Connect with us

ದಿನದ ಸುದ್ದಿ

ಕಿಸಾನ್ ಸಮ್ಮಾನ್‍ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ

Published

on

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ

ಸುದ್ದಿದಿನ,ಬಾಗಲಕೋಟೆ: ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.13 ಲಕ್ಷ ಕೋಟಿ ರೂ. ಗಳನ್ನು ಜಮಾ ಮಾಡುವ ಮೂಲಕ ರೈತರಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡಿರುವ ಸರ್ಕಾರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.

ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. & ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ಮಾತ್ರವಲ್ಲ, ಇಡೀ ವಿಶ್ವದ ನೇತೃತ್ವ ವಹಿಸುವ ದಿಸೆಯತ್ತ ಸಾಗುತ್ತಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಮಹತ್ವದ್ದಾಗಿದೆ. ದೇಶದಲ್ಲಿ ಜರುಗುತ್ತಿರುವ ಎಲ್ಲ ಹಂತಗಳ ಚುನಾವಣೆಗಳಲ್ಲಿ ದೇಶದ ಜನತೆ ನಮಗೆ ಬೆಂಬಲ ವ್ಯಕ್ತಪಡಿಸುತ್ತ ನಮ್ಮ ಸರ್ಕಾರವನ್ನು ಬಲಪಡಿಸುತ್ತಿದ್ದಾರೆ.

ದೇಶವನ್ನು ನಮ್ಮ ಸರ್ಕಾರ ಆತ್ಮನಿರ್ಭರಗೊಳಿಸುವತ್ತ ಸಾಗಿದೆ. ದೇಶದಲ್ಲಿ ಪೆಟ್ರೋಲ್ ಆಮದಿಗಾಗಿ ಸರ್ಕಾರದ ಬಹಳಷ್ಟು ಆದಾಯ ವಿದೇಶಿ ವಿನಿಮಯಕ್ಕೆ ಖರ್ಚಾಗುತ್ತಿದೆ. ಕಬ್ಬು ಬೆಳೆಯ ಸಹ ಉತ್ಪನ್ನವಾಗಿರುವ ಇಥೆನಾಲ್ ಇದೀಗ ದೇಶದ ಇಂಧನ ಕ್ಷೇತ್ರದಲ್ಲಿ ಪೆಟ್ರೋಲ್‍ಗೆ ಪರ್ಯಾಯ ಇಂಧನವಾಗಿ ಬಳಸಲಾಗುತ್ತಿದ್ದು, ದೇಶದ ಅಗತ್ಯತೆಯನ್ನು ಪೂರೈಸಲು ಸಹಕಾರಿಯಾಗಿದೆ ಎಂದರು.

ಇಥೆನಾಲ್ ಉತ್ಪಾದನೆ ಹಾಗೂ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಉತ್ತೇಜನ ನೀಡುತ್ತಿದ್ದಾರೆ. ಸಕ್ಕರೆ ಉತ್ಪಾದನೆಯ ಜೊತೆ ಜೊತೆಗೆ ಇಥೆನಾಲ್ ಉತ್ಪಾದನೆಗೆ ಅವಕಾಶವಿದ್ದು, ಇದರಿಂದ ರೈತರಿಗೂ ಅನುಕೂಲವಾಗಲಿದೆ ಅಲ್ಲದೆ ಸಕ್ಕರೆ ಕಾರ್ಖಾನೆಗಳಿಗೂ ಲಾಭದಾಯಕವಾಗಲಿದೆ. ಇಥೆನಾಲ್ ಹೆಚ್ಚಿನ ಉತ್ಪಾದನೆ ಹಾಗೂ ಬಳಕೆಯಿಂದ ಇಂಧನ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಆರ್ಥಿಕವಾಗಿಯೂ ದೇಶಕ್ಕೆ ವಿದೇಶಿ ವಿನಿಮಯದಲ್ಲಿ ಉಳಿಕೆಯಾಗಲಿದೆ.

ನಿರಾಣಿ ಸಮೂಹದ ಉದ್ಯಮವು ಇದೀಗ ತನ್ನ ಕಾರ್ಖಾನೆ ಘಟಕವನ್ನು ವಿಸ್ತರಿಸುತ್ತಿರುವುದರಿಂದ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿಸಿದಂತಾಗಿದೆ. 2015 ರಲ್ಲಿ ಇಥೆನಾಲ್ ಉತ್ಪಾದನೆಗೆ ಸುಂಕ ಕಡಿತಗೊಳಿಸಲಾಗಿದೆ. ಇಥೆನಾಲ್‍ಗೆ ಶೇ. 18 ರಷ್ಟು ಇದ್ದ ಜಿಎಸ್‍ಟಿ ಯನ್ನು ಇದೀಗ ಶೇ. 5 ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.

ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು 2022 ರೊಳಗೆ ಶೇ. 10 ರಷ್ಟು ಹಾಗೂ 2025 ರ ವೇಳೆಗೆ ಶೇ. 25 ರಷ್ಟು ಕಡಿತಗೊಳಿಸಲಾಗುವುದು. ಇಂಧನಕ್ಕಾಗಿ ಗಲ್ಫ್ ರಾಷ್ಟ್ರಗಳಿಗೆ ನಮ್ಮ ದೇಶದಿಂದ ಹೆಚ್ಚಿನ ಹಣ ಬಳಕೆಯಾಗುತ್ತಿದ್ದು, ಇದೀಗ ಪ್ರಮಾಣ ಕಡಿತದಿಂದ ಉಳಿಯುವ ಹಣವನ್ನು ನಾವು ರೈತರ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ಸಹಾಯಕವಾಗಿದೆ.

ಭಾರತೀಯ ಆಹಾರ ನಿಗಮದದಲ್ಲಿ ಲಭ್ಯವಾಗುವ ಮೆಕ್ಕೆಜೋಳ, ಅಕ್ಕಿ ಧಾನ್ಯವನ್ನು ಇಥೆನಾಲ್ ಉತ್ಪಾದನೆಗೆ ಬಳಸಿಕೊಳ್ಳಲು ನೀತಿಯೊಳಗೆ ಸೇರಿಸಿಕೊಳ್ಳಲಾಗಿದೆ. ಈ ನೂತನ ನೀತಿಯಿಂದಾಗಿ ರೈತರಿಗೂ ಅನುಕೂಲವಾಗಲಿದೆ. ರೈತರಿಗೆ ಆರ್ಥಿಕ ಲಾಭದ ಜೊತೆಗೆ ಉದ್ಯೋಗ ಸೃಷ್ಟಿಗೂ ಅನುಕೂಲವಾಗಲಿದೆ. ಇಥೆನಾಲ್ ಪರಿಸರ ಸ್ನೇಹಿಯಾಗಿದೆ.

ನಮ್ಮ ಸರ್ಕಾರ ಪ್ರಾಥಮಿಕ ಆದ್ಯತೆಯನ್ನು ರೈತರಿಗೆ ನೀಡುತ್ತಿದ್ದು, ಆದಾಯ ದ್ವಿಗುಣಗೊಳಿಸುವತ್ತ ಕ್ರಮ ಕೈಗೊಂಡಿದೆ. 2013-14 ರಲ್ಲಿ 21 ಸಾವಿರ ಕೋಟಿ ರೂ. ಇದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರ ಬಜೆಟ್‍ನಲ್ಲಿ 1.34 ಲಕ್ಷ ಕೋಟಿ ರೂ. ಗಳನ್ನು ಕೃಷಿ ಕ್ಷೇತ್ರಕ್ಕಾಗಿ ಮೀಸಲಿಡುವ ಮೂಲಕ ರೈತ ಪರ ಸರ್ಕಾರ ಎಂಬುದನ್ನು ನಿರೂಪಿಸಿದೆ ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನಮ್ಮ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಜಮಾ ಮಾಡುತ್ತಿದೆ. ಡಿಸೆಂಬರ್ ವರೆಗೆ ಸುಮಾರು 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗೆ 1.13 ಲಕ್ಷ ಕೋಟಿ ರೂ.ಗಳನ್ನು ಜಮಾ ಮಾಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 50 ಲಕ್ಷ ಹೆ. ಭೂಮಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಿದೆ.

ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ 5 ವರ್ಷ ಪೂರ್ಣಗೊಳಿಸಿದ್ದು, 90 ಸಾವಿರ ಕೋಟಿ ರೂ. ಈ ವಿಮೆ ಯೋಜನೆಯಡಿ ರೈತರಿಗೆ ಪಾವತಿಯಾಗಿದೆ. ಎಪಿಎಂಸಿ ಗಳಲ್ಲಿ ಆನ್‍ಲೈನ್ ವ್ಯವಹಾರ ಒದಗಿಸುವ ಮೂಲಕ ರೈತರಿಗೆ ಲಾಭದಾಯಕವಾಗುವಂತೆ ಮಾಡಲಾಗಿದೆ. ಹಿಂದಿನ ಸರ್ಕಾರ 6 ಲಕ್ಷ ಕೋಟಿ ರೂ. ರೈತರಿಗೆ ಸಾಲ ನೀಡುತ್ತಿತ್ತು. ನಮ್ಮ ಸರ್ಕಾರ 13.22 ಲಕ್ಷ ಕೋಟಿ ರೂ. ಗಳನ್ನು ರೈತರಿಗೆ ಸಾಲ ನೀಡುವ ಮೂಲಕ ನೆರವಾಗಿದೆ. 10 ಸಾವಿರಕ್ಕೂ ಹೆಚ್ಚು ರೈತ ಉತ್ಪಾದಕ ಸಂಘಗಳನ್ನು ಸ್ಥಾಪಿಸಲಾಗಿದ್ದು, 7 ಸಾವಿರ ಕೋಟಿ ರೂ. ಗಳನ್ನು ಸರ್ಕಾರ ಇದಕ್ಕಾಗಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ 1.6 ಕೋಟಿ ರೈತರಿಗೆ ನೀಡಲಾಗಿದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತ ಪರವಾದ ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತವಾಗಿರುವ ಸರ್ಕಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ರೈತರು ಇದೀಗ ತಮ್ಮ ಬೆಳೆಯನ್ನು ಹೆಚ್ಚು ಲಾಭದಾಯಕವಾಗುವ ರೀತಿಯಲ್ಲಿ ಯಾವುದೇ ಅಡ್ಡಿಯಿಲ್ಲದೆ ಮಾರಾಟ ಮಾಡುವಂತಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.

ನೂತನ ಸಚಿವರು ಹಾಗೂ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಮುರುಗೇಶ್ ನಿರಾಣಿಯವರು ಸ್ವಾಗತಿಸಿ, ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ಸಮೂಹ ಸಂಸ್ಥೆಗಳು ಕೃಷಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸುಮಾರು 75 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದೆ. ಇಥೆನಾಲ್ ಉತ್ಪಾದಿಸುವ ಮೂಲಕ ನಮ್ಮ ಸಂಸ್ಥೆ ಪ್ರಧಾನಮಂತ್ರಿಗಳು ಜಾರಿಗೊಳಿಸಿದ ಆತ್ಮನಿರ್ಭರ್ ಯೋಜನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆಯಿರಿಸಿದೆ ಎಂದರು.

ಉಪಮುಖ್ಯಮಂತ್ರಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ಪರಮೇಶ ಜಿಗಜಿಣಗಿ.

ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending