ದಿನದ ಸುದ್ದಿ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ
ಸುದ್ದಿದಿನ,ಬಾಗಲಕೋಟೆ: ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.13 ಲಕ್ಷ ಕೋಟಿ ರೂ. ಗಳನ್ನು ಜಮಾ ಮಾಡುವ ಮೂಲಕ ರೈತರಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡಿರುವ ಸರ್ಕಾರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. & ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ಮಾತ್ರವಲ್ಲ, ಇಡೀ ವಿಶ್ವದ ನೇತೃತ್ವ ವಹಿಸುವ ದಿಸೆಯತ್ತ ಸಾಗುತ್ತಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಮಹತ್ವದ್ದಾಗಿದೆ. ದೇಶದಲ್ಲಿ ಜರುಗುತ್ತಿರುವ ಎಲ್ಲ ಹಂತಗಳ ಚುನಾವಣೆಗಳಲ್ಲಿ ದೇಶದ ಜನತೆ ನಮಗೆ ಬೆಂಬಲ ವ್ಯಕ್ತಪಡಿಸುತ್ತ ನಮ್ಮ ಸರ್ಕಾರವನ್ನು ಬಲಪಡಿಸುತ್ತಿದ್ದಾರೆ.
ದೇಶವನ್ನು ನಮ್ಮ ಸರ್ಕಾರ ಆತ್ಮನಿರ್ಭರಗೊಳಿಸುವತ್ತ ಸಾಗಿದೆ. ದೇಶದಲ್ಲಿ ಪೆಟ್ರೋಲ್ ಆಮದಿಗಾಗಿ ಸರ್ಕಾರದ ಬಹಳಷ್ಟು ಆದಾಯ ವಿದೇಶಿ ವಿನಿಮಯಕ್ಕೆ ಖರ್ಚಾಗುತ್ತಿದೆ. ಕಬ್ಬು ಬೆಳೆಯ ಸಹ ಉತ್ಪನ್ನವಾಗಿರುವ ಇಥೆನಾಲ್ ಇದೀಗ ದೇಶದ ಇಂಧನ ಕ್ಷೇತ್ರದಲ್ಲಿ ಪೆಟ್ರೋಲ್ಗೆ ಪರ್ಯಾಯ ಇಂಧನವಾಗಿ ಬಳಸಲಾಗುತ್ತಿದ್ದು, ದೇಶದ ಅಗತ್ಯತೆಯನ್ನು ಪೂರೈಸಲು ಸಹಕಾರಿಯಾಗಿದೆ ಎಂದರು.
ಇಥೆನಾಲ್ ಉತ್ಪಾದನೆ ಹಾಗೂ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಉತ್ತೇಜನ ನೀಡುತ್ತಿದ್ದಾರೆ. ಸಕ್ಕರೆ ಉತ್ಪಾದನೆಯ ಜೊತೆ ಜೊತೆಗೆ ಇಥೆನಾಲ್ ಉತ್ಪಾದನೆಗೆ ಅವಕಾಶವಿದ್ದು, ಇದರಿಂದ ರೈತರಿಗೂ ಅನುಕೂಲವಾಗಲಿದೆ ಅಲ್ಲದೆ ಸಕ್ಕರೆ ಕಾರ್ಖಾನೆಗಳಿಗೂ ಲಾಭದಾಯಕವಾಗಲಿದೆ. ಇಥೆನಾಲ್ ಹೆಚ್ಚಿನ ಉತ್ಪಾದನೆ ಹಾಗೂ ಬಳಕೆಯಿಂದ ಇಂಧನ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಆರ್ಥಿಕವಾಗಿಯೂ ದೇಶಕ್ಕೆ ವಿದೇಶಿ ವಿನಿಮಯದಲ್ಲಿ ಉಳಿಕೆಯಾಗಲಿದೆ.
ನಿರಾಣಿ ಸಮೂಹದ ಉದ್ಯಮವು ಇದೀಗ ತನ್ನ ಕಾರ್ಖಾನೆ ಘಟಕವನ್ನು ವಿಸ್ತರಿಸುತ್ತಿರುವುದರಿಂದ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿಸಿದಂತಾಗಿದೆ. 2015 ರಲ್ಲಿ ಇಥೆನಾಲ್ ಉತ್ಪಾದನೆಗೆ ಸುಂಕ ಕಡಿತಗೊಳಿಸಲಾಗಿದೆ. ಇಥೆನಾಲ್ಗೆ ಶೇ. 18 ರಷ್ಟು ಇದ್ದ ಜಿಎಸ್ಟಿ ಯನ್ನು ಇದೀಗ ಶೇ. 5 ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು 2022 ರೊಳಗೆ ಶೇ. 10 ರಷ್ಟು ಹಾಗೂ 2025 ರ ವೇಳೆಗೆ ಶೇ. 25 ರಷ್ಟು ಕಡಿತಗೊಳಿಸಲಾಗುವುದು. ಇಂಧನಕ್ಕಾಗಿ ಗಲ್ಫ್ ರಾಷ್ಟ್ರಗಳಿಗೆ ನಮ್ಮ ದೇಶದಿಂದ ಹೆಚ್ಚಿನ ಹಣ ಬಳಕೆಯಾಗುತ್ತಿದ್ದು, ಇದೀಗ ಪ್ರಮಾಣ ಕಡಿತದಿಂದ ಉಳಿಯುವ ಹಣವನ್ನು ನಾವು ರೈತರ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ಸಹಾಯಕವಾಗಿದೆ.
ಭಾರತೀಯ ಆಹಾರ ನಿಗಮದದಲ್ಲಿ ಲಭ್ಯವಾಗುವ ಮೆಕ್ಕೆಜೋಳ, ಅಕ್ಕಿ ಧಾನ್ಯವನ್ನು ಇಥೆನಾಲ್ ಉತ್ಪಾದನೆಗೆ ಬಳಸಿಕೊಳ್ಳಲು ನೀತಿಯೊಳಗೆ ಸೇರಿಸಿಕೊಳ್ಳಲಾಗಿದೆ. ಈ ನೂತನ ನೀತಿಯಿಂದಾಗಿ ರೈತರಿಗೂ ಅನುಕೂಲವಾಗಲಿದೆ. ರೈತರಿಗೆ ಆರ್ಥಿಕ ಲಾಭದ ಜೊತೆಗೆ ಉದ್ಯೋಗ ಸೃಷ್ಟಿಗೂ ಅನುಕೂಲವಾಗಲಿದೆ. ಇಥೆನಾಲ್ ಪರಿಸರ ಸ್ನೇಹಿಯಾಗಿದೆ.
ನಮ್ಮ ಸರ್ಕಾರ ಪ್ರಾಥಮಿಕ ಆದ್ಯತೆಯನ್ನು ರೈತರಿಗೆ ನೀಡುತ್ತಿದ್ದು, ಆದಾಯ ದ್ವಿಗುಣಗೊಳಿಸುವತ್ತ ಕ್ರಮ ಕೈಗೊಂಡಿದೆ. 2013-14 ರಲ್ಲಿ 21 ಸಾವಿರ ಕೋಟಿ ರೂ. ಇದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರ ಬಜೆಟ್ನಲ್ಲಿ 1.34 ಲಕ್ಷ ಕೋಟಿ ರೂ. ಗಳನ್ನು ಕೃಷಿ ಕ್ಷೇತ್ರಕ್ಕಾಗಿ ಮೀಸಲಿಡುವ ಮೂಲಕ ರೈತ ಪರ ಸರ್ಕಾರ ಎಂಬುದನ್ನು ನಿರೂಪಿಸಿದೆ ಎಂದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನಮ್ಮ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಜಮಾ ಮಾಡುತ್ತಿದೆ. ಡಿಸೆಂಬರ್ ವರೆಗೆ ಸುಮಾರು 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗೆ 1.13 ಲಕ್ಷ ಕೋಟಿ ರೂ.ಗಳನ್ನು ಜಮಾ ಮಾಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 50 ಲಕ್ಷ ಹೆ. ಭೂಮಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ 5 ವರ್ಷ ಪೂರ್ಣಗೊಳಿಸಿದ್ದು, 90 ಸಾವಿರ ಕೋಟಿ ರೂ. ಈ ವಿಮೆ ಯೋಜನೆಯಡಿ ರೈತರಿಗೆ ಪಾವತಿಯಾಗಿದೆ. ಎಪಿಎಂಸಿ ಗಳಲ್ಲಿ ಆನ್ಲೈನ್ ವ್ಯವಹಾರ ಒದಗಿಸುವ ಮೂಲಕ ರೈತರಿಗೆ ಲಾಭದಾಯಕವಾಗುವಂತೆ ಮಾಡಲಾಗಿದೆ. ಹಿಂದಿನ ಸರ್ಕಾರ 6 ಲಕ್ಷ ಕೋಟಿ ರೂ. ರೈತರಿಗೆ ಸಾಲ ನೀಡುತ್ತಿತ್ತು. ನಮ್ಮ ಸರ್ಕಾರ 13.22 ಲಕ್ಷ ಕೋಟಿ ರೂ. ಗಳನ್ನು ರೈತರಿಗೆ ಸಾಲ ನೀಡುವ ಮೂಲಕ ನೆರವಾಗಿದೆ. 10 ಸಾವಿರಕ್ಕೂ ಹೆಚ್ಚು ರೈತ ಉತ್ಪಾದಕ ಸಂಘಗಳನ್ನು ಸ್ಥಾಪಿಸಲಾಗಿದ್ದು, 7 ಸಾವಿರ ಕೋಟಿ ರೂ. ಗಳನ್ನು ಸರ್ಕಾರ ಇದಕ್ಕಾಗಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ 1.6 ಕೋಟಿ ರೈತರಿಗೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತ ಪರವಾದ ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತವಾಗಿರುವ ಸರ್ಕಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ರೈತರು ಇದೀಗ ತಮ್ಮ ಬೆಳೆಯನ್ನು ಹೆಚ್ಚು ಲಾಭದಾಯಕವಾಗುವ ರೀತಿಯಲ್ಲಿ ಯಾವುದೇ ಅಡ್ಡಿಯಿಲ್ಲದೆ ಮಾರಾಟ ಮಾಡುವಂತಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ನೂತನ ಸಚಿವರು ಹಾಗೂ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಮುರುಗೇಶ್ ನಿರಾಣಿಯವರು ಸ್ವಾಗತಿಸಿ, ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ಸಮೂಹ ಸಂಸ್ಥೆಗಳು ಕೃಷಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸುಮಾರು 75 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದೆ. ಇಥೆನಾಲ್ ಉತ್ಪಾದಿಸುವ ಮೂಲಕ ನಮ್ಮ ಸಂಸ್ಥೆ ಪ್ರಧಾನಮಂತ್ರಿಗಳು ಜಾರಿಗೊಳಿಸಿದ ಆತ್ಮನಿರ್ಭರ್ ಯೋಜನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆಯಿರಿಸಿದೆ ಎಂದರು.
ಉಪಮುಖ್ಯಮಂತ್ರಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ಪರಮೇಶ ಜಿಗಜಿಣಗಿ.
ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



