Connect with us

ದಿನದ ಸುದ್ದಿ

ದಾವಣಗೆರೆ | ಟೊಮೆಟೊ ಬೆಳೆಗೆ ಬೆಂಕಿರೋಗ : ಕೈಗೆ ಬಂದ ಬೆಳೆ, ಮಾರ್ಕೇಟ್ ಗೆ ಬರಲಿಲ್ಲ…!? ಯುವ ರೈತನ ಅಳಲು

Published

on

ಯುವ ರೈತ ಪ್ರದೀಪ್
  • ವಿಶೇಷ ವರದಿ: ಪ್ರೀತಿ. ಟಿ.ಎಸ್

ಸುದ್ದಿದಿನ,ದಾವಣಗೆರೆ : ಸ್ನಾತಕೋತ್ತರ ಪದವಿ ಮುಗಿಯಿತು. ಕೆಲಸ ಅರಸಿ ಅಲೆದಾಡಿ ಸೋತು ಟೊಮೋಟೊ ಬೆಳೆಯಲು ಮುಂದಾದ ಯುವಕನಿಗೆ ಇನ್ನೇನೂ ಫಸಲು ಕೈಗೆ ಬರುವ ವೇಳೆಗೆ ಬೆಂಕಿ ರೋಗ ಅಂಟಿಕೊಂಡು ನಷ್ಟವಾಗಿರುವ ಘಟನೆ ಸೀಗೆಹಳ್ಳಿ ಗ್ರಾಮದ ಪ್ರದೀಪ್ ಎಂಬುವವರ ಜಮೀನಿನಲ್ಲಿ ನಡೆದಿದೆ.

ವಿದ್ಯಾಭ್ಯಾಸ ಮುಗಿಸಿ ಮುಂದೇನು ಎಂದು ಯೋಚಿಸುವಾಗ, ತನಗಿದ್ದ ಒಂದು ಎಕರೆ ಭೂಮಿಯಲ್ಲಿ ಟಮೋಟೊ ಬೆಳೆಯೋಣ ಎಂಬ ಆಲೋಚನೆ ಮಾಡಿದ ಪ್ರದೀಪನಿಗೆ, ಪರಿಚಿತರೆಲ್ಲಾ ಸೇರಿ ಒಂದು ಎಕರೆ ಜಮೀನಿನಲ್ಲಿ ಟಮೋಟೊ ಬೆಳೆ ಬೆಳೆಯಲು 70 ರಿಂದ 80 ಸಾವಿರ ರೂ. ವೆಚ್ಚ ತಗುಲುತ್ತದೆ. ಭೂಮಿ ಉಳುಮೆ, ಕೊಟ್ಟಿಗೆ, ರಸಗೊಬ್ಬರ, ಹಸಿ ನಾಟಿ ಸೇರಿದಂತೆ ಔಷಧ ಸಿಂಪಡಣೆಯೊಂದಿಗೆ ಫಸಲು ಪ್ರಾರಂಭದವರೆಗೆ ಹಣ ಖರ್ಚು ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಮಾಡಲು ಬೇರೆ ಕೆಲಸ ಇಲ್ಲ. ಕೈಯಲ್ಲಿ ದುಡ್ಡಿಲ್ಲ. ಸುಮ್ಮನೆ ಕೂತ್ತರೆ ಜೀವನ ಸಾಗುವುದಿಲ್ಲ. ಅಲ್ಲಿ ಇಲ್ಲಿ ಪೇಚಾಡಿ ಸಾಲ ಸೂಲ ಮಾಡಿ ಒಂದು ಎಕರೆ ಜಮೀನಿನಲ್ಲಿ ಟಮೋಟೊ ಬೆಳೆ ಬೆಳೆಯಲು ಮುಂದಾದ ಪ್ರದೀಪ್ ಗೆ ಮೊದಮೊದಲು ಕಷ್ಟವಾದರೂ ತುಂಬಾ ಇಷ್ಟ ಪಟ್ಟು ಬೆಳೆಯಲಾರಂಭಿಸಿದರು. ಇನ್ನೆನ್ನು ಫಸಲು ಕೈಗೆ ಬರುವುದರೊಳಗೆ ಟಮೋಟೊಗೆ ಬೆಂಕಿ ರೋಗ ಅಂಟಿಕೊಂಡು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿರುವ ಸ್ಥಿತಿ ಬಂದೆರಗಿದೆ.

ಈ ಕುರಿತು ತಮ್ಮ ಬೇಸರವನ್ನು ಹಂಚಿಕೊಂಡ ಪ್ರದೀಪ್, ಕಳೆದ ವರ್ಷ ಮಳೆ ಚೆನ್ನಾಗಿಯಾದ್ದರಿಂದ ನೀರಿನ ಸಮಸ್ಯೆ ಇಲ್ಲ. ಫಸಲು ಬಂದಾಗ ಮಾರುಕಟ್ಟೆಯಲ್ಲಿ ನಿಗದಿತ ಬೆಲೆ ಸಿಗುವುದಿಲ್ಲ. ಹಲವು ಬಾರಿ ಮಾರುಕಟ್ಟೆಯಲ್ಲಿ ಬೆಲೆ ಇದ್ದರೆ ಫಸಲು ಇರುವುದಿಲ್ಲ. ಇದೀಗ ಮಾರುಕಟ್ಟೆಯಲ್ಲಿ ಉತ್ತಮ ತಳಿಯ ಒಂದು ಬಾಕ್ಸ್ ಟಮೋಟೊ ಗೆ 150 ರಿಂದ 200 ರೂಪಾಯಿಯಿದೆ. ಇದರ ಮಧ್ಯೆ ಪರಿಸರ ವೈಪರಿತ್ಯ ಹಾಗೂ ಬೆಂಕಿ ರೋಗದಿಂದ ಬೆಳೆ ನಾಶವಾಗುತ್ತಿದೆ.

ಬೆಂಕಿರೋಗ ತಗುಲಿರುವ ಟೊಮೆಟೊ ಬೆಳೆ

ಕಾಯಿ ಕಚ್ಚಿ ಹಣ್ಣಾಗುವ ಸಮಯ ತಲುಪಿರುವ ವೇಳೆ ಗಿಡಗಳಿಗೆ ರೋಗ ಬಂದಿದ್ದು ಸಾಕಷ್ಟು ಸಸಿಗಳು ಸತ್ತು ಹೋಗಿವೆ. ಈ ವರೆಗೂ ಹಾಕಿರುವ ಬಂಡವಾಳದೊಂದಿಗೆ ಅಂಟಿಕೊಂಡಿರುವ ರೋಗ ನಾಶ ಪಡಿಸಲು ಸುಮಾರು 10 ರಿಂದ 15 ಸಾವಿರದಷ್ಟು ಔಷಧಿ ಸಿಂಪಡಿಸಿದ್ದೇನೆ. ಸಸ್ಯ ವೈದ್ಯರ ಸಲಹೆಗಳನ್ನು ತೆಗೆದುಕೊಂಡು, ಸಸಿ ಪೋಷಣೆ ಮಾಡುತ್ತಿದ್ದೇನೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹತೋಟಿಗೆ ಬರುತ್ತಿಲ್ಲ

ಟೊಮೋಟೊ ಬೆಳೆಗೆ ವಿವಿಧ ಕೀಟನಾಶಕ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ. ಕೀಟನಾಶಕ ಸಿಂಪಡಿಸಿ ಮುರ್ನಾಲ್ಕು ದಿನ ಕಳೆಯುವಷ್ಟರಲ್ಲಿ ಬೆಳೆಯಲ್ಲಿ ಪುನಃ ರೋಗ ಕಾಣಿಸಿಕೊಳ್ಳುತ್ತದೆ. ಅಕ್ಕಪಕ್ಕದ ಜಮೀನುಗಳ ಟೊಮೋಟೊ ಬೆಳೆಗೂ ರೋಗ ಹಬ್ಬುತ್ತದೆ. ಇದರೊಂದಿಗೆ ಮೋಡ ಮುಸುಕಿದ ವಾತಾವರಣ ಹಾಗೂ ಬೀಳುವ ಇಬ್ಬನಿಯಿಂದ ಈ ಅಂಗಮಾರಿ ರೋಗ ಮತ್ತಷ್ಟು ಉಲ್ಭಣಗೊಳ್ಳುತ್ತಿದೆ.

ಹಾಗಾದರೆ ಪರಿಹಾರ ಏನು?

ಇದು ಒಬ್ಬ ರೈತನ ಸಮಸ್ಯೆಯಲ್ಲ. ನೂರಾರು ರೈತರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಫಸಲು ಬರುವ ವೇಳೆ ಯಾವುದೇ ರೀತಿಯ ರೋಗಗಳು ಬೆಳೆಗೆ ಬಾರದಂತಹ ಔಷಧಗಳನ್ನು ರೈತರಿಗೆ ತಲುಪಿಸಲು, ವಾಣಿಜ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಪ್ರತಿ ಗ್ರಾಮಗಳಲ್ಲೂ ಹೆಚ್ಚಾಗಿ ನಡೆಯಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending