Connect with us

ಬಹಿರಂಗ

ಮುನ್ನೂರು ರಾಮಾಯಣಗಳು : ಒಂದು ವ್ಯಾಖ್ಯಾನ

Published

on

ಎ. ಕೆ. ರಾಮಾನುಜನ್ ಅವರ `ಥ್ರೀ ಹಂಡ್ರೆಡ್ ರಾಮಾಯಣಾಸ್: ಫೈವ್ ಎಕ್ಸಾಂಪಲ್ಸ್ ಅಂಡ್ ಥ್ರೀ ಥಾಟ್ಸ್ ಆನ್ ಟ್ರಾನ್ಸ್‌ಲೇಷನ್ಸ್~ (Three Hundred Ramayanas: Five Examples and Three Thoughts on Translations) ಎಂಬ ಪ್ರಸಿದ್ಧ ಲೇಖನ ಮೊದಲಿಗೆ ಚಿಕಾಗೋ ವಿ.ವಿ.ಯಲ್ಲಿ 1985-86ರಲ್ಲಿ ನಡೆದ ಕಮ್ಮಟವೊಂದರಲ್ಲಿ ಮಾಡಿದ ಭಾಷಣ; ಅನಂತರ ಅದನ್ನು ವಿಸ್ತರಿಸಿ, ಬರೆದ  ಲೇಖನ ಪಾಲಾ ರಿಚ್ಮನ್ ಅವರ Many Ramayanas  (1991) ಎಂಬ ಸಂಕಲನದ ಮೊದಲ ಲೇಖನವಾಗಿ ಪ್ರಕಟವಾಯಿತು.

ವಿನಯ್ ಧಾರ್ವಾಡಕರ್ ಸಂಪಾದಿಸಿರುವ ರಾಮಾನುಜನ್ ಅವರ ಸಮಗ್ರ ಲೇಖನಗಳ ಸಂಕಲನದಲ್ಲಿ ಇದು ಸೇರ್ಪಡೆಯಾಗಿದೆ (1999; ಪು. 131-160).

ತಮ್ಮ ಕಾಲದಲ್ಲಿ ಪ್ರಚಲಿತವಿದ್ದ ರಾಮ ಕಥೆಗಳನ್ನಾಧರಿಸಿ ವಾಲ್ಮೀಕಿ ಮುನಿಗಳು ಸಂಸ್ಕೃತದಲ್ಲಿ ಭಾರತದ ಆದಿಕಾವ್ಯವನ್ನು ಬರೆದ ನಂತರ, ಕಳೆದ 2500 ವರ್ಷಗಳ ಅವಧಿಯಲ್ಲಿ, ಭಾರತದ ಹಾಗೂ ದಕ್ಷಿಣ ಏಷ್ಯಾದ ಎಲ್ಲಾ ಭಾಷೆಗಳಲ್ಲಿಯೂ ರಾಮಕಥೆಯು ಮತ್ತೆ ಮತ್ತೆ ಕಥಿಸಲ್ಪಟ್ಟಿದೆ; ಮತ್ತು, ಈ ಪರಂಪರೆ ಇನ್ನೂ ಮುಂದುವರಿದಿದೆ.

ಪ್ರಾಯಃ ಸಾವಿರವನ್ನೂ ಮೀರುವ ಇವೆಲ್ಲಾ ರಾಮಾಯಣಗಳನ್ನು ಯಾವ ಪರಿಪ್ರೇಕ್ಷ್ಯದಿಂದ ನೋಡಬಹುದು? ಈ ರಾಮಾಯಣಗಳಲ್ಲಿ ಕಂಡುಬರುವ ಭಿನ್ನತೆಗಳಲ್ಲಿ ಏನಾದರೂ ಸಮಾನ ವಿನ್ಯಾಸವಿದೆಯೆ? ರಾಮಾನುಜನ್ ಅವರ ತೌಲನಿಕ ಲೇಖನ ಈ ಕಠಿಣ ಪ್ರಶ್ನೆಗಳಿಗೆ ಉತ್ತರವನ್ನು ಶೋಧಿಸುತ್ತದೆ.

ಈ ದೀರ್ಘ ಲೇಖನದಲ್ಲಿ ಚರ್ಚಿಸಲ್ಪಟ್ಟಿರುವ ವಿಷಯಗಳ ಹರಹು ಹೀಗಿದೆ: ಪೀಠಿಕೆ, ವಾಲ್ಮೀಕಿ ಮತ್ತು ಕಂಬನ್, ಜೈನ ರಾಮಾಯಣಗಳು, ಲಿಖಿತ-ಮೌಖಿಕ ಕಥನಗಳು, ದಕ್ಷಿಣ ಏಷ್ಯಾದ ಒಂದು ರಾಮಕಥೆ, ಭಿನ್ನತೆಗಳ ವಿನ್ಯಾಸ, ಭಾಷಾಂತರಗಳ ಸ್ವರೂಪ, ಮತ್ತು ರಾಮಾಯಣ ಶ್ರವಣದ ಪರಿಣಾಮ.

ಪೀಠಿಕೆಯಲ್ಲಿ, ಒಂದು ಜಾನಪದ ಕಥೆಯ ಮೂಲಕ ಭಾರತದಲ್ಲಿ ಮತ್ತು ಇತರ ದೇಶಗಳಲ್ಲಿ, ಮೌಖಿಕ ಹಾಗೂ ಲಿಖಿತ ಪರಂಪರೆಗಳಲ್ಲಿ ಅನೇಕ ರಾಮಾಯಣಗಳಿರುವುದನ್ನು ದಾಖಲಿಸಿ, ತಮ್ಮ ಲೇಖನದ ಉದ್ದೇಶ `ಈ ಬಗೆಯ ನೂರಾರು ರಾಮಾಯಣಗಳ ಭಿನ್ನತೆಗಳಲ್ಲಿ ಇರಬಹುದಾದ ವಿನ್ಯಾಸವನ್ನು ಗುರುತಿಸುವುದು’ ಎಂದು ರಾಮಾನುಜನ್ ಮಂಡಿಸುತ್ತಾರೆ.

ಅನಂತರ, ವಾಲ್ಮೀಕಿ-ಕಂಬನ್ ರಾಮಾಯಣಗಳಲ್ಲಿರುವ ಅಹಲ್ಯಾ ಪ್ರಕರಣವನ್ನು ತುಲನಾತ್ಮಕವಾಗಿ  ವಿಶ್ಲೇಷಿಸುತ್ತಾ, ಕಂಬನ್ ರಾಮಾಯಣದಲ್ಲಿರುವ ಈ ಪ್ರಸಂಗದ ನಾಟಕೀಯತೆ ಹಾಗೂ ತಮಿಳು ಭಕ್ತಿಪಂಥದ ಪ್ರಭಾವ ಇತ್ಯಾದಿ ಅಂಶಗಳನ್ನು ರಾಮಾನುಜನ್ ವಿವರಿಸುತ್ತಾರೆ:  ವಾಲ್ಮೀಕಿ ರಾಮಾಯಣದಲ್ಲಿ ಇಂದ್ರನು ಅಹಲ್ಯೆಯನ್ನು ವಂಚಿಸಿ ಭೋಗಿಸಿದರೆ, ಕಂಬನ್ ಕೃತಿಯಲ್ಲಿ, ತಾನು ತಪ್ಪು ಮಾಡುತ್ತಿದ್ದೆೀನೆಂದು ಅಹಲ್ಯೆಗೆ ಗೊತ್ತಿದ್ದರೂ ತನ್ನ ಮೋಹವನ್ನು ಜಯಿಸಲಾರದೆ ಅವಳು ಇಂದ್ರನಿಗೆ ವಶವಾಗುತ್ತಾಳೆ.

ಅನಂತರ, ವಿಮಲಸೂರಿಯ ಪಉಮ ಚರಿಯದಿಂದ ಪ್ರಾರಂಭವಾಗುವ ಜೈನ ರಾಮಾಯಣಗಳು ಮತ್ತು ವಾಲ್ಮೀಕಿ ರಾಮಾಯಣ ಇವುಗಳ ನಡುವಿನ ಭಿನ್ನತೆಗಳನ್ನು ಹೀಗೆ ಗುರುತಿಸುತ್ತಾರೆ: ಜೈನ ರಾಮಾಯಣಗಳಲ್ಲಿ ರಾವಣನು ಕ್ರೂರ ರಾಕ್ಷಸನಲ್ಲ.

63 ಶಲಾಕಾಪುರುಷರಲ್ಲಿ ಒಬ್ಬ ಪ್ರತಿವಾಸುದೇವ; ಉದಾತ್ತ ರಾವಣನಿಗಿರುವ ಒಂದೇ ಒಂದು ಮಿತಿಯೆಂದರೆ ಸೀತಾ ವ್ಯಾಮೋಹ;  ರಾವಣ ವಧೆಯಾಗುವುದು ಲಕ್ಷ್ಮಣನಿಂದ; ರಾವಣ, ಕುಂಭಕರ್ಣ, ವಾಲಿ, ಹನುಮಂತ, ಜಾಂಬವಂತ, ಮುಂತಾದವರು ರಾಕ್ಷಸರಾಗಲಿ ಕಪಿ ಕರಡಿಗಳಾಗಲಿ ಅಲ್ಲ. ಅವರೆಲರ‌್ಲೂ ವಿದ್ಯಾಧರ ಕುಲಕ್ಕೆ ಸೇರಿದವರು; ಇತ್ಯಾದಿ.

ಮುಂದಿನ ಭಾಗದಲ್ಲಿ, ಲಿಖಿತ-ಮೌಖಿಕ ರಾಮಾಯಣ ಪರಂಪರೆಗಳನ್ನು ವ್ಯಾಖ್ಯಾನಿಸುತ್ತಾ, ರಾಮಾನುಜನ್ ಕನ್ನಡದ (ರಾಗೌ ಮುಂತಾದವರು ಸಂಪಾದಿಸಿರುವ, 1973ರಲ್ಲಿ ಪ್ರಕಟವಾದ) `ತಂಬೂರಿ ರಾಮಾಯಣವನ್ನು ದೀರ್ಘವಾಗಿ ಚರ್ಚಿಸುತ್ತಾರೆ.

ಮಕ್ಕಳಿಲ್ಲದ ರಾವಣನು ಮುನಿ ಕೊಟ್ಟ ಹಣ್ಣನ್ನು ತಾನೇ ಸೇವಿಸಿ, ಗರ್ಭವನ್ನು ಧರಿಸಿ, `ಸೀತಾಗ~ ಹೊರಬಂದ ಮಗು `ಸೀತೆ; ಮುಂದೆ, ಅವಳು ತನ್ನ ಕುಲವನ್ನೇ ನಾಶಮಾಡುತ್ತಾಳೆಂಬ ಜೋತಿಷ್ಕರ ಹೇಳಿಕೆಯನ್ನು ನಂಬಿ, ಅವಳನ್ನು ಒಂದು ಪೆಟ್ಟಿಗೆಯಲ್ಲಿಟ್ಟು ನದಿಯಲ್ಲಿ ತೇಲಿ ಬಿಡುತ್ತಾನೆ ಮತ್ತು ಜನಕನಿಗೆ ಆ ಪೆಟ್ಟಿಗೆ ಸಿಕ್ಕಿ, ಅವನು ಆ ಮಗುವನ್ನು ತಂದು ಸಾಕುತ್ತಾನೆ.

ರಾಮಾನುಜನ್ ಇಲ್ಲಿ ಗಮನಿಸುವ ಎರಡು ಪ್ರಮುಖ ಅಂಶಗಳೆಂದರೆ 1) ಸೀತೆ ರಾವಣನ ಮಗಳು, 2) ರಾವಣನು ಗರ್ಭಧಾರಣೆ ಮಾಡುವುದು.  ಈ ಎರಡೂ ಘಟನೆಗಳ ಆಳದಲ್ಲಿ ಸ್ತ್ರೀವಿಶಿಷ್ಟ ಗರ್ಭಕೋಶ ಹಾಗೂ ಪ್ರಸವ ಇವುಗಳನ್ನು ಕುರಿತು ಪುರುಷನಿಗಿರುವ ಅಸೂಯೆ ಮತ್ತು ತನ್ನ ಮಗಳನ್ನು ಕುರಿತು ತಂದೆಗಿರುವ `ಈಡಿಪಸ್~ ಅಥವಾ `ಅಗಮ್ಯ ಗಮನ~ದ  ಆಶಯ, ಇತ್ಯಾದಿಗಳನ್ನು ಗುರುತಿಸಿ, ರಾಮಾನುಜನ್ ಈ ಆಶಯಗಳು ಭಾರತೀಯ ಸಾಹಿತ್ಯದಲ್ಲಿ ವಿಫುಲವಾಗಿವೆ ಎಂದು ಮಂಡಿಸುತ್ತಾರೆ.

ಅನಂತರ, ಥಾಯ್ ಭಾಷೆಯಲ್ಲಿರುವ ರಾಮಾಕೀನ್ ಎಂಬ ಹೆಸರಿನ ರಾಮಾಯಣ ವನ್ನು ವಿಶ್ಲೇಷಿಸುತ್ತಾ, ರಾಮಾನುಜನ್ ಈ ರಚನೆಯ ಭಿನ್ನತೆಗಳನ್ನು ಗುರುತಿಸುತ್ತಾರೆ: ಇಲ್ಲಿ ಸೀತೆಗೆ ವನವಾಸ ಪ್ರಾಪ್ತವಾಗುವುದು ಶೂರ್ಪನಖಿಯ ಕುಯುಕ್ತಿಯಿಂದ (ಕನ್ನಡದ ಚಿತ್ರಪಟ ರಾಮಾಯಣದಲ್ಲಿರುವಂತೆ); ಸೀತೆ ರಾವಣ-ಮಂಡೋದರಿಯರ ಮಗಳು, ಆದರೆ ಭವಿಷ್ಯದ್ವಾಣಿಗೆ ಹೆದರಿ ರಾವಣನು ಅವಳನ್ನು ದೂರಮಾಡುತ್ತಾನೆ; ಇತ್ಯಾದಿ.

ಈ ಬಗೆಯಲ್ಲಿ, ವೈದಿಕ ಪರಂಪರೆಯ ರಾಮಾಯಣಗಳು, ಜೈನ ಪರಂಪರೆಯ ಹಾಗೂ ಮೌಖಿಕ ಪರಂಪರೆಯ ರಾಮಾಯಣಗಳು ಮತ್ತು ಆಗ್ನೇಯ ಏಷ್ಯಾದ ರಾಮಾಯಣಗಳು, ಇವುಗಳ ನಡುವಿನ ಸಮಾನತೆ-ಭಿನ್ನತೆಗಳನ್ನು ಗುರುತಿಸಿದ ನಂತರ, ಈ ಲೇಖನದ ಎರಡು ಮುಖ್ಯ ಭಾಗಗಳು ಬರುತ್ತವೆ.

`ಭಿನ್ನತೆಗಳ ವಿನ್ಯಾಸ~ ಎಂಬ ಭಾಗದಲ್ಲಿ, ಹೇಗೆ ಈ ಪರಂಪರೆಗಳಲ್ಲಿ ಎರಡು ಭಿನ್ನ ಮುಕ್ತಾಯಗಳ (ಪಟ್ಟಾಭಿಷೇಕ/ ಲವ-ಕುಶ ಜನನ) ಹಾಗೂ ಎರಡು ಭಿನ್ನ ಪ್ರಾರಂಭಗಳ ರಾಮಾಯಣಗಳಿವೆ; ಮತ್ತು ಇವುಗಳು ಆಳದಲ್ಲಿ (ಮುಖ್ಯವಾಗಿ ಸೀತೆ) ಫಲವಂತಿಕೆ ಮತ್ತು ನಿಸರ್ಗ-ಮಾನವ ಸಂಬಂಧಗಳ ರೂಪಕಗಳು ಎಂದು ರಾಮಾನುಜನ್ ವಿವರಿಸುತ್ತಾರೆ.

ಹಾಗೆಯೇ, ಪ್ರತಿಯೊಂದು ರಾಮಾಯಣವನ್ನೂ ಅದರ `ಸಂದರ್ಭ,~ ಎಂದರೆ, ಆ ಕೃತಿ ರಚನೆಯಾದ ಭಾಷಿಕ ಸಂದರ್ಭ, ಪ್ರಾದೇಶಿಕ ಪರಂಪರೆ, ಆ ಸಮುದಾಯದ/ಲೇಖಕನ ಧಾರ್ಮಿಕ ನಂಬಿಕೆ ಹಾಗೂ ಸಾಮಾಜಿಕ ಮೌಲ್ಯಗಳು, ಇತ್ಯಾದಿ ರೂಪಿಸುತ್ತವೆ ಎಂಬ ತೀರ್ಮಾನಕ್ಕೆ ಬರುತ್ತಾರೆ.

ಈ ಸಂದರ್ಭದಲ್ಲಿಯೇ ಅವರ ಪ್ರಖ್ಯಾತ ಹೇಳಿಕೆ ಬರುತ್ತದೆ: `ರಾಮಾಯಣವೆಂದರೆ ಭಾರತದ ಎರಡನೆಯ ಭಾಷೆ~. ಮುಂದಿನ ಭಾಗದಲ್ಲಿ,  ರಾಮಕಥೆಯ ಈ ಭಿನ್ನ ರೂಪಣೆಗಳನ್ನು `ಅನುವಾದ~ಗಳೆಂದು ಕರೆಯಬಹುದು ಎಂದು ವಾದಿಸುತ್ತಾ, ರಾಮಾನುಜನ್ ಮೂರುಬಗೆಯ ಅನುವಾದ ಮಾರ್ಗಗಳನ್ನು ವಿವರಿಸುತ್ತಾರೆ (Iconic/Indexical/ Symbolic). ಅನಂತರ,  ಎಲ್ಲಾ ರಾಮಾಯಣಗಳನ್ನೂ ಒಳಗೊಳ್ಳುವ ಒಂದು ಸ್ವೋಪಜ್ಞ ವಿಮರ್ಶಾತ್ಮಕ ಚೌಕಟ್ಟನ್ನು ರೂಪಕಾತ್ಮಕವಾಗಿ ರಾಮಾನುಜನ್  ಹೀಗೆ ಕಟ್ಟುತ್ತಾರೆ:

`ನಿಯತವಾಗಿ, ಮತ್ತೆ ಮತ್ತೆ ರಾಮಾಯಣಗಳು ಸೃಷ್ಟಿಯಾದ ಸಾಂಸ್ಕೃತಿಕ ಪ್ರದೇಶವನ್ನು ಬಗೆಬಗೆಯ ಸೂಚಕಗಳಿಂದ  ತುಂಬಿರುವ ಒಂದು ಅಗಾಧ ಸರೋವರದಂತೆ ನೋಡಬಹುದು.

ಈ ಸೂಚಕಗಳೆಂದರೆ, ಕಥನ ಚೌಕಟ್ಟುಗಳು, ಪಾತ್ರಗಳು, ಹೆಸರುಗಳು, ಭೂಗೋಳ, ಘಟನೆಗಳು ಮತ್ತು ಸಂಬಂಧಗಳು, ಇತ್ಯಾದಿ. … ಪ್ರತಿಯೊಬ್ಬ ಭಾರತೀಯ ಲೇಖಕನೂ ಈ ಸರೋವರದಲ್ಲಿ ಮುಳುಗಿ ತನ್ನದೇ ಆದ ಒಂದು ವಿಶಿಷ್ಟ ಪಠ್ಯವನ್ನು ಹೊರತೆಗೆಯುತ್ತಾನೆ… ಈ ಅರ್ಥದಲ್ಲಿ (ರಾಮಾಯಣದ) ಯಾವ ಪಠ್ಯವೂ ಮೂಲವಲ್ಲ. ಆದರೆ ಯಾವ ಕಥನವೂ ಕೇವಲ ಮರುಕಥನವಲ್ಲ; ಮತ್ತು ಈ ಕಥೆಗೆ ಕೊನೆಯಿಲ್ಲ. ಆದರೆ ಪ್ರತಿಯೊಂದು ಪಠ್ಯವೂ ಸ್ವಯಂ ಪೂರ್ಣವಾಗಿರುತ್ತದೆ~ (ಪು. 158).

ಕೊನೆಯಲ್ಲಿ, ರಾಮಾಯಣ-ಶ್ರವಣದ ಪರಿಣಾಮವನ್ನು ದಾಖಲಿಸುವ ಒಂದು ಕಥೆಯೊಡನೆ ರಾಮಾನುಜನ್ ತಮ್ಮ ಲೇಖನವನ್ನು ಮುಗಿಸುತ್ತಾರೆ.

ಕಳೆದ ಎರಡು ದಶಕಗಳಲ್ಲಿ ಅಂತರರಾಷ್ಟ್ರೀಯ ವಿದ್ವತ್ ಮನ್ನಣೆಯನ್ನು ಗಳಿಸಿರುವ ಹಾಗೂ ಸಾಂಸ್ಕೃತಿಕ ತೌಲನಿಕ ವಿಮರ್ಶೆಯ ಒಂದು ಪ್ರಮುಖ ಮಾದರಿಯಾಗಿರುವ ರಾಮಾನುಜನ್ ಅವರ ಈ ಲೇಖನ ಇತ್ತೀಚೆಗೆ ದೆಹಲಿ ವಿ.ವಿ.ಯಲ್ಲಿ ವಾದ-ವಿವಾದಗಳಿಗೆ ಗುರಿಯಾಗಿ, ಕೊನೆಗೆ ಅದನ್ನು ಪಠ್ಯಾವಳಿಯಿಂದ ಬಿಟ್ಟಿರುವುದು ಅತ್ಯಂತ ಖೇದದ  ಸಂಗತಿ.

2006ರಲ್ಲಿ ಈ ಲೇಖನ ಬಿ.ಎ. ಆನರ್ಸ್ `ಕಲ್ಚರಲ್ ಹಿಸ್ಟರಿ~ ಪಠ್ಯಕ್ರಮದಲ್ಲಿ ಸೇರಿಸಲ್ಪಟ್ಟಿತು; 2008ರಲ್ಲಿಯೇ ಎಬಿವಿಪಿ ಕಾರ್ಯಕರ್ತರು ಈ ಲೇಖನದ ವಿರುದ್ಧ ಗಲಭೆ ಮಾಡಿ, ಇತಿಹಾಸ ವಿಭಾಗಕ್ಕೆ ನುಗ್ಗಿ, ಅಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು.

ಅನಂತರ, ಈ ವಿಷಯ ಸುಪ್ರೀಂ ಕೋರ್ಟ್‌ಗೆ ಹೋಗಿ, ಅದರ ಆದೇಶದಂತೆ ರಚಿಸಲ್ಪಟ್ಟ ನಾಲ್ಕು ತಜ್ಞರ ಸಮಿತಿಯಲ್ಲಿ ಮೂವರು `ಇದು ಮೌಲಿಕ ಸಂಶೋಧನೆಯನ್ನು ಒಳಗೊಂಡಿದೆ~ ಎಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದರು; ಆದರೆ, ನಾಲ್ಕನೆಯವರು `ಈ ಲೇಖನವನ್ನು ಹಿಂದುಗಳಲ್ಲದವರು ಪಾಠ ಮಾಡಲು ಅಸಾಧ್ಯ; ಮತ್ತು ಇದನ್ನು ಅರ್ಥಮಾಡಿಕೊಳ್ಳಲು ಕಿಶೋರಾವಸ್ಥೆಯ ವಿದ್ಯಾರ್ಥಿಗಳಿಗೆ ಸಾಧ್ಯವಿಲ್ಲ; ಆದುದರಿಂದ ಇದನ್ನು ಪಠ್ಯಾವಳಿಯಿಂದ ತೆಗೆಯಬೇಕು~ ಎಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದರು.

ಎರಡು ವಾರಗಳ ಹಿಂದೆ, ಈ ಒಬ್ಬರ ವಾದವನ್ನು ಒಪ್ಪಿ, ದೆಹಲಿ ವಿ. ವಿ.ಯ ಅಕಡೆಮಿಕ್ ಕೌನ್ಸಿಲ್ ಈ ಲೇಖನವನ್ನು ಪಠ್ಯಾವಳಿಯಿಂದ ತೆಗೆದು ಹಾಕಿತು.

ಎಬಿವಿಪಿ ಮತ್ತು ಇತರ ಬಲಪಂಥೀಯರು ಈ ಲೇಖನವನ್ನು ವಿರೋಧಿಸುವ ಕಾರಣಗಳು (ಪತ್ರಿಕೆಗಳಲ್ಲಿ ಬಂದಂತೆ) ಮೂರು: ಕೆಲವು ರಾಮಾಯಣಗಳು ಸೀತೆ ರಾವಣನ ಮಗಳೆಂದು ನಿರೂಪಿಸುತ್ತವೆ ಎಂಬುದನ್ನು ಈ ಲೇಖನ ಪ್ರಸ್ತಾಪಿಸುತ್ತದೆ; ಅವತಾರ ಪುರುಷನಾದ ರಾಮನನ್ನು ಮಾನವನೆಂದು ಕೆಲವು ರಾಮಾಯಣಗಳು ನಿರೂಪಿಸುವುದನ್ನು ರಾಮಾನುಜನ್ ದಾಖಲಿಸುತ್ತಾರೆ; ಮತ್ತು, ಈ ಬಗೆಯ ಚರ್ಚೆ `ಹಿಂದುಗಳ ಭಾವನೆಗಳಿಗೆ ನೋವುಂಟು ಮಾಡುತ್ತದೆ.~

ಸೀತೆ ರಾವಣನ ಮಗಳೆಂದು ಕನ್ನಡ-ತೆಲುಗು ಮೌಖಿಕ ರಾಮಾಯಣಗಳಲ್ಲಿ. ಜೈನ ಪರಂಪರೆಯ ವಾಸುದೇವಹಿಂಡಿ ಎಂಬ ಕಥನದಲ್ಲಿ, ಮತ್ತು ಆಗ್ನೇಯ ಏಷ್ಯಾದ (ಥಾಯ್) ರಾಮಾಕೀನ್ ಕೃತಿಯಲ್ಲಿ ನಿರೂಪಿಸಲ್ಪಟ್ಟಿದೆ ಎಂಬುದನ್ನು ರಾಮಾನುಜನ್ ದಾಖಲಿಸುತ್ತಾರೆ, ನಿಜ.

ಆದರೆ, ಇನ್ನೂ ಅನೇಕ ಲಿಖಿತ-ಮೌಖಿಕ ರಾಮಾಯಣಗಳಲ್ಲಿ ಸೀತೆ ರಾವಣನ ಮಗಳೆಂದು ನಿರೂಪಿಸಲ್ಪಟ್ಟಿದೆ: 10 ನೆಯ ಶತಮಾನದ ಅಭಿನಂದನನ ಸಂಸ್ಕೃತ ರಾಮಚರಿತ; 12 ನೆಯ ಶತಮಾನದ ಸಂಸ್ಕೃತ ಅದ್ಭುತ ರಾಮಾಯಣ; ಒರಿಯಾ ಭಾಷೆಯ, 18ನೆಯ ಶತಮಾನದ ಸರಳದಾಸನ ರಾಮಾಯಣ; ಮೌಖಿಕ ಸಂಪ್ರದಾಯದ  ಕುಕಣಾ ರಾಮಾಯಣ, ಅವಧ್ ರಾಮಾಯಣ ಇತ್ಯಾದಿ.

ಭಿನ್ನ ಕಾಲಘಟ್ಟಗಳಲ್ಲಿ, ಭಿನ್ನ ಭಾಷಿಕ ಸಮುದಾಯಗಳಲ್ಲಿ ಪ್ರಚಲಿತವಿದ್ದ `ಕಥೆ-ಐತಿಹ್ಯ~ಗಳನ್ನು ಆಧರಿಸಿ ಈ ಕೃತಿಗಳು ರಚಿಸಲ್ಪಟ್ಟಿವೆ; ಮತ್ತು, ವಾಲ್ಮೀಕಿ ರಾಮಾಯಣಕ್ಕೂ ಮೊದಲು ರಾಮ-ರಾವಣ ಕಥೆಗಳು ಜಾತಕ ಕಥೆಗಳಲ್ಲಿ ಇದ್ದುವು ಎಂಬುದನ್ನು ಮಿರ್ಜಿ ಆಣ್ಣಾರಾಯರು, ಜಾಕೋಬಿ, ರೋಮಿಲಾ ಥಾಪರ್ ಮುಂತಾದವರು ಅಧಿಕಾರಯುತವಾಗಿ ತೀರ್ಮಾನಿಸಿದ್ದಾರೆ.

ಮುಖ್ಯವಾಗಿ ಇಲ್ಲಿ ಗಮನಿಸಬೇಕಾದುದು ರಾಮಾನುಜನ್ ಅವರ ವಿಮರ್ಶಾತ್ಮಕ ನಿಲುವು: ತೌಲನಿಕ ವಿಮರ್ಶೆಯಲ್ಲಿ `ಇದು ಸರಿ, ಇದು ತಪ್ಪು~ ಎಂಬಂತಹ ಮೌಲ್ಯಾತ್ಮಕ ನಿಲುವಿರುವುದಿಲ್ಲ. ಅದರ ಬದಲು ವಿವರಣೆ ಹಾಗೂ ಸಾಂಸ್ಕೃತಿಕ ವ್ಯಾಖ್ಯಾನ.  ರಾಮಾನುಜನ್ ಅವರದು ಈ ಬಗೆಯ ವಸ್ತುನಿಷ್ಠ ತೌಲನಿಕ ವ್ಯಾಖ್ಯಾನ.

ಇನ್ನೂ ಮುಖ್ಯವಾಗಿ ಶ್ರೀರಾಮನ ದೈವತ್ವದ/ ಚಾರಿತ್ರಿಕತೆಯ ಪ್ರಶ್ನೆ.  ಪ್ರಾಚೀನ ಕಾಲದಿಂದಲೂ ಭಾರತೀಯ ವಿದ್ವಾಂಸರು ಮಹಾಭಾರತವನ್ನು ಇತಿಹಾಸವೆಂದು ಮತ್ತು ರಾಮಾಯಣವನ್ನು ಕಾವ್ಯವೆಂದು ಪರಿಗಣಿಸಿದ್ದಾರೆ.

ರಾಮನ ಮಾನವತೆಯನ್ನು ವಾಲ್ಮೀಕಿ ಮುನಿಗಳ ರಾಮಾಯಣದ ಎರಡನೆಯ ಶ್ಲೋಕವೇ ದೃಢಪಡಿಸುತ್ತದೆ: `ಕೋ..ನಸ್ಮಿನ್ ಸಂಪ್ರತಮ್ ಲೋಕೆ..~ (ಎಂದರೆ `ಈ ಲೋಕದಲ್ಲಿ ಯಾರು ಗುಣವಾನ್, ವೀರ್ಯವಾನ್ ಇತ್ಯಾದಿ ವಿಶೇಷಣಗಳಿಗೆ ಪಾತ್ರರಾದವರು~) ಎಂದು ಮುನಿಗಳು ನಾರದರನ್ನು ಕೇಳುತ್ತಾರೆ; ಮತ್ತು ನಾರದರು ಶ್ರೀರಾಮನನ್ನು ಹೆಸರಿಸುತ್ತಾರೆ.
ಹಾಗೆಯೇ, ಕಾವ್ಯದ ಕೊನೆಯಲ್ಲಿ ಶ್ರೀರಾಮನು ತಾನು ಮನುಷ್ಯಮಾತ್ರ ಎಂಬುದನ್ನು ಹೀಗೆ ಸ್ಪಷ್ಟಪಡಿಸುತ್ತಾನೆ: `ಆತ್ಮಾನಂ ಮಾನುಷಂ ಮನ್ಯೆ~.

Speaking of Siva, Hymns for the Drowning, Poems of ove and War ಇತ್ಯಾದಿ ಅನುವಾದಿತ ಕೃತಿಗಳ ಮೂಲಕ ಹಾಗೂ ತಮ್ಮ ಸ್ವೋಪಜ್ಞ ವಿಮರ್ಶಾತ್ಮಕ ಲೇಖನಗಳ ಮೂಲಕ ರಾಮಾನುಜನ್ ಭಾರತದ ಪ್ರಾಂತೀಯ ಭಾಷೆಗಳ ಸಾಹಿತ್ಯ-ಸಂಸ್ಕೃತಿಗಳನ್ನು ಹೊರ ಜಗತ್ತಿಗೆ ಪರಿಚಯಿಸಿ, ಆ ಮೂಲಕ `ಓರಿಯೆಂಟಲಿಸ್ಟ್~ ಚಿಂತನೆಗೆ ವಸಾಹತೋತ್ತರ ರೂಪವನ್ನು ಕೊಟ್ಟರು. ಅಂತಹ ಭಾರತೀಯ ವಿದ್ವಾಂಸನ ಪ್ರಬುದ್ಧ ಸಂಶೋಧನಾ ಲೇಖನವನ್ನು ಕುರಿತ ಪ್ರತಿಭಟನೆ ಅತೀವ ದುರದೃಷ್ಟಕರ ಎಂದಷ್ಟೇ ಹೇಳಬಹುದು.

ಸೌಜನ್ಯ : ಪ್ರಜಾವಾಣಿ, 25 ಅಕ್ಟೋಬರ್ 2011

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending