ದಿನದ ಸುದ್ದಿ
13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಧಾನ : ಇಂದು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 8ನೇ ಘಟಿಕೋತ್ಸವ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ 8ನೇ ಘಟಿಕೋತ್ಸವವನ್ನು ಏ.8 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 13,207 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ 44 ವಿದ್ಯಾರ್ಥಿಗಳು 74 ಚಿನ್ನದ ಪದಕಗಳನ್ನು ಪಡೆಯಲಿದ್ದಾರೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು.
ಗುರುವಾರ ವಿಶ್ವವಿದ್ಯಾನಿಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2019-20 ನೇ ಸಾಲಿನ ಚಿನ್ನದ ಪದಕ ಗಳಿಕೆಯಲ್ಲಿ ಮಹಿಳಾ ವಿದ್ಯಾರ್ಥಿಗಳು ಮುನ್ನಡೆ ಸಾಧಿಸಿದ್ದು, 34 ವಿದ್ಯಾರ್ಥಿನಿಯರು ಪದಕಗಳನ್ನು ಪಡೆದಿದ್ದಾರೆ. ಗಣಿತ ವಿಭಾಗದ ವಿದ್ಯಾರ್ಥಿನಿ ಮೇಘ ಎನ್.ಎಸ್. 4 ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಹಾಗೂ ಈ ಬಾರಿ ವಿವಿಧ ವಿಭಾಗಗಳಲ್ಲಿ 7 ಜನರಿಗೆ ಪಿಎಚ್.ಡಿ ಹಾಗೂ ಇಬ್ಬರಿಗೆ ಎಂ.ಫಿಲ್ ಪದವಿಯನ್ನು ಪ್ರಧಾನ ಮಾಡಲಾಗುತ್ತಿದೆ ಎಂದರು.
ಈ ಬಾರಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಒಟ್ಟು 74 ಸ್ವರ್ಣ ಪದಕಗಳನ್ನು 43 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಸ್ನಾತಕ ವಿಭಾಗದಲ್ಲಿ 19 ಸ್ವರ್ಣ ಪದಕಗಳನ್ನು 12 ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಅವರಲ್ಲಿ 3 ಪುರುಷ ಮತ್ತು 9 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 29 ವಿದ್ಯಾರ್ಥಿಗಳು 52 ಪದಕಗಳನ್ನು ಗಳಿಸಿದ್ದಾರೆ. ಇವರಲ್ಲಿ 7 ಪುರುಷ ಹಾಗೂ 22 ಮಹಿಳಾ ವಿದ್ಯಾರ್ಥಿಗಳು ಇದ್ದಾರೆ. ಸ್ನಾತಕ ಪದವಿಯ 11 ಹಾಗೂ ಸ್ನಾತಕೋತ್ತರ ಪದವಿಯ 24 ಸೇರಿ ಒಟ್ಟು 35 ವಿದ್ಯಾರ್ಥಿಗಳು ಪ್ರಥಮ ರ್ಯಾಂಕ್ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ವಿಶ್ವವಿದ್ಯಾನಿಲಯವು 2019-20ರ ಅವಧಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಯಾದ 11,193 ಪದವಿಯ ಹಾಗೂ 2,014 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಈ ಬಾರಿ ಪದವಿಯಲ್ಲಿ 6,873 ಮಹಿಳೆಯರು ಹಾಗೂ 4,319 ಪುರುಷ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ, ಬಿಸಿಎ, ಬಿಎಸ್ಡಬ್ಲ್ಯೂ, ಬಿವಿಎ, ಬಿ.ಇಡಿ ಹಾಗೂ ಬಿಬಿಇಡಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪದವಿ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ 1,189 ಮಹಿಳಾ ಮತ್ತು 824 ಪುರುಷ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆಯುವರು.
ಗೌರವ ಡಾಕ್ಟರೇಟ್ ಪದವಿ
ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಇಬ್ಬರು ಗಣ್ಯರಾದ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಧ್ಯಾಪಕ ಡಾ. ಎಂ.ಕೆ. ರಮೇಶ್ ಅವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಲಾಗುವುದು ಎಂದರು.
ಡಾ.ಗುರುರಾಜ ಕರಜಗಿ ಅವರಿಂದ ಘಟೀಕೋತ್ಸವ ಭಾಷಣ
ಈ ಬಾರಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರಜಗಿ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಕೊರೊನಾ ಸಂಕಷ್ಟದ ದಿನಗಳಲ್ಲೂ ಸುಸಜ್ಜಿತವಾಗಿ ಪರೀಕ್ಷೆ ನಡೆಸಿದ್ದು, ಈ ಸಂದರ್ಭದಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಹಾಗೂ ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ಮಾಡಿಕೊಟ್ಟಿದೆ.
ಈ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಸ್ನಾತಕ ಪದವಿಯಲ್ಲಿ ಶೇ.60.57 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.95.31ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಿವಿಯ ಎಲ್ಲಾ ಪ್ರಾಧ್ಯಾಪಕ ವೃಂದದವರು ಶ್ರಮಿಸಿದ್ದು, ಪಠ್ಯ ಮತ್ತು ಪ್ರಾಯೋಗಿಕ ತರಗತಿಗಳನ್ನು ಮುಗಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜು ಮಾಡಿರುವುದು ವಿಶೇಷ ಎಂದರು.
ಕೊರೊನಾ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ 173 ಶಿಕ್ಷಕರು ಆನ್ಲೈನ್ ಮೂಲಕ ಒಟ್ಟು 4176 ತರಗತಿಗಳು, 63 ಕಾರ್ಯಾಗಾರ, 21 ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗಿದ್ದು, 154 ವಿಶ್ವವಿದ್ಯಾನಿಲಯ ಮಟ್ಟದ ವಿಚಾರಗೋಷ್ಠಿಗಳನ್ನು ನಡೆಸಲಾಗಿದೆ. ದಾವಣಗೆರೆ ವಿಶ್ವವಿದ್ಯಾನಿಲಯದ ಸಾಮಾಜಿಕ ಜಾಲತಾಣ ಹಾಗೂ ಆನ್ಲೈನ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗಲು ಸುಮಾರು 2100 ಮಾಹಿತಿ ಮತ್ತು ಪಾಠಗಳ ಟಿಪ್ಪಣಿಗಳನ್ನು ಒದಗಿಸಲಾಗಿತ್ತು.
ಇದೆಲ್ಲದರ ಪ್ರತಿಫಲದಿಂದಾಗಿ ದಾವಣಗೆರೆ ವಿಶ್ವವಿದ್ಯಾನಿಲಯವು ದೇಶದ ವಿಶ್ವವಿದ್ಯಾನಿಲಯಗಳ ಶೈಕ್ಷಣಿಕ ಇತಿಹಾಸದಲ್ಲಿ ದಾಖಲೆ ನಿರ್ಮಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಅನಿತಾ ಹೆಚ್.ಎಸ್, ಕುಲಸಚಿವ ಪ್ರೊ. ಗಾಯತ್ರಿ ದೇವರಾಜ, ಹಣಕಾಸು ಅಧಿಕಾರಿ ಪ್ರಿಯಾಂಕ.ಡಿ, ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮೀ, ವೀರಭದ್ರಯ್ಯ, ಶ್ರೀಧರ್.ಎಸ್, ಹೆಚ್.ಜಿ.ಕೃಷ್ಣಮೂರ್ತಿ, ವೀರಣ್ಣ ಗೌಡರ್, ಪ್ರಶಾಂತ್ ಬಣಕಾರ್, ಜ್ಯೋತಿ.ಎಮ್, ಇನಾಯತ್ ವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.
ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.
ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.
ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್ಮೆಂಟ್ ಆಫೀಸರ್ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ5 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ5 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ14 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

