ದಿನದ ಸುದ್ದಿ
ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದಲ್ಲಿ ಪಿಟಿಐ ಸುದ್ದಿಸಂಸ್ಥೆಯ ನವದೆಹಲಿಯ ವಿಶೇಷ ಪ್ರತಿನಿಧಿ ಎ. ಲಕ್ಷ್ಮೀದೇವಿ ಮಾತಾನಾಡಿದರು.
ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ ಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶಗಳಿವೆ. ತಮ್ಮ ಸಮಸ್ಯೆಗಳನ್ನೇ ಸವಾಲು ಎಂದುಕೊಂಡು ವೃತ್ತಿಯಲ್ಲಿ ಬೆಳೆಯಬೇಕು.
ಲಭ್ಯವಿರುವ ಸಂಪನ್ಮೂಲಗಳೇ ವೃತ್ತಿಯಲ್ಲಿ ಬೆಳೆಯಲು ದಾರಿಯಾಗಬೇಕು ಎಂದು ನುಡಿದರು. ಪತ್ರಕರ್ತರಿಗೆ ಭಾಷೆ ಮುಖ್ಯ. ಯಾವ ಪದವನ್ನು ಹೇಗೆ ಬಳಸಿದರೆ ಯಾವ ಅರ್ಥ ಕೊಡುತ್ತದೆ ಎಂಬುದರ ಅರಿವು ಇರಬೇಕು. ಅಲ್ಲದೆ ಮೌಲ್ಯಯುತವಾದ ವೃತ್ತಿ ವ್ಯಕ್ತಿತ್ವಕ್ಕೆ ಗೌರವ ತಂದುಕೊಂಡುತ್ತದೆ ಎಂದು ತಿಳಿಸಿದರು.
ಪೈಪೋಟಿ ಮಾಧ್ಯಮ ಕ್ಷೇತ್ರಕ್ಕೂ ಹೊರತಾಗಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಸ್ತಿತ್ವ ಕಂಡುಕೊಳ್ಳಲು ವೃತ್ತಿಪರ ಕೌಶಲ, ಅಗತ್ಯವಿರುವ ಜ್ಞಾನದ ಅರಿವು ಅತ್ಯವಶ್ಯ ಎಂದು ಪಿಟಿಐ ಸುದ್ದಿ ಸಂಸ್ಥೆಯ ನವದೆಹಲಿಯ ವಿಶೇಷ ವರದಿಗಾರ್ತಿ ಎ. ಲಕ್ಷ್ಮೀದೇವಿ ಅಭಿಪ್ರಾಯಪಟ್ಟರು.
ಸ್ಪರ್ಧಾತ್ಮಕ ಜಗತ್ತಿನ ಎಲ್ಲ ಕ್ಷೇತ್ರಗಳಲ್ಲೂ ಪೈಪೋಟಿ ಇದ್ದೇ ಇದೆ. ಅದರ ನಡುವೆ ನಮ್ಮನ್ನು ಕಾಪಾಡುವುದು ನಮ್ಮಲ್ಲಿರುವ ವೃತ್ತಿಪರತೆ, ತಾಂತ್ರಿಕ ಮತ್ತು ವೃತ್ತಿ ಕೌಶಲಗಳು. ಪತ್ರಕರ್ತರಿಗೆ ಓದುವ, ಬರೆಯುವ ಮತ್ತು ನಿರರ್ಗಳವಾಗಿ ಮಾತನಾಡುವ ಕೌಶಲ ಅನಿವಾರ್ಯ. ವಿಷಯದ ಆಳವಾದ ಅಧ್ಯಯನ, ಕಲಿಯುವ ಕುತೂಹಲ ಮತ್ತು ಬರೆಯುವ ಶೈಲಿಗಳು ಮುಖ್ಯವಾಗುತ್ತವೆ ಎಂದು ಹೇಳಿದರು.
ಇದನ್ನೂ ಓದಿ | ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ
15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ
ಪತ್ರಕರ್ತರಿಗೆ ಪ್ರಸ್ತುತ ಸಂದರ್ಭದಲ್ಲಿ ವೃತ್ತಿಯಲ್ಲಿ ಹಲವಾರು ಸವಾಲುಗಳಿವೆ. ಅವುಗಳನ್ನು ಹಿಮ್ಮೆಟ್ಟಿಸಿ, ತಮ್ಮತನ ಗುರುತಿಸಿಕೊಳ್ಳಲೂ ಅವಕಾಶಗಳಿವೆ. ಪತ್ರಕರ್ತರಿಗೆ ಭವಿಷ್ಯದಲ್ಲಿ ಯಾವುದೇ ಮಾಧ್ಯಮ ಅನಿವಾರ್ಯವಲ್ಲ ಎಂಬುದನ್ನು ಅರ್ಥಮಾಡಿಕೊಂಡು ಪರ್ಯಾಯ ಮಾರ್ಗಗಳತ್ತ ಯೋಚನೆ ಮಾಡಬೇಕು. ಇಂಟರ್ನೆಟ್ ಇಲ್ಲದ ಸನ್ನಿವೇಶದಲ್ಲೂ ಕೆಲಸ ಮಾಡುವ, ನೆಲೆ ಕಂಡುಕೊಳ್ಳುವ ಮಾರ್ಗಗಳನ್ನು ಅರಿಯುವುದು ಅತ್ಯವಶ್ಯ ಎಂದರು.
ಪತ್ರಿಕಾ ವೃತ್ತಿಯಲ್ಲಿ ಮೌಲ್ಯಗಳಿಗೆ ಹೆಚ್ಚು ಮನ್ನಣೆ ಇದೆ. ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅರಿತು ಸುದ್ದಿ ಮಾಡುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಮನಸ್ಸಿಗೆ ತೋಚಿದ್ದನ್ನು ಬರೆಯುವ ಪ್ರವೃತ್ತಿಯಿಂದ ಪತ್ರಿಕೋದ್ಯಮಕ್ಕೆ ಕಳಂಕ ಬರುತ್ತಿದೆ. ಮುಂದಿನ ಪೀಳಿಗೆಗೆ ವೃತ್ತಿಯ ಒಳ್ಳೆಯ ಮೌಲ್ಯಗಳನ್ನು ತಿಳಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
‘ಪ್ರಸ್ತುತ ಜಾಗತಿಕ ವಿದ್ಯಮಾನಗಳನ್ನು ಗಮನಿಸಿದರೆ ಯಾವುದೇ ಮಾಧ್ಯಮವೂ ಜನಪರವಾಗಿಲ್ಲ. ಡಿಜಿಟಲ್ ಮಾಧ್ಯಮ ಸದ್ಯ ಹೆಚ್ಚು ಪ್ರಚಲಿತದಲ್ಲಿದೆ. ಅದರಿಂದ ಆಗುವ ಲಾಭದಷ್ಟೇ ಅಪಾಯವೂ ಇದೆ ಎಂಬುದನ್ನು ಅರಿಯಬೇಕು’ ಎಂದರು.
‘ತಂತ್ರಜ್ಞಾನದ ದೈತ್ಯ ಶಕ್ತಿಗಳು ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದು, ಅವು ಯಾವ ರೀತಿಯ ಸವಾಲನ್ನು ಸೃಷ್ಟಿಸುತ್ತವೆ. ಅವೂ ಸಹ ಮತ್ತೊಂದು ರೀತಿಯ ಈಸ್ಟ್ ಇಂಡಿಯ ಕಂಪನಿ ರೀತಿಯಲ್ಲಿ ದೇಶವನ್ನು ಆಳಬಲ್ಲವು ಎಂಬುದನ್ನು ಆಲೋಚಿಸಬೇಕು. ಇಲ್ಲವಾದರೆ ಪ್ರತಿಯೊಬ್ಬರೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಕಲಿಕೆಗೆ ಆಸಕ್ತಿವಹಿಸಬೇಕು. ಉದ್ಯೋಗಕ್ಕೆ ಅಗತ್ಯವಿರುವ, ಭವಿಷ್ಯಕ್ಕೆ ದಾರಿಯಾಗುವ ಮಾರ್ಗವನ್ನು ಆಯ್ಕೆ ಮಾಡಿಕೊಂಡಾಗ ಅದಕ್ಕೆ ಪೂರಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಭಾಷಾ ಜ್ಞಾನ, ಬರವಣಿಗೆ ಜ್ಞಾನಕ್ಕೆ ಗಮನ ನೀಡಬೇಕು ಎಂದು ತಿಳಿಸಿದರು.
ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ, ಭಾಷೆ, ಅಧ್ಯಯನಶೀಲತೆ ಮತ್ತು ವೃತ್ತಿಪರತೆ ಯಾವುದೇ ಕೆಲಸಕ್ಕೂ ಮುಖ್ಯವಾಗಿ ಬೇಕು. ಇದಕ್ಕೆ ಪತ್ರಿಕೋದ್ಯಮ ಕ್ಷೇತ್ರ ಹೊರತಾಗಿಲ್ಲ. ಓದುವ, ಬರೆಯುವ ಹವ್ಯಾಸ ರೂಢಿಸಿಕೊಂಡು, ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ವೃತ್ತಿಯಲ್ಲಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಹಿಂಜರಿಕೆಯ ಜಡತ್ವ ಸ್ವಭಾವವನ್ನು ಬಿಟ್ಟು ವೃತ್ತಿಯಲ್ಲಿ ಭದ್ರಗೊಳ್ಳಲು ಮುಂದಾಗಬೇಕು ಎಂದು ಹೇಳಿದರು. ಶಿಕ್ಷಣ ನಿಕಾಯದ ಡೀನ್ ಡಾ. ಕೆ.ವೆಂಕಟೇಶ್ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕರಾದ ಎಂ. ವಿನಯ್, ಡಾ. ಚಂದ್ರಕಲಾ, ವೆಂಕಟೇಶ್, ಲಾವಣ್ಯ, ಗಂಗಾಧರ್ ಡಾ. ವೆಂಕಟೇಶ್, ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ, ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ್, ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ, ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

