Connect with us

ಬಹಿರಂಗ

ಮುನ್ನೂರು ರಾಮಾಯಣಗಳು : ಒಂದು ವ್ಯಾಖ್ಯಾನ

Published

on

ಎ. ಕೆ. ರಾಮಾನುಜನ್ ಅವರ `ಥ್ರೀ ಹಂಡ್ರೆಡ್ ರಾಮಾಯಣಾಸ್: ಫೈವ್ ಎಕ್ಸಾಂಪಲ್ಸ್ ಅಂಡ್ ಥ್ರೀ ಥಾಟ್ಸ್ ಆನ್ ಟ್ರಾನ್ಸ್‌ಲೇಷನ್ಸ್~ (Three Hundred Ramayanas: Five Examples and Three Thoughts on Translations) ಎಂಬ ಪ್ರಸಿದ್ಧ ಲೇಖನ ಮೊದಲಿಗೆ ಚಿಕಾಗೋ ವಿ.ವಿ.ಯಲ್ಲಿ 1985-86ರಲ್ಲಿ ನಡೆದ ಕಮ್ಮಟವೊಂದರಲ್ಲಿ ಮಾಡಿದ ಭಾಷಣ; ಅನಂತರ ಅದನ್ನು ವಿಸ್ತರಿಸಿ, ಬರೆದ  ಲೇಖನ ಪಾಲಾ ರಿಚ್ಮನ್ ಅವರ Many Ramayanas  (1991) ಎಂಬ ಸಂಕಲನದ ಮೊದಲ ಲೇಖನವಾಗಿ ಪ್ರಕಟವಾಯಿತು.

ವಿನಯ್ ಧಾರ್ವಾಡಕರ್ ಸಂಪಾದಿಸಿರುವ ರಾಮಾನುಜನ್ ಅವರ ಸಮಗ್ರ ಲೇಖನಗಳ ಸಂಕಲನದಲ್ಲಿ ಇದು ಸೇರ್ಪಡೆಯಾಗಿದೆ (1999; ಪು. 131-160).

ತಮ್ಮ ಕಾಲದಲ್ಲಿ ಪ್ರಚಲಿತವಿದ್ದ ರಾಮ ಕಥೆಗಳನ್ನಾಧರಿಸಿ ವಾಲ್ಮೀಕಿ ಮುನಿಗಳು ಸಂಸ್ಕೃತದಲ್ಲಿ ಭಾರತದ ಆದಿಕಾವ್ಯವನ್ನು ಬರೆದ ನಂತರ, ಕಳೆದ 2500 ವರ್ಷಗಳ ಅವಧಿಯಲ್ಲಿ, ಭಾರತದ ಹಾಗೂ ದಕ್ಷಿಣ ಏಷ್ಯಾದ ಎಲ್ಲಾ ಭಾಷೆಗಳಲ್ಲಿಯೂ ರಾಮಕಥೆಯು ಮತ್ತೆ ಮತ್ತೆ ಕಥಿಸಲ್ಪಟ್ಟಿದೆ; ಮತ್ತು, ಈ ಪರಂಪರೆ ಇನ್ನೂ ಮುಂದುವರಿದಿದೆ.

ಪ್ರಾಯಃ ಸಾವಿರವನ್ನೂ ಮೀರುವ ಇವೆಲ್ಲಾ ರಾಮಾಯಣಗಳನ್ನು ಯಾವ ಪರಿಪ್ರೇಕ್ಷ್ಯದಿಂದ ನೋಡಬಹುದು? ಈ ರಾಮಾಯಣಗಳಲ್ಲಿ ಕಂಡುಬರುವ ಭಿನ್ನತೆಗಳಲ್ಲಿ ಏನಾದರೂ ಸಮಾನ ವಿನ್ಯಾಸವಿದೆಯೆ? ರಾಮಾನುಜನ್ ಅವರ ತೌಲನಿಕ ಲೇಖನ ಈ ಕಠಿಣ ಪ್ರಶ್ನೆಗಳಿಗೆ ಉತ್ತರವನ್ನು ಶೋಧಿಸುತ್ತದೆ.

ಈ ದೀರ್ಘ ಲೇಖನದಲ್ಲಿ ಚರ್ಚಿಸಲ್ಪಟ್ಟಿರುವ ವಿಷಯಗಳ ಹರಹು ಹೀಗಿದೆ: ಪೀಠಿಕೆ, ವಾಲ್ಮೀಕಿ ಮತ್ತು ಕಂಬನ್, ಜೈನ ರಾಮಾಯಣಗಳು, ಲಿಖಿತ-ಮೌಖಿಕ ಕಥನಗಳು, ದಕ್ಷಿಣ ಏಷ್ಯಾದ ಒಂದು ರಾಮಕಥೆ, ಭಿನ್ನತೆಗಳ ವಿನ್ಯಾಸ, ಭಾಷಾಂತರಗಳ ಸ್ವರೂಪ, ಮತ್ತು ರಾಮಾಯಣ ಶ್ರವಣದ ಪರಿಣಾಮ.

ಪೀಠಿಕೆಯಲ್ಲಿ, ಒಂದು ಜಾನಪದ ಕಥೆಯ ಮೂಲಕ ಭಾರತದಲ್ಲಿ ಮತ್ತು ಇತರ ದೇಶಗಳಲ್ಲಿ, ಮೌಖಿಕ ಹಾಗೂ ಲಿಖಿತ ಪರಂಪರೆಗಳಲ್ಲಿ ಅನೇಕ ರಾಮಾಯಣಗಳಿರುವುದನ್ನು ದಾಖಲಿಸಿ, ತಮ್ಮ ಲೇಖನದ ಉದ್ದೇಶ `ಈ ಬಗೆಯ ನೂರಾರು ರಾಮಾಯಣಗಳ ಭಿನ್ನತೆಗಳಲ್ಲಿ ಇರಬಹುದಾದ ವಿನ್ಯಾಸವನ್ನು ಗುರುತಿಸುವುದು’ ಎಂದು ರಾಮಾನುಜನ್ ಮಂಡಿಸುತ್ತಾರೆ.

ಅನಂತರ, ವಾಲ್ಮೀಕಿ-ಕಂಬನ್ ರಾಮಾಯಣಗಳಲ್ಲಿರುವ ಅಹಲ್ಯಾ ಪ್ರಕರಣವನ್ನು ತುಲನಾತ್ಮಕವಾಗಿ  ವಿಶ್ಲೇಷಿಸುತ್ತಾ, ಕಂಬನ್ ರಾಮಾಯಣದಲ್ಲಿರುವ ಈ ಪ್ರಸಂಗದ ನಾಟಕೀಯತೆ ಹಾಗೂ ತಮಿಳು ಭಕ್ತಿಪಂಥದ ಪ್ರಭಾವ ಇತ್ಯಾದಿ ಅಂಶಗಳನ್ನು ರಾಮಾನುಜನ್ ವಿವರಿಸುತ್ತಾರೆ:  ವಾಲ್ಮೀಕಿ ರಾಮಾಯಣದಲ್ಲಿ ಇಂದ್ರನು ಅಹಲ್ಯೆಯನ್ನು ವಂಚಿಸಿ ಭೋಗಿಸಿದರೆ, ಕಂಬನ್ ಕೃತಿಯಲ್ಲಿ, ತಾನು ತಪ್ಪು ಮಾಡುತ್ತಿದ್ದೆೀನೆಂದು ಅಹಲ್ಯೆಗೆ ಗೊತ್ತಿದ್ದರೂ ತನ್ನ ಮೋಹವನ್ನು ಜಯಿಸಲಾರದೆ ಅವಳು ಇಂದ್ರನಿಗೆ ವಶವಾಗುತ್ತಾಳೆ.

ಅನಂತರ, ವಿಮಲಸೂರಿಯ ಪಉಮ ಚರಿಯದಿಂದ ಪ್ರಾರಂಭವಾಗುವ ಜೈನ ರಾಮಾಯಣಗಳು ಮತ್ತು ವಾಲ್ಮೀಕಿ ರಾಮಾಯಣ ಇವುಗಳ ನಡುವಿನ ಭಿನ್ನತೆಗಳನ್ನು ಹೀಗೆ ಗುರುತಿಸುತ್ತಾರೆ: ಜೈನ ರಾಮಾಯಣಗಳಲ್ಲಿ ರಾವಣನು ಕ್ರೂರ ರಾಕ್ಷಸನಲ್ಲ.

63 ಶಲಾಕಾಪುರುಷರಲ್ಲಿ ಒಬ್ಬ ಪ್ರತಿವಾಸುದೇವ; ಉದಾತ್ತ ರಾವಣನಿಗಿರುವ ಒಂದೇ ಒಂದು ಮಿತಿಯೆಂದರೆ ಸೀತಾ ವ್ಯಾಮೋಹ;  ರಾವಣ ವಧೆಯಾಗುವುದು ಲಕ್ಷ್ಮಣನಿಂದ; ರಾವಣ, ಕುಂಭಕರ್ಣ, ವಾಲಿ, ಹನುಮಂತ, ಜಾಂಬವಂತ, ಮುಂತಾದವರು ರಾಕ್ಷಸರಾಗಲಿ ಕಪಿ ಕರಡಿಗಳಾಗಲಿ ಅಲ್ಲ. ಅವರೆಲರ‌್ಲೂ ವಿದ್ಯಾಧರ ಕುಲಕ್ಕೆ ಸೇರಿದವರು; ಇತ್ಯಾದಿ.

ಮುಂದಿನ ಭಾಗದಲ್ಲಿ, ಲಿಖಿತ-ಮೌಖಿಕ ರಾಮಾಯಣ ಪರಂಪರೆಗಳನ್ನು ವ್ಯಾಖ್ಯಾನಿಸುತ್ತಾ, ರಾಮಾನುಜನ್ ಕನ್ನಡದ (ರಾಗೌ ಮುಂತಾದವರು ಸಂಪಾದಿಸಿರುವ, 1973ರಲ್ಲಿ ಪ್ರಕಟವಾದ) `ತಂಬೂರಿ ರಾಮಾಯಣವನ್ನು ದೀರ್ಘವಾಗಿ ಚರ್ಚಿಸುತ್ತಾರೆ.

ಮಕ್ಕಳಿಲ್ಲದ ರಾವಣನು ಮುನಿ ಕೊಟ್ಟ ಹಣ್ಣನ್ನು ತಾನೇ ಸೇವಿಸಿ, ಗರ್ಭವನ್ನು ಧರಿಸಿ, `ಸೀತಾಗ~ ಹೊರಬಂದ ಮಗು `ಸೀತೆ; ಮುಂದೆ, ಅವಳು ತನ್ನ ಕುಲವನ್ನೇ ನಾಶಮಾಡುತ್ತಾಳೆಂಬ ಜೋತಿಷ್ಕರ ಹೇಳಿಕೆಯನ್ನು ನಂಬಿ, ಅವಳನ್ನು ಒಂದು ಪೆಟ್ಟಿಗೆಯಲ್ಲಿಟ್ಟು ನದಿಯಲ್ಲಿ ತೇಲಿ ಬಿಡುತ್ತಾನೆ ಮತ್ತು ಜನಕನಿಗೆ ಆ ಪೆಟ್ಟಿಗೆ ಸಿಕ್ಕಿ, ಅವನು ಆ ಮಗುವನ್ನು ತಂದು ಸಾಕುತ್ತಾನೆ.

ರಾಮಾನುಜನ್ ಇಲ್ಲಿ ಗಮನಿಸುವ ಎರಡು ಪ್ರಮುಖ ಅಂಶಗಳೆಂದರೆ 1) ಸೀತೆ ರಾವಣನ ಮಗಳು, 2) ರಾವಣನು ಗರ್ಭಧಾರಣೆ ಮಾಡುವುದು.  ಈ ಎರಡೂ ಘಟನೆಗಳ ಆಳದಲ್ಲಿ ಸ್ತ್ರೀವಿಶಿಷ್ಟ ಗರ್ಭಕೋಶ ಹಾಗೂ ಪ್ರಸವ ಇವುಗಳನ್ನು ಕುರಿತು ಪುರುಷನಿಗಿರುವ ಅಸೂಯೆ ಮತ್ತು ತನ್ನ ಮಗಳನ್ನು ಕುರಿತು ತಂದೆಗಿರುವ `ಈಡಿಪಸ್~ ಅಥವಾ `ಅಗಮ್ಯ ಗಮನ~ದ  ಆಶಯ, ಇತ್ಯಾದಿಗಳನ್ನು ಗುರುತಿಸಿ, ರಾಮಾನುಜನ್ ಈ ಆಶಯಗಳು ಭಾರತೀಯ ಸಾಹಿತ್ಯದಲ್ಲಿ ವಿಫುಲವಾಗಿವೆ ಎಂದು ಮಂಡಿಸುತ್ತಾರೆ.

ಅನಂತರ, ಥಾಯ್ ಭಾಷೆಯಲ್ಲಿರುವ ರಾಮಾಕೀನ್ ಎಂಬ ಹೆಸರಿನ ರಾಮಾಯಣ ವನ್ನು ವಿಶ್ಲೇಷಿಸುತ್ತಾ, ರಾಮಾನುಜನ್ ಈ ರಚನೆಯ ಭಿನ್ನತೆಗಳನ್ನು ಗುರುತಿಸುತ್ತಾರೆ: ಇಲ್ಲಿ ಸೀತೆಗೆ ವನವಾಸ ಪ್ರಾಪ್ತವಾಗುವುದು ಶೂರ್ಪನಖಿಯ ಕುಯುಕ್ತಿಯಿಂದ (ಕನ್ನಡದ ಚಿತ್ರಪಟ ರಾಮಾಯಣದಲ್ಲಿರುವಂತೆ); ಸೀತೆ ರಾವಣ-ಮಂಡೋದರಿಯರ ಮಗಳು, ಆದರೆ ಭವಿಷ್ಯದ್ವಾಣಿಗೆ ಹೆದರಿ ರಾವಣನು ಅವಳನ್ನು ದೂರಮಾಡುತ್ತಾನೆ; ಇತ್ಯಾದಿ.

ಈ ಬಗೆಯಲ್ಲಿ, ವೈದಿಕ ಪರಂಪರೆಯ ರಾಮಾಯಣಗಳು, ಜೈನ ಪರಂಪರೆಯ ಹಾಗೂ ಮೌಖಿಕ ಪರಂಪರೆಯ ರಾಮಾಯಣಗಳು ಮತ್ತು ಆಗ್ನೇಯ ಏಷ್ಯಾದ ರಾಮಾಯಣಗಳು, ಇವುಗಳ ನಡುವಿನ ಸಮಾನತೆ-ಭಿನ್ನತೆಗಳನ್ನು ಗುರುತಿಸಿದ ನಂತರ, ಈ ಲೇಖನದ ಎರಡು ಮುಖ್ಯ ಭಾಗಗಳು ಬರುತ್ತವೆ.

`ಭಿನ್ನತೆಗಳ ವಿನ್ಯಾಸ~ ಎಂಬ ಭಾಗದಲ್ಲಿ, ಹೇಗೆ ಈ ಪರಂಪರೆಗಳಲ್ಲಿ ಎರಡು ಭಿನ್ನ ಮುಕ್ತಾಯಗಳ (ಪಟ್ಟಾಭಿಷೇಕ/ ಲವ-ಕುಶ ಜನನ) ಹಾಗೂ ಎರಡು ಭಿನ್ನ ಪ್ರಾರಂಭಗಳ ರಾಮಾಯಣಗಳಿವೆ; ಮತ್ತು ಇವುಗಳು ಆಳದಲ್ಲಿ (ಮುಖ್ಯವಾಗಿ ಸೀತೆ) ಫಲವಂತಿಕೆ ಮತ್ತು ನಿಸರ್ಗ-ಮಾನವ ಸಂಬಂಧಗಳ ರೂಪಕಗಳು ಎಂದು ರಾಮಾನುಜನ್ ವಿವರಿಸುತ್ತಾರೆ.

ಹಾಗೆಯೇ, ಪ್ರತಿಯೊಂದು ರಾಮಾಯಣವನ್ನೂ ಅದರ `ಸಂದರ್ಭ,~ ಎಂದರೆ, ಆ ಕೃತಿ ರಚನೆಯಾದ ಭಾಷಿಕ ಸಂದರ್ಭ, ಪ್ರಾದೇಶಿಕ ಪರಂಪರೆ, ಆ ಸಮುದಾಯದ/ಲೇಖಕನ ಧಾರ್ಮಿಕ ನಂಬಿಕೆ ಹಾಗೂ ಸಾಮಾಜಿಕ ಮೌಲ್ಯಗಳು, ಇತ್ಯಾದಿ ರೂಪಿಸುತ್ತವೆ ಎಂಬ ತೀರ್ಮಾನಕ್ಕೆ ಬರುತ್ತಾರೆ.

ಈ ಸಂದರ್ಭದಲ್ಲಿಯೇ ಅವರ ಪ್ರಖ್ಯಾತ ಹೇಳಿಕೆ ಬರುತ್ತದೆ: `ರಾಮಾಯಣವೆಂದರೆ ಭಾರತದ ಎರಡನೆಯ ಭಾಷೆ~. ಮುಂದಿನ ಭಾಗದಲ್ಲಿ,  ರಾಮಕಥೆಯ ಈ ಭಿನ್ನ ರೂಪಣೆಗಳನ್ನು `ಅನುವಾದ~ಗಳೆಂದು ಕರೆಯಬಹುದು ಎಂದು ವಾದಿಸುತ್ತಾ, ರಾಮಾನುಜನ್ ಮೂರುಬಗೆಯ ಅನುವಾದ ಮಾರ್ಗಗಳನ್ನು ವಿವರಿಸುತ್ತಾರೆ (Iconic/Indexical/ Symbolic). ಅನಂತರ,  ಎಲ್ಲಾ ರಾಮಾಯಣಗಳನ್ನೂ ಒಳಗೊಳ್ಳುವ ಒಂದು ಸ್ವೋಪಜ್ಞ ವಿಮರ್ಶಾತ್ಮಕ ಚೌಕಟ್ಟನ್ನು ರೂಪಕಾತ್ಮಕವಾಗಿ ರಾಮಾನುಜನ್  ಹೀಗೆ ಕಟ್ಟುತ್ತಾರೆ:

`ನಿಯತವಾಗಿ, ಮತ್ತೆ ಮತ್ತೆ ರಾಮಾಯಣಗಳು ಸೃಷ್ಟಿಯಾದ ಸಾಂಸ್ಕೃತಿಕ ಪ್ರದೇಶವನ್ನು ಬಗೆಬಗೆಯ ಸೂಚಕಗಳಿಂದ  ತುಂಬಿರುವ ಒಂದು ಅಗಾಧ ಸರೋವರದಂತೆ ನೋಡಬಹುದು.

ಈ ಸೂಚಕಗಳೆಂದರೆ, ಕಥನ ಚೌಕಟ್ಟುಗಳು, ಪಾತ್ರಗಳು, ಹೆಸರುಗಳು, ಭೂಗೋಳ, ಘಟನೆಗಳು ಮತ್ತು ಸಂಬಂಧಗಳು, ಇತ್ಯಾದಿ. … ಪ್ರತಿಯೊಬ್ಬ ಭಾರತೀಯ ಲೇಖಕನೂ ಈ ಸರೋವರದಲ್ಲಿ ಮುಳುಗಿ ತನ್ನದೇ ಆದ ಒಂದು ವಿಶಿಷ್ಟ ಪಠ್ಯವನ್ನು ಹೊರತೆಗೆಯುತ್ತಾನೆ… ಈ ಅರ್ಥದಲ್ಲಿ (ರಾಮಾಯಣದ) ಯಾವ ಪಠ್ಯವೂ ಮೂಲವಲ್ಲ. ಆದರೆ ಯಾವ ಕಥನವೂ ಕೇವಲ ಮರುಕಥನವಲ್ಲ; ಮತ್ತು ಈ ಕಥೆಗೆ ಕೊನೆಯಿಲ್ಲ. ಆದರೆ ಪ್ರತಿಯೊಂದು ಪಠ್ಯವೂ ಸ್ವಯಂ ಪೂರ್ಣವಾಗಿರುತ್ತದೆ~ (ಪು. 158).

ಕೊನೆಯಲ್ಲಿ, ರಾಮಾಯಣ-ಶ್ರವಣದ ಪರಿಣಾಮವನ್ನು ದಾಖಲಿಸುವ ಒಂದು ಕಥೆಯೊಡನೆ ರಾಮಾನುಜನ್ ತಮ್ಮ ಲೇಖನವನ್ನು ಮುಗಿಸುತ್ತಾರೆ.

ಕಳೆದ ಎರಡು ದಶಕಗಳಲ್ಲಿ ಅಂತರರಾಷ್ಟ್ರೀಯ ವಿದ್ವತ್ ಮನ್ನಣೆಯನ್ನು ಗಳಿಸಿರುವ ಹಾಗೂ ಸಾಂಸ್ಕೃತಿಕ ತೌಲನಿಕ ವಿಮರ್ಶೆಯ ಒಂದು ಪ್ರಮುಖ ಮಾದರಿಯಾಗಿರುವ ರಾಮಾನುಜನ್ ಅವರ ಈ ಲೇಖನ ಇತ್ತೀಚೆಗೆ ದೆಹಲಿ ವಿ.ವಿ.ಯಲ್ಲಿ ವಾದ-ವಿವಾದಗಳಿಗೆ ಗುರಿಯಾಗಿ, ಕೊನೆಗೆ ಅದನ್ನು ಪಠ್ಯಾವಳಿಯಿಂದ ಬಿಟ್ಟಿರುವುದು ಅತ್ಯಂತ ಖೇದದ  ಸಂಗತಿ.

2006ರಲ್ಲಿ ಈ ಲೇಖನ ಬಿ.ಎ. ಆನರ್ಸ್ `ಕಲ್ಚರಲ್ ಹಿಸ್ಟರಿ~ ಪಠ್ಯಕ್ರಮದಲ್ಲಿ ಸೇರಿಸಲ್ಪಟ್ಟಿತು; 2008ರಲ್ಲಿಯೇ ಎಬಿವಿಪಿ ಕಾರ್ಯಕರ್ತರು ಈ ಲೇಖನದ ವಿರುದ್ಧ ಗಲಭೆ ಮಾಡಿ, ಇತಿಹಾಸ ವಿಭಾಗಕ್ಕೆ ನುಗ್ಗಿ, ಅಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು.

ಅನಂತರ, ಈ ವಿಷಯ ಸುಪ್ರೀಂ ಕೋರ್ಟ್‌ಗೆ ಹೋಗಿ, ಅದರ ಆದೇಶದಂತೆ ರಚಿಸಲ್ಪಟ್ಟ ನಾಲ್ಕು ತಜ್ಞರ ಸಮಿತಿಯಲ್ಲಿ ಮೂವರು `ಇದು ಮೌಲಿಕ ಸಂಶೋಧನೆಯನ್ನು ಒಳಗೊಂಡಿದೆ~ ಎಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದರು; ಆದರೆ, ನಾಲ್ಕನೆಯವರು `ಈ ಲೇಖನವನ್ನು ಹಿಂದುಗಳಲ್ಲದವರು ಪಾಠ ಮಾಡಲು ಅಸಾಧ್ಯ; ಮತ್ತು ಇದನ್ನು ಅರ್ಥಮಾಡಿಕೊಳ್ಳಲು ಕಿಶೋರಾವಸ್ಥೆಯ ವಿದ್ಯಾರ್ಥಿಗಳಿಗೆ ಸಾಧ್ಯವಿಲ್ಲ; ಆದುದರಿಂದ ಇದನ್ನು ಪಠ್ಯಾವಳಿಯಿಂದ ತೆಗೆಯಬೇಕು~ ಎಂದು ತಮ್ಮ ಅಭಿಪ್ರಾಯವನ್ನು ದಾಖಲಿಸಿದರು.

ಎರಡು ವಾರಗಳ ಹಿಂದೆ, ಈ ಒಬ್ಬರ ವಾದವನ್ನು ಒಪ್ಪಿ, ದೆಹಲಿ ವಿ. ವಿ.ಯ ಅಕಡೆಮಿಕ್ ಕೌನ್ಸಿಲ್ ಈ ಲೇಖನವನ್ನು ಪಠ್ಯಾವಳಿಯಿಂದ ತೆಗೆದು ಹಾಕಿತು.

ಎಬಿವಿಪಿ ಮತ್ತು ಇತರ ಬಲಪಂಥೀಯರು ಈ ಲೇಖನವನ್ನು ವಿರೋಧಿಸುವ ಕಾರಣಗಳು (ಪತ್ರಿಕೆಗಳಲ್ಲಿ ಬಂದಂತೆ) ಮೂರು: ಕೆಲವು ರಾಮಾಯಣಗಳು ಸೀತೆ ರಾವಣನ ಮಗಳೆಂದು ನಿರೂಪಿಸುತ್ತವೆ ಎಂಬುದನ್ನು ಈ ಲೇಖನ ಪ್ರಸ್ತಾಪಿಸುತ್ತದೆ; ಅವತಾರ ಪುರುಷನಾದ ರಾಮನನ್ನು ಮಾನವನೆಂದು ಕೆಲವು ರಾಮಾಯಣಗಳು ನಿರೂಪಿಸುವುದನ್ನು ರಾಮಾನುಜನ್ ದಾಖಲಿಸುತ್ತಾರೆ; ಮತ್ತು, ಈ ಬಗೆಯ ಚರ್ಚೆ `ಹಿಂದುಗಳ ಭಾವನೆಗಳಿಗೆ ನೋವುಂಟು ಮಾಡುತ್ತದೆ.~

ಸೀತೆ ರಾವಣನ ಮಗಳೆಂದು ಕನ್ನಡ-ತೆಲುಗು ಮೌಖಿಕ ರಾಮಾಯಣಗಳಲ್ಲಿ. ಜೈನ ಪರಂಪರೆಯ ವಾಸುದೇವಹಿಂಡಿ ಎಂಬ ಕಥನದಲ್ಲಿ, ಮತ್ತು ಆಗ್ನೇಯ ಏಷ್ಯಾದ (ಥಾಯ್) ರಾಮಾಕೀನ್ ಕೃತಿಯಲ್ಲಿ ನಿರೂಪಿಸಲ್ಪಟ್ಟಿದೆ ಎಂಬುದನ್ನು ರಾಮಾನುಜನ್ ದಾಖಲಿಸುತ್ತಾರೆ, ನಿಜ.

ಆದರೆ, ಇನ್ನೂ ಅನೇಕ ಲಿಖಿತ-ಮೌಖಿಕ ರಾಮಾಯಣಗಳಲ್ಲಿ ಸೀತೆ ರಾವಣನ ಮಗಳೆಂದು ನಿರೂಪಿಸಲ್ಪಟ್ಟಿದೆ: 10 ನೆಯ ಶತಮಾನದ ಅಭಿನಂದನನ ಸಂಸ್ಕೃತ ರಾಮಚರಿತ; 12 ನೆಯ ಶತಮಾನದ ಸಂಸ್ಕೃತ ಅದ್ಭುತ ರಾಮಾಯಣ; ಒರಿಯಾ ಭಾಷೆಯ, 18ನೆಯ ಶತಮಾನದ ಸರಳದಾಸನ ರಾಮಾಯಣ; ಮೌಖಿಕ ಸಂಪ್ರದಾಯದ  ಕುಕಣಾ ರಾಮಾಯಣ, ಅವಧ್ ರಾಮಾಯಣ ಇತ್ಯಾದಿ.

ಭಿನ್ನ ಕಾಲಘಟ್ಟಗಳಲ್ಲಿ, ಭಿನ್ನ ಭಾಷಿಕ ಸಮುದಾಯಗಳಲ್ಲಿ ಪ್ರಚಲಿತವಿದ್ದ `ಕಥೆ-ಐತಿಹ್ಯ~ಗಳನ್ನು ಆಧರಿಸಿ ಈ ಕೃತಿಗಳು ರಚಿಸಲ್ಪಟ್ಟಿವೆ; ಮತ್ತು, ವಾಲ್ಮೀಕಿ ರಾಮಾಯಣಕ್ಕೂ ಮೊದಲು ರಾಮ-ರಾವಣ ಕಥೆಗಳು ಜಾತಕ ಕಥೆಗಳಲ್ಲಿ ಇದ್ದುವು ಎಂಬುದನ್ನು ಮಿರ್ಜಿ ಆಣ್ಣಾರಾಯರು, ಜಾಕೋಬಿ, ರೋಮಿಲಾ ಥಾಪರ್ ಮುಂತಾದವರು ಅಧಿಕಾರಯುತವಾಗಿ ತೀರ್ಮಾನಿಸಿದ್ದಾರೆ.

ಮುಖ್ಯವಾಗಿ ಇಲ್ಲಿ ಗಮನಿಸಬೇಕಾದುದು ರಾಮಾನುಜನ್ ಅವರ ವಿಮರ್ಶಾತ್ಮಕ ನಿಲುವು: ತೌಲನಿಕ ವಿಮರ್ಶೆಯಲ್ಲಿ `ಇದು ಸರಿ, ಇದು ತಪ್ಪು~ ಎಂಬಂತಹ ಮೌಲ್ಯಾತ್ಮಕ ನಿಲುವಿರುವುದಿಲ್ಲ. ಅದರ ಬದಲು ವಿವರಣೆ ಹಾಗೂ ಸಾಂಸ್ಕೃತಿಕ ವ್ಯಾಖ್ಯಾನ.  ರಾಮಾನುಜನ್ ಅವರದು ಈ ಬಗೆಯ ವಸ್ತುನಿಷ್ಠ ತೌಲನಿಕ ವ್ಯಾಖ್ಯಾನ.

ಇನ್ನೂ ಮುಖ್ಯವಾಗಿ ಶ್ರೀರಾಮನ ದೈವತ್ವದ/ ಚಾರಿತ್ರಿಕತೆಯ ಪ್ರಶ್ನೆ.  ಪ್ರಾಚೀನ ಕಾಲದಿಂದಲೂ ಭಾರತೀಯ ವಿದ್ವಾಂಸರು ಮಹಾಭಾರತವನ್ನು ಇತಿಹಾಸವೆಂದು ಮತ್ತು ರಾಮಾಯಣವನ್ನು ಕಾವ್ಯವೆಂದು ಪರಿಗಣಿಸಿದ್ದಾರೆ.

ರಾಮನ ಮಾನವತೆಯನ್ನು ವಾಲ್ಮೀಕಿ ಮುನಿಗಳ ರಾಮಾಯಣದ ಎರಡನೆಯ ಶ್ಲೋಕವೇ ದೃಢಪಡಿಸುತ್ತದೆ: `ಕೋ..ನಸ್ಮಿನ್ ಸಂಪ್ರತಮ್ ಲೋಕೆ..~ (ಎಂದರೆ `ಈ ಲೋಕದಲ್ಲಿ ಯಾರು ಗುಣವಾನ್, ವೀರ್ಯವಾನ್ ಇತ್ಯಾದಿ ವಿಶೇಷಣಗಳಿಗೆ ಪಾತ್ರರಾದವರು~) ಎಂದು ಮುನಿಗಳು ನಾರದರನ್ನು ಕೇಳುತ್ತಾರೆ; ಮತ್ತು ನಾರದರು ಶ್ರೀರಾಮನನ್ನು ಹೆಸರಿಸುತ್ತಾರೆ.
ಹಾಗೆಯೇ, ಕಾವ್ಯದ ಕೊನೆಯಲ್ಲಿ ಶ್ರೀರಾಮನು ತಾನು ಮನುಷ್ಯಮಾತ್ರ ಎಂಬುದನ್ನು ಹೀಗೆ ಸ್ಪಷ್ಟಪಡಿಸುತ್ತಾನೆ: `ಆತ್ಮಾನಂ ಮಾನುಷಂ ಮನ್ಯೆ~.

Speaking of Siva, Hymns for the Drowning, Poems of ove and War ಇತ್ಯಾದಿ ಅನುವಾದಿತ ಕೃತಿಗಳ ಮೂಲಕ ಹಾಗೂ ತಮ್ಮ ಸ್ವೋಪಜ್ಞ ವಿಮರ್ಶಾತ್ಮಕ ಲೇಖನಗಳ ಮೂಲಕ ರಾಮಾನುಜನ್ ಭಾರತದ ಪ್ರಾಂತೀಯ ಭಾಷೆಗಳ ಸಾಹಿತ್ಯ-ಸಂಸ್ಕೃತಿಗಳನ್ನು ಹೊರ ಜಗತ್ತಿಗೆ ಪರಿಚಯಿಸಿ, ಆ ಮೂಲಕ `ಓರಿಯೆಂಟಲಿಸ್ಟ್~ ಚಿಂತನೆಗೆ ವಸಾಹತೋತ್ತರ ರೂಪವನ್ನು ಕೊಟ್ಟರು. ಅಂತಹ ಭಾರತೀಯ ವಿದ್ವಾಂಸನ ಪ್ರಬುದ್ಧ ಸಂಶೋಧನಾ ಲೇಖನವನ್ನು ಕುರಿತ ಪ್ರತಿಭಟನೆ ಅತೀವ ದುರದೃಷ್ಟಕರ ಎಂದಷ್ಟೇ ಹೇಳಬಹುದು.

ಸೌಜನ್ಯ : ಪ್ರಜಾವಾಣಿ, 25 ಅಕ್ಟೋಬರ್ 2011

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

Trending