ದಿನದ ಸುದ್ದಿ
ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಇದ್ದು, ವಿದ್ಯುತ್ ಬೇಡಿಕೆ ಹಾಗೂ ಪೂರೈಕೆಯಲ್ಲಿ ಸಮತೋಲನ ಸಾಧಿಸಲಾಗಿದೆ : ಸಚಿವ ವಿ. ಸುನಿಲ್ಕುಮಾರ್
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಇದ್ದು, ಕೆಪಿಸಿಎಲ್ನ ಎಲ್ಲ 13 ಉಷ್ಣ ವಿದ್ಯುತ್ ಸ್ಥಾವರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಇಂಧನ ಸಚಿವ ವಿ. ಸುನಿಲ್ಕುಮಾರ್ ತಿಳಿಸಿದ್ದಾರೆ.
ಥರ್ಮಲ್ ವಿದ್ಯುತ್ ಘಟಕಗಳು 5ವರ್ಷಗಳ ಬಳಿಕ ಮೊದಲ ಬಾರಿಗೆ ಒಟ್ಟು 5,020ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಂಡ ಪರಿಣಾಮ ವಿದ್ಯುತ್ ಬೇಡಿಕೆ ಹಾಗೂ ಪೂರೈಕೆಯಲ್ಲಿ ಸಮತೋಲನ ಸಾಧಿಸಲಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಉಳಿದ ರಾಜ್ಯಗಳಲ್ಲಿ ಕಲ್ಲಿದ್ದಲು ನಿರ್ವಹಣೆಯ ಸಮಸ್ಯೆ ಉಂಟಾಗುತ್ತಿರುವಾಗ ರಾಜ್ಯದಲ್ಲಿ ಮಾತ್ರ ಸುಲಲಿತವಾಗಿ ವ್ಯವಸ್ಥೆ ನಿಭಾಯಿಸುತ್ತಿರುವುದು ದಾಖಲೆಯಾಗಿದೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯದ ಎಲ್ಲ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ 5 ದಿನದ ಬೇಡಿಕೆ ಪೂರೈಸುವುದಕ್ಕೆ ಸಾಕಾದಷ್ಟು ಕಲ್ಲಿದ್ದಲು ದಾಸ್ತಾನು ಇದೆ. ಮುಂದಿನ ಅಗತ್ಯತೆಗೆ ಬೇಕಾದ ಕಲ್ಲಿದ್ದಲು ಪೂರೈಕೆಯು ನಿರಂತರವಾಗಿದೆ. ಯಾವ ಆತಂಕವು ಅಗತ್ಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243