ದಿನದ ಸುದ್ದಿ
ಉರಿ ಚಮ್ಮಾಳಿಗೆ
- ಡಾ.ವಡ್ಡಗೆರೆ ನಾಗರಾಜಯ್ಯ
ಅವೊತ್ತಿನ ಬೆಳಗು ನನಗಿನ್ನೂ ಹಸಿರಾಗಿ ನೆನಪಿಗಿದೆ. ಪ್ರಾಯಶಃ ಇನ್ನೆಂದಿಗೂ ಮಾಸದ ನೆನಪು ಅದು ; ನನ್ನ ಕರೇಕುಲದ ಮುಂದಿನ ಪೀಳಿಗೆಗಳು ಸೂರ್ಯ ಚಂದ್ರನಿರುವ ತನಕ ಈ ನೆನಪನ್ನು ತಮ್ಮೊಡನೆ ಹೊತ್ತೊಯ್ಯುತ್ತವೆಂಬ ಬಲವಾದ ನಂಬಿಕೆ ನನಗಿದೆ.
ಮಾನವ ನಿರ್ಮಿತ ಯಾವುದೇ ಉಪಾಯಗಳು ನನ್ನ ಕುಲಸ್ತರು ಅನುಭವಿಸಿದ ಸುಖ ದುಃಖ, ನೋವು – ನಲಿವು, ಸಂಕಟ ಹಾಗೂ ಹೋರಾಟಗಳ ನೆನಪಿನ ಬೇರನ್ನು ಕಿತ್ತು ಹಾಕಲು ಸಾಧ್ಯವಿಲ್ಲ ; ಆ ದೇವರಿಂದಲೂ ಕೂಡ! ನಮ್ಮ ನೆನಪಿಗೆ ಅಂತಹ ಅಗಾಧ ಶಕ್ತಿಯಿದೆ. ಅದು ನಿತ್ಯಗಾಮಿನಿ.
ಆ ದಿನ ಬೆಳಗ್ಗೆ ಅನುಭವ ಮಂಟಪದ ದಾರಿಯಲ್ಲಿ ಎದುರಾದ ನಿನ್ನನ್ನು ನೋಡಿದ ನಾನು ‘ಶರಣು ಬಸವಣ್ಣ’ ಎಂದು ನಂಬಿಸಿದ್ದೆ. ಇದಕ್ಕೆ ಪ್ರತಿಯಾಗಿ ನೀನೂ ಸಹ “ಶರಣು ಶರಣು ಹರಳಯ್ಯ” ಎಂದು ವಂದಿಸಿದ್ದೆ. ನೆನಪಿದೆಯಾ ಅಣ್ಣಾ? ನಿನ್ನಿಂದ ಒಂದು ಶರಣರಿಗೆ ಬದಲಾಗಿ ಎರಡು ಸಲ “ಶರಣು ಶರಣು” ಎಂಬ ನುಡಿ ಕೇಳಿದ ನಾನು ಎಷ್ಟೊಂದು ತತ್ತರಿಸಿ ಹೋದೆ.
ನಿನಗೆ ಗೊತ್ತಿರಲಿಕ್ಕಿಲ್ಲ. ನೀನು ನನ್ನ ಅರಿವಿಗೆ ಬಾರದಂತೆ ಸಹಜವಾಗಿ ಒಂದು ಶರಣು ಹೆಚ್ಚುವರಿ ಋಣಭಾರ ನನ್ನ ಮೇಲೆ ಹೇರಿದ್ದೆ. ನೀನೇನೋ ಭಾರ ಇಳಿಸಿಕೊಳ್ಳಲು ಚಡಪಡಿಸಿ ಬೆಂದು ಹೋಗುವಂಥವನು ನಿಜ. ನಿಮ್ಮವರು ಹೊತ್ತ ಭಾರ ಇಳಿಸಲು ಹೋದ ನೀನು ನನ್ನ ಮೇಲೆ ಭಾರ ಹೇರಿದೆಯಲ್ವಾ, ಇದು ನ್ಯಾಯವೇ? ಎಷ್ಟಾದರೂ ನೀನು ಭಾರ ಹೊರಿಸುವ ಕುಲದಿಂದ ಬಂದವನು; ನಾನಾದರೋ ಭಾರ ಹೊರಲೆಂದೇ ಹುಟ್ಟಿದ ನೊಗವೆಳೆವ ಮೂಕತ್ತು ಎಂಬುದು ನನಗೆ ಅರಿವಾಯಿತು.
ನಾನು ಹೊಲೆಯುವ ಮೆಟ್ಟುಗಳ ಮೇಲೆ ಭಾರ ಹಾಕಿ ನಡೆಯುವ ದಾರಿಹೋಕರು ನನ್ನೆದುರಿನಲ್ಲಿದ್ದಾರೆ. ಮೆಟ್ಟು ಹೊಲೆಯುವ ನನಗೆ ಮೆಟ್ಟೆಂದಿಗೂ ಭಾರವಲ್ಲ. ನಡೆಯುವ ದಾರಿಹೋಕರ ದಣಿವನ್ನು ತಾಪವನ್ನು ನನ್ನ ಮೆಟ್ಟು ಕಳೆಯಬಲ್ಲದು. ಕಲ್ಲು ಮುಳ್ಳುಗಳು ನನ್ನ ಮೆಟ್ಟುಗಳಿರುವ ಕಡೆಗೆ ದಾರಿಹೋಕರ ಪಾದಗಳನ್ನು ಚುಚ್ಚಲಾರವು.
ಆ ದಿನ ನೀನು ಶರಣು ಶರರಣಯ್ಯಾ ಎಂದು ಹೇಳಿದ ಬಳಿಕ ಏರುವ ಹೊತ್ತಿನೊಂದಿಗೆ ನೀನು ಹೊರಿಸಿದ ಶರಣೆಂಬ ವಜೆಯೂ ಏರುತ್ತಾ ಹೋಯಿತು.
ಏರುವ ಹೊತ್ತಿನೊಡನೆ ನೀನು ಹೊರಿಸಿದ ಶರಣೆಂಬ ವಜೆ ಹೊತ್ತ ನನ್ನ ಬೆನ್ನ ಬುಡದಿಂದ ಸಣ್ಣಗೆ ಶುರುವಾದ ಚಳುಕು ಇಡೀ ಶರೀರವನ್ನೆಲ್ಲಾ ಬಾಧಿಸತೊಡಗಿತ್ತು. ಅಣ್ಣಾ ನನಗೆ ಗೊತ್ತು. ನೀನು ಬಲಾತ್ಕರಿಸಿಯೇನು ಹೊರಿಸಲಿಲ್ಲ ; ಹಾಗೆ ನೋಡಿದರೆ ನೀನು ನಿನ್ನ ಪೂರ್ವಿಕರಿಗಿಂತಲೂ ಬದಲು ಕರುಣಿ. ಅವರಾದರೂ ನಮ್ಮನ್ನು ಪಶುಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡರು.
ಛೇ! ಕ್ಷಮಿಸು. ನೀನೆಲ್ಲಿ ಅವರಲ್ಲಿ? ಎತ್ತಣಿಂದೆತ್ತ ಸಂಬಂಧ. ಅಂತಹ ಪೂರ್ವಿಕ ಪಳೆಯುಳಿಕೆಗಳನ್ನು ಬಿಸುಡಿ ನಿಮ್ಮ ಹಟ್ಟಿಗೆ ಓಡೋಡಿ ಬಂದ ನೀನು, ‘ಅಪ್ಪನು ನಮ್ಮ ಮಾದಾರ ಚನ್ನಯ್ಯ, ಬೊಪ್ಪ ನು ನಮ್ಮ ಡೋಹರ ಕಕ್ಕಯ್ಯ”ನೆಂದು ನಮ್ಮನ್ನೆಲ್ಲಾ ಬಾವುಣಿಕೆಯಿಂದ ತಬ್ಬಿಕೊಂಡು ನಮ್ಮ ಕಲ ಕರೇಕಲದೊಬ್ಬ ಮಗನಾದೆ ; ನೀನೊಂದು ನವಜಾತ ಶಿಶು!
ಇಲ್ಲಿ ನನ್ನ ಹಟ್ಟಿಯಲ್ಲಿ ತುಂಬಿ ಫಲದೂಗುವ ತೆಂಗಿನ ಮರದಂಥ ತಾಯಂದಿರು ತಮ್ಮ ಮಕ್ಕಳಿಗೆ ಹಾಲೂಡುವುದು ಬಲು ಸೋಜಿಗ! ಹಾಲು ಬತ್ತಿದ ಅಜ್ಜಿಯರೂ ತಮ್ಮ ಎದೆಗೆ ಅವುಚಿಕೊಂಡು ಮೊಮ್ಮಕ್ಕಳಿಗೆ ಮೊಲೆಯುಣಿಸುತ್ತಾರೆ : ಅಲ್ಲಿ ಪ್ರೀತಿ ಜಿನುಗುತ್ತದೆ! ಎಲ್ಲ ತಾಯಂದಿರೂ ತಮ್ಮೊಳಗಿನ ಮಾತೃತ್ವವನ್ನು ಹುಟ್ಟಿದ್ದ ಪ್ರತಿ ಮಗುವಿಗೂ ನೇವರಿಸಿ ಉಣ ಬಡಿಸುತ್ತಾರೆ.
ತಮ್ಮ ಕಂದಮ್ಮಗಳಿಗೆ ಎಷ್ಟು ಸಲ ಎದೆ ಹಾಲು ಕುಡಿಸಿದರೂ ತೃಪ್ತಿಯಾಗದ ಸಮಗಾರ ಭೀಮಮ್ಮವರು ನಮ್ಮ ಕರೇಕುಲದ ಹಟ್ಟಿಯಲ್ಲಾಡುವ ಇತರ ಕಂದಮ್ಮಗಳಿಗೂ ಹಾಲು ಕುಡಿಸುವುದುದುಂಟು. ಇಲ್ಲಿ ಹುಟ್ಟುವ ಪ್ರತಿ ಶಿಶುವು ಹಟ್ಟಿಯ ಎಲ್ಲ ತಾಯಂದಿರ ಎದೆ ಹಾಲು ಕುಡಿದು ಬೆಳೆಯುತ್ತದೆ. ಹೇ, ಬಸವಣ್ಣಾ ಇಂತಹ ಭಾಗ್ಯ ನಮ್ಮ ಶಿಶುವಾಗಿ ನೀನು ಕಂಡೆ!
ನನಗೆ ಹಟ್ಟಿ ತುಂಬಾ ತಾಯಂದಿರು. ಹಟ್ಟಿ, ಬಯಲಲ್ಲಿ ಬಟ್ಟ ಬಯಲಲ್ಲಿ ಊರ ಸೆರಗಲ್ಲಿ, ಎಲ್ಲೆಂದರಲ್ಲಿ ಎದೆ ಹಾಲು ಕುಡಿಸಿದ ನನ್ನ ತಾಯಂದಿರು ನನಗೆ ಹೇಳುತ್ತಿದ್ದ ಒಂದು ಮಾತು “ಅನ್ಯರ ಹೊರೆ ನೀನು ಹೊರಬೇಕಲ್ಲದೆ ನಿನ್ನ ಹೊರೆಯನ್ನು ಪರರ ಮೇಲೆ ಹೊರಿಸುವುದು ಸಲ್ಲತಕ್ಕದ್ದಲ್ಲ ಹರಳಯ್ಯಾ” ಎಂಬುದು. ಆ ದಿನ ನಾನು ಹೊರಿಸಿದ ಒಂದು ಶರಣಿನ ಹೆಚ್ಚಿನ ಹೊರೆ ಹೊತ್ತು ನಾನು ಮನೆಗೆ ಬಂದೆ. ಆಗ ಇಳಿ ಹೊತ್ತು; ಧೂಳು ಸಂಜೆ.
ನನ್ನ ನೆಚ್ಚಿನ ಸತಿ ಶಿವಶರಣೆ ಕಲ್ಯಾಣಮ್ಮನ ಕೂಟೆ ಮಾತನಾಡುತ್ತಾ ಹೊರೆ ಇಳಿಸಿಕೊಳ್ಳುವ ಉಪಾಯವನ್ನು ಕೇಳಿದೆ. ಹೊರೆ ಇಳಿಸುವ ಮಾರ್ಗ ಹೆಂಗಸರಿಗೆ ಮಾತ್ರ ಗೊತ್ತೆಂದರೆ ನಿನಗೆ ಆಶ್ಚರ್ಯವಾಗಬಹುದಲ್ಲವೆ ಬಸವಣ್ಣ? ಹೌದು, ನನ್ನ ಹೆಂಡತಿ ಕಾರ್ಯಸಾಧ್ಯವಾದ ಉಪಾಯವನ್ನು ಹೇಳುತ್ತಾಳೆಂಬ ವಿಶ್ವಾಸದಿಂದಲೇ ಕೇಳಿದ್ದೆ.
“ನೋಡು, ಶಿವಶರಣ ಬಸವಣ್ಣನವರ ಶರಣಿನ ತೂಕಕ್ಕೆ ಸಮವಾಗುವಂಥ ಸಂಪತ್ತು ನಮ್ಮತಾವ ಏನು ತಾನೆ ಐತೆ? ಹೂವುನ ಹಾಸ್ಗೆ ಮ್ಯಾಲ ನಡೆದಂಗೆ ಕಾಣೋಂಥ ಪಾದ್ರಾಕ್ಷಿ ಮಾಡ್ಕೊಡನಿ” ಎಂದು ನಮ್ಮ ಕರೇಕುಲದ ಸಮಗಾರರು ಜತನವಾಗಿ ಕಾಪಾಡಿಕೊಂಡು ಬಂದ ಚಮ್ಮಾರಿಕೆಯ ಉಪಾಯವನ್ನು ಅವಳಿಂದ ಕೇಳಿದ ನಾನು, ದೇವಾಂಶಿ ಮಾತುಮನಾದ ನಿನಗೆ ತೀರಾ ವಿಶೇಷವಾದ ಪಾದ್ರಾಕ್ಷಿಯನೇ ಮಾಡೋಡಬೇಕು, ಯಂಗೆ ಮಾಡೋದು? ಯಾವ ತೊಗಲಿನಿಂದ ಮಾಡೋದು? ಎಂಬ ಯೋಚನೆಗಳ ಸುಳಿಗೆ ಬಿದ್ದೆ.
ಆಗ ನನ್ನ ಮುಖದ ನೆರಿಗೆಗಳ ಅಕ್ಷರಗಳನ್ನು ಸಲೀಸಾಗಿ ಓದಿ ಅರ್ಥ ಮಾಡಿಕೊಂಡು, ‘ಗೋವಿನ ತೊಗಲು ಉಪಯೋಗಿಸಿದಂತೆಯೇ ನರ ಮನುಷ್ಯ ತೊಗಲ ಚಮ್ಮಾಳಿಗೆ ಮಾಡಿಕೊಡದ ವಿನಾ ಶರಣಿನ ವಜೆಯನ್ನು ನೀಗಿಕೊಳ್ಳಲಾಗದು’ ಎಂಬ ಸಲಹೆಯನ್ನು ಮುಂದಿಟ್ಟ ಕಲ್ಯಾಣಮ್ಮ, ನಮ್ಮ ಮಕ್ಕಳನ್ನು ಆಡಿಸಿ ನಲಿಸಿ ತೂಗಿ ಮಲಗಿಸಿದ ನಮ್ಮ ಅಂಕಪೀಠದ ತೊಡೆ ತೊಗಲು ಮಾತ್ರ ಈ ಕಾರ್ಯಕ್ಕೆ ಯೋಗ್ಯವೆಂದು ಬಗೆದು ಮೊದಲಿಗೆ ತನ್ನ ಚರ್ಮವನ್ನೇ ನೀಡಲು ದುಡದಿಂದ ಮುಂದಾದಳು. ಈಗ ಯೋಚಿಸು ಬಸವಣ್ಣಾ ನಮ್ಮ ಹೆಣ್ಣಿನ ಮಹಿಮೆ ಎಂಥದ್ದು?
ಮರುದಿನ ಬೆಳಗ್ಗೆ ಎದ್ದು ಸ್ನಾನಾದಿಗಳನ್ನು ಮಾಡಿ, ಮನೆಯನ್ನೆಲ್ಲಾ ಸಾರಿಸಿ, ಗುಡಿಸಿ, ಚುಕ್ಕಿ ರಂಗೋಲಿ ಎಳೆದು ಮೂಡಲ ಮುಖನಾಗಿ ‘ತಿತ್ತಿ’ ಯೊಂದಿಗೆ ಕುಳಿತಿದ್ದ ಕಲ್ಯಾಣಮ್ಮ ಮುಖ ಹೊಂಬಣ್ಣದಲ್ಲಿ ಹೊಳೆವ ಸೂರ್ಯನಂತೆಯೇ ಕಾಂತಿಯಿಂದ ಶೋಭಿಸುತ್ತಿತ್ತು. ಅವಳ ಮುಖದ ಕಾಂತಿಯ ಸುಂಕು ನನ್ನ ಮುಖಕ್ಕೆ ಪರಾಗಸ್ಪರ್ಶಗೊಂಡ ಬಳಿಕವೇ ತಿತ್ತಿಗೆ ಶರಣೆಂದು ಚೂರಿಯನ್ನು ತೆಗೆದುಕೊಂಡು ಕುಲಕಾರ್ಯೇವು ಮಾಡಲು ಕುಳಿತೆ.
ಅಣ್ಣಾ … ಬಸವಣ್ಣ…! ಅಂದು ಬೆಳಗ್ಗೆ ನಮ್ಮ ಗುಡಿಸಲ ನೆತ್ತಿ ಮೇಲೆ ನವಿಲೆರಡು ಆಡುತ್ತಿದ್ದವು. ಸಾವಿರ ಕಣ್ಣು ಅರಳಿಸಿ ಎಳೆ ಬಿಸಿಲಿನಲ್ಲಿ ನರ್ತಿಸುತ್ತಿದ್ದ ಬಂಗಾರದ ನವಿಲುಗಳು! ಬಾಲ್ಯದಲ್ಲಿ ನನ್ನ ಅಮ್ಮ ಹೇಳುತ್ತಿದ್ದಳು, “ಹರಳಯ್ಯಾ, ಈ ಜಗತ್ತು ಹುಟ್ಟಿದ್ದು ನವಿಲು ಮೊಟ್ಟೆಯಿಂದ ಕಣೋ, ಇಲ್ಲದಿದ್ದರೆ ಈ ಸೃಷ್ಟಿ ಇಷ್ಟೊಂದು ಸುಂದರವಾಗಿರಲು ಹೇಗೆ ತಾನೆ ಸಾಧ್ಯವಿತ್ತು?”
ಹೌದು ಬಸವಣ್ಣಾ ನನ್ನ ಅಮ್ಮ ಹೇಳಿದ ಅದೇ ನವಿಲು ನಮ್ಮ ಗುಡಿಸಲು ಮೇಲೇರಿ ಹಾರಿ ಕುಣಿಯುತ್ತಿರುವಾಗ ನಾನು ನನ್ನ ಬಲ ತೊಡೆ ತೊಗಲನ್ನು, ಕಲ್ಯಾಣಮ್ಮ ತನ್ನ ಎಡ ತೊಡೆ ತೊಗಲನ್ನು ಪರಸ್ಪರ ಸುಲಿದು ತೆಗೆಯಲು ದುಡಮಾಡಿ ಕುಳಿತಿದ್ದೆವು; ನವಿಲುಗಳು ಕುಣಿಯುತ್ತಲೇ ಇದ್ದವು ಬಲು ಚೆಂದವಾಗಿ!
ಅಣ್ಣಾ… ನಿಜ ಹೇಳಬೇಕೆಂದರೆ ಗಲ್ಲೇಬಾನಿಯ ದಿವ್ಯೋದಕ ಸ್ಪರ್ಶದಿಂದ ತೋಯ್ದುದಕ್ಕಿಂತಲೂ ಮಿಗಿಲಾಗಿ ನೀನು ನಮ್ಮ ಕುಲಸ್ಥರಿಗೆ ತೋರಿಸಿದ ಕರುಣಾಮೃತದಿಂದಲೇ ನಮ್ಮ ದೇಹಕ್ಕಾವರಿಸಿದ್ದ ಸೂತಕದ ತೊಗಲು ತೊಯ್ದು ಹೋಗಿತ್ತು! ಸೂತಕದ ತೊಗಲನ್ನು ಸುಲಿದು ತೆಗೆಯಲು ನೀನು ಹೊರಿಸಿದ ‘ಶರಣು’ ಒಂದು ನೆಪವಾಗಿತ್ತು.
ಸಾಮು ಹಿಡಿದ ಚೂರಿಯಿಂದ ಬಹಳ ಚಮತ್ಕಾರಿಕವಾಗಿಯೆ ತೊಗಲು ಸುಲಿದೆವು; ನಾವು ಕುಶಲಕರ್ಮಿಗಳು; ತೊಗಲು ಸುಲಿಯುವ ನನಗೆ ದೇಹವೆಂಬುದು ಯಾವತ್ತಿಗೂ ಅಡ್ಡಿಯಾಗದು! ತನ್ನ ತೊಗಲನ್ನು ತಾನು ಸುಲಿದುಕೊಳ್ಳಲಾಗದವನು ಸಮಗಾರನೇ ಅಲ್ಲ! ಹೇ! ಬಸವಣ್ಣಾ ನಿನ್ನನ್ನು ಆವರಿಸಿಕೊಳ್ಳುತ್ತಿದ್ದ ಬ್ರಾಹ್ಮಣ್ಯದ ಸೂತಕದ ತೊಗಲನ್ನು ಹರಿದು ಬಿಸಾಕಿದ ನೀನೊಬ್ಬ ದೊಡ್ಡ ಸಮಗಾರ.
ಅಂತೂ ನಿನಗೆ ಚಮ್ಮಾಳಿಗೆ ಮಾಡಿಕೊಡಲೆಂದು ನಾನು, ನನ್ನ ಪತ್ನಿಯೂ ನಮ್ಮ ತೊಗಲನ್ನು ನಾವೇ ಸುಲಿದು, ಅದರ ಸೆಳ್ಳೆ ತೆಗೆದು, ಬಿಸಿಲಿನಲ್ಲಿ ಒಣಗಿಸಿ ಕರೆಹಾಯಿಸಲು ಸಿದ್ಧಗೊಳಿಸಿದೆವು.
ಚರ್ಮ ಹದ ಮಾಡುವ ವಿಧಾನವನ್ನು ಕರೆ ಹಾಯಿಸುವುದು ಎಂದು ಹೇಳುವುದು ವಾಡಿಕೆ. ಬಸವಣ್ಣಾ ಈ ವಿಧಾನವು ನಿನಗೆ ಕೇಳಿಯೋ ನೋಡಿಯೋ ಗೊತ್ತಿರಬಹುದೆಂದು ನಾನು ಊಹಿಸುತ್ತೇನೆ. ಆದರೂ ನಿನಗೆ ಅರ್ಪಿಸಿದ ಚಮಾಳಿಗೆಯನ್ನು ತಯಾರಿಸಿದ ಬಗೆಯನ್ನು ಹೇಳುತ್ತೇನೆ ಕೇಳು.
ಗಲ್ಲೇಬಾನಿಯಲ್ಲಿ ಒಂದು ಗುಲಿಕೆ ತಂಗಡಿ ಗಿಡದ ಚಕ್ಕೆ ಪುಡಿಯೊಂದಿಗೆ ಪಾವು ಗುಲಿಕೆ ಸುಣ್ಣದ ಪುಡಿಯನ್ನು ಕಲೆಸಿದೆ. ನನ್ನ ಕೆಲಸದ ಬಳಿಕ ಕಲ್ಯಾಣಮ್ಮ ಎರಡು ಹರುವಿ ನೀರು ಸುರಿದು ಗಲ್ಲೇಬಾನಿಯಲ್ಲಿ ಎರಡು ಜಾವ ಚರ್ಮವನ್ನು ನೆನೆ ಹಾಕಿದಳು. ಒಂದೊಂದು ಪ್ರಾಣಿಯ ಚರ್ಮವನ್ನೂ ಅದರದೇ ವಿಶಿಷ್ಟ ವಿಧಾನಾನುಸಾರ ಕರೆ ಹಾಯಿಸಬೇಕು.
ತಂಗಡಿ ಚಕ್ಕೆಯ ಪುಡಿ ಮತ್ತು ಸುಣ್ಣದ ನೀರಿನಲ್ಲಿ ಹದಗೊಂಡ ಚರ್ಮವನ್ನು ಶುದ್ಧ ನೀರಿನಲ್ಲಿ ತೊಳೆದು ಬಿಸಿಲಿನಲ್ಲಿ ಒಣಗಿಸಬೇಕು. ಆದರೆ ನಿನಗೆ ಚಮ್ಮಾಳಿಗೆ ತಯಾರಿಸಿ ಕೊಡಲು ನಾವು ಬಹಳ ಜಾಗರೂಕತೆ ವಹಿಸಿದ್ದೆವು. ಸೋಸಿದ ನೀರಿನ ‘ತಿಳಿಗರೆ’ಯಲ್ಲಿ ಹದಗೊಂಡ ಚರ್ಮವನ್ನು ಮತ್ತೊಂದು ಗಲ್ಲೇಬಾನಿಯ ಬೆವರ ಗಂಧೋದಕದಲ್ಲಿ ತೊಳೆದು, ಮುಗಿಲ ಮಿಂಚನೆ ಎರೆದು, ರಾತ್ರಿ ಮಂಜಿನಲಿ ನೆನೆದ ಚರ್ಮವನ್ನು ರಾತ್ರಿಯ ಚಂದ್ರಮನ ಬೆಳ್ಳಿ ಕಿರಣಗಳ ಬಿಸಿಯಲ್ಲಿ ಕಾಯಿಸಿ, ಬೆಳಗಿನ ಪ್ರಥಮ ಉಷಾಕಿರಣದಲ್ಲಿ ಕಾಯ್ದ ಚರ್ಮವನ್ನು ಸಂಜೆಯ ಮಂದ ನಿಷಾಕಿರಣಗಳಿಂದ ತಂಪು ಮಾಡಿ ಅದರೊಳಕ್ಕೆ ಪಾಂಗಿತವಾಗಿ ಅಗ್ನಿ ಪಾದಕವನ್ನು ತಂಪುಗೊಳಿಸಿ ಹೆಪ್ಪಿಡಲಾಯಿತು.
ಅಣ್ಣಾ…. ಬಸವಣ್ಣಾ ಹೀಗೆ ಪಾಕಾದ ಚರ್ಮವನ್ನು ನೆಲದ ಮೇಲೆ ಹರವಿ, ಮೈನಾಗಿರುವುದು ಕಂಡು, ಹರುಷಗೊಂಡು ನಿನ್ನ ಪಾದಗಳ ಅಳತೆಯನ್ನು ಧೇನಿಸತೂಡಗಲು ನಿನ್ನ ಪಾದಗಳೋ
“ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ ಕೂಡಲಸಂಗಮ ದೇವಾ”
ನಿನ್ನ ಅನಂತ ಪಾದದ ಅಳತೆ ನನ್ನ ಕಣ್ಣ ಆಯತಕ್ಕೆ ಸಿಕ್ಕದಾಗಿ ಕುಲದ ತಂದೆ ಜಾಂಬವನನ್ನು ಧ್ಯಾನಿಸಲು, ಜಾಂಬವ ತಾತನಾದರೋ ದೇವಿ ಅರುಂಧತಿಯವರಿಗೆ ನಿನ್ನ ಪಾದದಳತೆಯನು. ಕೆಂಡರಿಸುವಂತೆ ತಿಳಿಸಲು, ದೇವಿ ಅರುಂಧತಿಯಾದರೋ ತನ್ನ ಬಸಿರೊಳಗೆ ಹುಟ್ಟಿದ ಮಾದಾರ ಚೆನ್ನಯ್ಯನಿಗೆ ಅನುಜ್ಞೆ ಮಾಡಲು, ಚನ್ನಯ್ಯನು ತನ್ನ ಕರುಳ ಹೊಕ್ಕುಳ ಬಳ್ಳಿ ಕಲ್ಯಾಣಮ್ಮನವರಿಗೆ ನಿನ್ನ ಪಾದದ ಅಳತೆಯ ಸೋಜುಗವ ವಿವರಿಸಿದರು ಹೀಗೆ :-
ಬಸವಣ್ಣನೆಂಬುವನು ನಮ್ಮಕುಲದ ಬಂಗಾರದ ಶಿಶುವಲ್ಲವೋ ಅವನು ಉಸಿರೆಂಬ ಘನವೋ. ಅವನು ಉಸಿರೆಂಬ ಘನವಲ್ಲವೋ ಘನವೆಂಬ ಉಸಿರೊಳಡಗಿದ ಪ್ರಾಣವೋ!”
ಇಂತೀ ನಿನಗೆ ಒಪ್ಪುವ ಪಾದ್ರಾಕ್ಷಿಯ ಅಳತೆಯನ್ನು ಅರಿಯದವಳಾದ ಕಲ್ಯಾಣಮ್ಮನು ಮೂಲದಲ್ಲಿ ಜಲಮಯವಾಗಿದ್ದ ಈ ಸೃಷ್ಟಿಗೆ ತನ್ನ ರಕ್ತವನ್ನೇ ಬಸಿದು ಹೆಪ್ಪಿಟ್ಟು ಭೂಮಿಯನ್ನು ಸೃಷ್ಟಿಸಿದ ಮಾದಿಗರ ಮೊದಲ ಮಗನಾದ ಹೆಪ್ಪುಮುನಿಯನ್ನು ಸಾಕ್ಷಿಯಾಗಿ ಒಡ್ಡಿ, “ಬಸವಣ್ಣನು ನಿಜವಾದ ನಮ್ಮ ಮಾದಾರ ಕುಲದ ಮಗನೇ ಆಗಿದ್ದಲ್ಲಿ ಪುರೋಹಿತರ ಕಣ್ಣ ಎಚ್ಚರಿಕೆಯ ತಪ್ಪಿಸಿ ಓಡಿ ಬಂದು ನನ್ನ ಮಡಿಲಲ್ಲಿ ಮಲಗುವ ಕಂದಮ್ಮನಂತೆ ನನ್ನ ಸೆರಗು ಹಿಡಿದು ‘ಅವ್ವಾ’ ಎಂದು ಚೆಲುನುಡಿಗಳಲ್ಲಿ ಕರೆಯಲಿ” ಎಂದು ಪ್ರೀತಿಯಿಂದ ಕೂಗಿದಾಗ, ಬಿಜ್ಜಳನ ಅಧಿಕಾರದ ಸೆರಗಿನ ಮರೆಯಲ್ಲಿದ್ದ ನೀನು ನಿನ್ನ ಜನ್ಮಧಾರಕ ವೇಷ ಕಳೆದು, ಜಗ್ಗನೆ ಜನಿವಾರ ಹರಿದು, ಬಯಲ ಬೆತ್ತಲೆಯಂತೆ ಹುಟ್ಟುಮಾರ್ಗದಲ್ಲಿ ದಿಬ್ಬ ಹತ್ತಿ ಕಣಿವೆ ಇಳಿದು ಅಗ್ರಹಾರದಿಂದ ಬಲು ದೂರವುಳ್ಳ ಹಟ್ಟಿಯ ಹೊಕ್ಕು ನಮ್ಮ ಮನೆಯಲ್ಲಿ ಕಿಲಗುಡುವ ಕಂದನಾದೆ!
ಆ ಬಳಿಕ… ಚಲುವ ಚಂದಿರನಂಥ ಕಂದಮನಾದ ನಿನ್ನ ಅಂದದ ಆಟಗಳು ಚಂದದ ನೋಟಗಳು ಸಾವಿರ ನಕ್ಷತ್ರಗಳ ಕಣ್ಣು ಬಿಡುವ ನವಿಲು ಕುಣಿತದ ಹೊಳಪನ್ನು ನಮ್ಮ ಗುಡಿಸಲು ತುಂಬಿ, ಕಲ್ಯಾಣಮ್ಮನವರು ತಾಯ ಸೆರಗು ಮರೆಮಾಡಿ ಕಿಲಕಿಲನೆ ನಗುತ್ತಾ ನಿನ್ನ ಪುಟ್ಟ ಪಾದಗಳನ್ನು ಕಣ್ಣೊಳಗೆ ಮುಚ್ಚಿಕೊಂಡರಲ್ಲೋ ಅಣ್ಣಾ!
ಹೀಗೆ ನಿನ್ನ ಪಾದಗಳನ್ನು ಕಣ್ಣೊಳಗೆ ಮುಚ್ಚಿಕೊಂಡ ಸೋಜಿಗವನ್ನು ಕಲ್ಯಾಣಮ್ಮ ಬೀಜದೊಳಗಿರುವ ಮೊಳಕೆಯನ್ನು ಕಾಣಿಸುವಂತೆ ನನಗೆ ಕಂಡರಿಸಿದಾಗ ಅಲ್ಲಿ ನಮ್ಮ ಗುಡಿಸಲೊಳಗೆ ಅಡಿಗಲ್ಲ ಮೇಲೆ ಮುದ್ರೆಯೊತ್ತಿತ್ತು. ನಿನ್ನ ಪಾದಗಳ ಅಳತೆ ನಮ್ಮ ಅಡಿಗಲ್ಲಿನ ಮೇಲೆ ಬಟುವಾದ ಉದ್ದ, ಬಟುವಾದ ಅಗಲ ; ನಿನ್ನ ಪಾದ ಅಷ್ಟೆ!
ಅಣ್ಣಾ, ಮಾದಾರನ ಚಮ್ಮಾರಿಕೆಯ ಅಡಿಗಲ್ಲು ಸಾಮಾನ್ಯವಲ್ಲ ; ಪೂರ್ವದಲ್ಲಿ ಇವಳು ಕಾಳಿಕಾ ಮಾತೆ; ವಿಶ್ವಕರ್ಮನ ತಾಯಿ! ಮಾದಿಗರ ಹೊಸ್ತಿಲಲ್ಲಿ ಅಡಿಗಲ್ಲು ರೂಪಾಗಿ ಕುಂತವಳೆ!
ಇದು ತಾತ ಜಾಂಬವರು ನೀಡಿದ ಕುಲದ ದಾನ. ಕುಶಲ ಕರ್ಮಿಯ ಕಲೆ ಅರಳುವುದು ಇಲ್ಲಿ. ನಿನಗೆ ಮಾಡಿಕೊಟ್ಟ ಚಮ್ಮಾಳಿಗೆ ಕುಶಲತೆಯಲ್ಲಿ ಅರಳಿದ್ದು ಇದೇ ಅಡಿಗಲ್ಲ ಮೇಲೆ. ವಚನ ಕಟ್ಟುವುದು ನಿನಗೆ ಹೇಗೋ ಹಾಗೆ ನಮಗೆ ಚಮ್ಮಾರಿಕೆ ಸೃಷ್ಟಿಶೀಲ ಕ್ರಿಯೆ. ನಿನಗೆ ನಾವು ತಯಾರಿಸಿಕೊಟ್ಟ ಚಮ್ಮಾಳಿಗೆ ನಮ್ಮ ಪಾಲಿಗೊಂದು ಶ್ರೇಷ್ಢ ವಚನ. ಅದಕ್ಕಾಗಿ ನಾನಾಗಲೀ ನನ್ನ ಹೆಂಟತಿಯಾಗಲೀ ಅನ್ಯ ವಚನಗಳನ್ನೇ ಬರೆದಿಲ್ಲ. ನಮ್ಮ ಕಾಯಕದ ಬದುಕೇ ಒಂದು ವಚನ.
(ಚರ್ಮಕ್ಕೆ ಕರೆ ಹಾಯಿಸಿ ಹದಮಾಡುವ ವಿಧಾನವನ್ನು ಕುರಿತು ಮಾಹಿತಿ ನೀಡಿದವರು ನನ್ನ ತಂದೆ ಹನುಮಂತಯ್ಯ ಮತ್ತು ತಾಯಿ ಕದರಮ್ಮ)
(ಡಾ.ವಡ್ಡಗೆರೆ ನಾಗರಾಜಯ್ಯ
8722724174)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ14 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

