ದಿನದ ಸುದ್ದಿ
ಮೆದಿಕೇರನಹಳ್ಳಿಯಲ್ಲಿದೆ ರೈಲು ಶಾಲೆ ; ಸ್ವಂತ ಖರ್ಚಿನಲ್ಲಿ ವಿದ್ಯಾಸಿರಿ ಎಕ್ಸ್ಪ್ರೆಸ್ ನಿರ್ಮಿಸಿದ ಶಿಕ್ಷಕರು, ಹಳೇ ವಿದ್ಯಾರ್ಥಿಗಳು..!
ಸುದ್ದಿದಿನ ವಿಶೇಷ: ಭಾರತದ ಸಂಸ್ಕೃತಿಯಲ್ಲಿ ಶಿಕ್ಷಣವನ್ನು ಎಂದೂ ಲಾಭ–ದಾಯಕ ಉದ್ದಿಮೆಯನ್ನಾಗಿ ಪರಿಗಣಿಸಿದ್ದ ಉದಾ–ಹರಣೆಗಳಿಲ್ಲ. ಹಲವು ಜನೋಪಕಾರಿ ಸಂಘ ಸಂಸ್ಥೆಗಳು, ಮಠಮಾನ್ಯಗಳು ಶಿಕ್ಷಣವನ್ನು ಒಂದು ಸಾಮಾಜಿಕ ಒಳಿತೆಂದು ಭಾವಿಸಿ ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ನೀಡಿದ ಉದಾಹರಣೆಗಳು ನಮ್ಮಲ್ಲಿ ಹೇರಳ. ನಮ್ಮ ಸಂಪ್ರದಾಯದಲ್ಲಿ ಶಿಕ್ಷಣ ಎಲ್ಲ ದಾನಗಳಿಗಿಂತ ಶ್ರೇಷ್ಠವಾದ ದಾನ.
ಆದರೆ, ಇಂದು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪರೀಕರಣ ಜನ ಸಾಮಾನ್ಯರಲ್ಲಿ ಹೆಚ್ಚಿನ ಆತಂಕವನ್ನು ಉಂಟು ಮಾಡಿದೆ. ಶಿಕ್ಷಣವನ್ನು ಒಂದು ಲಾಭದ ಉದ್ದಿಮೆಯನ್ನಾಗಿ ಮಾಡಿಕೊಂಡಿರುವ ಹಲವು ಜನರು ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣದ ಪರ–ವಾಗಿದ್ದಾರೆ. ಲಾಭದ ಲೆಕ್ಕಾಚಾರವನ್ನೇ ಪ್ರಧಾನವಾಗಿ ಪರಿಗಣಿ–ಸುವ ಅವರಿಗೆ ಶಿಕ್ಷಣ ಒಂದು ವ್ಯಾಪಾರದ ವಸ್ತು ಮತ್ತು ತಂದೆ-ತಾಯಿ ಹಾಗೂ ಮಕ್ಕಳು ಗ್ರಾಹಕರು. ಶಿಕ್ಷಕರೇ ಅವರ ಸೇಲ್ಸ್ ಮ್ಯಾನ್ಗಳು. ಅವರ ಮೇಲೊಬ್ಬ ಸಿಇಒ. ಇದು ಆಧುನಿಕ ಶಿಕ್ಷಣ ವ್ಯಾಪಾರ ಮಳಿಗೆಯ ಸಂರಚನೆ.
ಇಷ್ಟೆಲ್ಲಾ ಯಾಕೆ ಹೇಳ ಬೇಕಾಯ್ತು ಎಂದರೆ,ಬಹುತೇಕ ಸರ್ಕಾರಿ ಕನ್ನಡ ಶಾಲೆಗಳು ಕೊನೆ ಉಸಿರೆಳೆಯುತ್ತಿವೆ. ವಿದ್ಯಾರ್ಥಿಗಳಿಲ್ಲದೆ ಶಾಲೆಗಳು ಬಣಗುಡುತ್ತಿವೆ. ಒಂದು ಕಾಲದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರ ಪರಿಣಾಮ ತರಗತಿಗಳನ್ನು ಎ ಸೆಕ್ಷನ್ , ಬಿ ಸೆಕ್ಷನ್ ವಿಭಾಗಗಳಾಗಿ ಮಾಡಿ ಬೋಧಿಸಲಾಗುತ್ತಿತ್ತು. ಈಗ ಅದು ಕನಸಿನ ಮಾತು ಎಂದರೆ ತಪ್ಪಾಗಲಾರದು. ಆದರೂ ನಾವು ನಿರಾಶಾವಾದಿಗಳಾಗ ಬೇಕಿಲ್ಲ. ಏಕೆಂದರೆ ಅಂತಹದೊಂದು ಉದಾಹರಣೆಗೆ ಕಾರಣವಾಗಿದೆ ಈ ಶಾಲೆ. ಈ ಸ್ಟೋರಿ ನೋಡಿ.
ಅದು ಸುಮಾರು ಸಾವಿರ ಜನಸಂಖ್ಯೆ ಇರುವ, ಇದುವರೆಗೂ ಸಾರಿಗೆ ಸಂಪರ್ಕವಿರದ ಒಂದು ಪುಟ್ಟ ಗ್ರಾಮ. ಅಲ್ಲಿರುವ ಸರ್ಕಾರಿ ಶಾಲೆ, ಹಾಗೂ ಅಲ್ಲಿನ ಶಿಕ್ಷಕರಿಗೆ ಪ್ರಸಂಶೆಯ ಮಾತುಗಳು ಕೇಳಿ ಬರುತ್ತಿವೆ. ಅದು ಯಾವ ಊರು ಅನ್ನೋ ಕುತೂಹಲ ನಿಮ್ಮಲ್ಲೀಗ ಇಮ್ಮಡಿಸಿರ ಬಹುದು. ಅದು ದಾವಣಗೆರೆ ಜಿಲ್ಲೆಯ, ಜಗಳೂರು ತಾಲೂಕಿನ ಮೆದಿಕೇರನಹಳ್ಳಿ.
ಈ ಹಳ್ಳಿಯ ಸರ್ಕಾರಿ ಪ್ರೌಢ ಶಾಲೆಗೆ ಮುಖ್ಯೋಪಾಧ್ಯಾಯರಾದ ಅರುಣ್ ಕುಮಾರ್ ಹೆಚ್.ಎನ್. ಅವರು ವರ್ಗವಾಗಿ ಬಂದ ಕೇವಲ ಒಂದೂವರೆ ತಿಂಗಳಿನಲ್ಲಿ ಶಾಲೆಗೆ ಹೊಸರೂಪ ಕೊಟ್ಟು ಗಮನ ಸೆಳೆದಿದ್ದಾರೆ. ತನ್ನ ಸ್ವಂತ ಖರ್ಚಿನಲ್ಲಿ
ಶಾಲೆಗೆ ರೈಲಿನಾಕಾರಾದ ಚಿತ್ತಾರದ ರಂಗು ಮೂಡಿಸಿ ‘ರೈಲು ಶಾಲೆ’ಯಾಗಿ ಪರಿವರ್ತಿಸಿ ಬಿಟ್ಟಿದ್ದಾರೆ. ಶಾಲೆಗೆ ‘ರೈಲು’ ಆಕಾರ ಕೊಡಿಸುವುದರ ಮೂಲಕ ಶಿಕ್ಷಕರ, ವಿದ್ಯಾರ್ಥಿಗಳ, ಗ್ರಾಮದ ಜನತೆಯ ಮನ ಗೆದ್ದಿದ್ದಾರೆ.
2006 ರಲ್ಲಿ ಆರಂಭವಾದ ಈ ಶಾಲೆ ಹಲವು ಕೊರತೆಗಳಿಂದ ಕೂಡಿತ್ತು. ಈ ಹಿಂದೆ ಬಂದ ಮುಖ್ಯೋಪಾಧ್ಯಾಯರು ಸರ್ಕಾರ ಸಹಾಯದಿಂದ ಶಾಲೆಯನ್ನು ಒಂದು ಮಟ್ಟಿಗೆ ನಡೆಸಿಕೊಂಡು ಬಂದಿದ್ದರು. ಆದರೆ ಈಗಿರುವ ಮುಖ್ಯೋಪಾಧ್ಯಾಯರು ಅವರೇ ಹೇಳುವಂತೆ ‘ನಾನು ಕಾರ್ಯನಿರ್ವಹಿಸುವ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡುವುದು ನನ್ನ ಗುರಿಯೂ ಹೌದು, ಕನಸೂ ಹೌದು’ ಎನ್ನುತ್ತಾರೆ.
ಅದರಂತೆಯೇ ಈಗಿನ ಶಾಲೆಗೆ ರೈಲು ಆಕಾರದ ಚಿತ್ತಾರ ಕೊಡಿಸುವುದರ ಮೂಲಕ, ಅದಕ್ಕೆ ವಿದ್ಯಾಸಿರಿ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿದ್ದಾರೆ. ಸಹ ಶಿಕ್ಷಕರೂ ಕೂಡ ಇವರ ಉತ್ಸಾಹ ಕಂಡು ಬೆರೆಗಾಗಿ ಸಾಥ್ ನೀಡುತ್ತಿದ್ದಾರೆ.
ಸಹ ಶಿಕ್ಷಕರ ಸಾಥ್
ಅಂದ ಹಾಗೆ ಶಾಲೆಯ ಸಹ ಶಿಕ್ಷಕರು ಈ ಕ್ರಿಯಾಶೀಲ ಯೋಜನೆಗೆ ಸಾಥ್ ನೀಡಿದ್ದು, ಮುಖ್ಯ ಶಿಕ್ಷಕರಿಗೆಂದೇ ಒಂದು ಪ್ರತ್ಯೇಕ ಕೊಠಡಿ ರೂಪಿಸಿ ಪ್ರೋತ್ಸಾಹ ನೀಡಿದ್ದಾರೆ. ಕರೊನಾ ಸಂಕಷ್ಟದ ಕಾಲದಲ್ಲಿ ನಾವು ಸಮಯವನ್ನು ಹಾಳು ಮಾಡದೆ ಅಭಿವೃದ್ಧಿ ಕೆಲಸಗಳ ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದೇವೆ ಎನ್ನುತ್ತಾರೆ ಕನ್ನಡ ಶಿಕ್ಷಕ ವಿಜಯ್ ಕುಮಾರ್.
ಶಿಕ್ಷಕರ ಈ ಕಾರ್ಯ ಗಮನಿಸಿದ ಶಾಲೆಯ ಹಳೇ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. ಶಾಲಾ ಕೊಠಡಿಗಳ ದುರಸ್ತಿಗೆ ಹಣ ಹಾಕಿ ಸ್ವತಃ ಅವರೇ ಮುಂದೆ ನಿಂತು ಕೆಲಸ ಮಾಡಿಸುತ್ತಿದ್ದಾರೆ. ಜೊತೆಗೆ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಈ ಕಾರ್ಯಕ್ಕೆ ಸೈ ಎಂದಿದ್ದಾರೆ.
ಆಟ, ಪಾಠದಲ್ಲಿ ಮುಂದು
ಇಲ್ಲಿನ ವಿದ್ಯಾರ್ಥಿಗಳು ಆಟ, ಪಾಠದಲ್ಲಿ ಕೂಡ ಮುಂದೆ ಇದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಐದು ಬಾರಿ ಶೇ.100ರಷ್ಟು ಫಲಿತಾಂಶ ಸಾಧಿಸಿದ್ದಾರೆ. ಇದಕ್ಕೆ ಪೂರಕವಾಗಿ ಶಾಲೆ ವಾತಾವರಣ ಇದ್ದು, ಖಾಸಗಿ ಶಾಲೆಗಳಿಗೂ ಕೂಡ ಮಾದರಿಯಾಗಿದೆ ಎಂದರೆ ತಪ್ಪಾಗಲಾರದು.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243