ದಿನದ ಸುದ್ದಿ
ಇದು ‘ಆತ್ಮ ಬರ್ಬಾದ್’ ಬಜೆಟ್ : ಸಿದ್ದರಾಮಯ್ಯ ಲೇವಡಿ
ಸುದ್ದಿದಿನ, ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “ ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶವ್ಯಕ್ತ ಪಡಿಸಿದರು.
ಬೆಂಗಳೂರಿನಲ್ಲಿ ಕೇಂದ್ರ ಬಜೆಟ್ ಮಂಡನೆ ಬಗ್ಗೆ ಅವರು ಪ್ದತಿಕ್ರಿಯಿಸಿದರು. ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರು ಬೆಳೆಗೆ ಬೆಲೆ ಇಲ್ಲದೆ ದಿವಾಳಿಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ ಎಂದರು.
ಕೊರೊನಾದಿಂದಾಗಿ ನೆಲಕಚ್ಚಿರುವ ಆರ್ಥಿಕತೆಯ ಚೇತರಿಕೆಗಾಗಿ ಜನರ ಕೈಗೆ ದುಡ್ಡು ಸೇರುವಂತೆ ಮಾಡಬೇಕೆಂಬುದು ನಮ್ಮ ದೇಶದ ಮತ್ತು ಅಂತರರಾಷ್ಟ್ರೀಯ ಆರ್ಥಿಕ ತಜ್ಞರೆಲ್ಲರೂ ಸೂಚಿಸಿದ್ದ ಸಾಮಾನ್ಯ ಪರಿಹಾರ. ಸೀತಾರಾಮನ್ ಜನರಿಂದ ಇನ್ನಷ್ಟು ಹಣವನ್ನು ಕಿತ್ತುಕೊಳ್ಳಲು ಹೊರಟಿದ್ದಾರೆಯೇ ಹೊರತು ಅವರ ಜೇಬಿಗೆ ಏನನ್ನೂ ಹಾಕಿಲ್ಲ.
ತೆರಿಗೆ ಎನ್ನುವುದು ಬಜೆಟ್ ಗಳ ಸಾಮಾನ್ಯ ಭಾಗ. ಪ್ರಮುಖವಾಗಿ ತೆರಿಗೆಗಳ ಮೂಲಕವೇ ಸರ್ಕಾರ ತನ್ನ ವೆಚ್ಚಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಡೀಕರಿಸುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ನೇರವಾಗಿ ಹೆಚ್ಚು ತೆರಿಗೆ ವಿಧಿಸದೆ, ಕೃಷಿ ಮೂಲಸೌಕರ್ಯ ಸೆಸ್ ಹೇರಿ ರೈತರ ಹೆಸರಲ್ಲಿ ಪರೋಕ್ಷವಾಗಿ ಸಂಪನ್ಮೂಲ ಕ್ರೋಡಿಕರಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಲ್ಲಿದ್ದಲು, ಪಾಮ್ ಆಯಿಲ್, ಕಡಲೆ, ಬಟಾಣಿ, ಹತ್ತಿಯಿಂದ ಹಿಡಿದು ಸೇಬು,ಮದ್ಯದ ವರೆಗೆ ಎಲ್ಲದರ ಮೇಲೂ ಶೇಕಡಾ 2.5ರಿಂದ ಹಿಡಿದು ಶೇಕಡಾ ನೂರರ ವರೆಗೆ ಕೃಷಿ ಸೆಸ್ ಹೇರಲಾಗಿದೆ. ಇದರಿಂದಾಗುವ ಬೆಲೆ ಏರಿಕೆಗೆ ರೈತರೂ ಸೇರಿದಂತೆ ಎಲ್ಲರೂ ತಲೆಕೊಡಬೇಕಾಗುತ್ತದೆ.
ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಬೆಲೆ ಏರಿಕೆಯಾದಾಗ ಜನ ಸರ್ಕಾರವನ್ನಲ್ಲ ರೈತರನ್ನು ದೂರತೊಡಗುತ್ತಾರೆ. ಈ ಮೂಲಕ ಬೆಲೆ ಏರಿಕೆಗೆ ಕೃಷಿ ಸೆಸ್ ಕಾರಣ ಎಂಬ ಜನಾಭಿಪ್ರಾಯವನ್ನು ಮೂಡಿಸಿ ಜನರನ್ನು ರೈತರ ವಿರುದ್ದ ಎತ್ತಿಕಟ್ಟುವ ಹೀನ ಕೃತ್ಯವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ವಾಗ್ದಾಳಿ ಮಾಡಿದರು.
ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ.
ನೀರಾವರಿ ಯೋಜನೆಗಳು, ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆ ರಕ್ಷಣೆಗೆ ಕ್ರಮಗಳು, ಕಡಿಮೆ ಬಡ್ಡಿದರದಲ್ಲಿ ಸಾಲ, ಕಡಿಮೆ ಬೆಲೆಯಲ್ಲಿ ಬೀಜ-ಗೊಬ್ಬರ ಸೇರಿದಂತೆ ರೈತರ ಅವಶ್ಯಕತೆಗಳನ್ನು ಪೂರೈಸುವ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ.
ದೇಶಾದ್ಯಂತ ರೈತರು ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿಯಾಗಬೇಕಾದರೆ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಸಿಗಬೇಕು. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾವ ಇಲ್ಲ ಎಂದರು.
ಇದೇ ರೀತಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕಳೆದ ಏಳು ವರ್ಷಗಳಿಂದ ರೈತರು ಮಾಡುತ್ತಾ ಬಂದಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ಮಾಡಿದ್ದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೇ ಕೊನೆಯದ್ದು, ಅದರ ನಂತರ ಈ ಬ್ಯಾಂಕ್ ಗಳ ಸಾಲ ಮನ್ನಾ ಆಗಿಲ್ಲ. ಈ ಸಾಲಮನ್ನಾ ಮಾಡಿದ್ದರೆ ಸಂಕಷ್ಟದಲ್ಲಿರುವ ರೈತರು ಸ್ವಲ್ಪ ನಿರಾಳವಾಗುತ್ತಿದ್ದರು.
ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಚಾಲನೆ ನೀಡಿರುವುದು ರೈತರು ಸೇರಿದಂತೆ ಎಲ್ಲ ಜನವರ್ಗಗಳ ಮೇಲೆ ಇನ್ನೊಂದು ಹೊಡೆತ. ಖಾಸಗಿಕರಣಗೊಂಡರೆ ರೈತರಿಗೆ ಈಗ ಲಭ್ಯ ಇರುವ ಉಚಿತ ವಿದ್ಯುತ್ ಖಂಡಿತ ಕಡಿತ ಆಗಲಿದೆ. ಇದರ ಜೊತೆಗೆ ಸಾಮಾನ್ಯ ಜನರ ಮನೆ ಬಳಕೆಯ ವಿದ್ಯುತ್ ಕೂಡಾ ದುಬಾರಿಯಾಗಲಿದೆ. ಉದ್ಯಮಿಗಳ ಮೇಲೆಯೂ ಹೆಚ್ಚಿನ ಹೊರೆ.
ವಿಮಾ ಕ್ಷೇತ್ರದಲ್ಲಿ 74% ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಅಪಾಯಕಾರಿಯಾದ ಬೆಳವಣಿಗೆ. ನಮ್ಮಲ್ಲಿ ಬಹಳ ದುರ್ಬಲವಾದ ಸಾಮಾಜಿಕ ಭದ್ರತಾ ವ್ಯವಸ್ಥೆಯಿದೆ. ವಯಸ್ಸಾದವರು ಮತ್ತು ನಿವೃತ್ತರು ತಮ್ಮ ಆರೋಗ್ಯ ಭದ್ರತೆಗಾಗಿ ವಿಮೆಯನ್ನು ನಂಬಿದ್ದಾರೆ. ಈ ಕ್ಷೇತ್ರದ ಖಾಸಗೀಕರಣದಿಂದಾಗಿ ವಿಮೆಯಿಂದಲೂ ಭದ್ರತೆ ಇಲ್ಲದಂತಾಗುವ ದಿನ ದೂರ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಸಂಸದರಾಗಿದ್ದರೂ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೆಟ್ರೋ ಮತ್ತು ಬೆಂಗಳೂರು-ಚೆನ್ನೈ ಕಾರಿಡಾರ್ ಗೆ ನೀಡಿರುವ ಅನುದಾನ ಹೊಸದೇನಲ್ಲ. ಉಳಿದಂತೆ ಹಣಕಾಸು ಸಚಿವರು ಒಮ್ಮೆಯೂ ಕರ್ನಾಟಕದ ಹೆಸರನ್ನೂ ಕೂಡಾ ಎತ್ತಿಲ್ಲ.
ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಯಾವುದೇ ಪರಿಹಾರ ಬಜೆಟ್ನಿಂದ ಸಿಕ್ಕಿಲ್ಲ. ಚುನಾವಣೆ ನಡೆಯುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚು ಹಣ ನೀಡಲಾಗಿದೆ. ಪ್ರತಿ ವರ್ಷ ಚುನಾವಣೆ ನಡೆಸಿದರೆ ನಮಗೂ ಹೆಚ್ಚಿನ ಅನುದಾನ ನೀಡಬಹುದು ಎಂದರು.
ವಿತ್ತೀಯ ಕೊರತೆ ಶೇ. 3.5ಕ್ಕೆ ತರುವುದಾಗಿ ಹೇಳಿದ್ದರು. ಈಗ ಶೇ. 9.7ಕ್ಕೆ ಏರಿದೆ. ಇದರಿಂದ ಹೆಚ್ಚು ಸಾಲ ಮಾಡಬೇಕಾಗುತ್ತದೆ. ನನ್ನ ಪ್ರಕಾರ ವಿತ್ತೀಯ ಕೊರತೆ ಶೇ.14-15 ಇದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಜಿಡಿಪಿ ಬೆಳವಣಿಗೆ ಕುಸಿಯುತ್ತಲೇ ಇದೆ. ಡಾ. ಮನಮೋಹನಸಿಂಗ್ ಅವರ ಅವಧಿಯಲ್ಲಿ ಇದ್ದಿದುಕ್ಕಿಂತ ಕಡಿಮೆಯಾಗುತ್ತಿದೆ.
ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು. ನಿರುದ್ಯೋಗ ಪ್ರಮಾಣ ನಗರದಲ್ಲಿ ಶೇ.9.2. ಇದರಿಂದ ಯುವಕರಿಗೆ ಉದ್ಯೋಗ ಎಲ್ಲಿ ಸಿಗುತ್ತದೆ. ಅವರು ಪಕೋಡಾ ಮಾರಲು ಹೋಗಬೇಕಾಗುತ್ತದೆ. ಈ ವರ್ಷ ಜಿಡಿಪಿ ಬೆಳವಣಿಗೆ -7.7% ಆಗಿದೆ.
2020-2021ನೇ ಸಾಲಿಗೆ ಜಿಡಿಪಿ ಬೆಳವಣಿಗೆಯನ್ನು ಶೇ. 11ಕ್ಕೆ ಏರಿಸುವುದಾಗಿ ಕೇಂದ್ರ ಘೋಷಣೆ ಮಾಡಿದೆ. ಇದು ನಂಬಲು ಸಾಧ್ಯವೇ ? ಇದು ಸುಳ್ಳಿನ ಕಂತೆ. ಅಂಕಿ-ಅಂಶಗಳನ್ನು ನೀಡದೆ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ವಿವರಗಳನ್ನು ಬಿಚ್ಚಿಟ್ಟದ್ದಕ್ಕಿಂತ ಮುಚ್ಚಿಟ್ಟದ್ದೇ ಹೆಚ್ಚು ಎಂದು ಆರೋಪಿಸಿದರು.
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. 80 ಕೋಟಿ ಮಂದಿಗೆ ಅಂದರೆ ಶೇ. 80ರಷ್ಟು ಮಂದಿಗೆ ಪಡಿತರ ಚೀಟಿ ಮೂಲಕ ಆಹಾರ ಧಾನ್ಯ ನೀಡಲಾಗುತ್ತಿದೆ. ಶಾಂತಕುಮಾರ್ ಅವರ ಸಮಿತಿ ವರದಿ ಜಾರಿಗೆ ತಂದರೆ ಶೇ.20ರಷ್ಟು ಮಂದಿ ಮಾತ್ರ ಪಡಿತರ ಮೂಲಕ ಆಹಾರ ಧಾನ್ಯ ಪಡೆಯಲು ಅರ್ಹರಾಗುತ್ತಾರೆ.
ರೈಲ್ವೆ ನಿಲ್ದಾಣ, ಬಂದರು, ವಿಮಾನ ನಿಲ್ದಾಣಗಳನ್ನು ಅಂಬಾನಿ, ಅಂದಾನಿ ಮೊದಲಾದ ಉದ್ಯಮಿಗಳಿಗೆ ಮಾರಲು ಪ್ರಧಾನಿ ನರೇಂದ್ರ ಮೋದಿ ಹೊರಟಿದ್ದಾರೆ. ಇದರಿಂದ ದೇಶ ತನ್ನ ಆಸ್ತಿ ಕಳೆದುಕೊಳ್ಳುವುದಲ್ಲದೆ ತಳಸಮುದಾಯ ಮೀಸಲಾತಿ ಸೌಲಭ್ಯವನ್ನೂ ಕಳೆದುಕೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ “ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್ ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ “ ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು. 1/19#Budget2021
— Siddaramaiah (@siddaramaiah) February 1, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


