Connect with us

ಬಹಿರಂಗ

ಮುನ್ನೂರು ರಾಮಾಯಣಗಳು : ಒಂದು ವ್ಯಾಖ್ಯಾನ

Published

on

ಎ. ಕೆ. ರಾಮಾನುಜನ್ ಅವರ `ಥ್ರೀ ಹಂಡ್ರೆಡ್ ರಾಮಾಯಣಾಸ್: ಫೈವ್ ಎಕ್ಸಾಂಪಲ್ಸ್ ಅಂಡ್ ಥ್ರೀ ಥಾಟ್ಸ್ ಆನ್ ಟ್ರಾನ್ಸ್‌ಲೇಷನ್ಸ್~ (Three Hundred Ramayanas: Five Examples and Three Thoughts on Translations) ಎಂಬ ಪ್ರಸಿದ್ಧ ಲೇಖನ ಮೊದಲಿಗೆ ಚಿಕಾಗೋ ವಿ.ವಿ.ಯಲ್ಲಿ 1985-86ರಲ್ಲಿ ನಡೆದ ಕಮ್ಮಟವೊಂದರಲ್ಲಿ ಮಾಡಿದ ಭಾಷಣ; ಅನಂತರ ಅದನ್ನು ವಿಸ್ತರಿಸಿ, ಬರೆದ  ಲೇಖನ ಪಾಲಾ ರಿಚ್ಮನ್ ಅವರ Many Ramayanas  (1991) ಎಂಬ ಸಂಕಲನದ ಮೊದಲ ಲೇಖನವಾಗಿ ಪ್ರಕಟವಾಯಿತು.

ವಿನಯ್ ಧಾರ್ವಾಡಕರ್ ಸಂಪಾದಿಸಿರುವ ರಾಮಾನುಜನ್ ಅವರ ಸಮಗ್ರ ಲೇಖನಗಳ ಸಂಕಲನದಲ್ಲಿ ಇದು ಸೇರ್ಪಡೆಯಾಗಿದೆ (1999; ಪು. 131-160).

ತಮ್ಮ ಕಾಲದಲ್ಲಿ ಪ್ರಚಲಿತವಿದ್ದ ರಾಮ ಕಥೆಗಳನ್ನಾಧರಿಸಿ ವಾಲ್ಮೀಕಿ ಮುನಿಗಳು ಸಂಸ್ಕೃತದಲ್ಲಿ ಭಾರತದ ಆದಿಕಾವ್ಯವನ್ನು ಬರೆದ ನಂತರ, ಕಳೆದ 2500 ವರ್ಷಗಳ ಅವಧಿಯಲ್ಲಿ, ಭಾರತದ ಹಾಗೂ ದಕ್ಷಿಣ ಏಷ್ಯಾದ ಎಲ್ಲಾ ಭಾಷೆಗಳಲ್ಲಿಯೂ ರಾಮಕಥೆಯು ಮತ್ತೆ ಮತ್ತೆ ಕಥಿಸಲ್ಪಟ್ಟಿದೆ; ಮತ್ತು, ಈ ಪರಂಪರೆ ಇನ್ನೂ ಮುಂದುವರಿದಿದೆ.

ಪ್ರಾಯಃ ಸಾವಿರವನ್ನೂ ಮೀರುವ ಇವೆಲ್ಲಾ ರಾಮಾಯಣಗಳನ್ನು ಯಾವ ಪರಿಪ್ರೇಕ್ಷ್ಯದಿಂದ ನೋಡಬಹುದು? ಈ ರಾಮಾಯಣಗಳಲ್ಲಿ ಕಂಡುಬರುವ ಭಿನ್ನತೆಗಳಲ್ಲಿ ಏನಾದರೂ ಸಮಾನ ವಿನ್ಯಾಸವಿದೆಯೆ? ರಾಮಾನುಜನ್ ಅವರ ತೌಲನಿಕ ಲೇಖನ ಈ ಕಠಿಣ ಪ್ರಶ್ನೆಗಳಿಗೆ ಉತ್ತರವನ್ನು ಶೋಧಿಸುತ್ತದೆ.

ಈ ದೀರ್ಘ ಲೇಖನದಲ್ಲಿ ಚರ್ಚಿಸಲ್ಪಟ್ಟಿರುವ ವಿಷಯಗಳ ಹರಹು ಹೀಗಿದೆ: ಪೀಠಿಕೆ, ವಾಲ್ಮೀಕಿ ಮತ್ತು ಕಂಬನ್, ಜೈನ ರಾಮಾಯಣಗಳು, ಲಿಖಿತ-ಮೌಖಿಕ ಕಥನಗಳು, ದಕ್ಷಿಣ ಏಷ್ಯಾದ ಒಂದು ರಾಮಕಥೆ, ಭಿನ್ನತೆಗಳ ವಿನ್ಯಾಸ, ಭಾಷಾಂತರಗಳ ಸ್ವರೂಪ, ಮತ್ತು ರಾಮಾಯಣ ಶ್ರವಣದ ಪರಿಣಾಮ.

ಪೀಠಿಕೆಯಲ್ಲಿ, ಒಂದು ಜಾನಪದ ಕಥೆಯ ಮೂಲಕ ಭಾರತದಲ್ಲಿ ಮತ್ತು ಇತರ ದೇಶಗಳಲ್ಲಿ, ಮೌಖಿಕ ಹಾಗೂ ಲಿಖಿತ ಪರಂಪರೆಗಳಲ್ಲಿ ಅನೇಕ ರಾಮಾಯಣಗಳಿರುವುದನ್ನು ದಾಖಲಿಸಿ, ತಮ್ಮ ಲೇಖನದ ಉದ್ದೇಶ `ಈ ಬಗೆಯ ನೂರಾರು ರಾಮಾಯಣಗಳ ಭಿನ್ನತೆಗಳಲ್ಲಿ ಇರಬಹುದಾದ ವಿನ್ಯಾಸವನ್ನು ಗುರುತಿಸುವುದು’ ಎಂದು ರಾಮಾನುಜನ್ ಮಂಡಿಸುತ್ತಾರೆ.

ಅನಂತರ, ವಾಲ್ಮೀಕಿ-ಕಂಬನ್ ರಾಮಾಯಣಗಳಲ್ಲಿರುವ ಅಹಲ್ಯಾ ಪ್ರಕರಣವನ್ನು ತುಲನಾತ್ಮಕವಾಗಿ  ವಿಶ್ಲೇಷಿಸುತ್ತಾ, ಕಂಬನ್ ರಾಮಾಯಣದಲ್ಲಿರುವ ಈ ಪ್ರಸಂಗದ ನಾಟಕೀಯತೆ ಹಾಗೂ ತಮಿಳು ಭಕ್ತಿಪಂಥದ ಪ್ರಭಾವ ಇತ್ಯಾದಿ ಅಂಶಗಳನ್ನು ರಾಮಾನುಜನ್ ವಿವರಿಸುತ್ತಾರೆ:  ವಾಲ್ಮೀಕಿ ರಾಮಾಯಣದಲ್ಲಿ ಇಂದ್ರನು ಅಹಲ್ಯೆಯನ್ನು ವಂಚಿಸಿ ಭೋಗಿಸಿದರೆ, ಕಂಬನ್ ಕೃತಿಯಲ್ಲಿ, ತಾನು ತಪ್ಪು ಮಾಡುತ್ತಿದ್ದೆೀನೆಂದು ಅಹಲ್ಯೆಗೆ ಗೊತ್ತಿದ್ದರೂ ತನ್ನ ಮೋಹವನ್ನು ಜಯಿಸಲಾರದೆ ಅವಳು ಇಂದ್ರನಿಗೆ ವಶವಾಗುತ್ತಾಳೆ.

ಅನಂತರ, ವಿಮಲಸೂರಿಯ ಪಉಮ ಚರಿಯದಿಂದ ಪ್ರಾರಂಭವಾಗುವ ಜೈನ ರಾಮಾಯಣಗಳು ಮತ್ತು ವಾಲ್ಮೀಕಿ ರಾಮಾಯಣ ಇವುಗಳ ನಡುವಿನ ಭಿನ್ನತೆಗಳನ್ನು ಹೀಗೆ ಗುರುತಿಸುತ್ತಾರೆ: ಜೈನ ರಾಮಾಯಣಗಳಲ್ಲಿ ರಾವಣನು ಕ್ರೂರ ರಾಕ್ಷಸನಲ್ಲ.

63 ಶಲಾಕಾಪುರುಷರಲ್ಲಿ ಒಬ್ಬ ಪ್ರತಿವಾಸುದೇವ; ಉದಾತ್ತ ರಾವಣನಿಗಿರುವ ಒಂದೇ ಒಂದು ಮಿತಿಯೆಂದರೆ ಸೀತಾ ವ್ಯಾಮೋಹ;  ರಾವಣ ವಧೆಯಾಗುವುದು ಲಕ್ಷ್ಮಣನಿಂದ; ರಾವಣ, ಕುಂಭಕರ್ಣ, ವಾಲಿ, ಹನುಮಂತ, ಜಾಂಬವಂತ, ಮುಂತಾದವರು ರಾಕ್ಷಸರಾಗಲಿ ಕಪಿ ಕರಡಿಗಳಾಗಲಿ ಅಲ್ಲ. ಅವರೆಲರ‌್ಲೂ ವಿದ್ಯಾಧರ ಕುಲಕ್ಕೆ ಸೇರಿದವರು; ಇತ್ಯಾದಿ.

ಮುಂದಿನ ಭಾಗದಲ್ಲಿ, ಲಿಖಿತ-ಮೌಖಿಕ ರಾಮಾಯಣ ಪರಂಪರೆಗಳನ್ನು ವ್ಯಾಖ್ಯಾನಿಸುತ್ತಾ, ರಾಮಾನುಜನ್ ಕನ್ನಡದ (ರಾಗೌ ಮುಂತಾದವರು ಸಂಪಾದಿಸಿರುವ, 1973ರಲ್ಲಿ ಪ್ರಕಟವಾದ) `ತಂಬೂರಿ ರಾಮಾಯಣವನ್ನು ದೀರ್ಘವಾಗಿ ಚರ್ಚಿಸುತ್ತಾರೆ.

ಮಕ್ಕಳಿಲ್ಲದ ರಾವಣನು ಮುನಿ ಕೊಟ್ಟ ಹಣ್ಣನ್ನು ತಾನೇ ಸೇವಿಸಿ, ಗರ್ಭವನ್ನು ಧರಿಸಿ, `ಸೀತಾಗ~ ಹೊರಬಂದ ಮಗು `ಸೀತೆ; ಮುಂದೆ, ಅವಳು ತನ್ನ ಕುಲವನ್ನೇ ನಾಶಮಾಡುತ್ತಾಳೆಂಬ ಜೋತಿಷ್ಕರ ಹೇಳಿಕೆಯನ್ನು ನಂಬಿ, ಅವಳನ್ನು ಒಂದು ಪೆಟ್ಟಿಗೆಯಲ್ಲಿಟ್ಟು ನದಿಯಲ್ಲಿ ತೇಲಿ ಬಿಡುತ್ತಾನೆ ಮತ್ತು ಜನಕನಿಗೆ ಆ ಪೆಟ್ಟಿಗೆ ಸಿಕ್ಕಿ, ಅವನು ಆ ಮಗುವನ್ನು ತಂದು ಸಾಕುತ್ತಾನೆ.

ರಾಮಾನುಜನ್ ಇಲ್ಲಿ ಗಮನಿಸುವ ಎರಡು ಪ್ರಮುಖ ಅಂಶಗಳೆಂದರೆ 1) ಸೀತೆ ರಾವಣನ ಮಗಳು, 2) ರಾವಣನು ಗರ್ಭಧಾರಣೆ ಮಾಡುವುದು.  ಈ ಎರಡೂ ಘಟನೆಗಳ ಆಳದಲ್ಲಿ ಸ್ತ್ರೀವಿಶಿಷ್ಟ ಗರ್ಭಕೋಶ ಹಾಗೂ ಪ್ರಸವ ಇವುಗಳನ್ನು ಕುರಿತು ಪುರುಷನಿಗಿರುವ ಅಸೂಯೆ ಮತ್ತು ತನ್ನ ಮಗಳನ್ನು ಕುರಿತು ತಂದೆಗಿರುವ `ಈಡಿಪಸ್~ ಅಥವಾ `ಅಗಮ್ಯ ಗಮನ~ದ  ಆಶಯ, ಇತ್ಯಾದಿಗಳನ್ನು ಗುರುತಿಸಿ, ರಾಮಾನುಜನ್ ಈ ಆಶಯಗಳು ಭಾರತೀಯ ಸಾಹಿತ್ಯದಲ್ಲಿ ವಿಫುಲವಾಗಿವೆ ಎಂದು ಮಂಡಿಸುತ್ತಾರೆ.

ಅನಂತರ, ಥಾಯ್ ಭಾಷೆಯಲ್ಲಿರುವ ರಾಮಾಕೀನ್ ಎಂಬ ಹೆಸರಿನ ರಾಮಾಯಣ ವನ್ನು ವಿಶ್ಲೇಷಿಸುತ್ತಾ, ರಾಮಾನುಜನ್ ಈ ರಚನೆಯ ಭಿನ್ನತೆಗಳನ್ನು ಗುರುತಿಸುತ್ತಾರೆ: ಇಲ್ಲಿ ಸೀತೆಗೆ ವನವಾಸ ಪ್ರಾಪ್ತವಾಗುವುದು ಶೂರ್ಪನಖಿಯ ಕುಯುಕ್ತಿಯಿಂದ (ಕನ್ನಡದ ಚಿತ್ರಪಟ ರಾಮಾಯಣದಲ್ಲಿರುವಂತೆ); ಸೀತೆ ರಾವಣ-ಮಂಡೋದರಿಯರ ಮಗಳು, ಆದರೆ ಭವಿಷ್ಯದ್ವಾಣಿಗೆ ಹೆದರಿ ರಾವಣನು ಅವಳನ್ನು ದೂರಮಾಡುತ್ತಾನೆ; ಇತ್ಯಾದಿ.

ಈ ಬಗೆಯಲ್ಲಿ, ವೈದಿಕ ಪರಂಪರೆಯ ರಾಮಾಯಣಗಳು, ಜೈನ ಪರಂಪರೆಯ ಹಾಗೂ ಮೌಖಿಕ ಪರಂಪರೆಯ ರಾಮಾಯಣಗಳು ಮತ್ತು ಆಗ್ನೇಯ ಏಷ್ಯಾದ ರಾಮಾಯಣಗಳು, ಇವುಗಳ ನಡುವಿನ ಸಮಾನತೆ-ಭಿನ್ನತೆಗಳನ್ನು ಗುರುತಿಸಿದ ನಂತರ, ಈ ಲೇಖನದ ಎರಡು ಮುಖ್ಯ ಭಾಗಗಳು ಬರುತ್ತವೆ.

`ಭಿನ್ನತೆಗಳ ವಿನ್ಯಾಸ~ ಎಂಬ ಭಾಗದಲ್ಲಿ, ಹೇಗೆ ಈ ಪರಂಪರೆಗಳಲ್ಲಿ ಎರಡು ಭಿನ್ನ ಮುಕ್ತಾಯಗಳ (ಪಟ್ಟಾಭಿಷೇಕ/ ಲವ-ಕುಶ ಜನನ) ಹಾಗೂ ಎರಡು ಭಿನ್ನ ಪ್ರಾರಂಭಗಳ ರಾಮಾಯಣಗಳಿವೆ; ಮತ್ತು ಇವುಗಳು ಆಳದಲ್ಲಿ (ಮುಖ್ಯವಾಗಿ ಸೀತೆ) ಫಲವಂತಿಕೆ ಮತ್ತು ನಿಸರ್ಗ-ಮಾನವ ಸಂಬಂಧಗಳ ರೂಪಕಗಳು ಎಂದು ರಾಮಾನುಜನ್ ವಿವರಿಸುತ್ತಾರೆ.

ಹಾಗೆಯೇ, ಪ್ರತಿಯೊಂದು ರಾಮಾಯಣವನ್ನೂ ಅದರ `ಸಂದರ್ಭ,~ ಎಂದರೆ, ಆ ಕೃತಿ ರಚನೆಯಾದ ಭಾಷಿಕ ಸಂದರ್ಭ, ಪ್ರಾದೇಶಿಕ ಪರಂಪರೆ, ಆ ಸಮುದಾಯದ/ಲೇಖಕನ ಧಾರ್ಮಿಕ ನಂಬಿಕೆ ಹಾಗೂ ಸಾಮಾಜಿಕ ಮೌಲ್ಯಗಳು, ಇತ್ಯಾದಿ ರೂಪಿಸುತ್ತವೆ ಎಂಬ ತೀರ್ಮಾನಕ್ಕೆ ಬರುತ್ತಾರೆ.

ಈ ಸಂದರ್ಭದಲ್ಲಿಯೇ ಅವರ ಪ್ರಖ್ಯಾತ ಹೇಳಿಕೆ ಬರುತ್ತದೆ: `ರಾಮಾಯಣವೆಂದರೆ ಭಾರತದ ಎರಡನೆಯ ಭಾಷೆ~. ಮುಂದಿನ ಭಾಗದಲ್ಲಿ,  ರಾಮಕಥೆಯ ಈ ಭಿನ್ನ ರೂಪಣೆಗಳನ್ನು `ಅನುವಾದ~ಗಳೆಂದು ಕರೆಯಬಹುದು ಎಂದು ವಾದಿಸುತ್ತಾ, ರಾಮಾನುಜನ್ ಮೂರುಬಗೆಯ ಅನುವಾದ ಮಾರ್ಗಗಳನ್ನು ವಿವರಿಸುತ್ತಾರೆ (Iconic/Indexical/ Symbolic). ಅನಂತರ,  ಎಲ್ಲಾ ರಾಮಾಯಣಗಳನ್ನೂ ಒಳಗೊಳ್ಳುವ ಒಂದು ಸ್ವೋಪಜ್ಞ ವಿಮರ್ಶಾತ್ಮಕ ಚೌಕಟ್ಟನ್ನು ರೂಪಕಾತ್ಮಕವಾಗಿ ರಾಮಾನುಜನ್  ಹೀಗೆ ಕಟ್ಟುತ್ತಾರೆ:

`ನಿಯತವಾಗಿ, ಮತ್ತೆ ಮತ್ತೆ ರಾಮಾಯಣಗಳು ಸೃಷ್ಟಿಯಾದ ಸಾಂಸ್ಕೃತಿಕ ಪ್ರದೇಶವನ್ನು ಬಗೆಬಗೆಯ ಸೂಚಕಗಳಿಂದ  ತುಂಬಿರುವ ಒಂದು ಅಗಾಧ ಸರೋವರದಂತೆ ನೋಡಬಹುದು.

ಈ ಸೂಚಕಗಳೆಂದರೆ, ಕಥನ ಚೌಕಟ್ಟುಗಳು, ಪಾತ್ರಗಳು, ಹೆಸರುಗಳು, ಭೂಗೋಳ, ಘಟನೆಗಳು ಮತ್ತು ಸಂಬಂಧಗಳು, ಇತ್ಯಾದಿ. … ಪ್ರತಿಯೊಬ್ಬ ಭಾರತೀಯ ಲೇಖಕನೂ ಈ ಸರೋವರದಲ್ಲಿ ಮುಳುಗಿ ತನ್ನದೇ ಆದ ಒಂದು ವಿಶಿಷ್ಟ ಪಠ್ಯವನ್ನು ಹೊರತೆಗೆಯುತ್ತಾನೆ… ಈ ಅರ್ಥದಲ್ಲಿ (ರಾಮಾಯಣದ) ಯಾವ ಪಠ್ಯವೂ ಮೂಲವಲ್ಲ. ಆದರೆ ಯಾವ ಕಥನವೂ ಕೇವಲ ಮರುಕಥನವಲ್ಲ; ಮತ್ತು ಈ ಕಥೆಗೆ ಕೊನೆಯಿಲ್ಲ. ಆದರೆ ಪ್ರತಿಯೊಂದು ಪಠ್ಯವೂ ಸ್ವಯಂ ಪೂರ್ಣವಾಗಿರುತ್ತದೆ~ (ಪು. 158).

ಕೊನೆಯಲ್ಲಿ, ರಾಮಾಯಣ-ಶ್ರವಣದ ಪರಿಣಾಮವನ್ನು ದಾಖಲಿಸುವ ಒಂದು ಕಥೆಯೊಡನೆ ರಾಮಾನುಜನ್ ತಮ್ಮ ಲೇಖನವನ್ನು ಮುಗಿಸುತ್ತಾರೆ.

ಕಳೆದ ಎರಡು ದಶಕಗಳಲ್ಲಿ ಅಂತರರಾಷ್ಟ್ರೀಯ ವಿದ್ವತ್ ಮನ್ನಣೆಯನ್ನು ಗಳಿಸಿರುವ ಹಾಗೂ ಸಾಂಸ್ಕೃತಿಕ ತೌಲನಿಕ ವಿಮರ್ಶೆಯ ಒಂದು ಪ್ರಮುಖ ಮಾದರಿಯಾಗಿರುವ ರಾಮಾನುಜನ್ ಅವರ ಈ ಲೇಖನ ಇತ್ತೀಚೆಗೆ ದೆಹಲಿ ವಿ.ವಿ.ಯಲ್ಲಿ ವಾದ-ವಿವಾದಗಳಿಗೆ ಗುರಿಯಾಗಿ, ಕೊನೆಗೆ ಅದನ್ನು ಪಠ್ಯಾವಳಿಯಿಂದ ಬಿಟ್ಟಿರುವುದು ಅತ್ಯಂತ ಖೇದದ  ಸಂಗತಿ.

2006ರಲ್ಲಿ ಈ ಲೇಖನ ಬಿ.ಎ. ಆನರ್ಸ್ `ಕಲ್ಚರಲ್ ಹಿಸ್ಟರಿ~ ಪಠ್ಯಕ್ರಮದಲ್ಲಿ ಸೇರಿಸಲ್ಪಟ್ಟಿತು; 2008ರಲ್ಲಿಯೇ ಎಬಿವಿಪಿ ಕಾರ್ಯಕರ್ತರು ಈ ಲೇಖನದ ವಿರುದ್ಧ ಗಲಭೆ ಮಾಡಿ, ಇತಿಹಾಸ ವಿಭಾಗಕ್ಕೆ ನುಗ್ಗಿ, ಅಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು.

ಅನಂತರ, ಈ ವಿಷಯ ಸುಪ್ರೀಂ ಕೋರ್ಟ್‌ಗೆ ಹೋಗಿ, ಅದರ ಆದೇಶದಂತೆ ರಚಿಸಲ್ಪಟ್ಟ ನಾಲ್ಕು ತಜ್ಞರ ಸಮಿತಿಯಲ್ಲಿ ಮೂವರು `ಇದು ಮೌಲಿಕ ಸಂಶೋಧನೆಯನ್ನು ಒಳಗೊಂಡಿದೆ~ ಎಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದರು; ಆದರೆ, ನಾಲ್ಕನೆಯವರು `ಈ ಲೇಖನವನ್ನು ಹಿಂದುಗಳಲ್ಲದವರು ಪಾಠ ಮಾಡಲು ಅಸಾಧ್ಯ; ಮತ್ತು ಇದನ್ನು ಅರ್ಥಮಾಡಿಕೊಳ್ಳಲು ಕಿಶೋರಾವಸ್ಥೆಯ ವಿದ್ಯಾರ್ಥಿಗಳಿಗೆ ಸಾಧ್ಯವಿಲ್ಲ; ಆದುದರಿಂದ ಇದನ್ನು ಪಠ್ಯಾವಳಿಯಿಂದ ತೆಗೆಯಬೇಕು~ ಎಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದರು.

ಎರಡು ವಾರಗಳ ಹಿಂದೆ, ಈ ಒಬ್ಬರ ವಾದವನ್ನು ಒಪ್ಪಿ, ದೆಹಲಿ ವಿ. ವಿ.ಯ ಅಕಡೆಮಿಕ್ ಕೌನ್ಸಿಲ್ ಈ ಲೇಖನವನ್ನು ಪಠ್ಯಾವಳಿಯಿಂದ ತೆಗೆದು ಹಾಕಿತು.

ಎಬಿವಿಪಿ ಮತ್ತು ಇತರ ಬಲಪಂಥೀಯರು ಈ ಲೇಖನವನ್ನು ವಿರೋಧಿಸುವ ಕಾರಣಗಳು (ಪತ್ರಿಕೆಗಳಲ್ಲಿ ಬಂದಂತೆ) ಮೂರು: ಕೆಲವು ರಾಮಾಯಣಗಳು ಸೀತೆ ರಾವಣನ ಮಗಳೆಂದು ನಿರೂಪಿಸುತ್ತವೆ ಎಂಬುದನ್ನು ಈ ಲೇಖನ ಪ್ರಸ್ತಾಪಿಸುತ್ತದೆ; ಅವತಾರ ಪುರುಷನಾದ ರಾಮನನ್ನು ಮಾನವನೆಂದು ಕೆಲವು ರಾಮಾಯಣಗಳು ನಿರೂಪಿಸುವುದನ್ನು ರಾಮಾನುಜನ್ ದಾಖಲಿಸುತ್ತಾರೆ; ಮತ್ತು, ಈ ಬಗೆಯ ಚರ್ಚೆ `ಹಿಂದುಗಳ ಭಾವನೆಗಳಿಗೆ ನೋವುಂಟು ಮಾಡುತ್ತದೆ.~

ಸೀತೆ ರಾವಣನ ಮಗಳೆಂದು ಕನ್ನಡ-ತೆಲುಗು ಮೌಖಿಕ ರಾಮಾಯಣಗಳಲ್ಲಿ. ಜೈನ ಪರಂಪರೆಯ ವಾಸುದೇವಹಿಂಡಿ ಎಂಬ ಕಥನದಲ್ಲಿ, ಮತ್ತು ಆಗ್ನೇಯ ಏಷ್ಯಾದ (ಥಾಯ್) ರಾಮಾಕೀನ್ ಕೃತಿಯಲ್ಲಿ ನಿರೂಪಿಸಲ್ಪಟ್ಟಿದೆ ಎಂಬುದನ್ನು ರಾಮಾನುಜನ್ ದಾಖಲಿಸುತ್ತಾರೆ, ನಿಜ.

ಆದರೆ, ಇನ್ನೂ ಅನೇಕ ಲಿಖಿತ-ಮೌಖಿಕ ರಾಮಾಯಣಗಳಲ್ಲಿ ಸೀತೆ ರಾವಣನ ಮಗಳೆಂದು ನಿರೂಪಿಸಲ್ಪಟ್ಟಿದೆ: 10 ನೆಯ ಶತಮಾನದ ಅಭಿನಂದನನ ಸಂಸ್ಕೃತ ರಾಮಚರಿತ; 12 ನೆಯ ಶತಮಾನದ ಸಂಸ್ಕೃತ ಅದ್ಭುತ ರಾಮಾಯಣ; ಒರಿಯಾ ಭಾಷೆಯ, 18ನೆಯ ಶತಮಾನದ ಸರಳದಾಸನ ರಾಮಾಯಣ; ಮೌಖಿಕ ಸಂಪ್ರದಾಯದ  ಕುಕಣಾ ರಾಮಾಯಣ, ಅವಧ್ ರಾಮಾಯಣ ಇತ್ಯಾದಿ.

ಭಿನ್ನ ಕಾಲಘಟ್ಟಗಳಲ್ಲಿ, ಭಿನ್ನ ಭಾಷಿಕ ಸಮುದಾಯಗಳಲ್ಲಿ ಪ್ರಚಲಿತವಿದ್ದ `ಕಥೆ-ಐತಿಹ್ಯ~ಗಳನ್ನು ಆಧರಿಸಿ ಈ ಕೃತಿಗಳು ರಚಿಸಲ್ಪಟ್ಟಿವೆ; ಮತ್ತು, ವಾಲ್ಮೀಕಿ ರಾಮಾಯಣಕ್ಕೂ ಮೊದಲು ರಾಮ-ರಾವಣ ಕಥೆಗಳು ಜಾತಕ ಕಥೆಗಳಲ್ಲಿ ಇದ್ದುವು ಎಂಬುದನ್ನು ಮಿರ್ಜಿ ಆಣ್ಣಾರಾಯರು, ಜಾಕೋಬಿ, ರೋಮಿಲಾ ಥಾಪರ್ ಮುಂತಾದವರು ಅಧಿಕಾರಯುತವಾಗಿ ತೀರ್ಮಾನಿಸಿದ್ದಾರೆ.

ಮುಖ್ಯವಾಗಿ ಇಲ್ಲಿ ಗಮನಿಸಬೇಕಾದುದು ರಾಮಾನುಜನ್ ಅವರ ವಿಮರ್ಶಾತ್ಮಕ ನಿಲುವು: ತೌಲನಿಕ ವಿಮರ್ಶೆಯಲ್ಲಿ `ಇದು ಸರಿ, ಇದು ತಪ್ಪು~ ಎಂಬಂತಹ ಮೌಲ್ಯಾತ್ಮಕ ನಿಲುವಿರುವುದಿಲ್ಲ. ಅದರ ಬದಲು ವಿವರಣೆ ಹಾಗೂ ಸಾಂಸ್ಕೃತಿಕ ವ್ಯಾಖ್ಯಾನ.  ರಾಮಾನುಜನ್ ಅವರದು ಈ ಬಗೆಯ ವಸ್ತುನಿಷ್ಠ ತೌಲನಿಕ ವ್ಯಾಖ್ಯಾನ.

ಇನ್ನೂ ಮುಖ್ಯವಾಗಿ ಶ್ರೀರಾಮನ ದೈವತ್ವದ/ ಚಾರಿತ್ರಿಕತೆಯ ಪ್ರಶ್ನೆ.  ಪ್ರಾಚೀನ ಕಾಲದಿಂದಲೂ ಭಾರತೀಯ ವಿದ್ವಾಂಸರು ಮಹಾಭಾರತವನ್ನು ಇತಿಹಾಸವೆಂದು ಮತ್ತು ರಾಮಾಯಣವನ್ನು ಕಾವ್ಯವೆಂದು ಪರಿಗಣಿಸಿದ್ದಾರೆ.

ರಾಮನ ಮಾನವತೆಯನ್ನು ವಾಲ್ಮೀಕಿ ಮುನಿಗಳ ರಾಮಾಯಣದ ಎರಡನೆಯ ಶ್ಲೋಕವೇ ದೃಢಪಡಿಸುತ್ತದೆ: `ಕೋ..ನಸ್ಮಿನ್ ಸಂಪ್ರತಮ್ ಲೋಕೆ..~ (ಎಂದರೆ `ಈ ಲೋಕದಲ್ಲಿ ಯಾರು ಗುಣವಾನ್, ವೀರ್ಯವಾನ್ ಇತ್ಯಾದಿ ವಿಶೇಷಣಗಳಿಗೆ ಪಾತ್ರರಾದವರು~) ಎಂದು ಮುನಿಗಳು ನಾರದರನ್ನು ಕೇಳುತ್ತಾರೆ; ಮತ್ತು ನಾರದರು ಶ್ರೀರಾಮನನ್ನು ಹೆಸರಿಸುತ್ತಾರೆ.
ಹಾಗೆಯೇ, ಕಾವ್ಯದ ಕೊನೆಯಲ್ಲಿ ಶ್ರೀರಾಮನು ತಾನು ಮನುಷ್ಯಮಾತ್ರ ಎಂಬುದನ್ನು ಹೀಗೆ ಸ್ಪಷ್ಟಪಡಿಸುತ್ತಾನೆ: `ಆತ್ಮಾನಂ ಮಾನುಷಂ ಮನ್ಯೆ~.

Speaking of Siva, Hymns for the Drowning, Poems of ove and War ಇತ್ಯಾದಿ ಅನುವಾದಿತ ಕೃತಿಗಳ ಮೂಲಕ ಹಾಗೂ ತಮ್ಮ ಸ್ವೋಪಜ್ಞ ವಿಮರ್ಶಾತ್ಮಕ ಲೇಖನಗಳ ಮೂಲಕ ರಾಮಾನುಜನ್ ಭಾರತದ ಪ್ರಾಂತೀಯ ಭಾಷೆಗಳ ಸಾಹಿತ್ಯ-ಸಂಸ್ಕೃತಿಗಳನ್ನು ಹೊರ ಜಗತ್ತಿಗೆ ಪರಿಚಯಿಸಿ, ಆ ಮೂಲಕ `ಓರಿಯೆಂಟಲಿಸ್ಟ್~ ಚಿಂತನೆಗೆ ವಸಾಹತೋತ್ತರ ರೂಪವನ್ನು ಕೊಟ್ಟರು. ಅಂತಹ ಭಾರತೀಯ ವಿದ್ವಾಂಸನ ಪ್ರಬುದ್ಧ ಸಂಶೋಧನಾ ಲೇಖನವನ್ನು ಕುರಿತ ಪ್ರತಿಭಟನೆ ಅತೀವ ದುರದೃಷ್ಟಕರ ಎಂದಷ್ಟೇ ಹೇಳಬಹುದು.

ಸೌಜನ್ಯ : ಪ್ರಜಾವಾಣಿ, 25 ಅಕ್ಟೋಬರ್ 2011

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending