಡೆಯುತ್ತಿರುವ ಆಂದೋಲನಗಳು ಸ್ಫೂರ್ತಿದಾಯಕವಾಗುವ ಆಶಯದೊಂದಿಗೇ, ಈ ದೇಶದ ಕಾರ್ಮಿಕ ಬಂಧುಗಳು, ಗ್ರಾಮೀಣ ಬಡಜನತೆ, ಶೋಷಿತ ಸಮುದಾಯಗಳು, ಅವಕಾಶವಂಚಿತರು, ಮಹಿಳೆಯರು ಮತ್ತು ಜಾತಿ ದೌರ್ಜನ್ಯವನ್ನು ನಿತ್ಯ ಎದುರಿಸುತ್ತಿರುವ ದಲಿತ ಸಮುದಾಯಗಳು ತಮ್ಮ ಹಕ್ಕೊತ್ತಾಯಗಳೊಂದಿಗೆ ಹೋರಾಟಗಳಿಗೆ ಸಜ್ಜಾಗಬೇಕಿದೆ. ಈ ದೇಶ ನಮ್ಮದು, ಈ ಮಣ್ಣು ನಮ್ಮದು, ಸಂವಿಧಾನ ನಮ್ಮದು, ನಮಗೆ ನಾವೇ ಅರ್ಪಿಸಿಕೊಂಡಿರುವ ಸಂವಿಧಾನದ ಆಶಯಗಳೂ ನಮ್ಮವೇ ಆಗಿದೆ. ಈ ಸಂವಿಧಾನದ ರಕ್ಷಣೆಯಾದರೆ ಮಾತ್ರವೇ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯ ಎನ್ನುವುದನ್ನು ಇನ್ನಾದರೂ ಮನಗಾಣಬೇಕಿದೆ. ಇತಿಹಾಸದ ಕರಾಳ ಪುಟಗಳು, ಸಮಕಾಲೀನ ಭಾರತದ ಕರಾಳ ಹಾಳೆಗಳು ನಮ್ಮ ಮುಂದಿವೆ, ಕಣ್ತೆರೆದು ನೋಡುವ ಇಚ್ಚಾಶಕ್ತಿ ನಮ್ಮೊಳಗಿದ್ದರೆ ಗೆಲುವು ನಮ್ಮದೇ. ಈ ಆಶಯದೊಂದಿಗೇ ಮುನ್ನಡೆಯಬೇಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

