ದಿನದ ಸುದ್ದಿ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ
ಸುದ್ದಿದಿನ,ಬಾಗಲಕೋಟೆ: ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 1.13 ಲಕ್ಷ ಕೋಟಿ ರೂ. ಗಳನ್ನು ಜಮಾ ಮಾಡುವ ಮೂಲಕ ರೈತರಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡಿರುವ ಸರ್ಕಾರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. & ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ಮಾತ್ರವಲ್ಲ, ಇಡೀ ವಿಶ್ವದ ನೇತೃತ್ವ ವಹಿಸುವ ದಿಸೆಯತ್ತ ಸಾಗುತ್ತಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಮಹತ್ವದ್ದಾಗಿದೆ. ದೇಶದಲ್ಲಿ ಜರುಗುತ್ತಿರುವ ಎಲ್ಲ ಹಂತಗಳ ಚುನಾವಣೆಗಳಲ್ಲಿ ದೇಶದ ಜನತೆ ನಮಗೆ ಬೆಂಬಲ ವ್ಯಕ್ತಪಡಿಸುತ್ತ ನಮ್ಮ ಸರ್ಕಾರವನ್ನು ಬಲಪಡಿಸುತ್ತಿದ್ದಾರೆ.
ದೇಶವನ್ನು ನಮ್ಮ ಸರ್ಕಾರ ಆತ್ಮನಿರ್ಭರಗೊಳಿಸುವತ್ತ ಸಾಗಿದೆ. ದೇಶದಲ್ಲಿ ಪೆಟ್ರೋಲ್ ಆಮದಿಗಾಗಿ ಸರ್ಕಾರದ ಬಹಳಷ್ಟು ಆದಾಯ ವಿದೇಶಿ ವಿನಿಮಯಕ್ಕೆ ಖರ್ಚಾಗುತ್ತಿದೆ. ಕಬ್ಬು ಬೆಳೆಯ ಸಹ ಉತ್ಪನ್ನವಾಗಿರುವ ಇಥೆನಾಲ್ ಇದೀಗ ದೇಶದ ಇಂಧನ ಕ್ಷೇತ್ರದಲ್ಲಿ ಪೆಟ್ರೋಲ್ಗೆ ಪರ್ಯಾಯ ಇಂಧನವಾಗಿ ಬಳಸಲಾಗುತ್ತಿದ್ದು, ದೇಶದ ಅಗತ್ಯತೆಯನ್ನು ಪೂರೈಸಲು ಸಹಕಾರಿಯಾಗಿದೆ ಎಂದರು.
ಇಥೆನಾಲ್ ಉತ್ಪಾದನೆ ಹಾಗೂ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳು ಉತ್ತೇಜನ ನೀಡುತ್ತಿದ್ದಾರೆ. ಸಕ್ಕರೆ ಉತ್ಪಾದನೆಯ ಜೊತೆ ಜೊತೆಗೆ ಇಥೆನಾಲ್ ಉತ್ಪಾದನೆಗೆ ಅವಕಾಶವಿದ್ದು, ಇದರಿಂದ ರೈತರಿಗೂ ಅನುಕೂಲವಾಗಲಿದೆ ಅಲ್ಲದೆ ಸಕ್ಕರೆ ಕಾರ್ಖಾನೆಗಳಿಗೂ ಲಾಭದಾಯಕವಾಗಲಿದೆ. ಇಥೆನಾಲ್ ಹೆಚ್ಚಿನ ಉತ್ಪಾದನೆ ಹಾಗೂ ಬಳಕೆಯಿಂದ ಇಂಧನ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದ್ದು, ಆರ್ಥಿಕವಾಗಿಯೂ ದೇಶಕ್ಕೆ ವಿದೇಶಿ ವಿನಿಮಯದಲ್ಲಿ ಉಳಿಕೆಯಾಗಲಿದೆ.
ನಿರಾಣಿ ಸಮೂಹದ ಉದ್ಯಮವು ಇದೀಗ ತನ್ನ ಕಾರ್ಖಾನೆ ಘಟಕವನ್ನು ವಿಸ್ತರಿಸುತ್ತಿರುವುದರಿಂದ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿಸಿದಂತಾಗಿದೆ. 2015 ರಲ್ಲಿ ಇಥೆನಾಲ್ ಉತ್ಪಾದನೆಗೆ ಸುಂಕ ಕಡಿತಗೊಳಿಸಲಾಗಿದೆ. ಇಥೆನಾಲ್ಗೆ ಶೇ. 18 ರಷ್ಟು ಇದ್ದ ಜಿಎಸ್ಟಿ ಯನ್ನು ಇದೀಗ ಶೇ. 5 ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು 2022 ರೊಳಗೆ ಶೇ. 10 ರಷ್ಟು ಹಾಗೂ 2025 ರ ವೇಳೆಗೆ ಶೇ. 25 ರಷ್ಟು ಕಡಿತಗೊಳಿಸಲಾಗುವುದು. ಇಂಧನಕ್ಕಾಗಿ ಗಲ್ಫ್ ರಾಷ್ಟ್ರಗಳಿಗೆ ನಮ್ಮ ದೇಶದಿಂದ ಹೆಚ್ಚಿನ ಹಣ ಬಳಕೆಯಾಗುತ್ತಿದ್ದು, ಇದೀಗ ಪ್ರಮಾಣ ಕಡಿತದಿಂದ ಉಳಿಯುವ ಹಣವನ್ನು ನಾವು ರೈತರ ಅಭಿವೃದ್ಧಿಗಾಗಿ ಬಳಸಿಕೊಳ್ಳಲು ಸಹಾಯಕವಾಗಿದೆ.
ಭಾರತೀಯ ಆಹಾರ ನಿಗಮದದಲ್ಲಿ ಲಭ್ಯವಾಗುವ ಮೆಕ್ಕೆಜೋಳ, ಅಕ್ಕಿ ಧಾನ್ಯವನ್ನು ಇಥೆನಾಲ್ ಉತ್ಪಾದನೆಗೆ ಬಳಸಿಕೊಳ್ಳಲು ನೀತಿಯೊಳಗೆ ಸೇರಿಸಿಕೊಳ್ಳಲಾಗಿದೆ. ಈ ನೂತನ ನೀತಿಯಿಂದಾಗಿ ರೈತರಿಗೂ ಅನುಕೂಲವಾಗಲಿದೆ. ರೈತರಿಗೆ ಆರ್ಥಿಕ ಲಾಭದ ಜೊತೆಗೆ ಉದ್ಯೋಗ ಸೃಷ್ಟಿಗೂ ಅನುಕೂಲವಾಗಲಿದೆ. ಇಥೆನಾಲ್ ಪರಿಸರ ಸ್ನೇಹಿಯಾಗಿದೆ.
ನಮ್ಮ ಸರ್ಕಾರ ಪ್ರಾಥಮಿಕ ಆದ್ಯತೆಯನ್ನು ರೈತರಿಗೆ ನೀಡುತ್ತಿದ್ದು, ಆದಾಯ ದ್ವಿಗುಣಗೊಳಿಸುವತ್ತ ಕ್ರಮ ಕೈಗೊಂಡಿದೆ. 2013-14 ರಲ್ಲಿ 21 ಸಾವಿರ ಕೋಟಿ ರೂ. ಇದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರ ಬಜೆಟ್ನಲ್ಲಿ 1.34 ಲಕ್ಷ ಕೋಟಿ ರೂ. ಗಳನ್ನು ಕೃಷಿ ಕ್ಷೇತ್ರಕ್ಕಾಗಿ ಮೀಸಲಿಡುವ ಮೂಲಕ ರೈತ ಪರ ಸರ್ಕಾರ ಎಂಬುದನ್ನು ನಿರೂಪಿಸಿದೆ ಎಂದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನಮ್ಮ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಜಮಾ ಮಾಡುತ್ತಿದೆ. ಡಿಸೆಂಬರ್ ವರೆಗೆ ಸುಮಾರು 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗೆ 1.13 ಲಕ್ಷ ಕೋಟಿ ರೂ.ಗಳನ್ನು ಜಮಾ ಮಾಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 50 ಲಕ್ಷ ಹೆ. ಭೂಮಿಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಿದೆ.
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ 5 ವರ್ಷ ಪೂರ್ಣಗೊಳಿಸಿದ್ದು, 90 ಸಾವಿರ ಕೋಟಿ ರೂ. ಈ ವಿಮೆ ಯೋಜನೆಯಡಿ ರೈತರಿಗೆ ಪಾವತಿಯಾಗಿದೆ. ಎಪಿಎಂಸಿ ಗಳಲ್ಲಿ ಆನ್ಲೈನ್ ವ್ಯವಹಾರ ಒದಗಿಸುವ ಮೂಲಕ ರೈತರಿಗೆ ಲಾಭದಾಯಕವಾಗುವಂತೆ ಮಾಡಲಾಗಿದೆ. ಹಿಂದಿನ ಸರ್ಕಾರ 6 ಲಕ್ಷ ಕೋಟಿ ರೂ. ರೈತರಿಗೆ ಸಾಲ ನೀಡುತ್ತಿತ್ತು. ನಮ್ಮ ಸರ್ಕಾರ 13.22 ಲಕ್ಷ ಕೋಟಿ ರೂ. ಗಳನ್ನು ರೈತರಿಗೆ ಸಾಲ ನೀಡುವ ಮೂಲಕ ನೆರವಾಗಿದೆ. 10 ಸಾವಿರಕ್ಕೂ ಹೆಚ್ಚು ರೈತ ಉತ್ಪಾದಕ ಸಂಘಗಳನ್ನು ಸ್ಥಾಪಿಸಲಾಗಿದ್ದು, 7 ಸಾವಿರ ಕೋಟಿ ರೂ. ಗಳನ್ನು ಸರ್ಕಾರ ಇದಕ್ಕಾಗಿ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ 1.6 ಕೋಟಿ ರೈತರಿಗೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರ ರೈತರ ಪರವಾಗಿದ್ದು, ರೈತ ಪರವಾದ ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತವಾಗಿರುವ ಸರ್ಕಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ರೈತರು ಇದೀಗ ತಮ್ಮ ಬೆಳೆಯನ್ನು ಹೆಚ್ಚು ಲಾಭದಾಯಕವಾಗುವ ರೀತಿಯಲ್ಲಿ ಯಾವುದೇ ಅಡ್ಡಿಯಿಲ್ಲದೆ ಮಾರಾಟ ಮಾಡುವಂತಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಆತ್ಮನಿರ್ಭರ ಭಾರತ ನಿರ್ಮಾಣ ಮಾಡುವಲ್ಲಿ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಹ ಅವರು ಹೇಳಿದರು.
ನೂತನ ಸಚಿವರು ಹಾಗೂ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಮುರುಗೇಶ್ ನಿರಾಣಿಯವರು ಸ್ವಾಗತಿಸಿ, ನಮ್ಮದು ಕೃಷಿ ಪ್ರಧಾನ ದೇಶವಾಗಿದ್ದು, ನಮ್ಮ ಸಮೂಹ ಸಂಸ್ಥೆಗಳು ಕೃಷಿ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸುಮಾರು 75 ಸಾವಿರ ಕುಟುಂಬಗಳಿಗೆ ಉದ್ಯೋಗ ನೀಡಿದೆ. ಇಥೆನಾಲ್ ಉತ್ಪಾದಿಸುವ ಮೂಲಕ ನಮ್ಮ ಸಂಸ್ಥೆ ಪ್ರಧಾನಮಂತ್ರಿಗಳು ಜಾರಿಗೊಳಿಸಿದ ಆತ್ಮನಿರ್ಭರ್ ಯೋಜನೆಯನ್ನು ಸಾಕಾರಗೊಳಿಸುವತ್ತ ಹೆಜ್ಜೆಯಿರಿಸಿದೆ ಎಂದರು.
ಉಪಮುಖ್ಯಮಂತ್ರಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ಪರಮೇಶ ಜಿಗಜಿಣಗಿ.
ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ1 day ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ