ದಿನದ ಸುದ್ದಿ
ಕರುನಾಡಿನ ಸಂತ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಬಗ್ಗೆ ನಿಮಗೆಷ್ಟು ಗೊತ್ತು..?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/10/Thontadaryashree-suddidina.jpg&description=ಕರುನಾಡಿನ ಸಂತ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಬಗ್ಗೆ ನಿಮಗೆಷ್ಟು ಗೊತ್ತು..?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/10/Thontadaryashree-suddidina.jpg&description=ಕರುನಾಡಿನ ಸಂತ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಬಗ್ಗೆ ನಿಮಗೆಷ್ಟು ಗೊತ್ತು..?', 'pinterestShare', 'width=750,height=350'); return false;" title="Pin This Post">
- ಸಂಗಮೇಶ ಎನ್ ಜವಾದಿ, ಕೊಡಂಬಲ, ಬೀದರ ಜಿಲ್ಲೆ.
12ನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಏರಿದ ಶೂನ್ಯ ಸಿಂಹಾಸನವನ್ನು 300 ವರ್ಷಗಳ ನಂತರ ಎಡೆಯೂರಿನ ತೋಂಟದ ಸಿದ್ಧಲಿಂಗ ಶಿವಯೋಗಿಗಳು ಏರಿದರು. ಅಂಥ ಶೂನ್ಯ ಸಿಂಹಾಸನ ಪರಂಪರೆಯ ಡಂಬಳ-ಗದಗ ತೋಂಟದಾರ್ಯ ಮಠದ 19ನೇ ಪೀಠಾಧಿಪತಿಯಾಗಿ ಜ.ಡಾ. ಸಿದ್ಧಲಿಂಗ ಸ್ವಾಮೀಜಿ, 1974 ಜುಲೈ 29 ರಂದು ಅಧಿಕಾರ ವಹಿಸಿಕೊಂಡಿದರು.ಅಂದಿನಿಂದಲೇ ವೈಚಾರಿಕತೆಗೆ ಹೆಚ್ಚು ಒತ್ತು ಕೊಟ್ಟಿದ್ದ ಶ್ರೀಗಳು, ಕೋಮು ಸೌಹಾರ್ದ, ಮೂಢನಂಬಿಕೆ ವಿರುದ್ಧ ಹೋರಾಡುವ ಜೊತೆಗೆ ಕನ್ನಡ ನಾಡು, ನುಡಿಗೆ ಅಪಾರ ಸೇವೆ ಸಲ್ಲಿಸಿ ಅಜರಾಮರಾಗಿದ್ದಾರೆ ಜೊತೆಗೆ ಹತ್ತಾರು ಚಳುವಳಿಗಳಲ್ಲಿ ಮುಂದಾಳತ್ವವನ್ನು ವಹಿಸಿ ಕೊಳ್ಳುವ ಮೂಲಕ ನಾಡಿಗೆ ನ್ಯಾಯ ದೊರಕಿಸಿ ಕೊಟ್ಟಿದ್ದಾರೆ.ಈ ನಿಟ್ಟಿನಲ್ಲಿ ಸ್ವಾಮಿಜೀ ವಿವಿಧ ವಲಯದಲ್ಲಿ ಹೋರಾಟ ಮಾಡಿರುವ ವಿಚಾರಗಳು ತಮ್ಮ ಮುಂದೆ ತರುವ ಸಣ್ಣ ಪ್ರಯತ್ನ ಮಾಡಲಾಗಿದೆ.
ಗೋಕಾಕ್ ಚಳವಳಿ
ಗೋಕಾಕ ವರದಿ ಜಾರಿಗೆ ಬರಲಿ ಎಂಬ ಘೋಷಣೆಯೊಂದಿಗೆ ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಧಾರವಾಡದಲ್ಲಿ 1982 ಏಪ್ರಿಲ್ 4ರಂದು ಹೋರಾಟ ಆರಂಭಿಸಿತು. ಆದರೆ ತೋಂಟದ ಶ್ರೀಗಳು ಅದಕ್ಕೂ ಮುನ್ನವೇ (15.2.1982) ಗೋಕಾಕ ವರದಿ ಜಾರಿಗೆ ತರುವ ಸಲುವಾಗಿ ಹೋರಾಟಕ್ಕೆ ಸಿದ್ಧರಾಗಿ, ಕನ್ನಡಕ್ಕೆ ಅಗ್ರ ಪೂಜೆ ಎಂಬುದನ್ನು ಸಾಬೀತುಪಡಿಸಿ. ಜಾತಿ, ಮತ, ಪಂಥ ಬೇಧಗಳನ್ನು ಬದಿಗೊತ್ತಿ ಉಗ್ರ ಹೋರಾಟ ಪ್ರಾರಂಭಿಸಿ ಎಂದು ಕರೆ ಕೊಟ್ಟಿದ್ದರು.
ಮುಂದೆ ಗೋಕಾಕ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಲ್ಲದೇ, 1982ರ ಜೂನ್ 28ರಂದು ಶಿವಾನುಭವದಲ್ಲಿ ಗೋಕಾಕ ಚಳವಳಿಯ ವಿಜಯೋತ್ಸವ ಆಚರಣೆಗೆ ತೋಂಟದ ಶ್ರೀಗಳು ಕಾರಣರಾದರು.ಇನ್ನು
ಗೋಕಾಕ ವರದಿ ಜಾರಿಗೆ ಸಂಬಂಧಿಸಿದಂತೆ ಮೀನಮೇಷ ಎಣಿಸುತ್ತಿದ್ದ ಅಂದಿನ ಮುಖ್ಯಮಂತ್ರಿ ಗುಂಡೂರಾವ್ ಅವರನ್ನು ತೋಂಟದ ಶ್ರೀಗಳು ಟೀಕಿಸಿದಂತೆ ಕನ್ನಡ ಅನುಷ್ಠಾನವನ್ನು ಗಂಭೀರವಾಗಿ ಪರಿಗಣಿಸದ ಜೆ.ಎಚ್. ಪಟೇಲ ಸರಕಾರವನ್ನೂ ಟೀಕಿಸಿದ್ದರು.
1997ರಂದು ಶ್ರೀಮಠದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಎಚ್. ಪಟೇಲ ಕನ್ನಡ ಅನುಷ್ಠಾನ ಪೂರ್ಣ ಪ್ರಮಾಣದಲ್ಲಿ ಸಾಧ್ಯವಾಗದೇ ಇರಲು ಸರಕಾರ ಕಾರಣವಲ್ಲ ಎಂದಿದ್ದರು. ಪಟೇಲರ ಹೇಳಿಕೆಯನ್ನು ತೀಕ್ಷ್ಣವಾಗಿ ಖಂಡಿಸಿದ್ದ ಶ್ರೀಗಳು, ಕನ್ನಡ ಅನುಷ್ಠಾನದ ವಿಷಯದಲ್ಲಿ ಸರಕಾರ ಗಂಭೀರವಾಗಿ ವರ್ತಿಸುತ್ತಿಲ್ಲ ಎಂದು ತಿರುಗೇಟು ನೀಡಿದ್ದರು ಎನ್ನುವುದು ಸತ್ಯ.
ಶಾಸ್ತ್ರೀಯ ಸ್ಥಾನಮಾನಕ್ಕೆ ಹೋರಾಟ
ಜಗತ್ತಿನ ಪ್ರಬುದ್ಧ ಭಾಷೆಗಳಲ್ಲಿ ಒಂದಾಗಿರುವ, 2 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕು ಎಂದು ತೋಂಟದ ಶ್ರೀಗಳು ಹೋರಾಟ ನಡೆಸಿದ್ದರು. ಉತ್ತರ ಕರ್ನಾಟಕದ ಬಂಡಾಯದ ನೆಲ ನರಗುಂದದಲ್ಲಿ 2007 ಜನವರಿ 9 ರಂದು ನಾಡಿನ ಹಲವು ಮಠಾಧೀಶರೊಂದಿಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು.ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಡಾ. ನಂಜುಂಡಪ್ಪ ವರದಿ ಅನುಷ್ಠಾನ ಒಂದೇ ದಾರಿ ಎಂದು ತೋಂಟದ ಶ್ರೀಗಳು ಪ್ರಬಲವಾಗಿ ಪ್ರತಿಪಾದಿಸಿದ್ದರು ಎನ್ನುವುದು ನಾಡಿಗೆ ಗೊತ್ತಿರುವ ಸಂಗತಿ.
ಶಿಕ್ಷಣ ಪ್ರೀತಿ
ಶಿಕ್ಷ ಣ ಪಡೆಯುವದು ಕೇವಲ ಜ್ಞಾನಾರ್ಜನೆಗೆ ಮಾತ್ರವಾಗದೆ, ಅದು ಉದ್ಯೋಗ ದೊರಕಿಸಿಕೊಡಲು ಸಹಾಯವಾಗಬೇಕು ಎಂಬ ಉದ್ದೇಶದಿಂದ ಡಂಬಳದಲ್ಲಿ 1983 ರಲ್ಲಿ ವೃತ್ತಿ ತರಬೇತಿ ಕೇಂದ್ರ( ಐಟಿಐ) ತೆರೆದು ಗ್ರಾಮೀಣ ವಿದ್ಯಾರ್ಥಿಗಳು ಉದ್ಯೋಗಸ್ಥರಾಗಲು ಮುನ್ನುಡಿ ಬರೆದರು. ಹಾಗೆ ಹೈಸ್ಕೂಲ್, ಮತ್ತು ಗದಗ ಇತರ ಕಡೆಗೆ ವೈದ್ಯಕೀಯ ಎಂಜಿನಿಯರಿಂಗ್ ಕಾಲೇಜು, ಡಿಪ್ಲೋಮಾ, ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿವರೆಗೂ ನಿರಂತರ ಶಿಕ್ಷಣ ದಾಸೋಹ ನಡೆದಿದೆ.
ವೈಚಾರಿಕ ಪಾದಯಾತ್ರೆ / ಪ್ರಗತಿಪರ ಚಿಂತಕರು :
ಮಠಕ್ಕೆ ಬಂದ ಶ್ರೀಗಳು 1971 ರಿಂದ1981 ರವರೆಗೆ 10 ವರ್ಷಗಳ ಕಾಲ ಗದುಗಿನ ತೋಂಟದಾರ್ಯ ಮಠದಿಂದ ಡಂಬಳದವರೆಗೆ ಪ್ರತಿ ಅಮಾವಾಸ್ಯೆಗೆ ಪಾದಯಾತ್ರೆ ಕೈಗೊಂಡರು. ಇದು ವೈಚಾರಿಕತೆ ಹಿನ್ನೆಲೆಯಲ್ಲಿ ಭಕ್ತರ ಮೇಲೆ ಪರಿಣಾಮ ಬೀರಿತು. ಶ್ರೀಗಳ ಪಾದಯಾತ್ರೆ ಬಗ್ಗೆ ಕುತೂಹಲ ತಾಳಿದ ಅನೇಕ ಭಕ್ತರು ಕೂಡಾ ಹಿಂದಿನ ರಾತ್ರಿ ಗದಗ ಮಠದಲ್ಲಿ ವಾಸ್ತವ್ಯ ಮಾಡಿ ನಂತರ ಅವರ ಜತೆಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
ಶ್ರೀಗಳು ಡಂಬಳ ಪ್ರವೇಶ ಮಾಡುತ್ತಿದ್ದಂತೆ ಭಕ್ತರು ಅದರಲ್ಲಿಯೂ ಬಂಡಿ ಮನೆತನದ ಡೊಳ್ಳು ಬಾರಿಸುವ ಕಲಾವಿದರು, ಇತರ ಭಕ್ತರು ಅದ್ಧೂರಿಯಾಗಿ ಸ್ವಾಗತಿಸುತ್ತಿದ್ದರು. ಇದರಿಂದ ಶ್ರೀಗಳು ಭಕ್ತರೊಂದಿಗೆ ಭಾವನಾತ್ಮಕವಾಗಿ ಬೆರೆಯುವಂತಾಯಿತು. ಗದಗನ ಕೌತಾಳ ವೀರಪ್ಪ ಸೇರಿದಂತೆ ಇತರರು ಕಾಯಂ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದರು.ಡಂಬಳದಲ್ಲಿ ಶಿವಾನುಭವ ಕಾರ್ಯಕ್ರಮದಲ್ಲಿ ಡೊಳ್ಳಿನ ಹಾಡುಗಳಿಗೆ ವಿಶೇಷ ಪ್ರಾಧಾನ್ಯತೆ ಕೊಡುವ ಸ್ವಾಮಿಗಳು ಕುಸ್ತಿ ಪಟುಗಳು, ಕಲಾವಿದರು, ಸಾಹಿತಿಗಳು, ಪತ್ರಕರ್ತರು, ಪ್ರಗತಿಪರ ಚಿಂತಕರ ಸ್ನೇಹ ಜೀವಿಗಳಾಗಿದ್ದರು.
ಆಡು ಮುಟ್ಟದ ಗಿಡ ಇಲ್ಲ ಅವರು ಅರಿಯದ ವಿಷಯವೇ ಇರಲಿಲ್ಲ, ಅದನ್ನೆ ಭಕ್ತರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸರಕಾರಕ್ಕೆ ನೇರವಾಗಿ ತಮ್ಮ ಉಕ್ಕಿನ ಕಂಠದಿಂದ ಚಾಟಿ ಬೀಸುತ್ತಿದ್ದರು.ಡಂಬಳ ಮೂಲ ಪರಂಪರೆಯಂತೆ ಪ್ರತಿ ವರ್ಷ ಫೆಬ್ರುವರಿ ತಿಂಗಳಲ್ಲಿ ಜರುಗುವ ತೋಂಟದಾರ್ಯ ಜಾತ್ರೆಯಲ್ಲಿ ರಥ ಸಾಗುವ ಮುನ್ನ ತೇರಿನ ನಾಲ್ಕು ಗಾಲಿಗೆ ಅನ್ನ ಇಟ್ಟು ನಂತರ ತೇರು ಸಾಗುತ್ತಿತ್ತು, 1970 ರಲ್ಲಿ ಮಠಕ್ಕೆ ಪಟ್ಟಾಧಿಕಾರಿಯಾಗಿ ಬಂದ ವರ್ಷವೇ ಗಾಲಿಗೆ ಅನ್ನ ಹಾಕುವುದನ್ನು ಬಿಡಿಸಿದರು. ನೂರಾರು ಜನರು ತಿನ್ನುವ ಅನ್ನ ನೆಲಕ್ಕೆ ಹಾಕಿ ತುಳಿದುಕೊಂಡು ರಥೋತ್ಸವ ಮಾಡಿದರೆ ಏನು ಸಾರ್ಥಕ ಎಂಬುದನ್ನು ಭಕ್ತರಿಗೆ ಮನವರಿಕೆ ಮಾಡಿಕೊಟ್ಟರು. ಅದನ್ನು ಭಕ್ತರು ಒಪ್ಪಿ ಗಾಲಿಗೆ ಅನ್ನ ಇಡುವ ಪದ್ಧತಿ ಬಿಡಲಾಯಿತು.
ಗ್ರಾಮದೊಳಗೆ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಸ್ವಾಮಿಗಳು ಕುಳಿತುಕೊಳ್ಳಲು ಒಪ್ಪದೆ ಭಕ್ತರ ಮಧ್ಯೆ ನಡೆದುಕೊಂಡು ಬರಲು ಇಚ್ಛೆ ಪಟ್ಟರು, ಭಕ್ತರು ಪಲ್ಲಕ್ಕಿಯಲ್ಲಿ ಕುಳಿತುಕೊಳ್ಳುವಂತೆ ಒತ್ತಾಯಿಸಿದರೂ ಮನುಷ್ಯರ ಮೇಲೆ ಮನುಷ್ಯ ಕುಳಿತುಕೊಳ್ಳುವದು ಮಹಾಪರಾಧ ಎಂದು ಅದನ್ನು ನಿರಾಕರಿಸಿದರು ಜೊತೆಗೆ ಅಡ್ಡಪಲ್ಲಕ್ಕಿ ನಿರಾಕರಣೆ ಮಾಡುವ ಮೂಲಕ ನಾಡಿಗೆ ಸೌಹಾರ್ದ ನಡುಗೆಗೆ ಕಾರಣಿಭೊತರಾದರು.
ಹಿಂದಿನಿಂದಲೂ ಬಂದಿರುವ ಕಂಧಾಚಾರ, ಮೌಢ್ಯ, ಮತ್ತು ಜಾತಿಯ ಜಾಡ್ಯವನ್ನು ಬಿಡಿಸಿ ಮಠದಲ್ಲಿ ಹರಿಜನ, ಹಿಂದುಳಿದ ಎಲ್ಲ ವರ್ಗದ ಭಕ್ತರಿಗೆ ಮುಕ್ತ ಪ್ರವೇಶ ಕೊಡಿಸುವ ಮೂಲಕ ಜಾತ್ಯತೀತತೆ ಮೆರೆದರು.
ಕಾಯಕಯೋಗಿ ಶ್ರೀಗಳು
ಡಾ.ಸಿದ್ಧ್ದಲಿಂಗ ಸ್ವಾಮಿಗಳು ಮಠಕ್ಕೆ ಸ್ವಾಮಿಗಳಾಗಿ ಬಂದಾಗ ಮಠದ ಪರಿಸ್ಥಿತಿ ಅಷ್ಟು ಸರಿಯಾಗಿರಲಿಲ್ಲ, ಮಠದಲ್ಲಿ ಏನೂ ಇರಲಿಲ್ಲ, ಜಮೀನುಗಳು ಕೂಡಾ ಪಾಳು ಬಿದ್ದು ಬೆಳೆಯುತ್ತಿರಲಿಲ್ಲ. ಧೃತಿಗೆಡದ ಸ್ವಾಮಿಗಳು ಸ್ವತಃ ಮಡಿ ಹೊಲ, ಮಾನೆ ಹೊಲ ಇತರ ಹೊಲಗಳಲ್ಲಿ ಕೃಷಿಯಲ್ಲಿ ತೊಡಗಿದರು. ಮಠದ ಜಿ.ವಿ.ಹಿರೇಮಠ ಮತ್ತು ಡಂಬಳ ಭಕ್ತರೊಂದಿಗೆ ಮಠದ ಬೆಳವಣಿಗೆ ಕುರಿತು ಚರ್ಚಿಸಿದರು. ಬರಗಾಲದ ಬವಣೆಯಲ್ಲಿ ಕೃಷಿ ಮಾಡಲು ಆಗುವುದಿಲ್ಲ ಎಂದು ಭಕ್ತರು ಹೇಳಿದರೂ ಇರುವ ಜಮೀನಿನನ್ನು ದುರಸ್ತಿಗೊಳಿಸಲು ಮುಂದಾದರು.
ಬರುವ ಕಜ್ಜಾಯದಿಂದ ಮಠದಲ್ಲಿರುವವರು ಊಟ ಮಾಡುತ್ತ ಸ್ವತಃ ಸ್ವಾಮಿಗಳು ಮಡಿ ಹೊಲದಲ್ಲಿ ಕೊಳವೆಬಾವಿ ತೋಡಿಸಿದರು. ನಂತರ ಗ್ರಾಮದಲ್ಲಿರುವ ಹಾಳು ಮಣ್ಣು ಹೊಲಕ್ಕೆ ಹೇರಿಸಿ ದ್ರಾಕ್ಷಿ, ದಾಳಿಂಬೆ ಬೆಳೆಯಲು ಮುಂದಾದರು. ಕೃಷಿಯಲ್ಲಿ ಅಭಿವೃದ್ಧಿ ಕಾಣುತ್ತಿದ್ದಂತೆ ಮಠದ ಜೀರ್ಣೋದ್ಧಾರ ಮಾಡಿದರು.
ಮಠದ ಆವರಣದಲ್ಲಿದ್ದ ಗೋಬರ್ ಗ್ಯಾಸ್ ಅನಿಲ ಘಟಕದ ಸೆಗಣಿಯನ್ನು ಸ್ವತಃ ಸ್ವಚ್ಛಗೊಳಿಸುತ್ತಿದ್ದರು.
ಇನ್ನು ಕಪ್ಪತಗುಡ್ಡಕ್ಕೆ ಧಕ್ಕೆ ತರುವ ಹಳ್ಳಿಗುಡಿ ಬಳಿ ಸ್ಥಾಪಿಸಲು ಉದ್ದೇಶಿಸಿದ ಬೃಹತಾಕಾರದ ವಿದೇಶಿ ಕಂಪನಿ ಪೋಸ್ಕೋ ಉಕ್ಕಿನ ಕಾರ್ಖಾನೆ ಇಲ್ಲಿಂದ ಕಾಲ್ಕಿಳಲು ಜ.ಡಾ.ತೋಂಟದ ಸಿದ್ದಲಿಂಗ ಸ್ವಾಮಿಗಳೇ ಮೊದಲು ಧ್ವನಿ ಎತ್ತಿದ್ದು. 2008ರಲ್ಲಿ ವಿಜಯ ಕರ್ನಾಟಕದಲ್ಲಿ ಪ್ರಥಮ ಸಂದರ್ಶನ ನೀಡಿದ ಸ್ವಾಮಿಗಳು ಯಾವುದೇ ಕಾರಣಕ್ಕೆ ಪೋಸ್ಕೋ ಸ್ಥಾಪನೆಯಾಗಿ ಇಲ್ಲಿಯ ರೈತರು ಬೀದಿ ಪಾಲಾಗುವುದಕ್ಕೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಹಾಗೆ ಈ ಸಂದರ್ಭದಲ್ಲಿ ಕೆಲವರು ಪೋಸ್ಕೋ ಪರವಾಗಿ ಹೋರಾಟ ನಡೆಯಿಸಿ ಸ್ವಾಮಿಗಳ ವಿರುದ್ಧವೂ ಪ್ರತಿಭಟಿಸಿದರು. ಅದರ ಬಗ್ಗೆ ಗಮನ ಕೊಡದೆ ಮುಂಡರಗಿ ತಾಲೂಕಿನ ರೈತರ ಮತ್ತು ಜನರ ಸ್ಥಿತಿ ಮತ್ತೊಂದು ಸೊಂಡೂರು ಆಗಬಾರದು ಎಂದಿದ್ದರು. ಹಾಗೆ ಕಪ್ಪತಗುಡ್ಡ ನಾಶವಾದರೆ ಈ ಭಾಗದ ಜನರ ಬದುಕೇ ನಾಶವಾದಂತೆ ಎಂದು ಕಪ್ಪತಗುಡ್ಡ ಸಂರಕ್ಷಣೆಗೆ ಒತ್ತಾಯಿಸಿ ಗದುಗಿನಲ್ಲಿ ನಡೆಸಿದ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಸರಕಾರ ಮಣಿಯುವಂತೆ ಮಾಡಿದ್ದರು.
ಜನರಲ್ಲಿ ಕಾಯಕ ಪ್ರೀತಿ ಹೆಚ್ಚಿಸಲು ಜಾತ್ರೆ ವೇಳೆಯಲ್ಲಿ ಹೈನುಗಾರಿಕೆ, ಹಗ್ಗ ಹೊಸೆಯುವ, ನೇಗಿಲು ಹೊಡೆಯುವ, ರಾಸುಗಳ ಸ್ಪರ್ಧೆ, ಬೆಳೆ ಕ್ಷೇತ್ರೋತ್ಸವ, ವಿವಿಧ ತಳಿಗಳ ಪರಿಚಯ ಜತೆಗೆ ಎತ್ತು ಮತ್ತು ಗೋವುಗಳ ರಕ್ಷ ಣೆ ಮಾಡಿದರು. ಮಠಕ್ಕೆ ಬರುವ ಬಡ ಕುಟುಂಬಗಳಿಗೆ ಜೀವನ ನಡೆಸಲು ಉಚಿತ ಆಕಳುಗಳನ್ನು ಕೊಟ್ಟಿದ್ದಾರೆ.
ಪರಿಸರ ಪ್ರೇಮಿ ಶ್ರೀ
ಡಂಬಳ, ಡೋಣಿ, ತಾಂಡಾ, ಅತ್ತಿಕಟ್ಟಿ, ದಿಂಡೂರ, ಕಡಕೋಳ ಇತರ ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ಕಪ್ಪತಗುಡ್ಡ ಅಳಿವು ಉಳಿವು ಎಂಬ ಜನಜಾಗೃತಿ ಕಾರ್ಯಕ್ರಮವನ್ನು ಪರಿಸರ ವೇದಿಕೆ ಸಹಯೋಗದಲ್ಲಿ ಆಯೋಜಿಸಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಹಾಗೆ ಪರಿಸರ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರಿಗೆ ಪ್ರತಿ ವರ್ಷ ಪ್ರಶಸ್ತಿ ಕೂಡಾ ಶ್ರೀ ಮಠದ ವತಿಯಿಂದ ಕೊಡುವ ಪದ್ಧತಿ ಜಾರಿಗೆ ತಂದಿದ್ದರು.
ಮೌಢ್ಯದ ಅಂಧಾಕಾರವನ್ನು ತೊಲಗಿಸಿದ ತೋಂಟದ ಶ್ರೀ
ತೋಂಟದ ಸಿದ್ದಲಿಂಗ ಸ್ವಾಮೀಜಿ ಜನಸಾಮಾನ್ಯರ ಸ್ವಾಮಿಗಳಾಗಿ ಬೆರೆತರು. ಶರಣ ಮತ್ತು ಕಾಯಕ ಸಂಸ್ಕೃತಿ ತಳಹದಿ ಮೇಲೆ ಇತರರಿಗೆ ಮೇಲ್ಪಂಕ್ತಿಯಾಗಿದ್ದರು. ಪಲ್ಲಕ್ಕಿಯಲ್ಲಿ ಕುಳಿತು ಕೇವಲ ಬೋಧನೆಗೆ, ಆಶೀರ್ವಚನಕ್ಕೆ ಸೀಮಿತಗೊಳ್ಳದೆ ಡಂಬಳದಲ್ಲಿ ಪ್ರತಿ ಅಮಾಸ್ಯೆಗೆ ವಚನಾನುಭವ ಮಾಡುವ ಮೂಲಕ ಭಕ್ತರು ಮಠಕ್ಕೆ ಬರುವಂತೆ ಪ್ರೇರೇಪಿಸುತ್ತಿದ್ದರು.
ಜನಸಾಮಾನ್ಯರ ಆಡುಭಾಷೆಯ ಅವರ ನೇರ ಭಾಷಣ ಭಕ್ತರ ಮೇಲೆ ಪರಿಣಾಮ ಬೀರಿತು. ಹೀಗಾಗಿ ಅವರು ಜನಸಾಮಾನ್ಯರ ಸ್ವಾಮೀಜಿ ಎನ್ನಿಸಿಕೊಂಡರು ಎನ್ನುವುದು ಸುಳ್ಳಲ್ಲ. ಮೌಢ್ಯ ಮತ್ತು ಕಂದಾಚಾರಗಳಿಂದ ಆಗುವ ತೊಂದರೆ ಮತ್ತು ಶೋಷಿತರನ್ನು ಮೇಲೆತ್ತುವ ಬಗ್ಗೆ ಕಾಳಜಿ ವಹಿಸಿದಂತೆ ಭಕ್ತರು ಶ್ರೀಗಳಿಗೆ ಹತ್ತಿರವಾದರು.
ಅಡ್ಡ ಪಲ್ಲಕ್ಕಿಯಲ್ಲಿ ಕುಳಿತು ಮೆರವಣಿಗೆ ಮಾಡಿಕೊಳ್ಳುವದನ್ನು ತ್ಯಜಿಸಿ ಪಲ್ಲಕ್ಕಿಯಲ್ಲಿ ವಚನ ಕಟ್ಟು ಇರಿಸಿ ಪಾದಯಾತ್ರೆಯಲ್ಲಿ ಹೋಗುವ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು ಹಾಗೆ ಪಲ್ಲಕ್ಕಿ ಹೊರುವವರು ಮನುಷ್ಯರೇ ಎಂದು ಪ್ರೀತಿ ತೋರಿ ಎಲ್ಲರೂ ಸಮಾನರು, ಜಾತಿ ಪದ್ಧತಿ ಅಳಸಿ ಹೋಗಬೇಕು ಎಂಬುದನ್ನು ಪದೇ ಪದೇ ಹೇಳುತ್ತಿದ್ದರು.ಹಾಗಾಗಿ ಅವರ ನೇರ ಮತ್ತು ನಿಷ್ಠುರ ನುಡಿಗಳು ನಮ್ಮನ್ನು ಸದಾ ಜಾಗೃತಿ ಇಡುವಂತೆ ಮಾಡಿವೆ.
ವೈಚಾರಿಕ ಕ್ರಾಂತಿಗೆ ಮುನ್ನುಡಿ ಬರೆದ ಶ್ರೀಗಳು:
ಕೇವಲ ಮಠದ ಚಿಂತನೆಗಳಿಗೆ ಸೀಮಿತವಾಗದೆ. ಬಸವಾದಿ ಶರಣರ ವೈಚಾರಿಕ ವಿಚಾರಗಳನ್ನು ನಾಡಿನ ಜನರಿಗೆ ಮುಟ್ಟಿಸುವ ಕಾಯಕದಲ್ಲಿ ನಿರಂತರಾಗಿದ್ದರು.ಜೊತೆಗೆ ಮಠದಲ್ಲಿ ಜರುಗುತ್ತೀರುವ ಜಾತ್ರೆ ಕುರಿತು ಅವರ ದೃಷ್ಟಿ ಕೋನ ಬದಲಾವಣೆಯಾಗಿತ್ತು.ಬದಲಾವಣೆ ತರುವ ಪ್ರಯತ್ನ ಮಾಡುವ ನಿಟ್ಟಿನಲ್ಲಿ ಶ್ರೀಗಳು ಮುಂದಾಗಿದರು ಮತ್ತು ಯಶಸ್ವಿಯಾದರೂ ಎನ್ನಬಹುದು. ಅವರು ಹೇಳಿದ ಮಾತುಗಳು ಹೀಗಿವೆ.
ಜಾತ್ರೆ ಎಂದರೆ ಮೋಜು ಮಜಲು ಮಾಡುವದಲ್ಲ, ಉತ್ತತ್ತಿ ಬಾಳೆ ಹಣ್ಣು ಎಸೆಯುವದು ಅಲ್ಲ ಅದೊಂದು ಜನರ ಭಾವೈಕ್ಯತೆ ಬೆಸೆಯುವಂತಾಗಬೇಕು, ಎಲ್ಲ ಜಾತಿ ವರ್ಗದವರು ಒಟ್ಟಾಗಬೇಕು ಎಂದು ಪ್ರತಿ ವರ್ಷ ಆಚರಿಸುವ ಜಾತ್ರಾ ಮಹೋತ್ಸವಕ್ಕೆ ಎಲ್ಲ ಸಮುದಾಯದವರನ್ನು ಒಳಗೊಂಡ ಜಾತ್ರಾ ಸಮಿತಿ ಮಾಡಿ ಪ್ರತಿ ವರ್ಷ ಒಂದೊಂದು ಸಮುದಾಯದವರನ್ನು ಅಧ್ಯಕ್ಷ ರನ್ನಾಗಿ ಆ ಮೂಲಕ ಸಮಿತಿ ಸದಸ್ಯರು ಕೂಡಿಕೊಂಡು ಭಕ್ತರಿಂದ ದೇಣಿಗೆ ಸಂಗ್ರಹಿಸಿ ಭಕ್ತರೇ ನಿರ್ವಹಿಸುವ ಜಾತ್ರೆಯಾಗಬೇಕು ಶ್ರೀಗಳು ಬಯಸಿದರು ಎನ್ನುವುದು ನಾವ್ಯಾರು ಮರೆಯುವಂತಿಲ್ಲ.
ಇದಲ್ಲದೆ ಪ್ರತಿ ವರ್ಷ ಜಾತ್ರೆ ನಿಮಿತ್ತ ಎಲ್ಲರೂ ಕೋಮು ಸೌಹಾರ್ಧತೆಯ ಭಾವೈಕ್ಯತೆ ಭಾವನೆಯಿಂದ ಎಲ್ಲರನ್ನೂ ಕೂಡಿಸುವ ಹೊಸ ಪರಂಪರೆಗೆ ನಾಂದಿ ಹಾಡಿದರು.ಜೊತೆಗೆ ಜಾತ್ರೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಪರಿಪಾಠ ಜಾರಿಗೆ ತಂದಿದ್ದರು. ಜಾತ್ರೆ ಹೊಸ ಸ್ವರೂಪ ಪಡೆದು ಎಲ್ಲ ಸಮುದಾಯದ ಬಂಧುಗಳು ಒಟ್ಟಾಗಿ ಕುಳಿತುಕೊಂಡು ಊಟ ಮಾಡುವ ರೊಟ್ಟಿ ಜಾತ್ರೆ ವಿಶೇಷ ಮಹತ್ವ ಪಡೆದು ರಾಜ್ಯಾದ್ಯಂತ ರೊಟ್ಟಿ ಜಾತ್ರೆಗೆ ಜನಸಾಮಾನ್ಯರು ಆಗಮಿಸುವಂತಾಯಿತು ಮತ್ತು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ ಸ್ನೇಹಿತರೆ.
ಹೀಗೆ ಶ್ರೀಗಳು ಹೊಸ ವೈಚಾರಿಕ ಕ್ರಾಂತಿಯ ಪರಿಕಲ್ಪನೆ ಮುನ್ನುಡಿ ಬರೆದಿದ್ದಾರೆ ಮತ್ತು ನೈಜತೆ ಮೈಗೂಡಿಸಿಕೊಂಡು ಸೋಹಂ ಎಂದೆನಿಸದೆ ದಾಸೋಹ ಎಂದೆನಿಸಯ್ಯ ಎಂಬ ಶರಣರ ಉಕ್ತಿಯಂತೆ ಕಾಯಕ ಮಾಡಿರುತ್ತಾರೆ.ಜ್ಞಾನದಾಸೋಹದ ಜತೆಗೆ ಪುಸ್ತಕ ದಾಸೋಹ ಹಾಗೂ ಕನ್ನಡ ಉಳಿವಿಗಾಗಿ ಸದಾ ಜಾಗೃತರಾಗಿ ಮುಂಚುಳಿಯಲ್ಲಿ ತೊಡಗಿಸಿಕೊಂಡಿದರ ಫಲವಾಗಿ ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳಿಸಿರುವ (ಹೋರಾಟ ರೂಪಿಸಿದ) ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ.
ಇವುಗಳಲ್ಲದೆ ದಲಿತರು, ಹಿಂದುಳಿದ ಅದರಲ್ಲಿಯೂ ಲಂಬಾಣಿ ಸಮುದಾಯದವರ ಮೇಲೆ ವಿಶೇಷ ಪ್ರೀತಿ ಮತ್ತು ಕಾಳಜಿ ಹೊಂದಿದ ಕಾರಣ ದಿಂಡೂರ ಭಾಗದ ಅನೇಕ ಬಡ ಲಂಬಾಣಿ ಕುಟುಂಬದ ಮಕ್ಕಳನ್ನು ದತ್ತು ತೆಗೆದುಕೊಂಡು ಶಾಲೆ ಕಾಲೇಜುಗಳಲ್ಲಿ ಓದಿಸಿದಾರೆ. ಇನ್ನು ಮಠದ ವತಿಯಿಂದ ದೇವದಾಸಿಯರಿಗೆ ಮದುವೆ ಮಾಡಿಸಿ ವೈಚಾರಿಕ ಕ್ರಾಂತಿಗೆ ಸಾಕ್ಷಿಯಾಗಿದರು.
ಇನ್ನು ಆರಂಭದಲ್ಲಿ ಭಕ್ತರ ಮನೆಗೆ ಜೋಳಿಗೆ ಹಿಡಿದುಕೊಂಡು ಬಿಕ್ಷೆ ಬೇಡುವ ಬದಲು ಮಠದ ಜಮೀನುಗಳಲ್ಲಿ ಸ್ವತ: ಕಾಯಕ ಮಾಡಿ, ಭಕ್ತರೊಂದಿಗೆ ಬೆರೆತು ಸ್ವತ: ಭಕ್ತರಿಗೆ ಉಣಬಡಿಸುತ್ತಿದರು. ಭಕ್ತರು, ಸ್ವಾಮಿಗಳ ನಡುವೆ ಭಿನ್ನ ಸಲ್ಲದು ಎಂಬ ಭಾವ ಹೊಂದಿದ ಕಾರಣ ಸ್ವಾಮಿಗಳು ಬಹುಬೇಗ ಭಕ್ತರ ಮನದಲ್ಲಿ ಬೇರೂರಿದರು.
ಗೌರವ ನುಡಿ
ಗೋಕಾಕ ಚಳವಳಿ, ನಂಜುಡಪ್ಪ ವರದಿ ಅನುಷ್ಠಾನ, ಪೋಸ್ಕೋ ವಿರೋಧಿ ಹೋರಾಟ, ಕಳಸಾ-ಬಂಡೂರಿ/ಮಹದಾಯಿ ಹೋರಾಟ, ಕಪ್ಪತಗುಡ್ಡ ರಕ್ಷಣೆ ಜೊತೆಗೆ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ತೋಂಟದ ಶ್ರೀಗಳು ನಡೆಸಿದ ಹೋರಾಟ ಈಗ ಇತಿಹಾಸದ ಪುಟ ಸೇರಿವೆ.ಹಾಗೆ ಹಳೆ ಗೊಡವೆಯಂತಿದ್ದ ಮಠವನ್ನು ಆಧುನಕಿರಣಗೊಳಿಸಿ, ವಿಶಾಲವಾದ ತೋಂಟದಾರ್ಯ ಕಲಾಭವನ ನಿರ್ಮಾಣಗೊಂಡು ವಿವಾಹ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ಭವನ ನಿರ್ಮಾಣ ಮಾಡಿದರು.
ಹೀಗೆ ಇನ್ನು ಹತ್ತು ಹಲವು ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡಿರುತ್ತಾರೆ.ಹೀಗಾಗಿ
ಕನ್ನಡದ ಜಗದ್ಗುರುವಾಗಿ ಬೆಳಗಿದ ಡಂಬಳ-ಗದಗ ತೋಂಟದಾರ್ಯ ಮಠದ ಜ.ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಗಳು ಈ ಕನ್ನಡ ನೆಲದ ಯುಗ ಪುರುಷ, ಕನ್ನಡ ತಾಯಿ ಜೋಗುಳ ಎದೆಯೊಳಗಿಳಿಸಿಕೊಂಡ ಕರುನಾಡಿನ ಸಂತನಾಗಿ, ದೇಶ ಕಂಡ ಅಪರೂಪದ ಪ್ರಗತಿಪರ ಸ್ವಾಮಿಗಳಾಗಿ ನಮ್ಮೆಗೆಲ್ಲರಿಗೂ ಪ್ರೇರಣೆದಾಯಕರಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ6 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ2 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ3 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

